Monday, May 8, 2023

ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಬೃಹತ್ ರೋಡ್ ಶೋ

ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ, ಮೇ. ೮: ಈ ಬಾರಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
    ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್‌ನಿಂದ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಆರಂಭಗೊಂಡ ರೋಡ್ ಶೋ ಹಲವು ವಿಶಿಷ್ಟತೆಯಿಂದ ಕಂಡು ಬಂದಿತು. ಬಿಜೆಪಿ ಕೇಸರಿ ಪೇಟ ಧರಿಸಿ ಬಜರಂಗದಳ ಕಾರ್ಯಕರ್ತರಂತೆ ಕಂಗೊಳಿಸುವ ಮೂಲಕ ಶ್ರೀ ಆಂಜನೇಯ ಸ್ವಾಮಿಯ ಪ್ರತಿಮೆಯೊಂದಿಗೆ ಬೈಕ್ ರ‍್ಯಾಲಿ ನಡೆಸಿದರು.
    ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು. ಡೊಳ್ಳು ಕುಣಿತದೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಜ್ಜೆ ಹಾಕಿದರು.
    ಚಲನಚಿತ್ರ ನಟಿ ತಾರ, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಹಾಗು ಪಕ್ಷದ ವಿವಿಧ ಮೋರ್ಚಾಗಳ, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದವರೆಗೂ ರೋಡ್ ಶೋ ನಡೆಯಿತು.


ಭದ್ರಾವತಿಯಲ್ಲಿ ಸೋಮವಾರ ನಡೆದ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರ ರೋಡ್ ಶೋ ವಿಶೇಷವಾಗಿ ಗಮನ ಸೆಳೆಯಿತು. ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು.

Sunday, May 7, 2023

ವಿಧಾನಸಭಾ ಚುನಾವಣೆ ಅಬ್ಬರದ ಪ್ರಚಾರ : ಜೆಡಿಎಸ್, ಬಿಜೆಪಿ ಮುಂದೆ

ಶಾಸಕ ಸಂಗಮೇಶ್ವರ್‌ಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಹುಮ್ಮಸ್ಸು


ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ನಗರಸಭೆ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವುದು.
    ಭದ್ರಾವತಿ, ಮೇ. ೭ : ವಿಧಾನಸಭಾ ಚುನಾವಣೆ ಮತದಾನಕ್ಕೆ ೩ ದಿನ ಮಾತ್ರ ಬಾಕಿ ಉಳಿದಿದ್ದು, ಈ ನಡುವೆ ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಹೆಚ್ಚಾಗಿದೆ. ಈ ಬಾರಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಜೆಡಿಎಸ್ ಮುಂಚೂಣಿಯಲ್ಲಿರುವುದು ಕಂಡು ಬಂದಿದ್ದು, ನಂತರ ಸ್ಥಾನದಲ್ಲಿ ಬಿಜೆಪಿ ಕಂಡು ಬರುತ್ತಿದೆ.
    ಮೊದಲ ಬಾರಿಗೆ ಜಾತ್ಯತೀತ ಜನತಾದಳ ಪಕ್ಷದಿಂದ ಸ್ಪರ್ಧಿಸಿರುವ ಶಾರದ ಅಪ್ಪಾಜಿ ಅಬ್ಬರದ ಪ್ರಚಾರಕ್ಕೆ ಹೆಚ್ಚಿನ ಗಮನ ನೀಡಿದ್ದು, ಕಳೆದ ಸುಮಾರು ೨ ವರ್ಷಗಳಿಂದ ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಾಜಿ ಶಾಸಕ, ಪತಿ ದಿವಂಗತ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗು ಪಕ್ಷದ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆ ಆರಂಭಗೊಂಡಾಗಿನಿಂದ ಪ್ರಚಾರ ಮತ್ತಷ್ಟು ಚುರುಕುಗೊಂಡಿದೆ. ಕ್ಷೇತ್ರದ ಪ್ರತಿಯೊಬ್ಬ ಮತದಾರರನ್ನು ತಲುಪಿರುವ ವಿಶ್ವಾಸ ಹೊಂದಿದ್ದಾರೆ.
    ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ಪ್ರಚಾರ ಕಾರ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಅಭ್ಯರ್ಥಿ ಘೋಷಣೆ ಮೊದಲೇ ಸುಮಾರು ೧ ವರ್ಷದಿಂದ ರುದ್ರೇಶ್ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದರು. ಚುನಾವಣೆ ಘೋಷಣೆ ನಂತರ ಪ್ರಚಾರ ಹೆಚ್ಚಿನ ವೇಗ ಪಡೆದುಕೊಂಡಿದ್ದು, ಈ ಬಾರಿ ಗೆಲುವಿಗಾಗಿ ಪಕ್ಷದ ಪ್ರಮುಖರು ಹೆಚ್ಚಿನ ಶ್ರಮ ವಹಿಸಿದ್ದಾರೆ.
    ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಚಾರ ಕಾರ್ಯದಲ್ಲಿ ೩ನೇ ಸ್ಥಾನದಲ್ಲಿರುವುದು ಕಂಡು ಬರುತ್ತಿದೆ. ಶಾಸಕರಾಗಿ ಆಯ್ಕೆಯಾದ ನಂತರನಿರಂತರವಾಗಿ ಜನರ ಮಧ್ಯೆಯಲ್ಲಿಯೇ ಇದ್ದು, ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಹುಮ್ಮಸ್ಸಿನಲ್ಲಿದ್ದಾರೆ. ಈ ನಡುವೆ ಚುನಾವಣೆ ಘೋಷಣೆಯಾದಾಗಿನಿಂದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಸಂಜೆ ವೇಳೆ ಮಾತ್ರ ಶಾಸಕರು ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಉಳಿದಂತೆ ಕುಟುಂಬ ವರ್ಗದವರು, ಪಕ್ಷದ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಆಯಾ ಭಾಗಗಳಲ್ಲಿ ನಿರಂತರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
    ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ, ಸಮಾಜ ಸೇವಕ ಆನಂದ್ ಮೆಡಿಕಲ್‌ರವರು ಸಹ ಕಳೆದ ಸುಮಾರು ೧ ವರ್ಷದಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇವರು ಸಹ ಕ್ಷೇತ್ರದ ಪ್ರತಿಯೊಬ್ಬ ಮತದಾರರನ್ನು ತಲುಪಿರುವ ವಿಶ್ವಾಸ ಹೊಂದಿದ್ದಾರೆ.
    ಉಳಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ಅಭ್ಯರ್ಥಿ ಸುಮಿತ್ರಬಾಯಿ, ಸಂಯುಕ್ತ (ಕರ್ನಾಟಕ) ಜನತಾದಳ(ಜೆಡಿಯು) ಅಭ್ಯರ್ಥಿ ಶಶಿಕುಮಾರ್ ಎಸ್. ಗೌಡ, ಆರ್‌ಪಿಐಕೆ ಪಕ್ಷದ ಅಭ್ಯರ್ಥಿ ಇ.ಪಿ ಬಸವರಾಜ, ಪಕ್ಷೇತರ ಅಭ್ಯರ್ಥಿಗಳಾದ ಬಿ.ಎನ್ ರಾಜು, ಎಸ್.ಕೆ ಸುಧೀಂದ್ರ, ವೈ. ಶಶಿಕುಮಾರ್, ಡಿ. ಮೋಹನ್ ಮತ್ತು ರಾಜಶೇಖರ್‌ರವರು ತಮ್ಮ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಅಸಂಘಟಿತ ಕಟ್ಟಡ, ಇತರೆ ನಿರ್ಮಾಣ ಕೂಲಿ ಕಾರ್ಮಿಕರಿಂದ ಶಾಸಕರಿಗೆ ಬೆಂಬಲ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಭದ್ರಾವತಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ ಸೂಚಿಸುವುದಾಗಿ ಹೇಳಿದರು.
    ಭದ್ರಾವತಿ, ಮೇ. ೭ : ಅಸಂಘಟಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಕಷ್ಟಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಪೂರಕವಾಗಿ ಸ್ಪಂದಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ಸೂಚಿಸುವುದಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.
    ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಸಂಘಟಿತ ಕಾರ್ಮಿಕರು ಬಡವರ್ಗದವರಾಗಿದ್ದಾರೆ. ಇವರಿಗೆ ಸರ್ಕಾರದ ಸೌಲಭ್ಯಗಳು ಸಮಪರ್ಕವಾಗಿ ತಲುಪಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಜೊತೆಗೆ ವೈಯಕ್ತಿಕವಾಗಿ ಸಹ ಸ್ಪಂದಿಸಿದ್ದಾರೆ. ಅದರಲ್ಲೂ ಕೊರೋನಾ ಸಂದರ್ಭದಲ್ಲಿ ಆಹಾರ ಪದಾರ್ಥಗಳ ವಿತರಣೆ, ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಜಾಚಾರಿ, ಸುರೇಶ್, ಶಶಿಕುಮಾರ್, ಸುಶೀಲ, ಸಂಧ್ಯಾ, ನೇತ್ರಾವತಿ, ಶೇಖರಪ್ಪ, ವೆಂಕಟೇಶ್, ಅರ್ಜುನ್, ಜಾರ್ಜ್ ಮತ್ತು ಪಳನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, May 6, 2023

ಬಿ.ಕೆ ಸಂಗಮೇಶ್ವರ್‌ಗೆ ಹೆಚ್ಚಿನ ಮತಗಳ ಅಂತರದ ಗೆಲುವು : ಅಲ್ಪಸಂಖ್ಯಾತ ಮುಖಂಡರ ವಿಶ್ವಾಸ

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮಾತನಾಡಿದರು.
    ಭದ್ರಾವತಿ, ಮೇ. ೬ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆಂದು ಪಕ್ಷದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
    ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಕ್ಷೇತ್ರದಾದ್ಯಂತ ಶಾಸಕರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಾಸಕರು  ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವ ಜೊತೆಗೆ ಅವರ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಅಲ್ಪಸಂಖ್ಯಾತ ಮುಖಂಡರೆಲ್ಲರೂ ಒಗ್ಗಟ್ಟಾಗಿದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸುತ್ತಿದ್ದು, ರಾಜ್ಯಾದ್ಯಂತ ಪಕ್ಷಕ್ಕೆ ವ್ಯಾಪಕ ಬೆಂಬಲವಾಗುತ್ತಿದೆ. ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಶಾಸಕರು ಮಂತ್ರಿಯಾಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಸಿ.ಎಂ ಖಾದರ್, ಫೀರ್‌ಷರೀಫ್, ಅಮೀರ್‌ಜಾನ್, ಜಹೀರ್‌ಜಾನ್, ಅಂತೋಣಿ ವಿಲ್ಸನ್, ದಿಲ್‌ದಾರ್, ಜೆಬಿಟಿ ಬಾಬು, ಅಬುದಾಲಿ, ಬಷೀರ್ ಅಹಮದ್, ಅಖಿಲ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಮತದಾರರ ಜಾಗೃತ ವೇದಿಕೆಯಿಂದ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ

ಭದ್ರಾವತಿಯಲ್ಲಿ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಮತದಾರರ ಜಾಗೃತ ವೇದಿಕೆ ಪ್ರಮುಖರು ಶನಿವಾರ ಶಾರದ ಅಪ್ಪಾಜಿಯವರಿಗೆ ಹೂವಿನ ಹಾರ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
    ಭದ್ರಾವತಿ, ಮೇ. ೬: ಕ್ಷೇತ್ರದಲ್ಲಿ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರನ್ನು ಗುರುತಿಸಿ ಅವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರನ್ನು ಎಂದಿಗೂ ಮೆರಯಲು ಸಾಧ್ಯವಿಲ್ಲ. ಪ್ರಸ್ತುತ ಚುನಾವಣೆಯಲ್ಲಿ ಅವರ ಪತ್ನಿ ಶಾರದ ಅಪ್ಪಾಜಿಯವರು ಸ್ಪರ್ಧಿಸಿದ್ದು, ಅವರಿಗೆ ಸಂಪೂರ್ಣ ಬೆಂಬಲ ಸೂಚಿಸುವುದಾಗಿ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಮತದಾರರ ಜಾಗೃತ ವೇದಿಕೆ ತಿಳಿಸಿದೆ.
    ಇತ್ತೀಚಿನ ವರ್ಷಗಳಲ್ಲಿ ಆಡಳಿತಾರೂಢ ಯಾವುದೇ ರಾಜಕೀಯ ಪಕ್ಷಗಳು ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯದ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ಕೇವಲ ಓಟ್‌ಬ್ಯಾಂಕ್ ಓಲೈಕೆಯ ರಾಜಕಾರಣದಲ್ಲಿ ತೊಡಗಿರುವುದು ಜಗಜಾಹೀರವಾಗಿದೆ. ರಾಜಕೀಯ ಪಕ್ಷಗಳ ಇಂತಹ ನಿರ್ಲಕ್ಷ ಧೋರಣೆ ಒಂದೆಡೆಯಾದರೆ, ಶಾಸನಸಭೆಗೆ ಆರಿಸಿಹೋಗುವ ಜನಪ್ರತಿನಿಧಿಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಈ ಸಮುದಾಯಗಳ ಬಗ್ಗೆ ಅಸಡ್ಡೆತನ ತೋರುತ್ತಿರುವುದು ಶೋಚನೀಯವಾದ ಸಂಗತಿಯಾಗಿದೆ. ಆಳುವ ಸರ್ಕಾರಗಳಿಗೆ ಎಚ್ಚರಿಸಲು, ಜನಪ್ರತಿನಿಧಿಗಳಿಗೆ ಚುರುಕು ಮುಟ್ಟಿಸಲು ಇದು ಸಕಾಲವಾಗಿದ್ದು, ಭವಿಷ್ಯದ ಹಿತದೃಷ್ಟಿಯಿಂದ ಯೋಚಿಸಿ ಮತಚಲಾಯಿಸಬೇಕಾಗಿದೆ.
    ಪಕ್ಷ ರಾಜಕಾರಣಕ್ಕಿಂತ ವ್ಯಕ್ತಿಪ್ರತಿಷ್ಠೆ ಕಣವಾಗಿರುವ ಕ್ಷೇತ್ರದಲ್ಲಿ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯಗಳಿಗೆ ರಾಜಕೀಯವಾಗಿ ಪ್ರಾತಿನಿದ್ಯ ನೀಡಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರು ಕಳೆದ ೩೦ ವರ್ಷಗಳ ಅವಧಿಯಲ್ಲಿ ಗುರುತಿಸಿರುವುದು ಸೂಕ್ಷ್ಮವಾಗಿ ಗಮನಿಸಬಹುದಾಗಿದೆ.
    ಕ್ಷೇತ್ರದಲ್ಲಿ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಹಲವು ಮಂದಿ ರಾಜಕೀಯ ಸ್ಥಾನಮಾನ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿದ್ದಾರೆ. ಮರಾಠ,  ತಮಿಳು, ತೆಲುಗು, ನಾಯ್ಡು, ದೇವಾಂಗ, ಭಾವಸಾರ, ಉಪ್ಪಾರ, ಮಡಿವಾಳ, ಬಲಿಜ, ಶೆಟ್ಟಿ, ಕುಂಬಾರ, ಮೇದಾರ, ಗಂಗಾಮತಸ್ಥ, ಸವಿತಾ ಸಮಾಜ, ಭೋವಿ, ಲಂಬಾಣಿ, ವಿಶ್ವಕರ್ಮ, ಕಾಟಿಕ್ ಸಮಾಜ, ರಜಪೂತ್, ಆರ್ಯವೈಶ್ಯ, ಜೈನ ಸಮಾಜ, ಪರಿಶಿಷ್ಟ ಜಾತಿ/ಪಂಗಡ ಹಾಗು ಇತರೆ ೧೦೮ ಜಾತಿ, ವರ್ಗಗಳನ್ನು ಅಪ್ಪಾಜಿಯವರು ಗುರುತಿಸಿ ಬೆಳೆಸಿದ ಪರಿಣಾಮ ಶಾರದ ಅಪ್ಪಾಜಿಯವರಿಗೆ ಈ ಚುನಾವಣೆಯಲ್ಲಿ ಬೆಂಬಲ ಸೂಚಿಸುವ ಮೂಲಕ ಅವರ ಗೆಲುವಿಗೆ ಶ್ರಮಿಸುವುದಾಗಿ ವೇದಿಕೆ ಸಂಚಾಲಕರು ತಿಳಿಸಿದ್ದಾರೆ.
    ವೇದಿಕೆ ಪ್ರಮುಖರು ಶನಿವಾರ ಶಾರದ ಅಪ್ಪಾಜಿಯವರಿಗೆ ಹೂವಿನ ಹಾರ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸಿದರು. ಪ್ರಮುಖರಾದ ಸುರೇಶ್, ಮಹಮದ್ ಸನ್ನಾವುಲ್ಲಾ, ಎಚ್.ಎಸ್ ಸಂಜೀವಕುಮಾರ್, ಕರಿಯಪ್ಪ, ಶಿವಾಜಿರಾವ್ ಗಾಯಕ್‌ವಾಡ್, ಎನ್ ಕೃಷ್ಣಪ್ಪ, ವಿಶ್ವೇಶ್ವರ ಗಾಯಕ್‌ವಾಡ್, ಡಿ.ಟಿ ಶ್ರೀಧರ, ಲೋಕೇಶ್ವರ್‌ರಾವ್, ಎನ್. ರಾಮಕೃಷ್ಣ, ವಿಜಯ, ವಿಶಾಲಾಕ್ಷಿ, ಬಸವರಾಜ ಬಿ ಆನೇಕೊಪ್ಪ, ಉದಯ್ ಕುಮಾರ್, ಆನಂದ್, ತ್ಯಾಗರಾಜ್, ಅಮೋಸ್, ಧರ್ಮರಾಜ್, ವಸಂತ, ವೆಂಕಟೇಶ್ ಉಜ್ಜನಿಪುರ, ಸುಬ್ಬಣ್ಣ, ಮಂಜುನಾಥ್, ಎ. ಮಸ್ತಾನ್, ಅಜ್ಮಲ್, ಸವೂದ್, ನಸರುಲ್ಲ, ತಬ್ರೇಸ್ ಖಾನ್, ಅಂತೋಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಭಿವೃದ್ಧಿಗೆ ಮುಂದಡಿಯೊಂದಿಗೆ ಹಲವು ಭರವಸೆಗಳ ಪ್ರಣಾಳಿಕೆ

ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಈಡೇರಿಸುವ ವಿಶ್ವಾಸ

ಭದ್ರಾವತಿಯಲ್ಲಿ ಜಾತ್ಯತೀತ ಜನತಾದಳ ವತಿಯಿಂದ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಲವು ಭರವಸೆಗಳ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. 
    ಭದ್ರಾವತಿ, ಮೇ. ೬: ಸಾಧಿಸಿದ್ದೇವೆ ಸಾಕಷ್ಟು-ಮಾಡಬೇಕಾಗಿದೆ ಮತ್ತಷ್ಟು, ಈಡೇರಿಸಿದ್ದೇವೆ ನೂರಾರು-ಇನ್ನೂ ಉಳಿದಿದೆ ಹಲವಾರು. ಅಪ್ಪಾಜಿ ಅಭಿವೃದ್ಧಿಯ ಹಾದಿಯಲ್ಲಿ ಶಾರದ ಅಪ್ಪಾಜಿ ಮುಂದಡಿ ಎಂಬ ಶೀರ್ಷಿಕೆಯೊಂದಿಗೆ ಶನಿವಾರ ಜ್ಯಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿವೆ ಎಂದರು.
    ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಹೊಸಸೇತುವೆ(ಮುಳುಗು ಸೇತುವೆ)ಗೆ ಪರ್ಯಾಯವಾಗಿ ಸುಭದ್ರವಾದ ಸೇತುವೆ ನಿರ್ಮಿಸುವುದು. ಡಾ. ಬಿ.ಆರ್ ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಯನ್ನು ಸುಮಾರು ೧೦ ಕೋ. ರು. ಅನುದಾನದಲ್ಲಿ ಸುಸಜ್ಜಿತ ಮೂಲ ಸೌಕರ್ಯ ಕಲ್ಪಿಸಿ ಪೂರ್ಣಗೊಳಿಸುವುದು. ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳ ಸಬಲೀಕರಣ, ಬಾಕಿಯರಿಗೆ ಸುಸಜ್ಜಿತ ಶೌಚಾಲಯ ಹಾಗು ವಿಶ್ರಾಂತಿ ಕೊಠಡಿಗಳ ನಿರ್ಮಾಣ. ನೆನೆಗುದಿಗೆ ಬಿದ್ದಿರುವ ದೊಣಬಘಟ್ಟ-ಕೆ.ಕೆ ಮಗ್ಗಿ ಸಂಪರ್ಕ ಸೇತುವೆ ನಿರ್ಮಾಣ ಯೋಜನೆ ಸಾಕಾರಗೊಳಿಸುವುದು ಹಾಗು ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಪುನಶ್ಚೇತನ, ಮಹಿಳೆಯರಿಗಾಗಿ ಗಾರ್ಮೆಂಟ್ಸ್ ಫ್ಯಾಕ್ಟರಿ ಸ್ಥಾಪನೆ, ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆ ಮೂಲಕ ಉದ್ಯೋಗಾವಕಾಶ ಕಲ್ಪಿಸುವುದು ಸೇರಿದಂತೆ ಇನ್ನಿತರ ಭರವಸೆಗಳನ್ನು ನೀಡಲಾಗಿದೆ.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಪ್ರಮುಖರಾದ ಸುರೇಶ್, ಮಹಮದ್ ಸನ್ನಾವುಲ್ಲಾ, ಎಚ್.ಎಸ್ ಸಂಜೀವಕುಮಾರ್, ಕರಿಯಪ್ಪ, ಶಿವಾಜಿರಾವ್ ಗಾಯಕ್‌ವಾಡ್, ಎನ್ ಕೃಷ್ಣಪ್ಪ, ವಿಶ್ವೇಶ್ವರ ಗಾಯಕ್‌ವಾಡ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.  

ಅಭ್ಯರ್ಥಿಗಳಿಂದ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ಒಮ್ಮತದ ನಿರ್ಣಯ


ಭದ್ರಾವತಿ, ಮೇ. 6 : ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ಶನಿವಾರ  ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮತದಾನ ಜಾಗೃತಿ ಮತ್ತು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.  
       ಪ್ರಮುಖವಾಗಿ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು, ವಿಐಎಸ್ಎಲ್ ಅಭಿವೃದ್ಧಿಪಡಿಸುವುದು ಸೇರಿದಂತೆ  ಇನ್ನಿತರ ವಿಚಾರಗಳ ಕುರಿತು ಚರ್ಚಿಸಲಾಯಿತು. ಅಭ್ಯರ್ಥಿಗಳು  ಎರಡೂ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಒಮ್ಮತದ ನಿರ್ಣಯ ಕೈಗೊಂಡರು.
     ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿಕೆ ಸಂಗಮೇಶ್, ಜೆಡಿಯು  ಅಭ್ಯರ್ಥಿ ಶಶಿಕುಮಾರ್ ಎಸ್ ಗೌಡ, ಪಕ್ಷೇತರ ಅಭ್ಯರ್ಥಿಗಳಾದ ಸುಮಿತ್ರ ಬಾಯಿ, ಬಿ.ಎನ್ ರಾಜು ಮತ್ತು ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ ಉಪಸ್ಥಿತರಿದ್ದರು.