Monday, May 8, 2023

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತನೆ : ಓರ್ವನ ವಿರುದ್ಧ ಪ್ರಕರಣ ದಾಖಲು


    ಭದ್ರಾವತಿ, ಮೇ. ೮: ಗಾಂಜಾ ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
     ನೂರಾನಿ ಮಸೀದಿ ಬಳಿ ನಿವಾಸಿ ಮುಜಾಹಿಲ್(೩೫) ಎಂಬಾತ  ಮೇ.೬ರಂದು ಮದ್ಯಾಹ್ನ ೧೨:೩೦ರ ಸಮಯದಲ್ಲಿ ನಗರದ ತರೀಕೆರೆ ರಸ್ತೆಯ ಮೂಪಾ ಕಾಂಫೌಂಡ್ ಹತ್ತಿರ ಸಾರ್ವಜನಿಕರೊಂದಿಗೆ ಆಸಭ್ಯವಾಗಿ ವರ್ತಿಸುತ್ತಿದ್ದು, ಈ ಭಾಗದಲ್ಲಿ ಗಸ್ತಿನಲ್ಲಿದ್ದ ಹಳೇನಗರ ಠಾಣೆ ಪೊಲೀಸರು ಈತನ ವಿಚಾರಣೆ ನಡೆಸಿದಾಗ ಯಾವುದೋ ಮಾದಕ ವಸ್ತು ಸೇವನೆಯಿಂದ ಅಮಲಿನಲ್ಲಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಈತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮನೆಯ ಮುಂಭಾಗ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವು

ಭದ್ರಾವತಿ, ಮೇ. ೮ : ಮನೆಯ ಮುಂಭಾಗ ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವು ಮಾಡಿರುವ ಘಟನೆ ನಗರಸಭೆ ವ್ಯಾಪ್ತಿಯ ಕಣಕಟ್ಟೆ ಗ್ರಾಮದಲ್ಲಿ ನಡೆದಿದೆ.
ಏ.೩೦ರಂದು ರಾತ್ರಿ ೧೧.೩೦ರ ಸಮಯದಲ್ಲಿ ಹೀರೋ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಮನೆಯ ಮುಂಭಾಗ ನಿಲ್ಲಿಸಲಾಗಿದ್ದು, ಬೆಳಿಗ್ಗೆ ೫.೩೦ರ ಸಮಯದಲ್ಲಿ ನೋಡಿದಾಗ ಕಳುವಾಗಿರುವುದು ಕಂಡು ಬಂದಿದೆ. ಈ ಸಂಬಂಧ ಸಂತೋಷ್  ಎಂಬುವರು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಮತದಾನ ಜಾಗೃತಿ : ಬೈಕ್ ರ‍್ಯಾಲಿ

ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು.  
    ಭದ್ರಾವತಿ, ಮೇ. ೮ : ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು.
    ವಿಧಾನಸಭಾ ಕ್ಷೇತ್ರ ಮತದಾನ ಪ್ರಮಾಣದಲ್ಲಿ ಕುಠಿತಗೊಂಡಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲೆಡೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ನಗರದ ಅಂಬೇಡ್ಕರ್ ವೃತ್ತದಿಂದ ತಾಲೂಕು ಪಂಚಾಯಿತಿ ಆವರಣದವರೆಗೂ ಬೈಕ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
    ತಹಸೀಲ್ದಾರ ಸುರೇಶ್ ಆಚಾರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ನಗರಸಭೆ, ತಾಲೂಕು ಪಂಚಾಯಿತಿ, ತಾಲೂಕು ಕಚೇರಿ, ಗ್ರಾಮ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಬೃಹತ್ ರೋಡ್ ಶೋ

ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ, ಮೇ. ೮: ಈ ಬಾರಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
    ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್‌ನಿಂದ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಆರಂಭಗೊಂಡ ರೋಡ್ ಶೋ ಹಲವು ವಿಶಿಷ್ಟತೆಯಿಂದ ಕಂಡು ಬಂದಿತು. ಬಿಜೆಪಿ ಕೇಸರಿ ಪೇಟ ಧರಿಸಿ ಬಜರಂಗದಳ ಕಾರ್ಯಕರ್ತರಂತೆ ಕಂಗೊಳಿಸುವ ಮೂಲಕ ಶ್ರೀ ಆಂಜನೇಯ ಸ್ವಾಮಿಯ ಪ್ರತಿಮೆಯೊಂದಿಗೆ ಬೈಕ್ ರ‍್ಯಾಲಿ ನಡೆಸಿದರು.
    ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು. ಡೊಳ್ಳು ಕುಣಿತದೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಜ್ಜೆ ಹಾಕಿದರು.
    ಚಲನಚಿತ್ರ ನಟಿ ತಾರ, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಹಾಗು ಪಕ್ಷದ ವಿವಿಧ ಮೋರ್ಚಾಗಳ, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದವರೆಗೂ ರೋಡ್ ಶೋ ನಡೆಯಿತು.


ಭದ್ರಾವತಿಯಲ್ಲಿ ಸೋಮವಾರ ನಡೆದ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರ ರೋಡ್ ಶೋ ವಿಶೇಷವಾಗಿ ಗಮನ ಸೆಳೆಯಿತು. ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು.

Sunday, May 7, 2023

ವಿಧಾನಸಭಾ ಚುನಾವಣೆ ಅಬ್ಬರದ ಪ್ರಚಾರ : ಜೆಡಿಎಸ್, ಬಿಜೆಪಿ ಮುಂದೆ

ಶಾಸಕ ಸಂಗಮೇಶ್ವರ್‌ಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಹುಮ್ಮಸ್ಸು


ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ನಗರಸಭೆ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವುದು.
    ಭದ್ರಾವತಿ, ಮೇ. ೭ : ವಿಧಾನಸಭಾ ಚುನಾವಣೆ ಮತದಾನಕ್ಕೆ ೩ ದಿನ ಮಾತ್ರ ಬಾಕಿ ಉಳಿದಿದ್ದು, ಈ ನಡುವೆ ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಹೆಚ್ಚಾಗಿದೆ. ಈ ಬಾರಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಜೆಡಿಎಸ್ ಮುಂಚೂಣಿಯಲ್ಲಿರುವುದು ಕಂಡು ಬಂದಿದ್ದು, ನಂತರ ಸ್ಥಾನದಲ್ಲಿ ಬಿಜೆಪಿ ಕಂಡು ಬರುತ್ತಿದೆ.
    ಮೊದಲ ಬಾರಿಗೆ ಜಾತ್ಯತೀತ ಜನತಾದಳ ಪಕ್ಷದಿಂದ ಸ್ಪರ್ಧಿಸಿರುವ ಶಾರದ ಅಪ್ಪಾಜಿ ಅಬ್ಬರದ ಪ್ರಚಾರಕ್ಕೆ ಹೆಚ್ಚಿನ ಗಮನ ನೀಡಿದ್ದು, ಕಳೆದ ಸುಮಾರು ೨ ವರ್ಷಗಳಿಂದ ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಾಜಿ ಶಾಸಕ, ಪತಿ ದಿವಂಗತ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗು ಪಕ್ಷದ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆ ಆರಂಭಗೊಂಡಾಗಿನಿಂದ ಪ್ರಚಾರ ಮತ್ತಷ್ಟು ಚುರುಕುಗೊಂಡಿದೆ. ಕ್ಷೇತ್ರದ ಪ್ರತಿಯೊಬ್ಬ ಮತದಾರರನ್ನು ತಲುಪಿರುವ ವಿಶ್ವಾಸ ಹೊಂದಿದ್ದಾರೆ.
    ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ಪ್ರಚಾರ ಕಾರ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಅಭ್ಯರ್ಥಿ ಘೋಷಣೆ ಮೊದಲೇ ಸುಮಾರು ೧ ವರ್ಷದಿಂದ ರುದ್ರೇಶ್ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದರು. ಚುನಾವಣೆ ಘೋಷಣೆ ನಂತರ ಪ್ರಚಾರ ಹೆಚ್ಚಿನ ವೇಗ ಪಡೆದುಕೊಂಡಿದ್ದು, ಈ ಬಾರಿ ಗೆಲುವಿಗಾಗಿ ಪಕ್ಷದ ಪ್ರಮುಖರು ಹೆಚ್ಚಿನ ಶ್ರಮ ವಹಿಸಿದ್ದಾರೆ.
    ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಚಾರ ಕಾರ್ಯದಲ್ಲಿ ೩ನೇ ಸ್ಥಾನದಲ್ಲಿರುವುದು ಕಂಡು ಬರುತ್ತಿದೆ. ಶಾಸಕರಾಗಿ ಆಯ್ಕೆಯಾದ ನಂತರನಿರಂತರವಾಗಿ ಜನರ ಮಧ್ಯೆಯಲ್ಲಿಯೇ ಇದ್ದು, ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಹುಮ್ಮಸ್ಸಿನಲ್ಲಿದ್ದಾರೆ. ಈ ನಡುವೆ ಚುನಾವಣೆ ಘೋಷಣೆಯಾದಾಗಿನಿಂದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಸಂಜೆ ವೇಳೆ ಮಾತ್ರ ಶಾಸಕರು ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಉಳಿದಂತೆ ಕುಟುಂಬ ವರ್ಗದವರು, ಪಕ್ಷದ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಆಯಾ ಭಾಗಗಳಲ್ಲಿ ನಿರಂತರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
    ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ, ಸಮಾಜ ಸೇವಕ ಆನಂದ್ ಮೆಡಿಕಲ್‌ರವರು ಸಹ ಕಳೆದ ಸುಮಾರು ೧ ವರ್ಷದಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇವರು ಸಹ ಕ್ಷೇತ್ರದ ಪ್ರತಿಯೊಬ್ಬ ಮತದಾರರನ್ನು ತಲುಪಿರುವ ವಿಶ್ವಾಸ ಹೊಂದಿದ್ದಾರೆ.
    ಉಳಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ಅಭ್ಯರ್ಥಿ ಸುಮಿತ್ರಬಾಯಿ, ಸಂಯುಕ್ತ (ಕರ್ನಾಟಕ) ಜನತಾದಳ(ಜೆಡಿಯು) ಅಭ್ಯರ್ಥಿ ಶಶಿಕುಮಾರ್ ಎಸ್. ಗೌಡ, ಆರ್‌ಪಿಐಕೆ ಪಕ್ಷದ ಅಭ್ಯರ್ಥಿ ಇ.ಪಿ ಬಸವರಾಜ, ಪಕ್ಷೇತರ ಅಭ್ಯರ್ಥಿಗಳಾದ ಬಿ.ಎನ್ ರಾಜು, ಎಸ್.ಕೆ ಸುಧೀಂದ್ರ, ವೈ. ಶಶಿಕುಮಾರ್, ಡಿ. ಮೋಹನ್ ಮತ್ತು ರಾಜಶೇಖರ್‌ರವರು ತಮ್ಮ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಅಸಂಘಟಿತ ಕಟ್ಟಡ, ಇತರೆ ನಿರ್ಮಾಣ ಕೂಲಿ ಕಾರ್ಮಿಕರಿಂದ ಶಾಸಕರಿಗೆ ಬೆಂಬಲ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಭದ್ರಾವತಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ ಸೂಚಿಸುವುದಾಗಿ ಹೇಳಿದರು.
    ಭದ್ರಾವತಿ, ಮೇ. ೭ : ಅಸಂಘಟಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಕಷ್ಟಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಪೂರಕವಾಗಿ ಸ್ಪಂದಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ಸೂಚಿಸುವುದಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.
    ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಸಂಘಟಿತ ಕಾರ್ಮಿಕರು ಬಡವರ್ಗದವರಾಗಿದ್ದಾರೆ. ಇವರಿಗೆ ಸರ್ಕಾರದ ಸೌಲಭ್ಯಗಳು ಸಮಪರ್ಕವಾಗಿ ತಲುಪಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಜೊತೆಗೆ ವೈಯಕ್ತಿಕವಾಗಿ ಸಹ ಸ್ಪಂದಿಸಿದ್ದಾರೆ. ಅದರಲ್ಲೂ ಕೊರೋನಾ ಸಂದರ್ಭದಲ್ಲಿ ಆಹಾರ ಪದಾರ್ಥಗಳ ವಿತರಣೆ, ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಜಾಚಾರಿ, ಸುರೇಶ್, ಶಶಿಕುಮಾರ್, ಸುಶೀಲ, ಸಂಧ್ಯಾ, ನೇತ್ರಾವತಿ, ಶೇಖರಪ್ಪ, ವೆಂಕಟೇಶ್, ಅರ್ಜುನ್, ಜಾರ್ಜ್ ಮತ್ತು ಪಳನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, May 6, 2023

ಬಿ.ಕೆ ಸಂಗಮೇಶ್ವರ್‌ಗೆ ಹೆಚ್ಚಿನ ಮತಗಳ ಅಂತರದ ಗೆಲುವು : ಅಲ್ಪಸಂಖ್ಯಾತ ಮುಖಂಡರ ವಿಶ್ವಾಸ

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮಾತನಾಡಿದರು.
    ಭದ್ರಾವತಿ, ಮೇ. ೬ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆಂದು ಪಕ್ಷದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
    ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಕ್ಷೇತ್ರದಾದ್ಯಂತ ಶಾಸಕರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಾಸಕರು  ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವ ಜೊತೆಗೆ ಅವರ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಅಲ್ಪಸಂಖ್ಯಾತ ಮುಖಂಡರೆಲ್ಲರೂ ಒಗ್ಗಟ್ಟಾಗಿದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸುತ್ತಿದ್ದು, ರಾಜ್ಯಾದ್ಯಂತ ಪಕ್ಷಕ್ಕೆ ವ್ಯಾಪಕ ಬೆಂಬಲವಾಗುತ್ತಿದೆ. ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಶಾಸಕರು ಮಂತ್ರಿಯಾಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಸಿ.ಎಂ ಖಾದರ್, ಫೀರ್‌ಷರೀಫ್, ಅಮೀರ್‌ಜಾನ್, ಜಹೀರ್‌ಜಾನ್, ಅಂತೋಣಿ ವಿಲ್ಸನ್, ದಿಲ್‌ದಾರ್, ಜೆಬಿಟಿ ಬಾಬು, ಅಬುದಾಲಿ, ಬಷೀರ್ ಅಹಮದ್, ಅಖಿಲ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.