Saturday, May 13, 2023

ಸಚಿವರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಭರವಸೆ : ಗೆಲುವಿಗೆ ಕಾರಣ

    ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಮೇ. ೧೩ : ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಅಯ್ಕೆಯಾಗಿದ್ದ ಬಿ.ಕೆ ಸಂಗಮೇಶ್ವರ್ ವಿರುದ್ಧ ಈ ಬಾರಿ ಹಲವು ಆರೋಪಗಳು ಕೇಳಿ ಬರುತ್ತಿದ್ದವು. ಅಲ್ಲದೆ ಅವರೊಂದಿಗೆ ಗುರುತಿಸಿಕೊಂಡಿದ್ದ  ಬಹುತೇಕ ಮಂದಿ ದೂರ ಸರಿದಿದ್ದರೂ ಆದರೂ ಸಹ ಈ ಬಾರಿ ಗೆಲ್ಲುವ ಮೂಲಕ ೪ನೇ ಬಾರಿಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ.
    ಕಳೆದ ಕೆಲವು ವರ್ಷಗಳಿಂದ ಆರೋಗ್ಯದ ಸುಧಾರಣೆಗೆ ಹೆಚ್ಚಿನ ಗಮನ ಹರಿಸಿರುವ ಸಂಗಮೇಶ್ವರ್ ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿರಲಿಲ್ಲ. ಬಹುತೇಕ ಸಭೆ-ಸಮಾರಂಭಗಳಲ್ಲಿ ಕುಟುಂಬ ವರ್ಗದವರೇ ಪಾಲ್ಗೊಳ್ಳುತ್ತಿದ್ದರು. ಆರೋಗ್ಯ ಸುಧಾರಣೆ ನಡುವೆಯೂ ಎಂದಿಗೂ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಸಂಗಮೇಶ್ವರ್ ಕಡೆಗಣಿಸಿರಲಿಲ್ಲ. ಆದರೂ ಸಹ ಇವರ ವಿರುದ್ಧ ಕುಟುಂಬ ರಾಜಕಾರಣ ಆರೋಪ ಮಾಡಲಾಗುತ್ತಿತ್ತು.
    ಚುನಾವಣೆ ಸಮೀಪಿಸುತ್ತಿದ್ದಂತೆ ಇವರಿಂದ ಬಹಳಷ್ಟು ಮಂದಿ ದೂರ ಸರಿದಿದ್ದರು. ಆದರೂ ಸಹ ಯಾವುದಕ್ಕೂ ತಲೆಗೆಡಿಸಿಕೊಳ್ಳದೆ ಕೇವಲ ಸಂಜೆಯಿಂದ ರಾತ್ರಿವರೆಗೂ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ೫ ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳ ಮೇಲೆ ವಿಶ್ವಾಸ ಹೊಂದಿದ್ದರು. ಅಲ್ಲದೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನನಗೆ ಸಚಿವ ಸ್ಥಾನ ಸಿಗಲಿದೆ. ಇದರಿಂದ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದರು.  ಅವರ ಭರವಸೆಯಿಂದಾಗಿ ಇದೀಗ ಗೆಲುವು ಲಭಿಸಿದೆ ಎನ್ನಲಾಗುತ್ತಿದೆ.
    ನೂತನ ಸರ್ಕಾರದಲ್ಲಿ ಅವರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಕ್ಷೇತ್ರದಲ್ಲಿನ ಸಮಸ್ಯೆಗಳು ಬಗೆಹರಿಯಬೇಕು. ಬಹುಮುಖ್ಯವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡೂ ಕಾರ್ಖಾನೆಗಳ ಅಭಿವೃದ್ಧಿ, ನಿರುದ್ಯೋಗ ನಿರ್ಮೂಲನೆ, ಉನ್ನತ ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.
ಇದೀಗ ೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಂಗಮೇಶ್ವರ್ ನೂತನ ಸರ್ಕಾರದಲ್ಲಿ ಸಚಿವರಾಗುವ ಮತ್ತೊಂದು ದಾಖಲೆ ನಿರ್ಮಿಸುವಂತಾಗಲಿ ಎಂಬುದು ಕ್ಷೇತ್ರದ ಜನರ ಆಶಯವಾಗಿದೆ.

೪ನೇ ಬಾರಿಗೆ ಗೆಲವು ಸಾಧಿಸಿ ಇತಿಹಾಸ ನಿರ್ಮಿಸಿದ ಶಾಸಕ ಬಿ.ಕೆ ಸಂಗಮೇಶ್ವರ್

ಪ್ರಬಲ ಸ್ಪರ್ಧೆ ನೀಡಿದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ

    ಭದ್ರಾವತಿ, ಮೇ. ೧೩: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ೪ನೇ ಬಾರಿಗೆ ಮರು ಆಯ್ಕೆಯಾಗುವ ಮೂಲಕ ಕ್ಷೇತ್ರದ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದಾರೆ.
    ಈ ಬಾರಿ ಚುನಾವಣೆಯಲ್ಲಿ ಸಂಗಮೇಶ್ವರ್‌ಗೆ ಜ್ಯಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಪ್ರಬಲ ಪೈಪೋಟಿ ನೀಡುವ ಗಮನ ಸೆಳೆದರು. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಶಾರದ ಅಪ್ಪಾಜಿ ೨,೫೮೫ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ೧೯ ಸುತ್ತಿನ ಮತಗಳ ಎಣಿಕೆಯವರೆಗೂ ಇಬ್ಬರ ನಡುವೆ ತೀವ್ರ ಪೈಪೋಟಿ ಕಂಡು ಬಂದಿತು. ಕಡಿಮೆ ಅಂತರದಲ್ಲಿಯೇ ಮುನ್ನಡೆ ಕಾಯ್ದುಕೊಂಡಿದ್ದ ಸಂಗಮೇಶ್ವರ್ ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ.
    ಅಂತಿಮ ಸುತ್ತಿನಲ್ಲಿ ಸಂಗಮೇಶ್ವರ್ ೬೫,೮೮೩ ಹಾಗು ಶಾರದ ಅಪ್ಪಾಜಿ ೬೩,೨೯೮ ಮತಗಳನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ೨೧,೧೩೭, ಎಎಪಿ ಅಭ್ಯರ್ಥಿ ಆನಂದ್ ಮಾರುತಿ ಮೆಡಿಕಲ್ ೧,೩೭೮ ಮತಗಳನ್ನು ಪಡೆದುಕೊಂಡಿದ್ದಾರೆ.
    ಪಟಾಕಿ ಹೊಡೆದು ಸಂಭ್ರಮಿಸಿದ ಜೆಡಿಎಸ್ ಕಾರ್ಯಕರ್ತರು :
    ಇನ್ನೂ ಫಲಿತಾಂಶ ಬಾಕಿ ಇರುವಾಗಲೇ ಜೆಡಿಎಸ್ ಕಾರ್ಯಕರ್ತರು ತಪ್ಪು ಮಾಹಿತಿ ಹಿನ್ನಲೆಯಲ್ಲಿ ಶಾರದ ಅಪ್ಪಾಜಿ ಗೆಲುವು ಸಾಧಿಸಿದ್ದಾರೆಂದು ಪಟಾಕಿ ಸಿಡಿಸಿ ಸಂಭ್ರಮಿಸಿರುವ ಘಟನೆ ನಡೆದಿದೆ. ನಂತರ ನಿಖರ ಮಾಹಿತಿ ತಿಳಿದು ಕಾರ್ಯಕರ್ತರು ಬೇಸರ ಗೊಂಡಿದ್ದಾರೆ.
    ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ :
    ಬಿ.ಕೆ ಸಂಗಮೇಶ್ವರ್ ಗೆಲುವು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್  ೩ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ೨೦ ಸಾವಿರ ಮತಗಳ ಗಡಿದಾಟದ ಬಿಜಿಪಿ ಈ ಬಾರಿ ೨೦,೮೭೨ ಮತಗಳನ್ನು ಪಡೆದುಕೊಂಡಿದೆ. ಮಂಗೋಟೆ ರುದ್ರೇಶ್ ಪಡೆದಿರುವ ಮತಗಳು ಸಂಗಮೇಶ್ವರ್ ಗೆಲುವಿನ ಅಂತರ ಕಡಿಮೆಗೊಳಿಸಿವೆ.

Friday, May 12, 2023

ಅಂಕಗಳನ್ನು ಮಾನದಂಡವಾಗಿರಿಸಿಕೊಳ್ಳದೆ ಪ್ರತಿಭಾವಂತರಾಗುವ ನಿಟ್ಟಿನಲ್ಲಿ ಗಮನ ಹರಿಸಿ : ಮನುಕುಮಾರ್

ಭದ್ರಾವತಿ ನಗರಸಭೆ ವತಿಯಿಂದ ಶುಕ್ರವಾರ ಸಂಜೆ ಈ ಬಾರಿ ಎಸ್‌ಎಸ್‌ಎಲ್‌ಸಿ ಹಾಗು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಪೌರಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.
    ಭದ್ರಾವತಿ, ಮೇ. ೧೨ : ವಿದ್ಯಾರ್ಥಿಗಳು ಅಂಕಗಳನ್ನು ಮಾನದಂಡವಾಗಿರಿಸಿಕೊಳ್ಳದೆ ಪ್ರತಿಭಾವಂತರಾಗುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕೆಂದು ನಗರಸಭೆ ಪೌರಾಯುಕ್ತ ಮನುಕುಮಾರ್ ಹೇಳಿದರು.
    ಅವರು ಶುಕ್ರವಾರ ಸಂಜೆ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಬಾರಿ ಎಸ್‌ಎಸ್‌ಎಲ್‌ಸಿ ಹಾಗು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಪೌರಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಮಾತನಾಡಿದರು.
    ನಿಮ್ಮಲ್ಲಿನ ಪ್ರತಿಭೆಗೆ ಅನುಗುಣವಾಗಿ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಗಮನ ನೀಡಬೇಕು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಪ್ರತಿಭಾ ಪುರಸ್ಕಾರ ಮಕ್ಕಳನ್ನು ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದಾಗಿದೆ. ಮಕ್ಕಳು ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡಬೇಕು. ಭವಿಷ್ಯದ ಬೆಳವಣಿಗೆಗೆ ಪೂರಕವಾದ ಶಿಕ್ಷಣ ಪಡೆದುಕೊಳ್ಳಬೇಕು. ನಗರಸಭೆವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.  
    ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಕಛೇರಿ ವ್ಯವಸ್ಥಾಪಕಿ ಎಂ. ಸುನಿತಾ ಕುಮಾರಿ ಉಪಸ್ಥಿತರಿದ್ದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಾಕಾರ್ಮಿಕರು ಪಾಲ್ಗೊಂಡಿದ್ದರು.
ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಬೇಕೆಂದರು.
    ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಎನ್. ಮಂಜುಳಾ, ಡಿ. ಮೋನಿಕಾ, ಎ.ವಿದ್ಯಾ, ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಎನ್. ಪದ್ಮ, ಓ. ಸುಪ್ರಿಯ, ಎಂ. ನಯನ, ಬಿ. ಕೇಶವ, ಆರ್. ಪೂಜಾ, ಎಚ್. ರಮ್ಯ, ಎ. ಸ್ವಾತಿ, ಎನ್. ಭುವನ ಮತ್ತು ಎಂ. ಸೌಂದಯ್ಯ ಅವರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಶಾರದ ಗೆದ್ದಲ್ಲಿ ಕ್ಷೇತ್ರದ ಮೊದಲ ಶಾಸಕಿ

    ಶಾರದ ಅಪ್ಪಾಜಿ
ಭದ್ರಾವತಿ, ಮೇ. ೧೨ : ಈ ಬಾರಿ ಚುನಾವಣೆ ಮತದಾನ ಫಲಿತಾಂಶ ಮೇ.೧೩ರ ಶನಿವಾರ ಪ್ರಕಟಗೊಳ್ಳಲಿದ್ದು, ಒಂದು ವೇಳೆ ಶಾರದ ಅಪ್ಪಾಜಿ ಗೆಲುವು ಸಾಧಿಸಿದ್ದಲ್ಲಿ ಕ್ಷೇತ್ರದ ಮೊದಲ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
    ಕ್ಷೇತ್ರದಲ್ಲಿ ಇದುವರೆಗೂ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಮಹಿಳಾ ಪ್ರತಿಸ್ಪರ್ಧಿ ಯಾರು ಇಲ್ಲ ಎಂಬುದು ವಿಶೇಷವಾಗಿದೆ. ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ಈ ಬಾರಿ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
    ರಾಜಕೀಯದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ಎಂ.ಜೆ ಅಪ್ಪಾಜಿ ನಿಧನದ ನಂತರ ಕೇವಲ ೨ ವರ್ಷದಲ್ಲಿ ಶಾರದ ಅಪ್ಪಾಜಿ ಸಾಕಷ್ಟು ಬದಲಾವಣೆಯಾಗುವ ಮೂಲಕ ಪಕ್ಷವನ್ನು ಸಂಘಟಿಸಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದ್ದಾರೆ. ಇದೀಗ ಫಲಿತಾಂಶ ಅವರ ಮುಂದಿನ ಭವಿಷ್ಯ ನಿರ್ಧರಿಸಲಿದೆ.
    ಕ್ಷೇತ್ರದಲ್ಲಿ ಇದುವರೆಗೂ ಮಹಿಳೆಯರು ವಿಧಾನಸಭೆಗೆ ಆಯ್ಕೆಯಾಗಿಲ್ಲ. ಈ ಬಾರಿ ಚುನಾವಣೆಯಲ್ಲಿ ಶಾರದ ಅಪ್ಪಾಜಿ ಪ್ರಬಲ ಎದುರಾಳಿಯಾಗಿದ್ದು, ಈ ಹಿನ್ನಲೆಯಲ್ಲಿ ಒಂದು ವೇಳೆ ಅವರು ಆಯ್ಕೆಯಾದಲ್ಲಿ ಕ್ಷೇತ್ರದ ಮೊದಲ ಶಾಸಕಿಯಾಗಲಿದ್ದಾರೆ.

ಈ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ನಡುವೆಯೇ ಬೆಟ್ಟಿಂಗ್

ಬಿ.ಕೆ ಸಂಗಮೇಶ್ವರ್
    ಭದ್ರಾವತಿ, ಮೇ. ೧೨ : ಈ ಬಾರಿ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯಗೊಂಡ ತಕ್ಷಣ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಎಂಬ ಕುತೂಹಲ ಹೆಚ್ಚಾಗುತ್ತಿದ್ದು, ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ಈ ಬಾರಿ ಸುಮಾರು ೩೦ ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆಂದು ಹೇಳಿಕೆ ನೀಡುತ್ತಿದ್ದವರು ಸಹ ಇದೀಗ ಮೌನಕ್ಕೆ ಶರಣಾಗಿದ್ದಾರೆ. ಮತ್ತೊಂದೆಡೆ ಈ ಬಾರಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಗೆಲುವು ಸಾಧಿಸುದ್ದಾರೆಂದು ಆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳ ವಿಶ್ವಾಸವಾಗಿದೆ.
    ಬಿ.ಕೆ ಸಂಗಮೇಶ್ವರ್ ಮತ್ತು ಶಾರದ ಅಪ್ಪಾಜಿ ನಡುವೆಯೇ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಈ ಹಿಂದೆ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಪೈಪೋಟಿ ನೀಡಲು ಅಸಾಧ್ಯ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಶಾರದ ಅಪ್ಪಾಜಿ ಅಭ್ಯರ್ಥಿಯಾದ್ದಲ್ಲಿ ಪ್ರಚಾರ ನಡೆಸದೇ ಮನೆಯಲ್ಲಿಯೇ ಇದ್ದು ಶಾಸಕರು ಗೆಲ್ಲುತ್ತಾರೆಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಇದೀಗ ಶಾರದ ಅಪ್ಪಾಜಿ ಪ್ರಬಲ ಎದುರಾಳಿಯಾಗಿರುವುದು ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಎಂಬ ಕುತೂಹಲ ಹೆಚ್ಚಾಗುತ್ತಿದೆ.


ಶಾರದ ಅಪ್ಪಾಜಿ
    ಉಳಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ಹಾಗು ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಅಭ್ಯರ್ಥಿ ಆನಂದ್ ಮೆಡಿಕಲ್‌ರವರು ಪಡೆಯುವ ಮತಗಳ ಮೇಲೂ ಕುತೂಹಲ ಹೆಚ್ಚಾಗಿದೆ. ಈ ಇಬ್ಬರು ಪಡೆಯುವ ಮತಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಫಲಿತಾಂಶದ ಮೇಲೆ ಪರಿಣಾಮ ಬೀಳಲಿದೆ ಎನ್ನಲಾಗಿದೆ.
    ಸಂಗಮೇಶ್ವರ್ ಅತಿ ಕಡಿಮೆ ಅಂತರದಲ್ಲಿ ಗೆಲುವು :
    ೨೦೦೮ರ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ವಿರುದ್ಧ ಅತಿ ಕಡಿಮೆ ಮತದಲ್ಲಿ ಗೆಲುವು ಸಾಧಿಸಿದ್ದರು. ಚಲಾವಣೆಯಾದ ಒಟ್ಟು ೧,೨೫,೩೦೦ ಮತಗಳ ಪೈಕಿ ಸಂಗಮೇಶ್ವರ್ ೫೩,೨೫೭ ಮತಗಳು ಶೇ.೪೨.೫ರಷ್ಟು ಹಾಗು  ಅಪ್ಪಾಜಿ ೫೨,೭೭೦ ಮತಗಳು ಶೇ.೪೨.೧೧ರಷ್ಟು ಮತಗಳನ್ನು ಪಡೆದುಕೊಂಡಿದ್ದರು. ಸಂಗಮೇಶ್ವರ್ ಕೇವಲ ೪೮೭ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
    ಅಪ್ಪಾಜಿ ಅತಿ ಹೆಚ್ಚು ಅಂತರದಲ್ಲಿ ಗೆಲುವು :
    ೨೦೧೩ರ ಚುನಾವಣೆಯಲ್ಲಿ ಅಪ್ಪಾಜಿ ಜಿಲ್ಲೆಯಲ್ಲಿಯೇ ಅತಿಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಚಲಾವಣೆಯಾದ ಒಟ್ಟು ೧,೪೩,೫೫೬ ಮತಗಳ ಪೈಕಿ ಅಪ್ಪಾಜಿ ೭೮,೩೭೦ ಮತಗಳು ಶೇ.೫೪.೫೯ರಷ್ಟು ಹಾಗು ಸಂಗಮೇಶ್ವರ್ ೩೪,೨೭೧ ಮತಗಳು ಶೇ.೨೩.೮೭ರಷ್ಟು ಪಡೆದುಕೊಂಡಿದ್ದರು. ಅಪ್ಪಾಜಿ ಅತಿ ಹೆಚ್ಚು ೪೪,೦೯೯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
    ಮೇ.೧೩ರ ಫಲಿತಾಂಶಕ್ಕಾಗಿ ಎಲ್ಲರೂ ಎದುರು ನೋಡುತ್ತಿದ್ದು, ಸಂಗಮೇಶ್ವರ್ ಪುನಃ ಆಯ್ಕೆಯಾಗಿ ಮಂತ್ರಿಯಾಗುವ ಕನಸು ಕನಸಾಗುವುದೇ ಅಥವಾ ಅಪ್ಪಾಜಿಯವರ ವರ್ಚಸ್ಸು, ಅನುಕಂಪದ ಅಲೆ ಶಾರದ ಅಪ್ಪಾಜಿ ಕೈ ಹಿಡಿದಿದೆಯೇ ಎಂಬುದು ತಿಳಿದು ಬರಲಿದೆ.

ವಿಜೃಂಭಣೆಯಿಂದ ಜರುಗಿದ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ

ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸ್ವಾಮಿಯ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾaವತಿ, ಮೇ. ೧೨: ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸ್ವಾಮಿಯ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
    ಮಹಾರಥೋತ್ಸವ ಅಂಗವಾಗಿ ಬೆಳಿಗ್ಗೆ ನವಗ್ರಹ ಹೋಮ, ಆದಿವಾಸ ಹೋಮ, ರಥ ಶುದ್ಧಿ ಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಸುಮಾರು ೧.೩೦ರ ಸಮಯದಲ್ಲಿ ದೇವಸ್ಥಾನ ಮುಂಭಾಗದಿಂದ ಮಹಾರಥೋತ್ಸವ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೂ ಸಾಗಿತು. ನಂತರ ಅನ್ನಸಂರ್ಪಣೆ ನಡೆಯಿತು.
    ದೇವಸ್ಥಾನ ಪ್ರಧಾನ ಅರ್ಚಕ ಪವನ್‌ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.

Thursday, May 11, 2023

ಭಾರಿ ಗಾಳಿ ಮಳೆಗೆ ಧರೆಗುರುಳಿ ಬಿದ್ದ ಮರಗಳು, ಹಾರಿ ಹೋದ ತಗಡಿನ ಮೇಲ್ಛಾವಣಿ

ಭದ್ರಾವತಿಯಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಡಬಲ್ ರಸ್ತೆಯಲ್ಲಿ ಮರ ಉರುಳಿ ಬಿದ್ದಿದ್ದು, ಕೊಂಬೆಗಳು ಮುರಿದು ಬಿದ್ದಿವೆ.
ಭದ್ರಾವತಿ, ಮೇ. ೧೧: ಕ್ಷೇತ್ರದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದು, ಮತ್ತೆ ಕೆಲವೆಡೆ  ಮರದ ಕೊಂಬೆಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ.
ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಡಬಲ್ ರಸ್ತೆಯಲ್ಲಿ ಮರ ಉರುಳಿ ಬಿದ್ದಿದ್ದು, ಕೊಂಬೆಗಳು ಮುರಿದು ಬಿದ್ದಿವೆ. ಹುಡ್ಕೋ ಕಾಲೋನಿಯಲ್ಲಿ ಮನೆಯೊಂದರ ಮುಂಭಾಗ ತೆಂಗಿನ ಮರ ಉರುಳಿ ಬಿದ್ದಿದ್ದು, ಇದೆ ರೀತಿ ಹಲವೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿ ಬಿದ್ದಿವೆ. ಉಜ್ಜನಿಪುರದಲ್ಲಿ ಮನೆಯೊಂದರ ತಗಡಿನ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ.


ಭದ್ರಾವತಿ ಉಜ್ಜನಿಪುರದಲ್ಲಿ ಮನೆಯೊಂದರ ತಗಡಿನ ಮೇಲ್ಛಾವಣಿ ಹಾರಿ ಹೋಗಿರುವುದು.
    ಸಂಜೆ ೪.೩೦ ರಿಂದ ಸುಮಾರ ೧ ತಾಸು ಸುರಿದ ಗಾಳಿಮಳೆಯಿಂದಾಗಿ ಮತದಾರರು ಮತದಾನ ಮಾಡಲು ಪರದಾಡುವಂತಾಯಿತು. ಕೆಲವು ಮತಗಟ್ಟೆಗಳಲ್ಲಿ ಗಾಳಿ ಮಳೆಯಿಂದ ಸೋರಿಕೆ ಉಂಟಾಗಿದ್ದು, ಮಳೆಯಲ್ಲಿಯೇ ಮತದಾರರು ಮತದಾನ ಮಾಡುವ ಸ್ಥಿತಿ ಕಂಡು ಬಂದಿತು. ಗುರುವಾರ ಸಂಜೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ.