Monday, May 29, 2023

ಉತ್ತಮ ಪ್ರಜೆಯಾಗಿ ಬಾಳಲು ಜ್ಞಾನ ದಾರಿ ದೀಪ : ವೇ.ಬ್ರ. ಜಿ. ರಾಘವೇಂದ್ರ ಉಪಾಧ್ಯಾಯ

ಭದ್ರಾವತಿ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಅನನ್ಯ ಹ್ಯಾಪಿ ಹಾರ್ಟ್ಸ್ ಯುಕೆಜಿ ಹಾಗು ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
    ಭದ್ರಾವತಿ, ಮೇ. ೨೯:  ಜಗತ್ತಿನಲ್ಲಿ ಜ್ಞಾನ ಹೊಂದಿರುವ ಏಕೈಕ ಜೀವಿ ಮನುಷ್ಯ. ಆತ ಸರಿಯಾದ ಸಮಯದಲ್ಲಿ ಸೂಕ್ತ ಸಂಸ್ಕಾರಗಳನ್ನು ಪಡೆದು ಜ್ಞಾನವಂತ, ಬುದ್ದಿವಂತ, ವಿದ್ಯಾವಂತನಾಗಿ ಉತ್ತಮ ಪ್ರಜೆಯಾಗಿ ಬಾಳಲು ಜ್ಞಾನ ದಾರಿ ತೋರುತ್ತದೆ ಎಂದು ಹುತ್ತಾಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಆರ್ಚಕ ವೇ.ಬ್ರ ಜಿ. ರಾಘವೇಂದ್ರ ಉಪಾಧ್ಯಾಯ ಹೇಳಿದರು.
    ಅವರು ಸೋಮವಾರ ನಗರದ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಅನನ್ಯ ಹ್ಯಾಪಿ ಹಾರ್ಟ್ಸ್ ಯುಕೆಜಿ ಹಾಗು ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಮಾತನಾಡಿದರು.
    ಭಾರತೀಯ ಸಂಸ್ಕೃತಿಯಲ್ಲಿ ಮಗು ಜನನದಿಂದ ಅಂತಿಮ ದಿನದವರೆಗೆ ಹಲವಾರು ರೀತಿಯ ಷೋಡಶ ಸಂಸ್ಕಾರಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಷೋಡಶ ಸಂಸ್ಕಾರ ೧೬ ವಿಧಿವಿಧಾನಗಳನ್ನು ಒಳಗೊಂಡಿದೆ. ಅವುಗಳಲ್ಲಿ ಅಕ್ಷರಾಭ್ಯಾಸ ಬಹುಮುಖ್ಯ ಹಾಗು ಮಹತ್ವದ್ದಾಗಿದೆ. ಕಾರಣ ಪ್ರಾರಂಭದಲ್ಲಿ ಇದನ್ನು ಕೈಗೊಂಡಾಗ ಮಕ್ಕಳು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ ಕೇಂದ್ರೀಕರಿಸುವ ಮೂಲಕ ತಮ್ಮ ಓದಿನ ಬಗ್ಗೆ ಆಸಕ್ತಿ ತಾಳುತ್ತಾರೆ ಎಂದರು.
    ಮಕ್ಕಳು ಶಿಕ್ಷಣ ಪಡೆಯುವ ಶಾಲೆಯೇ ಅವರ ಜೀವನದ ಸರಸ್ವತಿ ದೇಗುಲವಾಗಿದೆ. ಈ ದೇಗುಲದಲ್ಲಿ ಇಂದು ಮಕ್ಕಳಿಗೆ ಅಕ್ಷರಾಭ್ಯಾಸ ಶಾಸ್ತ್ರೋಕ್ತವಾಗಿ ಕೈಗೊಂಡು ಉತ್ತಮ ಸಂಸ್ಕಾರ ನೀಡುವ ಮೂಲಕ ಶಾಲಾ ದಿನವನ್ನು ಪ್ರಾರಂಭ ಮಾಡಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
    ಸಮಾಜದಲ್ಲಿ ಸ್ಥಿತಿವಂತರು, ಶ್ರೀಮಂತರು, ಆರ್ಥಿಕವಾಗಿ ಸಬಲರಾಗಿರುವವರು ತಮ್ಮ ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಪ್ರಸಿಧ್ದ ಧಾರ್ಮಿಕ ಸ್ಥಳಗಳು, ದೇವಾಲಯಗಳಲ್ಲಿ ವೈಯುಕ್ತಿಕವಾಗಿ ಮಾಡಿಸುತ್ತಾರೆ. ಆದರೆ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಎಲ್ಲಾ ಮಕ್ಕಳಿಗೂ ಈ ಸಂಸ್ಕಾರ ಸಾಮೂಹಿಕವಾಗಿ ಪ್ರತಿಯೊಬ್ಬರಿಗೂ ಮಾಡಿಸಿದ್ದು ಅಭಿನಂದನಾರ್ಹ ಎಂದರು.
    ಶಾಲಾ ಆಢಳಿತಾಧಿಕಾರಿ ಎನ್. ವೇಣುಗೋಪಾಲ್, ಮುಖ್ಯೋಪಾಧ್ಯಾಯರಾದ ಕಲ್ಲೇಶ್ ಕುಮಾರ್, ಸುನಿತಾ ನಟರಾಜ್, ತನುಜಾ, ಅನಿಲ್ ಹಾಗು ಶಾಲಾ ಅಧ್ಯಾಪಕ ಮತ್ತು ಇತರ ಸಿಬ್ಬಂದಿಗಳು, ಮಕ್ಕಳ ಪೋಷಕರು ,ಶಾಲಾ ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.

Sunday, May 28, 2023

ಪರಿಸರ ಉಳಿವಿನ ಜಾಗೃತಿಗಾಗಿ ಯುವಕನಿಂದ ೫೦ ಸಾವಿರ ಕಿ.ಮೀ ಸೈಕಲ್ ಜಾಥಾ ಅಭಿಯಾನ

ಭದ್ರಾವತಿ ಶ್ರೀ ವಾಸವಾಂಬ ದೇವಾಲಯದಲ್ಲಿ ಗುರ್ರಂ ಚೈತನ್ಯರಿಗೆ ಅಭಿನಂದನೆ

ಪರಿಸರ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಆಂಧ್ರ ಪ್ರದೇಶದ ನೆಲ್ಲೂರಿನ ಯುವಕ ಗುರ್ರಂ ಚೈತನ್ಯರವರು ಸುಮಾರು ೫೦ ಸಾವಿರ ಕಿ.ಮೀ ಸೈಕಲ್ ಜಾಥಾ ಮೂಲಕ ಅಭಿಯಾನ ಕೈಗೊಂಡಿದ್ದು, ಭಾನುವಾರ ಭದ್ರಾವತಿಗೆ ಆಗಮಿಸಿದ ಇವರನ್ನು ಅಭಿನಂದಿಸಲಾಯಿತು.
    ಭದ್ರಾವತಿ, ಮೇ. ೨೮ : ಪರಿಸರ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಆಂಧ್ರ ಪ್ರದೇಶದ ನೆಲ್ಲೂರಿನ ಯುವಕ ಗುರ್ರಂ ಚೈತನ್ಯರವರು ಸುಮಾರು ೫೦ ಸಾವಿರ ಕಿ.ಮೀ ಸೈಕಲ್ ಜಾಥಾ ಮೂಲಕ ಅಭಿಯಾನ ಕೈಗೊಂಡಿದ್ದಾರೆ.
    ನೆಲ್ಲೂರಿನಿಂದ ಆರಂಭಗೊಂಡಿರುವ ಸೈಕಲ್ ಜಾಥಾ ಅಭಿಯಾನ ೧೫೦ ದಿನಗಳನ್ನು ಪೂರೈಸಿದ್ದು, ಇದುವರೆಗೂ ಸುಮಾರು ೧೦ ಸಾವಿರ ಕಿ.ಮೀ ಕ್ರಮಿಸಿದ್ದಾರೆ. ಭಾನುವಾರ ನಗರಕ್ಕೆ ಆಗಮಿಸಿದ ಚೈತನ್ಯರನ್ನು ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ವಾಸವಾಂಬ ದೇವಾಲಯದಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.
    ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬದರಿನಾರಾಯಣ ಶ್ರೇಷ್ಠಿ, ಶ್ರೀ ಕನ್ಯಕಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಿ.ಎನ್ ಗಿರೀಶ್, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಸತ್ಯಲಕ್ಷ್ಮಿ, ಉಪಾಧ್ಯಕ್ಷೆ ಲತಾ ಬದರೀಶ್, ವಾಸವಿ ಯುವಜನ ಸಂಘದ ಸುಬ್ಬರಾಜ್, ವಾಸವಿ ವನಿತಾ ಸಂಘದ ಅಧ್ಯಕ್ಷೆ ಶ್ರೀಲಕ್ಷ್ಮಿ, ಕಾ.ರಾ ನಾಗರಾಜ್, ವಿಶಾಲಾಕ್ಷಿ, ನಾಗೇಶ್, ಗೋವಿಂದ, ಎಂ.ಎಲ್ ಶ್ರೀಧರಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರಿ ಐಟಿಐ ವಿದ್ಯಾರ್ಥಿಗಳಿಗೆ ಕಾನೂನು ಅರಿವು, ಜಾಗೃತಿ ಕಾರ್ಯಕ್ರಮ

ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ವತಿಯಿಂದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ, ಮೇ. ೨೮ : ನಗರದ ನ್ಯೂಟೌನ್ ಪೊಲೀಸ್ ಠಾಣೆ ವತಿಯಿಂದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ, ಸಂಚಾರಿ ನಿಯಮ ಪಾಲನೆ ಮತ್ತು ರಸ್ತೆ ಸುರಕ್ಷತೆ, ಇಆರ್‌ಎಸ್‌ಎಸ್-೧೧೨ ಸಹಾಯವಾಣಿ ಮತ್ತು ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಲಾಯಿತು.
    ನಗರ ಪೊಲೀಸ್ ವೃತ್ತ ನಿರೀಕ್ಷಕ ಬಿ.ಪಿ ಶಾಂತಿನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಭಾರತಿ ಅನಿಲ್, ಕೈಗಾರಿಕಾ ತರಬೇತಿ ಸಂಸ್ಥೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿಜೃಂಭಣೆಯಿಂದ ಜರುಗಿದ ಶ್ರೀ ಕರುಮಾರಿಯಮ್ಮ ೪೩ನೇ ವರ್ಷದ ಕರಗ ಮಹೋತ್ಸವ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
    ಭದ್ರಾವತಿ, ಮೇ. ೨೮: ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
    ಬೆಳಿಗ್ಗೆ ಅಮ್ಮನವರಿಗೆ ಎಳನೀರು ಅಭಿಷೇಕ, ನಂತರ ಪಂಚಾಮೃತ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಬುಳ್ಳಾಪುರ ಚಾನಲ್ ಬಳಿ ಶಕ್ತಿ ಕರಗ ಸ್ಥಾಪನೆ ಮಾಡಿ ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಮಧ್ಯಾಹ್ನ ೩ ಗಂಟೆಗೆ ಅಮ್ಮನವರ ದೇವಸ್ಥಾನಕ್ಕೆ ತರಲಾಯಿತು. ನಂತರ ಮಹಾಮಂಗಳಾರತಿಯೊಂದಿಗೆ ತೀರ್ಥಪ್ರಸಾದ ವಿನಿಯೊಗ ಹಾಗು ಶ್ರಿ ದೇವಿಗೆ ಅಂಬಲಿ ಮತ್ತು ಅನ್ನದಾನ ಸಂತರ್ಪಣೆ ನಡೆಯಿತು.
    ಪ್ರತಿ ವರ್ಷದಂತೆ ಈ ಬಾರಿ ಸಹ ವಿಜಯ್‌ಕುಮಾರ್ ಶಕ್ತಿ ಕರಗ ಹೊತ್ತು ತರುವ ಮೂಲಕ ಸೇವೆ ಸಮರ್ಪಿಸಿದರು. ನ್ಯೂಟೌನ್, ನ್ಯೂಕಾಲೋನಿ, ಕೂಲಿಬ್ಲಾಕ್ ಶೆಡ್ ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ಜನ್ನಾಪುರ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.
    ದೇವಸ್ಥಾನ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ ನೇತೃತ್ವವಹಿಸಿದ್ದರು. ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸೇವಾಕರ್ತರು, ದೇವಸ್ಥಾನದ ಪ್ರಧಾನ ಅರ್ಚಕ ಕಾಶಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, May 27, 2023

ರಂಗ ಕಲಾವಿದರು ಭದ್ರಾವತಿ ಅಧ್ಯಕ್ಷರಾಗಿ ಬಿ. ಕಮಲಾಕರ

ಬಿ. ಕಮಲಾಕರ
    ಭದ್ರಾವತಿ, ಮೇ. ೨೭ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಂಗ ಕಲಾವಿದರು ಭದ್ರಾವತಿ ಸಂಘದ ಅಧ್ಯಕ್ಷರಾಗಿ ಎಂಪಿಎಂ ನಿವೃತ್ತ ಕಾರ್ಮಿಕ, ಹಿರಿಯ ರಂಗಕಲಾವಿದ ಬಿ. ಕಮಲಾಕರ ಆಯ್ಕೆಯಾಗಿದ್ದಾರೆ.
    ಶುಕ್ರವಾರ ನಡೆದ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬಿ. ಕಮಲಾಕರ, ಉಪಾಧ್ಯಕ್ಷರಾಗಿ ಜಿ. ದಿವಾಕರ, ಪ್ರಧಾನ ಕಾರ್ಯದರ್ಶಿಯಾಗಿ ತಮಟೆ ಜಗದೀಶ್, ಸಹ ಕಾರ್ಯದರ್ಶಿಯಾಗಿ ಚಿದಾನಂದ, ಖಜಾಂಚಿಯಾಗಿ ಕೆ.ಎಸ್ ರವಿಕುಮಾರ್ ಮತ್ತು ಸದಸ್ಯರಾಗಿ ಡಿ.ಎನ್ ಪುಟ್ಟಸ್ವಾಮಿ, ಎಂ. ಸುಚಿತ್ರ., ಶಿಲ್ಪಕಲಾ, ಶಿವಾನಂದಮೂರ್ತಿ, ವೈ.ಕೆ ಹನುಮಂತಯ್ಯ, ಶಿವರಾಜ್, ಶ್ರೀಧರೇಶ್ ಮತ್ತು ಜಿ. ರವಿಕುಮಾರ್ ಆಯ್ಕೆಯಾಗಿದ್ದಾರೆ.

ಕೈಗಾರಿಕಾ ಕ್ಷೇತ್ರಕ್ಕೆ ಮಂತ್ರಿಗಿರಿ ಸ್ಥಾನದ ಶಾಪ ವಿಮೋಚನೆ ಯಾವಾಗ..?

    * ಅನಂತಕುಮಾರ್
    ಭದ್ರಾವತಿ, ಮೇ. ೨೭ : ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ಮೈಸೂರು ಕಾಗದ ಕಾರ್ಖಾನೆ ಸ್ಥಾಪನೆಯೊಂದಿಗೆ ಸುಮಾರು ೮ ದಶಕಗಳ ಹಿಂದೆಯೇ ವಿಶ್ವದ ಭೂಪಟದಲ್ಲಿ ಕೈಗಾರಿಕಾ ನಗರ ಎಂಬ ಹೆಗ್ಗಳಿಕೆಯಿಂದ ಗುರುತಿಸಿಕೊಂಡಿದ್ದ ಕ್ಷೇತ್ರಕ್ಕೆ ಇದುವರೆಗೂ ಮಂತ್ರಿ ಭಾಗ್ಯ ಒದಗಿ ಬಂದಿಲ್ಲ.
    ರಾಜಕೀಯವಾಗಿ ಕ್ಷೇತ್ರವನ್ನು ಆರಂಭದಿಂದಲೂ ಕಡೆಗಣಿಸಿಕೊಂಡು ಬರಲಾಗುತ್ತಿದ್ದು, ಇದು ಇಂದಿಗೂ ಮುಂದುವರೆದಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಕ್ಷೇತ್ರ ಬೆಂಗಳೂರು ಮಹಾನಗರದಂತೆ ಬೆಳವಣಿಗೆ ಹೊಂದಬೇಕಾಗಿತ್ತು. ಆದರೆ ಈ ಕ್ಷೇತ್ರವನ್ನು ಪ್ರತಿನಿಧಿಸಿರುವ ಜನಪ್ರತಿನಿಧಿಗಳಿಗೆ ರಾಜಕೀಯವಾಗಿ ಸೂಕ್ತ ಸ್ಥಾನಮಾನಗಳು ಲಭಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.  
    ೧೯೫೭ರಲ್ಲಿ ಕಾಂಗ್ರೆಸ್ ಪಕ್ಷದಿಂದ ಡಿ.ಟಿ ಸೀತಾರಾಮರಾವ್, ೧೯೬೨ರಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಡಿ ದೇವೇಂದ್ರಪ್ಪ, ೧೯೬೭ರಲ್ಲಿ ಪ್ರಜಾ ಸೋಷಿಯಲಿಸ್ಟ್ ಪಾರ್ಟಿ(ಪಿಎಸ್‌ಪಿ)ಯಿಂದ ಅಬ್ದುಲ್ ಖುದ್ದೂಸ್ ಅನ್ವರ್, ೧೯೭೨ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಖುದ್ದೂಸ್ ಅನ್ವರ್, ೧೯೭೮ರಲ್ಲಿ ಕಾಂಗ್ರೆಸ್(ಐ) ಪಕ್ಷದಿಂದ ಜಿ. ರಾಜಶೇಖರ್, ೧೯೮೩ರಲ್ಲಿ ಜೆಎನ್‌ಪಿ ಪಕ್ಷದಿಂದ ಸಾಲೇರ ಎಸ್ ಸಿದ್ದಪ್ಪ, ೧೯೮೫ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸಾಲೇರ ಎಸ್ ಸಿದ್ದಪ್ಪ, ೧೯೮೯ರಲ್ಲಿ ಕಾಂಗ್ರೆಸ್ ಪಕ್ಷದಿಂದ ಇಸಾಮಿಯಾ, ೧೯೯೪ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಎಂ.ಜೆ ಅಪ್ಪಾಜಿ, ೧೯೯೯ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಎಂ.ಜೆ ಅಪ್ಪಾಜಿ, ೨೦೦೪ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಬಿ.ಕೆ ಸಂಗಮೇಶ್ವರ್, ೨೦೦೮ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಕೆ ಸಂಗಮೇಶ್ವರ್, ೨೦೧೩ರಲ್ಲಿ ಜೆಡಿಎಸ್ ಪಕ್ಷದಿಂದ ಎಂ.ಜೆ ಅಪ್ಪಾಜಿ, ೨೦೧೮ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಕೆ ಸಂಗಮೇಶ್ವರ್ ಮತ್ತು ೨೦೨೩ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಕೆ ಸಂಗಮೇಶ್ವರ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಅಬ್ದುಲ್ ಖುದ್ದೂಸ್ ಅನ್ವರ್ ಮತ್ತು ಸಾಲೇರ ಎಸ್ ಸಿದ್ದಪ್ಪ ತಲಾ ಎರಡು ಬಾರಿ, ಎಂ.ಜೆ ಅಪ್ಪಾಜಿ ೩ ಬಾರಿ ಹಾಗು ಬಿ.ಕೆ ಸಂಗಮೇಶ್ವರ್ ೪ ಬಾರಿ ಶಾಸಕರಾಗಿದ್ದಾರೆ. ಆದರೆ ಇದುವರೆಗೂ ಯಾರಿಗೂ ಮಂತ್ರಿಗಿರಿ ಸ್ಥಾನ ಲಭಿಸಿಲ್ಲ.
    ೪ ಬಾರಿ ಗೆದ್ದರೂ ಮಂತ್ರಿ ಭಾಗ್ಯ ಇಲ್ಲ :
    ರಾಜ್ಯದ ರಾಜಕೀಯದ ಇತಿಹಾಸದಲ್ಲಿ ಒಂದು ಅಥವಾ ಎರಡು ಬಾರಿ ಗೆದ್ದವರೇ ಮುಖ್ಯಮಂತ್ರಿ, ಮಂತ್ರಿಯಾಗಿರುವುದು ಕಾಣಬಹುದಾಗಿದೆ. ಸಂಗಮೇಶ್ವರ್ ೪ ಬಾರಿ ಗೆದ್ದರೂ ಮಂತ್ರಿಯಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಂಗಮೇಶ್ವರ್ ಬಿಟ್ಟು ಕ್ಷೇತ್ರವನ್ನು ಪ್ರತಿನಿಧಿಸಿರುವ ಮಾಜಿ ಶಾಸಕರು ಯಾರು ಸಹ ಬದುಕಿಲ್ಲ. ಕಣ್ಮರೆಯಾಗಿ ಇತಿಹಾಸ ಪುಟಗಳಲ್ಲಿ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರದ ಜನರು ಈ ಬಾರಿ ಮಂತ್ರಿ ಸ್ಥಾನ ಲಭಿಸುವ ಕನಸು ಕಂಡಿದ್ದರು. ಆದರೆ ಇದೀಗ ಕನಸು ಕನಸಾಗಿಯೇ ಉಳಿದು ಬಿಟ್ಟಿದೆ.
    ನಿಗಮ ಮಂಡಳಿಗೆ ಸೀಮಿತ :
    ಕ್ಷೇತ್ರಕ್ಕೆ ಸಚಿವ ಸ್ಥಾನ ಲಭಿಸುವ ಬದಲು ನಿಗಮ ಮಂಡಳಿ ಸ್ಥಾನ ಲಭಿಸಿದ್ದು, ಅದರಲ್ಲೂ ವಿಶೇಷತೆ ಎಂದರೆ ಶಾಸಕರಾಗಿ ಆಯ್ಕೆಯಾಗದವರಿಗೆ ನಿಗಮ ಮಂಡಳಿ ಸ್ಥಾನ ಲಭಿಸಿದೆ. ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ ತಾಲೂಕು ಮಂಡಲ ಮಾಜಿ ಅಧ್ಯಕ್ಷೆ ಸಿ. ಮಂಜುಳ ಅವರನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು ಅವರನ್ನು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ೨೦೧೯ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರನ್ನು ಕೆಆರ್‌ಐಡಿಎಲ್ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು. ಸುಮಾರು ೭ ತಿಂಗಳು ಸಂಗಮೇಶ್ವರ್ ಅಧ್ಯಕ್ಷರಾಗಿದ್ದರು.
    ಪಕ್ಷದಲ್ಲಿ ಉನ್ನತ ಸ್ಥಾನ :
    ಮೂಲತಃ ಕ್ಷೇತ್ರದವರಾದ ಬಿ.ವಿ ಶ್ರೀನಿವಾಸ್ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಇದೆ ರೀತಿ ಮಹಮದ್ ನಲಪಾಡ್ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಪಕ್ಷದಲ್ಲಿ ಮಾತ್ರ ಉನ್ನತ ಸ್ಥಾನ ಲಭಿಸಿದ್ದು, ಆದರೆ ಸರ್ಕಾರದಲ್ಲಿ ಇದುವರೆಗೂ ಮಂತ್ರಿಗಿರಿ ಸ್ಥಾನ ಲಭಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.  ಮಂತ್ರಿಗಿರಿ ಸ್ಥಾನ ಎಂಬುದು ಒಂದು ರೀತಿ ಶಾಪದ ಕಗ್ಗಂಟಿನಲ್ಲಿಯೇ ಸಿಲುಕಿಕೊಂಡಿದೆಯೇ ಎಂಬ ಭಾವನೆ ಇದೀಗ ಕ್ಷೇತ್ರದ ಜನತೆಯಲ್ಲಿ ಮೂಡಿದೆ.

ಮೇ.೩೧ರಂದು ಶಾಲಾ ಪ್ರಾರಂಭೋತ್ಸವಕ್ಕೆ ಹಬ್ಬದ ರೀತಿಯಲ್ಲಿ ಸಕಲ ಸಿದ್ದತೆ

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾಹಿತಿ

ಭದ್ರಾವತಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಶಿಕ್ಷಣ ಇಲಾಖೆಯ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾಗದರ್ಶಿ ಬಿಡುಗಡೆಗೊಳಿಸಿದರು. 
    ಭದ್ರಾವತಿ, ಮೇ. ೨೭ : ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ.೩೧ರಂದು ಹಬ್ಬದ ರೀತಿಯಲ್ಲಿ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾಗದರ್ಶಿ ಬಿಡುಗಡೆಗೊಳಿಸಿ ಮಾತನಾಡಿದರು. ಮೇ.೨೯ ಮತ್ತು ೩೦ ಎರಡು ದಿನ ಶಾಲಾ ಕೊಠಡಿ, ಆವರಣದ ಪರಿಸರ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಕೈಗೊಳ್ಳುವುದು ಹಾಗು ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ಕಾರದ ಉಚಿತ ಸೌಲಭ್ಯಗಳ ವಿತರಣೆ ನಡೆಯಲಿದೆ ಎಂದರು.  
    ಮೇ.೩೧ರಂದು ಪ್ರಾರಂಭೋತ್ಸವ ನಡೆಯಲಿದ್ದು, ಆಯಾ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮಕ್ಕಳನ್ನು ಆಕರ್ಷಿಸಲು ತಳಿರು ತೋರಣಗಳಿಂದ ಅಲಂಕರಿಸಿ ಹಬ್ಬದ ರೀತಿಯ ವಾತಾವರಣ ರೂಪಿಸಲಾಗುವುದು. ಈಗಾಗಲೇ ಪೋಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ಪೂರ್ವಭಾವಿ ಸಭೆ ನಡೆಸಲಾಗಿದೆ. ಅಂದು ನಗರ ಭಾಗದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಬೆಳಿಗ್ಗೆ ೧೦.೩೦ಕ್ಕೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
    ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಆ.೩, ೨೦೨೨ರ ಮಾಹಿತಿಯಂತೆ ೧೯,೧೧೫ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ೯೭ ಕಿರಿಯ ಪ್ರಾಥಮಿಕ, ೧೧೨ ಹಿರಿಯ ಪ್ರಾಥಮಿಕ, ೧೬ ಪ್ರೌಢ ಶಾಲೆಗಳು, ಒಟ್ಟು ೨೨೫ ಹಾಗು ನಗರ ಭಾಗದಲ್ಲಿ ೧೮ ಕಿರಿಯ ಪ್ರಾಥಮಿಕ, ೩೬ ಹಿರಿಯ ಪ್ರಾಥಮಿಕ ಮತ್ತು ೮ ಪ್ರೌಢಶಾಲೆಗಳು, ಒಟ್ಟು ೬೨ ಸೇರಿದಂತೆ ತಾಲೂಕಿನಲ್ಲಿ ೨೮೭ ಸರ್ಕಾರಿ ಶಾಲೆಗಳಿವೆ. ೫೬ ಪ್ರಾಥಮಿಕ ಹಾಗು ೧೬ ಪ್ರೌಢಶಾಲೆ ಅತಿಥಿ ಶಿಕ್ಷಕರನ್ನು ನೇಮಕಗೊಳಿಸಲಾಗಿದೆ. ತಾಲೂಕಿನಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಟ್ಟು ೧೦೬೭ ಹುದ್ದೆಗಳಿದ್ದು, ಈ ಪೈಕಿ ೩೦ ಮುಖ್ಯ ಶಿಕ್ಷಕರು, ೧೩೧ ಸಹಾಯಕ ಶಿಕ್ಷಕರು ಹಾಗು ೧೧ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಸೇರಿದಂತೆ ಒಟ್ಟು ೧೭೨ ಹುದ್ದೆಗಳು ಖಾಲಿ ಉಳಿದಿವೆ. ಇದೆ ರೀತಿ ಪ್ರೌಢಶಾಲಾ ವಿಭಾಗದಲ್ಲಿ ಒಟ್ಟು ೨೫೭ ಹುದ್ದೆಗಳಿದ್ದು, ಈ ಪೈಕಿ ೨೨೭ ಹುದ್ದೆಗಳು ಭರ್ತಿಯಾಗಿ ೩೦ ಹುದ್ದೆಗಳು ಖಾಲಿ ಉಳಿದಿವೆ ಎಂದರು.
    ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳ ಸಂಖ್ಯೆ ಹೆಚ್ಚಿಸಲು ಆಯಾ ಶಾಲೆಗಳ ವ್ಯಾಪ್ತಿಯಲ್ಲಿ ಇಲಾಖೆಯ ಸಿಬ್ಬಂದಿಗಳು ಪೋಷಕರನ್ನು ಬಳಸಿಕೊಂಡು ಶಾಲಾ ದಾಖಲಾತಿ ಅಂದೋಲನ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಈ ಬಾರಿ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭು, ಶಿಕ್ಷಣ ಸಂಯೋಜಕ ರವಿಕುಮಾರ್, ಸಿಆರ್‌ಪಿ ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.