Wednesday, August 2, 2023

ಯೋಧಯೊಬ್ಬರಿಗೆ ಸೇರಿದ ಜಾಗ ಕಬಳಿಕೆ ಆರೋಪ

ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ

ಯೋಧಯೊಬ್ಬರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿರುವುದನ್ನು ವಿರೋಧಿಸಿ ಬುಧವಾರ ಭದ್ರಾವತಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ನಗರಸಭೆ ಮುಂಭಾಗ  ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಭದ್ರಾವತಿ, ಆ. ೨: ಯೋಧಯೊಬ್ಬರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿರುವುದನ್ನು ವಿರೋಧಿಸಿ ಬುಧವಾರ ನಗರದ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ  ನಗರಸಭೆ ಮುಂಭಾಗ  ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಬೊಮ್ಮನಕಟ್ಟೆ ವಾರ್ಡ್‌ನಂ.೨೩ರಲ್ಲಿರುವ ಸರ್ವೆ ನಂ.೯೧ರ ಬಡಾವಣೆಯಲ್ಲಿ ವಿ. ಗುರುವಯ್ಯನ ಹೆಸರಿನಲ್ಲಿರುವ ಖಾತೆ ನಂ.೧೨೦೨/೩೮, ಸೈಟ್‌ ನಂ.೩೮ನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸಲಾಗುತ್ತಿದೆ. ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗಹಿಸಲಾಯಿತು.
    ಸೈಟ್‌ ನಂ.೭ರ ಸ್ವತ್ತಿನ ಮಾಲೀಕರು ಸೈಟ್‌ ನಂ.೩೮ರ ಸ್ವತ್ತಿನ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿದ್ದಾರೆ. ವಿನಾಕಾರಣ ಯೋಧರ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸ್ವತ್ತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲವನ್ನು ತಕ್ಷಣ ಬಗೆಹರಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಲಾಯಿತು.  
    ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಡಿಎಸ್‌ಎಸ್‌ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಪ್ರಗತಿಪರ ಸಂಘಟನೆಗಳ ಮುಖಂಡ ಸುರೇಶ್‌  ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹ ನೇತೃತ್ವ ವಹಿಸಿದ್ದರು.
    ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಚಿನ್ನಯ್ಯ, ಹಾವು ಮಂಜು, ದಾಸ್‌, ಶ್ಯಾಮ್‌, ಜಗದೀಶ್‌, ಚನ್ನಪ್ಪ, ಕಾಣಿಕ್‌ರಾಜ್‌, ಈಶ್ವರಪ್ಪ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
    ನಗರಸಭೆಯಿಂದ ಪೇಪರ್‌ ಟೌನ್‌ ಪೊಲೀಸ್‌ ಠಾಣೆಗೆ ದೂರು :
    ಸರ್ವೆ ನಂ.೯೧ರ ಸೈಟ್‌ ನಂ.೭ ಮತ್ತು ೩೮ಕ್ಕೆ ಸಂಬಂಧಿಸಿದಂತೆ ನಗರಸಭೆ ವತಿಯಿಂದ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡಿದ್ದು, ಸೈಟ್‌ ನಂ.೭ ಮತ್ತು ೩೮ ಬೇರೆ ಬೇರೆಯಾಗಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸೂಕ್ತ  ಕ್ರಮ ಕೈಗೊಳ್ಳುವಂತೆ ಪೇಪರ್‌ಟೌನ್‌ ಪೊಲೀಸ್‌ ಠಾಣೆಗೆ ಪೌರಾಯುಕ್ತ ಮನುಕುಮಾರ್‌ ದೂರು ನೀಡಿದ್ದಾರೆ.

ಎಂಪಿಎಂ ಕಾರ್ಖಾನೆ ನಿವೃತ್ತ ನೌಕರ ಜಿ. ರಮೇಶ್‌ ನಿಧನ

ಜಿ. ರಮೇಶ್‌
    ಭದ್ರಾವತಿ, ಆ. ೨ : ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಉದ್ಯೋಗಿ, ಬೊಮ್ಮನಕಟ್ಟೆ ನಿವಾಸಿ ಜಿ. ರಮೇಶ್‌(೫೫) ಮಂಗಳವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದರು.  ಅನಾರೋಗ್ಯದಿಂದ ಬಳಲುತ್ತಿದ್ದ  ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ಎಂಪಿಎಂ ಕಾರ್ಖಾನೆಯಲ್ಲಿ ಫೋರ್‌ಮೆನ್‌ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಎಂಪಿಎಂ ಜೆಂಟ್ಸ್‌ ಕ್ಲಬ್‌ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಎಂಪಿಎಂ ಕಾರ್ಖಾನೆ ನಿವೃತ್ತ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.

Tuesday, August 1, 2023

ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರಕ್ಕೆ ಖಂಡನೆ

ಹೆಚ್ಚಿನ ಕಾನೂನು ವ್ಯವಸ್ಥೆ ಜಾರಿಗೆ ಆಗ್ರಹ

ಕೇಂದ್ರ  ಹಾಗೂ ರಾಜ್ಯ ಸರ್ಕಾರಗಳು, ಮಹಿಳೆಯರ ಮಾನ, ಪ್ರಾಣ, ಭದ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಕಾನೂನು ವ್ಯವಸ್ಥೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹಾಗು ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.  
    ಭದ್ರಾವತಿ, ಆ. ೧ :  ಕೇಂದ್ರ  ಹಾಗೂ ರಾಜ್ಯ ಸರ್ಕಾರಗಳು, ಮಹಿಳೆಯರ ಮಾನ, ಪ್ರಾಣ, ಭದ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಕಾನೂನು ವ್ಯವಸ್ಥೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹಾಗು ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ತಪ್ಪಿತಸ್ಥರಿಗೆ
    ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.  
    ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯ ಮಾನ ಹಾನಿ ಪ್ರಕರಣ ಹಾಗೂ ಮಣಿಪುರ ರಾಜ್ಯದಲ್ಲಿ ನಡೆದ ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಹಾಗೂ ಬೆತ್ತಲೆ ಮೆರವಣಿಗೆ ಪ್ರಕರಣಗಳು, ಅಮಾನವೀಯ, ರೌದ್ರ ಹಾಗೂ ರಾಕ್ಷಸತನದ ಪರಮಾವಧಿ ಮೀರಿದಂತಹ ಹೇಯ ಕೃತ್ಯಗಳಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ನೀಚ ಕೃತ್ಯಗಳು ಮರುಕಳುಹಿಸದಂತೆ ಎಚ್ಚರವಹಿಸಬೇಕೆಂದು ಆಗ್ರಹಿಸಲಾಯಿತು.
    ತಹಸೀಲ್ದಾರ್‌ ಗ್ರೇಡ್‌-೨ ರಂಗಮ್ಮ ಅವರ ಮೂಲಕ ಮನವಿ ಸಲ್ಲಿಸಲಾಯಿತು. ವೇದಿಕೆ ಅಧ್ಯಕ್ಷೆ ಎಂ.ಎಸ್‌ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳಾದ ಪ್ರಧಾನ ಕಾರ್ಯದಶಿ ಲತಾ ಪ್ರಭಾಕರ್‌, ಉಪಾಧ್ಯಕ್ಷೆ ಸುಮ ಚಂದ್ರಶೇಖರ್‌, ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್‌ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜಾಗ ಕಬಳಿಕೆ ವಿರೋಧಿಸಿ ಆ.೨ರಂದು ಧರಣಿ ಸತ್ಯಾಗ್ರಹ

    ಭದ್ರಾವತಿ, ಆ. ೧: ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಯೋಧಯೊಬ್ಬರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿರುವುದನ್ನು ವಿರೋಧಿಸಿ  ಆ.೨ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 
    ಬೊಮ್ಮನಕಟ್ಟೆ ವಾರ್ಡ್‌ ನಂ.೨೩ರಲ್ಲಿರುವ ಸರ್ವೆ ನಂ.೯೧ರ ಬಡಾವಣೆಯಲ್ಲಿ ವಿ. ಗುರುವಯ್ಯನ ಹೆಸರಿನಲ್ಲಿರುವ ಖಾತೆ ನಂ.೧೨೦೨/೩೮, ಸೈಟ್‌ ನಂ.೩೮ನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿದ್ದು, ಇದನ್ನು ವಿರೋಧಿಸಿ ನಗರಸಭೆ ಮುಂಭಾಗ ಬೆಳಿಗ್ಗೆ ೧೦.೩೦ಕ್ಕೆ ಧರಣಿ ಸತ್ಯಾಗ್ರಹ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ವಾರ್ಷಿಕ ೩೬ ಸಾವಿರ ಟನ್‌ ಉತ್ಪನ್ನ ಸಿದ್ದಪಡಿಸುವ ಬಾರ್‌ಮಿಲ್‌

    ಭದ್ರಾವತಿ, ಆ. ೧: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕಬ್ಬಿಣ ಮತ್ತು ಉಕ್ಕಿನ ಉತ್ಪನ್ನಗಳನ್ನು ಉತ್ಪಾದಿಸಲಾಗುತ್ತದೆ. ಹಲವು ಪ್ರಮುಖ ಘಟಕಗಳಿದ್ದು, ಈ ಪೈಕಿ ಬಾರ್‌ ಮಿಲ್‌ ಸಹ ಒಂದಾಗಿದೆ.  ಈ ಘಟಕದಲ್ಲಿ ಸದ್ಯಕ್ಕೆ ಕಬ್ಬಿಣದ ರೌಂಡ್ಸ್‌  ಮತ್ತು ಬಿಲೆಟ್ಸ್‌ ಮಾದರಿ ಉತ್ಪನ್ನಗಳನ್ನು ಸಿದ್ದಪಡಿಸಲಾಗುತ್ತಿದೆ.
    ಬಾರ್‌ ಮಿಲ್‌ನಲ್ಲಿ ಒಂದು ಸ್ಟಾಂಡ್‌ ಅಳವಡಿಸಲಾಗಿದ್ದು, ವಾರ್ಷಿಕ ೩೬ ಸಾವಿರ ಟನ್‌ ಉತ್ಪನ್ನಗಳನ್ನು ಸಿದ್ದಪಡಿಸುವ ಸಾಮರ್ಥ್ಯ ಹೊಂದಿದೆ. ರೈಲ್ವೆ ಇಲಾಖೆ, ರಕ್ಷಣಾ ಇಲಾಖೆಗಳಿಗೆ ಅಗತ್ಯವಿರುವ ಹಾಗು ಮಾರುಕಟ್ಟೆಯಿಂದ ಬೇಡಿಕೆ ಬರುವ ಉತ್ಪನ್ನಗಳನ್ನು ಮಾತ್ರ ಸಿದ್ದಪಡಿಸಲಾಗುತ್ತದೆ. ಈ ಘಟಕದಲ್ಲಿ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಒಳಗೊಂಡಂತೆ ಸುಮಾರು ೩೫೦ ರಿಂದ ೪೦೦ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  
    ಕಚ್ಚಾ ಸಾಮಾಗ್ರಿಗಳ ಕೊರತೆಯಿಂದಾಗಿ ಇತ್ತೀಚೆಗೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಕಚ್ಛಾ ಸಾಮಾಗ್ರಿಗಳು ಪೂರೈಕೆಯಾಗಲಿದ್ದು, ಆ.೧೦ರಿಂದ ಘಟಕ ಪುನಃ ಕಾರ್ಯಾರಂಭಗೊಳ್ಳಲಿದೆ.

ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಒಂದು ಹಂತದಲ್ಲಿ ಜಯ : ಆ.೧೦ರಿಂದ ಬಾರ್‌ಮಿಲ್ ಘಟಕ ಆರಂಭ

ಪ್ರಕಟಣೆ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್, ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ.
    ಭದ್ರಾವತಿ, ಆ. ೧ : ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯುವುದು, ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಸುಮಾರು ೭ ತಿಂಗಳಿನಿಂದ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಇದೀಗ ಒಂದು ಹಂತದಲ್ಲಿ ಫಲ ಲಭಿಸಿದೆ. ಉದ್ಯೋಗ ಕಡಿತದಿಂದ ಸಂಕಷ್ಟಕ್ಕೆ ಒಳಗಾಗಿರುವ ಗುತ್ತಿಗೆ ಕಾರ್ಮಿಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
    ಈ ಹಿಂದೆ ಕೇಂದ್ರ ಸರ್ಕಾರ ನೀತಿ ಆಯೋಗದ ನಿರ್ದೇಶನದ ಮೇರೆಗೆ ವಿಐಎಸ್‌ಎಲ್ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವ ಕಾರ್ಖಾನೆಗಳ ಸಾಲಿನಲ್ಲಿ ಸೇರ್ಪಡೆಗೊಳಿಸಿ ಖಾಸಗೀಕರಣಗೊಳಿಸಲು ಮುಂದಾಗಿತ್ತು. ಆದರೆ ಕಾರ್ಖಾನೆಯನ್ನು ಮುನ್ನಡೆಸಿಕೊಂಡು ಹೋಗಲು ಬಂಡವಾಳಶಾಹಿಗಳು ಮುಂದೆಬಾರದ ಹಿನ್ನಲೆಯಲ್ಲಿ ಕಳೆದ ಸುಮಾರು ೭ ತಿಂಗಳ ಹಿಂದೆ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ತೀರ್ಮಾನ ಕೈಗೊಳ್ಳಲಾಗಿತ್ತು. ಇದರ ವಿರುದ್ಧ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಇಂದಿಗೂ ಮುಂದುವರೆದಿದೆ.  
    ಎದೆಗುಂದದೆ ಒಗ್ಗಟ್ಟಿನ ಹೋರಾಟ :
    ಸುಮಾರು ೭ ತಿಂಗಳು ಕಳೆದರೂ ಸಹ ಗುತ್ತಿಗೆ ಕಾರ್ಮಿಕರು ಧೈರ್ಯ ಕಳೆದುಕೊಳ್ಳದೆ ಒಗ್ಗಟ್ಟಿನಿಂದ ಹೋರಾಟ ಮುನ್ನಡೆಸುತ್ತಿದ್ದು, ಬೆಂಗಳೂರು ವಿಧಾನಸೌಧ, ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಪಾದಯಾತ್ರೆ, ಬೈಕ್ ರ‍್ಯಾಲಿ, ದೆಹಲಿಯಲ್ಲಿ ಹೋರಾಟ, ಮೈಸೂರು ಮಹಾರಾಜರ ವಂಶಸ್ಥರ ಗಮನ ಸೆಳೆಯಲು ಮೈಸೂರಿನಲ್ಲಿ ಹೋರಾಟ, ಭದ್ರಾವತಿ ಬಂದ್, ಬೃಹತ್ ಜಾಥಾ, ರಸ್ತೆ ತಡೆ, ಸಹಿ ಅಭಿಯಾನ, ಪತ್ರ ಚಳುವಳಿ ಸೇರಿದಂತೆ ಹಲವು ಬಗೆಯ ಹೋರಾಟಗಳನ್ನು ಕೈಗೊಳ್ಳಲಾಗಿದೆ.
    ಹೋರಾಟದ ನಡುವೆ ರಾಜ್ಯದ ಪ್ರಮುಖ ಮಠಗಳಿಗೆ ತೆರಳಿ ಮಠಾಧೀಶರುಗಳಿಗೆ, ಮಾಜಿ ಪ್ರಧಾನಿ, ಕೇಂದ್ರ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳಿಗೆ ಮನವಿ ಸಲ್ಲಿಸಿ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಲಾಗಿದೆ.
    ವಿವಿಧ ಧರ್ಮಗಳ ಧರ್ಮಗುರುಗಳು, ಮಠಾಧೀಶರು, ರಾಜಕೀಯ ಪಕ್ಷಗಳ ಪ್ರಮುಖರು, ಗಣ್ಯರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ನೀಡಿ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಆಗ್ರಹಿಸಿದ್ದಾರೆ. ವಿವಿಧ ಸಂಘ-ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಕೈಜೋಡಿಸಿವೆ. ಆದರೂ ಸಹ ಕೇಂದ್ರ ಸರ್ಕಾರವಾಗಲಿ, ಉಕ್ಕು ಪ್ರಾಧಿಕಾರವಾಗಲಿ ಹೋರಾಟಕ್ಕೆ ಪೂರಕವಾಗಿ ಸ್ಪಂದಿಸಿರಲಿಲ್ಲ. ಈ ನಡುವೆ ಕಾರ್ಖಾನೆಯಲ್ಲಿರುವ ಘಟಕಗಳು ಒಂದಾದ ನಂತರ ಒಂದರಂತೆ ಉತ್ಪಾದನೆ ಸ್ಥಗಿತಗೊಳಿಸುವ ಮೂಲಕ ಕಾರ್ಖಾನೆ ಸಂಪೂರ್ಣವಾಗಿ ಮುಚ್ಚುವ ಭೀತಿ ಎದುರಾಗಿತ್ತು.  

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಬಾರ್ ಮಿಲ್ ಘಟಕ ಆ.೧೦ರಿಂದ ಪುನಃ ಕಾರ್ಯಾರಂಭಗೊಳಿಸುವ ಸಂಬಂಧ ಘಟಕದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಪ್ರತಿ ವ್ಯಾಪಕವಾಗಿ ಹರಿದಾಡುತ್ತಿದೆ.
    ಆ.೧೦ರಿಂದ ಬಾರ್‌ಮಿಲ್ ಘಟಕ ಆರಂಭ:
    ಇದೀಗ ಮುಚ್ಚಲ್ಪಟ್ಟರುವ ಬಾರ್‌ಮಿಲ್ ಘಟಕ ಆರಂಭಗೊಳ್ಳುತ್ತಿದೆ. ಆ.೧೦ರಿಂದ ಪುನಃ ಕಾರ್ಯಾರಂಭಗೊಳಿಸುವ ಸಂಬಂಧ ಘಟಕದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಪ್ರತಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದರಿಂದಾಗಿ ಗುತ್ತಿಗೆ ಕಾರ್ಮಿಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ಕೆಲವು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಿಗೆ ತಿಂಗಳು ಪೂರ್ತಿ ಕೆಲಸ ಲಭಿಸುತ್ತಿಲ್ಲ. ಇತ್ತೀಚೆಗೆ ಕೇವಲ ೧೩ ದಿನ ಮಾತ್ರ ಕೆಲಸ ಲಭಿಸುತ್ತಿದ್ದು, ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ.
    ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ :
    ಈ ಕುರಿತು ಸಂಸದ ಬಿ.ವೈ ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, 'ಮತ್ತೆ ಶುರುವಾಗುತ್ತಿದೆ ಭದ್ರಾವತಿಯ ಸುವರ್ಣಯುಗ!, ಮತ್ತೆ ಫಳಫಳಿಸಲಿದೆ ಕಪ್ಪು ಚಿನ್ನ!, ವಿಐಎಸ್‌ಎಲ್ ಮೈಕೊಡವಿ ಮೇಲೇಳುತ್ತಿದೆ!' ಎಂಬ ತಲೆ ಬರಹದೊಂದಿಗೆ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
    ಉತ್ಪಾದನೆ ಶುರುಮಾಡಲು ಸೈಲ್ ಮ್ಯಾನೇಜ್ಮೆಂಟ್ ಒಪ್ಪಿಕೊಂಡಿದೆ. ಇದೇ ತಿಂಗಳ ೧೦ಕ್ಕೆ ಬಾರ್ ಮಿಲ್ ಶುರುವಾಗಿ, ಅದಾದ ಕೆಲದಿನದಲ್ಲೇ ಪೂರ್ಣ ಪುನರಾರಂಭ!. ಸವಾಲುಗಳನ್ನೆಲ್ಲಾ ಎದುರಿಸಿ ಗೆದ್ದ ಹೆಮ್ಮೆ ಶಿವಮೊಗ್ಗ ಜಿಲ್ಲೆ ಹಾಗೂ ಭದ್ರಾವತಿ ನಗರದ ಜನರದ್ದು, ಭರವಸೆ ಕಳೆದುಕೊಳ್ಳದ ನೌಕರ ಸಮುದಾಯದ್ದು. ಇದಕ್ಕೆ ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಪ್ರಕಾಶ್ ನಿಧನ


ಪ್ರಕಾಶ್
    ಭದ್ರಾವತಿ, ಆ. ೧ : ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ, ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಿವಾಸಿ ಪ್ರಕಾಶ್(೫೨) ಮಂಗಳವಾರ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಓರ್ವ ಪುತ್ರ ಇದ್ದರು. ಹಲವಾರು ವರ್ಷಗಳಿಂದ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ನಿಧನಕ್ಕೆ ಗುತ್ತಿಗೆ ಕಾರ್ಮಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.