Wednesday, August 9, 2023

ಭದ್ರಗಿರಿಯಲ್ಲಿ ವಿಜೃಂಭಣೆಯಿಂದ ಜರುಗಿದ ಆಡಿ ಕೃತಿಕಾ ಜಾತ್ರಾ ಮಹೋತ್ಸವ

ಭದ್ರಾವತಿ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಆಡಿ ಕೃತ್ತಿಕಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.  
    ಭದ್ರಾವತಿ, ಆ. ೯ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಆಡಿ ಕೃತ್ತಿಕಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.  
    ಶ್ರೀ ಕ್ಷೇತ್ರದಲ್ಲಿನ ಎಲ್ಲಾ ಮೂಲ ವಿಗ್ರಹಗಳಿಗೆ ಹಾಗು ಶ್ರೀ ದವತ್ತಿರು ಸ್ವಾಮೀಜಿಯವರ ಶಕ್ತಿ ಪೀಠಕ್ಕೆ ವಿಶೇಷ ಅಲಂಕಾರ ಕೈಗೊಳ್ಳುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಯಿತು.  ಬೆಳಗಿನ ಜಾವ ೪ ಗಂಟೆಗೆ ವಿಶ್ವರೂಪ ದರ್ಶನ ಮತ್ತು ಅಭಿಷೇಕ, ೫ ರಿಂದ ಉತ್ಸವ ಪೂಜೆ ಹಾಗು ಕಾವಡಿ ಹರಕೆ ಸಮರ್ಪಣೆ ನಡೆಯಿತು.


    ಭರಣಿ ಕಾವಡಿ ಉತ್ಸವ ಮಂಗಳವಾರ ಜರುಗಿದ್ದು, ಬೆಳಿಗ್ಗೆಯಿಂದಲೇ ಭಕ್ತಾಧಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದುಕೊಂಡರು.  ಚಿಕ್ಕಮಗಳೂರು ಹಾಗು ಶಿವಮೊಗ್ಗ ಜಿಲ್ಲೆಗಳಿಂದ, ರಾಜ್ಯದ ವಿವಿಧ ಭಾಗಗಳಿಂದ ಹಾಗು ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು. ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
    ವಿಶೇಷವಾಗಿ ಕಾವಡಿ ಹರಕೆ ಹೊತ್ತ ಭಕ್ತರು ಗಮನ ಸೆಳೆದರು. ಬಾಯಿ, ಬೆನ್ನಿಗೆ ಕಾವಡಿ ಚುಚ್ಚಿಕೊಂಡು ಹರಕೆ ಸಮರ್ಪಿಸುವ ಮೂಲಕ ಭಕ್ತಿ ಮೆರೆದರು.


    ಶ್ರೀ ಕ್ಷೇತ್ರದ ಶ್ರೀ ಮುರುಗೇಶ್‌ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕ್ಷೇತ್ರದ ಪ್ರಮುಖರಾದ ಎ. ಚಂದ್ರಘೋಷಣ್‌  ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರುಗಳು, ಭದ್ರಗಿರಿ ಸೇವಾ ಟ್ರಸ್ಟ್‌ ಪದಾಧಿಕಾರಿಗಳು ಹಾಗು ಸೇವಾಕರ್ತರು ಉಪಸ್ಥಿತರಿದ್ದರು.

Tuesday, August 8, 2023

ಚಿರತೆ ದಾಳಿ ರೈತ ಮಹಿಳೆ ಬಲಿ



ಭದ್ರಾವತಿ: ಚಿರತೆ ದಾಳಿಗೆ ಬಿಕ್ಕೋನಹಳ್ಳಿಯಲ್ಲಿ ರೈತ ಮಹಿಳೆ ಯಶೋಧಮ್ಮ (43) ಬಲಿಯಾಗಿದ್ದಾರೆ.
      ಕಾಡಂಚಿನ ಹೊಲದಲ್ಲಿ ಕಳೆ ತೆಗೆಯುವ ವೇಳೆ‌ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ.  ಮೃತ ದೇಹವನ್ನು ಎಳೆದುಕೊಂಡು ಹೋಗಿ  ಅರ್ಧಂಬರ್ಧ ತಿಂದಿ ಬಿಟ್ಟು ಹೋಗಿದೆ. ಗ್ರಾಮದ ಸುತ್ತಮುತ್ತ ಚಿರತೆಗಳ ಉಪಟಳ ಹೆಚ್ಚಾಗಲು ಅರಣ್ಯ ಇಲಾಖೆಯವರೇ ಕಾರಣ. ಬೇರೆಡೆ ಹಿಡಿದ ಚಿರತೆಗಳನ್ನು ಸಿದ್ದರಮಟ್ಟಿ ಭಾಗದಲ್ಲಿ ಬಿಟ್ಟು ಹೋಗುತ್ತಿರುವುದರಿಂದ ಸೊಮ್ಮಿನಕೊಪ್ಪ ಸುತ್ತಮುತ್ತ ಚಿರತೆಗಳು ಆಶ್ರಯಪಡೆದಿವೆ.
       ಚಿರತೆ ದಾಳಿಯಿಂದ ಕುತ್ತಿಗೆ ಬೆನ್ನಿನ ಭಾಗ ಕಿತ್ತುಹೋಗಿದೆ. ಈ ದಾಳಿ ಬಿಕ್ಕೋನಹಳ್ಳಿ ಸುತ್ತಮುತ್ತ ಗ್ರಾಮಸ್ಥರನ್ನು ಗಾಬರಿಗೊಳಿಸಿದೆ. ಈ ಭಾಗದಲ್ಲಿ ಚಿರತೆ ಹೆಚ್ಚಿದ್ದರು ಅರಣ್ಯ ಇಲಾಖೆ‌ಯವರ ನಿರ್ಲಕ್ಷ ಹೆಚ್ಚಿದೆ. ಯಾವ ಕ್ರಮವೂ ಜರುಗಿಸಿಲ್ಲ. ಬೋನ್ ಇಟ್ಟು ಹೋಗುತ್ತಾರೆ ಆದರೆ ಚಿರತೆ ಬೋನಿಗೆ ಬೀಳುವ ವರೆಗೂ ಯಾವ ಕ್ರಮವೂ ಜರುಗಿಸಿಲ್ಲ ಎಂದು ಗ್ರಾಮಸ್ಥರು ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತರಗಂಗೆ ಗ್ರಾ. ಪಂ. ಅಧ್ಯಕ್ಷರಾಗಿ ನಾಗೇಶ್‌, ಉಪಾಧ್ಯಕ್ಷರಾಗಿ ಗಂಗಮ್ಮ

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಾಗೇಶ್‌ ಮತ್ತು  ಉಪಾಧ್ಯಕ್ಷರಾಗಿ ಗಂಗಮ್ಮ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ : ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಾಗೇಶ್‌ ಮತ್ತು  ಉಪಾಧ್ಯಕ್ಷರಾಗಿ ಗಂಗಮ್ಮ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
    ೧೫ ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ  ಅಧ್ಯಕ್ಷ ಸ್ಥಾನಕ್ಕೆ ಅಂತರಗಂಗೆ ನಾಗೇಶ್  ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ  ಗಂಗಮ್ಮ  ತಲಾ ಒಂದು ಮತಗಳ ಅಂತರದಿಂದ ಆಯ್ಕೆಯಾದರು. ಚುನಾವಣೆಯಲ್ಲಿ ಎಲ್ಲಾ ೧೫ ಮಂದಿ ಸದಸ್ಯರು ಭಾಗವಹಿಸಿ ಮತಚಲಾಯಿಸಿದರು.
    ನೂತನ ಅಧ್ಯಕ್ಷರು- ಉಪಾಧ್ಯಕ್ಷರನ್ನು ಬ್ಲಾಕ್‌ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್. ಕುಮಾರ್, ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಶ್ರೀನಿವಾಸ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಮುಖಂಡರುಗಳು, ಅಭಿಮಾನಿಗಳು, ಕಾರ್ಯಕರ್ತರು ಅಭಿನಂದಿಸಿದರು.

ದರೋಡೆ ಪ್ರಕರಣದ ಆರೋಪಿಗೆ ೩ ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕಾರಾಗೃಹ ಶಿಕ್ಷೆಗೆ ಒಳಗಾಗಿರುವ ಆರೋಪಿ ಕುಮಾರ
    ಭದ್ರಾವತಿ, ಆ. ೮:  ದರೋಡೆ ಪ್ರಕರಣದ ಆರೋಪಿಯೊಬ್ಬರಿಗೆ ನ್ಯಾಯಾಲಯ ೩ ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
    ಕುಮಾರ(೪೨)  ಶಿಕ್ಷೆಗೊಳಗಿದ್ದು,  ಈತನ ವಿರುದ್ಧ ನ್ಯೂಟೌನ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು.  ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರು. ದಂಡ, ದಂಡವನ್ನು ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.

ಸಮಾಜದ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿದಾಗ ಮಾತ್ರ ಪರಿಹಾರ ಸಾಧ್ಯ : ಪ್ರಕಾಶ್‌ ರಾಜ್‌

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ ಟ್ರಸ್ಟ್‌ ಸಹಯೋಗದೊಂದಿಗೆ  ಭದ್ರಾವತಿ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ ರಾಜ್‌ ವಿದ್ಯಾರ್ಥಿಗಳ  ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
    ಭದ್ರಾವತಿ, ಆ. ೮ :  ಸಮಾಜದ ಸಮಸ್ಯೆಗಳಿಗೆ ನಾವುಗಳು ಪೂರಕವಾಗಿ ಸ್ಪಂದಿಸಿದಾಗ ಮಾತ್ರ ಪರಿಹಾರ ಕಂಡು ಕೊಳ್ಳಲು ಸಾಧ್ಯ ಎಂದು ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ ರಾಜ್‌ ಹೇಳಿದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ ಟ್ರಸ್ಟ್‌ ಸಹಯೋಗದೊಂದಿಗೆ  ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ  ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
    ನಗರ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಮತ್ತು ಮೈಸೂರು ಕಾಗದ ಕಾರ್ಖಾನೆ(ಎಂಪಿಎಂ)ಗಳ ಸಮಸ್ಯೆಗಳು ಕೇವಲ ಕಾರ್ಮಿಕರ ಸಮಸ್ಯೆಗಳಲ್ಲ. ಇಡೀ ಊರಿನ ಸಮಸ್ಯೆಯಾಗಿದೆ ಎಂದು ಜನರು ಭಾವಿಸಿ, ಪ್ರತಿಕ್ರಿಯಿಸಿದಾಗ ಮಾತ್ರ  ಸಮಸ್ಯೆ ನಿವಾರಣೆ ಸಾಧ್ಯ  ಎಂದರು.  
    ಕಲಾವಿದರು ಸಮಾಜದ ಪ್ರತಿನಿಧಿಗಳು:
    ಕಲಾವಿದರು ಹೇಡಿಗಳಾದರೆ, ಸಮಾಜ ಹೇಡಿಯಾದಂತೆ. ಏಕೆಂದರೆ ಕಲಾವಿದರು ಸಹ ಸಮಾಜದ ಪ್ರತಿನಿಧಿಗಳು. ಕಲಾವಿದ ಕೇವಲ ಪ್ರತಿಭೆಯಿಂದ ಮಾತ್ರ ಬೆಳೆಯಲು ಸಾಧ್ಯವಿಲ್ಲ. ಸಮಾಜದ ಜನ ಪ್ರೋತ್ಸಾಹಿಸಿದಾಗ, ಒಪ್ಪಿಕೊಂಡಾಗ ಮಾತ್ರ ಬೆಳೆಯಲು ಸಾಧ್ಯ ಎಂದರು.
    ಧರ್ಮದ ಹೆಸರಿನಲ್ಲಿ ವಿವಾದಗಳು ಬೇಡ :
    ಧರ್ಮದ ಹೆಸರಿನಲ್ಲಿ ವಿವಾದಗಳು ಸೃಷ್ಟಿಸಬಾರದು. ಏಕೆಂದರೆ ಧರ್ಮ ಕರುಣೆಯನ್ನು ಸಾರುತ್ತದೆ ಹೊರತು, ಹಿಂಸೆಯನ್ನಲ್ಲ. ಆದ್ದರಿಂದ ನಾವುಗಳು ವಿಶ್ವ ಮಾನವರಾಗೋಣ, ವಿಶ್ವ ಗುರುವಾಗುವುದು ಬೇಡ. ಸಮಾಜದಲ್ಲಿ ಭಿನ್ನಾಭಿಪ್ರಾಯಗಳಿರಬೇಕು. ಆದರೆ ಭಿನ್ನಾಭಿಪ್ರಾಯವನ್ನು ಅವಾಚ್ಯ ಶಬ್ದಗಳ ಮೂಲಕ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.

ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ ರಾಜ್‌ ಸಂವಾದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ವಿರೋಧ

ಪ್ರತಿಭಟನೆ ನಡೆಸಿ, ವೇದಿಕೆ ಸ್ಥಳವನ್ನು ನೀರಿನಿಂದ ಶುದ್ಧೀಕರಿಸಿದ ವಿದ್ಯಾರ್ಥಿಗಳು

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ ಟ್ರಸ್ಟ್‌ ಸಹಯೋಗದೊಂದಿಗೆ  ಭದ್ರಾವತಿ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮಕ್ಕೆ ಕಾಲೇಜಿನ ಕೆಲವು ವಿದ್ಯಾರ್ಥಿಗಳೇ ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
    ಭದ್ರಾವತಿ, ಆ. ೮ : ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ಸಹಯೋಗದೊಂದಿಗೆ  ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮಕ್ಕೆ ಕಾಲೇಜಿನ ಕೆಲವು ವಿದ್ಯಾರ್ಥಿಗಳೇ ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
    ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ ರಾಜ್‌ರವರು ಸದಾ ದೇಶ ವಿರೋಧಿಗಳನ್ನು ಬೆಂಬಲಿಸುತ್ತಿದ್ದು, ಅವರಿಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಅರ್ಹತೆ ಇಲ್ಲ.  ವಿದ್ಯಾರ್ಥಿಗಳ ಅಭಿಪ್ರಾಯ ಪಡೆಯದೆ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಸಂವಾದ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್‌ ಹೊಸಳ್ಳೇರ ಮಾತನಾಡಿ, ಕಾರ್ಯಕ್ರಮ ಕುರಿತು ಮನವರಿಕೆ ಮಾಡಿಕೊಟ್ಟರು. ಆದರೂ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಮುಂದುವರೆಸಿದರು. ಅಲ್ಲದೆ ಕೆಲವು ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದ ಸ್ಥಳವನ್ನು ನೀರಿನಿಂದ ಶುದ್ಧೀಕರಿಸಿದರು.
    ವಿದ್ಯಾರ್ಥಿಗಳ ಪ್ರತಿಭಟನೆಗೆ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್‌ ಬೆಂಬಲ ಸೂಚಿಸಿ ಕಾಲೇಜು ಆಡಳಿತ ಮಂಡಳಿ ನಡೆಯನ್ನು ಪ್ರಶ್ನಿಸಿದರು.  

ಪ್ರತಿಯೊಬ್ಬರು ಒಗ್ಗಟ್ಟಿನಿಂದ ಬದುಕುವ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಿ

ಸಂವಾದ ಕಾರ್ಯಕ್ರಮದಲ್ಲಿ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ರಾಜ್‌

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ಸಹಯೋಗದೊಂದಿಗೆ ಭದ್ರಾವತಿ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ರಾಜ್‌ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಕಾಲೇಜಿನ ಆವರಣದಲ್ಲಿರುವ ಸರ್‌.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
    ಭದ್ರಾವತಿ, ಆ. ೮:  ಪ್ರತಿಯೊಬ್ಬರು ಒಗ್ಗಟ್ಟಿನಿಂದ ಬದುಕುವ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ರಾಜ್‌ ಹೇಳಿದರು.
    ಅವರು ಮಂಗಳವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ಸಹಯೋಗದೊಂದಿಗೆ  ನ್ಯೂಟೌನ್‌ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪ್ರತಿಯೊಬ್ಬರಲ್ಲೂ ವಿಶ್ವ ಮಾನವ ಭಾವನೆಗಳು ಬೆಳೆಯಬೇಕು. ಧರ್ಮ, ಜಾತಿ ಎಲ್ಲವನ್ನು ಮೀರಿದ ಮಾನವೀಯ ಸಮಾಜ ನಿರ್ಮಾಣವಾಗಬೇಕು. ನಮ್ಮ ದೇಹಕ್ಕೆ ಗಾಯವಾದರೆ ಅದು ನಮಗೆ ಮಾತ್ರ ಸೀಮಿತವಾಗಿ ಬಿಡುತ್ತದೆ. ಆದರೆ ಸಮಾಜಕ್ಕೆ ಗಾಯವಾದರೆ ಅದು ಎಲ್ಲರಿಗೂ ವ್ಯಾಪಿಸುತ್ತದೆ. ಈ ಹಿನ್ನಲೆಯಲ್ಲಿ ಸಮಾಜಕ್ಕೆ ಗಾಯವಾದಾಗ ನಾವೆಲ್ಲರೂ ಎಚ್ಚೆತ್ತುಕೊಂಡು ಜಾಗೃತರಾಗಬೇಕೆಂದರು.
ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಆಶಯಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಾಗಿ ಬದುಕುವ ಮನೋಭಾವ ಬೆಳೆಸಿಕೊಳ್ಳಬೇಕು. ಒಬ್ಬರಿಗಾಗಿ ಎಲ್ಲರೂ ಎಲ್ಲರಿಗೂ ಒಬ್ಬರು ಎಂಬ ಭಾವನೆ ಬೆಳೆದಾಗ ಮಾತ್ರ ಎಲ್ಲವೂ ಸಾಧ್ಯ ಎಂದರು.


    ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್‌ಅಶೋಕ್‌, ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಚಿನ್ನಯ್ಯ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್‌,  ಮಾಜಿ ಸದಸ್ಯ ಬಾಲಕೃಷ್ಣ, ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ಅಧ್ಯಕ್ಷ ಜಿ. ರಾಜು ಸೇರಿದಂತೆ  ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಹೊಸಳ್ಳೇರ ಹಾಗು ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿಗಳು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.
 ಪ್ರಗತಿಪರ ಸಂಘಟನೆಗಳ ಮುಖಂಡ ಸುರೇಶ್‌ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಚ್.ಎಂ ಖಾದ್ರಿ ಸ್ವಾಗತಿಸಿದರು.
    ಪೊಲೀಸ್‌ ಬಂದೋಬಸ್ತ್‌ :
    ಪ್ರಕಾಶ್‌ರಾಜ್‌ ಆಗಮನಕ್ಕೆ ನಗರದಲ್ಲಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ವತಿಯಿಂದ ಹೆಚ್ಚಿನ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.
    ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪಾಸ್‌ ಹೊಂದಿರುವವರಿಗೆ ಮಾತ್ರ ಕಾಲೇಜು ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಅಲ್ಲದೆ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.