Friday, August 11, 2023

ಕಸಾಪ ದತ್ತಿ ಕಾರ್ಯಕ್ರಮ : ಅಂಧ ವಿಕಲಚೇತನರಿಂದ ಗೀತ ಗಾಯನ

ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಭದ್ರಾವತಿ ನ್ಯೂಟೌನ್‌ ಲಯನ್ಸ್‌ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ  ಇಎಸ್‌ಐ ಉದ್ಯೋಗಿ ಎಸ್. ಮನೋಜ್‌ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದತ್ತಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ ಉದ್ಘಾಟಿಸಿದರು.
    ಭದ್ರಾವತಿ, ಆ. ೧೧: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನ್ಯೂಟೌನ್‌ ಲಯನ್ಸ್‌ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ  ಇಎಸ್‌ಐ ಉದ್ಯೋಗಿ ಎಸ್. ಮನೋಜ್‌ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದತ್ತಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ ಉದ್ಘಾಟಿಸಿದರು.
    ಸಿದ್ದಾರ್ಥ ಅಂಧರ ಕೇಂದ್ರದ ಮಕ್ಕಳಿಂದ ಗೀತ ಗಾಯನ ನಡೆಯಿತು. ಪರಿಷತ್‌ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆ ವಹಿಸಿದ್ದರು.
    ದತ್ತಿ ದಾನಿ ಲಯನ್ಸ್‌ ಎನ್‌. ಶ್ರೀನಿವಾಸ್‌, ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಎಂ.ಆರ್‌ ರೇವಣಪ್ಪ, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ರಾಜೇಶ್‌ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಶಾಸಕ ಬಿ.ಕೆ ಸಂಗಮೇಶ್ವರ್‌

ಶಾಸಕ ಬಿ.ಕೆ ಸಂಗಮೇಶ್ವರ್‌
    ಭದ್ರಾವತಿ, ಆ. ೧೧:  ಈ ಹಿಂದೆ ಕಾಂಗ್ರೆಸ್‌-ಜೆಡಿಎಸ್‌ ಸಂಯುಕ್ತ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಸಕ ಬಿ.ಕೆ ಸಂಗಮೇಶ್ವರ್‌ ಅವರನ್ನು ಈ ಬಾರಿ ವಿಧಾನಸಭೆ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರನ್ನಾಗಿ ಸಭಾಧ್ಯಕ್ಷ ಯು.ಟಿ ಖಾದರ್‌ ನೇಮಕಗೊಳಿಸಿದ್ದಾರೆ.
    ಸಮಿತಿ ಒಟ್ಟು ೧೫ ಸದಸ್ಯರನ್ನು ಒಳಗೊಂಡಿದ್ದು, ಬಿ.ಕೆ ಸಂಗಮೇಶ್ವರ್‌, ಶಾಮನೂರು ಶಿವಶಂಕರಪ್ಪ, ಬಾಲಚಂದ್ರ ಲಕ್ಷ್ಮಣರಾವ್‌, ಪ್ರಭು ಬಿ. ಚೌವ್ಹಾಣ್‌, ಸಿದ್ದು ಸವದಿ, ಗೋಪಾಲಕೃಷ್ಣ ಬೇಳೂರು, ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ್‌, ದಿನಕರ್‌ ಕೇಶವ ಶೆಟ್ಟಿ, ಜಾರಕಿಹೊಳಿ, ಚನ್ನಾರೆಡ್ಡಿ ಪಾಟೀಲ ತುನ್ನೂರ, ಅವಿನಾಶ್‌ ಉಮೇಶ್‌ ಜಾಧವ್‌, ಅಶೋಕ್‌ ಕುಮಾರ್‌ ರೈ, ಅಶೋಕ ಮಲ್ಲಪ್ಪ ಮನಗೂಳಿ, ನಾರಾ ಭರತ್‌ರೆಡ್ಡಿ ಮತ್ತು ಎನ್‌.ಟಿ ಶ್ರೀನಿವಾಸ್‌ ಸಮಿತಿ ಸದಸ್ಯರಾಗಿದ್ದಾರೆ.
    ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ ೨೧(೨)ರ ಮೇರೆಗೆ ಸಭಾಧ್ಯಕ್ಷರು ಸಮಿತಿಯನ್ನು ರಚಿಸಿ ಸಂಗಮೇಶ್ವರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ.
    ಸದನದಲ್ಲಿ ಸದಸ್ಯರುಗಳು ಕೇಳುವ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ಶೂನ್ಯ ವೇಳೆ ಚರ್ಚೆ, ಅಧ್ಯಕ್ಷರ ಅಪ್ಪಣೆ ಮೇರೆಗೆ ಚರ್ಚಿಸುವ ಸಂದರ್ಭದಲ್ಲಿ ಸಚಿವರುಗಳು ನೀಡುವ ಭರವಸೆಗಳನ್ನು ಪರಿಶೀಲಿಸುವುದು, ಗರಿಷ್ಠ ೨ ತಿಂಗಳ ಅವಧಿಯಲ್ಲಿ ಕಾರ್ಯಗತಗೊಳಿಸಲಾಗಿದೆಯೇ ಇಲ್ಲವೇ ಎಂಬುದನ್ನು ನಿರ್ಣಯಿಸುವುದು ಹಾಗು ವರದಿ ಮಾಡುವ ಜವಾಬ್ದಾರಿಯನ್ನು ಸಮಿತಿ ಹೊಂದಿದೆ. ಅಲ್ಲದೆ ಕೆಲವು ಭರವಸೆಗಳಲ್ಲಿನ ವಿಷಯಗಳನ್ನಾಧರಿಸಿ ಇಲಾಖೆ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡುವ ಅಧಿಕಾರ ಹೊಂದಿದೆ.
    ಸಚಿವ ಸ್ಥಾನವೂ ಇಲ್ಲ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೂ ಇಲ್ಲ:
    ವಿಧಾನಸಭಾ ಕ್ಷೇತ್ರದಿಂದ ೪ನೇ ಬಾರಿಗೆ ಆಯ್ಕೆಯಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಲಭಿಸುವ ವಿಶ್ವಾಸ ಆರಂಭದಲ್ಲಿ ಹೊಂದಲಾಗಿತ್ತು. ಆದರೆ ಸಚಿವ ಸ್ಥಾನ ಕೈತಪ್ಪಿ ಹೋಯಿತು. ನಂತರ ಯಾವುದಾದರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸುವ ವಿಶ್ವಾಸವಿತ್ತು. ಆದರೆ ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಹ ಕೈತಪ್ಪಿ ಹೋಗುವ ಆತಂಕ ಎದುರಾಗಿದೆ. 

ಲಾರಿಗಳಿಂದ ಡೀಸೆಲ್ ಕಳವು : ಇಬ್ಬರು ಕಳ್ಳರ ಬಂಧನ

ಹಳೇನಗರ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ


ಲಾರಿಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಭದ್ರಾವತಿ, ಆ. ೧೧: ಲಾರಿಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ  ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಶಿವಮೊಗ್ಗ ಟಿಪ್ಪುನಗರ ನಿವಾಸಿಗಳಾದ ಸೋನು(೨೪) ಮತ್ತು ನೂರುಲ್ಲಾ (೨೪) ಬಂಧಿತರಾಗಿದ್ದು, ಇವರಿಂದ ೧೫ ಸಾವಿರ ರೂ ಮೌಲ್ಯದ ೧೫೦ ಲೀಟರ್ ಡೀಸೆಲ್ ಹಾಗು ಕೃತ್ಯಕ್ಕೆ ಬಳಸಿದ್ದ ಸುಮಾರು ೭ ಲಕ್ಷ ರು. ಮೌಲ್ಯದ ಅಶೋಕ್ ಲೈಲ್ಯಾಂಡ್ ವಾಹನ ವಶಪಡಿಸಿಕೊಳ್ಳಲಾಗಿದೆ.
    ಠಾಣಾ ವ್ಯಾಪ್ತಿಯ ತರೀಕೆರೆ ರಸ್ತೆಯ ಶಿವನಿ ಕ್ರಾಸ್ ನಲ್ಲಿರುವ ಪೆಟ್ರೋಲ್ ಬಂಕ್ ಪಕ್ಕದ ಖಾಲಿ ಜಾಗದಲ್ಲಿ ತಾಲೂಕಿನ ಮಾವಿನಕೆರೆ ನಿವಾಸಿ ಮಹೇಶ್‌ರವರು ತಮ್ಮ ಲಾರಿಯನ್ನು ನಿಲ್ಲಿಸಿದ್ದು,  ಈ ಲಾರಿಯಲ್ಲಿದ್ದ ಡೀಸೆಲ್ ಕಳವು ಮಾಡಲಾಗಿತ್ತು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ಪ್ರಕರಣ ಬೇಧಿಸಲು ಹಿರಿಯ ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ವೃತ್ತ ನಿರೀಕ್ಷಕ ಶ್ರೀಶೈಲ ನೇತೃತ್ವದಲ್ಲಿ ಠಾಣೆಯ ಉಪ ನಿರೀಕ್ಷಕ  ಶರಣಪ್ಪ ಹಂಡ್ರುಗಲ್, ಸಿಬ್ಬಂದಿಗಳಾದ ಎಚ್.ಸಿ ಹಾಲಪ್ಪ, ಮಧುಪ್ರಸಾದ್ ಹಾಗೂ ಸಿಪಿಸಿ ನಾರಾಯಣಸ್ವಾಮಿ, ಮೌನೇಶ್, ರಾಘವೇಂದ್ರ ಮತ್ತು ರುದ್ರಪ್ಪ ಅವನ್ನೊಳಗೊಂಡ ತಂಡ ರಚಿಸಲಾಗಿತ್ತು.
    ೨ ದಿನದಲ್ಲಿ ಪ್ರಕರಣ ಬೇಧಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ತಂಡವನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ.

Thursday, August 10, 2023

ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆ ಅರ್ಜಿ ಶುಲ್ಕ ಉಚಿತ ಮಾಡಿ

ಸರ್ಕಾರಕ್ಕೆ ಮನವಿ ಮಾಡಿದ ನಾಗರಾಜ್ ಕೊಣನೂರ್

ಭದ್ರಾವತಿ ನ್ಯೂಟೌನ್  ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ   ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
    ಭದ್ರಾವತಿ, ಆ. ೧೦:  ಕೆಲಸಕ್ಕಾಗಿ ಅಲೆದಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಹಾಗೂ ಪರೀಕ್ಷೆಗಳು ನಡೆಸುವ ಪರೀಕ್ಷಾ ಪ್ರಾಧಿಕಾರಗಳು ಉಚಿತವಾಗಿ ಅರ್ಜಿಶುಲ್ಕವಿಲ್ಲದೇ ಪರೀಕ್ಷೆಗಳನ್ನು ನಡೆಸಿದರೆ ವಿದ್ಯಾರ್ಥಿಗಳಲ್ಲಿ ಇನ್ನೂ ಹೆಚ್ಚಿನ ಸ್ಪರ್ಧಾತ್ಮಕ ಪರೀಕ್ಷಾ ಮನೋಭಾವ ಹೆಚ್ಚುತ್ತದೆ ಎಂದು ನಾಗರಾಜ್‌ಕೋಣನೂರ್ ಹೇಳಿದರು.
    ಅವರು ನ್ಯೂಟೌನ್  ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ  ಏರ್ಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
    ಅರ್ಜಿ ಶುಲ್ಕ ರಹಿತ ಪರೀಕ್ಷೆ ನಡೆಸಿದರೆ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸುತ್ತಾರೆ. ಅಲ್ಲದೆ ಪ್ರತಿಭಾನ್ವಿತರು ಆಯ್ಕೆಯಾಗುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬೇಕು. ಉನ್ನತ ಶ್ರೇಣಿಯಲ್ಲಿ ಅಂಕ ಪಡೆದು ಅಂದುಕೊಂಡಿದ್ದನ್ನು ಸಾಧಿಸಬೇಕು ಎನ್ನುವುದು ಎಲ್ಲಾ ವಿದ್ಯಾರ್ಥಿಗಳ ಆಸೆಯಾಗಿರುತ್ತದೆ. ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುವ ಕ್ರಮ ಬಹಳ ಮುಖ್ಯವಾಗಿರುತ್ತದೆ ಎಂದರು.
    ಒಂದಿಷ್ಟು ವಿದ್ಯಾರ್ಥಿಗಳಿಗೆ ಎಷ್ಟೇ ಓದಿದರೂ ತಲೆಗೇ ಹತ್ತುವುದಿಲ್ಲ ಎನ್ನುವ ಕೊರಗು ಕಾಡುತ್ತಿರುತ್ತದೆ. ಇದಕ್ಕೆ ಮುಖ್ಯ ಕಾರಣ ಏಕಾಗ್ರತೆ ಎನ್ನಬಹುದು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡ ಸಹಜವಾಗಿಯೇ ಇರುತ್ತದೆ. ಹೀಗಾಗಿ ಆ ಸಮಯದಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಸರಳ ವಿಧಾನ ಅನುಸರಿಸಬೇಕು.
    ದೀರ್ಘಕಾಲ ಕೊಂಚವೂ ವಿಶ್ರಾಂತಿ ಇಲ್ಲದೇ ಗಂಟೆಗಳ ಕಾಲ ಅಧ್ಯಯನ ಮಾಡುವುದು ಅಷ್ಟು ಒಳ್ಳೆಯದಲ್ಲ. ಇದು ಏಕಾಗ್ರತೆಗೆ ಹಾನಿಯನ್ನುಂಟು ಮಾಡುತ್ತದೆ. ಇದರಿಂದ ನೆನಪಿನ ಶಕ್ತಿ ಕುಂದುತ್ತದೆ. ಹೀಗಾಗಿ ಗಂಟೆಗೊಮ್ಮೆ ವಿರಾಮ ತೆಗೆದುಕೊಳ್ಳಿ. ಅಲ್ಲದೇ ಸರಿಯಾದ ಸಮಯದಲ್ಲಿ ಆಹಾರ ಸೇವಿಸಿ, ಹಾಗೆಯೇ ದಿನಕ್ಕೆ ಕನಿಷ್ಠ ೧೫-೨೦ ನಿಮಿಷಗಳ ಕಾಲ ವ್ಯಾಯಾಮ ಮಾಡಿ.  ಕನಿಷ್ಠ ೬-೮ ಗಂಟೆ ನಿದ್ರೆ ಮಾಡಿ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತಯಾರಿ ನಡೆಸುವಾಗ ಆತ್ಮವಿಶ್ವಾಸದಿಂದ ಇರುವುದು ಬಹಳ ಮುಖ್ಯವಾಗಿರುತ್ತದೆ ಎಂದರು.
    ಎಲ್ಲಾ ಓದುವ ಬದಲು ವಿಷಯಕ್ಕೆ ತಕ್ಕ ಹಾಗೆ ಸಮಾಯಾವಕಾಶ ಕೊಡಿ. ಹೆಚ್ಚು ಹೆಚ್ಚು ಪುನಾರಾವರ್ತನೆ ಮಾಡಿಕೊಳ್ಳಿ. ಬಹಳ ಮುಖ್ಯವಾಗಿ ಪದೇ ಪದೇ ಬರುವ ಮೊಬೈಲ್ ಮೆಸೇಜ್‌ಗಳ ಸದ್ದು, ಆಗಾಗ ಬರುವ ಫೋನ್ ಕಾಲ್ ಗಳನ್ನು ನಿಮ್ಮ ಏಕಾಗ್ರತೆಯನ್ನು ಹಾಳುಮಾಡಬಹುದು. ಹೀಗಾಗಿ ಓದುವ ಸಮಯದಲ್ಲಿ ಮೊಬೈಲ್ ಬಳಕೆಯಿಂದ ದೂರವಿದ್ದರೆ ಒಳಿತು. ಇಂಟರ್ ನೆಟ್ ಸಹಾಯಬೇಕಾದಾಗ ಮಾತ್ರ ಮೊಬೈಲ್ ಬಳಸಿ. ಹಿಂದಿನ ವರ್ಷಗಳ ಹಳೆಯ ಪ್ರಶ್ನೆಗಳನ್ನು ತಪ್ಪದೇ ಓದುವುದನ್ನು ರೂಡಿಮಾಡಿಕೊಳ್ಳಿ. ಇದರಿಂದ ಪರೀಕ್ಷೆಗಳಲ್ಲಿ ಎಂತಹ ಪ್ರಶ್ನೆಗಳು ಬರಬಹುದು ಎನ್ನುವ ಸಂಪೂರ್ಣ ಕಲ್ಪನೆ ನಿಮ್ಮ ಅರಿವಿಗೆ ಬರುತ್ತದೆ. ಯಾವಾಗಲೂ ಸಕಾರಾತ್ಮಕ ಮನಸ್ಥಿತಿಯಲ್ಲಿರಿ. ನಿಮ್ಮ ಮೇಲೆ ನಿಮಗೆ ಮೊದಲು ನಂಬಿಕೆ ಇರಲಿ. ಪ್ರಶ್ನೆಗಳಿಗೆ ಉತ್ತರಿಸಲು ಅತಿಯಾಗಿ ಯೋಚಿಸದಿರಲು ಪ್ರಯತ್ನಿಸಿ. ನೀವು ಓದಿರುವ ಪಾಠದಲ್ಲಿ ಕೆಲವೊಂದು ಪ್ರಮುಖ ಅಂಶಗಳನ್ನು ಪಟ್ಟಿ ಮಾಡಿಕೊಳ್ಳಿ. ಒಂದು ಅಧ್ಯಾಯ ಮುಗಿದೆ ಮೇಲೆ ಒಂದು ಅಣುಕು ಪರೀಕ್ಷೆಯನ್ನು ಬರೆಯಿರಿ. ಹೀಗೆ ಅಣುಕು ಪರೀಕ್ಷೆಯನ್ನು ಬರೆಯುವುದರಿಂದ ನಿಮಗೆ ಪರೀಕ್ಷೆ ಮೇಲಿನ ಭಯ ಹೋಗುತ್ತದೆ. ಈ ರೀತಿಯಾಗಿ ನೀವು ಮಾಡಿದರೆ ಖಂಡಿತವಾಗಿ  ಯು.ಪಿ.ಎಸ್.ಸಿ. ಅಂತಹ ಪರೀಕ್ಷೆಗಳನ್ನು ಅತ್ಯಂತ ಸುಲಭವಾಗಿ ಎದುರಿಸಿ ಉತ್ತೀರ್ಣರಾಗಬಹುದಾಗಿದೆ ಎಂದರು.  
    ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಹೊಸಳ್ಳೆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹ ಪ್ರಾಧ್ಯಪಕಾರಾದ ಐಕ್ಯೂಎಸಿ ಕೋ-ಆರ್ಡಿನೇಟರ್ ಮಹಮದ್ ನಜ಼ಿಬ್,  ಅಕ್ರಮ್ ಪಾಷ, ಪ್ಲೇಸ್ ಮೆಂಟ್ ಕೋಅರ್ಡಿನೇಟರ್ ವಿ.ಬಿ ಚಿರಂಜೀವಿ, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಟಿ.ಜಿ ಉಮಾ, ಬಿ. ಗುರುಪ್ರಸಾದ್ ಹಾಗು  ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿವರ್ಗದವರು ಹಾಗು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅಂಬೇಡ್ಕರ್‌ ಭವನ ನಿರ್ಲಕ್ಷ್ಯ, ಶಾಲಾ-ಕಾಲೇಜುಗಳ ಅವ್ಯವಸ್ಥೆಗಳ ವಿರುದ್ದ ಆ.೧೪ರಂದು ಪ್ರತಿಭಟನಾ ಧರಣಿ

ಭದ್ರಾವತಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ  ಅಧ್ಯಕ್ಷ ಬಿ.ಎನ್‌ ರಾಜು ಮಾತನಾಡಿದರು.
    ಭದ್ರಾವತಿ, ಆ. ೧೦: ನಗರದ ಡಾ. ಬಿ.ಆರ್‌ ಅಂಬೇಡ್ಕರ್‌ ಭವನ ನಿರ್ಲಕ್ಷ್ಯ ಹಾಗು ಸರ್ಕಾರಿ ಶಾಲಾ-ಕಾಲೇಜುಗಳ ಅವ್ಯವಸ್ಥೆಗಳ ವಿರುದ್ಧ ಆ.೧೪ರಂದು ಪ್ರತಿಭಟನಾ ಧರಣಿ ಸತ್ಯಾಗ್ರಹ ಹಾಗು  ಆ.೧೫ರಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಹಾಗು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ  ಅಧ್ಯಕ್ಷ ಬಿ.ಎನ್‌ ರಾಜು ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ೧೯೪೭ರಲ್ಲಿ ಭಾರತ ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಬಂತು ಎಂಬುದು ನಿಜವಾಗಿದ್ದರು. ಸ್ವಾತಂತ್ರ್ಯ ಎಂದರೇ ಪ್ರತಿ ವ್ಯಕ್ತಿಗೂ ಸಮಾನತೆ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಸಮಭಾಗ ಇದ್ದಾಗ ಮಾತ್ರ ಬಹಳ ಮುಖ್ಯವಾಗಿ ಶಿಕ್ಷಣ, ಸೂರು, ಆರೋಗ್ಯ ಮತ್ತು ರಕ್ಷಣೆಯು ಮೂಲಭೂತ ಹಕ್ಕುಗಳಾಗಿದ್ದು, ಸ್ವಾತಂತ್ರ್ಯ ಬಂದು ಸುಮಾರು ೭೬ ವರ್ಷಗಳಾದರೂ ತಾರತಮ್ಯದಿಂದ ಇಂದಿಗೂ ಸಹ ಉಚಿತ ಶಿಕ್ಷಣ, ಆರೋಗ್ಯ, ಜೀವಿಸಲು ಸೂರು ಕಲ್ಪಿಸದಾ ಅನೇಕ ಸರ್ಕಾರಗಳು ಪ್ರಜಾಪ್ರಭುತ್ವದಲ್ಲಿ ಸ್ವಾತಂತ್ರ್ಯ ಎಂಬ ಅರ್ಥವನ್ನು ಅನರ್ಥಗೊಳಿಸಿರುವುದು ಖಂಡನೀಯವಾಗಿದೆ ಎಂದರು.
    ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶಿಕ್ಷಣವನ್ನು ಗುಣಮಟ್ಟದಿಂದ ನೀಡದೇ ಪ್ರತಿ ವಿಷಯವಾರು ಶಿಕ್ಷಕರಿಲ್ಲದೆ ಕಟ್ಟಡಗಳ ಶಿಥಿಲಾವಸ್ಥೆಗಳನ್ನು ಸರಿಪಡಿಸದೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಮತ್ತು ಪ್ರೌಷ್ಠಿಕಾಂಶಕ್ಕಾಗಿ ಬಡ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟ ಪೌಷ್ಠಿಕಾಂಶವಿಲ್ಲದೆ ಅರ್ಧಂಬರ್ಧ ನೀಡುತ್ತಾ ಬಡ ಮಕ್ಕಳಿಗೆ ಮೋಸ ಮಾಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದರು.
    ದೇಶದ ಕೆಲವು ರಾಜ್ಯಗಳಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದಿಂದ ಮಾನವ ಹಕ್ಕುಗಳ ರಕ್ಷಣೆ ಮಾಡುತ್ತಿದ್ದು, ರಾಜದಲ್ಲಿ ಇದುವರೆಗೂ ಈ ಬಗ್ಗೆ ಸರಿಯಾದ ಅಧ್ಯಯನ ನಡೆದಿರುವುದಿಲ್ಲ. ಸರ್ಕಾರಿ ಶಿಕ್ಷಕರು ತಮ್ಮ ವೇತನಕ್ಕಾಗಿ ಶಾಲೆಗಳನ್ನು ಉಳಿಸಿಕೊಂಡಿರುವುದು ಶೋಚನೀಯ ಸಂಗತಿಯಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷಕರು ತಮ್ಮ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಕೊಡಿಸುವುದಾದರೆ ಇವರ ಸೇವೆ ಸರ್ಕಾರಿ ಶಾಲೆಗೆ ಅಗತ್ಯವಿದೆಯೇ  ಎಂದು ಪ್ರಶ್ನಿಸಿದರು.
    ಇನ್ನೂ ದುರಂತ ಎಂದರೆ ಸರ್ಕಾರಿ ನೌಕರರ ಸಂಘದಲ್ಲಿ ಇರುವ ಕೆಲ ಶಿಕ್ಷಕರು ತರಗತಿಯಲ್ಲಿ ಪಾಠ ಪ್ರವಚನ ಕೈಗೊಳ್ಳದೆ ಮನಸೋ ಇಚ್ಛೆ ನಡೆದುಕೊಂಡು ಪ್ರತಿ ತಿಂಗಳು ವೇತನ ಪಡೆಯುತ್ತಿದ್ದು, ಕನಿಷ್ಠ ಕಾಳಜಿಯಿಂದ ಬಡ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡದೆ ಮೋಸ ಮಾಡುತ್ತಿರುವುದು ಯಾವುದೇ ಸರ್ಕಾರ ಜವಾಬ್ದಾರಿಯಿಂದ ಇವನ್ನು ಕೇಳದೇ ಇರುವುದು ಬಡ ಮಕ್ಕಳಿಗೆ ಮಾಡಿದ ಮೋಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ತಕ್ಷಣ ಎಲ್ಲಾ ಸರ್ಕಾರಿ ಪ್ರಾಥಮಿಕ ಪ್ರೌಢ ಶಾಲೆಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಮತ್ತು ಸಿ.ಸಿ ಟಿವಿ ಅಳವಡಿಸಿ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗುವಂತೆ ಮುಖ್ಯಮಂತ್ರಿಗಳಿಗೆ ಹಾಗು ಶಿಕ್ಷಣ ಸಚಿವರಿಗೆ ಈ ಮೂಲಕ ಆಗ್ರಹಿಸುತ್ತೇನೆ ಎಂದರು.
    ನಗರದ ಹೃದಯ ಭಾಗದಲ್ಲಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗ ೨೦೧೭ರಲ್ಲಿ ಡಾ. ಬಿ.ಆರ್‌ ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಗೊಂಡಿದ್ದು, ಇದುವರೆಗೂ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಸಲಾಗಿದೆ. ಇದನ್ನು ಸಮಿತಿ ಖಂಡಿಸುವ ಜೊತೆಗೆ ತಕ್ಷಣ ಕಾಮಗಾರಿ ಪೂರ್ಣಗೊಳಿಸುವಂತೆ  ಹಾಗು ಈ ಭವನದ ಉದ್ಘಾಟನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸುಂತೆ ಆಗ್ರಹಿಸುತ್ತೇನೆ ಎಂದರು.
    ಸಮಿತಿ ಕಾರ್ಯಾಧ್ಯಕ್ಷ ಐ.ಎಲ್‌ ಅರುಣ್‌ಕುಮಾರ್‌, ಪ್ರಧಾನ  ಕಾರ್ಯದರ್ಶಿ ಅಕ್ರಮ್‌ ಖಾನ್‌, ಬ್ರಹಲಿಂಗಯ್ಯ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Wednesday, August 9, 2023

ಕಂಬದಾಳ್‌ ಹೊಸೂರು ಗ್ರಾ.ಪಂ. ಅಧ್ಯಕ್ಷ ನಿರ್ಮಲರಾಜು, ಉಪಾಧ್ಯಕ್ಷ ಸೋಮಶೇಖರಪ್ಪ

ಭದ್ರಾವತಿ ತಾಲೂಕಿನ ಕಂಬದಾಳ್ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಿರ್ಮಲರಾಜು ಹಾಗು ಉಪಾಧ್ಯಕ್ಷರಾಗಿ ಸೋಮಶೇಖರಪ್ಪ ಅವಿರೋಧವಾಗಿ ಆಯ್ಕೆಯಾದರು.
    ಭದ್ರಾವತಿ, ಆ. ೯ : ತಾಲೂಕಿನ ಕಂಬದಾಳ್ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಿರ್ಮಲರಾಜು ಹಾಗು ಉಪಾಧ್ಯಕ್ಷರಾಗಿ ಸೋಮಶೇಖರಪ್ಪ ಅವಿರೋಧವಾಗಿ ಆಯ್ಕೆಯಾದರು.
    ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿ ಹೊಂದಿರುವ  ಅಧ್ಯಕ್ಷ ಸ್ಥಾನಕ್ಕೆ ನಿರ್ಮಲರಾಜು  ಹಾಗು ಬಿಸಿಎಂ(ಎ) ಮೀಸಲಾತಿ ಹೊಂದಿರುವ ಉಪಾಧ್ಯಕ್ಷ ಸ್ಥಾನಕ್ಕೆ  ಸೋಮಶೇಖರಪ್ಪ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಡಿಸಿಸಿ ಬ್ಯಾಂಕ್ ಪ್ರಭಾರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ಪಿಎಲ್‌ಡಿ) ಬ್ಯಾಂಕ್ ಅಧ್ಯಕ್ಷ ಎಸ್. ವಿರೂಪಾಕ್ಷಪ್ಪ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಶಾಂತಕುಮಾರ್, ಯುವ ಮುಖಂಡ ಎಚ್.ಎಂ ಪ್ರದೀಪ್, ಮಣಿ  ಸೇರಿದಂತೆ ಇನ್ನಿತರರು  ಅಭಿನಂದಿಸಿದ್ದಾರೆ.

ಭದ್ರಗಿರಿಯಲ್ಲಿ ವಿಜೃಂಭಣೆಯಿಂದ ಜರುಗಿದ ಆಡಿ ಕೃತಿಕಾ ಜಾತ್ರಾ ಮಹೋತ್ಸವ

ಭದ್ರಾವತಿ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಆಡಿ ಕೃತ್ತಿಕಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.  
    ಭದ್ರಾವತಿ, ಆ. ೯ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಆಡಿ ಕೃತ್ತಿಕಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.  
    ಶ್ರೀ ಕ್ಷೇತ್ರದಲ್ಲಿನ ಎಲ್ಲಾ ಮೂಲ ವಿಗ್ರಹಗಳಿಗೆ ಹಾಗು ಶ್ರೀ ದವತ್ತಿರು ಸ್ವಾಮೀಜಿಯವರ ಶಕ್ತಿ ಪೀಠಕ್ಕೆ ವಿಶೇಷ ಅಲಂಕಾರ ಕೈಗೊಳ್ಳುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಯಿತು.  ಬೆಳಗಿನ ಜಾವ ೪ ಗಂಟೆಗೆ ವಿಶ್ವರೂಪ ದರ್ಶನ ಮತ್ತು ಅಭಿಷೇಕ, ೫ ರಿಂದ ಉತ್ಸವ ಪೂಜೆ ಹಾಗು ಕಾವಡಿ ಹರಕೆ ಸಮರ್ಪಣೆ ನಡೆಯಿತು.


    ಭರಣಿ ಕಾವಡಿ ಉತ್ಸವ ಮಂಗಳವಾರ ಜರುಗಿದ್ದು, ಬೆಳಿಗ್ಗೆಯಿಂದಲೇ ಭಕ್ತಾಧಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದುಕೊಂಡರು.  ಚಿಕ್ಕಮಗಳೂರು ಹಾಗು ಶಿವಮೊಗ್ಗ ಜಿಲ್ಲೆಗಳಿಂದ, ರಾಜ್ಯದ ವಿವಿಧ ಭಾಗಗಳಿಂದ ಹಾಗು ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು. ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
    ವಿಶೇಷವಾಗಿ ಕಾವಡಿ ಹರಕೆ ಹೊತ್ತ ಭಕ್ತರು ಗಮನ ಸೆಳೆದರು. ಬಾಯಿ, ಬೆನ್ನಿಗೆ ಕಾವಡಿ ಚುಚ್ಚಿಕೊಂಡು ಹರಕೆ ಸಮರ್ಪಿಸುವ ಮೂಲಕ ಭಕ್ತಿ ಮೆರೆದರು.


    ಶ್ರೀ ಕ್ಷೇತ್ರದ ಶ್ರೀ ಮುರುಗೇಶ್‌ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕ್ಷೇತ್ರದ ಪ್ರಮುಖರಾದ ಎ. ಚಂದ್ರಘೋಷಣ್‌  ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರುಗಳು, ಭದ್ರಗಿರಿ ಸೇವಾ ಟ್ರಸ್ಟ್‌ ಪದಾಧಿಕಾರಿಗಳು ಹಾಗು ಸೇವಾಕರ್ತರು ಉಪಸ್ಥಿತರಿದ್ದರು.