Wednesday, August 30, 2023

ಶ್ರೀ ಕೃಷ್ಣ ವೇಷ ಪ್ರದರ್ಶನ : 200ಕ್ಕೂ ಹೆಚ್ಚು ಮಕ್ಕಳು

ಭದ್ರಾವತಿಯಲ್ಲಿ ತರುಣಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಪ್ರದರ್ಶನ ಮಂಗಳವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
    ಭದ್ರಾವತಿ : ತರುಣಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಪ್ರದರ್ಶನ ಮಂಗಳವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ರಾಜೇಶ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ತರುಣ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.
    ನಗರದ 35 ಶಾಲೆಗಳ 5 ವರ್ಷದೊಳಗಿನ ಸುಮಾರು 200ಕ್ಕೂ ಹೆಚ್ಚು ಮಕ್ಕಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಬಹುಮಾನ ಹಾಗು ಸಿಹಿ ವಿತರಿಸಲಾಯಿತು.
    ಲಯನ್ಸ್ ಕ್ಲಬ್ ಖಜಾಂಚಿ ಎನ್. ಶ್ರೀನಿವಾಸ್, ತರುಣ ಭಾರತಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ಗಿರೀಶ್, ತರುಣ ಭಾರತಿ ವಿಶ್ವಸ್ಥ ಮಂಡಳಿ ಪ್ರಮುಖರಾದ ಡಾ. ಡಾ. ಮಹಾಬಲೇಶ್ವರ, ಮಧುಕರ್ ಕಾನಿಟ್ಕರ್, ಎಸ್.ಎನ್ ಸುಭಾಷ್, ನಂದಿನಿ ಮಲ್ಲಿಕಾರ್ಜುನ, ಶಿಶುಮಂದಿರದ ಸಂಚಾಲಕಿ ಸರ್ವಮಂಗಳ, ಸುಜಾತ, ಸವಿತಾ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.

ʻಗೃಹ ಲಕ್ಷ್ಮೀʼ ಯೋಜನೆ ನೇರ ಸಂವಾದ ಯಶಸ್ವಿ

ನಗರಸಭೆಯಿಂದ ೯ ಸ್ಥಳಗಳಲ್ಲಿ ವ್ಯವಸ್ಥೆ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨,೦೦೦ ರು. ನೀಡುವ ಮಹತ್ವಾಕಾಂಕ್ಷೆ  ʻಗೃಹ ಲಕ್ಷ್ಮೀ ʼ ಯೋಜನೆಗೆ ಬುಧವಾರ ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದು, ಈ ಸಂಬಂಧ ಭದ್ರಾವತಿ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ  ಸಂವಾದ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ  ಬಿ.ಕೆ ಮೋಹನ್‌ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಆ. ೩೦ :  ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨,೦೦೦ ರು. ನೀಡುವ ಮಹತ್ವಾಕಾಂಕ್ಷೆ  ʻಗೃಹ ಲಕ್ಷ್ಮೀ ʼ ಯೋಜನೆಗೆ ಬುಧವಾರ ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದು, ಈ ಸಂಬಂಧ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ  ಸಂವಾದ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ  ಬಿ.ಕೆ ಮೋಹನ್‌ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ಒಟ್ಟು ೯ ಸ್ಥಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಕಲ್ಪಿಸಲಾಗಿತ್ತು.  ಆಯಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.
    ಕಾರ್ಯಕ್ರಮದಲ್ಲಿ ʻಗೃಹಲಕ್ಷ್ಮೀʼ ಯೋಜನೆ ಫಲಾನುಭವಿಗಳು, ಮಹಿಳಾ ಸಂಘ-ಸಂಸ್ಥೆಗಳ ಪ್ರಮುಖರು, ಕಾಂಗ್ರೆಸ್‌ ಮಹಿಳಾ ಘಟಕದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
    ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ  ಸಂವಾದ ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ನಾಗರಾಜಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್‌, ನಗರಸಭಾ ಸದಸ್ಯಾದ ಜಾರ್ಜ್‌, ಆರ್.‌ ಶ್ರೇಯಸ್‌, ಶಶಿಕಲಾ ಬಿ.ಎಸ್‌ ನಾರಾಯಣಪ್ಪ, ಅನುಪಮ ಚನ್ನೇಶ್‌, ಪೌರಾಯುಕ್ತ ಎಚ್.ಎಂ ಮನುಕುಮಾರ್‌, ಕಂದಾಯಾಧಿಕಾರಿ ರಾಜ್‌ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಎಸ್.‌ ಕುಮಾರ್‌  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಐಎಸ್‌ಎಲ್‌ ನಿವೃತ್ತ ಉದ್ಯೋಗಿ ಮಂಜುನಾಥ್‌ ಯಲ್ಲೋಜಿ ನಿಧನ

ಮಂಜುನಾಥ್‌ ಯಲ್ಲೋಜಿ
    ಭದ್ರಾವತಿ, ಆ. ೩೦: ವಿಐಎಸ್‌ಎಲ್‌ ಕಾರ್ಖಾನೆ ನಿವೃತ್ತ ಉದ್ಯೋಗಿ, ಕಬಡ್ಡಿ ಕ್ರೀಡಾ ತರಬೇತಿದಾರ ಮಂಜುನಾಥ್‌ ಯಲ್ಲೋಜಿ(೬೬) ಮಂಗಳವಾರ ರಾತ್ರಿ ನಿಧನ ಹೊಂದಿದರು.
    ಇಬ್ಬರು ಗಂಡು ಇದ್ದಾರೆ. ವಿಐಎಸ್‌ಎಲ್‌ ಅತಿಥಿ ಗೃಹದಲ್ಲಿ ಪ್ರಭಾರ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮಂಜುನಾಥ್‌ರವರು ಮೂಲತಃ ಕಬಡ್ಡಿ ಕ್ರೀಡಾಪಟು ಆಗಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಅಲ್ಲದೆ ತರಬೇತಿದಾರರಾಗಿ  ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶಕರಾಗಿದ್ದರು.
    ಇವರ ನಿಧನಕ್ಕೆ ವಿಐಎಸ್‌ಎಲ್‌ ಕಾರ್ಖಾನೆ  ಕಾರ್ಯಪಾಲಕ ನಿರ್ದೇಶಕ ಬಿ.ಎಲ್‌ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.‌ ಪ್ರವೀಣ್‌ಕುಮಾರ್‌, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್‌,  ಅಧಿಕಾರಿಗಳು, ಕಾರ್ಮಿಕರು ಹಾಗು ಗುತ್ತಿಗೆ ಕಾರ್ಮಿಕರು ಮತ್ತು ನಿವೃತ್ತ ಕಾರ್ಮಿಕರು, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

Tuesday, August 29, 2023

ಆ.೩೧ರಂದು ಬ್ರಹ್ಮಶ್ರೀ ನಾರಾಯಣಗುರುಗಳ ೧೬೯ನೇ ಜಯಂತ್ಯೋತ್ಸವ

ಆ.೩೧ರಂದು ಬ್ರಹ್ಮಶ್ರೀ ನಾರಾಯಣಗುರುಗಳ ೧೬೯ನೇ ಜಯಂತ್ಯೋತ್ಸವ ಕುರಿತು ಮಂಗಳವಾರ ಭದ್ರಾವತಿಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  
    ಭದ್ರಾವತಿ, ಆ. ೨೯ : ಶ್ರೀ ನಾರಾಯಣಗುರು ವಿಚಾರ ವೇದಿಕೆ(ಈಡಿಗ ಸಮಾಜದ ೨೬ ಪಂಗಡಗಳ ಒಕ್ಕೂಟ) ಮತ್ತು ಆರ್ಯ ಈಡಿಗ ಮಹಿಳಾ ಸಮಾಜ, ಕೇರಳ ಸಮಾಜ ಹಾಗು ಈಡಿಗ ಸಮಾಜ ಮತ್ತು ಬಿಲ್ಲವ ಸಮಾಜದ ವತಿಯಿಂದ ರಾಷ್ಟ್ರೀ ಯ ಹಬ್ಬಗಳ ಆಚರಣಾ ಸಮಿತಿ ಸಹಕಾರದೊಂದಿಗೆ ಆ.೩೧ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮಧ್ಯಾಹ್ನ ೧೨ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಎನ್. ನಟರಾಜ್‌ ಹೇಳಿದರು.
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಅವರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿವೆ. ಅವರ ೧೬೯ನೇ ಜಯಂತ್ಯೋತ್ಸವ ಅರ್ಥಪೂರ್ಣವಾಗಿ ನಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ವೇದಿಕೆ ಹೆಚ್ಚಿನ ಶ್ರಮವಹಿಸುತ್ತಿದೆ ಎಂದರು.
    ಅಂದು ಬೆಳಿಗ್ಗೆ ೧೦.೩೦ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರದೊಂದಿಗೆ ಲೋಯರ್‌ ಹುತ್ತಾದಿಂದ ತಾಲೂಕು ಪಂಚಾಯಿತಿವರೆಗೂ ಮೆರವಣಿಗೆ ನಡೆಯಲಿದ್ದು, ನಂತರ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್‌ ನಾಗರಾಜಪ್ಪ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಣ್ಣಪ್ಪ ಮಳಿಮಠ್‌ ಉಪನ್ಯಾಸ ನೀಡಲಿದ್ದಾರೆ.
    ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್‌ ಈರೆಗೊಡು, ಕೇರಳ ಸಮಾಜದ ಅಧ್ಯಕ್ಷ ಗಂಗಾಧರ್‌, ಆರ್ಯ ಈಡಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಭಾಗ್ಯಮ್ಮ ಪುಟ್ಟಸ್ವಾಮಿಗೌಡ, ವೇದಿಕೆ ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಕೋಗಲೂರು ತಿಪ್ಪೇಸ್ವಾಮಿ, ಗಂಗಾಧರ್‌ ಸೇರಿದಂತೆ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀ ಆದಿಶಕ್ತಿ ಚೌಡೇಶ್ವರಿ ದೇವಾಲಯ ಲೋಕಾರ್ಪಣೆ

ಭದ್ರಾವತಿ ಆನೆಕೊಪ್ಪ, ಎಂಪಿಎಂ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಚೌಡೇಶ್ವರಿ ದೇವಾಲಯದ ಆಲಯ ಪ್ರವೇಶ ಮತ್ತು ಸ್ಥಿರಬಿಂಬ ಪ್ರತಿಷ್ಠಾಪನೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಈ ಸಂಬಂಧ ನೂತನ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
    ಭದ್ರಾವತಿ, ಆ. 29: ನಗರದ ಆನೆಕೊಪ್ಪ, ಎಂಪಿಎಂ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಚೌಡೇಶ್ವರಿ ದೇವಾಲಯದ ಆಲಯ ಪ್ರವೇಶ ಮತ್ತು ಸ್ಥಿರಬಿಂಬ ಪ್ರತಿಷ್ಠಾಪನೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
    ಬೆಳಿಗ್ಗೆ ನಾಗಪೂಜೆ, ಆಲಯ ಪ್ರವೇಶ, ಗೋ ಪೂಜೆ, ಮಹಾಪ್ರತಿಷ್ಠೆ, ನಂತರ ಚಂಡಿಕಾ ಹೋಮ, ಮಹಾಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
    ಆನೆಕೊಪ್ಪ, ಉಜ್ಜನಿಪುರ, ಕಾಗದನಗರ, ತಿಮ್ಲಾಪುರ, ಬುಳ್ಳಾಪುರ, ಜೆಪಿಎಸ್ ಕಾಲೋನಿ, ಸುರಗಿತೋಪು, ಹುಡ್ಕೋ ಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾದರು.

ಭದ್ರಾವತಿ ವಿವಿಧೆಡೆ ಜಿಲ್ಲಾ ಯೋಜನಾ ನಿರ್ದೇಶಕರ ಭೇಟಿ : ಪರಿಶೀಲನೆ

ಶಿವಮೊಗ್ಗ ಜಿಲ್ಲಾ ನಿರ್ದೇಶಕರಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಅಧಿಕಾರಿ ಮನೋಹರ್ ಅವರು ಮಂಗಳವಾರ ಭದ್ರಾವತಿ ನಗರದ ವಿವಿಧೆಡೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
    ಭದ್ರಾವತಿ, ಡಿ. ೨೯ : ಶಿವಮೊಗ್ಗ ಜಿಲ್ಲಾ ನಿರ್ದೇಶಕರಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಅಧಿಕಾರಿ ಮನೋಹರ್ ಅವರು ಮಂಗಳವಾರ ನಗರದ ವಿವಿಧೆಡೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
    ನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಶೈವ ಸಭಾ ಭವನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ಹಾಗು ಕನಕಮಂಟಪ ಮೈದಾನದ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಪೌರಕಾರ್ಮಿಕರ ವಸತಿ ಸಮುಚ್ಚಯ ಹಾಗು ಪುಟ್ ಪಾತ್ ಪರಿಶೀಲನೆ ನಡೆಸಿದರು.

    ನಗರಸಭೆ ಕಂದಾಯಾಧಿಕಾರಿ ರಾಜ್ ಕುಮಾರ್, ಕಿರಿಯ ಇಂಜಿನಿಯರ್ ಗಳಾದ ಕೆ. ಪ್ರಸಾದ್, ಸಂತೋಷ್ ಪಾಟೀಲ್, ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿ. ನರಸಿಂಹಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, August 28, 2023

ಎಸ್‌ಎವಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಭದ್ರಾವತಿ ನ್ಯೂಟೌನ್‌ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಎಸ್‌ಎವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡು ಕೀರ್ತಿ ತಂದಿದ್ದಾರೆ.
    ಭದ್ರಾವತಿ, ಆ. ೨೮:  ನಗರದ ನ್ಯೂಟೌನ್‌ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಎಸ್‌ಎವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡು ಕೀರ್ತಿ ತಂದಿದ್ದಾರೆ.
    ನಗರದ ವಿಐಎಸ್‌ಎಲ್‌  ಕ್ರೀಡಾಂಗಣದಲ್ಲಿ ಸಂತ ಚಾರ್ಲ್ಸ್ ಪದವಿ ಪೂರ್ವ ಕಾಲೇಜಿನ ಸಹಕಾರದೊಂದಿಗೆ ಜರುಗಿದ ೨ ದಿನಗಳ  21 ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಸ್. ಧನುಶ್ ವೈಯಕ್ತಿಕವಾಗಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದು,  ಅಲ್ಲದೆ  ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಹಾಗೂ ಒಟ್ಟು ಸಮಗ್ರ ಪ್ರಶಸ್ತಿಯನ್ನು ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ.
    ಈ ಕಾಲೇಜು ಕಳೆದ ೫ ವರ್ಷಗಳಿಂದ ನಿರಂತರವಾಗಿ ಸಮಗ್ರ ಪ್ರಶಸ್ತಿ ಪಡೆಯುತ್ತಿರುವುದು ವಿಶೇಷವಾಗಿದ್ದು, ವಿಜೇತ ವಿದ್ಯಾರ್ಥಿಗಳನ್ನು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಆಶೀರ್ವದಿಸಿದ್ದಾರೆ.  
    ಕಾಲೇಜಿನ  ಆಡಳಿತಾಧಿಕಾರಿ ಬಿ. ಜಗದೀಶ್‌,   ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಲೋಹಿತ್, ಕಾಲೇಜಿನ ಉಪನ್ಯಾಸಕರು ಹಾಗು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.