Saturday, September 2, 2023

ಪಡಿತರ ಅಕ್ಕಿ ಅಕ್ರಮ ಸಾಗಾಟ : 3,550 ಕೆ.ಜಿ ಅಕ್ಕಿ ವಶ

ಪೇಪರ್ ಟೌನ್ ಪೊಲೀಸರ ಕಾರ್ಯಾಚರಣೆ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
    ಭದ್ರಾವತಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೇಪರ್ ಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
    ಗೂಡ್ಸ್ ಟೆಂಪೋ ವಾಹನದಲ್ಲಿ ವ್ಯಕ್ತಿಯೋರ್ವ ಶಿವಮೊಗ್ಗದಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೇಪರ್ ಟೌನ್ ಪೊಲೀಸ್ ಠಾಣೆ ಠಾಣಾಧಿಕಾರಿ ಕವಿತರವರ ನೇತೃತ್ವದಲ್ಲಿ ಸಿಬ್ಬಂದಿಗಳು ನಗರದ ಬೈಪಾಸ್ ರಸ್ತೆಯಲ್ಲಿ ವಾಹನ ತಡೆದು ವಶಕ್ಕೆ ಪಡೆದಿದ್ದಾರೆ.
       ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ ಒಟ್ಟು ಸುಮಾರು 3,550 ಕೆ.ಜಿ ಅಕ್ಕಿ ವಶಕ್ಕೆ ಪಡೆಯಲಾಗಿದ್ದು, ಅಕ್ಕಿಯನ್ನು ಕಡೂರಿನಲ್ಲಿ ಪಾಲಿಸ್ ಮಾಡಿಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಶದಲ್ಲಿರುವ ವ್ಯಕ್ತಿ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
    ಆಹಾರ ಇಲಾಖೆ ಅಧಿಕಾರಿಗಳಿಗೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಪೊಲೀಸರು ಹಸ್ತಾಂತರಿಸಿದ್ದಾರೆ. ಠಾಣಾಧಿಕಾರಿ ಕವಿತ, ಅಹಾರ ಇಲಾಖೆ ನಿರೀಕ್ಷಕ ರಾಜು, ಸಹಾಯಕ ನಿರೀಕ್ಷಕ ಅಂಕಯ್ಯ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಗೋದಾಮು ವ್ಯವಸ್ಥಾಪಕ ಈಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


    ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಎಸ್‌ಎಸ್‌ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಹಾಗು ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವೃತ್ತಿಪರ ವಿಷಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ.
    ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ದಾಖಲೆಗಳ ನಕಲು ಪ್ರತಿಗಳೊಂದಿಗೆ ಸೆ.30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿಗಳು ಸಂಘದ ಕಛೇರಿಯಲ್ಲಿ ದೊರೆಯು ತ್ತವೆ. ಹೆಚ್ಚಿನ ಮಾಹಿತಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಮೊ: 9110457125 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Friday, September 1, 2023

ಮಾನವೀಯತೆ ಮೆರೆದ ಆಟೋ ಚಾಲಕರು, ಪೊಲೀಸರು

ಸಂಜೀವಿನಿ ವೃದ್ಧಾಶ್ರಮ ಸೇರಿದ ಮಹಿಳೆ

ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ರೈಲ್ವೆ ಅಂಡರ್ ಬ್ರಿಡ್ಜ್ ಸಮೀಪದ ಆಟೋನಿಲ್ದಾಣದಲ್ಲಿ ಕಳೆದ ಸುಮಾರು 6 ತಿಂಗಳಿಂದ ಆಶ್ರಯ ಪಡೆದಿದ್ದ ಅಪರಿಚಿತ ಮಹಿಳೆಯೊಬ್ಬರನ್ನು ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನಿ ವೃದ್ಧಾಶ್ರಮಕ್ಕೆ ದಾಖಲಿಸುವ ಮೂಲಕ ಆಟೋ ಚಾಲಕರು ಹಾಗು ಪೊಲೀಸರು ಮಾನವೀಯತೆ ಮೆರದಿದ್ದಾರೆ.
    ಭದ್ರಾವತಿ: ನಗರದ ಉಂಬ್ಳೆಬೈಲು ರಸ್ತೆ ರೈಲ್ವೆ ಅಂಡರ್ ಬ್ರಿಡ್ಜ್ ಸಮೀಪದ ಆಟೋನಿಲ್ದಾಣದಲ್ಲಿ ಕಳೆದ ಸುಮಾರು 6 ತಿಂಗಳಿಂದ ಆಶ್ರಯ ಪಡೆದಿದ್ದ ಅಪರಿಚಿತ ಮಹಿಳೆಯೊಬ್ಬರಿಗೆ ಆಟೋ ಚಾಲಕರು ಹಾಗು ಪೊಲೀಸರು ನೆರವಾಗುವ ಮೂಲಕ ಮಾನವೀಯತೆ ಮೆರದಿದ್ದಾರೆ.
    ಆಟೋ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಮಹಿಳೆ ಯಾರ ಬಳಿಯೂ ಭಿಕ್ಷೆ ಬೇಡುತ್ತಿರಲಿಲ್ಲ. ಯಾರಾದರೂ ತಾವೇ ಏನಾದರೂ ನೀಡಿದರೆ ಮಾತ್ರ ಸ್ವೀಕರಿಸುತ್ತಿದ್ದರು. ಅಲ್ಲದೆ ತಮ್ಮ ವಿವರಗಳನ್ನು ಕೇಳಿದರೆ ಮೌನವಾಗಿರುತ್ತಿದ್ದರು. ಇದನ್ನು ಗಮನಿಸಿದ ಆಟೋಚಾಲಕರು ನ್ಯೂಟೌನ್ ಪೊಲೀಸರ ಗಮನಕ್ಕೆ ವಿಷಯ ತಂದಿದ್ದು, ನಂತರ ಆಟೋ ಚಾಲಕರು ಮತ್ತು ಪೊಲೀಸರು ಈ ಮಹಿಳೆಗೆ ನೆರವಾಗುವ ಮೂಲಕ ನಗರದ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನಿ ವೃದ್ಧಾಶ್ರಮಕ್ಕೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಸಂಜೀವಿನಿ ವೃದ್ಧಾಶ್ರಮದ ಸಂಸ್ಥಾಪಕಿ ಹಾಗು ಅಧ್ಯಕ್ಷೆ ಸುನೀತಾ ಮತ್ತು ಸವಿತಾ, ಸಿಬ್ಬಂದಿ ರಮೇಶ್ ಹಾಗು ಪ್ರಿಯಾರವರು ಮಹಿಳೆಯನ್ನು ಆಶ್ರಮಕ್ಕೆ ಬರಮಾಡಿಕೊಂಡಿದ್ದು, ನ್ಯೂಟೌನ್ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಮಂಜಪ್ಪ, ಮುಖಂಡರಾದ ಬಾಲಕೃಷ್ಣ ಹಾಗು ಆಟೋ ಚಾಲಕರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆ ಅಡುಗೆ ಸಹಾಯಕಿಗೆ ಜಾತಿ ನಿಂದನೆ, ಕೊಲೆ ಬೆದರಿಕೆ ಆರೋಪ

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಿ : ಪ್ರತಿಭಟನೆ

ಭದ್ರಾವತಿ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಗೊಪ್ಪೇನಹಳ್ಳಿ(ಗೊಂದಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಅಪಪ್ರಚಾರದಲ್ಲಿ ತೊಡಗಿರುವ ಶಾಲಾಭಿವೃದ್ಧಿ ಸಮಿತಿ ವಿರುದ್ಧ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಪೊಲೀಸ್‌ ಉಪಾಧೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಸೆ. ೧ : ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಗೊಪ್ಪೇನಹಳ್ಳಿ(ಗೊಂದಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಅಪಪ್ರಚಾರದಲ್ಲಿ ತೊಡಗಿರುವ ಶಾಲಾಭಿವೃದ್ಧಿ ಸಮಿತಿ ವಿರುದ್ಧ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಪೊಲೀಸ್‌ ಉಪಾಧೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಗ್ರಾಮದ ಎ.ಕೆ ಕಾಲೋನಿ ನಿವಾಸಿ, ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ರೂಪರವರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿಯಾಗಿದ್ದ ಅಡುಗೆ ಸಹಾಯಕಿ ಹುದ್ದೆಗೆ ನಿಯಮಾನುಸಾರ ಅರ್ಜಿ ಸಲ್ಲಿಸಿದ್ದು, ೨೦೦೮ರ ಅಕ್ಷರ ದಾಸೋಹ ಮಾರ್ಗ ಸೂಚಿಯನ್ವಯ, ಆಯುಕ್ತರು,  ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು  ೨೦೦೩-೦೪ರ ಸುತ್ತೋಲೆ, ಜಂಟಿ ನಿರ್ದೇಶಕರು, ಮಧ್ಯಾಹ್ನ ಉಪಹಾರ ಯೋಜನೆ, ಬೆಂಗಳೂರುರವರ ಪತ್ರ ಹಾಗು ಗ್ರಾಮ ಪಂಚಾಯಿತಿ ಕಾರ್ಯಾಲಯ, ಅರಳಿಕೊಪ್ಪ ಮತ್ತು ತಾಲೂಕು ಪಂಚಾಯಿತಿ  ಅನುಮೋದನೆಯಂತೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.


    ರೂಪ ಅವರು ಪರಿಶಿಷ್ಟ ಜಾತಿಗೆ ಸೇರಿರುವ ಹಿನ್ನಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೈಯದ್‌ ಶಫಿ ಉಲ್ಲಾ, ಸದಸ್ಯರಾದ ಅರುಣ್‌, ಅಸ್ಮಾಬಾನು, ಸಮೀನ ಬಾನು, ಎಸ್. ನಾಗರಾಜ್‌, ಜಯಮ್ಮ, ಕೆ. ನಾಗರಾಜ, ಮಂಜುಳ ಮತ್ತು ಬಾಲು ನಾಯ್ಕ ಸೇರಿದಂತೆ ಇನ್ನಿತರರು ಕರ್ತವ್ಯ ನಿರ್ವಹಿಸದಂತೆ ಬೆದರಿಕೆ ಹಾಕುತ್ತಿದ್ದು, ಅಲ್ಲದೆ ಜಾತಿ ನಿಂದನೆ ಮಾಡಿ ಎಲ್ಲೆಡೆ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆಂದು ಆರೋಪಿಸಲಾಯಿತು.
     ಈ ಸಂಬಂಧ ೩ ದಿನಗಳ ಹಿಂದೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಲಾಯಿತು. ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಲಾಯಿತು.
    ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಉಪಾಧೀಕ್ಷಕ ನಾಗರಾಜ್‌ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೂ ಪ್ರತಿಭಟನೆ ಮುಂದುವರೆಸಿ ತಕ್ಷಣ ಬಂಧಿಸಬೇಕೆಂದು ಆಗ್ರಹಿಸಲಾಯಿತು. ಈ ನಡುವೆ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಯತ್ನಿಸಿದರಾದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ.
    ಪ್ರತಿಭಟನೆಯಲ್ಲಿ ಪ್ರಮುಖರಾದ ಬಾಲಕೃಷ್ಣ, ಸುರೇಶ್‌(ಪ್ರಜಾಪ್ರತಿನಿಧಿ), ಕೃಷ್ಣಪ್ಪ, ಎಸ್.ಕೆ ಸುಧೀಂದ್ರ, ಚನ್ನಪ್ಪ, ಸಿ. ಜಯಪ್ಪ, ಜಿ. ರಾಜು, ವಿಲ್ಸನ್‌ ಬಾಬು ಸೇರಿದಂತೆ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗು ರೂಪ ಕುಟುಂಬಸ್ಥರು ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Thursday, August 31, 2023

ಚರಂಡಿ‌ ಕಾಮಗಾರಿಗೆ ಗುದ್ದಲಿಪೂಜೆ

ಭದ್ರಾವತಿ ನಗರಸಭೆ 19ನೇ ವಾರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಪಶ್ಚಿಮ)ಯಲ್ಲಿ ಆಯೋಜಿಸಲಾಗಿದ್ದ ಚರಂಡಿ ಕಾಮಗಾರಿಗೆ ನಗರಸಭೆ ಸದಸ್ಯ ಬಸವರಾಜ್ ಬಿ. ಆನೇಕೊಪ್ಪ ಗುದ್ದಲಿಪೂಜೆ ನರವೇರಿಸಿದರು.
    ಭದ್ರಾವತಿ: ನಗರಸಭೆ 19ನೇ ವಾರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಪಶ್ಚಿಮ)ಯಲ್ಲಿ ಆಯೋಜಿಸಲಾಗಿದ್ದ ಚರಂಡಿ ಕಾಮಗಾರಿಗೆ ನಗರಸಭೆ ಸದಸ್ಯ ಬಸವರಾಜ್ ಬಿ. ಆನೇಕೊಪ್ಪ ಗುದ್ದಲಿಪೂಜೆ ನರವೇರಿಸಿದರು.
    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್, ಶಾಲಾ ಅಭಿವೃದ್ಧಿ ಸಮಿತಿಯ ವೆಂಕಟೇಶ್ ಉಜ್ಜೀನಿಪುರ, ಸ್ಥಳೀಯ ಮುಖಂಡರಾದ ನಾಗೇಶ್, ಶ್ಯಾಮ್, ಭಾಸ್ಕರ್, ವೆಂಕಟಯ್ಯ, ರವಿ, ಗುತ್ತಿಗೆದಾರ ಲೋಕೇಶ್ ಸೇರಿದಂತೆ ಶಾಲೆಯ ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ : ಭವ್ಯ ಮೆರವಣಿಗೆಗೆ ಚಾಲನೆ

ಭದ್ರಾವತಿಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ (ಈಡಿಗ ಸಮಾಜದ 26 ಪಂಗಡಗಳ ಒಕ್ಕೂಟ) ಮತ್ತು ಆರ್ಯ ಈಡಿಗ ಮಹಿಳಾ ಸಮಾಜ, ಕೇರಳ ಸಮಾಜ ಹಾಗು ಈಡಿಗ ಸಮಾಜ ಮತ್ತು ಬಿಲ್ಲವ ಸಮಾಜದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಕಾರದೊಂದಿಗೆ ಗುರುವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ ಅಂಗವಾಗಿ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ: ಶ್ರೀ ನಾರಾಯಣಗುರು ವಿಚಾರ ವೇದಿಕೆ (ಈಡಿಗ ಸಮಾಜದ 26 ಪಂಗಡಗಳ ಒಕ್ಕೂಟ) ಮತ್ತು ಆರ್ಯ ಈಡಿಗ ಮಹಿಳಾ ಸಮಾಜ, ಕೇರಳ ಸಮಾಜ ಹಾಗು ಈಡಿಗ ಸಮಾಜ ಮತ್ತು ಬಿಲ್ಲವ ಸಮಾಜದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಕಾರದೊಂದಿಗೆ ಗುರುವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ ಅಂಗವಾಗಿ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು.
    ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರದೊಂದಿಗೆ ನಗರದ ಹುತ್ತಾಕಾಲೋನಿಯಿಂದ ಆರಂಭಗೊಂಡ ಮೆರವಣಿಗೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಪಂಚಾಯಿತಿ ಆವರಣ ತಲುಪಿತು.
    ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗರಾಜ್, ಶ್ರೀ ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಎನ್. ನಟರಾಜ್‌, ಕೇರಳ ಸಮಾಜದ ಅಧ್ಯಕ್ಷ ಗಂಗಾಧರ್‌, ಆರ್ಯ ಈಡಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಭಾಗ್ಯಮ್ಮ ಪುಟ್ಟಸ್ವಾಮಿಗೌಡ, ವೇದಿಕೆ ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಹಿಳೆಯರು ಆರೋಗ್ಯ ಕಾಳಜಿ ಕುರಿತು ಅರಿವು ಬೆಳೆಸಿಕೊಳ್ಳಿ : ಡಾ. ಎಂ.ವಿ ಅಶೋಕ್

ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿಗಳ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ -2ರ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ರೋಟರಿ ಕ್ಲಬ್ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂಘದ ಎನ್ ಜಿ ಓ ಸದಸ್ಯರುಗಳಿಗೆ ಎನ್‌ಆರ್ ಎಚ್ ಎಂ ಕಾರ್ಯಾಗಾರ ಯುವ ಮುಖಂಡ ಬಿ.ಎಂ ರವಿಕುಮಾರ್ ಉದ್ಘಾಟಿಸಿದರು.
    ಭದ್ರಾವತಿ, ಆ. 31: ಮಹಿಳೆಯರು ಸಾಮಾನ್ಯ ಖಾಯಿಲೆಗಳ ಕುರಿತು ಅರಿವು ಹೊಂದಬೇಕು. ಪ್ರಾಥಮಿಕ ಹಂತದಲ್ಲಿಯೇ ಎಚ್ಚರಿಕೆ ಕ್ರಮಗಳನ್ನು ಅನುಸರಿಸಿದಾಗ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.
    ಅವರು ಗುರುವಾರ ತಾಲೂಕು ಆರೋಗ್ಯಾಧಿಕಾರಿಗಳ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ -2ರ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ರೋಟರಿ ಕ್ಲಬ್ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂಘದ ಎನ್ ಜಿ ಓ ಸದಸ್ಯರುಗಳಿಗೆ ಎನ್‌ಆರ್ ಎಚ್ ಎಂ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪ್ರತಿಯೊಂದು ಸಾಮಾನ್ಯ ಖಾಯಿಲೆಯ ಬಗ್ಗೆ ತಿಳಿದುಕೊಳ್ಳಬೇಕು. ಇದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಕಾರ್ಯಾಗಾರದ ಸದುಪಯೋಗಪಡೆದುಕೊಳ್ಳಬೇಕೆಂದರು.
    ಸ್ತ್ರೀ ರೋಗ, ಪ್ರಸೂತಿ ಹಾಗು ಬಂಜೇತನ ತಜ್ಞೆ ಡಾ. ಎಚ್.ಎಲ್ ವರ್ಷ ಮಹಿಳೆಯರ ಆರೋಗ್ಯ ಕುರಿತು ಮಾಹಿತಿ ನೀಡಿದರು. ಯುವ ಮುಖಂಡ ಬಿ.ಎಂ ರವಿಕುಮಾರ್ ಕಾರ್ಯಾಗಾರ ಉದ್ಘಾಟಿಸಿದರು. ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.
    ಎನ್ ಸಿ ಡಿ ಆಪ್ತಸಮಾಲೋಚಕಿ ಶ್ರೀದೇವಿ ಪ್ರಾರ್ಥಿಸಿದರು. ಜ್ಞಾನ ಸಮನ್ವಯಾಧಿಕಾರಿ ಸೌಮ್ಯ ಸ್ವಾಗತಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಬಾಯಿ ನಿರೂಪಿಸಿ, ಯೋಜನೆಯ ಹೊಸಮನೆ ಮೇಲ್ವಿಚಾರಕಿ ಪುಷ್ಪಲತಾ ವಂದಿಸಿದರು.