ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಿ : ಪ್ರತಿಭಟನೆ
![](https://blogger.googleusercontent.com/img/a/AVvXsEiFtSU5i5gY3d3L_rf_5Bfu-SLceWhYU-gf_v9w4YJdpNCE9YxNf8pNptybVYnYG7LYfVjFcoY1TVre2QTNwFokqZFp0VPrDB_t8QhTU360aGxTn0mCAX1FUDnj-gOK6RC05_xCVXAwNpE6BQU94U_dDeDPwvahYvpeE_Zb0VPvRAAgstSrxTylA1Cg78hg=w400-h253-rw)
ಭದ್ರಾವತಿ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಗೊಪ್ಪೇನಹಳ್ಳಿ(ಗೊಂದಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಅಪಪ್ರಚಾರದಲ್ಲಿ ತೊಡಗಿರುವ ಶಾಲಾಭಿವೃದ್ಧಿ ಸಮಿತಿ ವಿರುದ್ಧ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಸೆ. ೧ : ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಗೊಪ್ಪೇನಹಳ್ಳಿ(ಗೊಂದಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಅಪಪ್ರಚಾರದಲ್ಲಿ ತೊಡಗಿರುವ ಶಾಲಾಭಿವೃದ್ಧಿ ಸಮಿತಿ ವಿರುದ್ಧ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಗ್ರಾಮದ ಎ.ಕೆ ಕಾಲೋನಿ ನಿವಾಸಿ, ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ರೂಪರವರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿಯಾಗಿದ್ದ ಅಡುಗೆ ಸಹಾಯಕಿ ಹುದ್ದೆಗೆ ನಿಯಮಾನುಸಾರ ಅರ್ಜಿ ಸಲ್ಲಿಸಿದ್ದು, ೨೦೦೮ರ ಅಕ್ಷರ ದಾಸೋಹ ಮಾರ್ಗ ಸೂಚಿಯನ್ವಯ, ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ೨೦೦೩-೦೪ರ ಸುತ್ತೋಲೆ, ಜಂಟಿ ನಿರ್ದೇಶಕರು, ಮಧ್ಯಾಹ್ನ ಉಪಹಾರ ಯೋಜನೆ, ಬೆಂಗಳೂರುರವರ ಪತ್ರ ಹಾಗು ಗ್ರಾಮ ಪಂಚಾಯಿತಿ ಕಾರ್ಯಾಲಯ, ಅರಳಿಕೊಪ್ಪ ಮತ್ತು ತಾಲೂಕು ಪಂಚಾಯಿತಿ ಅನುಮೋದನೆಯಂತೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರೂಪ ಅವರು ಪರಿಶಿಷ್ಟ ಜಾತಿಗೆ ಸೇರಿರುವ ಹಿನ್ನಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೈಯದ್ ಶಫಿ ಉಲ್ಲಾ, ಸದಸ್ಯರಾದ ಅರುಣ್, ಅಸ್ಮಾಬಾನು, ಸಮೀನ ಬಾನು, ಎಸ್. ನಾಗರಾಜ್, ಜಯಮ್ಮ, ಕೆ. ನಾಗರಾಜ, ಮಂಜುಳ ಮತ್ತು ಬಾಲು ನಾಯ್ಕ ಸೇರಿದಂತೆ ಇನ್ನಿತರರು ಕರ್ತವ್ಯ ನಿರ್ವಹಿಸದಂತೆ ಬೆದರಿಕೆ ಹಾಕುತ್ತಿದ್ದು, ಅಲ್ಲದೆ ಜಾತಿ ನಿಂದನೆ ಮಾಡಿ ಎಲ್ಲೆಡೆ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆಂದು ಆರೋಪಿಸಲಾಯಿತು.
ಈ ಸಂಬಂಧ ೩ ದಿನಗಳ ಹಿಂದೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಲಾಯಿತು. ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಲಾಯಿತು.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಉಪಾಧೀಕ್ಷಕ ನಾಗರಾಜ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೂ ಪ್ರತಿಭಟನೆ ಮುಂದುವರೆಸಿ ತಕ್ಷಣ ಬಂಧಿಸಬೇಕೆಂದು ಆಗ್ರಹಿಸಲಾಯಿತು. ಈ ನಡುವೆ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಯತ್ನಿಸಿದರಾದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ.
ಪ್ರತಿಭಟನೆಯಲ್ಲಿ ಪ್ರಮುಖರಾದ ಬಾಲಕೃಷ್ಣ, ಸುರೇಶ್(ಪ್ರಜಾಪ್ರತಿನಿಧಿ), ಕೃಷ್ಣಪ್ಪ, ಎಸ್.ಕೆ ಸುಧೀಂದ್ರ, ಚನ್ನಪ್ಪ, ಸಿ. ಜಯಪ್ಪ, ಜಿ. ರಾಜು, ವಿಲ್ಸನ್ ಬಾಬು ಸೇರಿದಂತೆ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗು ರೂಪ ಕುಟುಂಬಸ್ಥರು ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.