Sunday, September 3, 2023

ವಿಜೃಂಭಣೆಯಿಂದ ಜರುಗಿದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವ

ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಯರ ಆರಾಧನಾ ಮಹೋತ್ಸವ ಅಂಗವಾಗಿ ಶನಿವಾರ ಗುರು ಸಾರ್ವಭೌಮರ ರಥೋತ್ಸವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊಂಡು ಮಠದವರೆಗೂ ನಡೆಯಿತು.
    ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ 3 ದಿನಗಳ ಕಾಲ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 352ನೇ ಮಹೋತ್ಸವ ಮತ್ತು ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಭಕ್ತರ ಮನೆಗಳಲ್ಲಿ 2 ದಿನಗಳ ಕಾಲ ಹಾಗು ಕೊನೆಯ ದಿನ ಮಠದಲ್ಲಿ ಗುರು ಸಾರ್ವಭೌಮರ ಪಾದಪೂಜೆ ನೆರವೇರಿತು. ಪ್ರತಿ ದಿನ ಬೆಳಿಗ್ಗೆ ೬ ಗಂಟೆಗೆ ಸುಪ್ರಭಾತ, ೭ಕ್ಕೆ ಪಂಚಾಮೃತ ಅಭಿಷೇಕ ಹಾಗು ಮಧ್ಯಾಹ್ನ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗಿತ್ತು.
    ಆರಾಧನಾ ಮಹೋತ್ಸವದ ಕೊನೆಯ ದಿನ ಶನಿವಾರ ಗುರು ಸಾರ್ವಭೌಮರ ರಥೋತ್ಸವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊಂಡು ಮಠದವರೆಗೂ ನಡೆಯಿತು. ಗುರು ಸಾರ್ವಭೌಮರ ಬೃಂದಾವನಕ್ಕೆ ಫಲಪುಷ್ಪಗಳಿಂದ ವಿಶೇಷವಾಗಿ ಆಲಂಕಾರ ಕೈಗೊಳ್ಳಲಾಗಿತ್ತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
    ಪ್ರಮುಖರಾದ ಗೋಪಾಲಕೃಷ್ಣ ಆಚಾರ್, ಶ್ರೀನಿವಾಸ ಆಚಾರ್, ಮಾಧುರಾವ್, ಶ್ರೀ ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್ ಹಾಗೂ ಖಜಾಂಚಿ ನಿರಂಜನ ಆಚಾರ್, ಶುಭ ಗುರುರಾಜ್, ಸುಪ್ರಿತಾ ತಂತ್ರಿ, ವಂದನ ಲಕ್ಷ್ಮಿ, ರವೀಂದ್ರ, ಶ್ರೀನಿವಾಸ್, ಪ್ರಮೋದ್ ಕುಮಾರ್, ಪವನ್ ಕುಮಾರ್ ಉಡುಪ, ಜಯತೀರ್ಥ, ಸುಧೀಂದ್ರ, ಬಾಳೆ ಎಲೆ ಗೋಪಾಲಕೃಷ್ಣ ಹಾಗು ವಿವಿಧ ಭಜರ ಮಂಡಳಿಗಳ ಪ್ರಮುಖರು, ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.

ಗಾಣಿಗ ಸಮಾಜದ ಬೆಳವಣಿಗೆಗೆ ಸಂಘಟಿತರಾಗಿ : ಬಿ.ಕೆ.ಮೋಹನ್

ಭದ್ರಾವತಿಯಲ್ಲಿ ತಾಲೂಕು ಗಾಣಿಗರ ಸಂಘದ ವತಿಯಿಂದ ಹೊಸ ಬುಳ್ಳಾಪುರದಲ್ಲಿನ ಗಾಣಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಎಸ್. ಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ: ಪೂಜೆಯ ವೇಳೆ ದೀಪ ಬೆಳಗುವಲ್ಲಿ ಗಾಣಿಗ ಸಮಾಜದ ಕೊಡುಗೆ ಅಪಾರವಾಗಿದ್ದು, ಈ ಸಮಾಜ ಎಲ್ಲಾ ರೀತಿಯಿಂದಲೂ ಶಕ್ತಿಯುತವಾಗಿ ಬೆಳೆಯಬೇಕಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಹೇಳಿದರು.
ತಾಲೂಕು ಗಾಣಿಗರ ಸಂಘದ ವತಿಯಿಂದ ಹೊಸ ಬುಳ್ಳಾಪುರದಲ್ಲಿನ ಗಾಣಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಗಾಣಿಗ ಸಮಾಜದ ಕಸುಬು ಪವಿತ್ರವಾದದ್ದು. ಈ ಸಮಾಜದಲ್ಲಿ ಶ್ರೀಮಂತರಿಲ್ಲದಿದ್ದರೂ, ಜನರ ನಡುವೆ ಪ್ರೀತಿ-ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿಯೂ ಈ ಸಮಾಜ ಶಕ್ತಿಯುತವಾಗಬೇಕಿದೆ ಎಂದರು.
    ರಾಜಕೀಯ ಬೇರೆ, ಸಮಾಜದ ಕಾರ್ಯಕ್ರಮ ಬೇರೆ. ಸಮಾಜ ಬಾಂಧವರು ಸಮಾಜದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜವನ್ನು ಬಲಪಡಿಸಬೇಕೆಂದರು.
    ಶ್ರೀ ಅನಂತಾನಂದ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗಾಣಿಗ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನಯ್ ಕುಮಾರ್, ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ವರದರಾಜ್, ಉಪಾಧ್ಯಕ್ಷರಾದ ರಾಮಶೆಟ್ಟರು, ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಟಿ. ವೆಂಕಟೇಶ್, ಸಹ ಕಾರ್ಯದರ್ಶಿ ಕೆ. ಶಾಂತಕುಮಾರ್, ಖಜಾಂಚಿ ಚಂದ್ರು, ತ್ಯಾಗರಾಜ್, ಕಾರ್ಯಾಧ್ಯಕ್ಷರಾದ ಆರ್. ಬಸವರಾಜ್, ಶಿವಕುಮಾರ್, ಮೋಹನ್ ಕುಮಾರ್, ರಾಜು, ಕಂಚಯ್ಯ, ಸಂಘಟನಾ ಕಾರ್ಯದರ್ಶಿ ವರದರಾಜು, ಯೋಗೇಶ್ ಕೆಂಚಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ದ್ವಿಚಕ್ರ ವಾಹನ ಕಳುವು : ದೂರು ದಾಖಲು

    ಭದ್ರಾವತಿ: ನಗರದ ಬಿ.ಎಎಚ್ ರಸ್ತೆ ಮೀನುಗಾರರ ಬೀದಿ ಬಳಿ ಅಂಗಡಿಯೊಂದರ ಸಮೀಪ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳುವಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ತಡವಾಗಿ ದೂರು ದಾಖಲಾಗಿದೆ.
    ಬಸವರಾಜ್‌ ಎಂಬುವರು ಆ.15ರಂದು ಮೀನುಗಾರರ ಬೀದಿ ಬಳಿ ಇರುವ ಮೆಡ್ ಪ್ಲಸ್ ಅಂಗಡಿ ಹತ್ತಿರ ಸಂಜೆ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿ ಹೊಗಿದ್ದು, ಪುನಃ ಹಿಂದಿರುಗಿ ಬಂದು ನೋಡಿದಾಗ ವಾಹನ ಕಳುವಾಗಿರುವುದು ಕಂಡು ಬಂದಿದೆ.
    ಈ ಸಂಬಂಧ ಸೆ.1ರಂದು ತಡವಾಗಿ ನ್ಯೂಟೌನ್ ಪೊಲೀಸ್ ಠಾಣೆಗೆ ಬಸವರಾಜ್ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Saturday, September 2, 2023

ಭದ್ರಾ ಜಲಾಶಯದಲ್ಲಿ ನೀರಿನ ಕೊರತೆ : ತಿಂಗಳಿಗೆ 15 ದಿನ ಮಾತ್ರ ನೀರು ಹರಿಸಿ

ನೀರಾವತಿ ತಜ್ಞರು, ರೈತರ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಿ : ಕೆ.ಟಿ ಗಂಗಾಧರ್

ಕಳೆದ 2 ದಿನಗಳಿಂದ ರೈತರು ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ರೈತ ಮುಖಂಡ ಕೆ.ಟಿ ಗಂಗಾಧರ್ ಮಾತನಾಡಿದರು.
    ಭದ್ರಾವತಿ : ಮಳೆ ಕೊರತೆಯಿಂದಾಗಿ ಈ ಬಾರಿ ಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಈ ಹಿನ್ನಲೆಯಲ್ಲಿ ನಾಲೆಗಳಿಗೆ 100 ದಿನಗಳವರೆಗೆ ನೀರು ಹರಿಸುವುದು ಸರಿಯಲ್ಲ. ಜಲಾಶಯದಲ್ಲಿ ನೀರು ಉಳಿಸಿಕೊಳ್ಳುವ ಮೂಲಕ ರೈತರು ಸೇರಿದಂತೆ ಎಲ್ಲರ ಹಿತ ಕಾಪಾಡಬೇಕೆಂದು ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹಿಸಿದರು.
    ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದರೂ ಸಹ ನಾಲೆಗಳಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕಳೆದ 2 ದಿನಗಳಿಂದ ರೈತರು ಬಿ.ಆರ್ ಪ್ರಾಜೆಕ್ಟ್ ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಕಚೇರಿ ಮುಂಭಾಗ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಳೆ ಕೊರತೆಯಿಂದ ಪ್ರಸ್ತುತ ಜಲಾಶಯದಲ್ಲಿ 40 ಟಿಎಂಸಿ ಮಾತ್ರ ನೀರಿದ್ದು, ನಿರಂತರವಾಗಿ.100 ದಿನ ನೀರು ಬಿಟ್ಟಲ್ಲಿ ಜಲಾಶಯ ಸಂಪೂರ್ಣವಾಗಿ ಖಾಲಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ನಿರಂತರವಾಗಿ 100 ದಿನ ನೀರು ಹರಿಸುವ ಬದಲು ತಿಂಗಳಿಗೆ 15 ದಿನ ಮಾತ್ರ ನೀರು ಹರಿಸಬೇಕು. ಈ ಸಂಬಂಧ ನೀರಾವರಿ ತಜ್ಞರು, ರೈತರ ಜೊತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಭದ್ರಾವತಿ, ತರೀಕೆರೆ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧೆಡೆಗಳಿಂದ ರೈತರು ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಹೋರಾಟ ಮುಂದುವರೆಯುತ್ತಿದ್ದು, ಇನ್ನೂ ಹೆಚ್ಚಿನ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಎಂಪಿಎಂ ಕಾರ್ಖಾನೆ ಪುನಃ ಆರಂಭಗೊಳ್ಳುವ ನಿರೀಕ್ಷೆ

ಸೆ.6ರಂದು ಬೆಳಿಗ್ಗೆ 11.30ಕ್ಕೆ ಸ್ಥಿತಿಗತಿ ಕುರಿತು ಚರ್ಚಿಸಲು ಸಚಿವರ ಅಧ್ಯಕ್ಷತೆಯಲ್ಲಿ ಸಭೆ

ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ
    ಭದ್ರಾವತಿ: ಕಳೆದ ಸುಮಾರು 8 ವರ್ಷಗಳಿಂದ ಸ್ಥಗಿತಗೊಂಡಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಪುನಃ ಆರಂಭಗೊಳ್ಳುವ ನಿರೀಕ್ಷೆ ಇದೀಗ ಗರಿಕೆದರಿದ್ದು, ಸಿದ್ದರಾಮಯ್ಯ ನೇತೃತ್ವದ ಈಗಿನ ಸರ್ಕಾರ ಕಾರ್ಖಾನೆ ಆರಂಭಿಸಲು ಆಸಕ್ತಿ ತೋರಿಸುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಸೆ.6ರಂದು ಬೆಳಿಗ್ಗೆ 11.30ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿಗತಿ ಕುರಿತಂತೆ ಚರ್ಚಿಸಲು ಐ.ಕೆ.ಎಫ್ ಸಭಾಂಗಣ, ಖನಿಜ ಭವನ, ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ.
    ಸುಮಾರು 8 ದಶಕಗಳ ಇತಿಹಾಸ ಹೊಂದಿರುವ ಕಾರ್ಖಾನೆಯಲ್ಲಿ 2015ರಿಂದ ಯಂತ್ರಗಳು ಸ್ಥಗಿತಗೊಂಡಿದ್ದು, ಇಂದಿಗೂ ಚಾಲನೆಗೊಂಡಿಲ್ಲ. ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ 2017ರಲ್ಲಿ ವಿಶೇಷ ಪ್ಯಾಕೇಜ್ ರೂಪಿಸಿ ಸ್ವಯಂ ನಿವೃತ್ತಿ ನೀಡಿ ಹೊರ ಹಾಕಲಾಗಿದೆ. ಈ ನಡುವೆ ಸ್ವಯಂ ನಿವೃತ್ತಿ ಪಡೆಯದೆ ಇರುವ ಕಾರ್ಮಿಕರನ್ನು ಸರ್ಕಾರದ ಬೇರೆ ಬೇರೆ ಇಲಾಖೆಗಳಿಗೆ ನಿಯೋಜನೆ ಮೇರೆಗೆ ನೇಮಕಗೊಳಿಸಿ ಕೈತೊಳೆದುಕೊಳ್ಳಲಾಗಿದೆ. ಕಾರ್ಖಾನೆಯ ನಷ್ಟ ನಿರೀಕ್ಷಿಸಲು ಸಾಧ್ಯವಾಗದಿರುವಷ್ಟರಮಟ್ಟಿಗೆ ಏರಿಕೆಯಾಗಿದ್ದು, ಕಾರ್ಮಿಕ ಇಲಾಖೆ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಆದೇಶ ಸಹ ಹೊರಡಿಸಿದೆ. ಈ ನಡುವೆ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿಕೊಂಡು ಅಭಿವೃದ್ಧಿಪಡಿಸುವುದಾಗಿ ಘೋಷಿಸಿದ್ದರು. ಅಲ್ಲದೆ ಈ ಹಿಂದೆ ಕಾರ್ಖಾನೆಗೆ ಗುತ್ತಿಗೆ ಪಡೆದಿದ್ದ ಅರಣ್ಯ ಭೂಮಿಯನ್ನು ಕಾರ್ಖಾನೆಯೇ ಉಳಿಸಿಕೊಳ್ಳುವಂತೆ ಕ್ರಮ ಕೈಗೊಂಡಿದ್ದರು. ಆದರೆ ನಿರೀಕ್ಷೆಯಂತೆ ಕಾರ್ಖಾನೆ ಅಭಿವೃದ್ಧಿಯಾಗಲಿಲ್ಲ.
    ಈ ಬಾರಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ನಗರದ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಲಾಗಿತ್ತು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಎರಡು ಕಾರ್ಖಾನೆಗಳ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಘೋಷಿಸಿದ್ದರು.
    ಇದೀಗ ಕಾರ್ಖಾನೆ ಪುನಃ ಆರಂಭಗೊಳ್ಳುವ ನಿರೀಕ್ಷೆ ಗರಿಕೆದರಿದ್ದು, ಮುಂದಿನ ಬೆಳವಣಿಗೆಗಳ ಕುರಿತು ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಒಂದು ವೇಳೆ ಕಾರ್ಖಾನೆ ಪುನಃ ಆರಂಭಗೊಂಡಲ್ಲಿ, ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸುವ ಜೊತೆ ರೈತರು ಸಹ ನೆಮ್ಮದಿಯ ಬದುಕು ಕಂಡುಕೊಳ್ಳಲು ಸಾಧ್ಯವಾಗಲಿದೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ : 3,550 ಕೆ.ಜಿ ಅಕ್ಕಿ ವಶ

ಪೇಪರ್ ಟೌನ್ ಪೊಲೀಸರ ಕಾರ್ಯಾಚರಣೆ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
    ಭದ್ರಾವತಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೇಪರ್ ಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
    ಗೂಡ್ಸ್ ಟೆಂಪೋ ವಾಹನದಲ್ಲಿ ವ್ಯಕ್ತಿಯೋರ್ವ ಶಿವಮೊಗ್ಗದಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೇಪರ್ ಟೌನ್ ಪೊಲೀಸ್ ಠಾಣೆ ಠಾಣಾಧಿಕಾರಿ ಕವಿತರವರ ನೇತೃತ್ವದಲ್ಲಿ ಸಿಬ್ಬಂದಿಗಳು ನಗರದ ಬೈಪಾಸ್ ರಸ್ತೆಯಲ್ಲಿ ವಾಹನ ತಡೆದು ವಶಕ್ಕೆ ಪಡೆದಿದ್ದಾರೆ.
       ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ ಒಟ್ಟು ಸುಮಾರು 3,550 ಕೆ.ಜಿ ಅಕ್ಕಿ ವಶಕ್ಕೆ ಪಡೆಯಲಾಗಿದ್ದು, ಅಕ್ಕಿಯನ್ನು ಕಡೂರಿನಲ್ಲಿ ಪಾಲಿಸ್ ಮಾಡಿಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಶದಲ್ಲಿರುವ ವ್ಯಕ್ತಿ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
    ಆಹಾರ ಇಲಾಖೆ ಅಧಿಕಾರಿಗಳಿಗೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಪೊಲೀಸರು ಹಸ್ತಾಂತರಿಸಿದ್ದಾರೆ. ಠಾಣಾಧಿಕಾರಿ ಕವಿತ, ಅಹಾರ ಇಲಾಖೆ ನಿರೀಕ್ಷಕ ರಾಜು, ಸಹಾಯಕ ನಿರೀಕ್ಷಕ ಅಂಕಯ್ಯ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಗೋದಾಮು ವ್ಯವಸ್ಥಾಪಕ ಈಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


    ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಎಸ್‌ಎಸ್‌ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಹಾಗು ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವೃತ್ತಿಪರ ವಿಷಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ.
    ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ದಾಖಲೆಗಳ ನಕಲು ಪ್ರತಿಗಳೊಂದಿಗೆ ಸೆ.30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿಗಳು ಸಂಘದ ಕಛೇರಿಯಲ್ಲಿ ದೊರೆಯು ತ್ತವೆ. ಹೆಚ್ಚಿನ ಮಾಹಿತಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಮೊ: 9110457125 ಸಂಖ್ಯೆಗೆ ಕರೆ ಮಾಡಬಹುದಾಗಿದೆ.