Friday, October 13, 2023

ನಾಡಹಬ್ಬ ದಸರಾ ಉದ್ಘಾಟಿಸಲಿರುವ ಸಮಾಜ ಸೇವಕ ಪಿ. ವೆಂಕಟರಮಣ ಶೇಟ್

ಧಾರ್ಮಿಕ, ಶಿಕ್ಷಣ, ಸಾಮಾಜಿಕ ಸೇವಾಕಾರ್ಯಗಳ ಬಹುವ್ಯಕ್ತಿತ್ವ


ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಉದ್ಘಾಟಿಸಲಿರುವ ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ದಂಪತಿ.
ಭದ್ರಾವತಿ: ನಗರಸಭೆ ವತಿಯಿಂದ ಈ ಬಾರಿ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ಚಾಲನೆ ನೀಡಲಿದ್ದಾರೆ.
    ನಾಡಹಬ್ಬ ದಸರಾ ಆಚರಣೆ ಉದ್ಘಾಟನೆಗೆ ಆಗಮಿಸಲಿರುವ ಪಿ. ವೆಂಕಟರಮಣ ಶೇಟ್ ಬಹುವ್ಯಕ್ತಿತ್ವದವರಾಗಿದ್ದು, ಬಳಹ ವರ್ಷಗಳಿಂದ ಧಾರ್ಮಿಕ, ಶಿಕ್ಷಣ, ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೆರೆಮರೆಯಲ್ಲಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದಾರೆ. ಇವರನ್ನು ನಗರಸಭೆ ಗುರುತಿಸಿರುವುದು ಈ ಬಾರಿ ವಿಶೇಷವಾಗಿದೆ.



    ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ಕುರಿತು ವೆಂಕಟರಮಣ ಶೇಟ್ ಪತ್ರಿಕೆಯೊಂದಿಗೆ ಸಂಭ್ರಮ ಹಂಚಿಕೊಂಡಿದ್ದಾರೆ. ನಾನು ಜೀವನೋಪಾಯಕ್ಕಾಗಿ ಭದ್ರಾವತಿ ನಗರಕ್ಕೆ ಆಗಮಿಸಿದ್ದು, ಇಲ್ಲಿಯೇ ನಾನು ಬದುಕು ಕಟ್ಟಿಕೊಳ್ಳುವ ಜೊತೆಗೆ ಹಲವು ಕ್ಷೇತ್ರಗಳಲ್ಲಿ ನನ್ನ ಕೈಲಾದಷ್ಟು ಸೇವೆ ಸಲ್ಲಿಸಿಕೊಂಡು ಬರುತ್ತಿದ್ದೇನೆ. ನನ್ನ ಅಳಿಲು ಸೇವೆಯನ್ನು ಗುರುತಿಸಿರುವುದಕ್ಕೆ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಭದ್ರಾವತಿ ಕ್ಷೇತ್ರದ ಜನತೆಗೆ ಒಳಿತು ಮಾಡಲಿ, ಯಾವುದೇ ಸಂಕಷ್ಟಗಳು ಎದುರಾಗದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
    ವೆಂಕಟರಮಣ ಶೇಟ್‌ರವರ ಪತ್ನಿ ಪ್ರೇಮ ಶೇಟ್‌ರವರು ಮಾತನಾಡಿ, ನನ್ನ ಪತಿಯವರು ಸಮಾಜದಲ್ಲಿ ಸಾಕಷ್ಟು ಸೇವೆಯನ್ನು ಸಲ್ಲಿಸಿದ್ದಾರೆ. ಅವರನ್ನು ನಾಡಹಬ್ಬ ಉದ್ಘಾಟನೆಗೆ ಆಹ್ವಾನಿಸಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ ಎಂದರು.
    ವೆಂಕಟರಮಣ ಶೇಟ್ ಪರಿಚಯ:
    ಇವರು ಮೂಲತಃ ಉದ್ಯಮಿಯಾಗಿದ್ದು, ೧೯೪೮ರಲ್ಲಿ ಹೊನ್ನಾವರ ತಾಲೂಕಿನ ಉಪ್ಪಾಣಿಯಲ್ಲಿ ಜನಿಸಿದ್ದಾರೆ. ಇವರಿಗೆ ಪತ್ನಿ ಪ್ರೇಮ ಶೇಟ್, ೪ ಹೆಣ್ಣು, ೨ ಗಂಡು ಮಕ್ಕಳಿದ್ದಾರೆ. ೧೯೬೯ರಲ್ಲಿ ಭದ್ರಾವತಿಗೆ ಆಗಮಿಸಿ ಉದ್ಯಮ ಆರಂಭಿಸಿ, ಹಳೇನಗರದಲ್ಲಿಯೇ ವಾಸವಾಗಿದ್ದಾರೆ.


    ಸಾಮಾಜಿಕ ಸೇವೆ: ನಗರದ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ವಲಯ ಅಧ್ಯಕ್ಷರಾಗಿ, ಜಿಲ್ಲಾ ಛೇರ್‍ಮನ್‌ರಾಗಿ, ಪ್ರಾಂತೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ನಗರದ ದೈವಜ್ಞ ಬ್ರಾಹ್ಮಣ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದು, ಅಲ್ಲದೆ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಸುಮಾರು ೨೮ ವರ್ಷಗಳಿಂದ ಎಸ್‌ಬಿಸಿ/ಸಿ.ಬಿ.ಸಿ ಸದಸ್ಯರಾಗಿ, ಕಾರ್ಯಾಧ್ಯಕ್ಷರಾಗಿ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಶಿವಮೊಗ್ಗ ಗಾಯತ್ರಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಟ್ರಸ್ಟ್ ಅಧ್ಯಕ್ಷರಾಗಿ, ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷರಾಗಿ, ಕಾಳಿಕಾಂಬ ಸೇವಾ ಸಮಿತಿ ಹಾಗು ಕರ್ನಾಟಕ ಜಾನಪದ ಪರಿಷತ್ ಗೌರವಾಧ್ಯಕ್ಷರಾಗಿ, ಪತಂಜಲಿ ಯೋಗ ಸಂಸ್ಥೆ ಅಧ್ಯಕ್ಷರಾಗಿ, ಸೈಂಟ್ ಜೋಸೆಫ್ ಕಾಲೇಜಿನ ಉಪಾಧ್ಯಕ್ಷರಾಗಿ ಹಾಗು ಸಂಧ್ಯಾದೀಪ ವೃದ್ಧಾಶ್ರಮದ ಟ್ರಸ್ಟಿಗಳಾಗಿ, ದೈವಜ್ಞ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.  
    ದಸರಾ ಉದ್ಘಾಟನೆ:
    ಈ ಬಾರಿ ದಸರಾ ಉದ್ಘಾಟನೆ ಅ.೧೫ರಂದು ಬೆಳಿಗ್ಗೆ ೧೦.೧೫ ರಿಂದ ೧೦.೩೬ರವರೆಗೆ ನಡೆಯಲಿದ್ದು, ಸಮಾಜ ಸೇವಕರಾದ ಪಿ. ವೆಂಕಟರಮಣ ಶೇಟ್‌ರವರು ನಗರಸಭೆ ಆವರಣದಲ್ಲಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆಯೊಂದಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್ ಹಾಗು ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿರುವರು.

೮ನೇ ಇಂಟರ್‌ನ್ಯಾಷನಲ್ ಗೇಮ್ಸ್ : ಪವನ್ ಕುಮಾರ್ ಚಿನ್ನದ ಪದಕ

ನೇಪಾಳ ಪೊಖಾರದಲ್ಲಿ ನಡೆದ ೮ನೇ ಇಂಟರ್‌ನ್ಯಾಷನಲ್ ಗೇಮ್ಸ್ - ೨೦೨೩ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭದ್ರಾವತಿ ಪವನ್‌ಕುಮಾರ್ ಭಾರತ ತಂಡ ಪ್ರತಿನಿಧಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ
    ಭದ್ರಾವತಿ: ನೇಪಾಳ ಪೊಖಾರದಲ್ಲಿ ನಡೆದ ೮ನೇ ಇಂಟರ್‌ನ್ಯಾಷನಲ್ ಗೇಮ್ಸ್ - ೨೦೨೩ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪವನ್‌ಕುಮಾರ್ ಭಾರತ ತಂಡ ಪ್ರತಿನಿಧಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಪಂದ್ಯಾವಳಿ ಅ.೫ ರಿಂದ ೯ರವರೆಗೆ ಜರುಗಿತು. ಸೌತ ಏಷ್ಯಾದ ೯ ದೇಶಗಳು ಭಾಗವಹಿಸಿದ್ದವು. ಮೆನ್ಸ್ ಅಂಡರ್-೩೦ ಸಿಂಗಲ್ಸ್‌ನಲ್ಲಿ ಪವನ್ ಕುಮಾರ್ ಉತ್ತಮ ಸಾಧನೆ ಮಾಡುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಪವನ್‌ಕುಮಾರ್ ನಗರದ ಎಂಪಿಎಂ ಕಾರ್ಖಾನೆ ನಿವೃತ್ತ ಉದ್ಯೋಗಿ, ಹೊಸಮನೆ ನಿವಾಸಿ ಕೃಷ್ಣ ಮತ್ತು ಸರಸ್ವತಿ ದಂಪತಿ ಪುತ್ರರಾಗಿದ್ದಾರೆ. ಇವರ ಸಾಧನೆಯನ್ನು ಕ್ರೀಡಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಅಭಿನಂದಿಸಿದ್ದಾರೆ.

ಹಳೇನಗರ ಮಹಿಳಾ ಸೇವಾ ಸಮಾಜ ಮಾದರಿ ಸಂಘಟನೆ : ಎಚ್.ಎಂ ಮನುಕುಮಾರ್

ಭದ್ರಾವತಿ ಹಳೇನಗರ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ, ಅರಕೆರೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಬಬಿತ ಕುಮಾರಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
    ಭದ್ರಾವತಿ: ಹಳೇನಗರದ ಮಹಿಳಾ ಸೇವಾ ಸಮಾಜ ಇತರೆ ಸಂಘಟನೆಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪೌರಾಯುಕ್ತ ಎಚ್.ಎಂ ಮನುಕುಮಾರ್ ಹೇಳಿದರು.
    ಅವರು ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಒಗ್ಗಟ್ಟಾಗಿ ಸಂಘಟನೆಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು.
    ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ, ಅರಕೆರೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಬಬಿತ ಕುಮಾರಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉಪಸ್ಥಿತರಿದ್ದರು.
    ಶಾರದ ಶ್ರೀನಿವಾಸ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಶೋಭಾಗಂಗರಾಜ್ ಸ್ವಾಗತಿಸಿದರು. ಕಮಲ ರಾಯ್ಕರ್ ನಿರೂಪಸಿ, ಖಜಾಂಚಿ ಶಾಂತಿ ನಾಗರಾಜ್ ಶೇಟ್ ವಂದಿಸಿದರು.

Thursday, October 12, 2023

ಕೆಂಪಮ್ಮ ನಿಧನ

ಕೆಂಪಮ್ಮ
    ಭದ್ರಾವತಿ : ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕುರುಬ ಸಮಾಜದ ಮುಖಂಡರಾದ ಹುಚ್ಚಪ್ಪರವರ ತಾಯಿ ಕೆಂಪಮ್ಮ(೯೦) ನಿಧನ ಹೊಂದಿದರು.
    ಹುಚ್ಚಪ್ಪ ಸೇರಿದಂತೆ ೪ ಪುತ್ರರು, ಓರ್ವ ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ಗುರುವಾರ ಸಂಜೆ ಹುತ್ತಾ ಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ತಾಲೂಕು ಕುರುಬ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಮುಖಂಡರು ಸಂತಾಪ ಸೂಚಿಸಿದ್ದಾರೆ.

ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ : ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳಲು ಆಗ್ರಹ

ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷರಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣರವರ ಅಧ್ಯಕ್ಷತೆಯಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.  
    ಭದ್ರಾವತಿ: ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ, ವಾಲ್ಮೀಕಿ ಸಮಾಜ ಹಾಗು ವಿವಿಧ ಇಲಾಖೆಗಳ ಸಹಯೋಗದಲ್ಲಿ ಅ.೨೮ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
    ಗುರುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷರಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಈ ಬಾರಿ ನಗರದ ವೀರಶೈವ ಸಭಾ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು.
    ಸಭೆ ಆರಂಭದಲ್ಲಿ ಕೆಲವು ಸರ್ಕಾರಿ ಇಲಾಖೆ ಅಧಿಕಾರಿಗಳ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಲಾಯಿತು. ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಮಹನೀಯರ ಜಯಂತಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಸಮಾಜದ ನಗರ ಅಧ್ಯಕ್ಷ ಬಸವರಾಜ್ ಬಿ. ಆನೇಕೊಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಪೂರ್ವಭಾವಿ ಸಭೆ ೧ ತಿಂಗಳು ಮುಂಚಿತವಾಗಿ ನಡೆಸಬೇಕು. ಇಲ್ಲವಾದರೆ ಆಚರಣೆಗೆ ತೊಡಕಾಗುತ್ತದೆ ಎಂದರು.
    ಸಮಾಜದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಪ್ರತಿಭಾ ಪುರಸ್ಕಾರದ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಸಮಾಜದ ಸಾಧಕರಿಗೂ ಪುರಸ್ಕಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಿದರು.
    ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್. ಗೋಪಾಲಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಉಪತಹಸೀಲ್ದಾರ್ ಅರಸು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಪೊಲೀಸ್ ನಿರೀಕ್ಷಕ ಜಯಪ್ಪ, ಸಮಾಜದ ಮುಖಂಡರಾದ ಶೇಖರಪ್ಪ, ಶಿವಣ್ಣ, ಶಿವಾನಂದ್, ಲಕ್ಷ್ಮೀದೇವಿ, ದಸಂಸ ಮುಖಂಡರಾದ ಈಶ್ವರಪ್ಪ, ತಮ್ಮಯ್ಯ, ವಿ. ವಿನೋದ್, ರವಿನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.

ನಗರಸಭೆ ಮಾಜಿ ಸದಸ್ಯ ಜಿ. ಸುರೇಶಯ್ಯ ನಿಧನ

ಜಿ. ಸುರೇಶಯ್ಯ
    ಭದ್ರಾವತಿ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಜಿ. ಸುರೇಶಯ್ಯ(೫೭) ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಗುರುವಾರ ಸಂಜೆ ನಡೆಯಿತು. ಸುರೇಶಯ್ಯ ಕಡದಕಟ್ಟೆ ನಿವಾಸಿವಾಗಿದ್ದು, ಒಂದು ಬಾರಿ ನಗರಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದು, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಸುಮಾರು ಒಂದೂವರೆ ವರ್ಷದಿಂದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
    ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಸ್ವಾಮೀಜಿ, ಸಂಸದ ಬಿ.ವೈ ರಾಘವೇಂದ್ರ, ಸಮಾಜದ ಜಿಲ್ಲಾ ಪ್ರಮುಖರಾದ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್, ಎಸ್.ಎಸ್ ಜ್ಯೋತಿ ಪ್ರಕಾಶ್, ಶಾಸಕ ಬಿ.ಕೆ ಸಂಗಮೇಶ್ವರ್, ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಅಂತಿಮ ದರ್ಶನ ಪಡೆದು ಮೃತರ ಆತ್ಮಕ್ಕೆ ಶಾಂತಿ ಕೋರಿದರು.
    ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ, ಪ್ರಧಾನ ಕಾರ್ಯದರ್ಶಿ, ಸಚಿವ ಈಶ್ವರ್ ಖಂಡ್ರೆ, ರಾಜ್ಯಾಧ್ಯಕ್ಷ ತಿಪ್ಪಣ್ಣ ಸೇರಿದಂತೆ ಇನ್ನಿತರರು ಸುರೇಶಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಂದ ಕಾರ್ಯಾಚರಣೆ

ಗ್ರಾಮಸ್ಥರ ವಿರೋಧದ ನಡುವೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸರ್ವೆ ನಡೆಸಿ ಫಲಕ ಅಳವಡಿಕೆ

ಭದ್ರಾವತಿ ನಗರಸಭೆ ವತಿಯಿಂದ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಉಂಟಾಗಿದ್ದ ಜಾಗದ ಸಮಸ್ಯೆಯನ್ನು ಗುರುವಾರ ಅಧಿಕಾರಿಗಳ ತಂಡ ಬಗೆಹರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಗ್ರಾಮಸ್ಥರ ವಿರೋಧದ ನಡುವೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮಂಜೂರಾದ ಭೂಮಿಯಲ್ಲಿ ಸರ್ವೆ ನಡೆಸಿ ಫಲಕ ಅಳವಡಿಸಿದೆ.
    ಭದ್ರಾವತಿ : ನಗರಸಭೆ ವತಿಯಿಂದ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಉಂಟಾಗಿದ್ದ ಜಾಗದ ಸಮಸ್ಯೆಯನ್ನು ಗುರುವಾರ ಅಧಿಕಾರಿಗಳ ತಂಡ ಬಗೆಹರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
    ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದು, ಈಗಾಗಲೇ ಈ ಸಂಬಂಧ ಫಲಾನುಭವಿಗಳನ್ನು ಸಹ ಗುರುತಿಸಿ ಎಲ್ಲಾ ಪ್ರಕ್ರಿಯೆಗಳು ಸಹ ಮುಕ್ತಾಯಗೊಂಡಿವೆ. ಅಲ್ಲದೆ ಸರ್ಕಾರ ಸಹ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಿದೆ. ಆದರೆ ಜಾಗದ ಸಮಸ್ಯೆಯಿಂದಾಗಿ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.


ಭದ್ರಾವತಿ ನಗರಸಭೆ ವತಿಯಿಂದ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಉಂಟಾಗಿದ್ದ ಜಾಗದ ಸಮಸ್ಯೆಯನ್ನು ಗುರುವಾರ ಅಧಿಕಾರಿಗಳ ತಂಡ ಬಗೆಹರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
    ನಂಜಾಪುರ ಗ್ರಾಮಕ್ಕೆ ಹೊಂದಿಕೊಂಡಂತ್ತಿರುವ ಕಸಬಾ ಹೋಬಳಿ ಬುಳ್ಳಾಪುರ ಗ್ರಾಮದ ಸರ್ವೆ ನಂ. ೫೫ರ ೩೭೮.೨೮ ಎಕರೆ ಗೋಮಾಳ ಪೈಕಿ ೯.೩೮+೬.೦೨ ಒಟ್ಟು ೧೬ ಎಕರೆಯನ್ನು ಜಿಲ್ಲಾಧಿಕಾರಿಗಳು ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ-೧೯೬೪ರ ಕಲಂ-೭೧ರಡಿ ಪೌರಾಯುಕ್ತರು, ನಗರಸಭೆ, ಭದ್ರಾವತಿ ಹೆಸರಿಗೆ ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಸ್ಥಳದಲ್ಲಿ ಕಾಮಗಾರಿ ಆರಂಭಿಸಿಲು ಈ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಲು ಮುಂದಾಗಿದ್ದರು. ಆದರೆ ನಂಜಾಪುರ ನಿವಾಸಿಗಳು ಇದಕ್ಕೆ ವಿರೋಧ ವ್ಯಕ್ತಿಪಡಿಸಿದ್ದರು. ಈ ಸಂಬಂಧ ನಗರಸಭೆ ಸಾಮಾನ್ಯಸಭೆಯಲ್ಲಿ ಚರ್ಚೆ ಸಹ ನಡೆದಿತ್ತು.
ಗುರುವಾರ ಬೆಳಿಗ್ಗೆ ಜಿಲ್ಲಾ ಯೋಜನಾ ನಿರ್ದೇಶಕ ಮನೋಹರ್ ನೇತೃತ್ವದ ತಂಡ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸರ್ವೆ ನಡೆಸಿ ಜೆಸಿಬಿ ಬಳಸಿ ಗಿಡಗಂಟಿಗಳನ್ನು ತೆರವುಗೊಳಿಸುವ ಜೊತೆಗೆ ಫಲಕ ಅಳವಡಿಸಿದೆ. ಕಾರ್ಯಾಚರಣೆಯಲ್ಲಿ ತಹಸೀಲ್ದಾರ್ ಕೆ.ಆರ್ ನಾಗರಾಜ್, ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಹಾಗು ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
 ಇದಕ್ಕೂ ಮೊದಲು ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದರು. ಸರ್ಕಾರದ ಆದೇಶದಂತೆ ಯಾವುದೇ ಗ್ರಾಮದ ಸಮೀಪ ಗೋಮಾಳ ಜಾಗವಿದ್ದಲ್ಲಿ ಕನಿಷ್ಠ ೩೦ ಎಕರೆ ಜಾಗ ನೀಡಬೇಕು. ಈ ಹಿನ್ನಲೆಯಲ್ಲಿ ಜಾಗ ನೀಡುವಂತೆ ಆಗ್ರಹಿಸಿದರು. ಕಾರ್ಯಾಚರಣೆ ಮುಕ್ತಾಯಗೊಂಡ ನಂತರ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಸಾಕಷ್ಟು ಜಾಗ ಉಳಿದಿದ್ದು, ಸರ್ಕಾರದ ಆದೇಶದಂತೆ ಉಳಿದಿರುವ ಜಾಗದಲ್ಲಿ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು.
ನಂಜಾಪುರ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ/ಪಂಗಡದವರು ವಾಸಿಸುತ್ತಿದ್ದು, ಜಾಗದ ಅವಶ್ಯಕತೆ ಇರುವುದಾಗಿ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಭದ್ರಾವತಿ ನಗರಸಭೆ ವತಿಯಿಂದ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಉಂಟಾಗಿದ್ದ ಜಾಗದ ಸಮಸ್ಯೆಯನ್ನು ಗುರುವಾರ ಅಧಿಕಾರಿಗಳ ತಂಡ ಬಗೆಹರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡ ನಂತರ ಗ್ರಾಮಸ್ಥರೊಂದಿಗೆ ಅಧಿಕಾರಿಗಳು ಚರ್ಚಿಸಿ ಸರ್ಕಾರದ ಆದೇಶದಂತೆ ಉಳಿದಿರುವ ಭೂಮಿಯಲ್ಲಿ ಅವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
    ಪ್ರಮುಖರಾದ ಪ್ರಜಾಪ್ರತಿನಿಧಿ ಸುರೇಶ್, ಬಿಜೆಪಿ ಪಕ್ಷದ ಯುವ ಮುಖಂಡ ಮಂಗೋಟೆ ರುದ್ರೇಶ್ ಸೇರಿದಂತೆ ಗ್ರಾಮದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು. ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಜಿ+೩ ಮಾದರಿಯ ವಸತಿ ವ್ಯವಸ್ಥೆ ಕಲ್ಪಿಸಲು ಅಡ್ಡಿಯಾಗಿದ್ದ ಜಾಗದ ಸಮಸ್ಯೆ ಒಂದು ಹಂತದಲ್ಲಿ ಬಗೆಹರಿದಿದ್ದು, ಕಾಮಗಾರಿ ಶೀಘ್ರವಾಗಿ ಆರಂಭಗೊಳ್ಳಬೇಕಾಗಿದೆ.