Tuesday, November 21, 2023

ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಅಧಿಕಾರಿಗಳು ನಿರ್ಲಕ್ಷಿಸದಿರಿ : ಎಚ್.ಎಸ್ ಸುರೇಶ್

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ವತಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ ; ಲೋಕಾಯುಕ್ತ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಅಧಿಕಾರಿಗಳು ನಿರ್ಲಕ್ಷ್ಯವಾಗಿ ಪರಿಗಣಿಸಬಾರದು. ಸಭೆಗೆ ಕಡ್ಡಾಯವಾಗಿ ಪಾಲ್ಗೊಂಡು ಸಮಸ್ಯೆ ಇತ್ಯರ್ಥಗೊಳಿಸಲು ಸಹಕರಿಸಬೇಕೆಂದು ಲೋಕಾಯುಕ್ತ ಪೊಲೀಸ್ ಜಿಲ್ಲಾ ನಿರೀಕ್ಷಕ ಎಚ್.ಎಸ್ ಸುರೇಶ್ ಕೋರಿದರು.
    ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು, ಸಭೆಗೆ ಹಾಜರಾದ ಅಧಿಕಾರಿಗಳ ಮಾಹಿತಿ ಪಡೆದರು. ಶೇ.೫೦ರಷ್ಟು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
    ಸಣ್ಣ ಆಮೀಷಗಳಿಗೆ ಉತ್ತಮ ಭವಿಷ್ಯವನ್ನು ಹಾಳುಮಾಡಿಕೊಳ್ಳದಿರಿ. ಜನತೆಯ ಕೆಲಸಗಳನ್ನು ಕೇವಲ ಸಬೂಬು ಹೇಳದೆ ಸಕಾಲಕ್ಕೆ ಪೂರ್ಣಗೊಳಿಸಿ. ಅಧಿಕಾರಿಗಳ ಹಂತದಲ್ಲಿ ಕೆಲಸಗಳು ಆಗದಿದ್ದಾಗ ಲೋಕಾಯುಕ್ತಕ್ಕೆ ದೂರುಗಳು ಬರುತ್ತವೆ. ಆದ್ದರಿಂದ ಇಂತಹ ದೂರುಗಳನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ. ಅಧಿಕಾರಿಗಳು ಕುಂದುಕೊರತೆ ಸಭೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದರು.
    ಸಾರ್ವಜನಿಕರ ದೂರುಗಳನ್ನು ಲಘುವಾಗಿ ಪರಿಗಣಿಸದಿರಿ. ಕೇವಲ ಅರ್ಜಿ ಪಡೆಯುವುದು ಮುಖ್ಯವಲ್ಲ. ಅರ್ಜಿಗಳನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು. ಭದ್ರಾವತಿಗೆ ಸಂಬಂಧಿಸಿದಂತೆ ೫ ಅರ್ಜಿಗಳು ಬಂದಿದ್ದು, ಅಧಿಕಾರಿಗಳು ಹಾಜರಾಗದಿರುವುದರಿಂದ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿಯುತ್ತವೆ ಎಂದರು.
    ತಾಲೂಕು ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಹೆಚ್ಚಿನ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸಮಸ್ಯೆಗಳನ್ನು ಸಾಧ್ಯವಾದಷ್ಟು ಆರಂಭಿಕ ಹಂತದಲ್ಲಿಯೇ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಸಲಹೆ ವ್ಯಕ್ತಪಡಿಸಿದರು.
    ಸಭೆಯಲ್ಲಿ ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಉಪತಹಸೀಲ್ದಾರ್ ಮಂಜಾನಾಯ್ಕ, ಕಂದಾಯ ನಿರೀಕ್ಷಕ ಪ್ರಶಾಂತ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಬಿ ಶಿವಪ್ರಸಾದ್, ತಾಲೂಕು ಪಂಚಾಯಿತಿ ಉಪೇಂದ್ರ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ನೇತ್ರಾವತಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ : ಕಾರ್ಮಿಕ ವಲಯದಲ್ಲಿ ಸಂತಸ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ ಹಾಗು ಇವರ ಬೆಂಬಲಿಗರು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಭದ್ರಾವತಿ: ನಿರಂತರ ಹೋರಾಟದ ಮೂಲಕ ಗಮನ ಸೆಳೆದಿರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ ಹಾಗು ಇವರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಕ್ಕೆ ಇಲ್ಲಿನ ಕಾರ್ಮಿಕ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.
    ಹಲವಾರು ವರ್ಷಗಳಿಂದ ಆಮ್ ಆದ್ಮಿ ಪಾರ್ಟಿ(ಎಎಪಿ) ಸಂಘಟಿಸುವ ಜೊತೆಗೆ ಹಲವಾರು ಹೋರಾಟಗಳ ಮೂಲಕ ನೇತ್ರಾವತಿಯವರು ಗುರುತಿಸಿಕೊಂಡಿದ್ದು, ಈ ಹಿಂದೆ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಶಿವಮೊಗ್ಗದಿಂದ ಕಾರ್ಖಾನೆ ಮುಖ್ಯದ್ವಾರದವರೆಗೂ ಪಾದಯಾತ್ರೆ ನಡೆಸಿ ಕಾರ್ಮಿಕರಿಗೆ ಬೆಂಬಲ ಸೂಚಿಸಿ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸುವ ಮೂಲಕ ಗಮನ ಸೆಳೆದಿದ್ದರು. ಅವರು ಕಾರ್ಮಿಕರು ಹಾಗು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹೊಂದಿರುವ ಕಾಳಜಿಗೆ ವ್ಯಕ್ತವಾಗಿತ್ತು.
    ಕಳೆದ ಕೆಲವು ದಿನಗಳ ಹಿಂದೆ ನೇತ್ರಾವತಿ ಹಾಗು ಅವರ ಬೆಂಬಲಿಗರು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾರ್ಮಿಕ ಮುಖಂಡ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರ ಕಾರ್ಮಿಕ ಮುಖಂಡರು ಸಂತಸ ವ್ಯಕ್ತಪಡಿಸುವ ಜೊತೆಗೆ ಪ್ರಸ್ತುತ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಹಾಗು ಮೈಸೂರು ಕಾಗದ ಕಾರ್ಖಾನೆ ಪುನಃ ಆರಂಭಗೊಳ್ಳಲು ಇನ್ನೂ ಹೆಚ್ಚಿನ ಹೋರಾಟದ ಅನಿವಾರ್ಯತೆ ಇದ್ದು, ನೇತ್ರಾವತಿಯವರು ಈ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

Monday, November 20, 2023

ಮನುಷ್ಯರ ಬದುಕು ಉತ್ತಮವಾಗಿರಲು ಧರ್ಮವೇ ದಿಕ್ಸೂಚಿ : ರಂಭಾಪುರಿ ಶ್ರೀ

ಭದ್ರಾವತಿ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಹುತ್ತಾ ಸಹ್ಯಾದ್ರಿ ಬಡಾವಣೆಯ ಶ್ರೀ ರಂಗನಾಥ ಕೃಪದಲ್ಲಿ ಸಮಾಜ ಸೇವಕ ದಿವಂಗತ ಬಿ.ಎಚ್. ಮಹಾದೇವಪ್ಪ ಕುಟುಂಬ ವರ್ಗದವರು ಆಯೋಜಿಸಿದ್ದ ಇಷ್ಟಲಿಂಗ ಮಹಾಪೂಜೆ ನಂತರ ಜರುಗಿದ ಧರ್ಮಸಭೆಯಲ್ಲಿ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಆಶೀರ್ವಚನ ನೀಡಿದರು.
    ಭದ್ರಾವತಿ: ಮನುಷ್ಯರ ಬದುಕು ಉತ್ತಮವಾಗಿರಲು ಧರ್ಮವೇ ದಿಕ್ಸೂಚಿ. ಸಜ್ಜನ ವ್ಯಕ್ತಿಗಳ ಹಾಗು ಆದರ್ಶ ವ್ಯಕ್ತಿಗಳ ಒಡನಾಟದಿಂದ ಸಕಲ ಶ್ರೇಯಸ್ಸು ಪ್ರಾಪ್ತವಾಗುತ್ತದೆ ಎಂದು ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ನುಡಿದರು.
    ಭಗವತ್ಪಾದರು ಸೋಮವಾರ ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಹುತ್ತಾ ಸಹ್ಯಾದ್ರಿ ಬಡಾವಣೆಯ ಶ್ರೀ ರಂಗನಾಥ ಕೃಪದಲ್ಲಿ ಸಮಾಜ ಸೇವಕ ದಿವಂಗತ ಬಿ.ಎಚ್. ಮಹಾದೇವಪ್ಪ ಕುಟುಂಬ ವರ್ಗದವರು ಆಯೋಜಿಸಿದ್ದ ಇಷ್ಟಲಿಂಗ ಮಹಾಪೂಜೆಯಲ್ಲಿ ಪಾಲ್ಗೊಂಡು ನಂತರ ನಡೆದ ಧರ್ಮಸಭೆಯಲ್ಲಿ ಆರ್ಶೀವಚನ ನೀಡಿದರು.
    ಧರ್ಮ ಎಂದರೆ ನುಡಿಯುವ ಮಾತಲ್ಲ. ಜೀವನದ ನಿಜವಾದ ಆಚರಣೆ. ಅದೊಂದು ಜೀವನ ವಿಧಾನ. ಜೀವನ ಎಂಬುದು ತೆರೆದಿಟ್ಟ ಪುಸ್ತಕ. ಮೊದಲ ಹಾಗು ಕೊನೆಪುಟವನ್ನು ದೇವರು ಬರೆದಿರುತ್ತಾನೆ. ನಡುವಿನ ಪುಟಗಳನ್ನು ನಾವು ರೂಪಿಸಿಕೊಳ್ಳಬೇಕು. ಮೊದಲಪುಟ ಹುಟ್ಟು ಕೊನೆಯ ಪುಟ ಸಾವು. ನಡುವಿನ ಬದುಕಿನ ಪುಟಗಳನ್ನು ಸಮೃದ್ಧವಾಗಿ ರೂಪಿಸಿಕೊಳ್ಳಬೇಕಿರುವುದು ಅವರವರ ಜವಾಬ್ದಾರಿ ಎಂದರು.
    ಪ್ರಸ್ತುತ ದಿನಗಳಲ್ಲಿ ತಂದೆ-ತಾಯಿ, ಗುರು-ಶಿಷ್ಯರ ನಡುವಿನ ಸಂಬಂಧಗಳು ಸಡಿಲಗೊಳ್ಳುತ್ತಿವೆ. ಇದರಿಂದಾಗಿ ಸಂಬಂಧಗಳು ಮೌಲ್ಯ ಕಳೆದುಕೊಳ್ಳುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದ ಭಗವತ್ಪಾದರು, ಧರ್ಮ ಕಾರ್ಯಗಳಿಂದ ಇಡೀ ಕುಟುಂಬಕ್ಕೆ ಸದ್ಭಾವನೆ ದೊರೆಯಲು ಸಾಧ್ಯ ಎಂದರು.
    ಬಿಳಕಿ ಹಿರೇಮಠದ ಪೀಠಾಧ್ಯಕ್ಷರಾದ ಷ|| ಬ್ರ|| ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವ ಧರ್ಮ ಪ್ರಾಚೀನವಾದ ಧರ್ಮ. ಐದು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದೆ. ಧರ್ಮ ಮತ್ತು ಸಂಸ್ಕೃತಿ ಸಮಾಜವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುತ್ತವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವುದು ಪೋಷಕರ ಜವಾಬ್ದಾರಿಯಾಗಿದೆ ಎಂದರು.
    ಸಮಾರಂಭದಲ್ಲಿ ತೀರ್ಥಹಳ್ಳಿ ಮಳಲಿಮಠದ ಷ|| ಬ್ರ|| ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಸಮಾರಂಭದ ಆಯೋಜಕರಾದ ಮನು ಮತ್ತು ಸ್ವಾಮಿ ಪಾಲ್ಗೊಂಡಿದ್ದರು. ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಗೀತಾ ರಾಜ್‌ಕುಮಾರ್, ಉದ್ಯಮಿ ಬಿ.ಕೆ.ಜಗನ್ನಾಥ್, ಸಮಾಜದ ಮುಖಂಡರಾದ ಸಿದ್ದಲಿಂಗಯ್ಯ, ಆರ್. ಮಹೇಶ್‌ಕುಮಾರ್, ಅಡವೀಶಯ್ಯ, ರೂಪೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು. ಗ್ರಾಯಕಿ ಶಾಂತ ಆನಂದ್ ಕಾರ್ಯಕ್ರಮ ನಿರೂಪಿಸಿದರು.


Sunday, November 19, 2023

ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘ : ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸನ್ಮಾನ

ಭದ್ರಾವತಿ ಸಿದ್ಧಾರೂಢನಗರದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ೬೮ನೇ ವರ್ಷದ ಕನ್ನಡ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ: ಸಿದ್ಧಾರೂಢನಗರದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ೬೮ನೇ ವರ್ಷದ ಕನ್ನಡ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಸಿದ್ದಾರೂಢನಗರದ ಶ್ರೀ ಶೃಗೇರಿ ಶಂಕರ ಮಠದ ಸಮೀಪ ೨ ದಿನಗಳ ಕಾಲ ಆಯೋಜಿಸಿದ್ದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಶ್ರಾಂತ ಪ್ರಾಚಾರ್ಯ ಎಚ್. ಭುವನೇಶ್ವರ್ `ಕನ್ನಡದ ಸ್ಥಿತಿ, ಗತಿ' ಕುರಿತು ಉಪನ್ಯಾಸ ನೀಡಿದರು. ಹಿರಿಯ ನಾಗರೀಕರು ಹಾಗು ಪಿಯುಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    ರಾಜ್ಯ ಪ್ರಶಸ್ತಿ ಪುರಸ್ಕೃತ ಹಾರೋನಹಳ್ಳಿಸ್ವಾಮಿ ನೇತೃತ್ವದ ಚಿಂತನ ಕಲಾವೃಂದದಿಂದ ರಸಮಂಜರಿ ಕಾರ್ಯಕ್ರಮ ಜರುಗಿತು. ಜೇಡಿಕಟ್ಟೆ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಉದ್ಯಮಿ ಬಿ.ಕೆ ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗಾಯಕ ಬಿ.ಎ ಮಂಜುನಾಥ್, ಎಸ್. ವಾಗೀಶ್, ಪೂರ್ಣಿಮಾ ಸಿದ್ದಲಿಂಗಯ್ಯ,  ಲಕ್ಷ್ಮೀಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆ ಕುರಿತು ಇಂದಿನ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ : ಹಾರೋನಹಳ್ಳಿಸ್ವಾಮಿ

ಭದ್ರಾವತಿ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಹಿರಿಯೂರು ಎಸ್.ಬಿ.ಎಂ.ಎಂ.ಆರ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಹಾರೋನಹಳ್ಳಿಸ್ವಾಮಿ ಉದ್ಘಾಟಿಸಿದರು.
    ಭಧ್ರಾವತಿ: ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಇಂದಿನ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಹಿರಿಯೂರು ಎಸ್.ಬಿ.ಎಂ.ಎಂ.ಆರ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಹಾರೋನಹಳ್ಳಿಸ್ವಾಮಿ ಹೇಳಿದರು.
    ಅವರು ಭಾನುವಾರ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳಲ್ಲಿ ಕನ್ನಡ ಭಾಷೆ ಕುರಿತು ಅಭಿಮಾನ ಬೆಳೆಯಬೇಕು. ಈ ನಿಟ್ಟಿನಲ್ಲಿ ನಮ್ಮ ಮನೆ-ಮನಗಳಲ್ಲಿ ಕನ್ನಡ ಭಾಷೆ ಆರಂಭವಾಗಬೇಕು. ಸಮೃದ್ಧವಾದ ಭಾಷೆ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯ ನಡೆಯಬೇಕು ಎಂದರು.
    ಸಮಾಜದ ಅಧ್ಯಕ್ಷೆ ಆರ್.ಎಸ್ ಶೋಭ ಅಧ್ಯಕ್ಷತೆ ವಹಿಸಿದ್ದರು. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ಉದ್ಯಮಿ ಬಿ.ಕೆ ಜಗನ್ನಾಥ ಅವರ ಮೊಮ್ಮಗ ಆದ್ಯಂತ್ ನಂದೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಮಕ್ಕಳಾದ ಯು. ಅಕ್ಷಯ್‌ಕುಮಾರ್, ಪುಣ್ಯಶ್ರೀ ಪಿ. ಕುಂಬಾರ್, ಸುಮುಖ್ ರುದ್ರದೇವ್ ಎಚ್.ವಿ, ಸಮಾಜದ ಗೌರವಾಧ್ಯಕ್ಷೆ ಗೌರಮ್ಮ ಶಂಕರಯ್ಯ, ಗೌರವ ಸಲಹೆಗಾರರಾದ ನಾಗರತ್ನ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ನಾಗರತ್ನ ವಾಗೀಶ್ ಕೋಠಿ ಉಪಸ್ಥಿತರಿದ್ದರು.
    ಶ್ರೀಯ ಸ್ವಾಗತಿಸಿ, ಜಿ.ಎನ್ ತೃಪ್ತಿ ಪ್ರಾರ್ಥಿಸಿದರು. ಎಸ್. ಪ್ರಜ್ಞಾ ನಿರೂಪಿಸಿದರು.  

Saturday, November 18, 2023

ಕನ್ನಡ ಭಾಷೆ ಮತ್ತಷ್ಟು ಉಜ್ವಲಗೊಳ್ಳಲು ಕನ್ನಡಾಭಿಮಾನ ಬೆಳೆಯಲಿ : ಡಾ. ಎಂ. ಬಸವರಾಜಪ್ಪ

ಭದ್ರಾವತಿಯಲ್ಲಿ ಶನಿವಾರ ಭೂಮಿಕಾ ಕನ್ನಡ ನಾಡು ನಡೆ-ನುಡಿ ಬಿಂಬಿಸುವ ವೇದಿಕೆ ವತಿಯಿಂದ ತರೀಕೆರೆ ರಸ್ತೆಯ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುವರ್ಣ ಕರ್ನಾಟಕ ಸಂಭ್ರಮ ೬೮ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಶಿಕ್ಷಣ ಇಲಾಖೆ ಸಂಯೋಜಕ ಡಾ. ಎಂ. ಬಸವರಾಜಪ್ಪ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ : ಕನ್ನಡ ಭಾಷೆ ಮತ್ತಷ್ಟು ಉಜ್ವಲಗೊಳ್ಳಲು ಪ್ರತಿಯೊಬ್ಬರಲ್ಲೂ ಕನ್ನಡಾಭಿಮಾನ ಬೆಳೆಯಬೇಕೆಂದು ಶಿಕ್ಷಣ ಇಲಾಖೆ ಸಂಯೋಜಕ ಡಾ. ಎಂ. ಬಸವರಾಜಪ್ಪ ಹೇಳಿದರು.
    ಅವರು ಶನಿವಾರ ಭೂಮಿಕಾ ಕನ್ನಡ ನಾಡು ನಡೆ-ನುಡಿ ಬಿಂಬಿಸುವ ವೇದಿಕೆ ವತಿಯಿಂದ ತರೀಕೆರೆ ರಸ್ತೆಯ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುವರ್ಣ ಕರ್ನಾಟಕ ಸಂಭ್ರಮ ೬೮ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ವಿಶ್ವದಾದ್ಯಂತ ಕನ್ನಡ ಭಾಷೆ ವಿಸ್ತಾರಗೊಳ್ಳಬೇಕೆಂಬ ಆಶಯ ವೇದಿಕೆ ಹೊಂದಿರುವುದು ಅದರ ಹೆಸರು ಹಾಗು ಲಾಂಛನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ಸಹ ನಮ್ಮಲ್ಲಿ ಕನ್ನಡಾಭಿಮಾನವಿದ್ದಲ್ಲಿ ಭಾಷೆ ಸಹ ಬೆಳವಣಿಗೆ ಹೊಂದುತ್ತದೆ. ಕನ್ನಡ ನಾಡಿನಲ್ಲಿಯೇ ಕನ್ನಡ ಭಾಷೆಯಲ್ಲಿ ಹಲವು ವಿಭಿನ್ನತೆ, ವೈಶಿಷ್ಟತೆಯನ್ನು ಕಾಣಬಹುದಾಗಿದೆ. ಎಲ್ಲರನ್ನೂ ಸೇರಿಸುವ, ಎಲ್ಲರನ್ನು ಒಳಗೊಂಡಿರುವ ಭಾಷೆ ಕನ್ನಡ ಎಂಬುದನ್ನು ನಾವುಗಳು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ವೈದ್ಯ ಸಾಹಿತಿ, ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಮಾತನಾಡಿ, ಮೊದಲು ನಾವೆಲ್ಲರೂ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು. ಇಲ್ಲವಾದಲ್ಲಿ ಕನ್ನಡ ಭಾಷೆ ಬೆಳವಣಿಗೆ ಹೊಂದಲು ಸಾಧ್ಯವಿಲ್ಲ. ವೇದಿಕೆ ಕನ್ನಡ ನಾಡು, ನಡೆ-ನುಡಿ ಬಿಂಬಿಸುವ ಮೂಲಕ ಜಾಗೃತಗೊಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಈ ನಿಟ್ಟಿನಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು.
    ವೇದಿಕೆ ಗೌರವಾಧ್ಯಕ್ಷ ಕೆ. ಲಕ್ಷ್ಮಣ್‌ರಾವ್, ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕೋಶಾಧ್ಯಕ್ಷ ಸಿ.ಎಲ್ ಮುನಿರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕರು ಕಾಲಘಟ್ಟಕ್ಕನುಗುಣವಾಗಿ ಮತ್ತೊಮ್ಮೆ ಬದಲಾಗಬೇಕಿದೆ : ಪ್ರೊ. ರಹಮತ್ ತರೀಕೆರೆ

ಭದ್ರಾವತಿ ಸೇಂಟ್ ಜೋಸೆಫ್ ಶಾಲೆಯಲ್ಲಿ ಸಿಬಿಎಸ್‌ಇ ಶಾಲೆಗಳ ಒಕ್ಕೂಟ ಸಹ್ಯಾಧ್ರಿ ಸಹೋದಯ ಸ್ಕೂಲ್ ಕಾಂಪ್ಲೆಕ್ಸ್ ವತಿಯಿಂದ ಆಯೋಜಿಸಲಾಗಿದ್ದ ಅಧ್ಯಯನ-೪ ಶಿಕ್ಷಕರ ವಾರ್ಷಿಕ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ರೆಹಮತ್ ತರೀಕೆರೆ ಮಾತನಾಡಿದರು.
    ಭದ್ರಾವತಿ;  ಪ್ರಸ್ತುತ ಶಿಕ್ಷಕರು ಕಾಲಘಟ್ಟಕ್ಕನುಗುಣವಾಗಿ ಮತ್ತೊಮ್ಮೆ ಬದಲಾಗಬೇಕಿದೆ. ಶಿಕ್ಷಕರೂ ಸಹ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆ ಹೇಳಿದರು.
    ಗಾಂಧಿನಗರದ ಸೇಂಟ್ ಜೋಸೆಫ್ ಶಾಲಾ ಆವರಣದಲ್ಲಿ ಸಿಬಿಎಸ್‌ಇ ಶಾಲೆಗಳ ಒಕ್ಕೂಟ, ಸಹ್ಯಾಧ್ರಿ ಸಹೋದಯ ಸ್ಕೂಲ್ ಕಾಂಪ್ಲೆಕ್ಸ್ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಅಧ್ಯಯನ-೪ ಶಿಕ್ಷಕರ ವಾರ್ಷಿಕ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪ್ರಸ್ತುತ ದಿನಗಳಲ್ಲಿ ಸರ್ಕಾರಗಳು ಮಾಡುವ ಎಜುಕೇಷನ್ ಪಾಲಿಸಿ ಚೌಕಟ್ಟಿನಲ್ಲಿ ಆಟವಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು,  ಶಿಕ್ಷಕರುಗಳಿಗೆ ಸ್ವಾತಂತ್ರ್ಯ ಇಲ್ಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
    ನಾವುಗಳು ಅತ್ಯುತ್ತಮ ಶಿಕ್ಷಕರಾಗಬೇಕಾದರೆ ಸಮಾಜ ನಮಗೆ ಕೊಟ್ಟಿರುವ ಚಿತ್ರಕಲೆ, ಸಿನಿಮಾ ಸಾಹಿತ್ಯ, ಸಂಗೀತವನ್ನು ಆಸ್ವಾದಿಸಿ ಅರಗಿಸಿಕೊಳ್ಳುವ ಗುಣ ಹೊಂದಬೇಕು.  ದೇಹಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳುವಂತೆ ಎಲ್ಲಾ ವಿಚಾರಗಳ ಜ್ಞಾನ ಸಂಪಾದಿಸಬೇಕು. ಸಂಗೀತಗಾರರು, ಕಲಾ ನೈಪುಣ್ಯರು, ಉತ್ತಮ ಹಾಡುಗಾರರು ಲೇಖಕರನ್ನು ಶಾಲೆಗೆ ಕರೆಸಿ ಸಂವಾದ ಕಾರ್ಯಕ್ರಮಗಳನ್ನು ನಡೆಸಬೇಕು. ಆಗ ಮಾತ್ರ ಜ್ಞಾನ ಸಂಪಾದನೆ ಜೊತೆಗೆ ಮನುಷ್ಯತ್ವ ಗುಣವೂ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
    ಯಾವುದೇ ದೇಶ ಒಂದು ಕ್ಷೇತ್ರಕ್ಕೆ ಮಾತ್ರ ಮಹತ್ವ ಕೊಟ್ಟರೆ ಆ ದೇಶ ಹೆಚ್ಚು ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ.  ಆ ದೇಶ ಅಂಗವಿಕಲತೆಯನ್ನು ಅನುಭವಿಸಿದಂತಾಗುತ್ತದೆ. ಸಮಾಜದ ಎಲ್ಲಾ ಕ್ಷೇತ್ರಗಳಿಗೂ ಮಹತ್ವ ಕೊಡಬೇಕಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಿಂದ ದೇಶ ಬಹಳ ದೂರ ಹೋಗಲು ಸಾಧ್ಯವಿಲ್ಲ ಎಂಬುದನ್ನು ನಾವು ಅರಿಯಬೇಕಾಗಿದೆ ಎಂದರು.
    ಶಿಕ್ಷಕ ವೃತ್ತಿಯಲ್ಲಿ ಮಹಿಳೆಗೆ ಹೆಚ್ಚು ಸ್ಥಾನ ಕೊಡುತ್ತೇವೆ. ಆದರೆ ಆಕೆಯ ಸಾರ್ವಜನಿಕ ಬದುಕನ್ನು ಮುಕ್ತವಾಗಿ ಕೊಡದೆ ಕೌಟಂಬಿಕ ನೆಲೆಗಟ್ಟಿನಲ್ಲಿ ಕಟ್ಟಿದ್ದೇವೆ. ಅದನ್ನು ಪಡೆದುಕೊಳ್ಳುವ ಕೆಲಸ ಮಾಡಬೇಕಾಗಿದೆ. ಗುರುವನ್ನು ವೈಭವೀಕರಿಸುವ ಸಂಸ್ಕೃತಿ ನಮ್ಮದು.  ಇಲ್ಲಿ ಗುರುಗಳಿಗೂ ವಿಧ್ಯಾರ್ಥಿಗಳಿಗೂ ಉತ್ತಮ ಬಾಂಧವ್ಯವಿರಬೇಕು. ಮೊಬೈಲ್‌ನಲ್ಲಿ ಇಂದು ಎಲ್ಲಾ ಮಕ್ಕಳಿಗೂ ಎಲ್ಲಾ ವಿಚಾರಗಳು ಸಿಗುತ್ತಿವೆ. ಇಂತಹ ದಿನಗಳಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರೂ ಸಹ ಸಾಕಷ್ಟು ಕಲಿಯಬೇಕಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಸಹೋದಯ ಕಾರ್ಯದರ್ಶಿ ಸುಕೇಶ ಶೇರಿಗಾರ್. ಸೇಂಟ್ ಜೋಸೇಪ್ ಶಾಲೆಯ ಅಧ್ಯಕ್ಷ ಟಿ. ಪುಷ್ಪರಾಜ್. ಪ್ರಾಂಶುಪಾಲರಾದ ಲತಾ ರಾಬರ್ಟ್. ಶೋಭಾ ರವೀಂದ್ರ. ನವೀನ ಎಂ ಪಾಯ್ಸ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಬೆಳಿಗ್ಗೆ ಅಧ್ಯಯನ-೪ ಶಿಕ್ಷಕರ ವಾರ್ಷಿಕ ಸಮ್ಮೇಳನವನ್ನು ಇಸ್ರೋದ ಮಾಜಿ ಅಧ್ಯಕ್ಷ ಡಾ.ಬಿ.ಎನ್ ಸುರೇಶ್ ಉದ್ಘಾಟಿಸಿದರು. ಎಂ.ಡಿ & ಚೀಫ್ ಲರ್ನರ್ ಅಟ್ ಎಲ್‌ಎಕ್ಸ್‌ಎಲ್ ಐಡಿಯಾಸ್ ಸೈಯದ್ ಸುಲ್ತಾನ್ ಅಹಮದ್ ಮತ್ತು ಚೀಫ್ ಆಪರೇಟಿಂಗ್ ಆಫೀಸರ್, ಅಜೀಮ್ ಪ್ರೇಮ್‌ಜೀ ಫೌಂಡೇಷನ್ ಎಸ್. ಗಿರಿಧರ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.
    ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲೆಗಳ ಸಿಬಿಎಸ್‌ಸಿ ಸುಮಾರು ೨೨ ಶಾಳೆಗಳ ಒಟ್ಟು ಸುಮಾರು ೧೨೦೦ ಶಿಕ್ಷಕರು ಪಾಲ್ಗೊಂಡಿದ್ದರು.