Saturday, November 25, 2023

ಆಶ್ರಯ, ಆಶೀರ್ವಾದ ನೀಡಿ ನಿರ್ಗಮಿಸಿರುವ ಸ್ವಾಮೀಜಿಗಳ ಸ್ಮರಣೆ ಮುಖ್ಯ : ಶ್ರೀ ಸಂಗಮಾನಂದ ಸ್ವಾಮೀಜಿ

ಭದ್ರಾವತಿ ಸಮೀಪದ ಎಂ.ಸಿ ಹಳ್ಳಿ ಶ್ರೀಕ್ಷೇತ್ರ ಭದ್ರಗಿರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ದವತ್ತೀರು ಸ್ವಾಮೀಜಿಗಳ ೬ನೇ ವರ್ಷದ ಗುರುಪೂಜೆ ಸಮಾರಂಭ ಬೆಂಗಳೂರಿನ ಸರ್ವಧರ್ಮ ಸಮನ್ವಯ ಪೀಠದ ಶ್ರೀ ಸಂಗಮಾನಂದ ಸ್ವಾಮೀಜಿ ಉದ್ಘಾಟಿಸಿದರು.  
    ಭದ್ರಾವತಿ: ಧರ್ಮ, ಜಾತಿ ಬೇಧಭಾವವಿಲ್ಲದೆ ಆಶ್ರಯ, ಆಶೀರ್ವಾದ ನೀಡಿ ನಿರ್ಗಮಿಸಿರುವ ಸ್ವಾಮೀಜಿಗಳ ಸ್ಮರಣೆ ಮುಖ್ಯ ಎಂದು ಬೆಂಗಳೂರಿನ ಸರ್ವಧರ್ಮ ಸಮನ್ವಯ ಪೀಠದ ಶ್ರೀ ಸಂಗಮಾನಂದ ಸ್ವಾಮೀಜಿ ಹೇಳಿದರು.
    ಶ್ರೀಗಳು ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀಕ್ಷೇತ್ರ ಭದ್ರಗಿರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ದವತ್ತೀರು ಸ್ವಾಮೀಜಿಗಳ ೬ನೇ ವರ್ಷದ ಗುರುಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಆಶೀರ್ವಚನ ನೀಡಿದರು.
    ಮನುಷ್ಯರ ಬದುಕು ಸಾರ್ಥಕಗೊಳ್ಳಬೇಕಾದರೆ ಧಾರ್ಮಿಕ ಹಾಗು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಶ್ರೀ ಕ್ಷೇತ್ರ ಭದ್ರಗಿರಿ ಅನೇಕ ಸಾಧು ಸಂತರುಗಳ ಸಂಗಮ ಸ್ಥಳ. ಅನೇಕ ಸಾಧುಗಳು ಇಲ್ಲಿಗೆ ಭೇಟಿ ನೀಡಿದ್ದು, ಇದೊಂದು ಪುಣ್ಯಸ್ಥಳವಾಗಿದೆ ಎಂದರು.
    ನಗರಸಭೆ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ರಾಜ್ಯ ಮಾತ್ರವಲ್ಲದೆ ವಿದೇಶಗಳಿಂದಲೂ ಭಕ್ತರನ್ನು ಸೆಳೆದ ಮಹತ್ವದ ಕ್ಷೇತ್ರ ಭದ್ರಗಿರಿ. ಭಕ್ತರನ್ನು ಸೆಳೆಯುವುದು ಸಲಭವಲ್ಲ. ವಿಶೇಷ ಶಕ್ತಿ ಇದ್ದಾಗ ಮಾತ್ರ ಭಕ್ತರು ಆಕರ್ಷಿತರಾಗಲು ಸಾಧ್ಯ ಎಂದರು.
ಶ್ರೀಮಂತರಿಗೆ ಮಹತ್ವನೀಡಲು ಅನೇಕ ಮಠಗಳಿವೆ. ಆದರೆ ಭದ್ರಗಿರಿ ಆಶ್ರಮವು ಬಡವರಿಗೆ ಆದ್ಯತೆ ನೀಡುವ ಮೂಲಕವೇ ಮನ್ನಣೆ ಪಡೆದಿದೆ. ಈ ಆಶ್ರಮದ ವತಿಯಿಂದ ಬಡವರಿಗೆ ನೆರವಾಗುವಂಥ ಹಲವರು ಸೇವಾ ಕಾರ್ಯಗಳನ್ನು ಮುಂದುವರೆಸಿದೆ. ಈ ಆಶ್ರಮದ ಅಭಿವೃದ್ಧಿಗೆ ತಮ್ಮ ಕುಟುಂಬದವರು ಸದಾ ಸ್ಪಂದಿಸುವುದಾಗಿ ತಿಳಿಸಿದರು.
    ಚಿತ್ರದುರ್ಗ ಬಂಜಾರ ಗುರುಪೀಠದ ಶ್ರೀಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡಿ, ದವತ್ತೀರು ಸ್ವಾಮೀಜಿಗಳ ನಡೆ-ನುಡಿ ಭಕ್ತರಿಗೆ ಆದರ್ಶ. ಭಕ್ತರಲ್ಲಿ ಅಜ್ಞಾನ ದೂರಾಗಿಸಿ, ಜ್ಞಾನವನ್ನು ಸ್ಥಾಪಿಸುವುದೇ ಪ್ರತಿಯೊಬ್ಬ ಸ್ವಾಮೀಜಿಗಳ ಮೂಲ ಕರ್ತವ್ಯ ಎಂದರು.
    ಕುಂಬಾರ ಗುರುಪೀಠದ ಶ್ರೀಕುಂಬಾರ ಗುಂಡಯ್ಯ ಸ್ವಾಮೀಜಿ, ಕೊಲ್ಲೂರಿನ ರಾಘವೇಂದ್ರ,ಲಿಂಗಯ್ಯ ಸ್ವಾಮೀಜಿ, ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಚ್ ಶ್ರೀನಿವಾಸ್ ಅವರ ಪತ್ನಿ ವಾಣಿ, ಎಂ.ಸಿ ಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಂ.ಸಿ ರಾಮೇಗೌಡ, ಉಪಾಧ್ಯಕ್ಷೆ ಅಲಮೇಲಮ್ಮ, ಆಶ್ರಮದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಘೋಷ್ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.
    ವಿದ್ಯಾರ್ಥಿ ಸೃಜನ್ ಪ್ರಾರ್ಥಿಸಿದರು. ಡಾ. ವಿಕ್ರಂ ಸ್ವಾಗತಿಸಿ, ಡಾ. ದಿವ್ಯ ದವತ್ತೀರು ಶ್ರೀಗಳು ನಡೆದುಬಂದ ಹಾದಿಯನ್ನು ಪರಿಚಯಿಸಿದರು. ಮಂಜುನಾಥ್ ನಿರೂಪಿಸಿ, ವಂದಿಸಿದರು.

ಭದ್ರಾವತಿ : ಅರಣ್ಯ ಇಲಾಖೆ ಬೋನಿಗೆ ಸಿಕ್ಕಿ ಬಿದ್ದ ಮತ್ತೊಂದು ಚಿರತೆ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಂಡು ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
    ಭದ್ರಾವತಿ : ಕ್ಷೇತ್ರದಲ್ಲಿ ಇತ್ತೀಚೆಗೆ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು, ಸುಮಾರು ೨ ತಿಂಗಳ ಹಿಂದೆ ಅರಣ್ಯ ಇಲಾಖೆಯ ಬೋನಿಗೆ ಚಿರತೆಯೊಂದು ಸಿಕ್ಕಿ ಬಿದ್ದ ಪ್ರಕರಣ ನಡೆದಿತ್ತು. ಇದೀಗ ಗ್ರಾಮೀಣ ಭಾಗದಲ್ಲಿ ಮತ್ತೊಂದು ಚಿರತೆ ಬೋನಿಗೆ ಸಿಕ್ಕಿ ಬಿದ್ದಿದೆ.
    ತಾಲೂಕಿನ ಕಾರೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಂಡು ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೋನಿಗೆ ಸಿಕ್ಕಿ ಬಿದ್ದ ಚಿರತೆಯನ್ನು ಅರಣ್ಯಕ್ಕೆ ಬಿಡಲಾಗಿದೆ.
    ಇತ್ತೀಚೆಗೆ ಗ್ರಾಮದ ಮನೆಯೊಂದರಲ್ಲಿ ಕಟ್ಟಿ ಹಾಕಲಾಗಿದ್ದ ಸಾಕು ನಾಯಿಯೊಂದರ ಮೇಲೆ ಚಿರತೆ ದಾಳಿ ನಡೆಸಿ ಪರಾರಿಯಾಗಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಪ್ರತ್ಯಕ್ಷವಾದ ಸ್ಥಳದಲ್ಲಿ ಬೋನ್ ಇಟ್ಟಿದ್ದರು. ಈ ನಡುವೆ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಇದೀಗ ಚಿರತೆ ಬೋನ್‌ಗೆ ಸಿಕ್ಕಿ ಬಿದ್ದಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮದ ಮುಖಂಡರು, ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬುವ ಮೂಲಕ ಎಚ್ಚರ ವಹಿಸುವಂತೆ ಮನವಿ ಮಾಡಿದರು.
    ಸುಮಾರು ೨ ತಿಂಗಳ ಹಿಂದೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಮರಿ ಚಿರತೆಯೊಂದು ಸಿಕ್ಕಿ ಬಿದ್ದಿತ್ತು.  

ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ನಾಮಫಲಕ ಅನಾವರಣ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ನಾಮಫಲಕ ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಅನಾವರಣಗೊಳಿಸಿದರು.
    ಭದ್ರಾವತಿ: ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ನಾಮಫಲಕ ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಅನಾವರಣಗೊಳಿಸಿದರು.
    ಕಳೆದ ೨ ವರ್ಷಗಳ ಹಿಂದೆ ದಿವಂಗತ ಲಕ್ಷ್ಮಮ್ಮನವರ ೨ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಆರಂಭಗೊಂಡ ಟ್ರಸ್ಟ್ ಈಗಾಗಲೇ ಕೆಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕೆಂಬ ಉದ್ದೇಶ ಹೊಂದಿದೆ ಎಂದು ಟ್ರಸ್ಟ್ ಪ್ರಮುಖರು, ಪತ್ರಕರ್ತ ಅನಂತಕುಮಾರ್ ಹೇಳಿದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿದ್ದರು. ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಸದಸ್ಯ ಚನ್ನಪ್ಪ, ಪ್ರಮುಖರಾದ ಎಸ್.ಎಸ್ ಭೈರಪ್ಪ, ಟಿ. ರಾಜೇಂದ್ರ, ವೈ. ನಟರಾಜ್, ಪ್ರಕಾಶ್‌ಕಾರಂತ್, ಮರಿಯಪ್ಪ, ಜಯಲಕ್ಷ್ಮೀ, ಎಚ್.ಆರ್ ಮಮತ, ಚಂದ್ರಶೇಖರ್, ಟಿ.ಎಚ್ ಸಂತೋಷ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಲಕ್ಷ್ಮೀ ಪೂಜೆ ನೆರವೇರಿಸಿ ಸಸಿಗಳನ್ನು ವಿತರಿಸಿ ಟ್ರಸ್ಟ್ ಮುಂದಿನ ಕಾರ್ಯಗಳಿಗೆ ಸಹಕಾರ ಕೋರಲಾಯಿತು.

Thursday, November 23, 2023

ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೊನೆಗೊಳಿಸಿಕೊಳ್ಳಲು ಅವಕಾಶ


    ಭದ್ರಾವತಿ : ಶಿವಮೊಗ್ಗ ಜಿಲ್ಲಾ ಸ್ಮಾರ್ಟ್ ಸಿಟಿ ಹಾಗೂ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಕಳುಹಿಸಿದ ನೋಟಿಸ್ ಪ್ರಕರಣಗಳನ್ನು ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ಕೊನೆಗೊಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
    ವಾಹನ ಸವಾರರು ನಗರದ ನ್ಯೂಟೌನ್ ಸಂಚಾರಿ ಠಾಣೆಗೆ ಭೇಟಿ ನೀಡಿ ಹಣ ಪಾವತಿಸಿ ಪ್ರಕರಣ ಮುಕ್ತಾಯ ಮಾಡಿಕೊಳ್ಳಬಹುದಾಗಿರುತ್ತದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಠಾಣಾಧಿಕಾರಿ ಶಾಂತಲ ಕೋರಿದ್ದಾರೆ.  

ವಿವಿಧ ಸೇವಾ ಕಾರ್ಯಗಳು, ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರುಗಿದ ಶ್ರೀ ಸತ್ಯಸಾಯಿಬಾಬಾ ಜನ್ಮದಿನ

ಭದ್ರಾವತಿಯಲ್ಲಿ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಗುರುವಾರ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ೯೮ನೇ ಜನ್ಮದಿನೋತ್ಸವ ಆಚರಿಸಲಾಯಿತು. ನ್ಯೂಟೌನ್ ಭಾಗದ ಪ್ರಮುಖ ರಸ್ತೆಗಳಲ್ಲಿ ಶ್ರೀ ಸತ್ಯ ಸಾಯಿ ಬಾಬಾರವರ ಪಲ್ಲಕ್ಕಿ ಉತ್ಸವ ನಡೆಯಿತು.
    ಭದ್ರಾವತಿ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಗುರುವಾರ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ೯೮ನೇ ಜನ್ಮದಿನೋತ್ಸವ ಆಚರಿಸಲಾಯಿತು.
    ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಓಂಕಾರ, ಜ್ಯೋತಿರ್ಧಾನ, ಸುಪ್ರಭಾತ, ನಗರಸಂಕೀರ್ತನೆ, ಪ್ರಶಾಂತಿ ಧ್ವಜಾರೋಹಣ, ಉಚಿತ ಪಶು ಚಿಕಿತ್ಸಾ ಶಿಬಿರ , ಶ್ರೀ ಸಾಯಿ ಸತ್ಯನಾರಾಯಣ ಪೂಜೆ, ಉಚಿತ ರಕ್ತದಾನ ಶಿಬಿರ, ಶ್ರೀ ಸತ್ಯ ಸಾಯಿ ಬಾಬಾರವರ ಪಲ್ಲಕ್ಕಿ ಉತ್ಸವ, ಶಾಲಾ ಮಕ್ಕಳಿಗೆ ಮಹಾಪ್ರಸಾದ ವಿನಿಯೋಗ (ನಾರಾಯಣ ಸೇವೆ), ಶ್ರೀ ಸತ್ಯ ಸಾಯಿ ಸಹಸ್ರನಾಮಾರ್ಚನೆ, ಮಹಾಮಂಗಳಾರತಿ, ನಾರಾಯಣರಿಗೆ ವಸ್ತ್ರದಾನ ಮತ್ತು ನಾರಾಯಣ ಸೇವೆ ಹಾಗೂ ಭಕ್ತಾಧಿಗಳಿಗೆ ಮಹಾಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
    ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಭಾಕರ ಬೀರಯ್ಯ, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ಸಂಚಾಲಕರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರುಗಳು ಮತ್ತು ಬೋಧಕ, ಬೋಧಕೇತರವರ್ಗ ಹಾಗೂ ವಿದ್ಯಾರ್ಥಿವೃಂದ ಪಾಲ್ಗೊಂಡಿದ್ದರು.

ಪದವೀಧರ-ಶಿಕ್ಷಕರ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ : ತಹಶೀಲ್ದಾರ್ ಕೆ.ಆರ್.ನಾಗರಾಜ್

ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ನೈರುತ್ಯ ಪದವೀಧರ ಹಾಗು ಶಿಕ್ಷಕರ ಕರಡು ಮತದಾರರ ಪಟ್ಟಿ ಕುರಿತು ತಹಸೀಲ್ದಾರ್ ಕೆ.ಆರ್ ನಾಗರಾಜ್ ಗುರುವಾರ ಮಾಹಿತಿ ನೀಡಿದರು.
    ಭದ್ರಾವತಿ: ನೈರುತ್ಯ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಆರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹಾಗು ಆಕ್ಷೇಪಣೆಗಳಿದ್ದಲ್ಲಿ ಡಿ.೯ರೊಳಗಾಗಿ ಸಲ್ಲಿಸುವಂತೆ ತಹಶೀಲ್ದಾರ್ ಕೆ.ಆರ್ ನಾಗರಾಜ್ ತಿಳಿಸಿದರು.
    ಗುರುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನೈರುತ್ಯ ಪದವೀಧರ ಹಾಗು ಶಿಕ್ಷಕರ ಕರಡು ಮತದಾರರ ಪಟ್ಟಿ ಕುರಿತು ಮಾಹಿತಿ ನೀಡಿದರು.
    ಶಿಕ್ಷಕರ ಕ್ಷೇತ್ರದ ಮತದಾನಕ್ಕಾಗಿ ಕಡ್ಡಾಯವಾಗಿ ೩ ವರ್ಷ ಸೇವೆ ಸಲ್ಲಿಸಿರಬೇಕು. ಪ್ರಸ್ತುತ ಮತಕ್ಷೇತ್ರದಲ್ಲಿ ೨೨೫ ಪುರುಷ ಹಾಗು ೧೮೫ ಮಹಿಳಾ ಮತದಾರರು ಸೇರಿದಂತೆ ಒಟ್ಟು ೪೧೦ ಮತದಾರರಿದ್ದಾರೆ. ಪದವೀಧರ ಕ್ಷೇತ್ರದಲ್ಲಿ ೧,೫೦೫ ಪುರುಷ ಹಾಗು ೧,೩೦೭ ಮಹಿಳಾ ಮತದಾರರು, ಇತರೆ ೧ ಸೇರಿದಂತೆ ಒಟ್ಟು ೨೮೧೩ ಮತದಾರರಿದ್ದಾರೆ.  ಕ್ಷೇತ್ರದಲ್ಲಿ ೫ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಹೊಳೆಹೊನ್ನೂರಿನಲ್ಲಿ ೧, ಬಿ.ಆರ್.ಪಿ ೧ ಹಾಗು  ನಗರ ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.
    ಚುನಾವಣೆ ಸಂಬಂಧ ಈಗಾಗಲೇ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಲಾಗಿದೆ. ಇದೀಗ ಮತದಾರರಿಗೆ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ರವಾನಿಸಲಾಗುತ್ತಿದೆ. ಡಿ. ೯ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹಾಗು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.  
    ಉಪ ತಹಶೀಲ್ದಾರ್ ರಾಧಕೃಷ್ಣ ಭಟ್, ಚುನಾವಣಾ ಶಿರಸ್ತೇದಾರ್ ಎನ್.ಎಂ ಬಸವರಾಜ್, ಚುನಾವಣಾ ಶಾಖೆ ಸಿಬ್ಬಂದಿ ರವಿ, ಸೌಜನ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, November 22, 2023

ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ವಿಜಯದಾಸರ ಆರಾಧನೆ

ಅಖಿಲ ಭಾರತ ಮಾಧ್ವ ಮಹಾ ಮಂಡಳಿ ತಾಲೂಕು ಶಾಖೆ ವತಿಯಿಂದ ಬುಧವಾರ ಸುಳಾದಿದಾಸರೆಂದೇ ಖ್ಯಾತರಾದ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಆರಾಧನಾ ಮಹೋತ್ಸವ ಅಂಗವಾಗಿ ನಗರಸಂಕೀರ್ತನೆ ನಡೆಯಿತು.
    ಭದ್ರಾವತಿ : ಅಖಿಲ ಭಾರತ ಮಾಧ್ವ ಮಹಾ ಮಂಡಳಿ ತಾಲೂಕು ಶಾಖೆ ವತಿಯಿಂದ ಬುಧವಾರ ಸುಳಾದಿದಾಸರೆಂದೇ ಖ್ಯಾತರಾದ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಆರಾಧನಾ ಮಹೋತ್ಸವ ಅಂಗವಾಗಿ ನಗರಸಂಕೀರ್ತನೆ ನಡೆಯಿತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪಂಡಿತ್ ಮೃತ್ತಿಕಾ ಗುರುರಾಜಾಚಾರ್ ಅವರಿಂದ ವಿಜಯದಾಸರ ಕೃತಿಗಳ ಕುರಿತು ಪ್ರವಚನ ಜರುಗಿತು.  
    ಮಠದಲ್ಲಿರುವ ಬೃಂದಾವನಗಳಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಅಖಿಲ ಭಾರತ ಮಾಧ್ವ ಮಹಾ ಮಂಡಳಿ ತಾಲೂಕು ಅಧ್ಯಕ್ಷ ಜಯತೀರ್ಥ, ಪ್ರಮುಖರಾದ ವೆಂಕಟೇಶ ರಾವ್, ಗೋಪಾಲಾಚಾರ್, ಶ್ರೀನಿವಾಸಚಾರ್, ರಮಾಕಾಂತ್, ಕಲ್ಲಾಪುರ ರಾಮಚಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.