Saturday, December 23, 2023

ಭದ್ರಾವತಿ:ಸೆಳೆದ ವೈಕುಂಠನಾಥನ ದರ್ಶನ

 


ಭದ್ರಾವತಿ: ಪ್ರತಿವರ್ಷದಂತೆ ಈ ವರ್ಷ ಸಹ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.

     ಬೆಳಗ್ಗೆ ೪.೩೦ರಿಂದಲೇ ವೈಕುಂಠನಾಥನ ದರ್ಶನ ಆರಂಭಗೊಂಡಿದ್ದು, ಈ ಬಾರಿ ಸಹ ಸ್ವಾಮಿಯ ದರ್ಶನ ಭಕ್ತರ ಕಣ್ಮನ ಸೆಳೆಯುತ್ತಿದೆ. ದೇವಾಲಯದ ಪ್ರಧಾನ ಅರ್ಚಕರಾದ ವೇ||ಬ್ರ|| ಶ್ರೀ ರಂಗನಾಥ ಶರ್ಮ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

      ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ಡಿ. ದೇವರಾಜ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ಅನುರಾಧ ಪಟೇಲ್, ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್, ದೇವಾಲಯ ವ್ಯವಸ್ಥಾಪನ ಸಮಿತಿ  ಅಧ್ಯಕ್ಷ ಮಾರುತಿ, ಪದಾಧಿಕಾರಿಗಳಾದ ಆಶಾ ಪುಟ್ಟಸ್ವಾಮಿ, ಗಿರಿನಾಯ್ಡು, ವಿಶ್ವೇಶ್ವರಗಾಯಕ್ವಾಡ್, ಉಪ ತಹಸೀಲ್ದಾರ್ ಮಂಜಾನಾಯ್ಕ, ಎ.ಟಿ.ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, December 22, 2023

ವಿವಿಧ ದೇವಸ್ಥಾನಗಳಲ್ಲಿ ವೈಕುಂಠನಾಥನ ದರ್ಶನಕ್ಕೆ ಸಕಲ ಸಿದ್ದತೆ

ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಸ್ಥಾನ ಸೇರಿದಂತೆ ವಿವಿಧೆಡೆ ದೇವಸ್ಥಾನಗಳಲ್ಲಿ ಶನಿವಾರ ವೈಕುಂಠ ಏಕಾದಶಿ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಮುಜರಾಯಿ ಅಧಿಕಾರಿಯಾಗಿರುವ ತಹಸೀಲ್ದಾರ್ ಕೆ.ಆರ್ ನಾಗರಾಜು ಶುಕ್ರವಾರ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು.
    ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಸ್ಥಾನ ಸೇರಿದಂತೆ ವಿವಿಧೆಡೆ ದೇವಸ್ಥಾನಗಳಲ್ಲಿ ಶನಿವಾರ ವೈಕುಂಠ ಏಕಾದಶಿ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
    ಬಹುತೇಕ ದೇವಸ್ಥಾನಗಳಲ್ಲಿ ಬೆಳಿಗ್ಗೆ ೪.೩೦ರಿಂದಲೇ ಶ್ರೀ ವೈಕುಂಠನಾಥನ ದರ್ಶನ ಆರಂಭಗೊಳ್ಳಲಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಿರೀಕ್ಷೆಗೂ ಮೀರಿ ಭಕ್ತರು ಪಾಲ್ಗೊಳ್ಳುತ್ತಿದ್ದು, ಶುಕ್ರವಾರ ಮುಜರಾಯಿ ಅಧಿಕಾರಿಯಾಗಿರುವ ತಹಸೀಲ್ದಾರ್ ಕೆ.ಆರ್ ನಾಗರಾಜು ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು.
    ಭಕ್ತರಿಗೆ ವೈಕುಂಠನಾಥನ ದರ್ಶನಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಯಶಸ್ವಿಗೊಳಿಸಬೇಕೆಂದು ಕೋರಿದರು.
    ಕ್ಷೇತ್ರ ಶಿಕ್ಷಣಧಿಕಾರಿ ಎ.ಕೆ ನಾಗೇಂದ್ರಪ್ಪ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಜಿ ಮಾರುತಿ, ಸಹಾಯಕ ಅರ್ಚಕ ಎಸ್. ಶ್ರೀನಿವಾಸನ್, ಮುಜರಾಯಿ ಇಲಾಖೆ ಸಿಬ್ಬಂದಿ ಎ.ಟಿ ಬಸವರಾಜ್, ಮುಖಂಡರಾದ ತಮ್ಮಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


    ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ೫ ಗಂಟೆಯಿಂದ ವೈಕುಂಠನಾಥ ದರ್ಶನ ನಡೆಯಲಿದೆ. ವಿಶೇಷವಾಗಿ ಭಕ್ತರಿಗೆ ಲಾಡು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.
    ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ತಾಲೂಕು ವೈಷ್ಣವ ಪರಿಷತ್ ವತಿಯಿಂದ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೬.೩೦ ರಿಂದ ರಾತ್ರಿ ೧೦.೩೦ರ ವರೆಗೆ ವೈಕುಂಠನಾಥ ದರ್ಶನ ಹಾಗು ಸಂಜೆ ೭ ಗಂಟೆ ದೀಪೋತ್ಸವ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶ್ರೀಕ್ಷೇತ್ರದ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ಕೋರಿದ್ದಾರೆ.
---------------------------------------------------
`ಕೊರೋನಾ ವೈರಸ್ ಪುನಃ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಹಚ್ಚಿನ ಜಾಗೃತಿ ವಹಿಸಬೇಕಾಗಿದೆ. ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ವೈಕುಂಠ ಏಕಾದಶಿ ಯಶಸ್ವಿಗೊಳಿಸಲು ಸಹಕರಿಸಬೇಕು.' 
                                                                   - ಕೆ.ಆರ್ ನಾಗರಾಜು, ಮುಜರಾಯಿ ಅಧಿಕಾರಿ, ತಹಸೀಲ್ದಾರ್, ಭದ್ರಾವತಿ.
-------------------------------------------------------------
    ಬಿ.ಎಚ್ ರಸ್ತೆ, ಹುತ್ತಾಕಾಲೋನಿ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ವಿಜೃಂಭಣೆಯಿಂದ ವೈಕುಂಠ ಏಕಾದಶಿ ಆಚರಿಸಲಾಗುತ್ತಿದ್ದು, ಭಕ್ತರಿಗೆ ವೈಕುಂಠನಾಥನ ದರ್ಶನ ಪಡೆಯಲು ಸಕಲ ಸಿದ್ದತೆಗಳನ್ನು ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿದೆ.

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ

ಭದ್ರಾ ನದಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಬಿತ್ತನೆ ಕಾರ್ಯಕ್ಕೆ ಚಾಲನೆ

ಭದ್ರಾವತಿಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುಕ್ರವಾರ ಭದ್ರಾ ನದಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ ಕಾರ್ಯ ನಡೆಯಿತು. ಶಾಸಕ ಬಿ.ಕೆ. ಸಂಗಮೇಶ್ವರ್ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.
    ಭದ್ರಾವತಿ : ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುಕ್ರವಾರ ಭದ್ರಾ ನದಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ ಕಾರ್ಯ ನಡೆಯಿತು.
    ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಹಿಂಭಾಗ ಹೊಸಸೇತುವೆ ಬಳಿ ಭದ್ರಾ ನದಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮೀನುಮರಿಗಳ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.
    ಬೈಪಾಸ್ ರಸ್ತೆ ಮೊಸರಹಳ್ಳಿ ಬಳಿ ಹೊಸಸೇತುವೆ ಸಮೀಪ ಹಾಗು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಹಿಂಭಾಗ ಹೊಸಸೇತುವೆ ಬಳಿ ಭದ್ರಾ ನದಿಯಲ್ಲಿ ಉತ್ತಮ ತಳಿಯ ಕಾಟ್ಲ ಸುಮಾರು ೭೦-೮೦ ಎಂ.ಎಂ ಬಲಿತ ಮರಿಗಳನ್ನು ಬಿತ್ತನೆ ಮಾಡಲಾಗಿದೆ. ಈ ಮರಿಗಳು ಸುಮಾರು ೩ ರಿಂದ ೪ ತಿಂಗಳ ಅವಧಿಯಲ್ಲಿ ಬೆಳವಣಿಗೆ ಹೊಂದಲಿದ್ದು, ಮೀನುಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮೀನುಮರಿಗಳು ಸುಮಾರು ೭-೮ ತಿಂಗಳ ಅವಧಿಯಲ್ಲಿ ಸುಮಾರು ೧೦ ಕೆ.ಜಿ ತೂಕದಷ್ಟು ಬೆಳವಣಿಗೆ ಹೊಂದಲಿವೆ.  
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಶರಥ ಗಿರಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶಿವಕುಮಾರ್, ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಇ. ಮೋಹನ್‌ಕುಮಾರ್, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಕೆ. ಮುರುಗನ್, ಉಪಾಧ್ಯಕ್ಷ ಟಿ.ಎಸ್ ಮೌನೇಶ್ವರ್, ನಿರ್ದೇಶಕರಾದ ಸುರೇಶ್, ಸಿ. ವೀರಪ್ಪನ್, ನಾಗರಾಜ್, ಮುರುಗೇಶ್, ನಾಸೀರ್ ಖಾನ್, ಬಿ.ಎನ್ ಗೋಪಿ, ಕಲ್ಪನ, ಕಾರ್ಯದರ್ಶಿ ಬಿ.ಎನ್ ರೂಪಾದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುಕ್ರವಾರ ಭದ್ರಾ ನದಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗು ಸಹಕರಿಸಿದ ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು , ಭದ್ರಾ ಮೀನುಗಾರರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು.  

ಉಪಾಧ್ಯಕ್ಷರಾಗಿ ಎಲ್. ದೇವರಾಜ್

ಎಲ್. ದೇವರಾಜ್
    ಭದ್ರಾವತಿ : ನಗರದ ಅಪ್ಪರ್‌ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎಲ್. ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದೇವರಾಜ್ ಅವರು ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಹಲವಾರು ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿದ್ದರು. ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಇವರನ್ನು ಅಭಿನಂದಿಸಿದ್ದಾರೆ.

ಡಿ.೨೩-೨೪ರಂದು ಯರೇಹಳ್ಳಿ ಶಾಲೆ ಅಮೃತಮಹೋತ್ಸವ

ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ

ಭದ್ರಾವತಿ ತಾಲ್ಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಡಿ.೨೩ ಮತ್ತು ೨೪ರಂದು ಎರಡು ದಿನಗಳ ಕಾಲ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಹಮ್ನಿಕೊಂಡಿರುವುದಾಗಿ ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ತಿಳಿಸಿದರು.
    ಭದ್ರಾವತಿ: ತಾಲೂಕಿನ ಯರೇಹಳ್ಳಿ ಗ್ರಾಮದ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿ ಶತಮಾನದ ಕಡೆಗೆ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಡಿ.೨೩ ಮತ್ತು ೨೪ರಂದು ಎರಡು ದಿನಗಳ ಕಾಲ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಆಯೋಜಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ೩ ಮುಖ್ಯ ಸಮಿತಿಗಳು ಹಾಗು ೧೧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.
    ಡಿ.೨೩ರಂದು ಬೆಳಗ್ಗೆ ೯.೩೦ಕ್ಕೆ ಬಸಾಪುರದಿಂದ ಕೆಂಚಮ್ಮ, ಕರಿಯಮ್ಮ ದೇವಾಲಯದ ಮೂಲಕ ಕಾರ್ಯಕ್ರಮದ ಸ್ಥಳದವರೆಗೆ ಕಲಾಮೇಳದೊಂದಿಗೆ ಮೆರವಣಿಗೆ ನಡೆಯಲಿದೆ. ೧೧.೩೦ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ.ವೈ ರಾಘವೇಂದ್ರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ.


ಭದ್ರಾವತಿ ತಾಲ್ಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
    ಮುಖ್ಯ ಅತಿಥಿಗಳಾಗಿ ಶಾಸಕರಾದ ಶಾರದಾ ಪೂರ್‍ಯಾನಾಯ್ಕ, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಡಿ.ಎಸ್ ಅರುಣ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಪಾಲ್ಗೊಳ್ಳಲಿದ್ದಾರೆ.
    ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷರಾದ ಕೆ. ವಿಠಲರಾವ್, ಆನಂದಪ್ಪ, ಅಧ್ಯಕ್ಷ ಬಿ. ರಮೇಶ್, ಅಮೃತ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೈ.ಕೆ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರುವರು. ಮಧ್ಯಾಹ್ನ ೩ ರಿಂದ ೫ರವರೆಗೆ ಚಿಂತನಗೋಷ್ಠಿ, ಸಂಜೆ ೫ ರಿಂದ ಸಾಂಸ್ಕೃತಿಕ ಸಂಭ್ರಮ ಸಂಜೆ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದರು.
    ಡಿ.೨೪ರಂದು ಬೆಳಿಗ್ಗೆ ೧೦ಕ್ಕೆ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ, ಮಧ್ಯಾಹ್ನ ೨ಕ್ಕೆ ಕವಿಗೋಷ್ಠಿ, ೩ ರಿಂದ ೪ರವರೆಗೆ ಗೀತಗಾಯನ ಕಾರ್ಯಕ್ರಮ, ೪ ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

Thursday, December 21, 2023

ಅಯೋಧ್ಯೆ `ಶ್ರೀರಾಮ ಮಂತ್ರಾಕ್ಷತೆ' : ಅದ್ದೂರಿ ಸ್ವಾಗತ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಅಂಗವಾಗಿ ಗುರುವಾರ ಸಂಜೆ ಭದ್ರಾವತಿ ನಗರಕ್ಕೆ ಆಗಮಿಸಿದ `ಶ್ರೀರಾಮ ಮಂತ್ರಾಕ್ಷತೆ'ಗೆ ಅದ್ದೂರಿ ಸ್ವಾಗತ ಕೋರಲಾಯಿತು.
    ಭದ್ರಾವತಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಅಂಗವಾಗಿ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ `ಶ್ರೀರಾಮ ಮಂತ್ರಾಕ್ಷತೆ'ಗೆ ಅದ್ದೂರಿ ಸ್ವಾಗತ ಕೋರಲಾಯಿತು.
    ಬಿ.ಎಚ್ ರಸ್ತೆ ಹುತ್ತಾ ಕಾಲೋನಿ ಬಸ್ ನಿಲ್ದಾಣ ಸಮೀಪ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ `ಶ್ರೀರಾಮ ಮಂತ್ರಾಕ್ಷತೆ'ಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.
    ಮೆರವಣಿಗೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದವರೆಗೂ ಸಾಗಿತು. ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು.
    ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಶ್ರೀರಾಮ ಸೇವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯತನ ವಹಿಸದಿರಿ, ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ : ಡಾ. ಸೆಲ್ವಮಣಿ

ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
    ಭದ್ರಾವತಿ: ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕುಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯತನವಹಿಸಬಾರದು. ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಎಚ್ಚರಿಸಿದರು.
    ಅವರು ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
    ನಗರಸಭಾ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಹಕ್ಕುಪತ್ರ ವಿತರಣೆ ಶಾಸಕರ ಕನಸಾಗಿದ್ದು, ವಿಳಂಬದಿಂದ ಹಿನ್ನಡೆಯಾಗಿದೆ. ಹಕ್ಕುಪತ್ರ ನೀಡಲು ಎರಡು ಸಭೆಗಳನ್ನು ನಡೆಸಿದರೂ ಇದುವರೆಗೂ ವಿತರಣೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ವಿಷಾದ ವ್ಯಕ್ತಪಡಿಸಿದರು.  
    ಇದಕ್ಕೆ ಪ್ರತಿಕ್ರಿಯಿಸಿದ ಡಾ. ಸೆಲ್ವಮಣಿ, ಭದ್ರಾವತಿ ತಾಲೂಕಿನ ಅಭಿವೃದ್ಧಿಗಳ ಪರಿಶೀಲನೆಗಾಗಿ ಪತ್ಯೇಕವಾಗಿ ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ್ ಅವರನ್ನು ನೇಮಿಸಲಾಗಿದೆ. ಪ್ರತಿದಿನ ಪರಿಶೀಲನೆ ನಡೆಸಿ ವಿವರ ನೀಡಲಿದ್ದಾರೆ. ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಮುಂದಿನ ತಿಂಗಳು ಜ.೩ ಅಥವಾ ೪ರಂದು ಪೂರ್ಣ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಸಭೆ ಅಧ್ಯಕ್ಷತೆವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ನಗರೋತ್ಥಾನ ಯೋಜನೆ ಕಾಮಗಾರಿಗಳು ಶೇ.೪೮ರಷ್ಟು ಪೂರ್ಣಗೊಳ್ಳಬೇಕಿತ್ತು. ಆದರೆ ಇದುವರೆಗೂ ಶೇ.೬ರಷ್ಟು ಮಾತ್ರ ಪೂರ್ಣಗೊಂಡಿವೆ. ಯುಜಿಡಿ ಗ್ರಾಮಗಾರಿ ಶೇ.೪೦ರಷ್ಟು ಬಾಕಿ ಉಳಿದಿದ್ದು, ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ವಿಳಂಬವಾಗಿವೆ. ೨೨ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿ(ಪಿಡಿಓ)ಗಳ ಖಾತೆಗಳಲ್ಲಿ ಎಷ್ಟು ಹಣವಿದೆ, ಯಾವ ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಪ್ರಗತಿಯಲ್ಲಿವೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕೋರಿದರು.
    ಈ ನಡುವೆ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದವು. ಅಭಿವೃದ್ಧಿ ಕಾರ್ಯಗಳ ಕುರಿತು ಯಾವಾಗ ಕೇಳಿದರೂ ಕೋರ್ಟ್‌ಗೆ ತೆರಳಿದ್ದೇವೆ, ಡಿಸಿ ಕಚೇರಿಗೆ ತೆರಳಿದ್ದೇವೆ, ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದೇವೆ ಅನ್ನುತ್ತಾರೆ. ಉಳಿದಂತೆ ೪ ದಿನ ರಜೆ, ೨ ದಿನ ವಿಶೇಷ ರಜೆಗಳು ಕಳೆದರೆ ಇವರು ಜನರ ಕೆಲಸಮಾಡುವುದು ಯಾವಾಗ ಎಂದು ಪ್ರಶ್ನಿಸಿದರು.
    ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಾ. ಸೆಲ್ವಮಣಿ, ಎಲ್ಲಾ ಇಲಾಖೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
    ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಲೋಕಂಡೆ ಸ್ನೇಹಲ್ ಸುಧಾಕರ್, ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ  ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಸ್ ಚೆನ್ನಪ್ಪನವರ್, ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್, ಸದಸ್ಯರಾದ
    ವಿ. ಕದಿರೇಶ್, ಬಿ.ಟಿ ನಾಗರಾಜ್, ಲತಾಚಂದ್ರಶೇಖರ್, ಜಾರ್ಜ್, ಕಾಂತರಾಜ್, ಶ್ರೇಯಸ್, ಮಂಜುನಾಥ್  ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.