Sunday, October 6, 2024

ಜ್ಞಾನದೀಪಿಕಾ ಶಾಲೆಯ ಬಾಲಕಿಯರು ವಿಭಾಗಮಟ್ಟಕ್ಕೆ ಆಯ್ಕೆ


ಭದ್ರಾವತಿ ತಾಲೂಕಿನ ಯರೇಹಳ್ಳಿಯ ಜ್ಞಾನ ದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಶನಿವಾರ ಜರುಗಿದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೪ ವರ್ಷದೊಳಗಿನ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕಿನ ಯರೇಹಳ್ಳಿಯ ಜ್ಞಾನ ದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಶನಿವಾರ ಜರುಗಿದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೪ ವರ್ಷದೊಳಗಿನ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
    ಸಿ. ಅರ್ಪಿತ ೧೦೦ ಮೀ. ಓಟದಲ್ಲಿ ಪ್ರಥಮ, ೬೦೦ ಮೀ. ತೃತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ(ಆಡಳಿತ) ಎಸ್.ಆರ್ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುಳಾ ರಾಜಶೇಖರ್. ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು, ತರಬೇತುದಾರ ಸುನಿಲ್ ರಾವ್ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 

Saturday, October 5, 2024

ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಅಮ್ಮನವರಿಗೆ ನವದುರ್ಗಿಯರ ವಿಶೇಷ ಅಲಂಕಾರ

ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಭದ್ರಾ ನದಿ ದಡದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ನವದುರ್ಗಿಯರ ವಿಶೇಷ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದೆ. ಶನಿವಾರ ಧನ್ವಂತರಿ ಮಹಾವಿಷ್ಣು ಅಲಂಕಾರ ಕೈಗೊಳ್ಳಲಾಗಿತ್ತು. 
    ಭದ್ರಾವತಿ : ನಗರದ ಹೊಸಸೇತುವೆ ರಸ್ತೆಯ ಭದ್ರಾ ನದಿ ದಡದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ನವದುರ್ಗಿಯರ ವಿಶೇಷ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದೆ. 
    ಪ್ರತಿ ದಿನ ಸಂಜೆ ಅಮ್ಮನವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಅನ್ನಸಂತರ್ಪಣೆ ನೆರವೇರಿಸಿಕೊಂಡು ಬರಲಾಗುತ್ತಿದೆ. 
ಈ ಬಾರಿ ಬನಶಂಕರಿ ಅಮ್ಮನವರಿಗೆ ಮೊದಲ ದಿನ ಪುಷ್ಪಾಲಂಕಾರ, ಎರಡನೇ ದಿನ ಸ್ಕಂದ ಮಾತಾ ಅಲಂಕಾರ ಹಾಗು ಮೂರನೇ ದಿನ ಧನ್ವಂತರಿ ಮಹಾವಿಷ್ಣು ಅಲಂಕಾರ ಕೈಗೊಳ್ಳಲಾಗಿತ್ತು. 
    ದೇವಸ್ಥಾನ ಸೇವಾ ಸಮಿತಿ ಹಾಗು ದೇವಾಂಗ ಸಮಾಜದ ಪ್ರಮುಖರು, ನಗರದ ದಾನಿಗಳು, ಸೇವಾಕರ್ತರು ಹಾಗು ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಅಮ್ಮನವರ ಅಲಂಕಾರ ಕಣ್ತುಂಬಿಕೊಳ್ಳುತ್ತಿದ್ದಾರೆ. 

ಬನ್ನಿ ಮುಡಿಯುವ ಖಡ್ಗಕ್ಕೆ ತಹಸೀಲ್ದಾರ್ ವಿಶೇಷ ಪೂಜೆ

ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಭದ್ರಾವತಿ ಹಳೇನಗರದ ಶ್ರೀ ಕಾಳಿಕಾ ದೇವಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ತಾಲೂಕು ದಂಡಾಧಿಕಾರಿ ಕೆ.ಆರ್ ನಾಗರಾಜು ಬನ್ನಿ ಮುಡಿಯಲು ಬಳಸುವ ಖಡ್ಗಕ್ಕೆ ಪೂಜೆ ಸಲ್ಲಿಸಿದರು. 
    ಭದ್ರಾವತಿ : ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಳೇನಗರದ ಶ್ರೀ ಕಾಳಿಕಾ ದೇವಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ತಾಲೂಕು ದಂಡಾಧಿಕಾರಿ ಕೆ.ಆರ್ ನಾಗರಾಜು ಬನ್ನಿ ಮುಡಿಯಲು ಬಳಸುವ ಖಡ್ಗಕ್ಕೆ ಪೂಜೆ ಸಲ್ಲಿಸಿದರು. 
    ನಗರಸಭೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನಾಡಹಬ್ಬ ದಸರಾ ಆಚರಣೆ ಅದ್ದೂರಿಯಾಗಿ ನಡೆಯುತ್ತಿದ್ದು, ಹಳೇನಗರದ ಕನಕಮಂಟಪ ಮೈದಾನದಲ್ಲಿ ಅ.೧೨ರಂದು ನಡೆಯುವ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ತಹಸೀಲ್ದಾರ್‌ರವರು ಬನ್ನಿ ಮುಡಿಯುತ್ತಿದ್ದಾರೆ. ನಂತರ ಸಿಡಿಮದ್ದು ಪ್ರದರ್ಶನ ಹಾಗು ರಾವಣ ಸಂಹಾರದೊಂದಿಗೆ ಹಬ್ಬ ಸಂಪನ್ನಗೊಳ್ಳಲಿದೆ. 
    ಬನ್ನಿ ಮುಡಿಯಲು ಶ್ರೀ ಕಾಳಿಕಾ ದೇವಿ ಖಡ್ಗ ಬಳಸುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ದಸರಾ ಆಚರಣೆ ಮೊದಲ ದಿನದಂದು ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 
    ಉಪತಹಸೀಲ್ದಾರ್ ಮಂಜಾನಾಯ್ಕ, ಕಂದಾಯ ನಿರೀಕ್ಷಕ ಪ್ರಶಾಂತ್ ಹಾಗು ಕಾಳಿಕಾ ದೇವಿ ದೇವಸ್ಥಾನದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ : ಎಂ. ಮಣಿ ಎಎನ್‌ಎಸ್

ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ, ವಿಮುಖರಾಗದಿರಿ

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾ ಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ಸರ್. ವಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡ ಮೊದಲ ಬಹುಮಾನ ಪಡೆದುಕೊಂಡಿತು. ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಸೇರಿದಂತೆ ಇನ್ನಿತರರು ಬಹುಮಾನಗಳನ್ನು ವಿತರಿಸಿದರು. 
    ಭದ್ರಾವತಿ: ಕ್ಷೇತ್ರದಲ್ಲಿರುವ ಕ್ರೀಡಾಪಟುಗಳಿಗೆ ಶಾಸಕರು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಅಲ್ಲದೆ ನಾನು ಸಹ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಆರ್ಥಿಕವಾಗಿ ನೆರವು ನೀಡುತ್ತೇನೆ ಎಂದು ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಭರವಸೆ ನೀಡಿದರು. 
    ಅವರು ಶನಿವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾ ಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. 
    ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ. ಪ್ರಸ್ತುತ ನಾವುಗಳು ಕ್ರೀಡೆಗಳಿಂದ ವಂಚಿತರಾದ್ದಲ್ಲಿ ಭವಿಷ್ಯದಲ್ಲಿ ಮತ್ತೊಮ್ಮೆ ಅವಕಾಶಗಳು ಸಿಗುವುದಿಲ್ಲ. ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜೊತೆಗೆ ದೈಹಿಕ ಹಾಗು ಮಾನಸಿಕವಾಗಿ ಬೆಳವಣಿಗೆ ಹೊಂದಬಹುದು. ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ತಗಲುವ ಸಂಪೂರ್ಣ ವೆಚ್ಚ ನಾನು ಭರಿಸಲು ಸಿದ್ದವಾಗಿದ್ದೇನೆ. ಈ ಹಿನ್ನಲೆಯಲ್ಲಿ ಯಾರು ಸಹ ಕ್ರೀಡೆಗಳಿಂದ ವಿಮುಖರಾಗಬಾರದು ಎಂದರು. 
     ಸರ್. ಮಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡಕ್ಕೆ ಮೊದಲ ಬಹುಮಾನ: 
    ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ಸರ್. ವಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡ ಮೊದಲ ಬಹುಮಾನ ಪಡೆದುಕೊಂಡಿದೆ. ಕೊನೆಯ ಅಂತಿಮ ಪಂದ್ಯದಲ್ಲಿ ಶಿವಮೊಗ್ಗ ಮಾಚೇನಹಳ್ಳಿ ಮಲ್ನಾಡ್ ಕ್ರಿಕೆಟರ್‍ಸ್ ತಂಡದ ವಿರುದ್ಧ ಜಯ ಸಾಧಿಸಿ ೨೦ ಸಾವಿರ ರು. ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ತನ್ನದಾಗಿಸಿಕೊಂಡಿತು. ಉಳಿದಂತೆ ದ್ವಿತೀಯ ಸ್ಥಾನ ಪಡೆದ ಮಲ್ನಾಡ್ ಕ್ರಿಕೆಟರ್‍ಸ್ ತಂಡ ೧೦ ಸಾವಿರ ರು. ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ಪಡೆದುಕೊಂಡಿತು. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಬಹುಮಾನಗಳನ್ನು ವಿತರಿಸಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ನಾಡಹಬ್ಬ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಯುವ ಮುಖಂಡ ವೈ. ನಟರಾಜ್, ಶ್ರೀನಿವಾಸ್(ಪೋಟೋ ಗ್ರಾಫರ್) ಸೇರಿದಂತೆ ನಗರಸಭೆ ಹಾಲಿ ಮತ್ತು ಮಾಜಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Friday, October 4, 2024

ಕ್ರೀಡಾಪಟುಗಳು ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ : ಎಂ. ಮಣಿ ಎಎನ್‌ಎಸ್

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಕೂಟ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟದಲ್ಲಿ ಮೊದಲ ದಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಮೊದಲ ಪಂದ್ಯ ನಗರಸಭೆ ನೀರು ಸರಬರಾಜು ವಿಭಾಗ ಹಾಗು ಸರ್. ಮಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡಗಳ ನಡುವೆ ನಡೆಯಿತು.
    ಭದ್ರಾವತಿ: ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟಕ್ಕೆ ಶುಕ್ರವಾರ ಬೆಳಿಗ್ಗೆ ಅಂತರಾಷ್ಟ್ರೀಯ ಕ್ರೀಡಾಪಟು ಸಿ.ಪಿ.ಆರ್ ಸುಧೀರ್ ಕುಮಾರ್ ಕ್ರೀಡಾ ಜ್ಯೋತಿ ತರುವ ಮೂಲಕ ಉದ್ಘಾಟಿಸಿದರು. 
    ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಕ್ರೀಡಾಪಟುಗಳು ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು. ತೀರ್ಪುಗಾರರು ನೀಡುವ ತೀರ್ಪಿಗೆ ತಲೆಬಾಗಬೇಕು ಎಂದರು. 
    ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್ ಮಾತನಾಡಿ, ನಾಡಹಬ್ಬ ದಸರಾ ಆಚರಣೆಯಲ್ಲಿ ಕ್ರೀಡಾ ಕೂಟವೇ ಒಂದು ವಿಶೇಷತೆಯಾಗಿದೆ. ಪ್ರತಿ ವರ್ಷ ಕ್ರೀಡಾಕೂಟದ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು. 
    ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್ ಸೇರಿದಂತೆ ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ನಗರಸಭೆ ಸದಸ್ಯರು ಮತ್ತು ವ್ಯವಸ್ಥಾಪಕಿ ಸುನಿತಾ ಕುಮಾರಿ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಹಾಗು ತಾಲೂಕು ಅಧ್ಯಕ್ಷ ಚೇತನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಮೊದಲ ದಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಮೊದಲ ಪಂದ್ಯ ನಗರಸಭೆ ನೀರು ಸರಬರಾಜು ವಿಭಾಗ ಹಾಗು ಸರ್. ಮಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡಗಳ ನಡುವೆ ನಡೆಯಿತು.
 

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಕೂಟ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟಕ್ಕೆ ಶುಕ್ರವಾರ ಬೆಳಿಗ್ಗೆ ಅಂತರಾಷ್ಟ್ರೀಯ ಕ್ರೀಡಾಪಟು ಸಿ.ಪಿ.ಆರ್ ಸುಧೀರ್ ಕುಮಾರ್ ಕ್ರೀಡಾ ಜ್ಯೋತಿ ತರುವ ಮೂಲಕ ಉದ್ಘಾಟಿಸಿದರು. 

ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ : ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೩೨ರ ಫಿಲ್ಟರ್‌ಶೆಡ್ ನಾಗರಿಕರಿಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಸಮುದಾಯ ಭವನ ನಿರ್ಮಿಸಿದ್ದು, ಇವರುಗಳ ವಿರುದ್ಧ  ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. 
    ಭದ್ರಾವತಿ :  ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೩೨ರ ಫಿಲ್ಟರ್‌ಶೆಡ್ ನಾಗರಿಕರಿಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಸಮುದಾಯ ಭವನ ನಿರ್ಮಿಸಿದ್ದು, ಇವರುಗಳ ವಿರುದ್ಧ  ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. 
    ಫಿಲ್ಟರ್‌ಶೆಡ್ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಮುಂಭಾಗ ೨೫*೭೫ ಆಳತೆ ಜಾಗವನ್ನು ಇಲ್ಲಿನ ನಾಗರಿಕರು ಜಾತ್ರೆ ಹಬ್ಬ ಹರಿದಿನಗಳಲ್ಲಿ ಉಪಯೋಗಿಸಿಕೊಳ್ಳಲು ಮೀಸಲಿಟ್ಟಿದ್ದು, ಈ ಜಾಗದಲ್ಲಿ ಫಿಲ್ಟರ್‌ಶೆಡ್‌ಗೆ ಸಂಬಂಧವೇ ಇಲ್ಲದ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕೆಲವು ನಗರಸಭೆ ಅಧಿಕಾರಿಗಳ ಸಹಕಾರದಿಂದ ಲೋಕಸಭೆ, ವಿಧಾನಸಭೆ ಹಾಗು ವಿಧಾನ ಪರಿಷತ್ ಸದಸ್ಯರ, ಚುನಾಯಿತ ಪ್ರತಿನಿಧಿಗಳ ಅನುದಾನದ ಜೊತೆಗೆ ನಾರ್ವಜನಿಕರಿಂದಲೂ ಸಹ ಲಕ್ಷಾಂತರ ರು. ಹಣ ವಡೆದುಕೊಂಡು ದುರುದ್ದೇಶದಿಂದ ಆಕ್ರಮವಾಗಿ ಸಮುದಾಯ ಭವನದ ರೀತಿ ಕಟ್ಟಡವನ್ನು ನಿರ್ಮಾಣ ಮಾಡಿ ಖಾಸಗಿ ಟ್ರಸ್ಟ್ ರಚನೆ ಮಾಡಿಕೊಂಡಿದ್ದಾರೆ. ಸಮುದಾಯ ಭವನದ ಮುಖಾಂತರ ಬರುವ ಆದಾಯದ ಮೂಲಗಳಾದ ಸೀರಿಯಲ್ ಸೆಟ್ ದೀಪಾಲಂಕಾರ, ಅಡುಗೆ ಪಾತ್ರೆ ಸಾಮಾನುಗಳ ಬಾಡಿಗೆ, ಹೂವಿನ ಅಲಂಕಾರ, ಮೈಕ್ ಇತ್ಯಾದಿ ಆದಾಯದ ಮೂಲಗಳನ್ನು ಖಾಸಗಿ ಟ್ರಸ್ಟ್ ಮಾಡಿರುವವರೇ ವಹಿಸಿಕೊಂಡು ಹಣ ಮಾಡುವ ದಂಧೆಯನ್ನು ಮಾಡಿಕೊಂಡಿದ್ದಾರೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂದರು ಆರೋಪಿಸಿದರು. 
    ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಈ ಆರೋಪ ಸತ್ಯವಾಗಿದ್ದು, ಈ ಹಿನ್ನಲೆಯಲ್ಲಿ ೨೦೨೦ ರಿಂದ ನಿರಂತರವಾಗಿ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ ಅಕ್ರಮವಾಗಿ ಸಮುದಾಯ ಭವನ ನಿರ್ಮಿಸಿರುವವರ ವಿರುದ್ಧ ಟ್ರಸ್ಟ್‌ನ್ನು ವಜಾ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ, ಉಪವಿಭಾಗಾಧಿಕಾರಿಗಳಿಗೆ, ತಹಸೀಲ್ದಾರ್, ನಗರಸಭೆ ಪೌರಾಯುಕ್ತರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಸಮುದಾಯ ಭವನವನ್ನು ನಗರಸಭೆ ವ್ಯಾಪ್ತಿಗೊಳವಡಿಸಿಕೊಂಡು ಫಿಲ್ಟರ್‌ಶೆಡ್ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕು. ಜೊತೆಗೆ ಅಕ್ರಮದಲ್ಲಿ ಭಾಗಿಯಾಗಿರುವ ನಗರಸಭೆ ಅಧಿಕಾರಿಗಳು ಹಾಗೂ ಅಕ್ರಮವಾಗಿ ಟ್ರಸ್ಟ್ ರಚಿಸಿಕೊಂಡು ಸಮುದಾಯ ಭವನವನ್ನು ನಿರ್ಮಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ತೆಗೆದುಕೊಂಡು ಸಮುದಾಯ ಭವನದ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು. ಅಲ್ಲದೆ ನಗರಸಭೆ ಅಧಿಕಾರಿಗಳು ಸಮುದಾಯ ಭವನಕ್ಕೆ ಬೀಗ ಹಾಕುವವರೆಗೂ ಶಾಂತಿಯುತವಾಗಿ ಅನಿರ್ಧಿಷ್ಟಾವಧಿ ಧರಣ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದರು. 
    ಸ್ಥಳೀಯ ಪ್ರಮುಖರಾದ ಬಿ.ಕೆ ಶಶಿಕುಮಾರ್ ಗೌಡ, ಸಿದ್ದಮ್ಮ, ಇಂದ್ರಮ್ಮ, ಜಯಮ್ಮ, ಮಹಾಲಕ್ಷ್ಮಿ, ಮಂಜಮ್ಮ, ಲಕ್ಷ್ಮಮ್ಮ, ಭಾಗ್ಯಮ್ಮ, ಸಣ್ಣಮ್ಮ, ಶಾಂತಮ್ಮ, ಭರತ್ ಕುಮಾರ್, ಥಾಮಸ್, ಎಂ. ಶ್ರೀಧರ್, ಕುಮಾರ್, ಉಮೇಶ್, ಗೋಪಾಲ್ ರಾವ್, ಮಂಜು ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Thursday, October 3, 2024

ಕ್ಷೇತ್ರದ ಅಭಿವೃದ್ಧಿಗೆ ತಾಯಿ ಚಾಮುಂಡೇಶ್ವರಿ ಇನ್ನೂ ಹೆಚ್ಚಿನ ಬಲ ನೀಡಲಿ : ಬಿ.ಕೆ ಸಂಗಮೇಶ್ವರ್


ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. 
    ಭದ್ರಾವತಿ : ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಬಲ ನೀಡುವ ಮೂಲಕ ತಾಯಿ ಚಾಮುಂಡೇಶ್ವರಿ ದೇವಿ ಪ್ರತಿಯೊಬ್ಬರಿಗೂ ಆಯುರಾರೋಗ್ಯ ಕರುಣಿಸಲಿ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಾರ್ಥಿಸಿದರು. 
    ಅವರು ಗುರುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಮಂಜುರಾತಿಯಾಗಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿಯೊಬ್ಬರು ಜೋಡಿಸಬೇಕು ಎಂದರು. 
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಮಾತನಾಡಿ, ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭಾವ ಅವರದ್ದಾಗಿದೆ. ಅವರಿಗೆ ನಾವೆಲ್ಲರೂ ಇನ್ನೂ ಹೆಚ್ಚಿನ ಶಕ್ತಿ ತುಂಬುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದ್ದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮತ್ತು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ನಗರಸಭೆ ಎಲ್ಲಾ ಸದಸ್ಯರು, ಆಶ್ರಯ ಸಮಿತಿ ಮತ್ತು ಸೂಡಾ ಸದಸ್ಯರು, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸ್ವಾಗತಿಸಿದರು. ಬಸವರಾಜ ನಾಯ್ಕ ಪ್ರಾರ್ಥಿಸಿ, ಮಹಮ್ಮದ್ ಗೌಸ್ ಕಾರ್ಯಕ್ರಮ ನಿರೂಪಿಸಿ, ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ ವಂದಿಸಿದರು. 
    ಇದಕ್ಕೂ ಮೊದಲು ನಗರದ ಮಾಧವಚಾರ್ ವೃತ್ತದಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ನಾದಸ್ವರದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ನಗರಸಭೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದವರೆಗೂ ಮೆರವಣಿಗೆ ಮೂಲಕ ಕರೆ ತರಲಾಯಿತು. ನಿಖಿತಾ ಕೃಷ್ಣ ಬಾಲಕಿಯ ಭರತ್ಯ ನಾಟ್ಯ ಗಮನ ಸೆಳೆಯಿತು. ಬಾಲಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 
 

ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಕಾರ್ಯಕ್ರಮದಲ್ಲಿ ನಿಖಿತಾ ಕೃಷ್ಣ ಬಾಲಕಿಯ ಭರತ್ಯ ನಾಟ್ಯ ಗಮನ ಸೆಳೆಯಿತು.