Wednesday, November 6, 2024

ವಿಐಎಸ್‌ಎಲ್ ಜಾಗೃತಾ ತಿಳುವಳಿಕೆ ಸಪ್ತಾಹ : ಸಮಾರೋಪ ಸಮಾರಂಭ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಕೇಂದ್ರ ಜಾಗೃತಾ ಆಯೋಗ ಮತ್ತು ಸೈಲ್ ಕಾರ್ಪೋರೇಟ್ ವಿಜಿಲೆನ್ಸ್ ನಿರ್ದೇಶನದಂತೆ ಈ ಬಾರಿ ಜಾಗೃತಾ ತಿಳುವಳಿಕೆ ಸಪ್ತಾಹ "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಕೇಂದ್ರ ಜಾಗೃತಾ ಆಯೋಗ ಮತ್ತು ಸೈಲ್ ಕಾರ್ಪೋರೇಟ್ ವಿಜಿಲೆನ್ಸ್ ನಿರ್ದೇಶನದಂತೆ ಈ ಬಾರಿ ಜಾಗೃತಾ ತಿಳುವಳಿಕೆ ಸಪ್ತಾಹ "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.
    ಜಾಗೃತಾ ತಿಳುವಳಿಕೆ ಸಪ್ತಾಹ ಸಮಾರೋಪ ಸಮಾರಂಭ ಶಾರದಾ ಮಂದಿರದಲ್ಲಿ ಆಯೋಜಿಸಲಾಗಿತ್ತು. ಸೈಂಟ್ ಚಾರ್ಲ್ಸ್ ಶಾಲೆ ೩ನೇ ತರಗತಿ ವಿದ್ಯಾರ್ಥಿನಿ ಪಾವನಿ ಎಂ. ನಾಯಕ್ ಭರತನಾಟ್ಯ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.  ವೃತ್ತಿ ಬದುಕು ಮತ್ತು ವೈಯುಕ್ತಿಕ ಬದುಕಿನಲ್ಲಿ ಪ್ರಾಮಾಣಿಕತೆ, ನೀತಿ ಮತ್ತು ಮೌಲ್ಯಗಳ ಮಹತ್ವ ಸಾರುವ "ಸತ್ಯ-ನಿಷ್ಠೆ" ನಾಟಕ ನಗರದ ಅಪ್ಪರ್ ಹುತ್ತಾ ಅನನ್ಯ ಶಾಲೆಯ ಮಕ್ಕಳು ಅದ್ಭುತವಾಗಿ ಪ್ರದರ್ಶಿಸಿದರು.
    ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್, ನಮ್ಮ ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕಿರುವ ಹಾಗು ಜೀವನದಲ್ಲಿ ಅತಿಮುಖ್ಯವಾದ ಪ್ರಾಮಾಣಿಕತೆ, ನೀತಿ, ಪಾರದರ್ಶಕತೆ ಮತ್ತು ಮೌಲ್ಯಗಳ ಮಹತ್ವ ಬಗ್ಗೆ ಒತ್ತಿಹೇಳಿದರು.
    ಮಹಾಪ್ರಬಂಧಕ(ವಿಜಿಲೆನ್ಸ್ ಮತ್ತು ಎ.ಸಿ.ವಿ.ಓ) ರಘುನಾಥ ಬಿ. ಅಷ್ಟಪುತ್ರೆ, ಜಾಗೃತಾ ತಿಳುವಳಿಕೆ ಸಪ್ತಾಹ ಅಂಗವಾಗಿ ೧೮೨ ಉದ್ಯೋಗಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ, ಮಾರುಕಟ್ಟೆ ಇಲಾಖೆ ಆಯೋಜಿಸಿದ್ದ ಗ್ರಾಹಕರ ಸಭೆ, ನೈತಿಕ ಉದ್ಯಾನವನ ಸ್ವಚ್ಛತೆ ಮುಂತಾದ ಚಟುವಟಿಕೆಗಳ ವಿವರವಾದ ವರದಿ ಮಂಡಿಸಿದರು. 
    ಎಥಿಕ್ಸ್ ಕ್ಲಬ್ ಚಟುವಟಿಕೆಗಳಲ್ಲಿ ಸಹಕಾರ ನೀಡಿದ ಅನನ್ಯ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್, ಆಡಳಿತಾಧಿಕಾರಿ ವೇಣುಗೋಪಾಲ್, ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್ ಮತ್ತು ಸಿಬ್ಬಂದಿಗಳನ್ನು  ಗೌರವಿಸಲಾಯಿತು. ಜಾಗೃತಾ ತಿಳುವಳಿಕೆ ಸಪ್ತಾಹ ಅಂಗವಾಗಿ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಕಾರ್ಮಿಕರ ಸಂಘದ ಉಪಾಧ್ಯಕ್ಷ ಕೆ.ಬಿ ಮಲ್ಲಿಕಾರ್ಜುನ,  ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ವಿಕಾಸ್ ಬಸೇರ್ ಸೇರಿದಂತೆ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು. 
    ಕಿರಿಯ ಪ್ರಬಂಧಕ(ಮಿಲ್ಸ್ ಮತ್ತು ಆರ್.ಟಿ.ಎಸ್) ಸಿ. ಲಕ್ಷ್ಮೀಕಾಂತ ಪ್ರಾರ್ಥಿಸಿದರು. ವಿಜಿಲೆನ್ಸ್ ಇಲಾಖೆಯ ಕೇದಾರನಾಥ್ ಸ್ವಾಗತಿಸಿ, ಸಹಾಯಕ ಮಹಾಪ್ರಬಂಧಕ ಎಲ್. ಕುತಲನಾಥನ್,  ಕಾರ್ಯಕ್ರಮ ನಿರೂಪಿಸಿ, ಚೇತನ್ ತಡ್ಕಲ್ ವಂದಿಸಿದರು.  

ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರ ಸಂಘಗಳು ಕೊಡುಗೆ ನೀಡಲಿ : ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ

ಭದ್ರಾವತಿ ಅಪ್ಪರ್ ಹುತ್ತಾ ಶ್ರೀ ಭರವೇಶ್ವರ ಪತ್ತಿನ ಸಹಕಾರ ಸಂಘದ ೨೫ನೇ ರಜತ ಮಹೋತ್ಸವ ವರ್ಷದ ಸಂಭ್ರಮಾಚರಣೆ ಸಮಾರಂಭ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. 
    ಭದ್ರಾವತಿ : ಸಹಕಾರ ಸಂಘಗಳು ಲಾಭದಾಯಕವಾಗಿ ಮುನ್ನಡೆಯುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡುವಂತಾಗಬೇಕು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. 
    ಶ್ರೀಗಳು ನಗರದ ಅಪ್ಪರ್ ಹುತ್ತಾ ಶ್ರೀ ಭರವೇಶ್ವರ ಪತ್ತಿನ ಸಹಕಾರ ಸಂಘದ ೨೫ನೇ ರಜತ ಮಹೋತ್ಸವ ವರ್ಷದ ಸಂಭ್ರಮಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 
    ಈ ಹಿಂದೆ ಸಮಾಜದಲ್ಲಿ ವಿವಿಧ ಕ್ಷೇತ್ರಗಳ ಸಾಧನೆಯನ್ನು ಗುರುತಿಸಲಾಗುತ್ತಿತ್ತು. ಆದರೆ ಪ್ರಸ್ತುತ ಆರ್ಥಿಕ ಮಾನದಂಡವನ್ನು ಗುರುತಿಸಿ ಒಂದು ದೇಶದ ಸಾಧನೆಯನ್ನು ಪರಿಗಣಿಸಲಾಗುತ್ತಿದೆ. ಈ ದಾರಿಯಲ್ಲಿ ವಿಶ್ವದ ಆರ್ಥಿಕ ಸ್ಥಿತಿಯಲ್ಲಿ ನಮ್ಮ ದೇಶ ೫ನೇ ಸ್ಥಾನದಲ್ಲಿದೆ ಎಂಬುದು ತುಂಬಾ ಸಂತೋಷದ ವಿಚಾರವಾಗಿದೆ. ಮತ್ತೊಂದು ಕಡೆ ತಲಾ ಆದಾಯವನ್ನು ಗಮನಿಸಿದಾಗ ೧೩೩ನೇ ಸ್ಥಾನದಲ್ಲಿರುವುದು ವಿಪರ್ಯಾಸದ ಸಂಗತಿಯಾಗಿದೆ. ಪ್ರತಿಯೊಬ್ಬರು ಶ್ರಮವಹಿಸಿ ದೇಶದ ಆರ್ಥಿಕ ಬೆಳವಣಿಗೆಗೆ ಶ್ರಮಿಸಿದಾಗ ಕೆಲವೇ ವರ್ಷಗಳಲ್ಲಿ ಅಗ್ರ ಸ್ಥಾನಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ. ಪುನಃ ೧೭ನೇ ಶತಮಾನದ ವೈಭವ ಮರುಕಳುಹಿಸಲಿದೆ ಎಂದರು. 
    ಸಹಕಾರ ಸಂಘಗಳನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು  ಅದರ ಏಳಿಗೆಗೆ ಶ್ರಮಿಸಬೇಕು. ಪ್ರತಿಯೊಬ್ಬರು ನ್ಯಾಯದ ದಾರಿಯಲ್ಲಿ ಲಾಭ ಗಳಿಸುವ ಚಿಂತನೆಯೊಂದಿಗೆ ಸಾಗಬೇಕು. ೨೫ ವರ್ಷಗಳನ್ನು ಪೂರೈಸಿರುವ ಸಂಘ ಶತಮಾನದ ಸಂಭ್ರಮ ಸಹ ಆಚರಿಸುವಂತಾಗಬೇಕೆಂದು ಶುಭ ಹಾರೈಸಿದರು. 
ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಪ್ರಯತ್ನ ಮುಂದುವರಿಕೆ...
ಮೈಸೂರು ಮಹಾರಾಜರ ಕೊಡುಗೆಯಾಗಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಶ್ರೀ ಮಠದ ವತಿಯಿಂದ ಈಗಾಗಲೇ ಪ್ರಧಾನಿಮಂತ್ರಿಯವರನ್ನು ಸಹ ಭೇಟಿ ಮಾಡಿ ಚರ್ಚಿಸಲಾಗಿದೆ. ನಮ್ಮ ನಿರಂತರ ಪ್ರಯತ್ನದ ನಡುವೆ ಎಲ್ಲರ ಸಹಕಾರ ಅಗತ್ಯವಿದೆ. 
 - ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ 
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳ ೪ ಜನ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎಸ್ ಮಲ್ಲೇಶ್ ಅಧ್ಯಕ್ಷತೆ ವಹಿಸಿದ್ದರು. 
    ಶಿವಮೊಗ್ಗ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವಿ. ರಾಜು,  ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕ ನಾಗಭೂಷಣ ಕಲ್ಮನೆ, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಟಿ. ಧರ್ಮೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಸಂಘದ ಪ್ರವರ್ತಕರಾದ ತಾಲೂಕು ಒಕ್ಕಲಿಗರ ಸಂಘದ ಹಾಲಿ ಮತ್ತು ಮಾಜಿ ಪೋಷಕರು, ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಮತ್ತು ನಿರ್ದೇಶಕರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಎಲ್. ದೇವರಾಜ್ ಸ್ವಾಗತಿಸಿದರು. 

Tuesday, November 5, 2024

ಕಲ್ಲಹಳ್ಳಿ ಗ್ರಾಮದಲ್ಲಿ ಬಳಸೊಕೆರೆ ಒತ್ತುವರಿ ಕಾರ್ಯಾಚರಣೆ

ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಸರ್ವೆ ನಂ.೩೯ರ ಬಳಸೊಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
    ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಸರ್ವೆ ನಂ.೩೯ರ ಬಳಸೊಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
    ಸರ್ಕಾರದ ಆದೇಶದಂತೆ ಸುಮಾರು ೧೦ ಎಕರೆ ವಿಸ್ತೀರ್ಣ ಹೊಂದಿರುವ ಬಳಸೊಕೆರೆ ತೆರವು ಕಾರ್ಯಾಚರಣೆ ಗ್ರಾಮ ಪಂಚಾಯಿತಿ ಆಡಳಿತ ಪೊಲೀಸರ ನೆರವಿನೊಂದಿಗೆ ಕೈಗೊಂಡಿತು. ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನೂ ಬಹಳಷ್ಟು ಕೆರೆಗಳು ಒತ್ತುವರಿಗೊಂಡಿದ್ದು, ತೆರವು ಕಾರ್ಯಾಚರಣೆ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಗ್ರಾಮ ಪಂಚಾಯಿತಿಗಳು ಹೆಚ್ಚಿನ ಆಸಕ್ತಿವಹಿಸಬೇಕಾಗಿದೆ. 
    ಕಾರ್ಯಾಚರಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಆನಂದ, ಉಪಾಧ್ಯಕ್ಷ ಕೆ.ವಿ ಧನಂಜಯ(ಧಾನು), ಸದಸ್ಯ ಉಮೇಶ್, ಕಾರ್ಯದರ್ಶಿ ಸವಿತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಸಹ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. 
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಸಹ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. 
    ಕಾರ್ಖಾನೆ ಆವರಣದಲ್ಲಿರುವ ಆಡಳಿತ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ಎಚ್. ಪ್ರೇಮಬಾಯಿ, ಎನ್. ಗಿರಿಜ, ಯು. ರಮ್ಯ, ಕುಸುಮ, ಮಂಜುನಾಥ್, ಎನ್. ಆಶಾ, ಕೆ. ಲಕ್ಷ್ಮಣ್, ಜಿ. ರವಿಕುಮಾರ್, ಕೆ.ಡಿ ರಕ್ಷಿತ, ಎಸ್.ಎನ್ ಮಂಜುಶ್ರೀ, ಉನ್ನಿಕೃಷ್ಣನ್, ಎ.ಜೆ ಫ್ರಾನ್ಸಿಸ್, ತ್ರಿವೇಣಿ, ಎಂ.ಪಿ ನಾಗೇಂದ್ರಪ್ಪ,  ಡಿ. ಯೋಗೇಶ್ವರಿ, ಜಗದೀಶ್, ಬಿ.ಎಲ್ ಚಂದ್ವಾನಿ, ಎಲ್. ಪ್ರವೀಣ್ ಕುಮಾರ್ ಸೇರಿದಂತೆ ಕಾರ್ಖಾನೆ ಅಧಿಕಾರಿಗಳು, ನೌಕರರು ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಹಾಡುಗಳನ್ನು ಹಾಡುವ ಮೂಲಕ ಸಂಭ್ರಮಿಸಿದರು.
    ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕ (ವರ್ಕ್ಸ್), ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ್ಷ ಪಾರ್ಥಸಾರಥಿ ಮಿಶ್ರಾ,  ಮಹಾಪ್ರಬಂಧಕ(ಪರಿಸರ ನಿರ್ವಹಣಾ ವಿಭಾಗ) ಎಂ. ಸುಬ್ಬರಾವ್,  ಮಹಾಪ್ರಬಂಧಕರು (ಹಣಕಾಸು) ಶೋಭ ಶಿವಶಂಕರನ್, ಮಹಾಪ್ರಬಂಧಕರು(ಮಾರುಕಟ್ಟೆ) ಹರಿಕೃಷ್ಣ ಗುಡೆ, ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾದಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು, ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಉಪ ಪ್ರಬಂಧಕರು (ಹೆಚ್.ಆರ್) ಕೆ.ಎಸ್. ಶೋಭ ನಿರೂಪಿಸಿದರು. ನಾಡಿನ ಪರಂಪರೆ ಹಾಗು ಸಾಧಕರ ಸಾಧನೆಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಯಿತು. 

ಭೈರಾಪುರ ಕಿರು ಅರಣ್ಯದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ : ದಾಳಿ

ಆರೋಪಿ ವಿರುದ್ಧ ಕಾನೂನು ಕ್ರಮ : ಎಂ.ವಿ ಆಶೀಶ್ ರೆಡ್ಡಿ

ಆಶೀಶ್ ರೆಡ್ಡಿ
    ಭದ್ರಾವತಿ: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಎನ್.ಆರ್ ಪುರ ತಾಲೂಕಿನ ಭೈರಾಪುರ ಸರ್ವೆ ನಂ.೪೪, ಭೈರಾಪುರ ಕಿರು ಅರಣ್ಯದ ೩ ಎಕರೆ ೭ ಗುಂಟೆ ಒತ್ತುವರಿ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಯಿಂದ ಇಟ್ಟಿಗೆ ತಯಾರಿಸಿ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ ಆಶೀಶ್ ರೆಡ್ಡಿ ತಿಳಿಸಿದರು. 
    ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಅವರು, ಭದ್ರಾವತಿ ಅರಣ್ಯ ವಿಭಾಗ, ಎನ್.ಆರ್‌ಮರ ತಾಲೂಕು ಭೈರಾಪುರ ಸರ್ವೆ ನಂ.೪೪ ಭೈರಾಪುರ ಕಿರು ಅರಣ್ಯದಲ್ಲಿ ಚಿತ್ರಪ್ಪ ಯರಬಾಳು ಎಂಬುವರು ೩ ಎಕರೆ ೭ ಗುಂಟೆ ಒತ್ತುವರಿ ಮಾಡಿ ಅಕ್ರಮವಾಗಿ ಮಣ್ಣು ಗಣಿಗಾರಿಕೆಯಿಂದ ಇಟ್ಟಿಗೆ ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಸ್ಥಳ ತನಿಖೆ ಮಾಡಲಾಗಿ ದೂರು ಸತ್ಯವಾಗಿರುವುದು ಕಂಡು ಬಂದಿರುತ್ತದೆ ಈ ಒತ್ತುವರಿ ಪ್ರದೇಶ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಅಲ್ಲದೆ ಪರಿಸರ ಸೂಕ್ಷ್ಮ ವಲಯದ ಒಳಗೆ ಬರುತ್ತದೆ. ಈ ಹಿನ್ನಲೆಯಲ್ಲಿ ಅ.೨೮ ರಂದು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿರುತ್ತದೆ ಎಂದರು. 
    ಈ ಒತ್ತುವರಿ ಪ್ರದೇಶದಿಂದ ೨ ಟ್ರ್ಯಾಕ್ಟರ್ ಲೋಡ್ ಇಟ್ಟಿಗೆ ವಲಯ ಕಛೇರಿ ಆವರಣಕ್ಕೆ ಸಾಗಿಸಿ ಉಳಿದ ಸುಮಾರು ೧೦ ಟ್ರ್ಯಾಕ್ಟರ್ ಲೋಡ್ ಇಟ್ಟಿಗೆ  ಸ್ಥಳದಲ್ಲಿಯೇ ಮಹಜರ್ ನಡೆಸಿ ಸರ್ಕಾರದ ಪರವಾಗಿ ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಈ ಇಟ್ಟಿಗೆ ನಿಯಾಮಾನುಸಾ ವಿಲೇಗೊಳಿಸಲು ನ್ಯಾಯಲಯದ ಅನುಮತಿ ಪಡೆದುಕೊಳ್ಳಲಾಗಿರುತ್ತದೆ ಎಂದರು. 


ಗೂಗಲ್ ಮ್ಯಾಪ್ ಸರ್ವೆ ಮೂಲಕ ಒತ್ತುವರಿ ಗುರುತಿಸಿರುವುದು. 
    ಸುಮಾರು ೧ ರಿಂದ ೨ ವರ್ಷ ಒತ್ತುವರಿ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಯಿಂದ ಮಣ್ಣನ್ನು ತೆಗೆದು ಇಟ್ಟಿಗೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ. ಅಲ್ಲದೆ ಯಾವುದೆ ಪರವಾನಿಗೆ ಇಲ್ಲದೆ ಸರ್ಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೆ ಗಣಿಗಾರಿಗೆ ಚಟುವಟಿಕೆ ನಡೆಸಿರುವುದು ಸಹ ವಿಚಾರಣೆ ತಿಳಿದು ಬಂದಿರುತ್ತದೆ.  ಇದರಿಂದ ಪರಿಸರಕ್ಕೆ ಹಾನಿಯಾಗಿರುವುದಲ್ಲದೇ ಸರ್ಕಾರಕ್ಕೆ ಲಕ್ಷಾಂತರ ರು. ನಷ್ಟವಾಗಿರುತ್ತದೆ ಎಂದು ದೂರಿದರು. 
    ಈ ಪ್ರಕರಣದ ಕುರಿತು ವಿಚಾರಣೆಗಾಗಿ ನ.೪ ರಂದು ವಲಯ ಕಛೇರಿಗೆ ಹಾಜರಾಗಲು ನೋಟಿಸ್ ನೀಡಲಾಗಿರುತ್ತದೆ. ಈ ಪ್ರಕರಣದಲ್ಲಿ ಆರೋಪಿ ಚಿತ್ರಪ್ಪ ಯರಬಾಳು ದೂರುತ್ತಿರುವ ಹಾಗೆ ಅವರ ತಂದೆಯ ಮೇಲೆ ಇಲಾಖಾ ಸಿಬ್ಬಂದಿಗಳು ಹಲ್ಲೆ ಅಥವಾ ಜಾತಿ ನಿಂದನೆ ಮಾಡಿರುವುದಿಲ್ಲ. ವಾಸ್ತವಾಗಿ ಅ.೨೮ ರಂದು ಸ್ಥಳ ತನಿಖೆ ಸಂದರ್ಭದಲ್ಲಿ ಆರೋಪಿತರ ಕಡೆಯವರು ಇಲಾಖಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಇದರ ವೀಡಿಯೋ ಚಿತ್ರಿಕರಣ ಲಭ್ಯವಿರುತ್ತದೆ ಎಂದರು. 
    ಭೈರಾಪುರ ಸ.ನಂ.೪೪, ಭೈರಾಪುರ ಕಿರು ಅರಣ್ಯದಲ್ಲಿ ಬೂವಣ್ಣ ಎಂಬುವರ ಮತ್ತೊಂದು ಪ್ರಕರಣದಲ್ಲಿ ಅರಣ್ಯ ಒತ್ತುವರಿಯನ್ನು ಭೂಕಬಳಿಕೆ ವಿಶೇಷ ನ್ಯಾಯಲಯದ ತೀರ್ಪಿನಂತೆ ತೆರವುಗೊಳಿಸಿ ಇಲಾಖಾ ಸುಪರ್ದಿಗೆ ತೆಗೆದುಕೊಳ್ಳಲಾಗಿರುತ್ತದೆ. ಅಲ್ಲದೆ ಆರೋಪಿ ಅರಣ್ಯ ಒತ್ತುವರಿಯ ವಿರುದ್ಧ ೬೪ ಏ ನಡಾವಳಿಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಮತ್ತು ನ್ಯಾಯಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. 

ಉಪವಲಯ ಅರಣ್ಯಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ : ಜಿ.ಪಂ ಸಿಇಓ ಪತ್ರ



ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಬರೆದಿರುವ ಪತ್ರ. 
    ಭದ್ರಾವತಿ : ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ದೋಷಾರೋಪಣ ಪಟ್ಟಿ ಆಧಾರದ ಮೇಲೆ  ಉಪವಲಯ ಅರಣ್ಯಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪತ್ರ ಬರೆದು ಕೋರಿದ್ದಾರೆ. 
    ಉಪವಲಯ ಅರಣ್ಯಾಧಿಕಾರಿ ಸಂತೋಷ್ ರಾಠೋಡ್‌ರವರಿಗೆ ವಲಯ ಅರಣ್ಯಾಧಿಕಾರಿ ಪ್ರಭಾರ ನೀಡಿದ್ದ ಸಂದರ್ಭದಲ್ಲಿ ಜಿ.ಪಂ ವ್ಯಾಪ್ತಿಯ ವಿವಿಧ ನರ್ಸರಿ/ನೆಡುತೋಪು ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್‌ರವರು ೨೦೨೧ರಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು)ಯವರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸೂಚಿಸಿದ್ದರು. 
    ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೋಷಾರೋಪಣ ಪಟ್ಟಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಿದ್ದರು.  ಉಪವಲಯ ಅರಣ್ಯಾಧಿಕಾರಿಗೆ ನೇಮಕಾತಿ ಪ್ರಾಧಿಕಾರ/ಶಿಸ್ತು ಪ್ರಾಧಿಕಾರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತರವರು ಆಗಿರುವುದರಿಂದ ತಮ್ಮ ಹಂತದಲ್ಲಿಯೇ ಆರೋಪವಿರುವ ಅಧಿಕಾರಿಯ ವಿರುದ್ಧ ಕರ್ನಾಟಕ ನಾಗರೀಕ ಸೇವೆ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ೧೯೫೭ ರ ನಿಯಮ ದಂತೆ ಶಿಸ್ತುಕ್ರಮವನ್ನು ಜರುಗಿಸಲು ಕೋರಿದ್ದಾರೆ. 
    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಪತ್ರದ ಆಧಾರದ ಮೇಲೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆಗ್ರಹಿಸಿದ್ದಾರೆ. 
 

ಭದ್ರಾವತಿ ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್. 

Monday, November 4, 2024

ವಕ್ಫ್ ಕಾಯ್ದೆ ದುರ್ಬಳಕೆ ವಿರೋಧಿಸಿ ತಾಲೂಕು ಕಛೇರಿ ಮುತ್ತಿಗೆಗೆ ಯತ್ನ

ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ ಸರ್ಕಾರದ ವಿರುದ್ಧ ಆಕ್ರೋಶ 

ಪ್ರಸ್ತುತ ರಾಜ್ಯದಲ್ಲಿ ವಕ್ಫ್ ಕಾಯ್ದೆ ದುರ್ಬಳಕೆ ಹಿನ್ನಲೆಯಲ್ಲಿ ರೈತರು, ಮಠಮಾನ್ಯಗಳು, ಹಿಂದೂ ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಈ ಕುರಿತು ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವುದು ಖಂಡನೀಯ ಎಂದು ಆಕ್ರೋಶಪಡಿಸಿ ಸೋಮವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಭದ್ರಾವತಿ ತಾಲೂಕು ಕಛೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. 
     ಭದ್ರಾವತಿ : ಪ್ರಸ್ತುತ ರಾಜ್ಯದಲ್ಲಿ ವಕ್ಫ್ ಕಾಯ್ದೆ ದುರ್ಬಳಕೆ ಹಿನ್ನಲೆಯಲ್ಲಿ ರೈತರು, ಮಠಮಾನ್ಯಗಳು, ಹಿಂದೂ ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಈ ಕುರಿತು ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವುದು ಖಂಡನೀಯ ಎಂದು ಆಕ್ರೋಶಪಡಿಸಿ ಸೋಮವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. 
ವಕ್ಫ್ ಕಾಯ್ದೆ ದುರ್ಬಳಕೆ ವಿರೋಧಿಸಿ ತಾಲೂಕು ಬಿಜೆಪಿ ಮಂಡಲ ಹಾಗು ಹೊಳೆಹೊನ್ನೂರು ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ವೇಳೆ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಏಕಾಏಕಿ ತಾಲೂಕು ಕಛೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆದರೆ ಪೊಲೀಸರು ಹೆಚ್ಚಿನ ಬಂದೋಬಸ್ತ್‌ನೊಂದಿಗೆ ವಿಫಲಗೊಳಿಸಿದರು.  ಅಲ್ಲದೆ ಈ ನಡುವೆ ಅಕ್ರಮಕ್ಕೆ ಸಾಕ್ಷಿಯಾದ ಪಹಣಿಗಳನ್ನು ಸುಟ್ಟು ಮುಖಂಡರು, ಕಾರ್ಯಕರ್ತರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದರು. 


ಇದಕ್ಕೂ ಮೊದಲು ನಗರದ ಮಾಧವಚಾರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಲ್ಪಸಂಖ್ಯಾತರ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್‌ಖಾನ್ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. 
ಈ ಹಿಂದೆ ಕಾಂಗ್ರೆಸ್‌ನವರು ರೂಪಿಸಿರುವ ವಕ್ಫ್  ಕಾಯ್ದೆ ಮುಸ್ಲಿಂ ತುಷ್ಠಿಕರಣಕ್ಕಾಗಿ, ಮತಗಳಿಕೆಯ ಆಸೆಯೊಂದಿಗೆ ರಚಿಸಿರುವ ಕಾಯ್ದೆಯಾಗಿದೆ. ಪ್ರಸ್ತುತ ಪಸ್ತುತ ರೈತರು, ಮಠಗಳ ಮಠಾಧೀಶರು, ಮಂದಿರದ ಮುಖ್ಯಸ್ಥರು ಆತಂಕಗೊಂಡಿದ್ದಾರೆ. ಕಂದಾಯ ದಾಖಲೆಗಳಲ್ಲಿ ತಮ್ಮ ಮಾಲೀಕತ್ವವದ ಆಸ್ತಿಗಳು ವಕ್ಫ್ ಪಾಲಾಗಿವೆಯೇ ಎನ್ನುವುದನ್ನು ದೃಢೀಕರಿಸಿಕೊಳ್ಳುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಇಂದು ಕಂದಾಯ ದಾಖಲೆಗಳಲ್ಲಿ ರೈತರ ಹೆಸರುಗಳನ್ನು ತೆಗೆದು ಹಾಕದೆ ೧೯೭೪ರ ಗೆಜೆಟ್ ಪ್ರಕಾರ ಇದೀಗ ೫೦ ವರ್ಷಗಳ ನಂತರ ಇಂಡೀಕರಿಸಲು ಸೂಚನೆ ನೀಡಿದ್ದರ ಪರಿಣಾಮ ವಿಚಿತ್ರ ಸ್ಥಿತಿ ನಿರ್ಮಾಣವಾಗಿದೆ ಆಕ್ರೋಶ ವ್ಯಕ್ತಪಡಿಸಿದರು. 
ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕಳ್ಳಾಟ ಮಾಡಬಾರದು. ರೈತರಿಗೆ, ಹಿಂದುಗಳಿಗೆ ದ್ರೋಹ ಬಗೆಯಬಾರದು. ಯಾವ ರೈತರು ಕೃಷಿ ಜಮೀನನ್ನು ಸಾಗುವಳಿ ಮಾಡುತ್ತಿದ್ದಾರೋ, ಯಾವ ಮಠ- ಮಂದಿರಗಳಲ್ಲಿ ಹತ್ತು ಹಲವು ವರ್ಷಗಳಿಂದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುತ್ತಿವೆಯೋ, ಅವೆಲ್ಲವುಗಳನ್ನು ವಕ್ಫ್ ಪಾಲಾಗಲು ಬಿಜೆಪಿ ಬಿಜೆಪಿ ಬಿಡುವುದಿಲ್ಲ. ಆಸ್ತಿ ಮಾಲೀಕರಿಗೆ ಯಾವ ಮಾಹಿತಿಯೂ ಕೊಡದೆ ಗೊತ್ತೇ ಇರದಂತೆ ಸೃಷ್ಟಿ ಮಾಡಿಕೊಂಡಿರುವ ವಕ್ಫ್ ಗೆಜೆಟ್ ಅಧಿಸೂಚನೆಗಳನ್ನು ರದ್ದುಗೊಳಿಸುವ ಕ್ರಮ ರಾಜ್ಯ ಸರ್ಕಾರ ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿದರು. 


ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗು ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶ್ ನೇತೃತ್ವವಹಿಸಿದ್ದರು.  ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಮೊಸರಳ್ಳಿ ಅಣ್ಣಪ್ಪ, ಶಂಕರ್‌ಮೂರ್ತಿ,  ಜಿಲ್ಲಾ ವಿಶೇಷ ಆಹ್ವಾನಿತರಾದ ಎಂ. ಮಂಜುನಾಥ್, ಎಚ್. ತೀರ್ಥಯ್ಯ,  ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಬಿ.ಜಿ ರಾಮಲಿಂಗಯ್ಯ, ಬಜರಂಗದಳ ಪ್ರಮುಖರಾದ ರಾಘವನ್ ವಡಿವೇಲು, ವಿಶ್ವ ಹಿಂದೂ ಪರಿಷತ್ ಶಿವಕುಮಾರ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖಾ ಬೋಸ್ಲೆ ಹಾಗೂ  ಪಕ್ಷದ ಮಹಿಳಾ ಮೋರ್ಚಾ, ಯುವ ಮೋರ್ಚಾ, ರೈತ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.