Saturday, November 16, 2024

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಬಿ. ಸಿದ್ದಬಸಪ್ಪ ಪುನರ್ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಜಯ ಸಾಧಿಸುವ ಮೂಲಕ ಬಿ. ಸಿದ್ದಬಸಪ್ಪ ಪುನರ್ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಜಯ ಸಾಧಿಸುವ ಮೂಲಕ ಬಿ. ಸಿದ್ದಬಸಪ್ಪ ಪುನರ್ ಆಯ್ಕೆಯಾಗಿದ್ದಾರೆ. 
    ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ. ಸಿದ್ದಬಸಪ್ಪರವರು ೨೨ ಹಾಗು ಡಾ. ಗಿರೀಶ್ ೧೧ ಮತಗಳನ್ನು ಪಡೆದುಕೊಂಡಿದ್ದು, ಸಿದ್ದಬಸಪ್ಪ ಗೆಲುವು ಸಾಧಿಸಿದ್ದಾರೆ. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಶಾಂತ್ ೨೨ ಮತ್ತು ವೆಂಕಟೇಶ್ವರಪ್ಪ ೧೨ ಮತಗಳನ್ನು ಪಡೆದುಕೊಂಡಿದ್ದು, ಪ್ರಶಾಂತ್ ಗೆಲುವು ಸಾಧಿಸಿದ್ದಾರೆ. ಉಳಿದಂತೆ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಸ್ಪರ್ಧಿಸಿದ್ದ ವೆಂಕಟೇಶ್ ೧೯ ಹಾಗು ರಾಜಕುಮಾರ್ ೧೫ ಮತಗಳನ್ನು ಪಡೆದುಕೊಂಡಿದ್ದು, ವೆಂಕಟೇಶ್ ಗೆಲುವು ಸಾಧಿಸಿದ್ದಾರೆ. 

ವಿದ್ಯಾರ್ಥಿ ನಿಲಯದ ವಿದ್ಯಾಥಿಗಳಿಗೆ ಕ್ರೀಡಾಕೂಟ : ಜಿಲ್ಲಾಮಟ್ಟಕ್ಕೆ ಆಯ್ಕೆ

ಭದ್ರಾವತಿ ತಾಲೂಕಿನ ಎಲ್ಲಾ ಇಲಾಖೆಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗಾಗಿ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕಿನ ಎಲ್ಲಾ ಇಲಾಖೆಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗಾಗಿ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
    ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೂ ಕ್ರೀಡಾ ಚಟುವಟಿಕೆಗಳ ಅಗತ್ಯತೆ ಮನಗಂಡು ಕ್ರೀಡಾಕೂಟ ಆಯೋಜಿಸಿಕೊಂಡು ಬರಲಾಗುತ್ತಿದೆ. 
    ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ತಾಲೂಕು ಕಲ್ಯಾಣಾಧಿಕಾರಿ ಕೆ.ಎಸ್ ಶೈಲಾ, ವಿಸ್ತರಣಾಧಿಕಾರಿ ಟಿ.ಎಸ್ ಮೀನಾಕ್ಷಮ್ಮ, ನಿಲಯ ಮೇಲ್ವಿಚಾರಕ ಸಿ.ಎಂ ರಮೇಶ್ ಹಾಗೂ ತಾಲೂಕಿನ ಎಲ್ಲಾ ನಿಲಯ ಮೇಲ್ವಿಚಾರಕರು, ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 

ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ : ಹೋಮ-ಹವನ, ಅನ್ನಸಂತರ್ಪಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪು ಅರಳಿಕಟ್ಟೆ ಶ್ರೀ ವರಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶನಿವಾರ ಹೋಮ-ಹವನ, ಅನ್ನಸಂತರ್ಪಣೆ ನೆರವೇರಿತು. 
       ಭದ್ರಾವತಿ  : ನಗರಸಭೆ ವ್ಯಾಪ್ತಿಯ ಸುರಗಿತೋಪು ಅರಳಿಕಟ್ಟೆ ಶ್ರೀ ವರಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶನಿವಾರ ಹೋಮ-ಹವನ, ಅನ್ನಸಂತರ್ಪಣೆ ನೆರವೇರಿತು. 
    ಕಳೆದ ಕೆಲವು ವರ್ಷಗಳಿಂದ ಸೇವಾ ಸಮಿತಿ ವತಿಯಿಂದ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ವಿನಾಯಕ ಚತುರ್ಥಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ವಿಶೇಷವಾಗಿ ಈ ಬಾರಿ ಅಶ್ವಧಾರಿಯಾಗಿ ವಿಜಯ ಯಾತ್ರೆಗೆ ಹೊರಟ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಿದ್ದು, ಭಕ್ತರ ಕಣ್ಮನ ಸೆಳೆದಿದೆ. 
    ಬೆಳಿಗ್ಗೆ ಹೋಮ-ಹವನದೊಂದಿಗೆ ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.

ಸಂತೃಪ್ತಿಗಿಂತ ಮಿಗಿಲಾದ ಸಂಪತ್ತಿಲ್ಲ : ಶ್ರೀ ರಂಭಾಪುರಿ ಜಗದ್ಗುರುಗಳು

ಭದ್ರಾವತಿ ನಗರದ ಸಹ್ಯಾದ್ರಿ ಬಡಾವಣೆಯಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದಲ್ಲಿ  ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
    ಭದ್ರಾವತಿ : ನಾವು ಆಡುವ ಮಾತುಗಳಿಗೆ ಕೊಲ್ಲುವ ಮತ್ತು ಕಾಪಾಡುವ ಸಾಮರ್ಥ್ಯ ಎರಡೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ಬದುಕು ಬಲಗೊಳ್ಳುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. 
    ಜಗದ್ಗುರುಗಳು ನಗರದ ಸಹ್ಯಾದ್ರಿ ಬಡಾವಣೆಯಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.  ಮನುಷ್ಯನ ಮನಸ್ಸು ಸಿರಿವಂತವಾದರೆ ಸಂಪತ್ತು ಇಲ್ಲದಿದ್ದರೂ ನಾವು ಸಿರಿವಂತರೆ. ಮನಸ್ಸೇ ಬಡವಾಗಿದ್ದರೆ ನಮ್ಮಲ್ಲಿ ಸಂಪತ್ತು ಇದ್ದರೂ ನಾವು ಬಡವರೇ. ಸಂತೃಪ್ತಿಗಿಂತ ಶ್ರೇಷ್ಠವಾದ ಸಂಪತ್ತಿಲ್ಲ ಎಂದರು. 
    ಹಣ ಇವತ್ತಲ್ಲ ನಾಳೆಯಾದರೂ ಸಂಪಾದಿಸಬಹುದು. ಆದರೆ ಜೊತೆಗಿರುವ ವ್ಯಕ್ತಿಯನ್ನು ಕಳೆದುಕೊಳ್ಳಬಾರದು. ಸಮಯ, ಸ್ನೇಹ ಮತ್ತು ಆರೋಗ್ಯ ಇವುಗಳಿಗೆ ಬೆಲೆ ಕಟ್ಟಲಾಗದು. ಜೀವನದ ಕೆಟ್ಟ ಘಟನೆಗಳನ್ನು ಮರೆತು ಬಿಡಬೇಕು. ಆದರೆ ಅದರಿಂದ ಕಲಿತ ಪಾಠಗಳನ್ನು ಯಾವಾಗಲೂ ಮರೆಯಬಾರದು. ಸಾಸಿವೆಯಷ್ಟು ಸುಖಕ್ಕೆ ಸಾಗರದಷ್ಟು ಕಷ್ಟ ಬಿಟ್ಟಿದ್ದಲ್ಲ. ಸುಖ ದು:ಖಗಳಲ್ಲಿ ಸಮನಾಗಿ ಬಾಳುವುದೇ ಮನುಷ್ಯನ ಗುರಿಯಾಗಬೇಕು ಎಂದರು. 
    ಎಡೆಯೂರು ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠದ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮತ್ತು ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಕೂಡ್ಲಿಗೆರೆ ಹಾಲೇಶ್, ಬಿ.ಕೆ ಜಗನ್ನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಶ್ರೀ ಜಗದ್ಗುರು ರೇಣುಕಾಚಾರ್ಯ ಗುರಕುಲ ಸಾಧಕರಿಂದ ವೇದಘೋಷ, ಚನ್ನಗಿರಿ ಡಾ. ಕೇದಾರ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿಯವರಿಂದ ಪ್ರಾರ್ಥನೆ ಜರುಗಿತು. ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನಿರೂಪಿಸಿದರು. ಮನು ಸರ್ವರನ್ನು ಸ್ವಾಗತಿಸಿ, ಸ್ವಾಮಿ ವಂದಿಸಿದರು.  

Friday, November 15, 2024

ಮದ್ಯಪಾನ ಮಾಡಿ ವಾಹನ ಚಾಲನೆ ೧೦ ಸಾವಿರ ರು. ದಂಡ

ಭದ್ರಾವತಿ ನಗರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಡುವೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವವರಿಗೆ ೧೦ ಸಾವಿರ ರು. ದಂಡ ವಿಧಿಸಿ ಎಚ್ಚರಿಕೆ ನೀಡಿರುವುದು ಇದೀಗ ಗಮನ ಸೆಳೆದಿದೆ. 
    ಭದ್ರಾವತಿ : ನಗರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಡುವೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವವರಿಗೆ ೧೦ ಸಾವಿರ ರು. ದಂಡ ವಿಧಿಸಿ ಎಚ್ಚರಿಕೆ ನೀಡಿರುವುದು ಇದೀಗ ಗಮನ ಸೆಳೆದಿದೆ. 
    ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಸವಾರರನ್ನು ಸಂಚಾರಿ ಪೊಲೀಸರು ತಪಾಸಣೆ ವೇಳೆ ಪತ್ತೆ ಹಚ್ಚಿದ್ದು, ಎರಡು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ನ.೧೧ರಂದು ತಲಾ ೧೦ ಸಾವಿರ ರು. ದಂಡ ಪಡೆಯಲಾಗಿದೆ. 
    ಈ ಕುರಿತು ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದು ಮದ್ಯಪಾನ ಮಾಡಿ ವಾಹನ ಚಲಾಯಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಈಗಾಗಲೇ ಹಲವು ಪ್ರಕರಣಗಳಲ್ಲಿ ಹೆಚ್ಚಿನ ದಂಡ ವಿಧಿಸಿ ವಸೂಲಿ ಮಾಡುವಲ್ಲಿ ಇಲ್ಲಿನ ಸಂಚಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. 
: 9482007466

ವಿಕಲಚೇತನ ಮಕ್ಕಳೊಂದಿಗೆ ಹುಟ್ಟು ಹಬ್ಬದ ಆಚರಣೆ

ಭದ್ರಾವತಿ ಶುಗರ್ ಟೌನ್ ಲಯನ್ಸ್ ಕ್ಲಬ್ ಹಿರಿಯ ಸದಸ್ಯ ನಿತ್ಯಾನಂದ .ಪೈರವರು ಈ ಬಾರಿ ಸಹ ತಮ್ಮ ಹುಟ್ಟುಹಬ್ಬ ವಿಕಲಚೇತನ ಮಕ್ಕಳೊಂದಿಗೆ ಆಚರಿಸಿಕೊಂಡು ಸಂಭ್ರಮಿಸಿದರು. 
    ಭದ್ರಾವತಿ:  ಶುಗರ್ ಟೌನ್ ಲಯನ್ಸ್ ಕ್ಲಬ್ ಹಿರಿಯ ಸದಸ್ಯ ನಿತ್ಯಾನಂದ .ಪೈರವರು ಈ ಬಾರಿ ಸಹ ತಮ್ಮ ಹುಟ್ಟುಹಬ್ಬ ವಿಕಲಚೇತನ ಮಕ್ಕಳೊಂದಿಗೆ ಆಚರಿಸಿಕೊಂಡು ಸಂಭ್ರಮಿಸಿದರು. 
    ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನ ಮಕ್ಕಳ ದಿನಾಚರಣೆಯಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಮಕ್ಕಳಿಗೆ ಸಿಹಿಯೊಂದಿಗೆ ಸಂಭ್ರಮದ ಕ್ಷಣಗಳನ್ನು ಹಂಚಿಕೊಂಡರು. ಅಲ್ಲದೆ ಮಕ್ಕಳಿಗೆ ಅಗತ್ಯ ಪರಿಕರಗಳನ್ನು ವಿತರಿಸಲಾಯಿತು. 
    ಶುಗರ್ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷ ಆರ್. ಉಮೇಶ್ ಹಾಗೂ ಪದಾಧಿಕಾರಿಗಳು, ಹಿರಿಯ ಸದಸ್ಯರು ಮತ್ತು ನಿತ್ಯಾನಂದ .ಪೈ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು. 

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಈ ಬಾರಿ ಮಕ್ಕಳ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು. 
    ಭದ್ರಾವತಿ:  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ನಗರದ ಹೊಸಸೇತುವೆ ರಸ್ತೆಯ ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಈ ಬಾರಿ ಮಕ್ಕಳ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು. 
    ವಿದ್ಯಾ ಸಂಸ್ಥೆಯ ವಿವಿಧ ವಿಭಾಗಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳಾದ ವಿ.ಎಸ್ ರೇವತಿ, ಎಂ. ಆಕೃತಿ ಕುಮಾರಿ ಮತ್ತು ಎಸ್. ಶ್ರೀದೇವಿ ಮಕ್ಕಳ ದಿನಾಚರಣೆ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. 
    ವಿದ್ಯಾರ್ಥಿನಿ ಬಿ.ಎಲ್ ಸುರಭಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ, ಬಿ. ಇಡಿ ವಿಭಾಗದ ಪ್ರಾಂಶುಪಾಲ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗಗೌಡ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
    ಬಿ. ಇಡಿ ವಿಭಾಗದ ಪ್ರಶಿಕ್ಷಣಾರ್ಥಿ ಎಚ್.ಎಸ್ ಸಂಭ್ರಮ ಕಾರ್ಯಕ್ರಮ ನಿರೂಪಿಸಿ, ಎಂ.ಟಿ ನೀಲಾ ಪ್ರಾರ್ಥಿಸಿದರು. ಕೆ. ಸ್ಪೂರ್ತಿ ಸ್ವಾಗತಿಸಿ, ಬಿ. ನಾಗರತ್ನ ವಂದಿಸಿದರು.