ಶುಕ್ರವಾರ, ನವೆಂಬರ್ 29, 2024

ಬಿ.ವಿ ಪ್ರಕಾಶ್ ನಿಧನ

ಬಿ.ವಿ ಪ್ರಕಾಶ್ 
ಭದ್ರಾವತಿ : ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ, ಆರೋಗ್ಯ ಇಲಾಖೆ ನಿವೃತ್ತ ನೌಕರ ಬಿ.ವಿ ಪ್ರಕಾಶ್(೬೪) ಗುರುವಾರ ರಾತ್ರಿ ನಿಧನ ಹೊಂದಿದರು. 
ಪತ್ನಿ, ಪುತ್ರಿ ಹಾಗು ಪುತ್ರ ಇದ್ದಾರೆ. ಪ್ರಕಾಶ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ೨೦೨೦ರಲ್ಲಿ ನಿವೃತ್ತಿ ಹೊಂದಿದ್ದರು. 
ಇವರ ನಿಧನಕ್ಕೆ ನಗರದ ಆರೋಗ್ಯ ಇಲಾಖೆ ನೌಕರರು, ಸರ್ಕಾರಿ ನಿವೃತ್ತ ನೌಕರರ ಸಂಘ ಸೇರಿದಂತೆ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  
: 9482007466

ಗುರುವಾರ, ನವೆಂಬರ್ 28, 2024

ಕುಮಾರ್‌ಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

ಕುಮಾರ್ ಭದ್ರಾವತಿ 
ಭದ್ರಾವತಿ: ನಾಡು, ನುಡಿ, ಕಲೆ, ಸಾಹಿತ್ಯ, ಜನಪದ ಮತ್ತು ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಲಾಭೂಮಿ ಪ್ರತಿಷ್ಠಾನದ ವತಿಯಿಂದ ನೀಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ನಗರದ ಜನ್ನಾಪುರ ನಿವಾಸಿ ಕುಮಾರ್ ಭದ್ರಾವತಿರವರಿಗೆ ಲಭಿಸಿದೆ. 
ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್‌ರವರು ಸಾಹಿತ್ಯ ಹಾಗು ರಂಗಭೂಮಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ನ.೨೯ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಛಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.   
ಕುಮಾರ್ ಅವರನ್ನು ಸಿದ್ಧರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 

ಅಮಲೋದ್ಬವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಭದ್ರಾವತಿ ನಗರದ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವದ ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಮಾತೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಹಾಸನ ಧರ್ಮ ಕೇಂದ್ರದ ಧರ್ಮ ಗುರುಗಳಾದ ಪ್ಯಾಟ್ರಿಕ್ ಜೋನಸ್ ಚಾಲನೆ ನೀಡಿದರು.
    ಭದ್ರಾವತಿ: ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ನಗರದ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. 
    ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಮಾತೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಹಾಸನ ಧರ್ಮ ಕೇಂದ್ರದ ಧರ್ಮ ಗುರುಗಳಾದ ಪ್ಯಾಟ್ರಿಕ್ ಜೋನಸ್ ಚಾಲನೆ ನೀಡಿದರು.
    ಧರ್ಮ ಕೇಂದ್ರದ ಗುರುಗಳಾದ ಲ್ಯಾನ್ಸಿ ಡಿಸೋಜ, ಹಿರಿಯೂರು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಪೆರೇರ, ಧರ್ಮ ಭಗಿನಿಯರು, ಭಕ್ತಾದಿಗಳು ಪಾಲ್ಗೊಂಡಿದ್ದರು. ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ತರೀಕೆರೆ ರಸ್ತೆಯ ಬೀದಿಬದಿ ವ್ಯಾಪಾರಿಗಳಿಗೆ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಪುಡ್ ಕೋರ್ಟ್

ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅಧ್ಯಕ್ಷತೆಯಲ್ಲಿ ಸಭೆ 

ಭದ್ರಾವತಿ ನಗರಸಭೆ ವತಿಯಿಂದ ನಗರದ ತರೀಕೆರೆ ರೈಲ್ವೆ ಮೇಲ್ಸೇತುವೆ ಕೆಳಗೆ ಪುಡ್ ಕೋರ್ಟ್ ನಿರ್ಮಿಸುವ ಸಂಬಂಧ ಗುರುವಾರ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 
    ಭದ್ರಾವತಿ: ನಗರದ ತರೀಕೆರೆ ರಸ್ತೆಯ ಬೀದಿಬದಿ ವ್ಯಾಪಾರಿಗಳಿಗೆ ನಗರಸಭೆ ವತಿಯಿಂದ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಪುಡ್ ಕೋರ್ಟ್ ನಿರ್ಮಿಸುವ ಸಂಬಂಧ ಗುರುವಾರ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಿತು. 
    ತರೀಕೆರೆಯ ರಸ್ತೆ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸುಸಜ್ಜಿತವಾದ ಪುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಪುಡ್‌ಕೋರ್ಟ್ ಸಂಬಂಧ ನಡೆಯುತ್ತಿರುವ ೩ನೇ ಸಭೆ ಇದಾಗಿದೆ. ಇದು ಅಂತಿಮ ಸಭೆ ಎಂದು ವ್ಯಾಪಾರಿಗಳು ಭಾವಿಸಿಕೊಳ್ಳಬೇಕು. ಈ ಹಿಂದೆ ಮಹಾತ್ಮಗಾಂಧಿ ವೃತ್ತದ ಬಳಿ ಪುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಈ ಭಾಗದಲ್ಲಿ ಪುಡ್ ಕೋರ್ಟ್ ನಿರ್ಮಿಸುವುದರಿಂದ ಜನಸಂದಣಿ ಹೆಚ್ಚಾಗುವ ಜೊತೆಗೆ ವ್ಯಾಪಾರಕ್ಕೆ ತೊಂದರೆಯಾಗುತ್ತಿತ್ತು. ಈ ಹಿನ್ನಲೆಯಲ್ಲಿ ಇದೀಗ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಪುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿದೆ. ವ್ಯಾಪಾರಸ್ಥರು ಸಹಕರಿಸಬೇಕೆಂದು ಹಿರಿಯ ಸದಸ್ಯ ಬಿ.ಕೆ ಮೋಹನ್ ಮನವಿ ಮಾಡಿದರು. 
    ಪುಡ್ ಕೋರ್ಟ್ ನೀಲನಕ್ಷೆ ಸಹಿತ ನಗರಸಭೆ ಇಂಜಿನಿಯರ್ ಸಂತೋಷ್ ಪಾಟೀಲ್ ವಿವರವಾದ ಮಾಹಿತಿ ನೀಡಿದರು. ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಮಾತನಾಡಿ, ವ್ಯಾಪಾರಸ್ಥರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಬೀದಿ ವ್ಯಾಪಾರಸ್ಥರ ಹಿತರಕ್ಷಣೆ ಮಾಡುವುದು ನಮ್ಮ ಉದ್ದೇಶವಾಗಿದೆ. ಯಾರು ಸಹ ಆತಂಕಪಡುವುದು ಬೇಡ ಎಂದರು. 

ಪುಡ್ ಕೋರ್ಟ್ ವಿವರ: 

ಪುಡ್ ಕೋರ್ಟ್ ಒಟ್ಟು ೧೬ ಮೀಟರ್ ಉದ್ದ ಹಾಗು ೮ ಮೀಟರ್ ಅಗಲವಿದ್ದು, ಮಧ್ಯದಲ್ಲಿ ರಸ್ತೆ, ಎರಡು ಬದಿ ಮಳಿಗೆಗಳು. ಎರಡು ಕಡೆ ಶೌಚಾಲಯ, ಎರಡು ಕಡೆ ಮಧ್ಯದಲ್ಲಿ ೧ ಮೀಟರ್ ಅಗಲದ ರಸ್ತೆ,  ಸದ್ಯದ ನೀಲನಕ್ಷೆಯಲ್ಲಿ ೩*೩ ಅಳತೆಯಲ್ಲಿ ಮಳಿಗೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ೨೬ ವ್ಯಾಪಾರಿಗಳಿಗೆ ಬೇಡಿಕೆಗಳು ಬಂದಿರುವ ಹಿನ್ನಲೆಯಲ್ಲಿ ಮಳಿಗೆಗಳ ವಿಸ್ತೀರ್ಣ ಕಡಿಮೆಗೊಳಿಸಲು ಉದ್ದೇಶಿಸಲಾಗಿದೆ. ಈ ಹಿಂದೆ ೨.೫ ಕೋ. ರು. ವೆಚ್ಚೆದಲ್ಲಿ ಪುಡ್ ಕೋರ್ಟ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ತಿರಸ್ಕಾರಗೊಂಡಿದ್ದು, ಇದೀಗ ನಗರಸಭೆ ಅನುದಾನದಲ್ಲಿ ಪುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. 

    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸದಸ್ಯ ವಿ. ಕದಿರೇಶ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುದೀಪ್ ಕುಮಾರ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತರೀಕೆರೆ ರಸ್ತೆಯ ಬಹುತೇಕ ಬೀದಿಬದಿ ವ್ಯಾಪಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ನಗರಸಭೆ ಮಾಜಿ ಸದಸ್ಯ ಆರ್. ಚಿನ್ನಪ್ಪ ನಿಧನ

ಆರ್. ಚಿನ್ನಪ್ಪ 
    ಭದ್ರಾವತಿ: ತಾಲೂಕಿನ ಸುಣ್ಣದ ಹಳ್ಳಿ ಮಾರುತಿ ನಗರ ಬಸಾಪುರ ನಿವಾಸಿ, ನಗರಸಭೆ ಮಾಜಿ ಸದಸ್ಯ ಆರ್. ಚಿನ್ನಪ್ಪ(೬೩) ಗುರುವಾರ ನಿಧನ ಹೊಂದಿದರು. 
    ಪತ್ನಿ, ಪುತ್ರ ಹಾಗು ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಚಿನ್ನಪ್ಪ ಹಿರಿಯ ಛಾಯಾ ಗ್ರಾಹಕರಾಗಿ, ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಗರಸಭೆ ಸಮೀಪದ ಶ್ರೀ ನೇತಾಜಿ ಸುಭಾಷ್‌ಚಂದ್ರ ಬೋಸ್ ಆಟೋ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 
    ಇವರ ನಿಧನಕ್ಕೆ ಶ್ರೀ ನೇತಾಜಿ ಸುಭಾಷ್‌ಚಂದ್ರ ಬೋಸ್ ಆಟೋ ಚಾಲಕರ ಸಂಘ, ನಗರಸಭೆ ಹಾಲಿ ಮತ್ತು ಮಾಜಿ ಸದಸ್ಯರು, ಛಾಯಾಗ್ರಾಹಕರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  

ತಾಲೂಕು ಪಂಚಾಯಿತಿ ಕಛೇರಿಯಲ್ಲಿ ಲೋಕಾಯುಕ್ತ ನಿರೀಕ್ಷಕರಿಂದ ಅಹವಾಲು ಸ್ವೀಕಾರ

ಲೋಕಾಯುಕ್ತ ಸಭೆ, ಕಾರ್ಯ ಚಟುವಟಿಕೆ ಕುರಿತು ಮಾಹಿತಿ ನೀಡಿ : ವೀರಬಸಪ್ಪ 

ಭದ್ರಾವತಿ ತಾ.ಪಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಲೋಕಾಯುಕ್ತ ನಿರೀಕ್ಷಕ ವೀರಬಸಪ್ಪ ಎಲ್.ಕುಸಲಾಪುರರವರು ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು.   
    ಭದ್ರಾವತಿ: ಜನರಿಗೆ ಮಾಧ್ಯಮಗಳಿಂದ ಮಾಹಿತಿ ದೊರೆತರೆ ನಾಲ್ಕಾರು ಮಂದಿ ತಮ್ಮ ಬಳಿ ನೋವನ್ನು ಹೇಳಿಕೊಳ್ಳುತ್ತಾರೆ. ಅವರಲ್ಲಿ ಒಬ್ಬರಿಗಾದರೂ ನ್ಯಾಯ ಸಿಕ್ಕರೆ ಲೋಕಾಯುಕ್ತ ಇರುವುದಕ್ಕೂ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯ ಸಭೆ, ಕಾರ್ಯ ಚಟುವಟಿಕೆಗಳ ಕುರಿತು ಮಾಧ್ಯಮಗಳಿಗೆ ಸರಿಯಾಗಿ ಮಾಹಿತಿ ನೀಡಬೇಕು. ಇಲ್ಲದಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಅನುಸರಿಸಬೇಕಾಗುತ್ತದೆ  ಎಂದು ಲೋಕಾಯುಕ್ತ ನಿರೀಕ್ಷಕ ವೀರಬಸಪ್ಪ ಎಲ್. ಕುಸಲಾಪುರ ಎಚ್ಚರಿಸಿದರು. 
    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅರ್ಜಿ ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿ, ನಾವು ಕಾಟಾಚಾರಕ್ಕೆ ಸಭೆ ನಡೆಸಲು ಬರಲ್ಲ ಅಥವಾ ಅಧಿಕಾರಿಗಳ ಹೊಟ್ಟೆ ಮೇಲೆ ಹೊಡೆಯಲು ಬರಲ್ಲ. ದಬ್ಬಾಳಿಕೆ, ಅನ್ಯಾಯಕ್ಕೆ ಒಳಗಾದವರ, ಶೋಷಣೆಗೆ ಒಳಗಾದವರ ಸಂಕಷ್ಟಗಳಿಗೆ ಸ್ಪಂದಿಸುವುದು ಇಲಾಖೆ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಇಲಾಖೆಯ ಸಭೆ, ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಬೇಕು ಎಂದರು. 
    ಸಾರ್ವಜನಿಕರಿಗೆ ಸರಿಯಾದ ವೇಳೆಗೆ ಅವರ ಕೆಲಸ ಮಾಡಿಕೊಟ್ಟರೆ ಅದೇ ಪುಣ್ಯದ ಕೆಲಸವಾಗುತ್ತದೆ. ಅಲೆದಾಡಿಸುವುದು ಬಿಡಬೇಕು. ಇದನ್ನು ಎಲ್ಲಾ ಇಲಾಖೆಗಳ ಅಧಿಕಾರಿಗಳು ತಿಳಿದುಕೊಳ್ಳಿ ಎಂದರು. 
    ತಾಲೂಕು ಕಚೇರಿ, ನಗರಸಭೆ, ನಾಲ್ಕಾರು ಪಿಡಿಓಗಳ ವಿರುದ್ದ ಬಹಳ ದೂರುಗಳು ಕೇಳಿ ಬಂದಿದೆ. ಸರಿಪಡಿಸಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕೈಗೊಳ್ಳುವುದಾಗಿ  ಎಚ್ಚರಿಸಿದರು.
    ಸಭೆ ಆರಂಭದಲ್ಲಿ ಅರ್ಜಿದಾರ ಪುಟ್ಟಸ್ವಾಮಿ, ಜೇಡಿಕಟ್ಟೆ ಸರ್ವೇ ನಂ ೬೫ರ ಜಮೀನು ಪೋಡು ಮಾಡಿಕೊಡುವಂತೆ ತಾಲೂಕು ಕಚೇರಿಗೆ ಅರ್ಜಿ ನೀಡಿ ೪ ವರ್ಷಗಳಾದರೂ ಅಲೆದಾಡಿಸುತ್ತಿದ್ದಾರೆ. ಕಚೇರಿಗೆ ಹೋದರೆ ಸರಿಯಾಗಿ ಮಾಹಿತಿ ನೀಡದೆ ಸತಾವಣೆ ಮಾಡುತ್ತಾರೆಂದು ಆರೋಪಿಸಿದರು. ಆಗ ನಿರೀಕ್ಷಕ ವೀರಬಸಪ್ಪ ನಾವು ಒಂದು ತಿಂಗಳಲ್ಲಿ ಎಡಿಎಲ್‌ಆರ್ ಅವರಿಂದ ವರದಿ ತರಿಸಿಕೊಂಡಿದ್ದೇವೆ ಎಂದರು. ಆಗ ಸರ್ವೇಯರ್ ಯತೀಶ್ ಮಾಹಿತಿ ನೀಡಿದರು.
    ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್.ಗೌಡ, ಜನ್ನಾಪುರ ಅಂತರಘಟ್ಟಮ್ಮ ದೇವಾಲಯದ ಬಳಿ ನಗರಸಭೆಯು ಅಕ್ರಮ ಖಾತೆ ದಾಖಲು ಮಾಡಿದೆ ಎಂದು ಫಿಲ್ಟರ್ ಶೆಡ್ ನಾಗರೀಕ ಹಿತ ರಕ್ಷಣಾ ಸಮಿತಿವತಿಯಿಂದ ದೂರು ಸಲ್ಲಿಸಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. 
    ಡಿಬಿ ಹಳ್ಳಿ ಯಡೇಹಳ್ಳಿ ಸರ್ವೇ ನಂ. ೬೬ರಲ್ಲಿ ೩೪ ಜನರಿಗೆ ಸರ್ಕಾರ ತಲಾ ೨ ಎಕರೆ  ಭೂಮಿ ಮಂಜೂರು ಮಾಡಿದ್ದರೂ ಸಹ ಅರಣ್ಯ ಇಲಾಖೆ ಸಾಗುವಳಿ ಮಾಡಲು ಬಿಡುತ್ತಿಲ್ಲ. ಪಿಟಿಸಿಎಲ್ ಭೂಮಿಯನ್ನು ಬಿಡಿಸಿಕೊಟ್ಟ ಮೇಲೆ ಮತ್ತೆ ಉಪ ವಿಭಾಗಾಧಿಕಾರಿಗಳು ವಿರೋಧಿಗಳಿಗೆ ರಕ್ಷಣೆ ನೀಡುತ್ತಾ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ಆರೋಪಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ದೂರು ನೀಡಿದರು.
    ಜನ್ನಾಪುರದ ಫಿಲ್ಟರ್‌ಶೆಡ್ ನ್ಯಾಯಬೆಲೆ ಅಂಗಡಿ ಮೇಲೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್.ಗೌಡ ಎಂಬುವರು ಆಗಾಗ್ಗೆ ಸುಳ್ಳು ಕೇಸು ಹಾಕಿಸುತ್ತಿದ್ದಾರೆಂದು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಸಿ.ಆರ್ ಶಿವರಾಮ್ ದೂರು ಸಲ್ಲಿಸಿದರು.
    ಜೇಡಿಕಟ್ಟೆ ಸರ್ವೇ ನಂ. ೭೧ರಲ್ಲಿ ೩.೩೯ ಎಕರೆ ಬೀಳು ಬಿದ್ದಿದ್ದ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿ.ತೀರ್ಥೇಶ್ ದೂರು ನೀಡಿದರು. 
    ದಾನವಾಡಿ ಗ್ರಾಮದಲ್ಲಿ ೧.೩೨ ಎಕರೆ ಜಮೀನು ಇದ್ದು, ಗಂಗಾ ಕಲ್ಯಾಣ ಯೋಜನೆ ಮಂಜೂರಾಗಿದ್ದರೂ ಸಹ ಇನ್ನೂ ಹಣ ನೀಡಿಲ್ಲವೆಂದು ಶಿವಮ್ಮ ಎಂಬುವರು ದೂರು ನೀಡಿದರು. 
    ಉಪ ತಹಸೀಲ್ದಾರ್ ಉಮೇಶ್, ತಾ.ಪಂ. ಸಹಾಯಕ ನಿರ್ದೇಶಕ ಉಪೇಂದ್ರ ಬಾಬು ಉಪಸ್ಥಿತರಿದ್ದರು. ಸಭೆಯಲ್ಲಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಟೀಕಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಬುಧವಾರ, ನವೆಂಬರ್ 27, 2024

ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಆಸ್ಪತ್ರೆಯಲ್ಲಿನ ನ್ಯೂನ್ಯತೆಗಳು, ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳುವ ಭರವಸೆ 

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಆಸ್ಪತ್ರೆಗೆ ಬೆಳಿಗ್ಗೆ ಆಗಮಿಸಿದ ಸಚಿವರು ಸ್ಕ್ಯಾನಿಂಗ್, ಡಯಾಲಿಸಿಸ್, ತುರ್ತು ಚಿಕಿತ್ಸಾ ವಿಭಾಗ, ರೋಗಿಗಳ ತಪಾಸಣಾ ಕೊಠಡಿ, ವೈದ್ಯರ ಕೊಠಡಿ, ಔಷಧಿ ವಿತರಣೆ ಕೊಠಡಿ ಸೇರಿದಂತೆ ಇನ್ನಿತರ ಕೊಠಡಿಗಳ ಪರಿಶೀಲನೆ ನಡೆಸಿ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತೆಯರು ಹಾಗು ಸಿಬ್ಬಂದಿಗಳ ಜೊತೆ ಚರ್ಚಿಸಿದರು. 
    ಈ ಸಂದರ್ಭದಲ್ಲಿ ಅಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆಯಲಾಯಿತು. ಅಲ್ಲದೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಈ ನಡುವೆ ಆಸ್ಪತ್ರೆಯಲ್ಲಿನ ನ್ಯೂನ್ಯತೆಗಳ ಕುರಿತು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸ್ಥಳೀಯರಿಂದ ಸಚಿವರಿಗೆ ದೂರುಗಳು ಸಹ ಸಲ್ಲಿಕೆಯಾದವು. 


    ಆಸ್ಪತ್ರೆ ಪರಿಶೀಲನೆ ನಂತರ ಮಾತನಾಡಿದ ಸಚಿವರು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗು ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿನ ನ್ಯೂನ್ಯತೆ ಹಾಗು ಸಮಸ್ಯೆಗಳ ಕುರಿತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಶಾಸಕರು ಹಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳನ್ನು ಸಹ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು. ನಂತರ ಸಚಿವರು ಭದ್ರಾಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಖಾಲಿ ಇರುವ ಜಾಗ ಪರಿಶೀಲನೆ ನಡೆಸಿ ತೆರಳಿದರು.
    ಶಾಸಕರ ಮನವಿ : 
    ಜನಸಂಖ್ಯೆಯಲ್ಲಿ ತಾಲೂಕು ಜಿಲ್ಲೆಯಲ್ಲಿ ೨ನೇ ಸ್ಥಾನದಲ್ಲಿದ್ದು, ಪ್ರಸ್ತುತ ೧೦೦ ಹಾಸಿಗೆಯುಳ್ಳ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ೧೦೦೦ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ಜಾಗದ ಕೊರತೆ ಇದ್ದು, ಅಲ್ಲದೆ ಹಲವು ಸಮಸ್ಯೆಗಳಿಂದ ಕೂಡಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಭದ್ರಾ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಸುಮಾರು ೮ ಎಕರೆ ೦೫ ಗುಂಟೆ ಜಾಗವಿದ್ದು, ಈ ಜಾಗದಲ್ಲಿ ಹೊಸದಾಗಿ ೧೫೦ ಹಾಸಿಗೆಯ ಆಸ್ಪತ್ರೆ ಹಾಗು ತಾಯಿ ಮತ್ತು ಮಗು ಆಸ್ಪತ್ರೆ ಮಂಜೂರು ಮಾಡುವುದು. 
    ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ಸಿಂಗನಮನೆ(ಬಿ.ಆರ್ ಪ್ರಾಜೆಕ್ಟ್) ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವುದು. ನಗರಸಭೆ ವಾರ್ಡ್ ನಂ.೧ರ ಜೇಡಿಕಟ್ಟೆ ಹಾಗು ವಾರ್ಡ್ ನಂ.೨೫ರ ಬೊಮ್ಮನಕಟ್ಟೆ ಮತ್ತು ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಹಳ್ಳಿಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಶಾಸಕರು ಮನವಿ ಮಾಡಿದ್ದಾರೆ. 
    ವೈದ್ಯರು, ಸಿಬ್ಬಂದಿಗಳ ಬೇಡಿಕೆ: 
    ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿನ ಸಮಸ್ಯೆಗಳು, ಬೇಡಿಕೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗು ವೈದ್ಯಕೀಯ ಶಿಕ್ಷಣ ಇಲಾಖೆ ತಾಲೂಕು ನೌಕರರ ಸಂಘದ ವತಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. 
    ಇಲಾಖೆಯ ಪ್ರತಿ ವೃಂದಗಳಲ್ಲೂ ಸಾಕಷ್ಟು ಖಾಲಿ ಹುದ್ದೆಗಳಿದ್ದು, ಇದರಿಂದಾಗಿ ಇಲಾಖೆಯ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಅಲ್ಲದೆ ಸಿಬ್ಬಂದಿಗಳಿಗೆ ಕರ್ತವ್ಯದ ಒತ್ತಡಗಳಿಂದಾಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು. ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು ೬೦೦ ರಿಂದ ೬೫೦ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಎಲ್ಲಾ ವೃಂದಗಳ ಮೇಲ್ವಿಚಾರಣೆ ಹಾಗು ಆಡಳಿತಾತ್ಮಕ ಕೇಂದ್ರ ಕಛೇರಿ ತಾಲೂಕು ಕಛೇರಿಯಾಗಿರುತ್ತದೆ. ಆದರೆ ನಮಗೆ ನಮ್ಮದೇ ಆದ ಪ್ರತ್ಯೇಕ ಕಟ್ಟಡ ಹಾಗೂ ಸಭಾಂಗಣದ ಕೊರತೆ ಇದ್ದು, ಈ ಹಿನ್ನಲೆಯಲ್ಲಿ ಒಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿ ಕಟ್ಟಡ ನಿರ್ಮಾಣ ಮಾಡಿಕೊಡುವಂತೆ ಕೋರಲಾಗಿದೆ. 
    ಇಲಾಖೆಯ ಲೆಕ್ಕಶೀರ್ಷಿಕೆ-೦೨, ೦೩ರ ಅಡಿಯಲ್ಲಿ ಸುಮಾರು ೮೦ ಜನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅನುದಾನದ ಕೊರತೆಯಿಂದಾಗಿ ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ. ಇದರಿಂದಾಗಿ ಈ ಸಿಬ್ಬಂದಿಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಅನುದಾನ ಬಿಡುಗಡೆಗೊಳಿಸುವ ಮೂಲಕ ವೇತನ ಪಾವತಿಸುವುದು. ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಕಾರ್ಯಕ್ರಮಗಳು ಸೇರಿದಂತೆ ಇಲಾಖಾ ವರದಿಗಳು ಹಾಗು ದಾಖಲಾತಿಗಳನ್ನು ಇಲಾಖಾ ತಂತ್ರಾಂಶದಲ್ಲಿಯೇ ನಮೂದಿಸಬೇಕಾಗಿರುವುದರಿಂದ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಡಾಟಾ ಎಂಟ್ರಿ ಆಪರೇಟರ್(ಡಿಇಓ) ಹುದ್ದೆಗಳನ್ನು ಸೃಜಿಸಿ ಮಾನವ ಸಂಪನ್ಮೂಲ ಒದಗಿಸಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡುವುದು ಹಾಗು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗಳ ಸುರಕ್ಷತೆಗಾಗಿ ಪೊಲೀಸ್ ಚೌಕಿ ಜೊತೆಗೆ ಸಿಬ್ಬಂದಿ ನೇಮಿಸುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಅಧ್ಯಕ್ಷೆ ಕೆ. ಸುಶೀಲಾ ಬಾಯಿ ಮತ್ತು ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೋಮ್ಲಾಪುರ ಮನವಿ ಮಾಡಿದ್ದಾರೆ. 

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯರಿಂದ ದೂರು: 
    ತಾಲೂಕಿನ ಸರ್ಕಾರಿ ಆಸ್ಪತ್ರೆಗಳ ನ್ಯೂನ್ಯತೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ದೂರುಗಳು ಸಲ್ಲಿಕೆಯಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ. ತುರ್ತು ಚಿಕಿತ್ಸೆಗಾಗಿ ಬಂದವರನ್ನು ಸಹ ಗಂಟೆಗಟ್ಟಲೆ ಕಾಯಿಸಲಾಗುತ್ತಿದ್ದು, ಇದರಿಂದಾಗಿ ರೋಗಿಗಳು ನರಳುವ ಸ್ಥಿತಿಗೆ ತಲುಪಿ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡದೆ ಹೊರಗಿನ ತಮ್ಮದೇ ಆದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸುತ್ತಿದ್ದಾರೆ. ಅಲ್ಲದೆ ಸಣ್ಣಪುಟ್ಟ ಚಿಕಿತ್ಸೆಗಳಿಗೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗಳಿಗೆ ಬಡ ರೋಗಿಗಳನ್ನು ಕಳುಹಿಸುವ ಮೂಲಕ ಬೇಜವಾಬ್ದಾರಿತನದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ಸಾಮಾಜಿಕ ಹೋರಾಟಗಾರ ಸಿ ತೀರ್ಥೇಶ್ ದೂರು ಸಲ್ಲಿಸಿದ್ದಾರೆ. 
    ಅಲ್ಲದೆ ಮತ್ತೊಂದು ದೂರಿನಲ್ಲಿ ನಗರದ ಖಾಸಗಿ ಆಸ್ಪತ್ರೆ ಒಂದರಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು, ಕೆಲವೊಂದು ಕಾರಣಗಳನ್ನು ನೆಪವಾಗಿಟ್ಟುಕೊಂಡು ಲಕ್ಷಾಂತರ ಹಣ ಪಡೆದು ಕಾನೂನು ಬಾಹಿರವಾಗಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಆ ಆಸ್ಪತ್ರೆ ಹಾಗು ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 
    ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ದೂರು ಸಲ್ಲಿಸಿ, ನಗರ ಪ್ರದೇಶದಲ್ಲಿರುವ ಆಶ್ವತ್ಥ್ ನಗರ ಮತ್ತು ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದೆ ಲೋಸ ಎಸಗುತ್ತಿದ್ದಾರೆ. ಇದರಿಂದಾಗಿ ಈ ವ್ಯಾಪ್ತಿಯ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಬಸವರಾಜ ಬಿ. ಆನೇಕೊಪ್ಪ, ಲತಾ ಚಂದ್ರಶೇಖರ್, ಸರ್ವಮಂಗಳ ಭೈರಪ್ಪ, ಕೋಟೇಶ್ವರ ರಾವ್, ವಿ. ಕದಿರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್‌ರವರು ಭೇಟಿ ನೀಡಿದ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿರುವ ಖಾಲಿ ಜಾಗ ಪರಿಶೀಲನೆ ನಡೆಸಿದರು.