Friday, November 29, 2024

ಭಾಷಾ ಅಭಿಮಾನದೊಂದಿಗೆ ನೆಲ, ಜಲ, ಭಾಷೆ ಉಳಿವಿಗಾಗಿ ಹೋರಾಡಿ : ಬಿ.ಕೆ ಜಗನ್ನಾಥ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ  ೬೯ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ನೃತ್ಯ ಸಂಭ್ರಮ ಹಾಗು ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಯಮಿ ಬಿ.ಕೆ ಜಗನ್ನಾಥ, ಎಸ್. ಮಣಿಶೇಖರ್, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ : ಪ್ರತಿಯೊಬ್ಬರು ಕನ್ನಡ ಭಾಷೆ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕು. ಈ ಮೂಲಕ ನೆಲ, ಜಲ, ಭಾಷೆ ಉಳಿವಿಗಾಗಿ ಹೋರಾಡಬೇಕೆಂದು ಉದ್ಯಮಿ ಬಿ.ಕೆ ಜಗನ್ನಾಥ ಹೇಳಿದರು. 
    ಅವರು ನಗರಸಭೆ ವ್ಯಾಪ್ತಿಯ ಸಿದ್ದರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ  ೬೯ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ನೃತ್ಯ ಸಂಭ್ರಮ ಹಾಗು ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ಕನ್ನಡ ನಾಡಿನಲ್ಲಿರುವ ನಾವೆಲ್ಲರೂ ಒಂದೇ. ನಮ್ಮ ಮಾತೃ ಭಾಷೆ ಕನ್ನಡ. ನಾವೆಲ್ಲರೂ ನೆಲ, ಜಲ, ಭಾಷೆ ಉಳಿವಿಗಾಗಿ ಕಂಕಣ ಬದ್ಧರಾಗಬೇಕೆಂದರು. 
    ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಯುವ ಮುಖಂಡ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹಾಗು ಭದ್ರಾವತಿ ರಾಮಾಚಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಮಾತನಾಡಿದರು. 

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ  ೬೯ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. 
    ಪ್ರಮುಖರಾದ ಎಸ್.ಬಿ ಶಿವಲಿಂಗಪ್ಪ, ಅಪೇಕ್ಷ ಮಂಜುನಾಥ್, ಡಿ.ಬಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆ, ಎ.ಎಸ್ ಪದ್ಮಾವತಿ, ಬಸವರಾಜಯ್ಯ, ವೈ.ಕೆ ಹನುಮಂತಯ್ಯ, ಶಶಿಕುಮಾರ್ ಗೌಡ, ಭದ್ರಾವತಿ ಕುಮಾರ್, ಬಿ.ಎನ್ ರಾಜು, ಕೆ.ಆರ್ ಪ್ರಶಾಂತ್, ಎನ್. ರುದ್ರಾರಾಧ್ಯ, ಎಸ್.ಕೆ ಮೋಹನ್, ರಮೇಶ್ ಪಿ. ನಾಯ್ಕ, ನಿರ್ಮಲ ಮೇರಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ರಾಜ್ಯೋತ್ಸವ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗು ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಕೆ.ಎಸ್ ನಾಗರಾಜ್, ಉಪಾಧ್ಯಕ್ಷರಾದ ರುದ್ರಪ್ಪ, ನಾರಾಯಣ ರೆಡ್ಡಿ, ಮುಖ್ಯ ಸಂಚಾಲಕ ಎನ್.ಸಿ ಪ್ರಕಾಶ್, ಸಹ ಕಾರ್ಯದರ್ಶಿ ಆರ್. ಅಶೋಕ ಆರ್. ಕೆಲಗೇರಿ,  ಸದಸ್ಯರಾದ ಭಾಗಭೂಷಣ, ಲಕ್ಷ್ಮೀಕಾಂತ, ವಿ. ರಮೇಶ್, ಜಿ.ಸಿ ಸದಾಶಿವ, ಎಸ್. ಪೂರ್ಣಿಮಾ ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. 
    ಪ್ರಧಾನ ಕಾರ್ಯದರ್ಶಿ ಬಿ.ಎ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಂತೋಷ್ ಸ್ವಾಗತಿಸಿದರು. 

ಒಂದೇ ಕೈನಲ್ಲಿ ಕ್ರೀಡೆ : ಪ್ಯಾರಾ ಬ್ಯಾಡ್ಮಿಂಟನ್‌ನಲ್ಲಿ ಅದ್ಭುತ ಸಾಧನೆ

ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ನಿತಿನ್ ಜೋಸ್ 

೭ನೇ ಕೇರಳ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ  ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಮತ್ತು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿರುವ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕ ನಿತಿನ್ ಜೋಸ್. 
    * ಅನಂತಕುಮಾರ್ 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಿತಿನ್ ಜೋಸ್‌ರವರು ಕೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. 
    ನಿತಿನ್‌ರವರು ಮೂಲತಃ ಕೇರಳ ರಾಜ್ಯದವರಾಗಿದ್ದು,  ವಿಕಲಚೇತನರಾಗಿದ್ದಾರೆ. ಇವರಿಗೆ ಹುಟ್ಟುವಾಗಲೇ ಬಲ ಕೈ ಇಲ್ಲವಾಗಿದೆ. ಇವರು ಕೇರಳ ರಾಜ್ಯದಲ್ಲಿಯೇ ವಿದ್ಯಾಭ್ಯಾಸ ಪೂರೈಸಿದ್ದು, ಉಕ್ಕು ಪ್ರಾಧಿಕಾರದಲ್ಲಿ ಉದ್ಯೋಗಕ್ಕೆ ಸೇರ್ಪಡೆಗೊಂಡು ವಿಐಎಸ್‌ಎಲ್ ಕಾರ್ಖಾನೆಗೆ ಸಹಾಯಕ ವ್ಯವಸ್ಥಾಪಕರಾಗಿ ಆಗಮಿಸಿದ್ದು,  ಪ್ರಸ್ತುತ ಪ್ರಧಾನ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 
    ವಿಕಲಚೇತನರಾಗಿದ್ದರೂ ಸಹ ಛಲಬಿಡದೆ ಒಂದೇ ಕೈನಲ್ಲಿ ಬ್ಯಾಡ್ಮಿಂಟನ್ ಆಟವಾಡುವ ಮೂಲಕ ಪ್ಯಾರಾ ಬ್ಯಾಡ್ಮಿಂಟನ್ ಕ್ರೀಡಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಕೇರಳ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್-೨೦೨೩ ಪಂದ್ಯಾವಳಿ ಚಿನ್ನದ ಪದಕ, ೨೦೨೨ರಲ್ಲಿ ಕಂಚಿನ ಪದಕ, ಜರ್ಮನಿ, ಬರ್ಲಿನ್‌ನಲ್ಲಿ ಜರುಗಿದ ಸ್ಪೆಷಲ್ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ೨೦೨೨ರಲ್ಲಿ ಉಕ್ಕು ಪ್ರಾಧಿಕಾರದ ಎಕ್ಸಲೆನ್ಸ್ ವಾರ್ಷಿಕ ಪ್ರಶಸ್ತಿ ಪಡೆದುಕೊಂಡಿದ್ದು, ಅಲ್ಲದೆ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಹಲವಾರು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಪ್ರದರ್ಶಿಸಿದ್ದಾರೆ. 


ಪ್ಯಾರಾ ಬ್ಯಾಡ್ಮಿಂಟನ್ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ವಿಐಎಸ್‌ಎಲ್ ಕಾರ್ಖಾನೆ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕ ನಿತಿನ್ ಜೋಸ್‌ರನ್ನು ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹಾಗು ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ಅಭಿನಂದಿಸಿದರು. 

    ನಿತಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ  
    ನ. ೨೬ ರಿಂದ ೨೭ರ ವರೆಗೆ ಕೇರಳದ ತಿರುವನಂತಪುರಂನ ಜಿಮ್ಮಿ ಜಾರ್ಜ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ೭ನೇ ಕೇರಳ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ  ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಮತ್ತು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ (ಎಸ್.ಯು-೫) ತಮ್ಮದಾಗಿಸಿಕೊಂಡು ರಾಷ್ಟಮಟ್ಟದಲ್ಲಿ ಕೇರಳ ರಾಜ್ಯ ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
    ಇವರ ಸಾಧನೆಯನ್ನು ವಿಐಎಸ್‌ಎಲ್ ಕಾರ್ಖಾನೆ ಆಡಳಿತ ಮಂಡಳಿ ಅಭಿನಂದಿಸುವ ಮೂಲಕ ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದೆ. 
    ನಿತಿನ್‌ರವರ ಮತ್ತೊಂದು ಸಾಧನೆ ಎಂದರೆ ಒಂದೇ ಕೈನಲ್ಲಿ ರಾಯಲ್ ಎನ್‌ಪೀಲ್ಡ್ ದ್ವಿಚಕ್ರ ವಾಹನ ಹಾಗು ಕಾರು ಚಾಲನೆ ಮಾಡುತ್ತಾರೆ. ಇಂದಿಗೂ ಪ್ರತಿ ದಿನ ಕೆಲಸಕ್ಕೆ  ದ್ವಿಚಕ್ರ ವಾಹನದಲ್ಲೇ ತೆರಳುತ್ತಾರೆ. ಇವರ ಮಾತೃಭಾಷೆ ಮಲಯಾಳಿಯಾದರೂ ಸಹ ಕನ್ನಡ ಭಾಷೆ ಮಾತನಾಡುತ್ತಾರೆ. ಪತ್ನಿ ಹಾಗು ಇಬ್ಬರು ಮಕ್ಕಳಿದ್ದು, ಇವರ ಸಾಧನೆ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. 
    ಇಂದಿನ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಕ್ರೀಡೆ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯದ ಜೊತೆಗೆ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ನಿತಿನ್ ಪ್ರೇರಕರಾಗಿದ್ದಾರೆ. 

ಸರ್.ಎಂ.ವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ

ಭದ್ರಾವತಿ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು `ಹೆಸರಾಯಿತು ಕರ್ನಾಟಕ' ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.
    ಭದ್ರಾವತಿ: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು `ಹೆಸರಾಯಿತು ಕರ್ನಾಟಕ' ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.
    ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಪಿ. ಭಾರತಿದೇವಿ ಕಾರ್ಯಕ್ರಮ ಉದ್ಘಾಟಿಸಿದರು. ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ನ್ಯಾಯವಾದಿ ಎಂ. ಶಿವಕುಮಾರ್, ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷ ಮುಸ್ವೀರ್ ಬಾಷಾ, ಹಳೇನಗರ ಸಂಚಿ ಹೊನ್ನಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ. ಚನ್ನಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್. ಹೊಸಳ್ಳೇರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ಬಿ.ವಿ ಪ್ರಕಾಶ್ ನಿಧನ

ಬಿ.ವಿ ಪ್ರಕಾಶ್ 
ಭದ್ರಾವತಿ : ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ, ಆರೋಗ್ಯ ಇಲಾಖೆ ನಿವೃತ್ತ ನೌಕರ ಬಿ.ವಿ ಪ್ರಕಾಶ್(೬೪) ಗುರುವಾರ ರಾತ್ರಿ ನಿಧನ ಹೊಂದಿದರು. 
ಪತ್ನಿ, ಪುತ್ರಿ ಹಾಗು ಪುತ್ರ ಇದ್ದಾರೆ. ಪ್ರಕಾಶ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ೨೦೨೦ರಲ್ಲಿ ನಿವೃತ್ತಿ ಹೊಂದಿದ್ದರು. 
ಇವರ ನಿಧನಕ್ಕೆ ನಗರದ ಆರೋಗ್ಯ ಇಲಾಖೆ ನೌಕರರು, ಸರ್ಕಾರಿ ನಿವೃತ್ತ ನೌಕರರ ಸಂಘ ಸೇರಿದಂತೆ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  
: 9482007466

Thursday, November 28, 2024

ಕುಮಾರ್‌ಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

ಕುಮಾರ್ ಭದ್ರಾವತಿ 
ಭದ್ರಾವತಿ: ನಾಡು, ನುಡಿ, ಕಲೆ, ಸಾಹಿತ್ಯ, ಜನಪದ ಮತ್ತು ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಲಾಭೂಮಿ ಪ್ರತಿಷ್ಠಾನದ ವತಿಯಿಂದ ನೀಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ನಗರದ ಜನ್ನಾಪುರ ನಿವಾಸಿ ಕುಮಾರ್ ಭದ್ರಾವತಿರವರಿಗೆ ಲಭಿಸಿದೆ. 
ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್‌ರವರು ಸಾಹಿತ್ಯ ಹಾಗು ರಂಗಭೂಮಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ನ.೨೯ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಛಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.   
ಕುಮಾರ್ ಅವರನ್ನು ಸಿದ್ಧರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 

ಅಮಲೋದ್ಬವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಭದ್ರಾವತಿ ನಗರದ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವದ ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಮಾತೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಹಾಸನ ಧರ್ಮ ಕೇಂದ್ರದ ಧರ್ಮ ಗುರುಗಳಾದ ಪ್ಯಾಟ್ರಿಕ್ ಜೋನಸ್ ಚಾಲನೆ ನೀಡಿದರು.
    ಭದ್ರಾವತಿ: ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ನಗರದ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. 
    ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಮಾತೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಹಾಸನ ಧರ್ಮ ಕೇಂದ್ರದ ಧರ್ಮ ಗುರುಗಳಾದ ಪ್ಯಾಟ್ರಿಕ್ ಜೋನಸ್ ಚಾಲನೆ ನೀಡಿದರು.
    ಧರ್ಮ ಕೇಂದ್ರದ ಗುರುಗಳಾದ ಲ್ಯಾನ್ಸಿ ಡಿಸೋಜ, ಹಿರಿಯೂರು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಪೆರೇರ, ಧರ್ಮ ಭಗಿನಿಯರು, ಭಕ್ತಾದಿಗಳು ಪಾಲ್ಗೊಂಡಿದ್ದರು. ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ತರೀಕೆರೆ ರಸ್ತೆಯ ಬೀದಿಬದಿ ವ್ಯಾಪಾರಿಗಳಿಗೆ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಪುಡ್ ಕೋರ್ಟ್

ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅಧ್ಯಕ್ಷತೆಯಲ್ಲಿ ಸಭೆ 

ಭದ್ರಾವತಿ ನಗರಸಭೆ ವತಿಯಿಂದ ನಗರದ ತರೀಕೆರೆ ರೈಲ್ವೆ ಮೇಲ್ಸೇತುವೆ ಕೆಳಗೆ ಪುಡ್ ಕೋರ್ಟ್ ನಿರ್ಮಿಸುವ ಸಂಬಂಧ ಗುರುವಾರ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 
    ಭದ್ರಾವತಿ: ನಗರದ ತರೀಕೆರೆ ರಸ್ತೆಯ ಬೀದಿಬದಿ ವ್ಯಾಪಾರಿಗಳಿಗೆ ನಗರಸಭೆ ವತಿಯಿಂದ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಪುಡ್ ಕೋರ್ಟ್ ನಿರ್ಮಿಸುವ ಸಂಬಂಧ ಗುರುವಾರ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಿತು. 
    ತರೀಕೆರೆಯ ರಸ್ತೆ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸುಸಜ್ಜಿತವಾದ ಪುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಪುಡ್‌ಕೋರ್ಟ್ ಸಂಬಂಧ ನಡೆಯುತ್ತಿರುವ ೩ನೇ ಸಭೆ ಇದಾಗಿದೆ. ಇದು ಅಂತಿಮ ಸಭೆ ಎಂದು ವ್ಯಾಪಾರಿಗಳು ಭಾವಿಸಿಕೊಳ್ಳಬೇಕು. ಈ ಹಿಂದೆ ಮಹಾತ್ಮಗಾಂಧಿ ವೃತ್ತದ ಬಳಿ ಪುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಈ ಭಾಗದಲ್ಲಿ ಪುಡ್ ಕೋರ್ಟ್ ನಿರ್ಮಿಸುವುದರಿಂದ ಜನಸಂದಣಿ ಹೆಚ್ಚಾಗುವ ಜೊತೆಗೆ ವ್ಯಾಪಾರಕ್ಕೆ ತೊಂದರೆಯಾಗುತ್ತಿತ್ತು. ಈ ಹಿನ್ನಲೆಯಲ್ಲಿ ಇದೀಗ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಪುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿದೆ. ವ್ಯಾಪಾರಸ್ಥರು ಸಹಕರಿಸಬೇಕೆಂದು ಹಿರಿಯ ಸದಸ್ಯ ಬಿ.ಕೆ ಮೋಹನ್ ಮನವಿ ಮಾಡಿದರು. 
    ಪುಡ್ ಕೋರ್ಟ್ ನೀಲನಕ್ಷೆ ಸಹಿತ ನಗರಸಭೆ ಇಂಜಿನಿಯರ್ ಸಂತೋಷ್ ಪಾಟೀಲ್ ವಿವರವಾದ ಮಾಹಿತಿ ನೀಡಿದರು. ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಮಾತನಾಡಿ, ವ್ಯಾಪಾರಸ್ಥರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಬೀದಿ ವ್ಯಾಪಾರಸ್ಥರ ಹಿತರಕ್ಷಣೆ ಮಾಡುವುದು ನಮ್ಮ ಉದ್ದೇಶವಾಗಿದೆ. ಯಾರು ಸಹ ಆತಂಕಪಡುವುದು ಬೇಡ ಎಂದರು. 

ಪುಡ್ ಕೋರ್ಟ್ ವಿವರ: 

ಪುಡ್ ಕೋರ್ಟ್ ಒಟ್ಟು ೧೬ ಮೀಟರ್ ಉದ್ದ ಹಾಗು ೮ ಮೀಟರ್ ಅಗಲವಿದ್ದು, ಮಧ್ಯದಲ್ಲಿ ರಸ್ತೆ, ಎರಡು ಬದಿ ಮಳಿಗೆಗಳು. ಎರಡು ಕಡೆ ಶೌಚಾಲಯ, ಎರಡು ಕಡೆ ಮಧ್ಯದಲ್ಲಿ ೧ ಮೀಟರ್ ಅಗಲದ ರಸ್ತೆ,  ಸದ್ಯದ ನೀಲನಕ್ಷೆಯಲ್ಲಿ ೩*೩ ಅಳತೆಯಲ್ಲಿ ಮಳಿಗೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ೨೬ ವ್ಯಾಪಾರಿಗಳಿಗೆ ಬೇಡಿಕೆಗಳು ಬಂದಿರುವ ಹಿನ್ನಲೆಯಲ್ಲಿ ಮಳಿಗೆಗಳ ವಿಸ್ತೀರ್ಣ ಕಡಿಮೆಗೊಳಿಸಲು ಉದ್ದೇಶಿಸಲಾಗಿದೆ. ಈ ಹಿಂದೆ ೨.೫ ಕೋ. ರು. ವೆಚ್ಚೆದಲ್ಲಿ ಪುಡ್ ಕೋರ್ಟ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ತಿರಸ್ಕಾರಗೊಂಡಿದ್ದು, ಇದೀಗ ನಗರಸಭೆ ಅನುದಾನದಲ್ಲಿ ಪುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. 

    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸದಸ್ಯ ವಿ. ಕದಿರೇಶ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುದೀಪ್ ಕುಮಾರ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತರೀಕೆರೆ ರಸ್ತೆಯ ಬಹುತೇಕ ಬೀದಿಬದಿ ವ್ಯಾಪಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.