Monday, January 6, 2025

ಜ.೭ರಂದು ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ

ಭದ್ರಾವತಿ ಕಾಗದನಗರ ೬ನೇ ವಾರ್ಡ್ ಶ್ರೀ ಚೌಡೇಶ್ವರಿ ದೇವಿ. 
    ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ನಗರಸಭೆ ವ್ಯಾಪ್ತಿಯ ಕಾಗದನಗರ ೬ನೇ ವಾರ್ಡ್ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಜ.೭ರ ಮಂಗಳವಾರ ಜರುಗಲಿದೆ. 
    ಬೆಳಿಗ್ಗೆ ೧೨.೩೦ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದ್ದು, ಸಂಜೆ ೬ ಗಂಟೆಗೆ ಆರತಿ ತರುವುದರ ಮೂಲಕ ದೇವಿಯ ಉತ್ಸವ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ವಿಗೊಳಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೦೦೮೩೦೨೭೪ ಅಥವಾ ೯೯೪೫೯೯೮೫೭೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 
    ಶಕ್ತಿ ದೇವತೆ ಶ್ರೀ ಚೌಡೇಶ್ವರಿ : 
    ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಆರಂಭದೊಂದಿಗೆ ಕಾಗದ ನಗರ ಸಹ ಜನ್ಮ ತಾಳಿದ್ದು, ಅದರಲ್ಲೂ ಕಾರ್ಮಿಕರು, ಕುಟುಂಬ ವರ್ಗದವರು ಈ ಭಾಗದಲ್ಲಿ ನೆಲೆ ನಿಂತಿರುವ ಶಕ್ತಿ ದೇವತೆ ಶ್ರೀ ಚೌಡೇಶ್ವರಿ ದೇವಿಯನ್ನು ಶ್ರದ್ಧಾ ಭಕ್ತಿಯಿಂದ  ಸುಮಾರು ೭-೮ ದಶಕಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ. 
    ಬೃಹತ್ ಮರದ ಪೊಟರೆಯಲ್ಲಿ ನಿಂತಿರುವ ದೇವಿಗೆ ಬಹಳ ವರ್ಷಗಳವರೆಗೆ ದೇವಸ್ಥಾನ ನಿರ್ಮಾಣವಾಗಿರಲಿಲ್ಲ. ಇತ್ತೀಚೆಗೆ ಸುಮಾರು ೨ ದಶಕಗಳ ಹಿಂದೆ ದೇವಸ್ಥಾನ ನಿರ್ಮಾಣಗೊಂಡಿದೆ. ಬೃಹತ್ ಮರದ ಸುತ್ತ ಕಾಂಕ್ರೀಟ್ ಕಟ್ಟಡ ನಿರ್ಮಾಣವಾಗಿದ್ದು, ಪ್ರತಿ ವರ್ಷ ನಿವಾಸಿಗಳು ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನೆಡೆಸಿಕೊಂಡು ಬರುತ್ತಿದ್ದಾರೆ. 
    ದೇವಸ್ಥಾನ ಮುಂಭಾಗದಲ್ಲಿರುವ ಅರಳಿಕಟ್ಟೆ ಸಹ ಇದೀಗ ಮತ್ತಷ್ಟು ನವೀಕರಣಗೊಳ್ಳುತ್ತಿದ್ದು, ಭಕ್ತರು ಹಾಗು ದಾನಿಗಳು ನವೀಕರಣ ಕಾರ್ಯಗಳಲ್ಲಿ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ.  ಕಳೆದ ಸುಮಾರು ೯ ವರ್ಷಗಳಿಂದ ಕಾರ್ಖಾನೆ ಸ್ಥಗಿತಗೊಂಡಿದ್ದು, ಬಹುತೇಕ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಊರು ತೊರೆದಿದ್ದಾರೆ. ಕೆಲವರು ಇಲ್ಲಿಯೇ ನೆಲೆ ನಿಂತಿದ್ದಾರೆ.  ಕಾರ್ಮಿಕರು ಹಾಗು ಕುಟುಂಬ ವರ್ಗದವರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು, ಶಾಲೆಗಳು, ಆಸ್ಪತ್ರೆ, ಕ್ರೀಡಾಂಗಣ, ಕಲ್ಯಾಣಮಂಟಪ, ಧಾರ್ಮಿಕ ಕೇಂದ್ರಗಳು, ಉದ್ಯಾನವನ ಎಲ್ಲವೂ ಪಾಳು ಬಿದ್ದಿದ್ದು, ಇದೀಗ ಕಾಗದನಗರದಲ್ಲಿ ಸ್ಮಶಾನ ಮೌನ ಆವರಿಸಿಕೊಂಡಿದೆ. ಈ ನಡುವೆಯೂ ಅಳಿದಿರುವ ಕಾರ್ಮಿಕರು, ಕುಟುಂಬ ವರ್ಗದವರು ಈ ಭಾಗದಲ್ಲಿ ಜಾತ್ರೆ, ಹರಿದಿನಗಳನ್ನು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೈಗೊಳ್ಳುತ್ತಿದ್ದಾರೆ.  

Sunday, January 5, 2025

ಜ.೮ ರಂದು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಆರ್ಥೋಪೆಡಿಕ್ ಸಮಾಲೋಚನಾ ಶಿಬಿರ

    ಭದ್ರಾವತಿ: ಬೆಂಗಳೂರು ಬನ್ನೇರಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ನಗರದ ತರೀಕೆರೆ ರಸ್ತೆಯ ಮೀನಾ ನರ್ಸಿಂಗ್ ಹೋಮ್ ಸಹಯೋಗದಲ್ಲಿ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಆರ್ಥೋಪೆಡಿಕ್ ಸಮಾಲೋಚನಾ ಶಿಬಿರ ಜ.೮ ರಂದು ಮಧ್ಯಾಹ್ನ ೩ ಗಂಟೆಯಿಂದ ೪ ಗಂಟೆಯವರೆಗೆ ಮೀನಾ ನರ್ಸಿಂಗ್ ಹೋಮ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. 
    ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ ಲಕ್ಷಣ ಉಳ್ಳವರು ಹಾಗೂ ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ ಹಾಗೂ ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು ಹಾಗು ಫೋರ್ಟಿಸ್ ಆಸ್ಪತ್ರೆಯ ರೋಬೋಟಿಕ್ ಕೀಲು ಮತ್ತು ಮಂಡಿ ಮರುಜೋಡಣೆಯ ತಜ್ಞರಾದ ಡಾ. ಮೋಹನ್ ಕೆ. ಪುಟ್ಟಸ್ವಾಮಿ ಅವರಿಂದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ನಡೆಯಲಿದೆ. 
    ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗೆ ಸಂತೋಷ್ ಚೌಹಾಣ್ : ೯೪೪೯೬೯೬೯೫೪ / ೮೦೮೮೯೭೩೪೯೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಉಪವಲಯ ಅರಣ್ಯಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ : ಜಿ.ಪಂ ಸಿಇಓ ಪತ್ರಕ್ಕೆ ಬೆಲೆ ಇಲ್ಲ

ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿರುದ್ಧ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆರೋಪ 

ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಬರೆದಿರುವ ಪತ್ರ. 
    ಭದ್ರಾವತಿ : ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ದೋಷಾರೋಪಣ ಪಟ್ಟಿ ಆಧಾರದ ಮೇಲೆ ಉಪವಲಯ ಅರಣ್ಯಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಿ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪತ್ರ ಬರೆದು ಸುಮಾರು ೩ ತಿಂಗಳು ಕಳೆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆರೋಪಿಸಿದ್ದಾರೆ. 
    ಉಪವಲಯ ಅರಣ್ಯಾಧಿಕಾರಿ ಸಂತೋಷ್ ರಾಠೋಡ್‌ರವರಿಗೆ ವಲಯ ಅರಣ್ಯಾಧಿಕಾರಿ ಪ್ರಭಾರ ನೀಡಿದ್ದ ಸಂದರ್ಭದಲ್ಲಿ ಜಿ.ಪಂ ವ್ಯಾಪ್ತಿಯ ವಿವಿಧ ನರ್ಸರಿ/ನೆಡುತೋಪು ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸಾಮಾಜಿಕ ಹೋರಾಟಗಾರ ಶಿವಕುಮಾರ್‌ರವರು ೨೦೨೧ರಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು)ಯವರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸೂಚಿಸಿದ್ದರು. 

ಭದ್ರಾವತಿ ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್. 
    ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೋಷಾರೋಪಣ ಪಟ್ಟಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಿದ್ದರು.  ಉಪವಲಯ ಅರಣ್ಯಾಧಿಕಾರಿಗೆ ನೇಮಕಾತಿ ಪ್ರಾಧಿಕಾರ/ಶಿಸ್ತು ಪ್ರಾಧಿಕಾರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತರವರು ಆಗಿರುವುದರಿಂದ ತಮ್ಮ ಹಂತದಲ್ಲಿಯೇ ಆರೋಪವಿರುವ ಅಧಿಕಾರಿಯ ವಿರುದ್ಧ ಕರ್ನಾಟಕ ನಾಗರೀಕ ಸೇವೆ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ೧೯೫೭ ರ ನಿಯಮ ದಂತೆ ಶಿಸ್ತುಕ್ರಮ ಜರುಗಿಸಲು ಕೋರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ೯ ಅಕ್ಟೋಬರ್ ೨೦೨೪ರಂದು ಪತ್ರ ಬರೆದಿದ್ದರು.  
    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಪತ್ರದ ಆಧಾರದ ಮೇಲೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ೩ ತಿಂಗಳು ಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ಧೋರಣೆ ಅನುಸರಿಸುತ್ತಿದ್ದಾರೆಂದು ಸಾಮಾಜಿಕ ಹೋರಾಟಗಾರ ಶಿವಕುಮಾರ್ ದೂರುವ ಜೊತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

ಕೋಡ್ಲುಯಜ್ಞಯ್ಯರವರ `ಸತ್ಯಕ್ಕೆ ಸಾವಿಲ್ಲ' ಪುಸ್ತಕ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಶಾಖೆ ವತಿಯಿಂದ ಭದ್ರಾವತಿ ನ್ಯೂಟೌನ್ ರೋಟರಿಕ್ಲಬ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ದತ್ತಿ ಹಾಗು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಪ್ರಾಧ್ಯಾಪಕ ಡಾ. ಮೇಟಿ ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಕೋಡ್ಲುಯಜ್ಞಯ್ಯರವರ `ಸತ್ಯಕ್ಕೆ ಸಾವಿಲ್ಲ' ಪುಸ್ತಕ ಬಿಡುಗಡೆಗೊಳಿಸಿದರು. 
    ಭದ್ರಾವತಿ : ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಶಾಖೆ ವತಿಯಿಂದ ನ್ಯೂಟೌನ್ ರೋಟರಿಕ್ಲಬ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ದತ್ತಿ ಹಾಗು ಪುಸ್ತಕ ಬಿಡುಗಡೆ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಿದರು. 
    ಕೆ.ಬಿ ತಮ್ಮಯ್ಯಗೌಡ ಮತ್ತು ಅಕ್ಕಾಣಿಯಮ್ಮ ದತ್ತಿ ಕಾರ್ಯಕ್ರಮದಲ್ಲಿ `ಕುವೆಂಪು ಸಾಹಿತ್ಯದಲ್ಲಿ ವೈಜಾರಿಕತೆ' ವಿಷಯ ಕುರಿತು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಾಹಿತಿ, ಪ್ರಾಧ್ಯಾಪಕ ಡಾ. ಮೇಟಿ ಮಲ್ಲಿಕಾರ್ಜುನ ಉಪನ್ಯಾಸ ನೀಡಿದರು. 
    ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ, ದತ್ತಿ ದಾನಿಗಳಾದ ಕೋಡ್ಲುಯಜ್ಞಯ್ಯರವರು ರಚಿಸಿರುವ `ಸತ್ಯಕ್ಕೆ ಸಾವಿಲ್ಲ' ಕಥಾ ಸಂಕಲನ ಪುಸ್ತಕ ಕುರಿತು ನಗರದ ನ್ಯೂಟೌನ್ ಎಸ್‌ಎವಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ಮಾತನಾಡಿದರು.   ಲೋಕಾರ್ಪಣೆಗೊಳ್ಳಲಿದೆ.  
    ಪತ್ರ ಸಂಸ್ಕೃತಿ ಸಂಸ್ಥಾಪಕ ಹೊಸಹಳ್ಳಿ ದಾಳೇಗೌಡ, ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಉಪಾಧ್ಯಾಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಮತ್ತು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಮೋಹನ್ ಕುಮಾರ್ ಸ್ವಾಗತಿಸಿ, ಟಿ. ತಿಮ್ಮಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಮಲ ಕುಮಾರಿ ತಂಡದವರು ಪ್ರಾರ್ಥಿಸಿದರು.

ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಟೈಲರ್‌ಗಳಿಗೂ ದೊರೆಯುವಂತಾಗಲಿ : ಕೆ ಸುಂದರ್ ಬಾಬು

ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ `ಟೈಲರ್‍ಸ್ ವೃತ್ತಿ ಬಾಂಧವರಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮ' ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ಕೆ. ಸುಂದರ್ ಬಾಬು ಉದ್ಘಾಟಿಸಿದರು. 
    ಭದ್ರಾವತಿ: ಟೈಲರ್ ಗಳಿಗೂ ಕಟ್ಟಡ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ದೊರಕಿ ಉತ್ತಮ ಜೀವನ ನಡೆಸುವಂತಾಗಬೇಕೆಂದು ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ಕೆ. ಸುಂದರ್ ಬಾಬು ಹೇಳಿದರು. 
    ಅವರು ಹಳೇನಗರದ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ `ಟೈಲರ್‍ಸ್ ವೃತ್ತಿ ಬಾಂಧವರಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮ' ಉದ್ಘಾಟಿಸಿ ಮಾತನಾಡಿದರು. 
    ಯಾವುದೇ ಸಂಘದಲ್ಲಿ ಹೆಸರು ನೋಂದಾಯಿಸಿ ಕೊಳ್ಳುವುದು ಎಷ್ಟು ಮುಖ್ಯವೋ, ಪ್ರತಿ ವರ್ಷ ಸಂಘದ ಸದಸ್ಯತ್ವ ಅಗತ್ಯ ದಾಖಲೆಗಳೊಂದಿಗೆ ನವೀಕರಣ ಮಾಡಿಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ತಿಳಿಸುವ ಜೊತೆಗೆ ಸ್ಮಾರ್ಟ್ ಕಾರ್ಡ್ ಪಡೆಯುವ ಬಗ್ಗೆ ಮತ್ತು ಟೈಲರ್‍ಸ್ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ನೀಡಿದರು. 
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ತಾಲೂಕು ಟೈಲರ್‍ಸ್ ಸಂಘದ ಅಧ್ಯಕ್ಷ ಎ.ಎಸ್ ಸುಂದರ್ ಮಾತನಾಡಿ, ಕೋವಿಡ್ ಮಹಾಮಾರಿಯ ಆರ್ಭಟದಿಂದ ಸಾಕಷ್ಟು ಜನ ಟೈಲರ್ ವೃತ್ತಿ ಬಾಂಧವರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸಿದ್ದಾರೆ. ಬಡವರ ಬದುಕು ಹಾಳಾಗಿದ್ದು, ಇಂತಹ ಸಂದರ್ಭದಲ್ಲಿ ಸಹಾಯ ಹಸ್ತ ಅನಿವಾರ್ಯವಾಗಿರುವುದನ್ನು ಮನಗಂಡು ತಾಲೂಕು ಟೈಲರ್‍ಸ್ ಸಂಘದಿಂದ ಆಹಾರ ಕಿಟ್ ವಿತರಣೆ ಮಾಡಿದ್ದೇವೆ. ಕೋವಿಡ್ ತಡೆಗಟ್ಟಲು ವ್ಯಾಕ್ಸಿನೇಷನ್ ಕೊಡಿಸಿದ್ದೇವೆ. ಸಂಘದ ನೋಂದಾಯಿತ ಸದಸ್ಯರಿಗೆ ಈ-ಶ್ರಮ್ ಕಾರ್ಡ್ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಕಾರ್ಡ್ ವಿತರಿಸಲಾಗಿದೆ ಎಂದರು.
    ತಾಲೂಕಿನಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದು, ಇನ್ನೂ ಸಂಘದಲ್ಲಿ ಹೆಸರು ನೋಂದಾಯಿಸಿಕೊಳ್ಳದ ವೃತ್ತಿ ಬಾಂಧವರು ತಾಲೂಕು ಟೈಲರ್‍ಸ್ ಸಂಘ, ಬಸವ ಕಾಂಪ್ಲೆಕ್ಸ್, ಚನ್ನಗಿರಿ (ಡಾ. ರಾಜ್ ಕುಮಾರ್) ರಸ್ತೆ, ಭದ್ರಾವತಿ. ಮೊಬೈಲ್ ಸಂಖ್ಯೆ ೯೮೮೦೯೦೭೯೧೦ ಈ ವಿಳಾಸದಲ್ಲಿ ಸಂಪರ್ಕಿಸಿ, ಹೆಸರು ನೋಂದಾಯಿಸಿ ಕೊಳ್ಳಬೇಕೆಂದು ಸುಂದರ್ ವೃತ್ತಿ ಬಾಂಧವರಿಗೆ ಕರೆ ನೀಡಿದರು. 
    ವೇದಿಕೆಯಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ತಾಲೂಕು ಅಧ್ಯಕ್ಷ ರಾಘವೇಂದ್ರರಾವ್, ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ಎನ್. ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನಕ್ಕೆ ಬಿಳಿಕಿ ಶ್ರೀ ಚಾಲನೆ

ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲದ ಮಾಜಿ ಅಧ್ಯಕ್ಷರಾದ ಜಿ. ಆನಂದಕುಮಾರ್(ನಗರ ಘಟಕ) ಮತ್ತು ಮಂಗೋಟೆ ರುದ್ರೇಶ್(ಗ್ರಾಮಾಂತರ ಘಟಕ) ನೇತೃತ್ವದಲ್ಲಿ  ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಬಿಳಿಕಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. 
    ಭದ್ರಾವತಿ: ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲದ ಮಾಜಿ ಅಧ್ಯಕ್ಷರಾದ ಜಿ. ಆನಂದಕುಮಾರ್(ನಗರ ಘಟಕ) ಮತ್ತು ಮಂಗೋಟೆ ರುದ್ರೇಶ್(ಗ್ರಾಮಾಂತರ ಘಟಕ) ನೇತೃತ್ವದಲ್ಲಿ  ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಬಿಳಿಕಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. 
    ನಗರದ ಹೊಸಮನೆ ಮುಖ್ಯ ರಸ್ತೆ(ಸಂತೆ ಮೈದಾನದ ಎದುರು) ಜಿ. ಆನಂದಕುಮಾರ್‌ರವರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಈ ಯೋಜನೆಯಡಿ ೭೦ ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ೫ ಲಕ್ಷ ರು.ಗಳವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಒದಗಿಸುವುದಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಯಿತು. 
    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಮಧುಕರ್ ಕಾನಿಟ್ಕರ್,  ಪಕ್ಷದ ಮುಖಂಡರಾದ ಮೈಲಾರಪ್ಪ, ಉದಯ ಕುಮಾರ್, ಶಿವಕುಮಾರ್(ಪೆಟ್ರೋಲ್ ಬಂಕ್), ಸುಬ್ರಮಣ್ಯ, ಮಂಜುಳ, ಶಕುಂತಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ಜರುಗಿದ ಅಭಿಯಾನದಲ್ಲಿ ನೂರಾರು ಮಂದಿ ಪಾಲ್ಗೊಂಡು ಸದುಪಯೋಗಪಡೆದುಕೊಂಡರು. ಅಭಿಯಾನ ಯಶಸ್ವಿಗೆ ಕಾರಣಕರ್ತರಾದ ಪ್ರತಿಯೊಬ್ಬರಿಗೂ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. 

Saturday, January 4, 2025

ಸಾವಿತ್ರಿಬಾಯಿಪುಲೆ ಸಾಮಾಜಿಕ, ಮಹಿಳಾ ಹಕ್ಕುಗಳ ಹೋರಾಟಗಾರ್ತಿ : ಡಾ. ಎಸ್.ಪಿ ರಾಕೇಶ್

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸಾವಿತ್ರಿಬಾಯಿಫುಲೆರವರ ೧೯೪ನೇ ಜನ್ಮದಿನೋತ್ಸವ ಆಚರಿಸಲಾಯಿತು. 
    ಭದ್ರಾವತಿ: ಸಾವಿತ್ರಿಬಾಯಿಪುಲೆಯವರು ದೇಶದ ಮೊಟ್ಟಮೊದಲ ಶಿಕ್ಷಕಿ ಮಾತ್ರವಲ್ಲದೆ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹೇಳಿದರು. 
    ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಸಾವಿತ್ರಿಬಾಯಿಫುಲೆರವರ ೧೯೪ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
     ಸಾವಿತ್ರಿಬಾಯಿಫುಲೆರವರು ಒಬ್ಬ ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ, ದೇಶದ ಮೊಟ್ಟಮೊದಲ ಶಿಕ್ಷಕಿ, ಧಣಿವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ ಎಂದು ಬಣ್ಣಿಸಿದರು. 
    ಹತ್ತನೇ ತರಗತಿ ವಿದ್ಯಾರ್ಥಿನಿ ಭುವನ ಸಾವಿತ್ರಿಬಾಯಿ ಫುಲೆ ಅವರ ಜೀವನ ಮತ್ತು ಸಾಧನೆ ಕುರಿತಂತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
      ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ, ಎಲ್ಲಾ ವಿಭಾಗದ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಬಿ. ಇಡಿ.ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.