Wednesday, January 29, 2025

ಸಂವಿಧಾನ ಸಮಾನತೆಯ ಕೊಡುಗೆ, ಮನೆ ಮನೆಗಳಲ್ಲೂ ಜಾಗೃತಿ ಮೂಡಲಿ : ಸತೀಶ್ ಜಾರಕಿಹೊಳಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ವತಿಯಿಂದ ಬುಧವಾರ ಭದ್ರಾವತಿ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಕ.ದ.ಸಂ.ಸ-೫೦ ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮೈಸೂರು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ  ಸ್ವಾಮೀಜಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನದಿಂದಾಗಿ ನಾವೆಲ್ಲರೂ ಸಮಾನತೆ ಕಾಣಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. 
    ಅವರು ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ವತಿಯಿಂದ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಕ.ದ.ಸಂ.ಸ-೫೦ ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. 
    ಈ ದೇಶದಲ್ಲಿ ಪ್ರತಿಯೊಂದನ್ನು ಹೋರಾಟ, ಸಂಘರ್ಷದ ಮೂಲಕ ಪಡೆದುಕೊಳ್ಳಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಈ ದೇಶದ ಸಂವಿಧಾನದಿಂದಾಗಿ ನಾವೆಲ್ಲರೂ ಒಗ್ಗಟ್ಟಿನಿಂದ, ಸಮಾನತೆ ಹಾಗು ನೆಮ್ಮದಿಯಿಂದ ಬದುಕುವಂತಾಗಿದೆ. ಒಂದು ವೇಳೆ ಸಂವಿಧಾನ ರಚನೆಯಾಗದಿದ್ದಲ್ಲಿ ಈ ದೇಶದ ಜನರ ಸ್ಥಿತಿ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗುತ್ತಿತ್ತು ಎಂದರು. 
    ಪ್ರಸ್ತುತ ನಾವುಗಳು ಸಂವಿಧಾನ ತಿಳಿದುಕೊಳ್ಳಬೇಕಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ. ಮನೆ ಮನೆಗಳಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು. 
      ಸಮಾವೇಶದ ದಿವ್ಯ ಸಾನಿಧ್ಯವಹಿಸಿದ್ದ ಮೈಸೂರು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ  ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಸಂವಿಧಾನ ಯಾಕೆ ಓದಬೇಕು ಎಂಬುದನ್ನು ಅರ್ಥಮಾಡಿಕೊಂಡಾಗ ಮಾತ್ರ ಸಂವಿಧಾನ ವಿರೋಧಿಸುವವರಿಗೆ ಉತ್ತರ ನೀಡಲು ಸಾಧ್ಯ. ಪ್ರಸ್ತುತ ಅಂಬೇಡ್ಕರ್‌ರವರ ಸಂವಿಧಾನ ಬದಲಿಸಿ ಮತ್ತೊಂದು ಸಂವಿಧಾನ ರಚಿಸುತ್ತೇವೆ ಎಂಬುವವರ ಮನಸ್ಥಿತಿಗಳನ್ನು ನಾವುಗಳು ಅರ್ಥಕೊಳ್ಳಬೇಕಾಗಿದೆ. ಮೇಲ್ವರ್ಗದವರು ಪುನಃ ಈ ದೇಶದಲ್ಲಿ ಅಸ್ಪೃಶ್ಯತೆ, ಅಸಮಾನತೆ ಹಾಗೂ ಶೋಷಣೆಯ ಬದುಕು ಎದುರು ನೋಡುತ್ತಿದ್ದಾರೆ. ಇದಕ್ಕೆ ನಾವುಗಳು ಅವಕಾಶ ನೀಡಬಾರದು. ಇನ್ನೂ ಹೆಚ್ಚು ಜಾಗೃತರಾಗಬೇಕಾಗಿದ್ದು, ಈ ಹಿನ್ನಲೆಯಲ್ಲಿ ಸಂವಿಧಾನ ಜಾಗೃತಿ ಸಮಾವೇಶಗಳು ಸಹಕಾರಿಯಾಗಿವೆ ಎಂದರು. 
    ವಿಧಾನ ಪರಿಷತ್ ಸದಸ್ಯ ಎಚ್.ಪಿ ಸುಧಾಮದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್, ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಪ.ಜಾ ಮತ್ತು ಪಂ. ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಮುಖಂಡರಾದ ಬಿ.ಕೆ ಜಗನ್ನಾಥ್, ಎಸ್. ಕುಮಾರ್, ಬಿ.ಎಸ್ ಗಣೇಶ್, ಸಿ. ಜಯಪ್ಪ, ಕೆ.ಎ ರಾಜಕುಮಾರ್, ಈಶ್ವರಪ್ಪ, ಜಿಂಕ್‌ಲೈನ್ ಮಣಿ, ಕಾಣಿಕ್‌ರಾಜ್, ಪರಮೇಶಿ, ಎನ್ ಗೋವಿಂದ, ಎಸ್. ಉಮಾ, ಶಾಂತ, ರೇಖಾ, ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಸಮಿತಿ ತಾಲೂಕು ಸಂಚಾಲಕ ಆರ್. ಸಂದೀಪ್ ಅಧ್ಯಕ್ಷತೆ ವಹಿಸಿದ್ದು, ಪುಷ್ಪರಾಜ್ ತಂಡದವರಿಂದ ಕ್ರಾಂತಿ ಗೀತೆ ನಡೆಯಿತು. ತಾಲೂಕು ಸಂಘಟನಾ ಸಂಚಾಲಕ ಕೆ. ಸುರೇಶ್ ಸ್ವಾಗತಿಸಿದರು. ಜಿಲ್ಲಾ ಸಂಚಾಲಕ ಚಿನ್ನಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿ ಕೆ. ರಂಗನಾಥ್ ನಿರೂಪಿಸಿದರು. 
    ಸಮಾವೇಶಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ನೂತನ ೧೨ ಅಡಿ ಎತ್ತರದ ಕಂಚಿನ ಪ್ರತಿಮೆಗೆ ಸಚಿವ ಸತೀಶ್ ಜಾರಕಿಹೊಳಿ ಹಾಗು ಇನ್ನಿತರರು ಮಾಲಾರ್ಪಣೆ ಮಾಡುವ ಮೂಲಕ ಸಮಿತಿವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. 

Tuesday, January 28, 2025

ಡಿಎಸ್‌ಎಸ್ ೫೦ನೇ ವರ್ಷದ ನೆನಪು : ಜ.೨೯ರಂದು ಸಂವಿಧಾನ ಜಾಗೃತಿ ಸಮಾವೇಶ

ಇಂದು ನಗರಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ


    ಭದ್ರಾವತಿ:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ತಾಲೂಕು ಶಾಖೆ ವತಿಯಿಂದ ಜ.೨೮ರ ಬುಧವಾರ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಜಾಗೃತಿ ಸಮಾವೇಶ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ ಹೇಳಿದರು. 
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ ೫೦ ವರ್ಷ ತುಂಬಿದೆ.  ಪ್ರೊ.ಬಿ.ಕೃಷ್ಣಪ್ಪ ಅವರು ೧೯೭೪-೭೫ರಲ್ಲಿ ನಗರದಲ್ಲಿ ಈ ಸಂಘಟನೆಯನ್ನು ಸ್ಥಾಪನೆ ಮಾಡಿದರು. ಆ ಮೂಲಕ ಶೋಷಿತರು, ದಲಿತರ ಪರವಾಗಿ ಸಂವಿಧಾನದ ಅಡಿಯಲ್ಲಿಯೇ ಸಂಘಟನೆ ಕೆಲಸ ಮಾಡುತ್ತಾ ಬಂದಿದೆ. ಬೆತ್ತಲೆ ಸೇವೆ, ಬಗರ್‌ಹುಕುಂ ಸಾಗುವಳಿ, ಅಟ್ರಾಸಿಟಿ ಕಾಯ್ದೆ, ಭೂಸುಧಾರಣೆ ಕಾಯ್ದೆ ಮುಂತಾದ ಹಲವು ವಿಷಯಗಳನ್ನಿಟ್ಟುಕೊಂಡು ತನ್ನದೇ ಆದ ಹೋರಾಟಗಳನ್ನು ಮಾಡುತ್ತಾ ಸಂಘಟನೆ ಅತ್ಯಂತ ಪ್ರಬುದ್ಧವಾಗಿ ಬೆಳೆದುಬಂದಿದೆ ಎಂದರು. 
    ಇಲ್ಲಿಂದಲೇ ದಲಿತ ಚಳವಳಿ ಆರಂಭವಾಗಿದ್ದು, ಈಗ ೫೦ ವರ್ಷಗಳ ನಂತರ  ಜಾಗೃತಿ ಸಮಾವೇಶ ನಡೆಸುವ ಮೂಲಕ ಇಡೀ ರಾಜ್ಯದ ಗಮನವನ್ನು ಸೆಳೆಯುತ್ತಿದ್ದೇವೆ. ಸಮಾರಂಭವು ಬೆಳಗ್ಗೆ ೧೧.೩೦ಕ್ಕೆ ಆರಂಭವಾಗುತ್ತದೆ. ಅದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ವೀರಶೈವ ಸಭಾಭವನ ದವರೆಗೆ ಮೆರವಣಿಗೆ ನಡೆಯಲಿದೆ. ಈ ಸಮಾವೇಶದ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. 
    ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಅಂಬೇಡ್ಕರ್ ಮತ್ತು ಕೃಷ್ಣಪ್ಪರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು ಎಂದರು. 
    ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಉಪ ಅರಣ್ಯ ಸಂರಕ್ಷಾಧಿಕಾರಿ ಆಶಿಶ್ ರೆಡ್ಡಿ ಸೇರಿದಂತೆ ಸಂಘಟನೆಯ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಭದ್ರಾವತಿ ನಗರದ ಪದಾಧಿಕಾರಿಗಳು ಭಾಗವಹಿಸುವರು ಎಂದರು. 
    ಪತ್ರಿಕಾಗೋಷ್ಠಿಯಲ್ಲಿ ಡಿಎಸ್‌ಎಸ್ ಪ್ರಮುಖರಾದ ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಶಿವಕುಮಾರ್‌ಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ

ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ವತಿಯಿಂದ ಭದ್ರಾವತಿ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್‌ರವರಿಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಭದ್ರಾವತಿ: ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ವತಿಯಿಂದ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್‌ರವರಿಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಶಿವಕುಮಾರ್‌ರವರ ಸಮಾಜ ಸೇವೆಯನ್ನು ಗುರುತಿಸಿ ಸಂಘಟನೆ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಶಿವಕುಮಾರ್‌ರವರು ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದ ಟ್ರಸ್ಟಿಯಾಗಿದ್ದು, ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.  ಇವರ ಸಮಾಜ ಸೇವೆಯನ್ನು ಗುರುತಿಸಿ ತಾಲೂಕು ಆಡಳಿತ ವತಿಯಿಂದ ಕಳೆದ ವರ್ಷ ಗಣರಾಜ್ಯೋತ್ಸವದಂದು ಸನ್ಮಾನಿಸಿ ಗೌರವಿಸಲಾಗಿತ್ತು. 
    ದಾಸೋಹ ದಿನ ಕಾರ್ಯಕ್ರಮದಲ್ಲಿ ಬೇಬಿ ಬೆಟ್ಟ ಶ್ರೀ ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ, ಹುಲ್ಲಿನಬೀದಿ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಮತ್ತು ಹಲಸಹಳ್ಳಿ ಕಲ್ಯಾಣ ಬಸವೇಶ್ವರ ಮಠದ ಶ್ರೀ ಓಂಕಾರೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಹೂಟಗಳ್ಳಿ ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ನಾಗರಾಜ ವಿ. ಬೈರಿ ಅಧ್ಯಕ್ಷತೆ ವಹಿಸಿದ್ದರು.
    ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಎಸ್. ಬಸವರಾಜು, ಎಂ. ಶಿವಕುಮಾರ್, ಎಂ.ಎಸ್ ಮಂಜುನಾಥ್, ಸಿ. ನಂಬಿರಾಜ್, ಕರಾಟೆ ಇಂಟರ್ ಏಷಿಯನ್ ನ್ಯಾಷನಲ್ ಕಲ್ಚರ್ ಯೂನಿವರ್ಸಿಟಿಯ ಎ.ಪಿ ಶ್ರೀನಾಥ್, ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್, ಅಪೇಕ್ಷ ನೃತ್ಯ ಕಲಾವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ, ಮೈಸೂರಿನ ಅಲಯನ್ಸ್ ಕ್ಲಬ್ ಪಿಆರ್‌ಓ ಎನ್. ಬೆಟ್ಟೇಗೌಡ, ಜ್ಞಾನ ದಾಸೋಹ ಟ್ರಸ್ಟ್ ಅಧ್ಯಕ್ಷ ಸಿ.ಎನ್ ಸದಾಶಿವ, ಕೆಂಗೇರಿಯ ಸಮಾಜ ಸೇವಕ ಪಾಂಡುರಂಗ, ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಅಪೇಕ್ಷ ಮಂಜುನಾಥ್, ಗೌರವಾಧ್ಯಕ್ಷ ನ. ಗಂಗಾಧರಪ್ಪ, ಉಪಾಧ್ಯಕ್ಷ ಶಿವಕುಮಾರ ಪಾಟೀಲ್, ಉಪಾಧ್ಯಕ್ಷ ಶಿವಕುಮಾರ್ ಪಾಟೀಲ್ ತೇಗಂಪೂರ, ಪ್ರಧಾನ ಸಂಘಟಕ ಮೆಣಸಿಗೆರೆ ಶಿವಲಿಂಗಪ್ಪ, ಸಂಚಾಲಕ ಮಾರುತಿ ಎಸ್. ಬೀದರ್, ಮಹಿಳಾ ಅಧ್ಯಕ್ಷೆ ಸ್ವಾತಿ ಬಸಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಕೆ ರಾಮಸ್ವಾಮಿ, ಆರ್.ಎಸ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶಿವಕುಮಾರ್‌ರವರನ್ನು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ. 

ಲೋಕಾಯುಕ್ತಕ್ಕೆ ಸಲ್ಲಿಕೆಯಾದ ಎಲ್ಲಾ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಸಲು ಸಾಧ್ಯವಿಲ್ಲ : ಎಚ್.ಎಸ್ ಸುರೇಶ್

ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಕಾಲಾವಕಾಶ ಅಗತ್ಯವಿದೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಿತು. 
    ಭದ್ರಾವತಿ : ಲೋಕಾಯುಕ್ತ ವತಿಯಿಂದ ಆಯೋಜಿಸಲಾಗುವ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ಈ ಹಿಂದೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಕೈಗೊಂಡ ಕ್ರಮಗಳನ್ನು ತಿಳಿಸಲಾಗುವುದು. ಹೊಸದಾಗಿ ಸಲ್ಲಿಕೆಯಾದ ಎಲ್ಲಾ ಅಹವಾಲುಗಳನ್ನು ತಕ್ಷಣ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಶಿವಮೊಗ್ಗ-೧ರ ಪೊಲೀಸ್ ನಿರೀಕ್ಷಕ ಎಚ್.ಎಸ್ ಸುರೇಶ್ ಹೇಳಿದರು. 
    ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಕೆಲವೊಂದು ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆದರೆ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿದ ತಕ್ಷಣ ಬಗೆಹರಿಸುವುದು ಅಸಾಧ್ಯವಾಗಿದ್ದು, ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಕಾಲಾವಕಾಶ ಅಗತ್ಯವಿದೆ. ಒಟ್ಟಾರೆ ಎಲ್ಲಾ ಅಹವಾಲುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು. 
    ಈ ಹಿಂದಿನ ಸಭೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಕೆಯಾದ ಒಟ್ಟು ೧೧ ಅಹವಾಲುಗಳು ಹಾಗು ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು. 
    ಹೊಸದಾಗಿ ಸಲ್ಲಿಕೆಯಾದ ಅಹವಾಲುಗಳಲ್ಲಿ ಪ್ರಮುಖವಾಗಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡರವರು ಜನ್ನಾಪುರ ಫಿಲ್ಟರ್ ಶೆಡ್ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ ಸುಮಾರು ೧ ವರ್ಷದಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುವ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ  ಹಲವಾರು ಬಾರಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. 
    ನಗರಸಭೆ ಅಧಿಕಾರಿಗಳು ಈ ಸಂಬಂಧ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಉತ್ತರಿಸಿದರು. ಈ ನಡುವೆ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸುವಂತೆ ಶಶಿಕುಮಾರ್ ಗೌಡರವರಿಗೆ ಸೂಚಿಸಲಾಗಿದೆ. ಒಂದು ವೇಳೆ ಕಾಲ ಮಿತಿಯೊಳಗೆ ಯಾವುದೇ ಪ್ರಕ್ರಿಯೆ ನಡೆಯದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ನಿರೀಕ್ಷಕ ಸುರೇಶ್ ಭರವಸೆ ನೀಡಿದರು. 
    ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ, ಸಮಾಜಿಕ ಹೋರಾಟಗಾರ ತೀರ್ಥೇಶರವರು ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಹೆಚ್ಚಾಗಿದೆ. ಈ ಕುರಿತು ಹಲವಾರು ಬಾರಿ ಮಾಹಿತಿ ನೀಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಈ ಹಿನ್ನಲೆಯಲ್ಲಿ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಇದೆ. ಈ ಹಿನ್ನಲೆಯಲ್ಲಿ ಯಾವುದೇ ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳುವಂತೆ ನಿರೀಕ್ಷಕ ತಹಸೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. 
    ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ನಗರದಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ನಿರ್ಲಕ್ಷ್ಯ ಕುರಿತು, ಒಬ್ಬರಿಗೆ ಪಿಟಿಸಿಎಲ್ ಕಾಯ್ದೆಯಡಿ ಜಮೀನು ನೀಡಲಾಗಿದ್ದು, ಮತ್ತೊಬ್ಬರಿಗೆ ಪಿಟಿಸಿಎಲ್ ಕಾಯ್ದೆಯಡಿ ಜಮೀನು ನೀಡಿಲ್ಲ. ತಾಲೂಕಿನ ಡಿ.ಬಿ ಹಳ್ಳಿ ಗ್ರಾಮದ ನಿವಾಸಿಯೊಬ್ಬರ ವಂಶವೃಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ೭ ಅಹವಾಲುಗಳನ್ನು ಸಲ್ಲಿಸಲಾಯಿತು. 
    ಸಭೆಯನ್ನು ಸುಮಾರು ೧ ತಾಸು ಹೆಚ್ಚಿನ ಅವಧಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ತಹಸೀಲ್ದಾರ್ ಪರುಸಪ್ಪ ಕುರುಬರ, ಪೇಪರ್‌ಟೌನ್ ಠಾಣೆ ನಿರೀಕ್ಷಕಿ ನಾಗಮ್ಮ ಉಪಸ್ಥಿತರಿದ್ದರು. ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. 
 

Monday, January 27, 2025

ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಕಾರ್ಯಕರ್ತರಿಂದ ದಿನಸಿ ಸಾಮಗ್ರಿ

ಶಿವಮೊಗ್ಗದಲ್ಲಿ ಜ.೩೧ ರಿಂದ ಫೆ.೨ರ ತನಕ ನಡೆಯುವ ೪೪ನೇ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಭದ್ರಾವತಿ ನಗರದ ಕಾರ್ಯಕರ್ತರು ಸಮ್ಮೇಳನಕ್ಕೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದಾರೆ. 
    ಭದ್ರಾವತಿ: ಶಿವಮೊಗ್ಗದಲ್ಲಿ ಜ.೩೧ ರಿಂದ ಫೆ.೨ರ ತನಕ ನಡೆಯುವ ೪೪ನೇ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ನಗರದ ಕಾರ್ಯಕರ್ತರು ಸಮ್ಮೇಳನಕ್ಕೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದಾರೆ. 
    ಸಮ್ಮೇಳನದ ಸ್ವಾಗತ ಸಮಿತಿ ಸದಸ್ಯರಾದ ಬಿ. ದಿವಾಕರಶೆಟ್ಟಿಯವರ ಮೂಲಕ ರಾಜ್ಯ ಸಮ್ಮೇಳನಕ್ಕೆ ದಿನಸಿ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಯಿತು.  ದಿವಾಕರಶೆಟ್ಟಿಯವರು ಮಾತನಾಡಿ, ಜಗತ್ತಿನ ಅತಿ ದೊಡ್ಡ ಪ್ರಭಾವಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಮ್ಮೇಳನ ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಈ ಸಮ್ಮೇಳನ ಯಶಸ್ವಿಯಾಗಲು ಜಿಲ್ಲೆಯ ಎಲ್ಲಾ ನಾಗರೀಕರು  ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು. 
    ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್‌ರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣದ ಧ್ಯೇಯ ಹೊಂದಿರುವ ಎಬಿವಿಪಿಗೆ ಸಮಾಜದ ಎಲ್ಲರ ಸಹಕಾರ ಹೆಚ್ಚಿನದ್ದಾಗಿದೆ ಎಂದರು.  ಎಬಿವಿಪಿ ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. 

ಇಂದು ದೇಶದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವೇ ಬೇರೆ : ಸಂಸದ ಬಿ.ವೈ ರಾಘವೇಂದ್ರ.

ಭದ್ರಾವತಿ ನಗರದಲ್ಲಿ ಸೋಮವಾರ ಪಕ್ಷದ ಯುವ ಮುಖಂಡ, ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರ ನೇತೃತ್ವದಲ್ಲಿ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭೀಮ ಸಂಗಮ, ದಲಿತ ಬಂಧುಗಳಿಗೆ ಭೋಜನ ಕಾರ್ಯಕ್ರಮ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು. 
    ಭದ್ರಾವತಿ : ಅಂದು ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷವೇ ಬೇರೆ. ಇಂದು ದೇಶದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವೇ ಬೇರೆ ಎಂದು  ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ನಗರದಲ್ಲಿ ಸೋಮವಾರ ಪಕ್ಷದ ಯುವ ಮುಖಂಡ, ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರ ನೇತೃತ್ವದಲ್ಲಿ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭೀಮ ಸಂಗಮ, ದಲಿತ ಬಂಧುಗಳಿಗೆ ಭೋಜನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಅಂದು ಇದ್ದಿದ್ದು ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡುವ ಸಲುವಾಗಿ ಜನ್ಮ ತಾಳಿದ ಕಾಂಗ್ರೆಸ್ ಪಕ್ಷ. ಆದರೆ ಮುಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಗಾಂಧೀಜಿಯವರು ಕಾಂಗ್ರೆಸ್ ಪಕ್ಷ ವಿಸರ್ಜಿಸಿ. ಅದರ ಗುರಿ ಹಾಗು ಉದ್ದೇಶ ಈಡೇರಿದೆ. ಇನ್ನು ಅದನ್ನು ಕೇವಲ ಸಾಂಸ್ಕೃತಿಕ ಸಂಘಟನೆಯಾಗಿರಲಿ ಎಂದು ತಿಳಿಸಿದ್ದರು. ಆದರೆ ಅಂದಿನ ಕಾಂಗ್ರೆಸ್ ಮುಖಂಡರು ಗಾಂಧಿಜಿಯವರ ಮಾತನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷ್ಚವನ್ನು ತಮ್ಮ ರಾಜಕೀಯ ಅಧಿಕಾರದ ಉದ್ದೇಶಕ್ಕಾಗಿ ಜೀವಂತವಾಗಿರಿಸಿಕೊಂಡು ಇಂದಿಗೂ ನಿರಂತರವಾಗಿ ಅಧಿಕಾರ ಅನುಭವಿಸುತ್ತಾ ಬಂದಿದ್ದಾರೆಂದು ಆರೋಪಿಸಿದರು. 
       ಮಹಾತ್ಮಗಾಂಧಿಜೀಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬೆಳಗಾವಿಗೆ ಭೇಟಿ ಅಲ್ಲಿನ ಬಾವಿಯಲ್ಲಿ ನೀರನ್ನು ಸೇದುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದ ೧೦೦ ವರ್ಷಗಳ ಸವಿ ನೆನೆಪಿಗೆ `ಜೈ ಭೀಮ್, ಜೈ ಬಾಪು, ಜೈ ಸಂವಿಧಾನ' ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜರುಗಿದ ಕಾರ್ಯಕ್ರಮ ಹಾಸ್ಯಾಸ್ಪದವಾಗಿದೆ ಎಂದರು.       
    ಅಂಬೇಡ್ಕರ್‌ರವರನ್ನು ಕಾಂಗ್ರೆಸ್ ಪಕ್ಷ ಕೇವಲ ಅವರ ಹೆಸರಿನಲ್ಲಿ ಭಾಷಣ ಮಾಡುವುದಕ್ಕೆ, ಸಭೆ ಸಮಾರಂಭಗಳಲ್ಲಿ ಅವರ ಪೋಟೋ ಪೂಜೆ ಮಾಡುವುದಕ್ಕೆ ಸೀಮಿತಿಗೋಳಿಸಿದರೆ,  ಬಿಜೆಪಿ ಪಕ್ಷ ಅವರು ಜನಿಸಿದ, ವಿದ್ಯಾಭ್ಯಾಸ ಮಾಡಿದ, ವಿದೇಶದಲ್ಲಿದ್ದ, ಮರಣಿಸಿದ ಸ್ಥಳಗಳನ್ನು ಪಂಚ ಕಲ್ಯಾಣ ಎಂಬ ಹೆಸರಿನಲ್ಲಿ ಸುಮಾರು ೩೫೦ ಕೋಟಿ ರೂ. ವೆಚ್ಚ ಮಾಡಿ ಐತಿಹಾಸಿಕ ಸ್ಮಾರಕವನ್ನಾಗಿ ಮಾಡಿದೆ ಎಂದರು.
    ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ. ತಿದ್ದುಪಡಿ ಮಾಡುತ್ತದೆ ಎಂದು ಕಾಂಗ್ರೆಸ್ ದೇಶಾದ್ಯಂತ ಅಪಪ್ರಚಾರದಲ್ಲಿ ತೊಡಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಇದುವರೆಗೆ ೧೦೬ ಬಾರಿ ಸಂವಿದಾನ ತಿದ್ದುಪಡಿ ಮಾಡಲಾಗಿದ್ದು, ನಿಜ ಸಂಗತಿ ಎಂದರೆ ಕಾಂಗ್ರೆಸ್ ಪಕ್ಷ ತನ್ನ ಅಧಿಕಾರದ ಸಮಯದಲ್ಲಿ ಸಂವಿಧಾನವನ್ನು ತನಗೆ ಬೇಕಾದಂತೆ ೭೫ ಬಾರಿ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿಯನ್ನು ಯಾಕೆ ಮಾಡಿದೆ ಎಂದು ಇದುವರೆಗೂ  ದೇಶದ ಜನರ ಮುಂದೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದರು.
    ಕಾಂಗ್ರೆಸೇತರ ರಾಜಕೀಯ ಪಕ್ಷಗಳು ಸಂವಿಧಾನಕ್ಕೆ ೩೧ ಬಾರಿ ತಿದ್ದುಪಡಿ ಮಾಡಿವೆ. ಅದರಲ್ಲಿ ಬಿಜೆಪಿ ಬೆಂಬಲಿತ ಸಮಯದಲ್ಲಿ ವಿ.ಪಿ ಸಿಂಗ್ ರವರ ಆಧಿಕಾರವಧಿಯಲ್ಲಿ ಮತ್ತು ವಾಜಪೇಯಿ ಆಧಿಕಾರದ ಸಮಯದಲ್ಲಿ ೧೪ ಮತ್ತು ನರೇಂದ್ರ ಮೋದಿಯವರ ಅವಧಿಯಲ್ಲಿ ೮ ಬಾರಿ ತಿದ್ದುಪಡಿ ಆಗಿದೆ. ಈ ಎಲ್ಲಾ ತಿದ್ದುಪಡಿಗಳು ದೇಶದ ಜನರ, ಹಿಂದುಳಿದವರ, ಎಸ್‌ಸಿ/ಎಸ್‌ಟಿ ಜನಾಂಗದವರ ಅಭಿವೃಧ್ಧಿ, ಮೀಸಲಾತಿ ಮುಂದುವರೆಯಬೇಕು, ೧೦ನೇ ತೆರಿಗೆ ಅನುಷ್ಠಾನಕ್ಕಾಗಿ, ಬ್ಯಾಕ್‌ಲಾಗ್ ಮೀಸಲಾತಿ ಹುದ್ದೆಗಾಗಿ, ಅರುಣಾಚಲ ಪ್ರದೇಶದಲ್ಲಿ ಹಿಂದುಳಿದವರಿಗೆ ರಾಜಕೀಯ ಅಧಿಕಾರಕ್ಕಾಗಿ ಮತ್ತು ದೇಶದಲ್ಲಿ ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಮಿತಿ ಮಾಡುವ ಮೂಲಕ ದೇಶದ ಬೊಕ್ಕಸಕ್ಕೆ ಹೊರೆಯಾಗಬಾರದು ಎಂಬ ಭವಿಷ್ಯದ ವೆಚ್ಚದ ಕಾರಣಕ್ಕಾಗಿ, ಶಾಸಕರ ಮತ್ತು ಸಂಸದರ ಸಂಖ್ಯೆಯ ಆಧಾರದ ಮೇಲೆ ಸಂಪುಟ ರಚನೆ ಮಾಡಬೇಕು ಎಂಬುದು ಬಹು ಮುಖ್ಯವಾದ ಸಂಗತಿಗಳು ಎಂದರು.
    ನರೇಂದ್ರ ಮೋದಿಯವರ ಅವಧಿಯಲ್ಲಿ ತಿದ್ದುಪಡಿ ಆಗಿರುವುದು ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಮಾನ್ಯತೆ ಮುಂದುವರಿಕೆಗಾಗಿ, ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ೨೦೩ ರವರೆಗೆ ಮಂದುವರೆಸುವುದಕ್ಕಾಗಿ, ೩೭೦ನೇ ವಿಧಿಯನ್ನು ರದ್ದು ಮಾಡುವುದಕ್ಕಾಗಿ, ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ರಷ್ಟು ಮೀಸಲಾತಿ ಅವಕಾಶ ಕಲ್ಪಿಸುವುದು ಸೇರಿದಂತೆ ಇತರ ಕಾರಣಗಳಿಗಾಗಿ ಸಂವಿಧಾನ ತಿದ್ದುಪಡಿ ಮಾಡಿದೆ ಎಂದು ಹಿಂದಿನ ಕಾರಣಗಳನ್ನು ಬಹಿರಂಗ ಪಡಿಸಿದರು.
    ಬಿಜೆಪಿ ಮೇಲೆ ಕಾಂಗ್ರೆಸ್ ಮಾಡುತ್ತಿರುವ ಅಪಪ್ರಚಾರಗಳಿಗೆ ದಲಿತ, ಹಿಂದುಳಿದ ಸಮುದಾಯಗಳು ಇನ್ನಾದರೂ ಕಿವಿಗೊಡದೆ ದೇಶದ ಭದ್ರತೆ, ಆಖಂಡತೆ, ಸುರಕ್ಷತೆ, ಸರ್ವಜನರ ಏಳಿಗೆಗಾಗಿ, ದಲಿತ, ಹಿಂದುಳಿದವರ ಪ್ರಾಮಾಣಿಕ ಅಭಿವೃಧ್ಧಿಗಾಗಿ ದಲಿತರು, ಹಿಂದುಳಿದವರು ಇನ್ನಾದರೂ ಎಚ್ಚೆತ್ತುಕೊಂಡು ಪ್ರಾಮಾಣಿಕವಾಗಿ ಬಿಜೆಪಿ  ಬೆಂಬಲಿಸಿ ತಮ್ಮ ಕೊಡುಗೆಗಳನ್ನು ನೀಡಿ ಎಂದು ಮನವಿ ಮಾಡಿದರು.
    ಪ್ರಗತಿಪರ ಹಾಗು ದಲಿತ ಮುಖಂಡ ಸುರೇಶ್ ಮಾತನಾಡಿ, ವಿವಿಧ ರಾಜಕೀಯ ಪಕ್ಷಗಳು ಅಂಬೇಡ್ಕರ್ ವಿಚಾರಗಳನ್ನು ವಿವಿಧ ರೀತಿಯಲ್ಲಿ ನೋಡುತ್ತಾರೆ. ಆದರೆ ಅವರ ಗುರಿ ಬಾಬಾ ಸಾಹೇಬರ ಆಶಯಗಳನ್ನು ಈಡೇರಿಸಿ ಅನುಷ್ಠಾನಗೊಳಿಸುವುದಾಗಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪರವರು ತಮ್ಮ ಅಧಿಕಾರಾವಧಿ ಸಮಯದಲ್ಲಿ ಜಿಲ್ಲೆಯಲ್ಲಿ ಛಲವಾದಿ ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ದಲಿತರ ಬಗ್ಗೆ ಕಾಳಜಿ ವಹಿಸಿದ್ದಾರೆ. ಇವರು ದಲಿತ ಅಲ್ಪಸಂಖ್ಯಾತ ವಿರೋಧಿ ಎಂಬ ಭಾವನೆ ಇದೆ. ಆದರೆ ಇದು ಕೇವಲ ಆರೋಪ ಮಾತ್ರ. ವಾಸ್ತವವಾಗಿ ಎಲ್ಲಾ ವರ್ಗದವರನ್ನು ಪ್ರೀತಿ ವಿಶ್ವಾಸಗಳಿಂದ ಗೌರವದಿಂದ ಕಾಣುತ್ತಿರುವುದು ನಿಜ ಸಂಗತಿಯಾಗಿದೆ ಎಂದರು. 
    ದಲಿತ ಮುಖಂಡರಾದ ಜಿ. ಆನಂದ ಕುಮಾರ್, ನಿತ್ಯಾನಂದ, ಶಿವಾನಂದ, ಪುರುಷೋತ್ತಮ್, ಮೈಲಾರಪ್ಪ, ಅನ್ನಪೂರ್ಣ, ಸರಸ್ವತಿ, ಕೃಷ್ಣಪ್ಪ, ಬಸವರಾಜ್, ಶಕುಂತಲ, ಶಿವಬಸಪ್ಪ ಸೇರಿದಂತೆ ಇತರರು  ವೇದಿಕೆಯಲ್ಲಿದ್ದರು.
    ವೆಂಕಟೇಶ್ ಪ್ರಾರ್ಥಿಸಿ, ಮಂಗೋಟೆ ರುದ್ರೇಶ್ ಆಶಯ ಭಾಷಣ ನಡೆಸಿಕೊಟ್ಟರು. ಎಸ್. ದತ್ತಾತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಹನುಮಂತ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

ಭದ್ರಾ ನದಿ ಸೇತುವೆ ಕೆಳಭಾಗದಲ್ಲಿ ಮೃತಪಟ್ಟ ಚಿರತೆ ಪತ್ತೆ

ಭದ್ರಾವತಿ: ನಗರದ ಬೈಪಾಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಆನೆಕೊಪ್ಪ ಬಳಿ ಭದ್ರಾ ನದಿ ಸೇತುವೆ ಕೆಳ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಮೃತಪಟ್ಟಿರುವ ಚಿರತೆಯೊಂದು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ನಗರದ ಬೈಪಾಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಆನೆಕೊಪ್ಪ ಬಳಿ ಭದ್ರಾ ನದಿ ಸೇತುವೆ ಕೆಳ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಮೃತಪಟ್ಟಿರುವ ಚಿರತೆಯೊಂದು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಸುಮಾರು ೨ ರಿಂದ ೩ ವರ್ಷದ ಗಂಡು ಚಿರತೆಯ ಮೃತದೇಹವಾಗಿದ್ದು, ಇದು ಭದ್ರಾ ಅಭರಣ್ಯ ವ್ಯಾಪ್ತಿಯಲ್ಲಿ ವಾಸಿಸುವ ಚಿರತೆ ಎಂಬುದು ತಿಳಿದು ಬಂದಿದೆ. ಈ ಚಿರತೆ ಸೇತುವೆ ಮೇಲಿಂದ ಬಿದ್ದು ಸಾವನ್ನಪ್ಪಿದೆಯೋ ಅಥವಾ ಬೇಟೆಯಾಡಿ ಹತ್ಯೆ ಮಾಡಲಾಗಿದೆಯೋ ಎಂಬುದು ತನಿಖೆಯಿಂದ ತಿಳಿದು ಬರಬೇಕಾಗಿದೆ. 
    ಈ ಕುರಿತು ಮಾಹಿತಿ ನೀಡಿರುವ ವಲಯ ಅರಣ್ಯಾಧಿಕಾರಿ ಬಿ.ಎಚ್ ದುಗ್ಗಪ್ಪ ಈ ಭಾಗದಲ್ಲಿ ಚಿರತೆಗಳು ಹೆಚ್ಚಾಗಿವೆ. ಬೆಳಿಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಚಿರತೆ ಇದೆ ದಿನ ಮೃತಪಟ್ಟಿರುವ ಸಾಧ್ಯತೆ ಕಂಡು ಬರುತ್ತಿದೆ. ಚಿರತೆಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ನಂತರ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದರು. 
    ಘಟನಾ ಸ್ಥಳದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ವಲಯ ಅರಣ್ಯಾಧಿಕಾರಿ ಕಛೇರಿಯ ಸಿಬ್ಬಂದಿಗಳು, ಪೇಪರ್ ಟೌನ್ ಠಾಣೆ ಉಪ ನಿರೀಕ್ಷಕಿ ಕವಿತಾ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.