Tuesday, February 4, 2025

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ, ಮೈಕ್ರೋ ಫೈನಾನ್ಸ್‌ನವರ ಕಿರುಕುಳ ತಪ್ಪಿಸಿ

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಿರಿಯ ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹ

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು. 
    ಭದ್ರಾವತಿ: ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಿರಿಯ ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹಿಸಿದರು. 
    ವಿಶ್ವ ರೈತ ಚೇತನ ಪ್ರೊ. ಎಂ.ಡಿ ನಂಜುಂಡಸ್ವಾಮಿಯವರ ೨೧ನೇ ಸಂಸ್ಮರಣೆ ಅಂಗವಾಗಿ ಮಂಗಳವಾರ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಅವರು ಮಾತನಾಡಿದರು. 
    ತಾಲೂಕಿನಾದ್ಯಂತ ರೈತರು ಹಾಗೂ ಬಡವರು ಸುಮಾರು ೫೦ ವರ್ಷಗಳಿಂದಲೂ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಸಾಗುವಳಿ ಭೂಮಿಯಿಂದ ಅವರ ಕುಟುಂಬಕ್ಕೆ ಆಹಾರ, ದುಡಿಯುವ ಕೈಗಳಿಗೆ ಕೆಲಸ ಮಾತ್ರವಲ್ಲದೇ ದೇಶದ ಆಹಾರ ಭದ್ರತೆಗೂ ಕೊಡುಗೆ ನೀಡಿರುತ್ತಾರೆ. ಈ ರೀತಿ ಸಾಗುವಳಿ ಮಾಡಿಕೊಂಡು ಬಂದ ಭೂಮಿಯ ಹಕ್ಕನ್ನು ರೈತರಿಗೆ ಮಾನ್ಯ ಮಾಡುವ ಸಲುವಾಗಿ ಸರ್ಕಾರಗಳು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ರೈತರು ಭೂಮಿಯ ಹಕ್ಕು ಮಂಜೂರು ಮಾಡುವಂತೆ ನಮೂನೆ ೫೦, ನಮೂನೆ ೫೩ ಹಾಗೂ ನಮೂನೆ ೫೭ರಲ್ಲಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಈ ಅರ್ಜಿಗಳನ್ನು ಪರಿಶೀಲಿಸಿ ಹಕ್ಕು ನೀಡಬೇಕಾದ ಸರ್ಕಾರಗಳು ಇಂದಿಗೂ ರೈತರಿಗೆ ಭೂಮಿಯ ಹಕ್ಕನ್ನು ನೀಡದೇ, ರೈತರನ್ನು ಹೈರಾಣಗೊಳಿಸಿವೆ ಎಂದು ಆಕ್ರೋಶ ವ್ಯಕ್ತಪಡಿದರು. 
    ಭೂಮಿಯ ಹಕ್ಕು ಪಡೆಯಲು ರೈತರು ದಿನನಿತ್ಯವು ತಾಲೂಕು ಕಛೇರಿಗೆ ಅಲೆದಾಡುತ್ತಿದ್ದು, ಕಂದಾಯ ಇಲಾಖೆಯ ಸಿಬ್ಬಂದಿಗಳು ಕ್ರಮಬದ್ಧವಾಗಿ ಕೆಲಸ ಮಾಡದೇ ರೈತರನ್ನು ಅಲೆದಾಡಿಸುತ್ತಿದ್ದಾರೆ. ಸರ್ಕಾರದ ಕಂದಾಯ ಮಂತ್ರಿಗಳೇ ಹಲವು ಬಾರಿ ತಾಕೀತು ಮಾಡಿದರೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಇದುವರೆಗೂ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಇದರ ದುರ್ಲಾಭ ಪಡೆದ ಅರಣ್ಯ ಇಲಾಖೆ ರೈತರು ಹಿಂದಿನಿಂದಲೂ ಸಾಗುವಳಿ ಮಾಡಿಕೊಂಡು ಬಂದಿರುವ ಭೂಮಿಯನ್ನು ಕಾನೂನು ಬಾಹಿರವಾಗಿ ಕಿತ್ತುಕೊಳ್ಳಲು ಯತ್ನಿಸುತ್ತಿದ್ದು, ರೈತರು ಮತ್ತು ಅರಣ್ಯ ಇಲಾಖೆಯ ಮಧ್ಯೆ ಪ್ರತಿದಿನವೂ ಸಂಘರ್ಷಕ್ಕೆ ದಾರಿಯಾಗಿದೆ. ಅರಣ್ಯ ಇಲಾಖೆಯು ಯಾವುದೇ ಜಂಟಿ ಸರ್ವೇ ಕಾರ್ಯ ಕೈಗೊಳ್ಳದೇ ತಹಸೀಲ್ದಾರರು ಹಾಗೂ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರೈತರ ವಿರುದ್ಧ ದಾವೆಗಳನ್ನು ಹೂಡಿ ರೈತರಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು. 
    ತಹಸೀಲ್ದಾರರ ನ್ಯಾಯಾಲಯ ಹಾಗೂ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆಗಳು ವಿಚಾರಣೆಯಲ್ಲಿರುವಾಗಲೇ ರೈತರ ಸಾಗುವಳಿ ಜಮೀನುಗಳಿಗೆ ಅಕ್ರಮವಾಗಿ ನುಗ್ಗಿ ರೈತರ ಬೆಳೆದ ಬೆಳೆಗಳನ್ನು ನಾಶಪಡಿಸುವ ಜೊತೆಗೆ ರೈತರನ್ನು ಸಾಗುವಳಿ ಭೂಮಿಯಿಂದ ಒಕ್ಕಲೆಬ್ಬಿಸುವಕಾರ್ಯ ಮಾಡುತ್ತಿದ್ದಾರೆ. ತಾಲೂಕು ಆಡಳಿತ ಇದನ್ನೆಲ್ಲ ನೋಡಿಕೊಂಡು ರೈತರ ಹಿತರಕ್ಷಣೆಗೆ ಬಾರದೇ ಕಣ್ಣು ಮುಚ್ಚಿಕೊಂಡು ಕುಳಿತಿರುತ್ತದೆ. ತಾಲೂಕು ಆಡಳಿತದ ಈ ಬೇಜವಾಬ್ದಾರಿ ನಡೆಯನ್ನು ರೈತಸಂಘ ಖಂಡಿಸುವ ಜೊತೆಗೆ  ಕೂಡಲೇ ರೈತರಿಗೆ ಬಗರ್ ಹುಕುಂ ಭೂಮಿಯ ಹಕ್ಕನ್ನು ನೀಡುವಂತೆ ಒತ್ತಾಯಿಸುತ್ತದೆ ಎಂದರು. 
    ರೈತರು, ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಗ್ರಾಮೀಣ ಪ್ರದೇಶವಾಸಿಗಳು ವ್ಯವಸಾಯ ಹಾಗೂ ವ್ಯವಸಾಯೇತರ ಕಾರಣಕ್ಕಾಗಿ ಖಾಸಗಿ ಫೈನಾನ್ಸ್‌ಗಳಿಂದ ಸಾಲ ಪಡೆದಿರುತ್ತಾರೆ. ಈ ಸಾಲದ ಕಂತುಗಳ ವಸೂಲಿಗಾಗಿ ಖಾಸಗಿ ಫೈನಾನ್ಸ್‌ಗಳು ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ಬಾಹಿರವಾಗಿ ಇನ್ನಿಲ್ಲದ ಕಿರುಕುಳ ನೀಡುತ್ತಿವೆ ಎಂದು ದೂರಿದರು. 
    ಹಲವೆಡೆ ರೈತರ ಕೃಷಿ ಉಪಕರಣಗಳ ಜಪ್ತಿ, ಮೋಟಾರ್ ಸೈಕಲ್‌ಗಳ ಜಿಪ್ತಿ, ರೈತರ ಮನೆ ಜಪ್ತಿ ಸೇರಿದಂತೆ ರೈತರ ಮನೆಯ ಬಾಗಿಲಿಗೆ ಸಾಲಗಾರರು ಎಂದು ಫಲಕ ತೂಗು ಹಾಕುವುದು, ಮನೆಯ ಬಾಗಿಲು ಹಾಗೂ ಗೋಡೆ ಮೇಲೆ ಸಾಲಗಾರರು ಎಂದು ಬರೆದು ಸಾಮಾಜಿಕವಾಗಿ ಗ್ರಾಮೀಣ ಜನರ ಮರ್ಯಾದೆಯನ್ನು ಹರಾಜು ಮಾಡುವುದರ ಜೊತೆಗೆ ಕಾನೂನಬಾಹಿರವಾಗಿ ಸಾಲ ವಸೂಲಿ ಕ್ರಮಗಳನ್ನು ಅನುಸರಿಸಿ ಗೂಂಡಾಗಿರಿ ನಡೆಸುತ್ತಿರುವುದನ್ನು ರೈತಸಂಘ ಖಂಡಿಸುತ್ತದೆ. ತಕ್ಷಣ ತಾಲೂಕು ಆಡಳಿತ ಸೂಕ್ತ ಕ್ರಮಗಳನ್ನು ಕೈಗೊಂಡು ಖಾಸಗಿ ಫೈನಾನ್ಸ್‌ಗಳು ಗ್ರಾಮೀಣ ಪ್ರದೇಶದ ಜನರಿಗೆ ನೀಡುತ್ತಿರುವ ಕಿರುಕುಳ ತಪ್ಪಿಸಬೇಕೆಂದು ಆಗ್ರಹಿದರು. 
    ರೈತರು ವ್ಯವಸಾಯ ಭೂಮಿಗೆ ನೀರಾವರಿ ಸೌಲಭ್ಯ ಹೊಂದಲು ಕೊಳವೆ ಬಾವಿಗಳನ್ನು ಕೊರೆಸಿ ವಿದ್ಯುತ್ ಸಂಪರ್ಕ ಪಡೆಯಲು ಅಕ್ರಮ-ಸಕ್ರಮದ ಅಡಿಯಲ್ಲಿ ಹಣ ಪಾವತಿಸಿ ವರ್ಷಗಳೇ ಕಳೆದರೂ ಇದುವರೆವಿಗೂ ಸರ್ಕಾರ ಸಕ್ರಮ ಮಾಡಿರುವುದಿಲ್ಲ. ಅಲ್ಲದೇ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ಸಂಪೂರ್ಣ ವೆಚ್ಚವನ್ನು ಭರಿಸಬೇಕೆಂಬ ಅವೈಜ್ಞಾನಿಕ ನಿಯಮವನ್ನು ರೂಪಿಸಿದ್ದು, ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಸಾಲ-ಸೂಲ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣವೇ ಸರ್ಕಾರ ಈ ಹಿಂದಿನಂತೆ ನಿಯಮ ರೂಪಿಸಿ ರೈತರಿಗೆ ವಿದ್ಯುತ್ ಸಂಪರ್ಕ ನೀಡಬೇಕು ಹಾಗೂ ಅಕ್ರಮ-ಸಕ್ರಮ ಅರ್ಜಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಬೇಕೆಂದು ಆಗ್ರಹಿಸಿದರು. 
     ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾಧ್ಯಕ್ಷ ಹಾಲೇಶಪ್ಪಗೌಡ್ರು, ಜಿಲ್ಲಾ ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ತಾಲೂಕು ಅಧ್ಯಕ್ಷ ಹಿರಣಯ್ಯ, ಯುವ ರೈತ ಮುಖಂಡ ಡಿ.ವಿ ವೀರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎನ್ ಮಂಜುನಾಥೇಶ್ವರ ಮತ್ತು ಮೋಹನ್ ಕೂಡ್ಲಿಗೆರೆ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಇನ್ನಿತರ ಪ್ರಮುಖರು, ರೈತರು ಪಾಲ್ಗೊಂಡಿದ್ದರು. 

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹಕ್ಕೂ  ಮೊದಲು ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. 

Monday, February 3, 2025

ಪೊಲೀಸ್ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ನಿವೃತ್ತಿ : ಬೀಳ್ಕೊಡುಗೆ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಪ್ರಸ್ತುತ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ನಗರದ ನ್ಯೂಟೌನ್, ಹಳೇನಗರ, ಹೊಸಮನೆ ಶಿವಾಜಿ ಸರ್ಕಲ್ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ವೃತ್ತಿ ಅವಧಿಯಲ್ಲಿ ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೆ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದರು. 
    ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಹಾಗು ಸಿಬ್ಬಂದಿ ವರ್ಗದವರು ಜಯಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು. ಜಯಪ್ಪ ಕುಟುಂಬ ವರ್ಗದವರು ಉಪಸ್ಥಿತರಿದ್ದರು. 

ಕಲಾವಿದ ವೈ.ಕೆ ಹನುಮಂತಯ್ಯರಿಗೆ ಗೌರವ ಡಾಕ್ಟರೇಟ್ ಪದವಿ


ಭದ್ರಾವತಿ ನಗರದ ರಂಗಭೂಮಿ ಹಾಗೂ ಚಲನಚಿತ್ರ ಕಿರುತೆರೆ ನಟ ವೈ.ಕೆ ಹನುಮಂತಯ್ಯರವರ ಕಲಾ ಸೇವೆಯನ್ನು ಪರಿಗಣಿಸಿ ಹೊಸೂರಿನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 
    ಭದ್ರಾವತಿ: ನಗರದ ರಂಗಭೂಮಿ ಹಾಗೂ ಚಲನಚಿತ್ರ ಕಿರುತೆರೆ ನಟ ವೈ.ಕೆ ಹನುಮಂತಯ್ಯರವರ ಕಲಾ ಸೇವೆಯನ್ನು ಪರಿಗಣಿಸಿ ಹೊಸೂರಿನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 
    ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಕ್ಕರೆ ಘಟಕದಲ್ಲಿ ಸುಮಾರು ೨೯ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ವೈ.ಕೆ ಹನುಮಂತಯ್ಯರವರು ಸುಮಾರು ೫ ದಶಕಗಳಿಂದ ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹಾಗು ಜಾನಪದ ಸೇರಿದಂತೆ ಒಟ್ಟು ೬೦ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರ ಅಭಿನಯದ ನಾಟಕಗಳು ಸುಮಾರು ೧೮೦ ಬಾರಿ ಪ್ರದರ್ಶನಗೊಂಡಿವೆ. ಅಲ್ಲದೆ ಹನುಮಂತಯ್ಯರವರು ನೃತ್ಯ ಕಲಾವಿದರಾಗಿದ್ದು, ಎಲ್ಲಾ ಪ್ರಕಾರದ ನೃತ್ಯಗಳನ್ನು ಪ್ರದರ್ಶಿಸಿದ್ದಾರೆ. 
    ೨೫೦ಕ್ಕೂ ಹೆಚ್ಚು ಬೀದಿ ನಾಟಕಗಳಲ್ಲಿ ಅಭಿನಯಿಸಿದ್ದು, ಚಲನಚಿತ್ರ ಕಿರುತೆರೆ ನಟರಾಗಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಜಿಲ್ಲಾ ಹಾಗು ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇವರ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.  ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಅಭಿನಂದಿಸಿದ್ದಾರೆ. 

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ

ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯದಲ್ಲೇ ಏಕೈಕ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು. 
    ಭದ್ರಾವತಿ : ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯದಲ್ಲೇ ಏಕೈಕ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು. 
    ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ಸಂಸ್ಥೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಮತ್ತು ಸಂಸ್ಥಾಪಕರಾದ ಬಿ.ಎಲ್ ರಂಗಸ್ವಾಮಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಬಿ. ಇಡಿ ವಿಭಾಗಗಳಲ್ಲಿ ಅತಿಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.
    ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್ ಷಡಾಕ್ಷರಿ,ಬೆಂಗಳೂರು ಹಾಗೂ ಪ್ರಧಾನ ಪೋಷಕರು, ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಭದ್ರಾವತಿ ಇವರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು(ಆಡಳಿತ) ಎಸ್.ಆರ್ ಮಂಜುನಾಥ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಲ್  ಷಡಾಕ್ಷರಿ, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ, ಬಿ.ಇಡಿ ವಿಭಾಗದ ಪ್ರಾಂಶುಪಾಲ ಡಾ.ಎಸ್.ಪಿ ರಾಕೇಶ್ ಮತ್ತು ವಿದ್ಯಾಸಂಸ್ಥೆ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು. 
ವಿದ್ಯಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್ ಸ್ವಾಗತಿಸಿ, ನಿರ್ದೇಶಕ ಬಿ. ಚೆನ್ನಯ್ಯ ಕಾರ್ಯಕ್ರಮ ನಿರೂಪಿಸಿದರು.  ಖಜಾಂಚಿ ಕೆ.ಆರ್ ಪ್ರಶಾಂತ್ ರವರು  ವಂದಿಸಿದರು. 

Sunday, February 2, 2025

ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ

ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ:  ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು. 
    ಗಂಗಾಪೂಜೆ, ಗೋಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಪ್ರತಿಷ್ಠಾಪನಾ ಅಂಗವಾಗಿ ಪ್ರತಿಷ್ಠಾಪನಾದಿ ಮೂರ್ತಿ ಹೋಮಗಳು, ಮಹಾ ಪೂರ್ಣಾಹುತಿ, ಅಷ್ಟವದಾನ ಸೇವೆ, ಮಹಾಮಂಗಳಾರತಿ, ಬಿಂಬ ದರ್ಶನ  ಮತ್ತು ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ಶಿವಮೊಗ್ಗ ಬೆಕ್ಕಿನಕಲ್ಮಠ ಶ್ರೀ ಡಾ. ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಮೇಷ ಲಗ್ನದಲ್ಲಿ ಶ್ರೀಗಳಿಂದ ಆಲಯ ಶಿಲಾಮಯ ದೇವಾಲಯ ಲೋಕಾರ್ಪಣೆಗೊಂಡಿತು. ನಂತರ ಜರುಗಿದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿದರು. 
    ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ವಿಧಾನ ಪರಿಷತ್ ಮಾಜಿ ಸದಸ್ಯ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೆಗಡೆ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಭಾರತಿ ರಾಮಕೃಷ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾತನಾಡಿದರು. 
    ಶ್ರೀ ಕಾಲಭೈರವೇಶ್ವರ ದೇವಸ್ಥಾನ ಮತ್ತು ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷಣ್‌ಗೌಡರು ಅಧ್ಯಕ್ಷತೆ ವಹಿಸಿದ್ದರು. ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. 
    ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಭದ್ರಾವತಿ-ಶಿವಮೊಗ್ಗ ನಗರ ಹಾಗು ಗ್ರಾಮಾಂತರ ಪ್ರದೇಶಗಳಿಂದ ಭಕ್ತರು ಆಗಮಿಸಿದ್ದರು. 

ಎಲ್ಲಾ ಸಮುದಾಯಗಳಲ್ಲೂ ಸಾಮಾಜಿಕ ನ್ಯಾಯದ ಅಗತ್ಯವಿದೆ : ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ

ಭದ್ರಾವತಿ ಹಳೇನಗರದ ಉಪ್ಪಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಭಗೀರಥ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಭಾವಚಿತ್ರ ಅನಾವರಣಗೊಳಿಸಿದ ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪರವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಭದ್ರಾವತಿ: ಸಾಮಾಜಿಕ ನ್ಯಾಯ ಎಂಬುದು ಎಲ್ಲಾ ಸಮುದಾಯಗಳಲ್ಲೂ ಬೇಕು. ಎಲ್ಲರೂ ಸಮಾನವಾಗಿ ಬದುಕಿದಾಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ ಹೇಳಿದರು. 
ಅವರು ಭಾನುವಾರ ಹಳೇನಗರದ ಉಪ್ಪಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಭಗೀರಥ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು. 
ಸಮುದಾಯಗಳನ್ನು ಸಂಘಟಿಸುವುದು ಬಹಳ ಕಷ್ಟದ ಕೆಲಸವಾಗಿದ್ದು, ಈ ನಡುವೆ ಸಮುದಾಯ ಭವನ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಭವಿಷ್ಯದಲ್ಲಿ ಈ ಸಮುದಾಯ ಭವನದ ಮಹತ್ವ ಎಲ್ಲರಿಗೂ ಅರಿವಾಗಲಿದೆ ಎಂದರು. 
ಎಲ್ಲಾ ಸಮುದಾಯಗಳಲ್ಲೂ ಸಾಮಾಜಿಕ ನ್ಯಾಯದ ಅಗತ್ಯವಿದೆ. ಎಲ್ಲರೂ ಸಮಾನತೆಯಿಂದ ಬದುಕುಬೇಕು. ಉತ್ತಮ ಸಮಾಜ ನಿರ್ಮಿಸಿಕೊಳ್ಳಬೇಕೆಂಬುದು ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆಶಯವಾಗಿದೆ. ಈ ನಿಟ್ಟಿನಲ್ಲಿ ಅವರು ನಮಗೆ ತೋರಿಸಿಕೊಟ್ಟಿರುವ ೩ ಪ್ರಮುಖ ಮಾರ್ಗಗಳು ಎಂದರೆ ಶಿಕ್ಷಣ, ಸಂಘಟನೆ ಹಾಗು ಹೋರಾಟ.  ಪ್ರತಿಯೊಬ್ಬರು ಶಿಕ್ಷಣವಂತಾಗಬೇಕು. ಆ ಮೂಲಕ ಭವಿಷ್ಯದ ಬದುಕು ಕಟ್ಟಿಕೊಳ್ಳಬೇಕು. ಕೇವಲ ಉನ್ನತ ಹುದ್ದೆ ಪಡೆದುಕೊಂಡರೆ ಸಾಲದು. ಸಮಾಜಮುಖಿ ಬದುಕು ನಮ್ಮದಾಗಬೇಕು. ಆಗ ಮಾತ್ರ ನಾವು ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದರು. 
ಸಮಾಜದಲ್ಲಿ ಸಂಘಟನೆ ಇಲ್ಲದೆ ಏನನ್ನು ಸಹ ಮಾಡಲು ಸಾಧ್ಯವಿಲ್ಲ. ಸಂಘಟನೆಯಲ್ಲಿ ಬಲವಿದೆ. ಇದನ್ನು ನಾವುಗಳು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಸಂಘಟನೆ ಮೂಲಕ ಹೋರಾಟ ನಡೆಸಿ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಯಾರು ಸಹ ವೈಯಕ್ತಿಕ ಕಾರಣಗಳಿಗೆ ಸಂಘಟನೆಗಳನ್ನು ಬಲಿ ಕೊಡಬಾರದು ಎಂದರು. 
ನಗರಸಭೆ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ಬಿ.ಕೆ ಮೋಹನ್ ಮಾತನಾಡಿ, ಸಮಾಜದವರು ತುಂಬಾ ಶ್ರಮಪಟ್ಟು ಸಮುದಾಯ ಭವನವನ್ನು ನಿರ್ಮಿಸಿದ್ದಾರೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘಟನೆಗಳಲ್ಲಿ ಭಿನ್ನಭಿಪ್ರಾಯಗಳು ಸಹಜ ಪ್ರತಿಯೊಬ್ಬರೂ ಸಹ ಎಲ್ಲವನ್ನು ಸಹಿಸಿಕೊಂಡು ಮುಂದೆ ಸಾಗಬೇಕು. ಸಂಘಟನೆಯಲ್ಲಿ ಎಲ್ಲರ ಶ್ರಮ ಮುಖ್ಯವಾಗಿದೆ. ಇಲ್ಲಿ ಯಾರು ಸಹ ದೊಡ್ಡವರು, ಚಿಕ್ಕವರು ಎಂಬುದು ಇಲ್ಲ. ಸಮುದಾಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತಷ್ಟು ಬಲಗೊಳ್ಳಬೇಕು ಎಂದರು. 
ಹೊಸದುರ್ಗ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ವಿಧಾನಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಶಿವಮೊಗ್ಗ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ಡಾ. ಪಿ. ರಂಗನಾಥ್, ನಿವೃತ್ತ ಕೆಎಎಸ್ ಅಧಿಕಾರಿ ಬಿ. ಭೀಮಪ್ಪ, ತೆರಿಗೆ ಇಲಾಖೆ ನಿವೃತ್ತ ಹೆಚ್ಚುವರಿ ಆಯುಕ್ತ ಜಗನ್ನಾಥ್ ಸಗರ, ಉಪ್ಪಾ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಗಿರೀಶ್ ಉಪ್ಪಾರ, ಶ್ರೀ ಭಗೀರಥ  ಸಹಕಾರ ಸಂಘ ಜಿಲ್ಲಾಧ್ಯಕ್ಷ ಎನ್. ಮಂಜುನಾಥ್, ನಗರಸಭೆ ಸದಸ್ಯರಾದ ಬಿ.ಎಂ ಮಂಜುನಾಥ್, ಅನುಪಮ ಚನ್ನೇಶ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರಮುಖರರಾದ ರವೀಶ್, ರಾಜಶೇಖರ್ ಉಪ್ಪಾರ, ಶ್ರೀನಿವಾಸ್(ಪೋಟೋ ಗ್ರಾಫರ್), ಕುಮಾರ್, ರಾಮು ಸೇರಿದಂತೆ ತಾಲೂಕು ಸಂಘದ ಪದಾಧಿಕಾರಿಗಳು, ಇನ್ನಿತರ ಸಮಾಜದ ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು. 
 

ಭದ್ರಾವತಿ ಹಳೇನಗರದ ಉಪ್ಪಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಭಗೀರಥ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಮುದಾಯ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. 

Saturday, February 1, 2025

ಫೆ.೨ರಂದು ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ

    ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ, ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ಫೆ.೨ರಂದು ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. 
    ಗಂಗಾಪೂಜೆ, ಗೋಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಪ್ರತಿಷ್ಠಾಪನಾ ಅಂಗವಾಗಿ ಪ್ರತಿಷ್ಠಾಪನಾದಿ ಮೂರ್ತಿ ಹೋಮಗಳು, ಮಹಾ ಪೂರ್ಣಾಹುತಿ, ಅಷ್ಟವದಾನ ಸೇವೆ, ಮಹಾಮಂಗಳಾರತಿ, ಬಿಂಬ ದರ್ಶನ  ಮತ್ತು ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ. 
    ಬೆಳಿಗ್ಗೆ ೧೧ ಗಂಟೆಗೆ ಮೇಷ ಲಗ್ನದಲ್ಲಿ ಶ್ರೀಗಳಿಂದ ಆಲಯ ಶಿಲಾಮಯ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಲಿವೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶಿವಮೊಗ್ಗ ಬೆಕ್ಕಿನಕಲ್ಮಠ ಶ್ರೀ ಡಾ. ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. 
    ಶ್ರೀ ಕಾಲಭೈರವೇಶ್ವರ ದೇವಸ್ಥಾನ ಮತ್ತು ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷಣ್‌ಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಶಾರದಪೂರ್‍ಯಾನಾಯ್ಕ, ಚನ್ನಬಸಪ್ಪ, ಎಸ್.ಎಲ್ ಭೋಜೇಗೌಡ, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ಬಲ್ಕೀಷ್ ಬಾನು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಎಚ್.ಎಸ್ ಸುಂದರೇಶ್, ಶಾರದ ಅಪ್ಪಾಜಿ, ಎಸ್. ರುದ್ರೇಗೌಡ, ಎಸ್.ಎಸ್ ಜ್ಯೋತಿ ಪ್ರಕಾಶ್, ಡಿ.ಜಿ ಬೆನಕಪ್ಪ, ರಮೇಶ್ ಹೆಗಡೆ, ಆರ್. ಕರುಣಾಮೂರ್ತಿ, ಎಸ್. ಕುಮಾರ್ ಮತ್ತು ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಟ್ರಸ್ಟ್ ಕೋರಿದೆ.