Tuesday, February 4, 2025

ಖಾಸಗಿ ಶಾಲೆಗಳು ಶುಲ್ಕ ವಸೂಲಾತಿ, ದಾಖಲಾತಿ ಮಾಹಿತಿ ಕಡ್ಡಾಯವಾಗಿ ಪ್ರಕಟಿಸಲು ಸೂಚನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಹಲವು ಕಾರ್ಯತಂತ್ರ : ಎ.ಕೆ ನಾಗೇಂದ್ರಪ್ಪ 

ಭದ್ರಾವತಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿದರು. 
    ಭದ್ರಾವತಿ: ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೂಚಿಸಿದ್ದಾರೆ. 
    ಅವರು ಮಂಗಳವಾರ ಈ ಕುರಿತು ಮಾಹಿತಿ ನೀಡಿ, ಶಿಕ್ಷಣ ಹಕ್ಕು ಕಾಯಿದೆ-೨೦೦೯ರ ಸೆಕ್ಷನ್-೨(ಬಿ)ರಂತೆ ಎಲ್ಲಾ ಖಾಸಗಿ ಶಾಲೆಗಳು ತಮ್ಮ ಅಧಿಸೂಚಿತ ಶುಲ್ಕವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-೧೩ರ ಅಂಶಗಳನ್ನು ಸಹ ಕಡ್ಡಾಯವಾಗಿ ಮಾರ್ಚ್ ೩೧ರೊಳಗಾಗಿ ಪ್ರಕಟಿಸಬೇಕೆಂದರು. 
    ಶಿಕ್ಷಣ ಹಕ್ಕು ಕಾಯಿದೆ -೨೦೦೯ರ ಪ್ರಕಾರ ಆರ್.ಟಿ.ಇ ಮಕ್ಕಳ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ. ಇದರಿಂದ ಆಡಳಿತ ಮಂಡಳಿಯವರು ಯಾವುದೇ ರೀತಿಯ ದಾಖಲಾತಿ/ಬೋದನಾ ಶುಲ್ಕವನ್ನು ವಿದ್ಯಾರ್ಥಿಯ ಪೋಷಕರುಗಳಿಂದ ಪಡೆಯುವಂತಿಲ್ಲ ಎಂದರು. 
    ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ಕಾರ್ಯತಂತ್ರಗಳು:  
    ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಹಲವಾರು ಕಾರ್ಯತಂತ್ರಗಳನ್ನು ಕೈಗೊಳ್ಳಲಾಗಿದ್ದು, ಮಕ್ಕಳು ಪರೀಕ್ಷೆ ಸಮರ್ಥವಾಗಿ ಎದುರಿಸುವ ಮೂಲಕ ಉತ್ತಮ ಫಲಿತಾಂಶ ಕಂಡುಕೊಳ್ಳುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ವಿಶ್ಲೇಷಣೆ ಮತ್ತು ೨೦೨೪-೨೫ನೇ ಸಾಲಿನ ಫಲಿತಾಂಶ ಸುಧಾರಣೆಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮುಖ್ಯಶಿಕ್ಷಕರೊಂದಿಗೆ ಚರ್ಚೆ ನಡೆಸಲಾಗಿದೆ. ೮ನೇ ತರಗತಿಯಿಂದಲೇ ಮಕ್ಕಳ ಕಲಿಕೆಗೆ ಒತ್ತು ನೀಡಲು ಮುಖ್ಯ ಶಿಕ್ಷಕರಿಗೆ ಬ್ಲಾಕ್ ಮಟ್ಟದಲ್ಲಿ ಸಭೆ. ಮಕ್ಕಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿ ಕಲಿಕಾ ಸಾಮರ್ಥಗಳಿಗೆ ಅನುಗುಣವಾಗಿ ಗುಂಪುಗಳಾಗಿ ವಿಂಗಡನೆ. ಎಲ್ಲಾ ಶಾಲೆಗಳಲ್ಲಿ ಪೋಷಕರ ಮತ್ತು ತಾಯಂದಿರ ಸಭೆ. ಪ್ರತಿ ತಿಂಗಳು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. 
    ಪ್ರತಿ ವಿಷಯದಲ್ಲೂ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣತೆಗೆ ಬೇಕಾದ ಕನಿಷ್ಠ ಅಂಕಗಳನ್ನು ಗಳಿಸುವಂತೆ ಶಿಕ್ಷಕರೊಂದಿಗೆ ವಿಷಯ ವೇದಿಕೆ ಸಭೆಗಳಲ್ಲಿ ಚರ್ಚೆ.  ಪ್ರತಿ ವಿಷಯಗಳಲ್ಲಿ ಪ್ರತಿ ಘಟಕಕ್ಕೂ ಘಟಕ ಪರೀಕ್ಷೆ, ವಿಶ್ಲೇಷಣೆ. ನಿರಂತರ ಗೈರಾಗುವ ವಿದ್ಯಾರ್ಥಿಗಳ ಮನೆ ಭೇಟಿ ಮಾಡಿ ಮಕ್ಕಳ ಮನವೊಲಿಸುವಿಕೆ. ಏಕರೂಪದ ವೇಳಾಪಟ್ಟಿ ತಯಾರಿಕೆ. ವಿದ್ಯಾರ್ಥಿಗಳಿಗೆ ವೇಕ್ ಅಪ್ ಕಾಲ್, ಪೀರ್ ಗ್ರೂಪ್ಪಳ ರಚನೆ. ಜಿಲ್ಲಾ ಹಂತದಿಂದ ಕಿರುಪರೀಕ್ಷೆಗಳು, ತಯಾರಿ ಪರೀಕ್ಷೆಗಳ ನಿರ್ವಹಣೆ ಮತ್ತು ತಾಲ್ಲೂಕು/ಜಿಲ್ಲಾ ಹಂತದಲ್ಲಿ ವಿಶ್ಲೇಷಣೆ. ಪ್ರತಿ ತಾಲೂಕಿನ ಜಿಲ್ಲಾ ಕಛೇರಿಯ ವಿಷಯ ಪರಿವೀಕ್ಷಕರುಗಳ ನೇತೃತ್ವದಲ್ಲಿ ವಿಷಯವಾರು ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡ ವಿಷಯಾಧಾರಿತ ವೇದಿಕೆಗಳಲ್ಲಿ ಚರ್ಚೆ. ಶಾಲಾ ಹಂತದಲ್ಲಿ ವರ್ಷದಲ್ಲಿ ಮೂರು ಬಾರಿ ಅಂದರೆ ತ್ರೈಮಾಸಿಕವಾಗಿ ಎಸ್.ಎಸ್.ಎಲ್.ಸಿ ಓದುತ್ತಿರುವ ಪ್ರತಿ ಮಗುವನ್ನು ಕೌನ್ಸಿಲಿಂಗ್‌ಗೆ ಒಳಪಡಿಸುವಿಕೆ ಹಾಗೂ ಆಪ್ತ ಸಮಾಲೋಚನೆಗೆ ಮುಖ್ಯಶಿಕ್ಷಕರಿಗೆ ಸೂಚನೆ. ಪ್ರತಿ ವಿಷಯದಲ್ಲೂ ಪ್ರತಿವಾರ ಒಂದು ವಿಚಾರ ಸಂಕಿರಣ ಮಾಡಿ ವಿಭಿನ್ನ ರೀತಿ ಚಟುವಟಿಕೆಗಳನ್ನು ಮಾಡಿ ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಶಾಲಾ ಹಂತದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು. 
    ಪ್ರತಿದಿನ ಒಂದು ಗಂಟೆ ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಉಳಿದು ಹೆಚ್ಚುವರಿ ಅಧ್ಯಯನ ಮಾಡಿಸುವುದು.  ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ತೇರ್ಗಡೆಯಾಗಲು ಕಲಿಯಬೇಕಾದ ಅಂಶಗಳನ್ನು ಮುಖ್ಯಾಂಶಗಳಲ್ಲಿ ಗುರುತಿಸಿ ಅವುಗಳನ್ನು ಪದೇಪದೇ ಅಭ್ಯಾಸ ಮಾಡಿಸಲು ಕ್ರಮ. ಕಲಿಕೆಯಲ್ಲಿ ೫೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳಿಗೆ ಪ್ರತ್ಯೇಕ ಕ್ರಿಯಾ ಯೋಜನೆ ತಯಾರಿಸಿ ಅನುಪಾಲನೆ. ಸರಣಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ವಿಶ್ಲೇಷಿಸಿ ಮಕ್ಕಳು ಮತ್ತು ಪೋಷಕರ ಗಮನಕ್ಕೆ ತರುವಲ್ಲಿ ಕ್ರಮ.  ಮಧ್ಯಂತರ ಅವಧಿಯ ಸಮಯ ಸದ್ಬಳಕೆ ಮಾಡಿಕೊಂಡು ನಿರಂತರ ಕಲಿಕೆಗೆ ಮಕ್ಕಳನ್ನು ಸಜ್ಜುಗೊಳಿಸುವುದು.  ಪರಿಶಿಷ್ಟ ಜಾತಿ/ಪಂಗಡ/ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಂದ ಬರುವ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳಿಗೆ ಭೇಟಿನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ.  ಮಕ್ಕಳಿಗೆ ಪರೀಕ್ಷೆಯ ಭಯ ಹೋಗಲಾಡಿಸಲು ಬ್ಲಾಕ್ ಮಟ್ಟದಲ್ಲಿ ತಜ್ಞರಿಂದ ವಿಶೇಷ ಕಾರ್ಯಾಗಾರ.  ಶಾಲಾ ಹಂತದಲ್ಲಿ ಕಳೆದ ೩ ವರ್ಷಗಳ ಪ್ರಶ್ನೆಪತ್ರಿಕೆಗಳಿಗೆ ವಿದ್ಯಾರ್ಥಿಗಳಿಂದ ಉತ್ತರ ಬರೆಸುವಲ್ಲಿ ಕ್ರಮ. ತಾಲೂಕು ಮಟ್ಟದ ಅಧಿಕಾರಿಗಳಿಗೆ ತಲಾ ೨ ಶಾಲೆಗಳ ಉಸ್ತುವಾರಿ ನೀಡಿ ಫಲಿತಾಂಶ ಸುಧಾರಣೆಗೆ ಸೂಕ್ತ ಸಲಹೆ-ಮಾರ್ಗದರ್ಶನ. ಶೇಕಡಾ ೧೦೦ಕ್ಕೆ ೧೦೦ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನ ಹಾಗು ಕಳೆದ ಸಾಲಿನಲ್ಲಿ ಆಯಾ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಯಶೋಗಾಥೆಗಳ ಹಂಚಿಕೆ ನಡೆಸಲಾಗಿದೆ ಎಂದರು. 
    ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಜಿ. ಧರ್ಮಪ್ರಸಾದ್ ೩ನೇ ಅವಧಿಗೆ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಆಯ್ಕೆ

ಮುಖಂಡರು, ಕಾರ್ಯಕರ್ತರಿಂದ ಸಂಭ್ರಮಾಚರಣೆ 

ಮೂರನೇ ಅವಧಿಗೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಮುಖಂಡ, ಸಂಘಟಕ ಜಿ. ಧರ್ಮಪ್ರಸಾದ್ ಅವರನ್ನು ಮಹಾಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಲಾಯಿತು.
    ಭದ್ರಾವತಿ : ಮೂರನೇ ಅವಧಿಗೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಮುಖಂಡ, ಸಂಘಟಕ ಜಿ. ಧರ್ಮಪ್ರಸಾದ್ ಅವರನ್ನು ಮಹಾಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಲಾಯಿತು.
   ಮಂಗಳವಾರ ಸಂಜೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು  ಧರ್ಮಪ್ರಸಾದ್‌ರವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸುವ ಮೂಲಕ ಪಕ್ಷದ ನಾಯಕರು ಹಿಂದಿನ ೨ ಅವಧಿಯ ಸಮರ್ಥ ನಾಯಕತ್ವ ಗುರುತಿಸಿ ೩ನೇ ಅವಧಿಗೆ ಆಯ್ಕೆ ಮಾಡಿರುವುದು ತುಂಬ ಸಂತಸದ ಸಂಗತಿಯಾಗಿದೆ. ವಿದ್ಯಾರ್ಥಿ ಜೀವನದಿಂದಲೇ ಸಂಘಟನೆ ಹಾಗು ನಾಯಕತ್ವ ಗುಣ ಬೆಳೆಸಿಕೊಂಡು ಬರುವ ಜೊತೆಗೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿರುವ ಧರ್ಮಪ್ರಸಾದ್‌ರವರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸ್ಥಾನಮಾನಗಳು ಲಭಿಸುವಂತಾಗಲಿ ಎಂದು ಸಂಭ್ರಮ ಹಂಚಿಕೊಂಡರು. 
  ಪಕ್ಷದ ಪ್ರಮುಖರಾದ ತೀರ್ಥಯ್ಯ, ಕೆ.ಎನ್ ಶ್ರೀಹರ್ಷ, ಎಚ್.ಎಲ್ ವಿಶ್ವನಾಥ್, ಮೊಸರಳ್ಳಿ ಅಣ್ಣಪ್ಪ, ಚನ್ನೇಶ್, ಕಾ.ರಾ ನಾಗರಾಜ್, ರಾಜಶೇಖರ್ ಉಪ್ಪಾರ ಮತ್ತು ನಂಜಪ್ಪ ಸೇರಿದಂತೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗು ವಿವಿಧ ಮೋರ್ಚಾಗಳ ಅಧ್ಯಕ್ಷರು, ಮಹಿಳಾ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ, ಮೈಕ್ರೋ ಫೈನಾನ್ಸ್‌ನವರ ಕಿರುಕುಳ ತಪ್ಪಿಸಿ

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಿರಿಯ ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹ

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು. 
    ಭದ್ರಾವತಿ: ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಿರಿಯ ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹಿಸಿದರು. 
    ವಿಶ್ವ ರೈತ ಚೇತನ ಪ್ರೊ. ಎಂ.ಡಿ ನಂಜುಂಡಸ್ವಾಮಿಯವರ ೨೧ನೇ ಸಂಸ್ಮರಣೆ ಅಂಗವಾಗಿ ಮಂಗಳವಾರ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಅವರು ಮಾತನಾಡಿದರು. 
    ತಾಲೂಕಿನಾದ್ಯಂತ ರೈತರು ಹಾಗೂ ಬಡವರು ಸುಮಾರು ೫೦ ವರ್ಷಗಳಿಂದಲೂ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಸಾಗುವಳಿ ಭೂಮಿಯಿಂದ ಅವರ ಕುಟುಂಬಕ್ಕೆ ಆಹಾರ, ದುಡಿಯುವ ಕೈಗಳಿಗೆ ಕೆಲಸ ಮಾತ್ರವಲ್ಲದೇ ದೇಶದ ಆಹಾರ ಭದ್ರತೆಗೂ ಕೊಡುಗೆ ನೀಡಿರುತ್ತಾರೆ. ಈ ರೀತಿ ಸಾಗುವಳಿ ಮಾಡಿಕೊಂಡು ಬಂದ ಭೂಮಿಯ ಹಕ್ಕನ್ನು ರೈತರಿಗೆ ಮಾನ್ಯ ಮಾಡುವ ಸಲುವಾಗಿ ಸರ್ಕಾರಗಳು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ರೈತರು ಭೂಮಿಯ ಹಕ್ಕು ಮಂಜೂರು ಮಾಡುವಂತೆ ನಮೂನೆ ೫೦, ನಮೂನೆ ೫೩ ಹಾಗೂ ನಮೂನೆ ೫೭ರಲ್ಲಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಈ ಅರ್ಜಿಗಳನ್ನು ಪರಿಶೀಲಿಸಿ ಹಕ್ಕು ನೀಡಬೇಕಾದ ಸರ್ಕಾರಗಳು ಇಂದಿಗೂ ರೈತರಿಗೆ ಭೂಮಿಯ ಹಕ್ಕನ್ನು ನೀಡದೇ, ರೈತರನ್ನು ಹೈರಾಣಗೊಳಿಸಿವೆ ಎಂದು ಆಕ್ರೋಶ ವ್ಯಕ್ತಪಡಿದರು. 
    ಭೂಮಿಯ ಹಕ್ಕು ಪಡೆಯಲು ರೈತರು ದಿನನಿತ್ಯವು ತಾಲೂಕು ಕಛೇರಿಗೆ ಅಲೆದಾಡುತ್ತಿದ್ದು, ಕಂದಾಯ ಇಲಾಖೆಯ ಸಿಬ್ಬಂದಿಗಳು ಕ್ರಮಬದ್ಧವಾಗಿ ಕೆಲಸ ಮಾಡದೇ ರೈತರನ್ನು ಅಲೆದಾಡಿಸುತ್ತಿದ್ದಾರೆ. ಸರ್ಕಾರದ ಕಂದಾಯ ಮಂತ್ರಿಗಳೇ ಹಲವು ಬಾರಿ ತಾಕೀತು ಮಾಡಿದರೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಇದುವರೆಗೂ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಇದರ ದುರ್ಲಾಭ ಪಡೆದ ಅರಣ್ಯ ಇಲಾಖೆ ರೈತರು ಹಿಂದಿನಿಂದಲೂ ಸಾಗುವಳಿ ಮಾಡಿಕೊಂಡು ಬಂದಿರುವ ಭೂಮಿಯನ್ನು ಕಾನೂನು ಬಾಹಿರವಾಗಿ ಕಿತ್ತುಕೊಳ್ಳಲು ಯತ್ನಿಸುತ್ತಿದ್ದು, ರೈತರು ಮತ್ತು ಅರಣ್ಯ ಇಲಾಖೆಯ ಮಧ್ಯೆ ಪ್ರತಿದಿನವೂ ಸಂಘರ್ಷಕ್ಕೆ ದಾರಿಯಾಗಿದೆ. ಅರಣ್ಯ ಇಲಾಖೆಯು ಯಾವುದೇ ಜಂಟಿ ಸರ್ವೇ ಕಾರ್ಯ ಕೈಗೊಳ್ಳದೇ ತಹಸೀಲ್ದಾರರು ಹಾಗೂ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರೈತರ ವಿರುದ್ಧ ದಾವೆಗಳನ್ನು ಹೂಡಿ ರೈತರಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು. 
    ತಹಸೀಲ್ದಾರರ ನ್ಯಾಯಾಲಯ ಹಾಗೂ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆಗಳು ವಿಚಾರಣೆಯಲ್ಲಿರುವಾಗಲೇ ರೈತರ ಸಾಗುವಳಿ ಜಮೀನುಗಳಿಗೆ ಅಕ್ರಮವಾಗಿ ನುಗ್ಗಿ ರೈತರ ಬೆಳೆದ ಬೆಳೆಗಳನ್ನು ನಾಶಪಡಿಸುವ ಜೊತೆಗೆ ರೈತರನ್ನು ಸಾಗುವಳಿ ಭೂಮಿಯಿಂದ ಒಕ್ಕಲೆಬ್ಬಿಸುವಕಾರ್ಯ ಮಾಡುತ್ತಿದ್ದಾರೆ. ತಾಲೂಕು ಆಡಳಿತ ಇದನ್ನೆಲ್ಲ ನೋಡಿಕೊಂಡು ರೈತರ ಹಿತರಕ್ಷಣೆಗೆ ಬಾರದೇ ಕಣ್ಣು ಮುಚ್ಚಿಕೊಂಡು ಕುಳಿತಿರುತ್ತದೆ. ತಾಲೂಕು ಆಡಳಿತದ ಈ ಬೇಜವಾಬ್ದಾರಿ ನಡೆಯನ್ನು ರೈತಸಂಘ ಖಂಡಿಸುವ ಜೊತೆಗೆ  ಕೂಡಲೇ ರೈತರಿಗೆ ಬಗರ್ ಹುಕುಂ ಭೂಮಿಯ ಹಕ್ಕನ್ನು ನೀಡುವಂತೆ ಒತ್ತಾಯಿಸುತ್ತದೆ ಎಂದರು. 
    ರೈತರು, ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಗ್ರಾಮೀಣ ಪ್ರದೇಶವಾಸಿಗಳು ವ್ಯವಸಾಯ ಹಾಗೂ ವ್ಯವಸಾಯೇತರ ಕಾರಣಕ್ಕಾಗಿ ಖಾಸಗಿ ಫೈನಾನ್ಸ್‌ಗಳಿಂದ ಸಾಲ ಪಡೆದಿರುತ್ತಾರೆ. ಈ ಸಾಲದ ಕಂತುಗಳ ವಸೂಲಿಗಾಗಿ ಖಾಸಗಿ ಫೈನಾನ್ಸ್‌ಗಳು ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ಬಾಹಿರವಾಗಿ ಇನ್ನಿಲ್ಲದ ಕಿರುಕುಳ ನೀಡುತ್ತಿವೆ ಎಂದು ದೂರಿದರು. 
    ಹಲವೆಡೆ ರೈತರ ಕೃಷಿ ಉಪಕರಣಗಳ ಜಪ್ತಿ, ಮೋಟಾರ್ ಸೈಕಲ್‌ಗಳ ಜಿಪ್ತಿ, ರೈತರ ಮನೆ ಜಪ್ತಿ ಸೇರಿದಂತೆ ರೈತರ ಮನೆಯ ಬಾಗಿಲಿಗೆ ಸಾಲಗಾರರು ಎಂದು ಫಲಕ ತೂಗು ಹಾಕುವುದು, ಮನೆಯ ಬಾಗಿಲು ಹಾಗೂ ಗೋಡೆ ಮೇಲೆ ಸಾಲಗಾರರು ಎಂದು ಬರೆದು ಸಾಮಾಜಿಕವಾಗಿ ಗ್ರಾಮೀಣ ಜನರ ಮರ್ಯಾದೆಯನ್ನು ಹರಾಜು ಮಾಡುವುದರ ಜೊತೆಗೆ ಕಾನೂನಬಾಹಿರವಾಗಿ ಸಾಲ ವಸೂಲಿ ಕ್ರಮಗಳನ್ನು ಅನುಸರಿಸಿ ಗೂಂಡಾಗಿರಿ ನಡೆಸುತ್ತಿರುವುದನ್ನು ರೈತಸಂಘ ಖಂಡಿಸುತ್ತದೆ. ತಕ್ಷಣ ತಾಲೂಕು ಆಡಳಿತ ಸೂಕ್ತ ಕ್ರಮಗಳನ್ನು ಕೈಗೊಂಡು ಖಾಸಗಿ ಫೈನಾನ್ಸ್‌ಗಳು ಗ್ರಾಮೀಣ ಪ್ರದೇಶದ ಜನರಿಗೆ ನೀಡುತ್ತಿರುವ ಕಿರುಕುಳ ತಪ್ಪಿಸಬೇಕೆಂದು ಆಗ್ರಹಿದರು. 
    ರೈತರು ವ್ಯವಸಾಯ ಭೂಮಿಗೆ ನೀರಾವರಿ ಸೌಲಭ್ಯ ಹೊಂದಲು ಕೊಳವೆ ಬಾವಿಗಳನ್ನು ಕೊರೆಸಿ ವಿದ್ಯುತ್ ಸಂಪರ್ಕ ಪಡೆಯಲು ಅಕ್ರಮ-ಸಕ್ರಮದ ಅಡಿಯಲ್ಲಿ ಹಣ ಪಾವತಿಸಿ ವರ್ಷಗಳೇ ಕಳೆದರೂ ಇದುವರೆವಿಗೂ ಸರ್ಕಾರ ಸಕ್ರಮ ಮಾಡಿರುವುದಿಲ್ಲ. ಅಲ್ಲದೇ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ಸಂಪೂರ್ಣ ವೆಚ್ಚವನ್ನು ಭರಿಸಬೇಕೆಂಬ ಅವೈಜ್ಞಾನಿಕ ನಿಯಮವನ್ನು ರೂಪಿಸಿದ್ದು, ರೈತರು ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂಪಾಯಿ ಸಾಲ-ಸೂಲ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣವೇ ಸರ್ಕಾರ ಈ ಹಿಂದಿನಂತೆ ನಿಯಮ ರೂಪಿಸಿ ರೈತರಿಗೆ ವಿದ್ಯುತ್ ಸಂಪರ್ಕ ನೀಡಬೇಕು ಹಾಗೂ ಅಕ್ರಮ-ಸಕ್ರಮ ಅರ್ಜಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಬೇಕೆಂದು ಆಗ್ರಹಿಸಿದರು. 
     ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾಧ್ಯಕ್ಷ ಹಾಲೇಶಪ್ಪಗೌಡ್ರು, ಜಿಲ್ಲಾ ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ತಾಲೂಕು ಅಧ್ಯಕ್ಷ ಹಿರಣಯ್ಯ, ಯುವ ರೈತ ಮುಖಂಡ ಡಿ.ವಿ ವೀರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎನ್ ಮಂಜುನಾಥೇಶ್ವರ ಮತ್ತು ಮೋಹನ್ ಕೂಡ್ಲಿಗೆರೆ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಇನ್ನಿತರ ಪ್ರಮುಖರು, ರೈತರು ಪಾಲ್ಗೊಂಡಿದ್ದರು. 

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹಕ್ಕೂ  ಮೊದಲು ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. 

Monday, February 3, 2025

ಪೊಲೀಸ್ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ನಿವೃತ್ತಿ : ಬೀಳ್ಕೊಡುಗೆ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಪ್ರಸ್ತುತ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ನಗರದ ನ್ಯೂಟೌನ್, ಹಳೇನಗರ, ಹೊಸಮನೆ ಶಿವಾಜಿ ಸರ್ಕಲ್ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ವೃತ್ತಿ ಅವಧಿಯಲ್ಲಿ ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೆ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದರು. 
    ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಹಾಗು ಸಿಬ್ಬಂದಿ ವರ್ಗದವರು ಜಯಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು. ಜಯಪ್ಪ ಕುಟುಂಬ ವರ್ಗದವರು ಉಪಸ್ಥಿತರಿದ್ದರು. 

ಕಲಾವಿದ ವೈ.ಕೆ ಹನುಮಂತಯ್ಯರಿಗೆ ಗೌರವ ಡಾಕ್ಟರೇಟ್ ಪದವಿ


ಭದ್ರಾವತಿ ನಗರದ ರಂಗಭೂಮಿ ಹಾಗೂ ಚಲನಚಿತ್ರ ಕಿರುತೆರೆ ನಟ ವೈ.ಕೆ ಹನುಮಂತಯ್ಯರವರ ಕಲಾ ಸೇವೆಯನ್ನು ಪರಿಗಣಿಸಿ ಹೊಸೂರಿನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 
    ಭದ್ರಾವತಿ: ನಗರದ ರಂಗಭೂಮಿ ಹಾಗೂ ಚಲನಚಿತ್ರ ಕಿರುತೆರೆ ನಟ ವೈ.ಕೆ ಹನುಮಂತಯ್ಯರವರ ಕಲಾ ಸೇವೆಯನ್ನು ಪರಿಗಣಿಸಿ ಹೊಸೂರಿನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 
    ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಕ್ಕರೆ ಘಟಕದಲ್ಲಿ ಸುಮಾರು ೨೯ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ವೈ.ಕೆ ಹನುಮಂತಯ್ಯರವರು ಸುಮಾರು ೫ ದಶಕಗಳಿಂದ ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹಾಗು ಜಾನಪದ ಸೇರಿದಂತೆ ಒಟ್ಟು ೬೦ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರ ಅಭಿನಯದ ನಾಟಕಗಳು ಸುಮಾರು ೧೮೦ ಬಾರಿ ಪ್ರದರ್ಶನಗೊಂಡಿವೆ. ಅಲ್ಲದೆ ಹನುಮಂತಯ್ಯರವರು ನೃತ್ಯ ಕಲಾವಿದರಾಗಿದ್ದು, ಎಲ್ಲಾ ಪ್ರಕಾರದ ನೃತ್ಯಗಳನ್ನು ಪ್ರದರ್ಶಿಸಿದ್ದಾರೆ. 
    ೨೫೦ಕ್ಕೂ ಹೆಚ್ಚು ಬೀದಿ ನಾಟಕಗಳಲ್ಲಿ ಅಭಿನಯಿಸಿದ್ದು, ಚಲನಚಿತ್ರ ಕಿರುತೆರೆ ನಟರಾಗಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಜಿಲ್ಲಾ ಹಾಗು ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇವರ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.  ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಅಭಿನಂದಿಸಿದ್ದಾರೆ. 

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ

ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯದಲ್ಲೇ ಏಕೈಕ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು. 
    ಭದ್ರಾವತಿ : ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯದಲ್ಲೇ ಏಕೈಕ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು. 
    ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ಸಂಸ್ಥೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಮತ್ತು ಸಂಸ್ಥಾಪಕರಾದ ಬಿ.ಎಲ್ ರಂಗಸ್ವಾಮಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಬಿ. ಇಡಿ ವಿಭಾಗಗಳಲ್ಲಿ ಅತಿಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.
    ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್ ಷಡಾಕ್ಷರಿ,ಬೆಂಗಳೂರು ಹಾಗೂ ಪ್ರಧಾನ ಪೋಷಕರು, ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಭದ್ರಾವತಿ ಇವರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು(ಆಡಳಿತ) ಎಸ್.ಆರ್ ಮಂಜುನಾಥ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಲ್  ಷಡಾಕ್ಷರಿ, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ, ಬಿ.ಇಡಿ ವಿಭಾಗದ ಪ್ರಾಂಶುಪಾಲ ಡಾ.ಎಸ್.ಪಿ ರಾಕೇಶ್ ಮತ್ತು ವಿದ್ಯಾಸಂಸ್ಥೆ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು. 
ವಿದ್ಯಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್ ಸ್ವಾಗತಿಸಿ, ನಿರ್ದೇಶಕ ಬಿ. ಚೆನ್ನಯ್ಯ ಕಾರ್ಯಕ್ರಮ ನಿರೂಪಿಸಿದರು.  ಖಜಾಂಚಿ ಕೆ.ಆರ್ ಪ್ರಶಾಂತ್ ರವರು  ವಂದಿಸಿದರು. 

Sunday, February 2, 2025

ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ

ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ:  ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು. 
    ಗಂಗಾಪೂಜೆ, ಗೋಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಪ್ರತಿಷ್ಠಾಪನಾ ಅಂಗವಾಗಿ ಪ್ರತಿಷ್ಠಾಪನಾದಿ ಮೂರ್ತಿ ಹೋಮಗಳು, ಮಹಾ ಪೂರ್ಣಾಹುತಿ, ಅಷ್ಟವದಾನ ಸೇವೆ, ಮಹಾಮಂಗಳಾರತಿ, ಬಿಂಬ ದರ್ಶನ  ಮತ್ತು ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ಶಿವಮೊಗ್ಗ ಬೆಕ್ಕಿನಕಲ್ಮಠ ಶ್ರೀ ಡಾ. ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಮೇಷ ಲಗ್ನದಲ್ಲಿ ಶ್ರೀಗಳಿಂದ ಆಲಯ ಶಿಲಾಮಯ ದೇವಾಲಯ ಲೋಕಾರ್ಪಣೆಗೊಂಡಿತು. ನಂತರ ಜರುಗಿದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿದರು. 
    ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ವಿಧಾನ ಪರಿಷತ್ ಮಾಜಿ ಸದಸ್ಯ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೆಗಡೆ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಭಾರತಿ ರಾಮಕೃಷ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾತನಾಡಿದರು. 
    ಶ್ರೀ ಕಾಲಭೈರವೇಶ್ವರ ದೇವಸ್ಥಾನ ಮತ್ತು ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷಣ್‌ಗೌಡರು ಅಧ್ಯಕ್ಷತೆ ವಹಿಸಿದ್ದರು. ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. 
    ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಭದ್ರಾವತಿ-ಶಿವಮೊಗ್ಗ ನಗರ ಹಾಗು ಗ್ರಾಮಾಂತರ ಪ್ರದೇಶಗಳಿಂದ ಭಕ್ತರು ಆಗಮಿಸಿದ್ದರು.