Wednesday, February 12, 2025

ಫೆ.೧೪ರಂದು ಜೆಡಿಎಸ್ ಪ್ರತಿಭಟನೆ

ಶಾರದ ಅಪ್ಪಾಜಿ 
    ಭದ್ರಾವತಿ : ಮರಳು ಗಣಿಗಾರಿಕೆ ತಪಾಸಣೆಗೆ ತೆರಳಿದ ಮಹಿಳಾ ಅಧಿಕಾರಿಗೆ ಬಾಯಿಗೆ ಬಂದಂತೆ ಮೂರನೇ ದರ್ಜೆಯ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಬಸವೇಶ್ ಬಂಧನಕ್ಕೆ ಆಗ್ರಹಿಸಿ ಹಾಗು ಈ ಘಟನೆ ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ಸಂಗಮೇಶ್ವರ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ತಾಲೂಕು ಕಛೇರಿ ಮುಂಭಾಗ ಫೆ.೧೪ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 
    ಇದಕ್ಕೂ ಮೊದಲು ಬೆಳಿಗ್ಗೆ ೧೦ ಗಂಟೆಗೆ ಮಾಧವಚಾರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ರಸ್ತೆ ತಡೆ ಹಾಗು ೧೦.೩೦ಕ್ಕೆ ರಂಗಪ್ಪ ವೃತ್ತದಲ್ಲಿ ಪ್ರತಿಕೃತಿ ದಹನ ಕಾರ್ಯಕ್ರಮ ನಡೆಯಲಿದೆ. ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಮನವಿ ಮಾಡಿದ್ದಾರೆ. 

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ

ಸಂಗಮೇಶ್ವರ್ ರಾಜೀನಾಮೆ ನೀಡಲಿ, ಬಸವೇಶ್ ಬಂಧಿಸಿ : ಡಿ.ಎಸ್ ಅರುಣ್ 

ಭದ್ರಾವತಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಮಾತನಾಡಿದರು. 
    ಭದ್ರಾವತಿ : ಅಕ್ರಮ ಮರಳುಗಾರಿಕೆ ದಂಧೆಗೆ ಕಡಿವಾಣ ಹಾಕಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರನ್ನು ಶಾಸಕರ ಪುತ್ರ ಅವಾಚ್ಯ ಶಬ್ದಗಳಿಂದ ಹೀನಾಯವಾಗಿ ನಿಂದಿಸಿರುವ ಹಾಗು ಜೀವ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಆಕ್ರೋಶ ವ್ಯಕ್ತಪಡಿಸುವ ಮೂಲಕ ತಕ್ಷಣ ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಸ್ಥಾನ ರಾಜೀನಾಮೆ ನೀಡಬೇಕು ಹಾಗು ಅವರ ಪುತ್ರ ಬಸವೇಶ್‌ನನ್ನು ಬಂಧಿಸಬೇಕೆಂದು ಆಗ್ರಹಿಸಿದರು. 
    ಸಮಾಜದಲ್ಲಿ ಜನಪ್ರತಿನಿಧಿಗಳು ಹಾಗು ಅವರ ಕುಟುಂಬ ವರ್ಗದವರಲ್ಲಿ ಸಭ್ಯತೆ ಬಹಳ ಮುಖ್ಯ. ಎಲ್ಲರೊಂದಿಗೂ ಸಭ್ಯತೆಯಿಂದ ನಡೆದುಕೊಳ್ಳಬೇಕು. ಮಹಿಳಾ ಅಧಿಕಾರಿಯೊಂದಿಗೆ ದುರ್ನಡತೆಯಿಂದ ನಡೆದುಕೊಳ್ಳುವುದು ಸರಿಯಲ್ಲ. ಈ ಘಟನೆಯನ್ನು ಪ್ರತಿಯೊಬ್ಬರು ಖಂಡಿಸಬೇಕು ಎಂದರು. 
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ಈಗಾಗಲೇ ೩ ಜನರನ್ನು ಬಂಧಿಸಿದ್ದಾರೆ. ಆದರೆ ದೂರಿನಲ್ಲಿ ಬಸವೇಶ್ ಹೆಸರು ಇಲ್ಲ. ದೂರಿನಲ್ಲಿ ಬಸವೇಶ್ ಹೆಸರು ಸೇರಿಸಿ ತಕ್ಷಣ ಬಂಧಿಸಬೇಕು. ಅಲ್ಲದೆ ಸಂಗಮೇಶ್ವರ್‌ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.  
    ಈ ಕ್ಷೇತ್ರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಮಿತಿಮೀರಿವೆ. ಇದಕ್ಕೆ ಕಾರಣ ರಾಜ್ಯದಲ್ಲಿನ ಕಾಂಗ್ರೆಸ್ ಪಕ್ಷದ ದುರಾಡಳಿ ಎಂದು ಆರೋಪಿಸಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನಿರೀಕ್ಷಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸುತ್ತೇನೆ ಎಂದರು. 
    ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ, ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಕಾ.ರಾ ನಾಗರಾಜ್, ಬಿ.ಜಿ ರಾಮಲಿಂಗಯ್ಯ, ಎಂ.ಎಸ್ ಸುರೇಶಪ್ಪ, ಚನ್ನೇಶ್, ಸುಲೋಚನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Tuesday, February 11, 2025

ಸಂಗಮೇಶ್ವರ್‌ಗೆ ಸಚಿವ ಸ್ಥಾನ, ಆಂಜನೇಯರನ್ನು ಎಂಎಲ್‌ಸಿ ಮಾಡಿ

ವಿವಿಧ ಬೇಡಿಕೆ ಈಡೇರಿಸಲು ಡಿಎಸ್‌ಎಸ್ ಸರ್ಕಾರಕ್ಕೆ ಮನವಿ 


ಭದ್ರಾವತಿಯಲ್ಲಿ ವಿವಿಧ ಬೇಡಿಕೆ ಈಡೇರಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಘಟಕದ ಅಧ್ಯಕ್ಷ ಎಸ್. ಪುಟ್ಟರಾಜು ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು.  
    ಭದ್ರಾವತಿ : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕ್ಷೇತ್ರದ ಶಾಸಕರಾದ ಬಿ.ಕೆ ಸಂಗಮೇಶ್ವರ್‌ರವರಿಗೆ ಸಚಿವ ಸ್ಥಾನ ಹಾಗು ಮಾಜಿ ಸಚಿವ ಎಚ್. ಆಂಜನೇಯರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಘಟಕ ಮನವಿ ಮಾಡಿದೆ. 
    ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ಎಸ್. ಪುಟ್ಟರಾಜು ಮಾತನಾಡಿ, ಸಂಗಮೇಶ್ವರ್‌ರವರು ವಿಧಾನಸಭಾ ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿದ್ದಾರೆ. ಜಿಲ್ಲೆಯಲ್ಲಿ ಈಗಿನ ಹಿರಿಯ ನಾಯಕರಾಗಿರುವ ಇವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಹಾಗು ಶೋಷಿತ ಸಮುದಾಯಗಳ ಧ್ವನಿಯಾಗಿರುವ ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಇಡೀ ಜೀವನ ಮುಡುಪಾಗಿಟ್ಟಿರುವ ರಾಜ್ಯದಲ್ಲಿ ಅತಿ ಹೆಚ್ಚು ವಸತಿ ಶಾಲೆಗಳನ್ನು ನಿರ್ಮಾಣ ಮಾಡಿದಂತಹ ಹೆಗ್ಗಳಿಕೆ ಹೊಂದಿರುವ  ಸಮಾಜ ಕಲ್ಯಾಣ ಖಾತೆ ಮಾಜಿ ಸಚಿವ ಎಚ್. ಆಂಜನೇಯರವರಿಗೆ ಈ ಬಾರಿ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕೆಂದು ಮನವಿ ಮಾಡುವ ಮೂಲಕ ಒತ್ತಾಯಿಸಿದರು. 
    ಮುಂದಿನ ೨೦೨೫-೨೬ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನ ಎಲ್ಲಾ ಇಲಾಖೆಗಳು ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಸಬೇಕು. ಅಲ್ಲದೆ ಶೋಷಿತ ಸಮಾಜದ ನಿಗಮಗಳಿಗೆ ಅತಿ ಹೆಚ್ಚಿನ ಅನುದಾನ ನೀಡಬೇಕು. ಪಿ.ಟಿ.ಸಿ.ಎಲ್ ಕಾಯ್ದೆ ಸರ್ಕಾರ ಯಥಾವತ್ತಾಗಿ ಅನುಷ್ಠಾನಗೊಳಿಸಿ ಜಾರಿಗೆ ತಂದರೂ ತಾಲೂಕಿನ ಅಧಿಕಾರಿಗಳು ದಲಿತರಿಗೆ ಭೂಮಿಯನ್ನು ಬಿಡಿಸಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಈ ಸಂಬಂಧ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಆಗ್ರಹಿಸಿದರು.  
    ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ರಹಿತ ಎಸ್.ಸಿ/ಎಸ್.ಟಿ ಜನಾಂಗದವರಿಗೆ ಮನೆಯನ್ನು ನಿರ್ಮಿಸಲು ಸರ್ಕಾರ ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ ೧.೮೦ ಲಕ್ಷ ರು. ನಗರದ ಪ್ರದೇಶದ ಫಲಾನುಭವಿಗಳಿಗೆ ೨.೭೦ ಲಕ್ಷ ರು. ನಿಗದಿಪಡಿಸಿದ್ದು, ಬದಲಾಗಿ ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಪ್ರದೇಶದವರೆಗೆ ೧೦ ಲಕ್ಷ ರು. ಮತ್ತು ನಗರ ಪ್ರದೇಶದವರಿಗೆ ೧೫ ಲಕ್ಷ ರು. ಅನುದಾನ ನೀಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ `ಒಳ ಮೀಸಲಾತಿ' ಅನುಷ್ಠಾನಕ್ಕೆ ತರಲು ಆಯಾ ರಾಜ್ಯಗಳಿಗೆ ಸೂಕ್ತ ನಿರ್ದೇಶನ ನೀಡಿದೆ. ಸರ್ಕಾರ ಸಾಮಾಜಿಕ ನ್ಯಾಯದ ಜನಸಂಖ್ಯಾನುಗುಣವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ನಿವೃತ್ತ ನ್ಯಾಯಮೂರ್ತಿಗಳು ಎಚ್.ಎನ್ ನಾಗಮೋಹನ್ ದಾಸ್‌ರವರ ನೇತೃತ್ವದಲ್ಲಿ ಸಮಿತಿ ರಚಿಸಿ ೩ ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಿದೆ.  ವರದಿ ನೀಡಿದ ನಂತರ ಸರ್ಕಾರ ಅದನ್ನು ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. 
    ಸಾಮಾಜಿಕ ನ್ಯಾಯಕ್ಕಾಗಿ ಸರ್ಕಾರ ಕಾಂತರಾಜ್ ಆಯೋಗದ ವರದಿ ತಕ್ಷಣ ಜಾರಿಗೊಳಿಸಬೇಕು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರೂಪ್ "ಡಿ" ನೌಕರರುಗಳಿಗೆ ಏಜನ್ಸಿ ಬದಲಾಗಿ ಸರ್ಕಾರವೇ ನೇರವಾಗಿ ವೇತನ ಪಾವತಿಮಾಡಬೇಕೆಂದು ಒತ್ತಾಯಿಸಿದರು. 
    ಸಮಿತಿ ಹಿರಿಯ ಮುಖಂಡರಾದ ಮಾರುತಿ, ಪ್ರಭಾಕರ್ ಹೆಬ್ಬಂಡಿ, ರಾಮಣ್ಣ, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಎಸ್. ಗೋವಿಂದರಾಜು, ಹಿರಿಯೂರು ಹೋಬಳಿ ಸಂಚಾಲಕ ಎಚ್.ಎಲ್ ಅಣ್ಣಪ್ಪ, ತಾಲೂಕು ಸಂಘಟನಾ ಸಂಚಾಲಕರಾದ ಟಿ. ರುದ್ರೇಶ್ ಅತ್ತಿಗುಂದ ಮತ್ತು ತಾಲೂಕು ವಿದ್ಯಾರ್ಥಿ ಒಕ್ಕೂಟದ ಮಹೇಶ್ ಅತ್ತಿಗುಂದ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

Monday, February 10, 2025

ಮ್ಯಾಟ್ರಿಮೋನಿ ಅಪ್ಲಿಕೇಷನ್ ಮೂಲಕ ಮದುವೆಯಾಗುವುದಾಗಿ ನಂಬಿಸಿ ವಂಚನೆ

ಭೀಮರಾಜ್ ಅಲಿಯಾಸ್ ಜೈಭೀಮ್ ಬಿನ್ ವಿಠಲ್
    ಭದ್ರಾವತಿ: ಮ್ಯಾಟ್ರಿಮೋನಿ ಅಪ್ಲಿಕೇಷನ್ ಮೂಲಕ ತಾಲೂಕಿನ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರು. ದೋಚಿದ್ದ ವಂಚಕನೊಬ್ಬ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. 
    ಬಂಧಿತ ವ್ಯಕ್ತಿ ಬಿಜಾಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಭೀಮರಾಜ್ ಅಲಿಯಾಸ್ ಜೈಭೀಮ್ ಬಿನ್ ವಿಠಲ್(೪೦) ಎಂದು ಗುರುತಿಸಲಾಗಿದೆ. ವಂಚನೆ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನಲೆಯಲ್ಲಿ ಆನ್‌ಲೈನ್ ಅಪ್ಲಿಕೇಷನ್‌ಗಳನ್ನು ನಂಬಿ ಮೋಸ ಹೋಗದಂತೆ ಜಿಲ್ಲಾ ಪೊಲೀಸ್ ಭೀಮರಾಜ್ ಪೋಟೋ ಹಾಗು ಆತ ನಡೆಸಿದ ವಂಚನೆ ಪ್ರಕರಣಗಳ ಪಟ್ಟಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. 
    ಘಟನೆ ವಿವರ: 
    ಮ್ಯಾಟ್ರಿಮೋನಿ ಮೂಲಕ ಮಹಿಳೆಗೆ ಪರಿಚಯವಾದ ಭೀಮರಾಜ್, ಈ ಮೊದಲೇ ತಾನು ಮದುವೆಯಾಗಿರುವುದನ್ನು ಮರೆಮಾಚಿ ಮದುವೆಯಾಗುವುದಾಗಿ ನಂಬಿಸಿದ್ದಾನೆ. ನಂತರ ಅವರಿಂದ ಹಣ ಮತ್ತು ಒಡವೆಗಳನ್ನು ಪಡೆದು ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗಿದ್ದಾನೆ. 
    ಮಹಿಳೆಯಿಂದ ತನ್ನ ತಾಯಿಯ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಪೋನ್ ಪೇ ಮೂಲಕ ಒಟ್ಟು ೫,೪೩,೪೫೧ ರು.ಗಳನ್ನು ಪಡೆದಿದ್ದು, ನಂತರ ೨,೦೦,೦೦೦ ರು. ನಗದು ಹಣ ಪಡೆದುಕೊಂಡಿದ್ದಾನೆ. ಅಲ್ಲದೆ ಕಛೇರಿ ಸಮಾರಂಭದ ಕಾರಣ ಹೇಳಿ ಸುಮಾರು ೨,೨೫,೦೦೦ ರು. ಮೌಲ್ಯದ ಸುಮಾರು ೩೦ ಗ್ರಾಂ. ತೂಕದ ಚಿನ್ನಾಭರಣಗಳನ್ನು ಪಡೆದುಕೊಂಡು ವಂಚಿಸಿದ್ದಾನೆ ಎನ್ನಲಾಗಿದೆ. ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. 
    ಭೀಮರಾಜ್ ಪ್ರಸ್ತುತ ಕೊಪ್ಪಳ ಜಿಲ್ಲೆಯ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಈತನ ವಿರುದ್ಧ ರಾಜ್ಯ ವಿವಿಧ ೧೦ ಪೊಲೀಸ್ ಠಾಣೆಗಳಲ್ಲಿ ೧೨ ಪ್ರಕರಣಗಳು ದಾಖಲಾಗಿವೆ. 

ಗ್ರಾಮ ಆಡಳಿತ ಅಧಿಕಾರಿಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು(ಗ್ರಾಮ ಲೆಕ್ಕಿಗರು) ಸೋಮವಾರದಿಂದ ಭದ್ರಾವತಿ ತಾಲೂಕು ಕಚೇರಿ ಮುಂಭಾಗ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 
    ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು(ಗ್ರಾಮ ಲೆಕ್ಕಿಗರು) ಸೋಮವಾರದಿಂದ ತಾಲೂಕು ಕಚೇರಿ ಮುಂಭಾಗ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 
    ಕಂದಾಯ ಇಲಾಖೆಯ ಮೂಲ ಆಧಾರ ಸ್ತಂಭವಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು, ಸೇವಾ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಮುಷ್ಕರ ನಡೆಸಲಾಗುತ್ತಿದ್ದು ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.  .
    ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿಕುಮಾರ್ ಮುಷ್ಕರದ ನೇತೃತ್ವ ವಹಿಸಿದ್ದರು. ತಾಲೂಕು ಸಂಘದ ಪದಾಧಿಕಾರಿಗಳಾದ ಶಿವಣ್ಣ, ರಾಜೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಎಸ್‌ಎಸ್‌ಎಲ್‌ಸಿ ಮಕ್ಕಳನ್ನು ಪ್ರೋತ್ಸಾಹಿಸಲು ವಿಭಿನ್ನ ಕಾರ್ಯಕ್ರಮ

ನಗದು ಪ್ರೋತ್ಸಾಹ, ಉಚಿತ ಕಾರು ಚಾಲನಾ ತರಬೇತಿ

ಜಾನ್ ಬೆನ್ನಿ
    ಭದ್ರಾವತಿ: ನಗರದ ಉಂಬ್ಳೆಬೈಲು ರಸ್ತೆಯ ವಿಜಯ್ ಡ್ರೈವಿಂಗ್ ಸ್ಕೂಲ್ ವತಿಯಿಂದ ಚಾಲನಾ ತರಬೇತಿ ಜೊತೆಗೆ ಹಲವು ವಿಭಿನ್ನ ರೀತಿಯ ಸಾಮಾಜಿಕ ಕಾರ್ಯಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಇದೀಗ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಈ ಬಾರಿ ವಿಧಾನಕ್ಷೇತ್ರದ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದ ಓರ್ವ ವಿದ್ಯಾರ್ಥಿಗೆ ೧ ಸಾವಿರ ರು.  ನಗದು ಪ್ರೋತ್ಸಾಹ ಧನ ನೀಡಲಾಗುವುದು. ಅಲ್ಲದೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೬೨೫ಕ್ಕೆ ೬೨೫ ಅಂಕಗಳನ್ನು ಪಡೆದ ಓರ್ವ ವಿದ್ಯಾರ್ಥಿಗೆ ೨೦ ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುವುದು. ಒಂದು ವೇಳೆ ಒಂದಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ೬೨೫ಕ್ಕೆ ೬೨೫ ಅಂಕಗಳನ್ನು ಪಡೆದುಕೊಂಡಲ್ಲಿ ೨೦ ಸಾವಿರ ರು. ಹಣದಲ್ಲಿ ಹಂಚಿಕೆ ಮಾಡಿ ನೀಡಲಾಗುವುದು. ಅಲ್ಲದೆ ವಿದ್ಯಾರ್ಥಿಗೆ ಅಥವಾ ಆ ವಿದ್ಯಾರ್ಥಿಯ ಕುಟುಂಬದಲ್ಲಿನ ಓರ್ವ ಸದಸ್ಯರಿಗೆ ಮಾತ್ರ ಉಚಿತವಾಗಿ ಕಾರು ಚಾಲನಾ ತರಬೇತಿ ನೀಡಲಾಗುವುದು. ಶಾಲೆಯ ವಾರ್ಷಿಕೋತ್ಸವ ದಿನದಂದು ಪ್ರೋತ್ಸಾಹ ಧನ ನೀಡಲಾಗುವುದು ಎಂದು ವಿಜಯ್ ಡ್ರೈವಿಂಗ್ ಸ್ಕೂಲ್ ಮಾಲೀಕ, ವಿಧಾನಸಭಾ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಜಾನ್ ಬೆನ್ನಿ ತಿಳಿಸಿದ್ದಾರೆ.

ಸಂವಿಧಾನ ಬದಲಾಯಿಸುವ ಹೇಳಿಕೆ ನೀಡುವ ವ್ಯಕ್ತಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

ಈಗಿರುವ ಭಾರತದ ಸಂವಿಧಾನ ಬದಲಿಗೆ ಸಂಘ ಪರಿವಾರದ ಮನುಧರ್ಮ ಶಾಸ್ತ್ರ ಆಧಾರಿತ ಸಂವಿಧಾನವನ್ನು ಜಾರಿಗೆ ತರುವುದಾಗಿ ಮನುವಾದಿ ಹೇಳಿಕೆಯನ್ನು ಖಂಡಿಸಿ ಭದ್ರಾವತಿಯಲ್ಲಿ ಕರ್ನಾಟಕ ಅಂಬೇಡ್ಕರ್ ವೈಚಾರಿಕ ವೇದಿಕೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. 
    ಭದ್ರಾವತಿ: ಈ ದೇಶದ ಸಂವಿಧಾನ ಬದಲಾಯಿಸುವ ಅಪಪ್ರಚಾರಗಳು ನಡೆದರೂ ರಾಷ್ಟ್ರಪತಿಯವರು ಗಂಭೀರವಾಗಿ ಪರಿಗಣಿಸದೇ ಮೌನವಹಿಸಿರುವುದು ಸರಿಯಲ್ಲ. ಹಿಂದೂ ರಾಷ್ಟ್ರದ ಸಂವಿಧಾನ ಜಾರಿಗೆ ತರಲು ಮುಂದಾಗಿರುವ ಸಂಘ ಪರಿವಾರದ ನೀತಿಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸುವುದು ಇಂದು ಅನಿವಾರ್ಯವಾಗಿದೆ. ತಕ್ಷಣ ಸಂವಿಧಾನ ಬದಲಾಯಿಸುವ ಹೇಳಿಕೆ ನೀಡುವ ವ್ಯಕ್ತಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿ ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ಅಂಬೇಡ್ಕರ್ ವೈಚಾರಿಕ ವೇದಿಕೆ ಸಂಚಾಲಕ ಪಿ. ಮೂರ್ತಿ ಆಗ್ರಹಿಸಿದರು. 
    ಈಗಿರುವ ಭಾರತದ ಸಂವಿಧಾನ ಬದಲಿಗೆ ಸಂಘ ಪರಿವಾರದ ಮನುಧರ್ಮ ಶಾಸ್ತ್ರ ಆಧಾರಿತ ಸಂವಿಧಾನವನ್ನು ಜಾರಿಗೆ ತರುವುದಾಗಿ ಮನುವಾದಿ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಅಂಬೇಡ್ಕರ್ ವೈಚಾರಿಕ ವೇದಿಕೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದರು. 
    ದೇಶದ ಬಹುಸಂಖ್ಯಾತರಾದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ರೈತರು, ಕಾರ್ಮಿಕರು, ಮಹಿಳೆಯರು, ಮಕ್ಕಳು ಮತ್ತು ಆದಿವಾಸಿಗಳ ಧ್ವನಿಯಾಗಿ ಈಗಿರುವ ಸಂವಿಧಾನವಿದ್ದು, ಈ ಸಮುದಾಯಗಳ ಸಾಮಾಜಿಕ ಶೈಕ್ಷಣಿಕ, ಆರ್ಥಿಕ, ರಾಜಕೀಯ ಮತ್ತು ಧಾರ್ಮಿಕ ಸಮಾನತೆಯನ್ನು ಹಾಗೂ ಎಲ್ಲರ ಸ್ವಾವಲಂಬನೆ ಬಯಸುವ ವಿಶ್ವಜ್ಞಾನಿ, ಮಹಾಮಾನವತಾವಾದಿ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿರುವ ಸಂವಿಧಾನವನ್ನು ಬದಲಾಯಿಸಿ ಅಸಮಾನತೆಯನ್ನು ಮೂಲಮಂತ್ರವನ್ನಾಗಿಸಿ ಕೊಂಡಿರುವ ಮನುಸ್ಮೃತಿ ಆಧಾರಿತ `ಹಿಂದೂ ರಾಷ್ಟ್ರದ ಸಂವಿಧಾನ'  ಜಾರಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. 
    ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದಾಗಿನಿಂದ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು `ಸಂವಿಧಾನವನ್ನು ಸುಡುತ್ತೇವೆ', ಸಂವಿಧಾನ ಬದಲಾಯಿಸಲೇ ನಾವು ಅಧಿಕಾರಕ್ಕೆ ಬಂದಿರುವುದು. ಇತ್ಯಾದಿ ಸಂವಿಧಾನ ವಿರೋಧಿ ಹೇಳಿಕೆಗಳನ್ನು ಕೊಡುತ್ತಾ ಬಂದರು. ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಬಿ .ಎನ್. ರಾಯ್ ಭಾರತ ಸಂವಿಧಾನದ ಕರಡು ರಚಿಸಿದ್ದು ಎಂದು ಅಪಪ್ರಚಾರ ಮಾಡಿದರು. `ಅಂಬೇಡ್ಕರ್ ಅಂಬೇಡ್ಕರ್ ಎಂದೇಳುವುದು ಫ್ಯಾಷನ್, ಆಗಿಹೋಗಿದೆ ಎಂದು ಸಂಸತ್ತಿನಲ್ಲೇ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಮಾನಗೊಳಿಸಿ ಹೇಳಿಕೆ ನೀಡಿದರು. ಇತ್ತೀಚಿಗೆ ಪಂಜಾಬ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿದ ಪ್ರಕರಣ ನಡೆದಿದೆ. ಈಗ ಅಂಬೇಡ್ಕರ್ ಬರೆದ ಸಂವಿಧಾನದ ಬದಲಿಗೆ ಬೇರೊಂದು ಸಂವಿಧಾನ ತರುವ ಪ್ರಸ್ತಾಪ ಬಂದಿದೆ. ಇದೆಲ್ಲಾ  ಸಂಘ ಪರಿವಾರದ ಮನುಧರ್ಮ ಶಾಸ್ತ್ರ ಆಧಾರಿತ ಸಂವಿಧಾನವನ್ನು ಜಾರಿಗೆ ತರುವ ಹುನ್ನಾರವಾಗಿದ್ದು, ವಿರೋಧ ಪಕ್ಷಗಳು ಸಹ ಈ ವಿಚಾರದ ಬಗ್ಗೆ ಪ್ರತಿರೋಧ ಒಡ್ಡದೇ ಮೌನ ವಹಿಸಿರುವುದು ಇದಕ್ಕೆ ಮತ್ತಷ್ಟು ಇಂಬು ನೀಡಿದಂತಾಗಿದೆ ಎಂದರು. 
    ಕರ್ನಾಟಕ ಚಾಣಕ್ಯ ಸೇನೆಯ ಐಹೊಳೆ ನಾರಾಯಣ, ಇಂದ್ರೇಶ್, ಮಂಜಪ್ಪ, ಸುಬ್ರಮಣಿ, ಕಲ್ಲೇಶಪ್ಪ, ದಲಿತ ಸಂಘರ್ಷ ಸಮಿತಿ ಸಂಯೋಜಕ ಜಗದೀಶ್ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.