ಮಂಗಳವಾರ, ಫೆಬ್ರವರಿ 25, 2025

ಮಾವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಉಲ್ಬಣ : ಕಛೇರಿಗೆ ಬೀಗ ಜಡಿದು ಪ್ರತಿಭಟನೆ

ಭದ್ರಾವತಿ ತಾಲೂಕಿನ ಮಾವಿನಕೆರೆ ಹಾಗು ಮಾವಿನಕೆರೆ ಕಾಲೋನಿ ಗ್ರಾಮದಲ್ಲಿ ಕಳೆದ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದ್ದು, ಗ್ರಾಮಸ್ಥರು ಮಂಗಳವಾರ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿ ಮುಂಭಾಗ ಖಾಲಿ ಕೊಡದ ಹಿಡಿದು ಪ್ರತಿಭಟನೆ ನಡೆಸಿದರು. 
    ಭದ್ರಾವತಿ: ತಾಲೂಕಿನ ಮಾವಿನಕೆರೆ ಹಾಗು ಮಾವಿನಕೆರೆ ಕಾಲೋನಿ ಗ್ರಾಮದಲ್ಲಿ ಕಳೆದ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದ್ದು, ಗ್ರಾಮಸ್ಥರು ಮಂಗಳವಾರ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. 
    ಮಾವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೆರೆ, ಮಾವಿನಕೆರೆ ಕಾಲೋನಿ, ಕೆಂಚೇನಹಳ್ಳಿ ಕಾಲೋನಿ, ಕೆಂಚೇನಹಳ್ಳಿ ಹಾಗು ಕೆಂಚೇನಹಳ್ಳಿ ನೀರುಗುಂಡಿ ಗ್ರಾಮಕ್ಕೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಸರಬರಾಜು ಮಾಡಬೇಕಾಗಿದ್ದು, ಆದರೆ ಕೇವಲ ಮಾವಿನಕೆರೆ ಹಾಗು ಮಾವಿನಕೆರೆ ಕಾಲೋನಿ ಗ್ರಾಮಕ್ಕೆ ಮಾತ್ರ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿತ್ತು. ಜ.೧೨ರಿಂದ ಈ ಎರಡು ಗ್ರಾಮಗಳಿಗೂ ನೀರು ಸರಬರಾಜು ಆಗದೇ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಿಸಿದೆ. ಕುಡಿಯುವ ನೀರು ಸರಬರಾಜು ಮಾಡುವಂತೆ ಗುತ್ತಿಗೆದಾರರಿಗೆ ಹಲವಾರು ಬಾರಿ ಕರೆ ಮಾಡಿದರೂ ಸಹ ಸರಿಯಾಗಿ ಸ್ಪಂದಿಸುತ್ತಿಲ್ಲ. ಇಲಾಖೆ ಅಭಿಯಂತರರಿಗೂ ಹಲವಾರು ಬಾರಿ ಪತ್ರ ಬರೆದು ಮನವಿ ಮಾಡಿದರೂ ಸಹ ಯಾವುದೇ ಪ್ರಕ್ತಿಯೆ ವ್ಯಕ್ತವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಬೀಗ ಜಡಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಪ್ರತಿಭಟನಾನಿರತ ಗ್ರಾಮಸ್ಥರು ಹೇಳಿದರು. 
    ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವೆ ಬಾವಿಗಳಲ್ಲಿ ಅಂತರ್ಜಲ ಪ್ರಮಾಣ ಕುಸಿತಗೊಂಡಿದ್ದು, ಇದರಿಂದಾಗಿ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಕುಡಿಯಲು ನೀರು ಸರಬರಾಜು ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದು ಖಾಲಿ ಕೊಡದ ಹಿಡಿದು ಮಹಿಳೆಯರು ತಮ್ಮ ಆಕ್ರೋಶ ಹೊರ ಹಾಕಿದರು. 
    ಯೋಜನೆ ಆರಂಭಗೊಂಡು ಸುಮಾರು ೧೫ ವರ್ಷಗಳು ಕಳೆದಿವೆ. ಮಾವಿನಕೆರೆ ಮತ್ತು ಬಾರಂದೂರು ಗ್ರಾಮ ಪಂಚಾಯಿತಿಗಳ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಈ ಕುರಿತು ಹಲವಾರು ಬಾರಿ  ಸಂಬಂಧ ಇಲಾಖೆಗಳ ಅಧಿಕಾರಿಗಳಿಗೆ, ಶಾಸಕರಿಗೆ, ಸಂಸದರಿಗೆ ಮನವಿ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾದಾನ ಹೊರ ಹಾಕಿದರು. 
    ಪ್ರತಿಭಟನೆಯಲ್ಲಿ ಮಾವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ಶ್ರೀಧರ್ ಶೆಟ್ಟಿ,  ಗ್ರಾಪಂ ಸದಸ್ಯರಾದ ಅಭಿನಂದನ್, ರಮೇಶ್, ಉಮೇಶ್, ನಗರಸಭೆ ಸದಸ್ಯ ಹನುಮಂತು, ಚೌಡೇಗೌಡ, ಗಾಂಧಿ ನಗರ ರಮೇಶ್, ಬಾರಂದೂರು ಗ್ರಾಪಂ ಅಧ್ಯಕ್ಷ ಚೇತನ್, ಸದಸ್ಯರಾದ ಜಯಮ್ಮ, ಕಿರಣ್, ಕೆಂಚಮ್ಮ, ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
 
----------------------------------------------------------------
ಗ್ರಾಮ ಪಂಚಾಯಿತಿಯ ಎಲ್ಲಾ ೮ ಗ್ರಾಮಗಳಲ್ಲಿ ೪೦ ದಿನಗಳಿಂದ ಒಂದು ತೊಟ್ಟು ನೀರು ಸರಬರಾಜು ಮಾಡಿಲ್ಲ. ಜನರು ತತ್ತರಿಸಿದ್ದು, ಇರುವ ಕೊಳವೆ ಬಾವಿ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿ ನೀಡಲಾಗಿದೆ.  ಈ ನೀರು ಕುಡಿದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶುದ್ದ ಕುಡಿಯುವ ನೀರು ಟ್ಯಾಂಕರ್‌ಗಳ ಮೂಲಕ ಗ್ರಾಮಗಳಿಗೆ ಸರಬರಾಜು ಮಾಡಲಾಗುತ್ತಿದೆ. ಇದರಿಂದ ವರ್ಷಕ್ಕೆ ಕನಿಷ್ಠ ೧.೫ ಲಕ್ಷ ರು. ವೆಚ್ಚ ಭರಿಸಲಾಗುತ್ತಿದೆ. ಇದರಿಂದಾಗಿ ಗ್ರಾ.ಪಂ. ಅಭಿವೃದ್ದಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. 
 -ಸುರೇಶ್, ಅಧ್ಯಕ್ಷರು, ಮಾವಿನಕೆರೆ ಗ್ರಾಮಪಂಚಾಯಿತಿ, ಭದ್ರಾವತಿ. 
 -------------------------------------------------------

ಗ್ರಾಮೀಣ ಭಾಗದ ಜನರಿಗೆ ಶುದ್ದ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಕಳೆದ ೧೫ ವರ್ಷಗಳ ಹಿಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೋಟ್ಯಾಂತರ ರು. ವೆಚ್ಚದಲ್ಲಿ ಕೈಗೆತ್ತಿಕೊಂಡು ಮಾವಿನಕೆರೆ ಗ್ರಾಮದಲ್ಲಿ ಫಿಲ್ಟರ್ ಮತ್ತು ಬಾರಂದೂರಿನಲ್ಲಿ ಘಟಕ ಆರಂಭಿಸಲಾಗಿದೆ. ಆದರೆ ಮಾವಿನಕೆರೆ, ಬಾರಂದೂರು ಹಾಗೂ ಕಾರೇಹಳ್ಳಿ ಗ್ರಾಪಂಗಳ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಶುದ್ದ ಕುಡಿಯುವ ನೀರಿನ ಯೋಜನೆ ಯಶಸ್ವಿಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.
 - ಶ್ರೀಧರ್ ಶೆಟ್ಟಿ, ಮಾಜಿ ಅಧ್ಯಕ್ಷರು, ಮಾವಿನಕೆರೆ ಗ್ರಾಮಪಂಚಾಯಿತಿ, ಭದ್ರಾವತಿ. 


ಭದ್ರಾವತಿ ತಾಲೂಕಿನ ಮಾವಿನಕೆರೆ ಹಾಗು ಮಾವಿನಕೆರೆ ಕಾಲೋನಿ ಗ್ರಾಮದಲ್ಲಿ ಕಳೆದ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದ್ದು, ಗ್ರಾಮಸ್ಥರು ಮಂಗಳವಾರ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. 
 

ಕಾಯ್ದೆ ಜಾರಿಗೆ ಬಂದರೂ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ

ಕುಟುಂಬಸ್ಥರನ್ನು ೧ ತಿಂಗಳ ಕಾಲ ಬೀದಿಗೆ ತಳ್ಳಿದ ಇಕ್ವಿಟಾಸ್ ಫೈನಾನ್ಸ್ 

ಭದ್ರಾವತಿ ತಾಲೂಕಿನ ಆಗರದಹಳ್ಳಿ ಗ್ರಾಮದ ನಿವಾಸಿ, ಭೋವಿ ಜನಾಂಗದ ಕೃಷಿ ಕೂಲಿ ಕಾರ್ಮಿಕ ಚೌಡಪ್ಪ ಹಾಗು ಸಹೋದರರ ಎರಡು ಮನೆಗಳಿಗೆ ಇಕ್ವಿಟಾಸ್ ಫೈನಾನ್ಸ್ ರವರು ನೋಟಿಸ್ ಅಂಟಿಸಿ ಬೀಗ ಜಡಿದಿರುವುದು. 
    ಭದ್ರಾವತಿ : ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ, ದೌರ್ಜನ್ಯ ತಪ್ಪಿಸಲು ಸರ್ಕಾರ ಕಾಯ್ದೆ ಜಾರಿಗೆ ತಂದಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಗರದ ಮೈಕ್ರೋ ಫೈನಾನ್ಸ್ ಕಂಪನಿಯೊಂದು ರೈತ ಕುಟುಂಬವನ್ನು ಸುಮಾರು ೧ ತಿಂಗಳ ಕಾಲ ಬೀದಿಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಇದರ ವಿರುದ್ಧ ರೈತ ಸಂಘ ಧ್ವನಿ ಎತ್ತುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಮುಂದಾಗಿದೆ. 
    ತಾಲೂಕಿನ ಆಗರದಹಳ್ಳಿ ಗ್ರಾಮದ ನಿವಾಸಿ, ಭೋವಿ ಜನಾಂಗದ ಕೃಷಿ ಕೂಲಿ ಕಾರ್ಮಿಕ ಚೌಡಪ್ಪ ನಗರದ ಇಕ್ವಿಟಾಸ್ ಫೈನಾನ್ಸ್‌ನಿಂದ ಸುಮಾರು ೨ ಲಕ್ಷ ರು. ಸಾಲ ೨೦೨೧ರಲ್ಲಿ ಪಡೆದಿದ್ದು, ಈಗಾಗಲೇ ಸಾಲದ ೯ ಕಂತುಗಳನ್ನು ಫೈನಾನ್ಸ್‌ಗೆ ಪಾವತಿಸಿರುತ್ತಾರೆ. ಈ ನಡುವೆ ಉಳಿದ ಬಾಕಿ ಹಣ ವಸೂಲಿಗಾಗಿ ಫೈನಾನ್ಸ್‌ರವರು ಒಂದು ತಿಂಗಳ ಹಿಂದೆ ಚೌಡಪ್ಪ ಹಾಗು ಸಹೋದರರಿಗೆ ಸೇರಿದ ೩೦*೫೦ ಅಡಿ ವಿಸ್ತೀರ್ಣದ ಎರಡು ಮನೆಗಳಿಗೆ ಬೀಗ ಜಡಿದು ಕುಟುಂಬದ ಸುಮಾರು ೧೫ ಮಂದಿ ಬೀದಿಯಲ್ಲಿ ಕಾಲ ಕಳೆಯುವಂತೆ ಮಾಡಿದ್ದು, ಶಾಲಾ ಕಟ್ಟಡ, ದೇವಸ್ಥಾನಗಳಲ್ಲಿ ಕುಟುಂಬಸ್ಥರು ಉಳಿದುಕೊಂಡು ಜೀವನ ಸಾಗಿಸಿರುವುದು ತಿಳಿದು ಬಂದಿದೆ. 
    ಫೈನಾನ್ಸ್ ಕಂಪನಿಯ ಈ ಕ್ರೂರ ವರ್ತನೆಯನ್ನು ಖಂಡಿಸಿ ರೈತ ಸಂಘದಿಂದ ಇದರ ವಿರುದ್ಧ ಹೋರಾಟ ಆರಂಭಿಸಿದ್ದು, ಮೊದಲ ಹಂತದಲ್ಲಿ ಕಳೆದ ೨ ದಿನಗಳ ಹಿಂದೆ ಫೈನಾನ್ಸ್‌ರವರು ಎರಡು ಮನೆಗಳಿಗೆ ಜಡಿದಿರುವ ಬೀಗ ತೆರವುಗೊಳಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.  


ಭದ್ರಾವತಿ ನಗರದ ಇಕ್ವಿಟಾಸ್ ಫೈನಾನ್ಸ್ ಕಛೇರಿಯಲ್ಲಿ ಪ್ರತಿಭಟನೆ ನಡೆಸಿದ ರೈತರು, ಫೈನಾನ್ಸ್ ವಿರುದ್ಧ ಘೋಷಣೆಗಳನ್ನು ಕೂಗುವ ಜೊತೆಗೆ ಎಚ್ಚರಿಕೆ ನೋಟಿಸ್ ಅಂಟಿಸಿದರು. 
    ಫೈನಾನ್ಸ್ ಕಛೇರಿಯಲ್ಲಿ ಪ್ರತಿಭಟನೆ : 
    ಮಂಗಳವಾರ ನಗರದ ಇಕ್ವಿಟಾಸ್ ಫೈನಾನ್ಸ್ ಕಛೇರಿಯಲ್ಲಿ ಪ್ರತಿಭಟನೆ ನಡೆಸಿದ ರೈತರು, ಫೈನಾನ್ಸ್ ವಿರುದ್ಧ ಘೋಷಣೆಗಳನ್ನು ಕೂಗುವ ಜೊತೆಗೆ ಸರ್ಕಾರ ಕಾಯ್ದೆ ಜಾರಿಗೆ ತಂದರೂ ಸಹ ಬಡ ರೈತರ ಮೇಲೆ ಕಿರುಕುಳ ಮುಂದುವರೆಯುತ್ತಿರುವುದು ಖಂಡನೀಯ. ತಕ್ಷಣ ಜಿಲ್ಲಾಧಿಕಾರಿಗಳು ಗಮನ ಹರಿಸುವ ಮೂಲಕ ಇಂತಹ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಲ್ಲದೆ ` ಮೈಕ್ರೋ ಫೈನಾನ್ಸ್ ಕಂಪನಿಗಳೇ ಊರೊಳಗೆ ಕಾಲಿಟ್ಟರೆ ನಿಮಗೆ ಉಳಿಗಾಲವಿಲ್ಲ' ಎಂಬ ಘೋಷ ವಾಕ್ಯದೊಂದಿಗೆ ಎಚ್ಚರಿಕೆ ದಿನವಾಗಿ ಆಚರಿಸಿ ಕಛೇರಿಗೆ ನೋಟಿಸ್ ಅಂಟಿಸಲಾಯಿತು. 


ಭದ್ರಾವತಿ ನಗರದ ಇಕ್ವಿಟಾಸ್ ಫೈನಾನ್ಸ್ ಕಛೇರಿಯ ಕ್ರೂರ ವರ್ತನೆ ಖಂಡಿಸಿ ಮಂಗಳವಾರ ರೈತರು ಲೋಕಾಯುಕ್ತ ಜಿಲ್ಲಾ ನಿರೀಕ್ಷಕ ವೀರಬಸಪ್ಪ ಕುಶಾಲಪುರ ಅವರಿಗೆ ದೂರು ಸಲ್ಲಿಸಿದರು. 
      ಲೋಕಾಯುಕ್ತರಿಗೆ ದೂರು : 
    ಪ್ರತಿಭಟನೆಗೂ ಮೊದಲು ರೈತರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ ಲೋಕಾಯುಕ್ತ ಜಿಲ್ಲಾ ನಿರೀಕ್ಷಕ ವೀರಬಸಪ್ಪ ಕುಶಾಲಪುರ ಅವರಿಗೆ ದೂರು ಸಲ್ಲಿಸಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದ್ದು, ಸರ್ಕಾರ ಕಾಯ್ದೆ ಜಾರಿಗೆ ತಂದರೂ ಸಹ ಕಿರುಕುಳ ನಿಲ್ಲುತ್ತಿಲ್ಲ. ಇಕ್ವಿಟಾಸ್ ಫೈನಾನ್ಸ್ ಕ್ರೂರ ವರ್ತನೆ ಕುರಿತು ಫೆ.೪ರಂದು ತಹಸೀಲ್ದಾರ್ ಗಮನಕ್ಕೆ ತರಲಾಗಿದೆ. ಆದರೆ ತಾಲೂಕು ಆಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. 
    ಇದಕ್ಕೆ ಸ್ಪಂದಿಸಿದ ವೀರಬಸಪ್ಪ ಕುಶಾಲಪುರ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿದರು. ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. 
    ರೈತ ಪ್ರಮುಖರಾದ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ಮಂಜುನಾಥ್, ಡಿ.ವಿ ವೀರೇಶ್, ಚಂದ್ರಪ್ಪ, ರಂಗಪ್ಪ, ವೀರೇಶ ಸೇರಿದಂತೆ ಗ್ರಾಮದ ಮುಖಂಡರು, ರೈತರು ಉಪಸ್ಥಿತರಿದ್ದರು. 

ಸೋಮವಾರ, ಫೆಬ್ರವರಿ 24, 2025

ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ೫ ಜನರ ವಿರುದ್ಧ ಪ್ರಕರಣ ದಾಖಲು

ನೌಕರನಿಗೆ ಮಾನಸಿಕ, ದೈಹಿಕ ಹಿಂಸೆ, ಜಾತಿನಿಂದನೆ ಆರೋಪ 


    ಭದ್ರಾವತಿ: ಇಲ್ಲಿನ ಕೈಗಾರಿಕಾ ಪ್ರದೇಶದ ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ೫ ಜನರ ವಿರುದ್ಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
    ಹಳೇನಗರ ವ್ಯಾಪ್ತಿಯ ಗಾಂಧಿನಗರ ನಿವಾಸಿ ಬಿ.ಎನ್ ರವಿ ಎಂಬುವರು ಕಳೆದ ೫ ದಿನಗಳ ಹಿಂದೆ ಫೆ.೧೯ರಂದು ದೂರು ದಾಖಲಿಸಿದ್ದಾರೆ. ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ವೈ.ವಿ ಮಧುಕರ್ ಜೋಯ್ಸ್, ಕಾರ್ಯನಿರ್ವಾಹಕ ನಿರ್ದೇಶಕ ಪ್ರತೀಕ್ ಜೋಯ್ಸ್, ಸಿ.ಇ.ಓ ಬಿ.ಎಸ್ ಜಗದೀಶ್, ಉತ್ಪಾದನಾ ವಿಭಾಗದ ವ್ಯವಸ್ಥಾಪಕ ರಾವಾ ಸಾಹೇಬ್ ಗಲೀಬಿ ಮತ್ತು ಕಚೇರಿ ಎಚ್.ಆರ್ ನಿರಂಜನ್ ವಿರುದ್ಧ ಮಾನಸಿಕ ಮತ್ತು ದೈಹಿಕ ಹಿಂಸೆ ಹಾಗು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. 
    ಮೋಚಿ ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿರುವ ದಲಿತ ಸಮುದಾಯದ ಬಿ.ಎನ್ ರವಿ ಕಳೆದ ೧೮ ವರ್ಷಗಳಿಂದ ಕಾರ್ಖಾನೆಯ ಉತ್ಪಾದನಾ ವಿಭಾಗದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರ ಬೇಡಿಕೆಗಾಗಿ ಕಾರ್ಮಿಕ ಸಂಘದ ಅಧ್ಯಕ್ಷರ ಜೊತೆ ಸೇರಿ ಹೋರಾಟ ಮಾಡಿದ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ಇವರಿಗೆ ಮಾನಸಿಕ ಹಾಗು ದೈಹಿಕ ಹಿಂಸೆ ನೀಡುವ ಜೊತೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ ಕೆಲಸದಿಂದ ತೆಗೆದು ಹಾಕುವ ಹಾಗು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. 

ಫೆ.೨೫ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ


    ಭದ್ರಾವತಿ: ಲೋಕಾಯುಕ್ತ ಜಿಲ್ಲಾ ಪೊಲೀಸ್ ಉಪಾಧೀಕ್ಷಕರಿಂದ ಫೆ.೨೫ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨.೩೦ರ ವರೆಗೆ ನಗರಸಭೆ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ನಡೆಯಲಿದೆ. 
    ಪ್ರತಿ ತಿಂಗಳಿನಂತೆ ಈ ಬಾರಿ ಸಹ ಅಹವಾಲು ಸ್ವೀಕಾರ ಸಭೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ತಿಳಿಸಿದ್ದಾರೆ. 

ಕಮಲಕುಮಾರಿಗೆ ಸಮಾಜಶ್ರೀ ರಾಜ್ಯ ಪ್ರಶಸ್ತಿ

ಕಮಲಕುಮಾರಿ 
    ಭದ್ರಾವತಿ: ಹೊಸಮನೆ ನಿವಾಸಿ, ಹಳೇನಗರ ಮಹಿಳಾ ಸೇವಾ ಸಮಾಜದ ಮಾಜಿ ಉಪಾಧ್ಯಕ್ಷೆ ಕಮಲಕುಮಾರಿ ಅವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಸಮಾಜಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆ. 
    ಕಮಲಕುಮಾರಿಯವರು ಸಾಹಿತ್ಯ, ರಾಜಕೀಯ ಹಾಗು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ವಿಭಿನ್ನವಾಗಿ ತೊಡಗಿಸಿಕೊಂಡಿದ್ದು, ಹಳೇನಗರ ಮಹಿಳಾ ಸೇವಾ ಸಮಾಜ, ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲೂ ಹಲವಾರು ವರ್ಷಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡು ಮಹಿಳಾ ಕಾಂಗ್ರೆಸ್ ಹೆಚ್ಚಿನ ರೀತಿಯಲ್ಲಿ ಸಂಘಟಿಸುವಲ್ಲಿ ಶ್ರಮವಹಿಸಿದ್ದರು. ಅಲ್ಲದೆ ವಿಭಿನ್ನ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. 
    ಇವರ ಸಮಾಜ ಸೇವೆಯನ್ನು ಪರಿಗಣಿಸಿ ಸಮಾಜಶ್ರೀ ರಾಜ್ಯ ಪ್ರಶಸ್ತಿ ಅಕಾಡೆಮಿ ನೀಡುತ್ತಿದ್ದು, ಮಾ.೨ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಮಲಕುಮಾರಿಯವರಿಗೆ ನಗರದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. 

ಧಾರ್ಮಿಕ ಆಚರಣೆ : ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಪ್ರಧಾನಾಲಯಕ್ಕೆ ಪಾದಯಾತ್ರೆ

ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಶಿವಮೊಗ್ಗ ಸೆಕ್ರೆಟ್ ಹಾರ್ಟ್ ಪ್ರಧಾನಾಲಯಕ್ಕೆ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು. 
    ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಶಿವಮೊಗ್ಗ ಸೆಕ್ರೆಟ್ ಹಾರ್ಟ್ ಪ್ರಧಾನಾಲಯಕ್ಕೆ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು. 
    ೨೦೨೫ ಜ್ಯೂಬಿಲಿ ವರ್ಷವನ್ನು ಯಾತ್ರಾತ್ರಿ ವರ್ಷವನ್ನಾಗಿ ಕ್ರೈಸ್ತ ಕಥೋಲಿಕ ಧರ್ಮದ ಜಗದ್ಗುರು ಫ್ರಾನ್ಸಿಸ್‌ರವರು ಘೋಷಿಸಿದ್ದು,  ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಸಾಧ್ಯವಾದಷ್ಟು ಪುಣ್ಯಕ್ಷೇತ್ರಗಳಿಗೆ ತೆರಳಿ ಪ್ರಾರ್ಥಿಸಲು ಕರೆ ನೀಡಲಾಗಿದೆ ಎಂದು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ ತಿಳಿಸಿದರು. 
    ಇದರ ಅಂಗವಾಗಿ ಧರ್ಮ ಕೇಂದ್ರದ ಇನ್ನೂರಕ್ಕೂ ಅಧಿಕ ಭಕ್ತರು ಧರ್ಮ ಕೇಂದ್ರದಿಂದ ಸುಮಾರು ೨೦ ಕಿಲೋ ಮೀಟರ್ ದೂರ ಕಾಲ್ನಡಿಗೆಯಲ್ಲಿ ಪ್ರಾರ್ಥಿಸುತ್ತಾ ಶಿವಮೊಗ್ಗಕ್ಕೆ ಯಾತ್ರೆ ಕೈಗೊಂಡರು. 
    ನಂತರ ಶಿವಮೊಗ್ಗ ಪ್ರಧಾನಾಲಯದ ಧರ್ಮ ಗುರುಗಳಾದ ಫಾದರ್ ಸ್ಟ್ಯಾನಿ ಡಿಸೋಜರವರಿಂದ ಪೂಜಾ ವಿಧಿ-ವಿಧಾನಗಳು ನೆರವೇರಿದವು. ಶಿವಮೊಗ್ಗ ವಿವಿಧ ಧರ್ಮ ಕೇಂದ್ರಗಳ ಗುರುಗಳು, ಸೈಂಟ್ ಚಾರ್ಲ್ಸ್ ಬರೋಮಿಯೋ ಸಂಸ್ಥೆಯ ಧರ್ಮ ಭಗಿನಿಯರು, ಮಕ್ಕಳು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮತ್ತೊಬ್ಬ ಆರೋಪಿ, ರೌಡಿಶೀಟರ್ ಕಾಲಿಗೆ ಗುಂಡೇಟು

ಆರೋಪಿ, ರೌಡಿಶೀಟರ್ ಶಹೀದ್ 
    ಭದ್ರಾವತಿ:  ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಮತ್ತೊಂದು ಘಟನೆ ನಡೆದಿದೆ.
    ರೌಡಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ, ಸುಮಾರು ೧೨ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಶಹೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ನಗರದ ಪೇಪರ್‌ಟೌನ್ ಠಾಣೆ ಪೊಲೀಸರು ಈತನನ್ನು ಹಿಡಿಯಲು ಹೋದಾಗ ಪೊಲೀಸ್ ಕಾನ್ಸ್‌ಸ್ಟೇಬಲ್ ನಾಗರಾಜ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಠಾಣೆಯ ನಿರೀಕ್ಷಕಿ ನಾಗಮ್ಮ ಈತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. 
    ಗಾಯಗೊಂಡಿರುವ ಶಹೀದ್‌ಗೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಳೆದ ೩ ದಿನಗಳ ಹಿಂದೆ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ರೌಡಿಶೀಟರ್ ಗುಂಡ ಅಲಿಯಾಸ್ ರವಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದರು. 
    ಶಹೀದ್ ೨೦೨೪ರಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಸಹ  ಆರೋಪಿಯಾಗಿದ್ದ. ಯಾಸಿನ್ ಖುರೇಷಿಯ ಆಪ್ತ ಹಾಗೂ ಆದಿಲ್ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ಈತ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಎಂಬ ಆರೋಪ ಈತನ ಮೇಲಿದೆ.