Wednesday, March 12, 2025

ಗಾಂಜಾ ಸೇವನೆ : ಪ್ರಕರಣ ದಾಖಲು


    ಭದ್ರಾವತಿ : ನಗರದ ಎಂಪಿಎಂ ಬಡಾವಣೆಯಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿ ಅಮಲಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಎಚ್.ಪಿ ವಿಕ್ರಮ್ ಮಾ.೧೧ರಂದು ಗಸ್ತಿನಲ್ಲಿದ್ದಾಗ ಮಧ್ಯಾಹ್ನ ೨.೪೫ ಸಮಯದಲ್ಲಿ ಎಂಪಿಎಂ ಬಡಾವಣೆ ವ್ಯಾಪ್ತಿಯಲ್ಲಿ ಯಾರೋ ಒಬ್ಬ ವ್ಯಕ್ತಿಯು  ಅಮಲಿನಲ್ಲಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆತನನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿ ಆತ ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. 

ಪುರುಷರು ಮಹಿಳೆಯರ ಸ್ವಾತಂತ್ರ್ಯ ಕಸಿದುಕೊಳ್ಳದಂತೆ ಎಚ್ಚರಿಕೆ ನೀಡಿ : ಡಾ. ವಿಜಯದೇವಿ

 

ಭದ್ರಾವತಿ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಎಂದು ಸಾಹಿತಿ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ `ಕಾರುಣ್ಯ ವರ್ಷದ ಮಹಿಳೆ ಪ್ರಶಸ್ತಿ' ಸ್ವೀಕರಿಸಿದರು. 
    ಭದ್ರಾವತಿ: ಮಹಿಳೆ ಎಂದಿಗೂ ಪುರುಷನನ್ನು ಬಿಟ್ಟು ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲ. ಸಮಾಜದಲ್ಲಿ ಇಬ್ಬರು ಒಟ್ಟಿಗೆ ಬದುಕಲೇ ಬೇಕು. ಆದರೆ ಪುರುಷ ಮಹಿಳೆ ತನಗಾಗಿ ಮಾತ್ರ, ತನ್ನ ಹಿಡಿತದಲ್ಲಿಯೇ ಇರಬೇಕೆಂದು ಬಯಸುವುದು ಸರಿಯಲ್ಲ. ಆಕೆಯ ಸ್ವಾತಂತ್ರ್ಯ ಕಸಿದುಕೊಳ್ಳದಂತೆ ಎಚ್ಚರಿಕೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಾಹಿತಿ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಹೇಳಿದರು. 
    ಅವರು ಬುಧವಾರ ನಗರದ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ `ಕಾರುಣ್ಯ ವರ್ಷದ ಮಹಿಳೆ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದರು. 
    ಮಹಿಳೆಯರಿಗೆ ಡಾ.ಬಿ.ಆರ್ ಅಂಬೇಡ್ಕರ್‌ರವರು ಕುಟುಂಬದಲ್ಲಿನ ಪುರುಷರ ಹಿಡಿತದಿಂದ ಹೊರತಂದು ಅವರಿಗೆ ಸಂವಿಧಾನ ಬದ್ಧ ಸಮಾನತೆ ಹಕ್ಕನ್ನು ನೀಡಿದ್ದಾರೆ. ಈ ಹಕ್ಕು ನಮ್ಮೆಲ್ಲರಿಗೂ ಸಂತೋಷ, ಸಂಭ್ರಮವನ್ನುಂಟು ಮಾಡಿದೆ. ನಾವು ಈ ಹಕ್ಕನ್ನು ಸದ್ಬಳಕೆ ಮಾಡಿಕೊಂಡು ಪುರುಷರೊಂದಿಗೆ ಭವಿಷ್ಯದ ಸಮಾಜ ರೂಪಿಸಿಕೊಳ್ಳಬೇಕೆಂದರು. 
    ಸಮಾಜದಲ್ಲಿ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಗಮನ ಹರಿಸುವ ಅಗತ್ಯವಿದೆ. ಜೊತೆಗೆ ಮಹಿಳೆಯರು ಸಹ ತಮ್ಮ ಜವಾಬ್ದಾರಿಗಳನ್ನು ಅರಿತು ಪುರುಷರೊಂದಿಗೆ ಭವಿಷ್ಯದ ಸಮಾಜ ಕಟ್ಟುವ ಕಾರ್ಯದಲ್ಲಿ ಕೈಜೋಡಿಸಬೇಕೆಂದರು. 
    ಕಾರ್ಯಕ್ರಮವನ್ನು ದಲಿತ ಚಳುವಳಿಯ ರೂವಾರಿ, ಡಿಎಸ್‌ಎಸ್ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ಧರ್ಮಪತ್ನಿ, ಚಿಂತಕಿ ಇಂದಿರಾ ಕೃಷ್ಣಪ್ಪ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸರ್ಕಾರಿ ಅಭಿಯೋಜಕ ಮಮತ ಸೇರಿದಂತೆ ಇನ್ನಿತರರು ಮಾತನಾಡಿದರು. 
ಕಾರುಣ್ಯ ಚಾರಿಟೇಬಲ್ ಅಧ್ಯಕ್ಷ ಜಿ. ರಾಜು, ನಗರಸಭೆ ಸದಸ್ಯರಾದ ಜಯಶೀಲ, ನಾಗರತ್ನ ಅನಿಲ್‌ಕುಮಾರ್, ಸವಿತ ಉಮೇಶ್,  ಡಿಎಸ್‌ಎಸ್ ಮುಖಂಡ ಸಿ. ಜಯಪ್ಪ, ಆರ್.ಎಸ್ ಶೋಭಾ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತ, ದುರ್ಗಾದೇವಿ ಮಣಿಶೇಖರ್  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ನಗರದ ವಿವಿಧ ಮಹಿಳಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಂಜುಳಾ ಸ್ವಾಗತಿಸಿ, ನಾಗವೇಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎ. ತಿಪ್ಪೇಸ್ವಾಮಿ ಕಾರ್ಯಕ್ರಮ ನಿರೂಪಿಸಿ, ಜೀವಾ ವಂದಿಸಿದರು. ಟ್ರಸ್ಟ್ ಪದಾಧಿಕಾರಿಗಳು, ಸೇವಾಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಮಾ.೧೬ರಂದು ಮೊದಲ ಬಾರಿಗೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ

ಸಮ್ಮೇಳನ ಸರ್ವಾಧ್ಯಕ್ಷರಾಗಿ ಲಕ್ಷ್ಮಣ್‌ರಾವ್ ಬೋರತ್

ಭದ್ರಾವತಿ ಹೊಸಮನೆ ನಿವಾಸಿ ಚೌಡಿಕೆ ಕಲಾವಿದರಾದ ಲಕ್ಷ್ಮಣ್‌ರಾವ್  ಬೋರತ್‌ರವರನ್ನು ತಾಲೂಕು ಮಟ್ಟದ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಹಾಗೂ ಸದಸ್ಯರು ಲಕ್ಷ್ಮಣ್ ರಾವ್‌ಬೋರತ್‌ರವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು. 
    ಭದ್ರಾವತಿ: ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ, ಹಿರಿಯೂರು ಹೋಬಳಿ ಘಟಕ ನೇತೃತ್ವದಲ್ಲಿ ಮೊದಲ ಬಾರಿಗೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಾಗು ಜಾನಪದ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಮಾ.೧೬ರಂದು ತಾಲೂಕಿನ ಗೊಂದಿ ಗ್ರಾಮದ ಶ್ರೀ ಪಾಂಡುರಂಗ ಸಾಧಕಾಶ್ರಮದಲ್ಲಿ ಆಯೋಜಿಸಲಾಗಿದೆ. 
    ಗೊಂದಿ ಶ್ರೀ ಪಾಂಡುರಂಗ ಸಾಧಕಾಶ್ರಮದ ಮಾತಾ ಮುಕ್ತಾನಂದಮಯಿ ದಿವ್ಯ ಸಾನಿಧ್ಯವಹಿಸಲಿದ್ದು, ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಆಶಯ ನುಡಿಗಳನ್ನಾಡಲಿದ್ದಾರೆ. ಚನ್ನಗಿರಿ ಸಿದ್ದನ ಮಠದ ಆಧುನಿಕ ಸರ್ವಜ್ಞ ಯುಗಧರ್ಮ ರಾಮಣ್ಣ ಸಮ್ಮೇಳನ ಉದ್ಘಾಟಿಸಲಿದ್ದಾರೆ. 
    ಸಮ್ಮೇಳನಾಧ್ಯಕ್ಷ ಚೌಡಿಕೆ ಕಲಾವಿದ ಲಕ್ಷ್ಮಣ್‌ರಾವ್ ಬೋರತ್ ಸಮ್ಮೇಳನ ನುಡಿಗಳನ್ನಾಡಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯ ಕಲಾವಿದರಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯೂರು ಹೋಬಳಿ ಘಟಕ ಅಧ್ಯಕ್ಷ ಜಯರಾಂ ಗೊಂದಿ, ಅರಳಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಬಿ. ಸುರೇಶ್, ಎಸ್. ರಾಜು, ಅಭಿವೃದ್ಧಿ ಅಧಿಕಾರಿ ಸುರೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಹಾಗು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ಕಲಾವಿದರಾದ ಲಕ್ಷ್ಮಮ್ಮ(ಸೋಬಾನೆ ಪದ), ಭಾಗ್ಯಬಾಯಿ(ಲಂಬಾಣಿ ನೃತ್ಯ), ವೆಂಕಟರಮಣ(ತಮಟೆ ವಾದನ), ಕಣ್ಣನ್(ಭಜನೆ ಪದ), ಜಂಬೂಸ್ವಾಮಿ(ಜಾನಪದ ಗಾಯನ), ಶಿವಾಜಿ ರಾವ್(ಡೊಳ್ಳು ಕುಣಿತ) ಮತ್ತು ಹನುಮಂತ್‌ರಾವ್(ರಂಗಕಲೆ) ಅವರಿಗೆ ಜಾನಪದ ಸಿರಿ ಪ್ರಶಸ್ತಿ ನೀಡಲಾಗುವುದು. 
    ಎಮ್ಮಹಟ್ಟಿ ಅನಿಲ್ ಕುಮಾರ್ ಮತ್ತು ಸಂಗಡಿಗರಿಂದ ಡೊಳ್ಳು ಕುಣಿತ, ತಾರೀಕಟ್ಟೆ ಶೇಖರ್ ಮತ್ತು ಸಂಗಡಿಗರು ಹಾಗು ಜೆ. ಪ್ರಶಾಂತ್ ಮತ್ತು ಸಂಗಡಿಗರಿಂದ ತಮಟೆ ಕುಣಿತ, ಹೊಸಮನೆ ಲಕ್ಷ್ಮಣ್ ರಾವ್ ಮತ್ತು ಕುಟುಂಬ ಹಾಗು ಕೇಶವ ಮತ್ತು ಸಂಗಡಿಗರಿಂದ ಚೌಡಿಕೆ ಗೊಂದಲಿಗರ ಪದ, ಹಿರಿಯೂರು ನಗರಾಜ್ ಮತ್ತು ಸಂಗಡಿಗರಿಂದ ವೀರಗಾಸೆ, ದಿವಾಕರ್ ಮತ್ತು ಸಂಗಡಿಗರಿಂದ ಲಂಬಾಣಿ ನೃತ್ಯ, ತಿಮ್ಲಾಪುರ ಮಹಾದೇವಿ ಮತ್ತು ಸಂಗಡಿಗರು, ರಮಾ ಮತ್ತು ಸಂಗಡಿಗರು ಹಾಗು ಓಂಕಾರ ಯೋಗ ತಂಡದಿಂದ ಕೋಲಾಟ ನಡೆಯಲಿವೆ.  ಅಲ್ಲದೆ ಪುಟಾಣಿ ಮಕ್ಕಳಿಂದ ಕಂಸಾಳೆ ನೃತ್ಯ, ಲಂಬಾಣಿ ನೃತ್ಯ, ಸುಗ್ಗಿ ಕುಣಿತ ಮತ್ತು ಜಾನಪದ ನೃತ್ಯ ಜರುಗಲಿವೆ. ಕಲಾವಿದರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನ ಯಶಸ್ರಿಗೊಳಿಸುವಂತೆ ಕೋರಲಾಗಿದೆ. 
  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲಕ್ಷ್ಮಣ್‌ರಾವ್ ಬೋರತ್: 
    ಹೊಸಮನೆ ನಿವಾಸಿ ಚೌಡಿಕೆ ಕಲಾವಿದರಾದ ಲಕ್ಷ್ಮಣ್‌ರಾವ್  ಬೋರತ್‌ರವರನ್ನು ತಾಲೂಕು ಮಟ್ಟದ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. 
    ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಹಾಗೂ ಸದಸ್ಯರು ಲಕ್ಷ್ಮಣ್ ರಾವ್‌ಬೋರತ್‌ರವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು. ಪರಿಷತ್ ಪ್ರಧಾನ ಕಾರ್ಯದರ್ಶಿ ಮೋಹನ್ ಹಾಗೂ ಲತಾ, ಕಮಲಾಕರ್, ಬಿ.ಎಚ್ ಪ್ರಶಾಂತ್, ದಿವಾಕರ್, ಜಂಬೂಸ್ವಾಮಿ, ಶಿವರಾಜ್, ಹರೀಶ್, ಭಾರ್ಗವಿ ಮತ್ತು ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, March 11, 2025

೨ ದಿನಗಳ ಕಾಲ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ

    ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಶ್ರೀ ಮದ್ದೂರಮ್ಮ ಟ್ರಸ್ಟ್ ವತಿಯಿಂದ ೪೦ನೇ ವರ್ಷದ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ೨ ದಿನಗಳ ವಿಜೃಂಭಣೆಯಿಂದ ಜರುಗಲಿದೆ. 
    ಮಂಗಳವಾರ ಸಂಜೆ ಗಂಗೆಪೂಜೆ ಮತ್ತು ರಾತ್ರಿ ೮ ಗಂಟೆಗೆ ಮಹಾಮಂಗಳಾರತಿ, ನಂತರ ಅನ್ನಸಂತರ್ಪಣೆ ನೆರವೇರಿತು. ಬುಧವಾರ ಮಧ್ಯಾಹ್ನ ೧೨.೩೦ಕ್ಕೆ ತಂಬಿಟ್ಟಿನ ಆರತಿ ತರುವ ಆಚರಣೆ ನಡೆಯಲಿದ್ದು, ೨ ಗಂಟೆಗೆ ಮಹಾಮಂಗಳಾರತಿ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಎ.ಎಸ್ ಪದ್ಮಾವತಿ, ಡಾ. ವೀಣಾ ಭಟ್ ಇಬ್ಬರು ಸಾಧಕಿಯರಿಗೆ `ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ'

`ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ' ಪುರಸ್ಕೃತರಾದ ಎ.ಎಸ್. ಪದ್ಮಾವತಿ 
    ಭದ್ರಾವತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗು ಮಹಿಳಾ ಸಾಧಕಿಯರಿಗೆ ನೀಡಲಾಗುವ `ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ' ಈ ಬಾರಿ ನಗರದ ಇಬ್ಬರು ಮಹಿಳಾ ಸಾಧಕಿಯರಿಗೆ ಲಭಿಸಿದೆ. 
    ನಗರದ ಜನ್ನಾಪುರ ನಿವಾಸಿ ಎ.ಎಸ್ ಪದ್ಮಾವತಿ(ಪದ್ಮಾವತಿ ಸಚ್ಚಿದಾನಂದ ಗುಪ್ತ) ಅವರಿಗೆ ಕಲಾ ವಿಭಾಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹಾಗು ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಪ್ರಸೂತಿ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಭಟ್ ಅವರಿಗೆ ಮಹಿಳೆಯರ ಅಭಿವೃದ್ಧಿಗಾಗಿ   ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ. 
    ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಧಕಿಯರಾದ ಎ.ಎಸ್ ಪದ್ಮಾವತಿ ಮತ್ತು ಡಾ. ವೀಣಾ ಭಟ್ ಪ್ರಶಸ್ತಿ ಸ್ವೀಕರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

`ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ' ಪುರಸ್ಕೃತರಾದ ಡಾ. ವೀಣಾ ಭಟ್ 

ಡಾ.ಬಿ.ಆರ್ ಅಂಬೇಡ್ಕರ್ ಭವನ ಊಟದ ಕೊಠಡಿ ನಿರ್ಮಾಣಕ್ಕೆ ೨ ಕೋ.ರು. ಅನುದಾನ ಬಿಡುಗಡೆಗೊಳಿಸಿ

    ಸಮಾಜ ಕಲ್ಯಾಣ ಖಾತೆ ಸಚಿವರಿಗೆ ಮನವಿ, ಶಾಸಕ ಸಂಗಮೇಶ್ವರ್‌ಗೆ ಅಭಿನಂದನೆ 

ಭದ್ರಾವತಿಯಲ್ಲಿ ಮುಕ್ತಾಯ ಹಂತದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದ ಊಟದ ಕೊಠಡಿ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸುವಂತೆ ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಎಚ್.ಸಿ ಮಹಾದೇವಪ್ಪರಿಗೆ ಪತ್ರ ಬರೆದು ಕೋರಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.  
    ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ಮುಕ್ತಾಯ ಹಂತದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನಕ್ಕೆ ಊಟದ ಕೊಠಡಿ ಅಗತ್ಯವಿದ್ದು, ಸುಮಾರು ೨ ಕೋ. ರು. ಅನುದಾನ ಬಿಡುಗಡೆಗೊಳಿಸುವಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಎಚ್.ಸಿ ಮಹಾದೇವಪ್ಪರವರಿಗೆ ಮಂಗಳವಾರ ಪತ್ರ ಬರೆದು ಕೋರಿದ್ದಾರೆ. 
    ಕ್ಷೇತ್ರದ ನಿವಾಸಿಗಳ ಹಲವು ದಶಕಗಳ ಬೇಡಿಕೆಯಾಗಿದ್ದ ವಿಶ್ವಜ್ಞಾನಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಸುಸಜ್ಜಿತ ಭವನ ಸುಮಾರು ೫ ಕೋ.ರು. ವೆಚ್ಚದಲ್ಲಿ ನಿರ್ಮಾಣಗೊಂಡು ಮುಕ್ತಾಯ ಹಂತ ತಲುಪಿದ್ದು, ಭವನದ ಹಿಂಭಾಗದಲ್ಲಿ ಊಟದ ಕೊಠಡಿ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಅಗತ್ಯವಿರುವ ಅನುದಾನ ಸರ್ಕಾರದಿಂದ ಮಂಜೂರಾತಿ ಮಾಡಿಸಿಕೊಡುವಂತೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸುಮಾರು ೪ ದಿನಗಳ ಹಿಂದೆ ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು. 
    ಮನವಿಗೆ ಸ್ಪಂದಿಸಿರುವ ಶಾಸಕರು, ಕ್ಷೇತ್ರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಸಂಘ-ಸಂಸ್ಥೆಗಳಿಗೆ, ಸರ್ಕಾರದ ಎಲ್ಲಾ ಇಲಾಖೆಗಳಿಗೆ ಸಭೆ, ಸಮಾರಂಭ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಡಾ. ಬಿ.ಆರ್ ಅಂಬೇಡ್ಕರ್ ಭವನ ಅತ್ಯುತ್ತಮ ಸ್ಥಳವಾಗಿದೆ. ಈ ಭವನ ೫ ಕೋ.ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಕಾರ್ಯದಲ್ಲಿ ತಾವು ನೀಡಿರುವ ಸಹಕಾರ ಹೆಚ್ಚಿನದ್ದಾಗಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದ ಜನತೆಯ ಪರವಾಗಿ ವಾದ ಕೃತಜ್ಞತೆ ಸಲ್ಲಿಸುತ್ತೇನೆ. ಭವನದ ಹಿಂಭಾಗದಲ್ಲಿ ಊಟದ ಕೊಠಡಿ ನಿರ್ಮಾಣದ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಅಗತ್ಯವಿರುವ ಸುಮಾರು ೨ ಕೋ.ರು. ಅನುದಾನ ಬಿಡುಗಡೆಗೊಳಿಸುವ ಜೊತೆಗೆ ಏ.೧೪ರಂದು ತಮ್ಮ ನೇತೃತ್ವದಲ್ಲಿ ಭವನ ಉದ್ಘಾಟಿಸಿ ಸಾರ್ವಜನಕರ ಬಳಕೆ ನೀಡುವಂತೆ ಸಚಿವರಿಗೆ ಬರೆದಿರುವ ಪತ್ರದಲ್ಲಿ ವಿನಂತಿಸಿದ್ದಾರೆ. 
    ಶಾಸಕರಿಗೆ ಅಭಿನಂದನೆ: 
ಸಚಿವರಿಗೆ ಊಟದ ಕೊಠಡಿ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸುವಂತೆ ಪತ್ರ ಬರೆದು ಕೋರಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.  

ಮಹಿಳೆ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯ ಪಡೆದುಕೊಂಡಿದ್ದಾಳೆ : ಪಿ. ಭವ್ಯ

ಭದ್ರಾವತಿಯಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಹಳೇನಗರದ ಶ್ರೀವೀರಭದ್ರೇಶ್ವರ ದೇವಸ್ಥಾನದ ಶ್ರೀ ಮಾತಾ ಬನಶಂಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಕಾರಗೃಹ ಸಹಾಯಕ ಅಧೀಕ್ಷಕಿ ಪಿ. ಭವ್ಯ ಅವರಿಗೆ ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
    ಭದ್ರಾವತಿ: ಮಹಿಳೆಯರು ಮೊದಲು ತಮ್ಮನ್ನು ತಾವು ಗೌರವಿಸಿಕೊಳ್ಳುವ ಮೂಲಕ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ಪ್ರಸ್ತುತ ಮಹಿಳೆ ಎಲ್ಲಾ ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯ ಪಡೆದುಕೊಂಡಿದ್ದಾಳೆ ಎಂದು ಶಿವಮೊಗ್ಗ ಕಾರಗೃಹ ಸಹಾಯಕ ಅಧೀಕ್ಷಕಿ ಪಿ. ಭವ್ಯ ಹೇಳಿದರು. 
    ಅವರು ಸೋಮವಾರ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಹಳೇನಗರದ ಶ್ರೀವೀರಭದ್ರೇಶ್ವರ ದೇವಸ್ಥಾನದ ಶ್ರೀ ಮಾತಾ ಬನಶಂಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. 
    ಒಂದು ಕಾಲದಲ್ಲಿ ಮಹಿಳೆ ಮನೆಯ ೪ ಗೋಡೆಗಳ ನಡುವೆ ಸೀಮಿತವಾಗಿದ್ದಳು. ಆದರೆ ಪ್ರಸ್ತುತ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಪುರುಷನ ಸಮಾನತೆ ಎದುರು ನೋಡುತ್ತಿದ್ದಾಳೆ. ಸಮಾಜದಲ್ಲಿ ಪುರುಷ ಮತ್ತು ಮಹಿಳೆ ಇಬ್ಬರನ್ನು ಸಮಾನವಾಗಿ ಕಾಣುವ ಮನಸ್ಥಿತಿ ಬದಲಾಗಬೇಕಿದೆ. ಈ ಹಿನ್ನಲೆಯಲ್ಲಿ ಮನೆಗಳಲ್ಲಿ ಇಬ್ಬರಿಗೂ ಸಮಾನ ಅವಕಾಶಗಳನ್ನು ನೀಡಬೇಕು. ಹೆಣ್ಣು ಮಕ್ಕಳಿಗೆ ಇನ್ನೂ ಹೆಚ್ಚಿನ ಶಿಕ್ಷಣ ನೀಡಬೇಕು. ಆಕೆಗೆ ತನ್ನದೇ ಭವಿಷ್ಯ ರೂಪಿಸಿಕೊಳ್ಳುವ ಜವಾಬ್ದಾರಿ ನೀಡಬೇಕೆಂದರು. 
    ಮಹಿಳೆ ಪ್ರಕೃತಿಯ ವಿಶೇಷ ಸೃಷ್ಟಿಯಾಗಿದ್ದು, ಮಹಿಳೆಯಿಂದ ಯಾವುದೂ ಅಸಾಧ್ಯವಲ್ಲ. ಆಕೆಯಲ್ಲಿ ಅದ್ಭುತ ಶಕ್ತಿ ಇದ್ದು, ಇದು ನಮ್ಮ ನಡುವೆಯೇ ಬಹಳಷ್ಟು ಬಾರಿ ಸಾಬೀತಾಗಿದೆ. ಆಕೆಯ ಸಾಧನೆಗೆ ಮತ್ತಷ್ಟು ಪ್ರಶಂಸೆ, ಪ್ರೋತ್ಸಾಹ ನಮ್ಮಿಂದ ಲಭಿಸಿದಾಗ ಇನ್ನೂ ಹೆಚ್ಚಿನ ಸಾಧನೆ ಮಾಡಲು ಆಕೆಗೆ ಸಾಧ್ಯವಾಗುತ್ತದೆ ಎಂದರು.   
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಮಹಿಳೆಯರು ಎಲ್ಲಾ ಕೆಲಸಗಳನ್ನು ಸ್ವತಂತ್ರವಾಗಿ ನಿರ್ವಹಿಸ ಬಲ್ಲರು. ಕುಟುಂಬದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಅಲ್ಲದೆ ಕುಟುಂಬ ನಿರ್ವಹಣೆ ಜೊತೆಗೆ ಸಮಾಜದ ಇತರೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು  ಪುರುಷರಂತೆ ಯಾವುದರಲ್ಲೂ ಕಡಿಮೆ ಇಲ್ಲದಂತೆ ಮುನ್ನಡೆಯುತ್ತಿದ್ದು, ನಮ್ಮ ಇತಿಹಾಸದ ಪುಟದಲ್ಲಿ ಆನೇಕ ಸಾಧಕ ಮಹಿಳೆಯರಿದ್ದಾರೆ. ನಮಗೆ ಅವರು ಸ್ಪೂರ್ತಿದಾಯಕರಾಗಿದ್ದು, ಅವರ ದಾರಿಯಲ್ಲಿ ನಾವುಗಳು ಸಹ ಮುನ್ನಡೆಯಬೇಕೆಂದರು. 
    ಸಮಾಜದ ಗೌರವಾಧ್ಯಕ್ಷೆ ಆರ್.ಎಸ್ ಶೋಭಾ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ. ವಿಜಯದೇವಿಯವರ ಮಾರ್ಗದರ್ಶನದಲ್ಲಿ ಅವರ ತಾಯಿಯವರ ನೆನಪಿನಲ್ಲಿ ಸಾಧಕ ಮಹಿಳೆಯರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಮೂಲಕ ಕಳೆದ ಕೆಲವು ವರ್ಷಗಳಿಂದ ಮಹಿಳಾ ದಿನಾಚರಣೆ ಆಯೋಜಿಸಿಕೊಂಡು ಬರಲಾಗುತ್ತಿದೆ. ಮಹಿಳೆಯರು ತಮ್ಮನ್ನು ತಾವು ಆತ್ಮವಾಲೋಕನ ಮಾಡಿಕೊಳ್ಳುವ ಜೊತೆಗೆ ಪುರುಷರೊಂದಿಗೆ ತಮ್ಮ ನೋವು-ನಲಿವುಗಳನ್ನು ಹಂಚಿಕೊಳ್ಳುವ ದಿನ ಮಹಿಳಾ ದಿನಾಚರಣೆಯಾಗಬೇಕೆಂಬ ಆಶಯ ನಮ್ಮದಾಗಿದೆ ಎಂದರು.  
    ನಗರಸಭೆ ಪೌರಕಾರ್ಮಿಕರಾದ ಲಕ್ಷ್ಮಮ್ಮ ಸೋಮಣ್ಣ, ಪತ್ರಕರ್ತೆ ಆರ್. ಫಿಲೋಮಿನ ಅಂತೋಣಿ, ಡಿ.ಜಿ ಹಳ್ಳಿ ಆಶಾ ಕಾರ್ಯಕರ್ತೆ ರಾಜೇಶ್ವರಿ ನಂದೀಶ್ ಮತ್ತು ಹಳ್ಳಿಕೆರೆ-ಬಾರಂದೂರು ಅಂಗನವಾಡಿ ಕಾರ್ಯಕರ್ತೆ ಟಿ. ಮಂಜುಳ ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಸಮಾಜದ ಅಧ್ಯಕ್ಷೆ ನಾಗರತ್ನ ವಾಗೀಶ್ ಕೋಠಿ, ಪ್ರಶಸ್ತಿ ಸಂಸ್ಥಾಪಕಿ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ಸಮಾಜದ ಉಪಾಧ್ಯಕ್ಷೆ ವಿಜಯ ಜಗನ್ನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಈ ಬಾರಿ ಲಾಟರಿ ಮೂಲಕ ಅದೃಷ್ಟ ಮಹಿಳೆಯಾಗಿ ನಾಗರತ್ನ ಕೋಠಿ ಆಯ್ಕೆಯಾದರು. ವಾಣಿಶ್ರೀ, ಸರಿತ ಪ್ರಾರ್ಥಿಸಿ, ಕಲ್ಪನ ಮಂಜುನಾಥ್ ಸ್ವಾಗತಿಸಿದರು. ಶಶಿಕಲಾ, ಅನುಪಮ ಮತ್ತು ಗುಣ ಅತಿಥಿ ಪರಿಚಯ ನಡೆಸಿಕೊಟ್ಟರು. ವೀಣಾ ಚಂದ್ರಶೇಖರ್ ಕೋಠಿ ಕಾರ್ಯಕ್ರಮ ನಿರೂಪಿಸಿ, ಭಾಗ್ಯ ನಿಜಗುಣ ವಂದಿಸಿದರು. 
 

ಭದ್ರಾವತಿಯಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಹಳೇನಗರದ ಶ್ರೀವೀರಭದ್ರೇಶ್ವರ ದೇವಸ್ಥಾನದ ಶ್ರೀ ಮಾತಾ ಬನಶಂಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಾದ ಲಕ್ಷ್ಮಮ್ಮ ಸೋಮಣ್ಣ, ಆರ್. ಫಿಲೋಮಿನ ಅಂತೋಣಿ, ರಾಜೇಶ್ವರಿ ನಂದೀಶ್ ಮತ್ತು ಟಿ. ಮಂಜುಳ ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.