Saturday, March 22, 2025

ಆಯುಷ್ಮಾನ್ ಕಾರ್ಡ್ ಯೋಜನೆ ಯಶಸ್ವಿಗೆ ರಾಜ್ಯ ಸರ್ಕಾರ ಆಸಹಕಾರ : ಸಂಸದ ಬಿ.ವೈ ರಾಘವೇಂದ್ರ



ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಫಲಾನುಭವಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಸ್ಮಾರ್ಟ್ ಕಾರ್ಡ್ ವಿತರಿಸಿದರು.
    ಭದ್ರಾವತಿ : ಆಯುಷ್ಮಾನ್ ಕಾರ್ಡ್ ೧೬೫೦ಕ್ಕೂ ವಿವಿಧ ತರಹದ ಚಿಕಿತ್ಸೆ, ೯೩೪ ತುರ್ತು ಸಂದರ್ಭದ ಚಿಕಿತ್ಸೆ ಹಾಗು ೧೭ ಅತಿ ತುರ್ತು ಸಂದರ್ಭದ ಚಿಕಿತ್ಸೆಗಳನ್ನು ಒಳಗೊಂಡಿದೆ. ಆದರೆ ಈ ಯೋಜನೆ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದರು.
    ಅವರು ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದರು. 
    ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂಬ ಬಹುದೊಡ್ಡ ಕನಸು ಕಂಡಿದ್ದಾರೆ. ದೇಶದಲ್ಲಿ ಕೋವಿಡ್ ನಂತರ ಜನನ ಪ್ರಮಾಣಕ್ಕಿಂತ ಮರಣ ಪ್ರಮಾಣ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಯ ವೆಚ್ಚಕ್ಕೆ ಕಡಿವಾಣ ಹಾಕಲು ಈ ಯೋಜನೆ ಸಹಕಾರಿಯಾಗಿದೆ ಎಂದರು.
    ಕುಟುಂಬದಲ್ಲಿ ಹಿರಿಯರ ಆರೋಗ್ಯ ಮತ್ತು ಯೋಗ ಕ್ಷೇಮ ನೋಡಿಕೊಳ್ಳುವುದು ಕಿರಿಯರ ಜವಾಬ್ದಾರಿಯಾಗಿದೆ. ಅದರೆ ಇತ್ತೀಚಿನ ದಿನಗಳಲ್ಲಿ ಹಿರಿಯರ ಆರೈಕೆ ಮಾಡುವುದನ್ನು ಕಡೆಗಣಿಸುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಪ್ರವೃತ್ತಿ ಸಮಾಜದಲ್ಲಿ ತೊಲಗಬೇಕು. ಹಿರಿಯ ಆರೈಕೆ ಮಾಡುವುದು ಪುಣ್ಯದ ಕೆಲಸವಾಗಿದೆ ಎಂದರು.
  ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಈ ಯೋಜನೆ ಯಶಸ್ವಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ. ಸಮಾಜದ ಪ್ರತಿಯೊಬ್ಬ ಕಡು ಬಡವನಿಗೂ ಈ ಯೋಜನೆ ತಲುಪಬೇಕು. ಈ ನಿಟ್ಟಿನಲ್ಲಿ ಸಂಸದ ರಾಘವೇಂದ್ರರವರು ಈ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ ಎಂದರು.                    
    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ.ಧರ್ಮ ಪ್ರಸಾದ್ ಮಾತನಾಡಿ, ಸಮಾಜದಲ್ಲಿನ ಮಧ್ಯಮ ವರ್ಗ ಹಾಗು ಶ್ರೀ ಸಾಮನ್ಯರಿಗೆ ಈ ಯೋಜನೆ ವರದಾನವಾಗಿದೆ ಎಂದರು.
    ಯುವ ಮುಖಂಡರಾದ ಜಿ.ಆನಂದ ಕುಮಾರ್, ಟಿ.ಎಸ್ ದುಗ್ಗೇಶ್, ಅಣ್ಣಪ್ಪ, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಮಧುಕರ್ ಕಾನಿಟ್ಕರ್, ದಿನೇಶ್, ಕೆ.ಎಚ್ ತೀರ್ಥಯ್ಯ, ನಗರಸಭಾ ಸದಸ್ಯೆ ಅನುಪಮ ಚನ್ನೇಶ್ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಗಜೇಂದ್ರ ಪ್ರಾರ್ಥಿಸಿ, ವೆಂಕಟೇಶ್ ಸ್ವಾಗತಿಸಿದರು. ಮಂಗೋಟೆ ರುದ್ರೇಶ್ ಪ್ರಸ್ತಾವಿಕ ನುಡಿಗಳನ್ನಾಡಿ, ಚನ್ನೇಶ್ ಕಾರ್ಯಕ್ರಮ  ನಿರೂಪಿಸಿ, ಆನಂದ್ ವಂದಿಸಿದರು. 

ಬಷೀರುನ್ನೀಸ ನಿಧನ


ಬಷೀರುನ್ನೀಸ 
    ಭದ್ರಾವತಿ : ನಗರದ ಜನ್ನಾಪುರ ನಂದಿನಿ ಸರ್ಕಲ್ ದಿನ ಪತ್ರಿಕೆಗಳ ಮಾರಾಟಗಾರ ನವಾಬ್‌ರವರ ತಾಯಿ ಬಷೀರುನ್ನೀಸ(೭೦) ವಯೋ ಸಹಜವಾಗಿ ನಿಧನ ಹೊಂದಿದರು. 
    ಪತಿ, ಓರ್ವ ಪುತ್ರಿ ಹಾಗು ನವಾಬ್ ಸೇರಿದಂತೆ ಇಬ್ಬರು ಪುತ್ರರು ಇದ್ದಾರೆ. ಜನ್ನಾಪುರ ರಾಜಪ್ಪ ಬಡಾವಣೆಯಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ತರೀಕೆರೆ ರಸ್ತೆಯ ಸಾದತ್ ದರ್ಗಾ ಖಬರ್‌ಸ್ತಾನದಲ್ಲಿ ನೆರವೇರಿತು. ಇವರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 




Friday, March 21, 2025

ಅರಣ್ಯ ಸಚಿವರ ನೇತೃತ್ವದಲ್ಲಿ ಸಭೆ : ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಭರವಸೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್  ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. 
    ಭದ್ರಾವತಿ : ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ (ಎಂ.ಪಿ.ಎಂ) ಪುನರ್ ಪ್ರಾರಂಭಿಸುವ ಸಂಬಂಧ ಅರಣ್ಯ ಇಲಾಖೆಯಿಂದ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದ್ದಾರೆ. 
    ಕಳೆದ ೩ ದಿನಗಳ ಹಿಂದೆ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ನಾನು ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. ಪ್ರಸ್ತುತ ಎಂಪಿಎಂ ಕಾರ್ಖಾನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಸಚಿವರಿಗೆ ತಿಳಿಸುವ ಮೂಲಕ ಕಾರ್ಖಾನೆ ಪುನರ್ ಪ್ರಾರಂಭಿಸುವುದರಿಂದ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸುವಂತಹ ಕಾರ್ಯ ಸಾಕಾರಗೊಳ್ಳುವ ಕುರಿತು ಮನವರಿಕೆ ಮಾಡಿಕೊಡಲಾಯಿತು. 
    ಸಚಿವರು, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಆದಷ್ಟು ಬೇಗನೆ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಎಲ್ಲ ರೀತಿಯ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ಕಾರ್ಖಾನೆ ಪುನರ್ ಪ್ರಾರಂಭಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಶಾಸಕರು ತಿಳಿಸಿದ್ದಾರೆ. 

ಮಾ.೨೨ರಂದು ಪುನೀತ್‌ರಾಜ್‌ಕುಮಾರ್ ೫೦ನೇ ಹುಟ್ಟುಹಬ್ಬ



    ಭದ್ರಾವತಿ: ನಗರದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಮಾ.೨೨ರ ಶನಿವಾರ ಸಂಜೆ ೪ ಗಂಟೆಗೆ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದೆ. 
    ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. 
    ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜವಿಕ್ರಂ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ದೇವರಾಜ್, ಹಿರಿಯ ಕಲಾವಿದ ಜೆ.ಪಿ ನಂಜುಂಡೇಗೌಡ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ಸನ್ಮಾನ ನಡೆಯಲಿದೆ. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಕೇಂದ್ರ ಉಕ್ಕು ಸಚಿವರಿಂದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವ ಭರವಸೆ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರ ಸ್ವಾಮಿಯವರು ಭರವಸೆ ನೀಡಿದ್ದಾರೆ. 
    ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. 
    ಕಾರ್ಖಾನೆ ಅಭಿವೃದ್ಧಿ ಹೊಂದುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ. ಇದರಿಂದಾಗಿ ಕಾರ್ಮಿಕ ವಲಯ ಹಾಗು ಕ್ಷೇತ್ರದ ಜನತೆಯಲ್ಲಿ ಆತಂಕ ಛಾಯೆ ಆವರಿಸಿಕೊಂಡಿದ್ದು, ಅಲ್ಲದೆ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನಗಳು ಹೆಚ್ಚಳವಾಗದ ಕಾರಣ ಸಂಕಷ್ಟದಲ್ಲಿ ಬದುಕುವಂತಾಗಿದೆ ಎಂದು ಎಂದು ನಿಯೋಗ ಅಳಲು ವ್ಯಕ್ತಪಡಿಸಿದೆ.  
    ಸಚಿವ ಕುಮಾರಸ್ವಾಮಿ ನಿಯೋಗಕ್ಕೆ ಸ್ಪಂದಿಸಿ ಕಾರ್ಖಾನೆ ಅಭಿವೃದ್ಧಿ ಹಾಗು ಗುತ್ತಿಗೆ ಕಾರ್ಮಿಕರಿಗೆ ಕೆಲಸ ದಿನ ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ತಿಳಿಸಿದ್ದಾರೆ.  
    ನಿಯೋಗದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಪದಾಧಿಕಾರಿಗಳು, ನಿರ್ದೇಶಕರು ಪಾಲ್ಗೊಂಡಿದ್ದರು. 

ಮಾ.೨೩ರಂದು ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾಹಿತಿ ನೀಡಿದರು. 
    ಭದ್ರಾವತಿ: ಮುಂಬರಲಿರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಮಾ.೨೩ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು. 
    ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳು ಸಭೆಯಲ್ಲಿ ಉಪಸ್ಥಿತರಿರುವರು ಎಂದರು. 
    ಮುಂಬರಲಿರುವ ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಲಾಗುವುದು. ಈ ಹಿನ್ನಲೆಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಪಕ್ಷದ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು. 
    ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಮುಖಂಡರಾದ ಸಿ. ಜಯಪ್ಪ, ಮಂಜಪ್ಪ, ಬಿ. ಗಂಗಾಧರ್, ಅಮೀರ್ ಜಾನ್, ಜುಂಜ್ಯಾನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Thursday, March 20, 2025

ಫಲಾನುಭವಿ ದಂಪತಿಗೆ ಮಂಜೂರಾದ ಜಮೀನು ದೌರ್ಜನ್ಯ, ದಬ್ಬಾಳಿಕೆ, ಕುತಂತ್ರದ ಮೂಲಕ ವಶಕ್ಕೆ ಪಡೆಯಲು ಯತ್ನ

ನ್ಯಾಯಾಲಯದ ಆದೇಶ ಫಲಕ ಧ್ವಂಸ, ಕಂಗಲಾದ ದಂಪತಿ 

ಭದ್ರಾವತಿ ತಾಲೂಕಿನ ಹುಳಿಯಾರ್ ರಾಮನಕೊಪ್ಪ ಗ್ರಾಮದ ಸರ್ವೆ ನಂ. ೧೫ರಲ್ಲಿ ೪ ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಅಳವಡಿಸಲಾಗಿರುವ ನ್ಯಾಯಾಲಯದ ಆದೇಶದ ಫಲಕ ಧ್ವಂಸಗೊಳಿಸುತ್ತಿರುವುದು. 
    ಭದ್ರಾವತಿ: ಸರ್ಕಾರದಿಂದ ಮಂಜೂರಾಗಿರುವ ಸಾಗುವಳಿ ಜಮೀನನ್ನು ಮೂಲ ಫಲಾನುಭವಿ ದಂಪತಿಗೆ ವಂಚಿಸಿ ದೌರ್ಜನ್ಯ, ದಬ್ಬಾಳಿಕೆ ಹಾಗು ಕುತಂತ್ರದ ಮೂಲಕ ವಶಕ್ಕೆ ಪಡೆಯಲು ಯತ್ನಿಸುತ್ತಿರುವ ಘಟನೆ ನಡೆದಿದ್ದು, ಇದರಿಂದಾಗಿ ಬಡ ಕುಟುಂಬದವರು ಅತಂತ್ರರಾಗಿದ್ದಾರೆ. 
    ತಾಲೂಕಿನ ಹುಳಿಯಾರ್ ರಾಮನಕೊಪ್ಪ ಗ್ರಾಮದ ಸರ್ವೆ ನಂ. ೧೫ರಲ್ಲಿ ೪ ಎಕರೆ ವಿಸ್ತೀರ್ಣದ ಜಮೀನನ್ನು ೨೨ ಮಾರ್ಚ್, ೨೦೧೮ರಲ್ಲಿ ಗ್ರಾಮದ ನಿವಾಸಿ ಕೃಷ್ಣಪ್ಪ ಮತ್ತು ಇವರ ಪತ್ನಿ ಸಣ್ಣಮ್ಮ ಅವರಿಗೆ ಸಾಗುವಳಿಗಾಗಿ ಕೆಲ ಷರತ್ತಿನೊಂದಿಗೆ ಜಂಟಿ ಖಾತೆಯಲ್ಲಿ ಮಂಜೂರು ಮಾಡಿದ್ದು, ಅದರಂತೆ ೨೦೨೪-೨೫ನೇ ಸಾಲಿನ ಪಹಣಿ ಪ್ರತಿಯಲ್ಲೂ ಸಹ ಸ್ಪಷ್ಟವಾಗಿ ನಮೂದಾಗಿದೆ. ಅಲ್ಲದೆ ಪ್ರಸ್ತುತ ಜಮೀನು ಸಾಗುವಳಿ ಮಾಡಲಾಗುತ್ತಿರುತ್ತದೆ. 
    ಈ ನಡುವೆ ಇದೆ ಸರ್ವೆ ನಂ. ಜಮೀನು ವಿಭಾಗಿಸಿ ೧೯೯೬-೯೭ನೇ ಸಾಲಿನಲ್ಲಿ ದರಖಾಸ್ತು ಮೂಲಕ ವೆಂಕಟೇಶ ಅವರಿಗೆ ೩ ಎಕರೆ ಜಮೀನು ಹಾಗು ಇವರ ಪತ್ನಿ ನಂಜಮ್ಮ ಅವರಿಗೆ ೩ ಎಕರೆ ಜಮೀನು ಮಂಜೂರಾತಿ ಮಾಡಲಾಗಿದೆ. ಅಲ್ಲದೆ ೧೯೯೬-೯೭ನೇ ಸಾಲಿನಲ್ಲಿ ಸಾಗುವಳಿ ನೀಡಿ ಪ್ರಸ್ತುತ ಪಹಣಿ ಸಹ ಚಾಲ್ತಿಯಲ್ಲಿದೆ. ಆದರೆ ಮಂಜೂರಾದ ಜಮೀನು ವೆಂಕಟೇಶ್ ಮತ್ತು ಇವರ ಪತ್ನಿ ನಂಜಮ್ಮ ಅವರ ಅನುಭವದಲ್ಲಿ ಇರುವುದಿಲ್ಲ. 
    ಇದೊಂದು ವಿಚಿತ್ರ ಪ್ರಕರಣವಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಪ್ರಕರಣದ ದಾಖಲಾತಿಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಕಾನೂನು ಅಭಿಪ್ರಾಯ ಸೂಚಿಸಿದ್ದು, ಕೃಷ್ಣಪ್ಪ ಮತ್ತು ಇವರ ಪತ್ನಿ ಸಣ್ಣಮ್ಮ ದಂಪತಿ ಜಮೀನಿನ ಜಂಟಿ ಮಾಲೀಕರಾಗಿದ್ದಾರೆಂದು ತಿಳಿಸಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಶಾಶ್ವತ ನಿರ್ಬಂಧಕ ತಡೆಯಾಜ್ಞೆ ನೀಡಿದೆ. 
    ಇದೀಗ ಜಮೀನನ್ನು ದೌರ್ಜನ್ಯ, ದಬ್ಬಾಳಿಕೆ ಹಾಗು ಕುತಂತ್ರದ ಮೂಲಕ ವಶಕ್ಕೆ ಪಡೆಯಲು ಮುಂದಾಗಿದ್ದು, ಇದರಿಂದಾಗಿ ಕೃಷ್ಣಪ್ಪ ಮತ್ತು ಇವರ ಪತ್ನಿ ಸಣ್ಣಮ್ಮ ರಕ್ಷಣೆ ಕೋರಿದ್ದರು. ತಾಲೂಕು ಆಡಳಿತ ದಂಪತಿಗೆ ರಕ್ಷಣೆ ನೀಡಲು ಮುಂದಾಗಿದೆ. ಈ ನಡುವೆ ತಾಲೂಕು ಆಡಳಿತ ಜಮೀನಿನ ಸರ್ವೇ ನಡೆಸಿ ೪ ಎಕರೆ ಜಮೀನು ಗುರುತಿಸಿದೆ. ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ ಕಳೆದ ೩-೪ ದಿನಗಳ ಹಿಂದೆ ಜಮೀನಿನಲ್ಲಿ ಅಳವಡಿಸಲಾಗಿರುವ ನ್ಯಾಯಾಲಯದ ಆದೇಶದ ಫಲಕ ಧ್ವಂಸಗೊಳಿಸಿ ಜೆಸಿಬಿ ಹಾಗು ಟ್ರ್ಯಾಕ್ಟರ್ ಇನ್ನಿತರ ವಾಹನಗಳನ್ನು ಬಳಸಿ ಅಕ್ರಮವಾಗಿ ಜಮೀನು ಪ್ರವೇಶಿಸಿ ದೌರ್ಜನ್ಯ, ದಬ್ಬಾಳಿಕೆ ನಡೆಸಲಾಗಿದೆ. ಇದರಿಂದಾಗಿ ಬಡ ಕುಟುಂಬಕ್ಕೆ ದಾರಿ ದೋಚದಂತಾಗಿದೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಮಧ್ಯ ಪ್ರವೇಶಿಸಿ ನ್ಯಾಯ ದೊರಕಿಸಿ ಕೊಡಬೇಕಾಗಿದೆ.