ಸೋಮವಾರ, ಮಾರ್ಚ್ 24, 2025

ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯ ಕ್ಷೇತ್ರಕ್ಕೆ ಪಾದಯಾತ್ರೆ

ಭದ್ರಾವತಿ ಹಳೇನಗರದ ಗಾಂಧಿನಗರದಲ್ಲಿರುವ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಭಾನುವಾರ ಆಯೋಗಗಳ ನಿರ್ದೇಶಕಿ ಸಿಸ್ಟರ್ ಬರ್ನಿ ಅವರ ನೇತೃತ್ವದಲ್ಲಿ ತಾಲೂಕಿನ ಕಾರೆಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡರು. 
    ಭದ್ರಾವತಿ : ಹಳೇನಗರದ ಗಾಂಧಿನಗರದಲ್ಲಿರುವ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಭಾನುವಾರ ಆಯೋಗಗಳ ನಿರ್ದೇಶಕಿ ಸಿಸ್ಟರ್ ಬರ್ನಿ ಅವರ ನೇತೃತ್ವದಲ್ಲಿ ತಾಲೂಕಿನ ಕಾರೆಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡರು. 
    ೨೦೨೫ ಜ್ಯೂಬಿಲಿ ವರ್ಷವನ್ನು "ಭರವಸೆಯ ಯಾತ್ರಿಗಳ " ವರ್ಷವನ್ನಾಗಿ ಕ್ರೈಸ್ತ ಕಥೋಲಿಕ ಧರ್ಮದ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಧ್ಯವಾದಷ್ಟು ಪುಣ್ಯಕ್ಷೇತ್ರಗಳಿಗೆ ತೆರಳಿ ಪ್ರಾರ್ಥಿಸಲು ಭಕ್ತರಿಗೆ ಕರೆ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಶಿವಮೊಗ್ಗ ಪ್ರಧಾನಾಲಯ ಸೆಕ್ರೆಟ್ ಹಾರ್ಟ್ ದೇವಾಲಯಕ್ಕೆ ಪಾದಯಾತ್ರೆ ಕೈಗೊಂಡಿದ್ದರು. 
    ಇದೀಗ ನಗರ ಪ್ರದೇಶದಿಂದ ಸುಮಾರು ೮ ಕಿ.ಮೀ. ದೂರದಲ್ಲಿರುವ ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಹಳ್ಳಿಯಲ್ಲಿರುವ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಧರ್ಮ ಕೇಂದ್ರದಿಂದ ೨೦೦ಕ್ಕೂ ಅಧಿಕ ಭಕ್ತರು ಕಾಲ್ನಡಿಗೆಯಲ್ಲಿ ಸಾಗಿ ದೇವಾಲಯವನ್ನು ತಲುಪಿದರು ಎಂದು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ ತಿಳಿಸಿದರು. 
    ನಂತರ ಕಾರೆಹಳ್ಳಿ ದೇವಾಲಯದ ಧರ್ಮ ಗುರುಗಳಾದ ಫಾದರ್ ಸಂತೋಷ್ ಅಲ್ಮೇಡರವರಿಂದ ಪ್ರಾರ್ಥನೆ ನೆರವೇರಿತು. 
    ಸಿಸ್ಟರ್ ಗ್ಲಾಡಿಸ್ ಪಿಂಟೋ, ಸಿಸ್ಟರ್ ವಿನ್ಸಿ, ಸಿಸ್ಟರ್ ಶೋಭನ, ಸಿಸ್ಟರ್ ನಿರ್ಮಲ, ಸಿಸ್ಟರ್ ತೆರೇಸಾ, ಸಿಸ್ಟರ್ ಸರಿತಾ, ಸಿಸ್ಟರ್ ಮಂಜು, ಸಿಸ್ಟರ್ ಶಾಲ್ಬಿ, ಸಿಸ್ಟರ್ ಸಿಲ್ಜಿ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.

ಎಚ್.ಎಸ್ ಮಾಯಮ್ಮರವರ ಮೊದಲ ಕೃತಿ `ಮನಸ್ಸು' ಮಾ.೨೫ರಂದು ಬಿಡುಗಡೆ

ಎಚ್.ಎಸ್ ಮಾಯಮ್ಮ ನರಸಿಂಹಮೂರ್ತಿ ಅವರ ಮೊದಲ ಕವನ ಸಂಕಲನ `ಮನಸ್ಸು' ಕೃತಿ ಮುಖ ಪುಟ. 
    ಭದ್ರಾವತಿ : ತಾಲೂಕಿನ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್ ಮಾಯಮ್ಮ ನರಸಿಂಹಮೂರ್ತಿ ಅವರ ಮೊದಲ ಕವನ ಸಂಕಲನ `ಮನಸ್ಸು' ಕೃತಿ ಮಾ.೨೫ರಂದು sಸಂಜೆ ೭ ಗಂಟೆಗೆ ಬಿಡುಗಡೆಗೊಳ್ಳಲಿದೆ. 
    ಶ್ರೀ ಮಾರುತಿ ಕೃಪಾ ಪೋಷಿತ ನಾಟಕ ಮಂಡಳಿ ಸಂಯುಕ್ತಾಶ್ರಯದಲ್ಲಿ ಕುಣಿಗಲ್ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಶಾಸಕ ಎಚ್.ಡಿ ರಂಗನಾಥ್‌ರವರು ಕೃತಿ ಬಿಡುಗಡೆಗೊಳಿಸುತ್ತಿದ್ದಾರೆ. ಮೊದಲ ಕವನ ಸಂಕಲನ `ಮನಸ್ಸು' ಕೃತಿಗೆ ನಗರದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿ ಮುನ್ನುಡಿ ಬರೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಕೃತಿಯನ್ನು ಅಭಿನಂದಿಸಿದ್ದಾರೆ.
    ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ತಾಲೂಕಿನ ಶಿಕ್ಷಕ ವೃಂದ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು ಸೇರಿದಂತೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಭಾನುವಾರ, ಮಾರ್ಚ್ 23, 2025

ಮ್ಯಾಮ್ಕೋಸ್‌ಗೆ ೧೯ ನಿರ್ದೇಶಕರ ಆಯ್ಕೆ : ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು

ಬಿಜೆಪಿ ತಾಲೂಕು ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ  ಜಿ. ಧರ್ಮಪ್ರಸಾದ್ 

ಭದ್ರಾವತಿ ಬಿಜೆಪಿ ಮಂಡಲದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮ್ಯಾಮ್ಕೋಸ್‌ಗೆ ನೂತನವಾಗಿ ಆಯ್ಕೆಯಾದ ೧೯ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
    ಭದ್ರಾವತಿ : ಜಿಲ್ಲೆಯಲ್ಲಿ ನಡೆದ ಮ್ಯಾಮ್ಕೋಸ್ ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿದ ಹಿನ್ನಲೆಯಲ್ಲಿ ೧೯ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಇದು ಸಂಘಟಿತವಾಗಿ ಕಾರ್ಯನಿರ್ವಹಿಸಿದ ಫಲ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು. 
    ಅವರು ಭಾನುವಾರ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮ್ಯಾಮ್ಕೋಸ್‌ಗೆ ನೂತನವಾಗಿ ಆಯ್ಕೆಯಾದ ೧೯ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
    ಪಕ್ಷದ ಪರವಾಗಿ ೧೯ ಅಭ್ಯರ್ಥಿಗಳನ್ನು ಬೆಂಬಲಿಸಿ ಅವರ ಗೆಲುವಿಗೆ ಶಕ್ತಿಮೀರಿ ಶ್ರಮಿಸಲಾಗಿದ್ದು, ಬೆಂಬಲಿಸಿದ ಎಲ್ಲಾ ೧೯ ನಿರ್ದೇಶಕರು ಸಹ ಗೆಲುವು ಸಾಧಿಸಿರುವುದು ಸಂತೋಷದ ಸಂಗತಿಯಾಗಿದೆ. ಇದು ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ಹೆಚ್ಚಿಸಿದೆ ಎಂದರು. 
    ಮ್ಯಾಮ್ಕೋಸ್ ಜಿಲ್ಲಾಧ್ಯಕ್ಷ ಮಹೇಶ್ ಉಲ್ಕುಳಿ ಮಾತನಾಡಿ, ಸಹಕಾರ ಭಾರತಿ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಂತಹ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದೆ. ೧೯ ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತರಾದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಖಂಡರು, ಕಾರ್ಯಕರ್ತರ ಶ್ರಮ ಹೆಚ್ಚಿನದ್ದಾಗಿದೆ ಎಂದರು.  
    ಪಕ್ಷದ  ಜಿಲ್ಲಾ ಉಪಾಧ್ಯಕ್ಷ ಜಿ. ಅನಂದ್ ಕುಮಾರ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಜಿಲ್ಲಾ ವಿಶೇಷ ಆಹ್ವಾನಿತ ಎಚ್. ತೀರ್ಥಯ್ಯ, ಸಹಕಾರ ಭಾರತಿ ಜಿಲ್ಲಾ ನಿರ್ದೇಶಕರಾದ ಕುಪೇಂದ್ರಪ್ಪ, ಕೀರ್ತಿರಾಜ್, ಮಹೇಶ್, ಭೀಮಣ್ಣ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ್, ಸಂಘದ ಪ್ರಮುಖರಾದ ಡಾ. ದತ್ತಾತ್ರೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಪ್ರಸ್ತುತ ಬಗರ್‌ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ : ಸಚಿವ ಮಧು ಬಂಗಾರಪ್ಪ

ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಉದ್ಘಾಟಿಸಿದರು. 
    ಭದ್ರಾವತಿ: ರಾಜ್ಯ ಸರ್ಕಾರ ಎಂದಿಗೂ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ಅವರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಪ್ರಸ್ತುತ ಬಗರ್‌ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. 
    ಅವರು ಭಾನುವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. 
    ಬಗರ್ ಹುಕುಂ ಸಾಗುವಳಿದಾರರಿಗೆ ನೀಡಿರುವ ನೋಟಿಸ್‌ನಿಂದ ಯಾರು ಸಹ ಭಯಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಎದುರಾಗಿರುವ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು. 
    ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವ ಸಂಬಂಧ ಶಾಸಕರು ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ಅವರೊಂದಿಗೆ ನಾನು ಸಹ ಕೈಜೋಡಿಸುತ್ತೇನೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಒಂದು ವೇಳೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸುವ ಅಗತ್ಯವಿದ್ದಲ್ಲಿ ಇದ್ದಕ್ಕೂ ಸಹ ಸಿದ್ದವಿದ್ದೇನೆ ಎಂದರು. 


ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಪಕ್ಷದ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಆದೇಶದಂತೆ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ತಾಲೂಕು ಹಾಗು ಜಿಲ್ಲೆಗಳಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗುತ್ತಿದೆ. ಕ್ಷೇತ್ರದಲ್ಲಿ ಈಗಾಗಲೇ ನಗರಸಭೆ ಆಡಳಿತ ಕಾಂಗ್ರೆಸ್ ಪಕ್ಷದಲ್ಲಿದ್ದು, ಶಾಸಕರ ನೇತೃತ್ವದಲ್ಲಿ ಪಕ್ಷ ಹೆಚ್ಚು ಕ್ರಿಯಾಶೀಲವಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. 
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್ ಕೊಡಲು ಸಾಧ್ಯವಿಲ್ಲ. ಪಕ್ಷ ಯಾರನ್ನು ಆಯ್ಕೆ ಮಾಡುತ್ತವೆಯೋ ಅವರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸಬೇಕು. ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಅವುಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ಕುರಿತು ಮನವರಿಕೆ ಮಾಡಿಕೊಡಬೇಕೆಂದರು. 
    ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರಭೂಪಾಲ, ವೈ. ರೇಣುಕಮ್ಮ, ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ಸಿ.ಎಂ ಖಾದರ್, ಎಸ್. ಮಣಿಶೇಖರ್, ಬಿ.ಎಸ್ ಗಣೇಶ್, ಸುಕನ್ಯ ದಶರಥಗಿರಿ, ಎಚ್. ರವಿಕುಮಾರ್, ನಗರಸಭೆ ಸದಸ್ಯರಾದ ವಿ. ಕದಿರೇಶ್, ಶಶಿಕಲಾ ನಾರಾಯಣಪ್ಪ, ಬಿ.ಟಿ ನಾಗರಾಜ್, ಅಮೀರ್ ಜಾನ್, ಗಂಗಾಧರ್, ಎಂ. ಶಿವಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು. 

ಶನಿವಾರ, ಮಾರ್ಚ್ 22, 2025

ಮಾ.೨೩ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ :  ಮೆಸ್ಕಾಂ ನಗರ /ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ಮಾ.೨೩ರ ಭಾನುವಾರ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಕಾಗದನಗರ, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಹುಡ್ಕೋಕಾಲೋನಿ, ವಿದ್ಯಾಮಂದಿರ, ನ್ಯೂಕಾಲೋನಿ, ಜೆ.ಪಿ.ಎಸ್ ಕಾಲೋನಿ, ಜನ್ನಾಪುರ, ಆನೆಕೊಪ್ಪ ಕುಡಿಯುವ ನೀರಿನ ಸ್ಥಾವರ, ಹೊಸ ಸಿದ್ದಾಪುರ ಕುಡಿಯುವ ನೀರಿನ ಸ್ಥಾವರ, ಬೊಮ್ಮನಕಟ್ಟೆ ಕುಡಿಯುವ ನೀರಿನ ಸ್ಥಾವರ, ಬಾರಂದೂರು, ಭದ್ರಾ ಪ್ಯಾಕೇಟ್ಸ್ ಮಾರ್ಗ, ಮೊಸರಹಳ್ಳಿ, ಕಾರೇಹಳ್ಳಿ, ಬೊಮ್ಮೇನಹಳ್ಳಿ, ಕಾಳಿಂಗನಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಅಂತರಗಂಗೆ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ದೇವರ ನರಸೀಪುರ, ಕೆಂಚಮ್ಮನ ಹಳ್ಳಿ, ಲಕ್ಷ್ಮೀಪುರ, ದೊಣಬಘಟ್ಟ, ಪದ್ಮೇನಹಳ್ಳಿ, ತಡಸ ಹಿರಿಯೂರು, ಕಾಳನಕಟ್ಟೆ, ಕಂಬದಾಳು ಹೊಸೂರು, ಹೊನ್ನಹಟ್ಟಿ ಹೊಸೂರು, ಅರಳಿಕೊಪ್ಪ, ಕಾಚಗೊಂಡನ ಹಳ್ಳಿ, ಗೊಂದಿ, ಗೊಂದಿ ಕುಡಿಯುವ ನೀರಿನ ಸ್ಥಾವರ, ಶ್ರೀನಿವಾಸಪುರ ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಮಾ.೨೩ರಂದು ಸಂಗೀತದಲ್ಲಿ ಸ್ತ್ರೀ ಸಂವೇಧನೆ ವಿನೂತನ ಕಾರ್ಯಕ್ರಮ



    
ಭದ್ರಾವತಿ: ನಗರದ ಭೂಮಿಕಾ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.೨೩ರಂದು ಸಂಜೆ ೬ ಗಂಟೆಗೆ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. 
    ಶಿವಮೊಗ್ಗದ ವಿದುಷಿ ಸುರೇಖಾ ಹೆಗಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದು, ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಪುನೀತ್‌ರಾಜ್‌ಕುಮಾರ್ ನಾಡಿನ ಸಾಂಸ್ಕೃತಿಕ ನಾಯಕ : ಕೋಗಲೂರು ತಿಪ್ಪೇಸ್ವಾಮಿ

ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಶನಿವಾರ ಭದ್ರಾವತಿ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರನ್ನು ಸನ್ಮಾನಿಸಲಾಯಿತು.
    ಭದ್ರಾವತಿ: ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್ ಈ ನಾಡಿನ ಸಾಂಸ್ಕೃತಿಕ ನಾಯಕ ಎಂದು ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಬಣ್ಣಿಸಿದರು. 
    ಅವರು ನಗರದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಶನಿವಾರ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಉದ್ಘಾಟಿಸಿ ಮಾತನಾಡಿದರು. 
  ಅಂದು ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ಇಡೀ ವಿಶ್ವವೇ ಕಂಬನಿ ಮುಡಿದಿತ್ತು. ಅವರೊಬ್ಬ ಧೀಮಂತ ನಾಯಕರಾಗಿ ಇಂದಿಗೂ ಕಂಗೊಳಿಸುತ್ತಿದ್ದಾರೆ. ಅವರಿಲ್ಲದ ೫೦ನೇ ವರ್ಷದ ಹುಟ್ಟುಹಬ್ಬ ಇಂದು ನಮ್ಮೆಲ್ಲರಿಗೂ ಸಂಕಟದ ದಿನವಾಗಿದೆ. ನಿಜ ಜೀವನದ ಒಬ್ಬ ನಾಯಕನಾಗಿ, ಸೇವಕನಾಗಿ ನಮ್ಮೆಲ್ಲರಿಗೂ ಭೂತಕಾಲ, ವರ್ತಮಾನ ಕಾಲ ಹಾಗು ಭವಿಷ್ಯ ಕಾಲ ೩ ಕಾಲಕ್ಕೂ ಒಪ್ಪುವಂತಹ ಎಂದೆಂದಿಗೂ ಏಕೈಕ ಆದರ್ಶ ವ್ಯಕ್ತಿ ಪುನೀತ್ ರಾಜ್‌ಕುಮಾರ್ ಎಂದರೆ ತಪ್ಪಾಗಲಾರದು. ಇಂತಹ ಮಹಾನ್ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕಲಾವಿದರು ಇವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.  
    ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜವಿಕ್ರಂ, ಹಿರಿಯ ಕಲಾವಿದ ಜೆ.ಪಿ ನಂಜುಂಡೇಗೌಡ ಹಾಗು ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜ್  ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.  
    ವಿಶೇಷವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. 
    ಸಂಘದ ಪದಾಧಿಕಾರಿಗಳು, ಕಲಾವಿದರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕಲಾವಿದರಿಂದ ಪುನೀತ್‌ರಾಜ್‌ಕುಮಾರ್ ಚಲನಚಿತ್ರ ಗೀತೆಗಳ ಗಾಯನ ನಡೆಯಿತು.