ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ
ಭದ್ರಾವತಿ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಹಾಗು ಶ್ರೀ ಸತ್ಯ ಸಾಯಿ ಶಾಲಾ ಸಮಿತಿ ವತಿಯಿಂದ ಉಚಿತ ಕುಡಿಯುವ ನೀರಿನ ಸೇವೆ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ವ್ಯವಸ್ಥಾಪಕ ಕೃಷ್ಣಮೂರ್ತಿ ಚಾಲನೆ ನೀಡಿದರು.
ಭದ್ರಾವತಿ : ಶ್ರೀ ಸತ್ಯಸಾಯಿ ಬಾಬಾರವರ ಪ್ರೇರಣೆಯಿಂದ ಪ್ರತಿ ವರ್ಷ ಬೇಸಿಗೆಯಲ್ಲಿ ಪ್ರಯಾಣಿಕರಿಗೆ ಉಚಿತ ಕುಡಿಯುವ ನೀರಿನ ಸೇವೆ ಮಾಡುತ್ತಿದ್ದು, ಈ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಭಕ್ತರು ಪಾಲ್ಗೊಂಡು ಯಶಸ್ವಿಗೆ ಸಹಕರಿಸುತ್ತಿದ್ದಾರೆ. ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯ ಮೈಗೂಡಿಸಿಕೊಳ್ಳಬೇಕೆಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಹೇಳಿದರು.
ಅವರು ಮಂಗಳವಾರ ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಹಾಗು ಶ್ರೀ ಸತ್ಯ ಸಾಯಿ ಶಾಲಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಕುಡಿಯುವ ನೀರಿನ ಸೇವೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಬಾಬಾರವರ ಪ್ರೇರಣೆಯಿಂದ ಪ್ರತಿದಿನ ಹಲವಾರು ಸೇವಾ ಕಾರ್ಯಗಳು ನಡೆಯುತ್ತಿವೆ. ಈ ಪೈಕಿ ಉಚಿತ ಕುಡಿಯುವ ನೀರಿನ ಸೇವೆ ಸಹ ಒಂದಾಗಿದೆ. ೧೯೮೫ರಿಂದ ನಿರಂತರವಾಗಿ ಈ ಸೇವಾ ಕಾರ್ಯ ನಡೆಸಲಾಗುತ್ತಿದ್ದು, ೪೧ನೇ ವರ್ಷದ ಸೇವಾ ಕಾರ್ಯ ಇದಾಗಿದೆ. ಮಹಿಳೆಯರು, ಪುರುಷರು ಹಾಗು ಯುವ ಸಮುದಾಯದವರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದು, ಈ ಕಾರ್ಯಕ್ಕೆ ಸಹಕರಿಸುತ್ತಿರುವ ಪ್ರತಿಯೊಬ್ಬರಿಗೂ ಬಾಬಾರವರು ಒಳ್ಳೆಯದನ್ನು ಮಾಡಲಿ ಎಂದರು.
ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ಕೃಷ್ಣಮೂರ್ತಿ ಉಚಿತ ಕುಡಿಯುವ ನೀರಿನ ಸೇವೆಗೆ ಚಾಲನೆ ನೀಡಿದರು.
ಪ್ರಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಸೌಮ್ಯ ಪ್ರಭಾಕರ ಬೀರಯ್ಯ, ರಾಮಕೃಷ್ಣಯ್ಯ, ಸಂತೋಷ್ ವರ್ಣೇಕರ್, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ ಸೇರಿದಂತೆ ಶಿಕ್ಷಕ ವೃಂದದವರು, ಸೇವಾಕರ್ತರು ಉಪಸ್ಥಿತರಿದ್ದರು.