Saturday, May 3, 2025

ಅಭಿವೃದ್ಧಿ ವೇದಿಕೆಯಿಂದ ಕಾರ್ಮಿಕರ ದಿನಾಚರಣೆ

ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಭದ್ರಾವತಿ ಕ್ಷೇತ್ರ ಅಭಿವೃದ್ಧಿ ವೇದಿಕೆ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.  ಕಾರ್ಮಿಕ ಮುಖಂಡರಾದ ಶಿವಮೂರ್ತಿ, ಅಡವೀಶಯ್ಯ, ಜಿ.ಟಿ ಬಸವರಾಜ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.  
    ಭದ್ರಾವತಿ : ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಭದ್ರಾವತಿ ಕ್ಷೇತ್ರ ಅಭಿವೃದ್ಧಿ ವೇದಿಕೆ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. 
    ಹಿರಿಯ ಸಹಕಾರಿ ಧುರೀಣ, ಅಭಿವೃದ್ಧಿ ವೇದಿಕೆ ಅಧ್ಯಕ್ಷ  ಜಿ.ಟಿ ಬಸವರಾಜ್ ಸಭೆ ಅಧ್ಯಕ್ಷತೆ ವಹಿಸಿದ್ದರು. ಎಂಪಿಎಂ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಶಿವಮೂರ್ತಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಹಾಗು ಕಾರ್ಖಾನೆಗಳ ಸ್ಥಿತಿಗತಿಗಳ ಕುರಿತು ವಿವರವಾಗಿ ತಿಳಿಸಿದರು.
    ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಉಪಾಧ್ಯಕ್ಷ ಅಡವಿಶಯ್ಯ, ಕ್ಷೇತ್ರದಲ್ಲಿ ಕಾರ್ಮಿಕರು ಎದುರಿಸುತ್ತಿರುವ ಶೋಚನೀಯ ಸ್ಥಿತಿ ಹಾಗು ವಿಐಎಸ್‌ಎಲ್ ಕಾರ್ಖಾನೆಯ ವಸತಿ ಗೃಹಗಳ ಬಗ್ಗೆ, ಆಡಳಿತ ವರ್ಗ ಮನೆ ಬಾಡಿಗೆ ಹಣ ಹೆಚ್ಚು ಮಾಡುತ್ತಿರುವ ಕುರಿತು ಮಾತನಾಡಿದರು. ನಾಗೇಶ್ ಕಾರ್ಮಿಕರ ದಿನಾಚರಣೆ ಹಿನ್ನಲೆಯನ್ನು ವಿವರಿಸಿದರು. 
    ನಗರಸಭೆ ಸದಸ್ಯ ಕಾಂತರಾಜ್, ನ್ಯಾಯವಾದಿ ಎಂ. ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಲಾವಿದ ಜಂಬೂಸ್ವಾಮಿ ಪ್ರಾರ್ಥಿಸಿ, ಹಿರಿಯ ಕಾರ್ಮಿಕ ಮುಖಂಡ ಡಿ. ನರಸಿಂಹಮೂರ್ತಿ ಸ್ವಾಗತಿಸಿದರು. ಕೆ.ಜೆ ಹನುಮಂತಯ್ಯ ವಂದಿಸಿದರು. 

ಎಸ್‌ಎಸ್‌ಎಲ್‌ಸಿ ಫಲಿತಾಂಶ ತಾಲೂಕಿಗೆ ೬ನೇ ಸ್ಥಾನ : ೧೭ ಶಾಲೆಗಳಿಗೆ ಶೇ.೧೦೦ ಫಲಿತಾಂಶ

ವಸತಿ ಶಾಲೆಯ ಪಿ. ಸಿಂಚನ ೬೨೦, ಎ.ಪಿ ಅಭಿಷೇಕ್ ೬೧೯ ಅಂಕ : ಎ.ಕೆ ನಾಗೇಂದ್ರಪ್ಪ 

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ 
    ಭದ್ರಾವತಿ : ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು ೪,೦೩೮ ವಿದ್ಯಾರ್ಥಿಗಳು ಹಾಜರಿದ್ದು, ಈ ಪೈಕಿ ೩,೧೧೦ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ತಾಲೂಕಿಗೆ ಶೇ.೭೭.೦೨ ಫಲಿತಾಂಶ ಲಭಿಸಿದ್ದು, ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ತಿಳಿಸಿದ್ದಾರೆ. 
    ಕಳೆದ ಬಾರಿ ಜಿಲ್ಲೆಯಲ್ಲಿ ೭ನೇ ಸ್ಥಾನ ಪಡೆದುಕೊಳ್ಳಲಾಗಿದ್ದು, ಈ ಬಾರಿ ೬ನೇ ಸ್ಥಾನ ಲಭಿಸಿದೆ. ಈ ಬಾರಿ ಒಟ್ಟು ೯೨೮ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ತಾಲೂಕಿನಲ್ಲಿ ಒಟ್ಟು ೧೧೨ ವಿದ್ಯಾರ್ಥಿಗಳು ೬೦೦ಕ್ಕಿಂತ ಹೆಚ್ಚಿನ ಅಂಕ ಪಡೆದುಕೊಂಡಿದ್ದಾರೆ. 
    ನಗರಸಭೆ ವ್ಯಾಪ್ತಿಯ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪ್ರೌಢಶಾಲೆ ವಿದ್ಯಾರ್ಥಿನಿ ಸಿ. ಮಾನ್ಯ, ಲೋಯರ್ ಹುತ್ತಾ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ನೂರ್ ತೈಬಾ, ಪ್ರೇಕ್ಷಾ ಎಸ್. ಖಾಡ್ಗಡ್, ಸಾನಿಕಾ ಪಿ. ದೇವಾಂಗಮಠ್ ಮತ್ತು ಬಿ.ಎಸ್ ನಾಗಶ್ರೀ ೬೨೫ಕ್ಕೆ ೬೨೧ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. 
    ಪೂರ್ಣಪ್ರಜ್ಞ ವಿದ್ಯಾಂಸ್ಥೆಯ ಪ್ರತೀಶ್ ಬಡಿಗೇರ್ ಮತ್ತು ನಿಕ್ಷಿತ್ ಎನ್. ರಾಜ್  ೬೨೦ ಅಂಕ ಪಡೆದಿದ್ದು, ಉಳಿದಂತೆ ಸರ್ಕಾರಿ ಶಾಲೆಗಳ ಪೈಕಿ ತಾಲೂಕಿನ ಕನಸಿಕಟ್ಟೆ ಅಂಬೇಡ್ಕರ್ ವಸತಿ ಶಾಲೆಯ ಪಿ. ಸಿಂಚನ ೬೨೦ ಅಂಕ, ದೊಡ್ಡೇರಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಎ.ಪಿ ಅಭಿಷೇಕ ೬೧೯ ಅಂಕ, ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಪಿ. ಪ್ರತೀಕ್ಷಾ ೬೦೮ ಅಂಕ, ಸನ್ಯಾಸಿ ಕೋಡಮಗ್ಗಿ ಸರ್ಕಾರಿ ಪ್ರೌಢಶಾಲೆಯ ಡಿ.ಆರ್ ಕೃತಿಕ ೬೦೨ ಮತ್ತು ಅಂತರಗಂಗೆ ಕರ್ನಾಟಕ ಪಬ್ಲಿಕ್ ಶಾಲೆಯ ಕೆ.ಎಂ ರಕ್ಷಾ ೬೦೦ ಅಂಕ ಪಡೆದುಕೊಂಡಿದ್ದಾರೆ ಎಂದರು. 
    ಪ್ರತಿ ವಿಷಯದಲ್ಲಿ ಕನ್ನಡ ೯೩, ಸಂಸ್ಕೃತ ೮, ಆಂಗ್ಲ ೨೯, ಹಿಂದಿ ೧೩೮, ಗಣಿತ ೧೭, ವಿಜ್ಞಾನ ೧೭ ಮತ್ತು ಸಮಾಜ ವಿಜ್ಞಾನ ೪೩ ವಿದ್ಯಾರ್ಥಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಜಿಲ್ಲೆಯಲ್ಲಿಯೇ ಪ್ರಥಮ ತಾಲೂಕಿನ ೧೭ ಪ್ರೌಢಶಾಲೆಗಳು ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿವೆ ಎಂದರು. 

ಅಪ್ಪನ ಧೈರ್ಯ, ಶಿಕ್ಷಕರ ಮಾರ್ಗದರ್ಶನ, ನಿರಂತರ ಪರಿಶ್ರಮ

ರೈತನ ಮಗನಿಗೆ ೬೨೫ಕ್ಕೆ ೬೧೫ ಅಂಕ 

೬೨೫ಕ್ಕೆ ೬೧೫ ಅಂಕ ಪಡೆದಿರುವ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಿತಿನ್‌ಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕುಟುಂಬಸ್ಥರು, ಗ್ರಾಮಸ್ಥರು ನಿತಿನ್‌ಗೆ ಸಿಹಿ ತಿನಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. 
    ಭದ್ರಾವತಿ : ಅಪ್ಪ ಕೊಟ್ಟ ಧೈರ್ಯ, ಶಿಕ್ಷಕರ ಮಾರ್ಗದರ್ಶನ, ನಿರಂತರ ಪರಿಶ್ರಮ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಪಡೆಯಲು ಸಾಧ್ಯವಾಯಿತು ಎಂದು ೬೨೫ಕ್ಕೆ ೬೧೫ ಅಂಕ ಪಡೆದಿರುವ ತಾಲೂಕಿನ ಹಂಚಿನ ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಿತಿನ್ ಫಲಿತಾಂಶ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ್ದು, ಈ ನಡುವೆ ರೈತನ ಮಗನ ಸಾಧನೆಗೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ. 
    ನಿತಿನ್ ತನ್ನ ಯಶಸ್ಸಿನ ಹಿಂದಿನ ರಹಸ್ಯ ಹಂಚಿಕೊಳ್ಳುತ್ತಾ ಪ್ರತಿದಿನ ಕನಿಷ್ಠ ೫ ರಿಂದ ೬ ಗಂಟೆ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದು, ಪಠ್ಯಪುಸ್ತಕಗಳ ಜೊತೆಗೆ ಹೆಚ್ಚುವರಿ ಪ್ರಶ್ನೆಪತ್ರಿಕೆಗಳು, ಶಿಕ್ಷಕರ ಮಾರ್ಗದರ್ಶನ ಹಾಗೂ ವಸತಿ ಶಾಲೆಯ ಶಾಂತಿಯುತ ಪರಿಸರ ಪ್ರತಿ ಬಾರಿ ಮಾಡುವ ಚಟುವಟಿಕೆಗೆ, ನನ್ನ ಸಾಧನೆಗೆ ಕಾರಣಗಳಾದವು. ವಿಶೇಷವಾಗಿ ಶಾಲಾ ಶಿಕ್ಷಕರ ಪ್ರೋತ್ಸಾಹ ಹಾಗೂ ಪೋಷಕರ ಬೆಂಬಲ ಅಪ್ಪನ ಧೈರ್ಯ ನನಗೆ ಪರೀಕ್ಷೆ ಸುಲಭವಾಗಿ ಎದುರಿಸಲು ಕಾರಣವಾಯಿತು. ಪರೀಕ್ಷೆಯ ಸಮಯದಲ್ಲಿ ಆತ್ಮವಿಶ್ವಾಸ ಕಳೆದುಕೊಂಡಿಲ್ಲ. ಅದರಲ್ಲೂ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಕಲಿಕೆಯಲ್ಲಿ ಹಗಲು ರಾತ್ರಿ ಹೆಚ್ಚಿನ ಶ್ರಮವಹಿಸಿದ ಪರಿಣಾಮ ಹೆಚ್ಚಿನ ಪಡೆಯಲು ಸಾಧ್ಯವಾಯಿತು ಎಂದರು.   
    ನಿತಿನ್ ತಾಲೂಕಿನ ಕಲ್ಪನಹಳ್ಳಿ ತಾಂಡದ ರೈತ ಹಾಲೇಶ್ವರನಾಯ್ಕ ಮಗನಾಗಿದ್ದು, ಮಗನ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕುಟುಂಬಸ್ಥರು, ಗ್ರಾಮಸ್ಥರು ನಿತಿನ್‌ಗೆ ಸಿಹಿ ತಿನಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. 
 

Friday, May 2, 2025

ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಬಿ.ಎ ಮಂಜುನಾಥ್‌ಗೆ ಗೆಳೆಯರ ಬಳಗದಿಂದ ಅಭಿನಂದನಾ ಕಾರ್ಯಕ್ರಮ

ಮೇ.೪ರಂದು ಲಯನ್ಸ್ ಕ್ಲಬ್ ಶುಗರ್ ಟೌನ್ ಸಭಾಂಗಣದಲ್ಲಿ ಸ್ನೇಹ ಸಮ್ಮಿಲನ ಸಂಭ್ರಮ  

ಬಿ.ಎ ಮಂಜುನಾಥ್    
    ಭದ್ರಾವತಿ : ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸುಮಾರು ೩೯ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಬಿ.ಎ ಮಂಜುನಾಥ್‌ರವರಿಗೆ ಗೆಳೆಯರ ಬಳಗದ ವತಿಯಿಂದ ಸ್ನೇಹ ಸಮ್ಮಿಲನ ಸಂಭ್ರಮ ಕಾರ್ಯಕ್ರಮ ಮೇ.೪ರ ಭಾನುವಾರ ನಗರದ ಜೆಟಿಎಸ್ ಶಾಲೆ ಸಮೀಪದಲ್ಲಿರುವ ಲಯನ್ಸ್ ಕ್ಲಬ್ ಶುಗರ್ ಟೌನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಮಂಜುನಾಥ್‌ರವರು ನಗರದ ಸರ್.ಎಂ.ವಿ ಕಲಾ ಮತ್ತು ವಾಣಿಜ್ಯ ಕಾಲೇಜು, ಶ್ರೀ ಕೃಷ್ಣ ಕಾಲೇಜು, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗು ತರೀಕೆರೆ ಸರ್ಕಾರಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಒಟ್ಟು  ೩೯ ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಏ.೩೦ರಂದು ನಿವೃತ್ತಿ ಹೊಂದಿದ್ದಾರೆ. 
    ಮಂಜುನಾಥ್‌ರವರು ಸರ್ಕಾರಿ ವೃತ್ತಿ ಬದುಕಿನ ಜೊತೆಗೆ ಗಾಯಕರಾಗಿ ಗುರುತಿಸಿಕೊಂಡಿದ್ದು, ತಮ್ಮದೇ ಗಾಯಕರ ತಂಡವನ್ನು ಕಟ್ಟಿಕೊಂಡು ರಾಜ್ಯದ ವಿವಿಧೆಡೆ ಕಾರ್ಯಕ್ರಮಗಳನ್ನು ನೀಡುವ ಮೂಲಕ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.  ಪ್ರಸ್ತುತ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷರಾಗಿದ್ದಾರೆ. 
    ಇವರ ಸರ್ಕಾರಿ ಸೇವೆಯ ಸಾರ್ಥಕ ಬದುಕನ್ನು ಗುರುತಿಸಿ ಗೆಳೆಯರ ಬಳಗ ವಿಶಿಷ್ಟವಾಗಿ ಅಭಿನಂದಿಸಲು ಮುಂದಾಗಿದೆ. ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಮುಖಂಡರು, ಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೆಳೆಯರ ಬಳಗ ಕೋರಿದೆ.

ತರಂಗ ಕಿವುಡು ಮಕ್ಕಳ ಶಾಲೆಗೆ ಶೇ.೧೦೦ ಫಲಿತಾಂಶ

ಭದ್ರಾವತಿ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ 
    ಭದ್ರಾವತಿ : ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಳ್ಳುವ ಮೂಲಕ ಗಮನ ಸೆಳೆದಿದೆ. 
    ಈ ಬಾರಿ ಪರೀಕ್ಷೆ ಎದುರಿಸಿದ ಶಾಲೆಯ ೮ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ೬ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗು ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಲಭಿಸಿದೆ. 
    ವಿಕಲಚೇತನ ವಿದ್ಯಾರ್ಥಿಗಳ ಸಾಧನೆಗೆ ಟ್ರಸ್ಟ್ ಆಡಳಿತ ಮಂಡಳಿ, ಲಯನ್ಸ್ ಕ್ಲಬ್ ಶುಗರ್ ಟೌನ್-ಲಯನ್ಸ್ ಎಜುಕೇಷನ್ ಟ್ರಸ್ಟ್ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು, ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆಂದು ಟ್ರಸ್ಟ್ ಕಾರ್ಯದರ್ಶಿ ಎಸ್.ಎನ್ ಸುಭಾಷ್ ತಿಳಿಸಿದ್ದಾರೆ.  

ಮಾಜಿ ಸೈನಿಕರ ಪುತ್ರ ಬಿ.ಎಸ್ ಇಶಾಂತ್ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಬಿ.ಎಸ್ ಇಶಾಂತ್ 
 ಭದ್ರಾವತಿ: ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ(ಎಸ್‌ಎವಿ)ಯ ಪ್ರೌಢಶಾಲೆ ವಿದ್ಯಾರ್ಥಿ ಬಿ.ಎಸ್ ಇಶಾಂತ್ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶೇ.೯೬ ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 
    ಒಟ್ಟು ೬೨೫ಕ್ಕೆ ೫೯೮ ಅಂಕಗಳನ್ನು ಪಡೆದುಕೊಂಡಿದ್ದು, ಸಾಮಾಜಿಕ ವಿಜ್ಞಾನ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಇಶಾಂತ್ ಕಡದಕಟ್ಟೆ ನಿವಾಸಿ, ಮಾಜಿ ಸೈನಿಕ(ಪ್ರಸ್ತುತ ಕೆಎಸ್‌ಆರ್‌ಟಿಸಿ ನೌಕರ) ಬಿ.ಟಿ ಸತೀಶ್ ಹಾಗು ಎಸ್. ಇಂದಿರ ದಂಪತಿ ಪುತ್ರರಾಗಿದ್ದಾರೆ.  ಭಂಡಾರಹಳ್ಳಿ ನಿವಾಸಿ, ಪ್ರಗತಿಪರ ಕೃಷಿಕ ಶ್ರೀಧರ್ ಸೇರಿದಂತೆ ಸ್ಥಳೀಯರು ಇಶಾಂತ್ ಅವರನ್ನು ಅಭಿನಂದಿಸಿದ್ದಾರೆ. 

ನಂಜುಂಡೇಗೌಡರಿಗೆ ಪವರ್‌ಲಿಫ್ಟಿಂಗ್‌ನಲ್ಲಿ ಚಿನ್ನ ಪದಕ



ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ, ಪವರ್‌ಲಿಫ್ಟರ್ ನಂಜುಂಡೇಗೌಡರವರು ಕರ್ನಾಟಕ ರಾಜ್ಯ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್  ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕದೊಂದಿಗೆ ಎಂ-೩ ಕ್ಲಾಸಿಕ್ ಬೆಸ್ಟ್ ಲಿಫ್ಟರ್-೨೦೨೫ ಬಿರುದು ತಮ್ಮದಾಗಿಸಿಕೊಂಡಿದ್ದಾರೆ. 
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ, ಪವರ್‌ಲಿಫ್ಟರ್ ನಂಜುಂಡೇಗೌಡರವರು ಕರ್ನಾಟಕ ರಾಜ್ಯ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್  ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. 
    ಬೆಂಗಳೂರಿನ ಕಬ್ಬನ್ ಪಾರ್ಕ್, ಕೆಜಿಎಸ್ ಕ್ಲಬ್‌ನಲ್ಲಿ ಏ.೨೬ ರಿಂದ ೨೮ರವರೆಗೆ ಜರುಗಿದ ಪಂದ್ಯಾವಳಿಯಲ್ಲಿ  ಭಾಗವಹಿಸಿ ಪವರ್‌ಲಿಫ್ಟಿಂಗ್ ಸ್ಪಧೆಯಲ್ಲಿ ಚಿನ್ನದ ಪದಕದೊಂದಿಗೆ ಎಂ-೩ ಕ್ಲಾಸಿಕ್ ಬೆಸ್ಟ್ ಲಿಫ್ಟರ್-೨೦೨೫ ಬಿರುದು ಪಡೆದುಕೊಂಡಿದ್ದಾರೆ. ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 
    ರಾಷ್ಟ್ರೀಯ ತೀರ್ಪುಗಾರ ಮಹೇಶ್ವರಯ್ಯ ಪ್ರಶಸ್ತಿ ವಿತರಿಸಿದರು. ತರಬೇತಿದಾರ ಪ್ರಕಾಶ್‌ಕಾರಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರು, ಕ್ರೀಡಾಪಟುಗಳು ನಂಜುಂಡೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.