Wednesday, May 21, 2025

ಎಎಸ್‌ಐ ಶಿವಸ್ವಾಮಿಗೆ ಕಮಾಂಡೇಷನ್ ಡಿಸ್ಕ್ ಪದಕ

ಎಂ.ಎನ್ ಶಿವಸ್ವಾಮಿ

    ಭದ್ರಾವತಿ : ನಗರದ ನ್ಯೂಟೌನ್ ಠಾಣೆ ಸಹಾಯಕ ಉಪ ನಿರೀಕ್ಷಕ(ಎಎಸ್‌ಐ) ಎಂ.ಎನ್ ಶಿವಸ್ವಾಮಿ ಅವರಿಗೆ ಈ ಬಾರಿ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾನಿರೀಕ್ಷಕರು ಕರ್ನಾಟಕ ರಾಜ್ಯರವರ ೨೦೨೪-೨೫ನೇ ಸಾಲಿನ ಪ್ರಸಂಶನಾ ಪ್ರಶಸ್ತಿ(ಕಮಾಂಡೇಷನ್ ಡಿಸ್ಕ್) ಪದಕ ಲಭಿಸಿದೆ.
    ಸುಮಾರು ೨೯ ವರ್ಷಗಳಿಂದ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಸ್ವಾಮಿಯವರು ಈ ಹಿಂದೆ ೨೦೧೭ರಲ್ಲಿ ಇಲಾಖೆಯ ಅತ್ಯುನ್ನತ ಮುಖ್ಯಮಂತ್ರಿ ಪದಕ ಪಡೆದುಕೊಂಡಿದ್ದರು. ಇದೀಗ ಇವರ ವೃತ್ತಿ ಸೇವಾವಧಿಯಲ್ಲಿನ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    ಕಾನ್‌ಸ್ಟೇಬಲ್ ಹುದ್ದೆಗೆ ಸೇರ್ಪಡೆಗೊಂಡ ಶಿವಸ್ವಾಮಿಯವರು ದಬೇದಾರ್ ಹುದ್ದೆ ಮುಂಬಡ್ತಿ ಹೊಂದಿ ಶಿವಮೊಗ್ಗ ಜಯನಗರ, ತುಂಗಾನಗರ, ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿ ಹಾಗು ರಾಜ್ಯ ಗುಪ್ತದಳದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಮೂರುವರೆ ವರ್ಷಗಳ ಹಿಂದೆ ಸಹಾಯಕ ಉಪ ನಿರೀಕ್ಷಕರಾಗಿ ಮುಂಬಡ್ತಿ ಪಡೆದು ನ್ಯೂಟೌನ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 
    ಕ್ರಿಕೆಟ್ ಆಟಗಾರ, ತೀರ್ಪುಗಾರ: 
    ಶಿವಸ್ವಾಮಿಯವರು ಕ್ರಿಕೆಟ್ ಆಟಗಾರರು ಹಾಗು ತೀರ್ಪುಗಾರರಾಗಿದ್ದಾರೆ. ಕಳೆದ  ಸುಮಾರು ೨೩ ವರ್ಷಗಳಿಂದ ೨೦೦೨ರಿಂದ ಕ್ರಿಕೆಟ್ ಆಟದ ಜೊತೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ತೀರ್ಪುಗಾರರಾಗಿದ್ದಾರೆ. 
    ಶಿವಸ್ವಾಮಿಯವರಿಗೆ ಪೊಲೀಸ್ ಉಪ ಅಧೀಕ್ಷಕರು, ವೃತ್ತ ನಿರೀಕ್ಷಕರು, ಠಾಣಾ ಉಪ ನಿರೀಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Tuesday, May 20, 2025

ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಓಕುಳಿ ಉತ್ಸವ

ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸ್ವಾಮಿಯ ೧೦ನೇ ವರ್ಷದ ಮಹಾರಥೋತ್ಸವ ಅಂಗವಾಗಿ ಮಂಗಳವಾರ ಓಕುಳಿ ಉತ್ಸವ ವಿಜೃಂಭಣೆಯಿಂದ ಜರಗಿತು.
    ಭದ್ರಾವತಿ : ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸ್ವಾಮಿಯ ೧೦ನೇ ವರ್ಷದ ಮಹಾರಥೋತ್ಸವ ಅಂಗವಾಗಿ ಮಂಗಳವಾರ ಓಕುಳಿ ಉತ್ಸವ ವಿಜೃಂಭಣೆಯಿಂದ ಜರಗಿತು.
    ಬೆಳಿಗ್ಗೆ ಯಾತ್ರಾ ಹೋಮ, ವಾರುಣ ಹೋಮ, ಅವಭೃತ ಸ್ನಾನ, ಸಂಜೆ ಧ್ವಜಾವರೋಹಣ, ರಂಗಪೂಜೆ, ದೀಪೋತ್ಸವ, ರಾಷ್ಟ್ರಾಶೀರ್ವಾದ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ಮಧ್ಯಾಹ್ನ ೧೨ ಗಂಟೆಗೆ ದೇವಸ್ಥಾನದಿಂದ ಭಕ್ತರು ಹಾಗು ಭಜನಾ ತಂಡಗಳೊಂದಿಗೆ ಸ್ವಾಮಿಯನ್ನು ಓಕುಳಿ ಉತ್ಸವಕ್ಕೆ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿಗೆ ಕರೆದೊಯ್ಯಲಾಯಿತು.
    ದೇವಸ್ಥಾನದ ಪ್ರಧಾನ ಅರ್ಚಕರಾದ ಪವನ್ ಕುಮಾರ್ ಉಡುಪ, ಚಂದ್ರಶೇಖರ್ ಉಡುಪ, ರಮಾನಂದ ಭಟ್, ಸೂರಜ್ ಭಟ್, ಸುಬ್ರಮಣ್ಯ ಭಟ್, ಅಜಯ್ ಭಟ್, ಗುರುರಾಜ ಭಟ್ ಸೇರಿದಂತೆ ಇನ್ನಿತರ ಪುರೋಹಿತರು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು. 
    ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಜಿ. ರಮಾಕಾಂತ್, ವಿಜಯ್, ಚಂದನ್, ಇಶಾನ್, ನಂದನ್,  ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೆ. ನರಸಿಂಹಮೂರ್ತಿ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

ಮೇ.೨೬ರಂದು ನಿವೃತ್ತ ನ್ಯಾಯಮೂರ್ತಿ ಡಾ. ಎಸ್.ಆರ್ ನಾಯಕ್‌ರವರ ಶ್ರದ್ದಾಂಜಲಿ ಸಭೆ

ಭದ್ರಾವತಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿದರು. 
    ಭದ್ರಾವತಿ:  ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಾ. ಎಸ್.ಆರ್ ನಾಯಕ್ ರವರ ನಿಧನಕ್ಕೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮೇ.೨೬ರಂದು ರಂದು ಸಂಜೆ ೫ ಗಂಟೆಗೆ ಬಿ.ಎಚ್ ರಸ್ತೆ, ತಿಮ್ಮಯ್ಯ ಮಾರ್ಕೆಟ್ ಮುಂಭಾಗದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಏರ್ಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎನ್ ರಾಜು ತಿಳಿಸಿದರು. 
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಡ ಜನರು, ರೈತರು ಮತ್ತು ಕಾರ್ಮಿಕರ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿಗಳಾಗಿ, ರಾಜ್ಯ ಮಾನವ ಹಕ್ಕುಗಳ ಅಯೋಗ ಮತ್ತು ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿರುವ ಎಸ್.ಆರ್ ನಾಯಕ್‌ರವರು ಮೇ.೧೮ರಂದು ನಿಧನರಾಗಿದ್ದು, ಇವರಿಗೆ ರಾಜ್ಯದ ಜನರ ಪರವಾಗಿ ಮನವಹಕ್ಕುಗಳ ಹೋರಟ ಸಮಿತಿಯಿಂದ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದರು. 
    ಬಡ ಕುಟುಂಬದ ಡಾ.ಎಸ್ ಆರ್. ನಾಯಕ್‌ರವರು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ನಂತರ ಉನ್ನತ ಪದವಿಯೊಂದಿಗೆ ಜಿಲ್ಲಾ ನ್ಯಾಯಧೀಶರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಾಮಾಣಿಕವಾಗಿ ಕರ್ತವ್ಯ ಸಲ್ಲಿಸಿ ಬಡ ಜನರ ಸೇವೆ ಮತ್ತು ಭಾರತ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆದುಕೊಂಡ ಅಪರೂಪದ ವ್ಯಕ್ತಿ ಎಂದರು. 
    ೨೦೦೭ರಲ್ಲಿ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ನಂ. ೧ ಸ್ಥಾನ ಪಡೆಯಲು ಮುಖ್ಯ ಕಾರಣ ಡಾ.ಎಸ್.ಆರ್ ನಾಯಕ್.  ಅವರು ಬಡವರ ಬಗ್ಗೆ ಹೆಚ್ಚು ಕಾಳಜಿ ಇಟ್ಟು ಅನೇಕ ಪ್ರಕರಣಗಳಲ್ಲಿ ಕೇವಲ ಟಿ.ವಿ ನ್ಯೂಸ್ ಮೂಲಕ ದೂರು ದಾಖಲಿಸಿ ಸಾಮಾನ್ಯ ಜನರಿಗೆ ನ್ಯಾಯ ಒದಗಿಸಿದ್ದು ಮರಿಯುವಂತಿಲ್ಲ. ಮಾನವ ಹಕ್ಕುಗಳು ಎಂಬ ಶಬ್ದವೇ ರಾಜ್ಯದಲ್ಲಿ ಮತ್ತು ದೇಶದಲ್ಲಿ ಪ್ರಖ್ಯಾತಿ ಪಡೆಯಲು ಡಾ. ಎಸ್ ಆರ್ ನಾಯಕ್ ರವರು ರಾಜ್ಯದ ಉದ್ದಗಲಕ್ಕೂ ಪದೇ ಪದೇ ಪ್ರವಾಸ ಮಾಡಿ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಿದ್ದು ಕಾರಣವಾಗಿದೆ. ೨೦೧೦ರಲ್ಲಿ ತಿಮ್ಮಯ್ಯ ಮಾರ್ಕೆಟ್ ಅಕ್ರಮ ನೆಲ ಸಮ ಮಾಡಿ ಅಲ್ಲಿನ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಪ್ರಕರಣ ದಾಖಲಿಸಿ ನ್ಯಾಯ ಒದಗಿಸಿದ್ದಾರೆ. ೨೦೧೦ರಲ್ಲಿ ತಿಮ್ಮಯ್ಯ ಮಾರ್ಕೆಟ್ ಮುಂಭಾಗದಲ್ಲಿ ವಿಶ್ವಮಾನವ ಸಮಾವೇಶದಲ್ಲಿ ಭಾಗವಹಿಸಿ ಮಾನವ ಹಕ್ಕುಗಳ ಬಗ್ಗೆ ಹಾಗೂ ವಿಶ್ವಮಾನವ ಅಂಬೇಡ್ಕರ್ ಮತ್ತು ಬಸವಣ್ಣನವರ ಬಗ್ಗೆ ಸುದೀರ್ಘವಾಗಿ ವಿಚಾರವನ್ನು ಮಂಡಿಸಿದ್ದು, ಮರೆಯಲು ಸಾಧ್ಯವಿಲ್ಲ. ಇವರ ನಿಧನದಿಂದ ರಾಜ್ಯದ ಜನರಿಗೆ ತುಂಬಲಾರದ ನಷ್ಟವಾಗಿದೆ ಎಂದರು. 
    ಸಮಿತಿ ವತಿಯಿಂದ ಮೇ.೨೬ರಂದು ಸಂಜೆ ೫ ಗಂಟೆಗೆ ಬಿ ಎಚ್ ರಸ್ತೆ, ತಿಮ್ಮಯ್ಯ ಮಾರ್ಕೆಟ್ ಮುಂಭಾಗದಲ್ಲಿ ಭಾವ ಪೂರ್ಣ ಶ್ರದ್ಧಾಂಜಲಿ ಸಭೆ ಮತ್ತು ಮಾನವಹಕ್ಕುಗಳ, ಸಂವಿಧಾನ ಹಕ್ಕುಗಳ ಜಾಗೃತಿ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು, ಸಂಘ-ಸಂಸ್ಥೆಗಳ ಮುಖಂಡರು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ರೈತರು, ಕಾರ್ಮಿಕರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಿದರು. 
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಜಿ ಬಸವರಾಜಯ್ಯ, ಸಿದ್ದಲಿಂಗಯ್ಯ, ಸೆಲ್ವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Monday, May 19, 2025

ಮೋಹನ್‌ರಾವ್ ಗುಜ್ಜರ್ ನಿಧನ

ಮೋಹನ್‌ರಾವ್ ಗುಜ್ಜರ್ 
    ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಸಮೀಪದ ಶ್ರೀರಂಗನಾಥ ಟೆಕ್ಸ್‌ಟೈಲ್ಸ್‌ನ ಮೋಹನ್‌ರಾವ್ ಗುಜ್ಜರ್(೮೦) ನಿಧನ ಹೊಂದಿದ್ದು, ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ಸಂಜೆ ನೆರವೇರಿತು. 
    ಪತ್ನಿ, ೩ ಪುತ್ರರು ಮತ್ತು ಓರ್ವ ಪುತ್ರಿ ಇದ್ದಾರೆ. ಮೋಹನ್‌ರಾವ್ ಗುಜ್ಜರ್‌ರವರು ನಗರದಲ್ಲಿ ಶ್ರೀ ರಂಗನಾಥ ಟೆಕ್ಸ್ ಟೈಲ್ಸ್ ಆರಂಭಿಸುವ ಮೂಲಕ ಬಹಳ ವರ್ಷಗಳಿಂದ ಬಟ್ಟೆ ವ್ಯಾಪಾರ ಉದ್ಯಮಿದಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ಭಾವಸಾರ ಕ್ಷತ್ರಿಯ ಸಮಾಜದಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸಿದ್ದರು. 
    ಇವರ ನಿಧನಕ್ಕೆ ಭಾವಸಾರ ಕ್ಷತ್ರಿಯ ಸಮಾಜ, ಜೇಡಿಕಟ್ಟೆ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರ ಪ್ರಮುಖರು ಸಂತಾಪ ಸೂಚಿಸಿದ್ದಾರೆ. 

ವಿಜೃಂಭಣೆಯಿಂದ ಜರುಗಿದ ೧೦ನೇ ವರ್ಷದ ಕೋಟೆ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ

ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸ್ವಾಮಿಯ ೧೦ನೇ ವರ್ಷದ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ: ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸ್ವಾಮಿಯ ೧೦ನೇ ವರ್ಷದ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
    ಮಹಾರಥೋತ್ಸವ ಅಂಗವಾಗಿ ಬೆಳಿಗ್ಗೆ ನವಗ್ರಹ ಹೋಮ, ಆದಿವಾಸ ಹೋಮ, ರಥ ಶುದ್ಧಿ ಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಸುಮಾರು ೧.೩೦ರ ಸಮಯದಲ್ಲಿ ದೇವಸ್ಥಾನ ಮುಂಭಾಗದಿಂದ ಮಹಾರಥೋತ್ಸವ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೂ ಸಾಗಿತು. ನಂತರ ಅನ್ನಸಂರ್ಪಣೆ ನಡೆಯಿತು.
    ಇದಕ್ಕೂ ಮೊದಲು ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀ ಸ್ವಾಮಿಯ ಉತ್ಸವ ಮೆರವಣಿಗೆ ಆರಂಭಗೊಂಡು ಪುರಾಣ ಪ್ರಸಿದ್ದ ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿ ಪುನಃ ಹಿಂದಿರುಗಿ ದೇವಸ್ಥಾನದ ಮುಂಭಾಗದಲ್ಲಿ ಸ್ವಾಮಿಯನ್ನು ಅಲಂಕೃತಗೊಂಡ ಭವ್ಯ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. 



    ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರಿಂದ ಸ್ವಾಮಿಗೆ ಜೈಕಾರ ಹಾಕಲಾಯಿತು. ಅಲ್ಲದೆ ವಿವಿಧ ಮಹಿಳಾ ಭಜನಾ ತಂಡಗಳಿಂದ ಭಜನೆ ನಡೆಯಿತು. ರಥೋತ್ಸವದಲ್ಲಿ ಚಂಡೆ ವಾದ್ಯ ತಂಡ ಗಮನ ಸೆಳೆಯಿತು.   
    ದೇವಸ್ಥಾನ ಪ್ರಧಾನ ಅರ್ಚಕ ಪವನ್‌ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಪರುಸಪ್ಪ ಕುರುಬರ, ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೆ. ನರಸಿಂಹಮೂರ್ತಿ, ಉಪಾಧ್ಯಕ್ಷ ಬಿ. ಅಪ್ಪಾಜಿ ಗೌಡರು, ಪ್ರಧಾನ ಕಾರ್ಯದರ್ಶಿ ಎಸ್.ಎನ್ ರಾಜಶೇಖರ್, ಕಾರ್ಯದರ್ಶಿ ಎ.ಎಸ್ ಆಶಾ ಪುಟ್ಟಸ್ವಾಮಿ, ಖಜಾಂಚಿ ಎಸ್.ಬಿ ದುಗ್ಗೇಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಟಿ ನಾಗರಾಜ್, ಬಿ.ಎನ್ ಜಯರಾಂ, ರತ್ನಮ್ಮ ಸುಭಾಷ್, ಎನ್. ಜವರೇಗೌಡ, ವೀಣಾ ಶ್ರೀನಿವಾಸ್ ಮತ್ತು ಎಸ್.ಎಸ್ ಪ್ರಸನ್ನ ಕುಮಾರ್ ಹಾಗು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಹಳೇನಗರ, ಹನುಮಂತ ನಗರ, ಅಂಬೇಡ್ಕರ್ ನಗರ, ಹೊಸಮನೆ ಸೇರಿದಂತೆ ನಗರದ ವಿವಿದೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು. 

Sunday, May 18, 2025

`ಚಿಣ್ಣರ ಚೆಲುವು ಬೇಸಿಗೆ ಸಡಗರ' : ಮಕ್ಕಳಿಗೆ ವಿವಿಧ ಸ್ಪರ್ಧೆಗಳು

 ಭದ್ರಾವತಿಯಲ್ಲಿ `ಚಿಣ್ಣರ ಚೆಲುವು ಬೇಸಿಗೆ ಸಡಗರ' ಬೇಸಿಗೆ ಶಿಬಿರದ ಅಂಗವಾಗಿ ಶಾಲಾ ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.  ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ  ಎಂ. ಗಂಗಣ್ಣ ಚೆಸ್ ಆಡುವ ಮೂಲಕ ನೆರವೇರಿಸಿದರು.
    ಭದ್ರಾವತಿ: ತಾಲೂಕಿನ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಸಹಯೋಗದೊಂದಿಗೆ ಈ ಬಾರಿ ಶಾಲಾ ಮಕ್ಕಳಿಗಾಗಿ ವಿಶೇಷವಾಗಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಗಮನ ಸೆಳೆಯಲಾಯಿತು. 
    `ಚಿಣ್ಣರ ಚೆಲುವು ಬೇಸಿಗೆ ಸಡಗರ' ಬೇಸಿಗೆ ಶಿಬಿರದ ಅಂಗವಾಗಿ ಶಾಲಾ ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.  ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ  ಎಂ. ಗಂಗಣ್ಣ ಚೆಸ್ ಆಡುವ ಮೂಲಕ ನೆರವೇರಿಸಿದರು.


    ಚೆಸ್,  ಕೇರಂ, ಪೇಂಟಿಂಗ್, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಪ್ರಭು, ಸಹಾಯಕ ನಿರ್ದೇಶಕ ಎಸ್. ಉಪೇಂದ್ರ, ವ್ಯವಸ್ಥಾಪಕ ಬಾಲರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜಮೀನಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ `ವಿಮಾನ ಪ್ರಯಾಣ'

ದುಡಿಸಿಕೊಳ್ಳುವವರಿಗೆ ಮಾದರಿಯಾದ ಕೂಡ್ಲಿಗೆರೆ ಹಾಲೇಶ್ 

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ನಿವಾಸಿ, ಪ್ರಗತಿಪರ ರೈತ, ಜಮಿನ್ದಾರ್ ಕೂಡ್ಲಿಗೆರೆ ಹಾಲೇಶ್‌ರವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ೧೦ ಜನ ಕೂಲಿ ಕಾರ್ಮಿಕರನ್ನು ಶನಿವಾರ ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ಗಮನ ಸೆಳೆದರು. 
    ಭದ್ರಾವತಿ : ಈ ಭೂಮಿ ಮೇಲೆ ದುಡಿಯುವವರಿಂದ ದುಡಿಸಿಕೊಳ್ಳುವ ಬಹಳಷ್ಟು ಮಂದಿಗೆ ದುಡಿಯುವವರ ನೋವು, ನಲಿವುಗಳು ಅರ್ಥವಾಗುವುದೇ ಇಲ್ಲ. ಅವರು ಸಾಯುವವರಿಗೂ ದುಡಿಯುತ್ತಿರಬೇಕು. ನಾವು ದುಡಿಸಿಕೊಳ್ಳುತ್ತಿರಬೇಕು ಎಂಬ ಮನೋಭಾವನೆಯೇ ಹೆಚ್ಚು. ಇಂತಹ ದುಡಿಸಿಕೊಳ್ಳುವ ಜನರ ನಡುವೆ ದುಡಿಯುವವರು ನಮ್ಮ ಕುಟುಂಬದವರಂತೆ, ಅವರ ನೋವು, ನಲಿವುಗಳು ನಮ್ಮ ನೋವು, ನಲಿವುಗಳು, ಅವರನ್ನು ಪ್ರೀತಿಸಬೇಕು, ಗೌರವಿಸಬೇಕು ಎಂಬ ಭಾವನೆ ಹೊಂದಿರುವವರು ವಿರಳ. ಇಂತಹ ವಿರಳ ವ್ಯಕ್ತಿಗಳಲ್ಲಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ನಿವಾಸಿ, ಪ್ರಗತಿಪರ ರೈತ, ಜಮಿನ್ದಾರ್ ಕೂಡ್ಲಿಗೆರೆ ಹಾಲೇಶ್‌ರವರು ಸಹ ಒಬ್ಬರಾಗಿದ್ದಾರೆ. 
    ಕೂಡ್ಲಿಗೆರೆ ಹಾಲೇಶ್‌ರವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ೧೦ ಜನ ಕೂಲಿ ಕಾರ್ಮಿಕರನ್ನು ತಮ್ಮ ಕುಟುಂಬದವರಂತೆ ನೋಡುವ ಜೊತೆಗೆ ಅವರ ನೋವು, ನಲಿವುಗಳಲ್ಲಿ ಸದಾ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ಅವರು ತಮ್ಮ ಸ್ವಂತ ಖರ್ಚಿನಲ್ಲಿ ೧೦ ಜನ ಕೂಲಿ ಕಾರ್ಮಿಕರನ್ನು ಮೇ.೧೭ರ ಶನಿವಾರ ತಮ್ಮ ಜೊತೆಗೆ ಗೋವಾ ಪ್ರವಾಸಕ್ಕೆ ಕರೆದು ಕೊಂಡು ಹೋಗಿದ್ದಾರೆ. ಒಟ್ಟು ೩ ರಾತ್ರಿ, ೪ ಹಗಲು ಪ್ರವಾಸ ಇದಾಗಿದ್ದು, ವಿಶೇಷ ಎಂದರೆ ಕೂಲಿ ಕಾರ್ಮಿಕರನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವುದು. ವಿಮಾನ ಪ್ರಯಾಣ ಎಂದರೆ ಗಗನ ಕುಸುಮವಾಗಿದ್ದು, ಅದರಲ್ಲೂ ವಿಮಾನ ಪ್ರಯಾಣದ ಕಲ್ಪನೆಯನ್ನೂ ಮಾಡಿಕೊಳ್ಳದ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸುವ ಮೂಲಕ ದುಡಿಸಿಕೊಳ್ಳುವವರಿಗೆ ಮಾದರಿಯಾಗಿದ್ದಾರೆ. 
    ಪ್ರವಾಸೋದ್ಯಮಿ ಮ್ಯಾಂಗೋಲೀಪ್ ಹಾಲಿಡೇಸ್ ಮಂಜುನಾಥ್‌ರವರ ನೇತೃತ್ವದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ವಿಮಾನದಿಂದ ಪ್ರಯಾಣ ಬೆಳೆಸಿರುವ ಕೂಡ್ಲಿಗೆರೆ ಹಾಲೇಶ್ ಮತ್ತು ಅವರ ಜಮೀನಿನ ೧೦ಜನ ಕೂಲಿ ಕಾರ್ಮಿಕರು ಗೋವಾದಲ್ಲಿ ಬೀಚುಗಳು, ಪ್ರವಾಸಿ ಕ್ಷೇತ್ರಗಳು, ದೇವಸ್ಥಾನ, ಚರ್ಚ್‌ಗಳನ್ನು ವೀಕ್ಷಿಸಲಿದ್ದಾರೆ. ಇವರು ಉಳಿದುಕೊಳ್ಳಲು ಉತ್ತಮ ವ್ಯವಸ್ಥೆಯನ್ನು ಮಾಡಲಾಗಿದೆ. 
    ಈ ಕುರಿತು ಪತ್ರಿಕಗೆ ಮಾಹಿತಿ ನೀಡಿರುವ ಕೂಡ್ಲಿಗೆರೆ ಹಾಲೇಶ್‌ರವರು ವರ್ಷವಿಡಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೂ ಆಸೆ, ಆಕಾಂಕ್ಷೆಗಳಿರುತ್ತವೆ. ಅವರ ದುಡಿಮೆ ಒತ್ತಡ ಕಡಿಮೆ ಮಾಡಿ, ಕೆಲವು ದಿನ ಮಾನಸಿಕ ನೆಮ್ಮದಿ ಕಂಡು ಕೊಳ್ಳುವ ಮೂಲಕ ಅವರ ಕಾರ್ಯ ಕ್ಷಮತೆ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. ಅಲ್ಲದೆ ಅವರಿಗೆ ಹೊರಗಿನ ಪರಿಸರ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. 
    ಕೂಡ್ಲಿಗೆರೆ ಹಾಲೇಶ್‌ರವರು ಕೂಡ್ಲಿಗೆರೆ ಭಾಗದಲ್ಲಿ ಮಾತ್ರವಲ್ಲದೆ ತಾಲೂಕಿನಾದ್ಯಂತ ಗುರುತಿಸಿಕೊಂಡಿರುವ ವ್ಯಕ್ತಿಯಾಗಿದ್ದು, ರಾಜಕೀಯವಾಗಿ, ಧಾರ್ಮಿಕವಾಗಿ ಮಾತ್ರವಲ್ಲದೆ ವಿವಿಧ ಸೇವಾ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ.