Friday, June 6, 2025

ಪೌರಾಯುಕ್ತರ ವರ್ಗಾವಣೆ ವದಂತಿಗೆ ತೆರೆ

ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ 
    ಭದ್ರಾವತಿ : ನಗರಸಭೆ ಪೌರಾಯುಕ್ತರು ವರ್ಗಾವಣೆಗೊಳ್ಳುತ್ತಾರೆಂಬ ವದಂತಿಗೆ ಇದೀಗ ತೆರೆಬಿದ್ದಿದ್ದು, ಸುಮಾರು ೧ ವಾರ ಕಾಲ ರಜೆ ಮೇಲೆ ತೆರಳಿದ್ದ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಶುಕ್ರವಾರ ಕಛೇರಿಗೆ ಹಾಜರಾಗಿದ್ದಾರೆ. 
    ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದ ವ್ಯವಸ್ಥಾಪಕಿ ಸುನಿತಾ ಕುಮಾರಿಯವರು ಮುಂಬಡ್ತಿ ಪಡೆದು ಪೌರಾಯುಕ್ತರ ಹುದ್ದೆಗೆ ತೆರಳಲಿದ್ದಾರೆಂಬ ಮಾಹಿತಿಗಳು ಹರಿದಾಡುತ್ತಿದ್ದವು. ಈ ನಡುವೆ ರಜೆ ಮೇಲೆ ತೆರಳಿದ್ದ ಪೌರಾಯುಕ್ತರು ಸಹ ಮುಂಬಡ್ತಿ ಪಡೆದು ಬೇರೆಡೆ ವರ್ಗಾವಣೆಗೊಳ್ಳುತ್ತಾರೆಂಬ ವದಂತಿಗಳು ಹರಿದಾಡುತ್ತಿದ್ದವು. ಆದರೆ ಪೌರಾಯುಕ್ತರು ಮರಳಿ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. 
    ಸುಮಾರು ೧೮ ತಿಂಗಳಿನಿಂದ ಇಲ್ಲಿನ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಶುಕ್ರವಾರ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯಯಲ್ಲಿ ಪೌರಾಯುಕ್ತರು ಪಾಲ್ಗೊಂಡಿದ್ದರು. 

ವಿಐಎಸ್‌ಎಲ್‌ಗೆ ಉಕ್ಕು ಪ್ರಾಧಿಕಾರದ ಉನ್ನತ ಅಧಿಕಾರಿಗಳ ತಂಡ ಭೇಟಿ : ಪರಿಶೀಲನೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರನ್ನೊಳಗೊಂಡ ಉನ್ನತ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರನ್ನೊಳಗೊಂಡ ಉನ್ನತ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. 
    ಕಾರ್ಖಾನೆಗೆ ಭೇಟಿ ನೀಡಿದ ತಂಡ ಯಂತ್ರಗಳ ಕಾರ್ಯನಿರ್ವಹಣೆ, ಉತ್ಪಾದನೆ ಸಾಮರ್ಥ್ಯ, ಗುಣಮಟ್ಟ, ತಾಂತ್ರಿಕ ಬಳಕೆ, ಸಂಪನ್ಮೂಲ, ಮಾರುಕಟ್ಟೆ ವಹಿವಾಟು ಇತ್ಯಾದಿಗಳ ಕುರಿತು ಪರಿಶೀಲನೆ ನಡೆಸಿತು. ನಂತರ ಕಾರ್ಖಾನೆಯ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘಗಳೊಂದಿಗೆ ಕಾರ್ಖಾನೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿತು ಎಂದು ತಿಳಿದು ಬಂದಿದೆ. 
    ಉನ್ನತ ಅಧಿಕಾರಿಗಳ ನಿಯೋಗದಲ್ಲಿ ಉಕ್ಕು ಪ್ರಾಧಿಕಾರದ ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ, ತಾಂತ್ರಿಕ ನಿರ್ದೇಶಕ ಎಂ.ಆರ್ ಗುಪ್ತಾ ಇನ್ನಿತರರು ಇದ್ದರು. ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಸೇರಿದಂತೆ ಕಾರ್ಖಾನೆಯ ಇನ್ನಿತರ ಅಧಿಕಾರಿಗಳು ಉನ್ನತ ಅಧಿಕಾರಿಗಳ ತಂಡಕ್ಕೆ ಅಗತ್ಯ ಮಾಹಿತಿಗಳನ್ನು ನೀಡಿದರು.
    ಗುರುವಾರ ತಮಿಳುನಾಡಿನ ಸೇಲಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಗೆ ಭೇಟಿ ನೀಡಿದ್ದ ಉನ್ನತ ಅಧಿಕಾರಿಗಳ ತಂಡ ಬೆಳಿಗ್ಗೆ ಸುಮಾರು ೧೧.೩೦ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಖಾನೆಯ ಅತಿಥಿಗೃಹಕ್ಕೆ ಆಗಮಿಸಿತ್ತು. ನಂತರ ಕಾರ್ಖಾನೆಗೆ ಭೇಟಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ ೪.೩೦ಕ್ಕೆ ಪುನಃ ಹಿಂದಿರುಗಿತು. 
    ಇತ್ತೀಚೆಗೆ ಮೇ.೨೩ರಂದು ದೆಹಲಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಕಾರ್ಖಾನೆಯನ್ನು ಸಂಪೂರ್ಣವಾಗಿ ಹೊಸದಾಗಿ ಮರು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ೧೦ ಸಾವಿರ ಕೋ.ರು ಬಂಡವಾಳ ತೊಡಗಿಸುವುದಾಗಿ ತಿಳಿಸಿದ್ದರು. ಈ ಸಂಬಂಧ ೨ ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ದಪಡಿಸುವುದಾಗಿ ಹಾಗು ವರ್ಷಾಂತ್ಯಕ್ಕೆ ಯೋಜನೆಯ ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕುವುದಾಗಿ ಮಾಹಿತಿ ನೀಡಿದ್ದರು. 
    ಇದಕ್ಕೆ ಪೂರಕವೆಂಬಂತೆ ಉಕ್ಕು ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರನ್ನೊಳಗೊಂಡ ಉನ್ನತ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿದೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಹತ್ವ ಪಡೆದುಕೊಂಡಿದೆ. 

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಂದ ಉಕ್ಕು ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿಗೆ ಮನವಿ

 ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್, ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ತಾಂತ್ರಿಕ ನಿರ್ದೇಶಕರಾದ ಎಂ.ಆರ್ ಗುಪ್ತಾ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್, ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ತಾಂತ್ರಿಕ ನಿರ್ದೇಶಕರಾದ ಎಂ.ಆರ್ ಗುಪ್ತಾ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. 
    ಕಳೆದ ಹಲವಾರು ವರ್ಷಗಳಿಂದ ಕಾರ್ಖಾನೆ ಸಂಕಷ್ಟದಿಂದ ಮುನ್ನಡೆಯುತ್ತಿದ್ದು, ಇದರಿಂದಾಗಿ ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಗುತ್ತಿಗೆ ಕಾರ್ಮಿಕರು ದಿನದಿಂದ ದಿನಕ್ಕೆ ಆತಂಕದಲ್ಲಿ ಬದುಕುವಂತಾಗಿದೆ. ತಕ್ಷಣ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಿ ಹಿತ ಕಾಪಾಡುವಂತೆ ಮನವಿಯಲ್ಲಿ ಕೋರಲಾಗಿದೆ. 
ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಅಧಿಕಾರಿಗಳು ಶೀಘ್ರದಲ್ಲಿಯೇ ಅಗತ್ಯವಿರುವ ಬಂಡವಾಳ ತೊಡಗಿಸಿ ಕಾರ್ಖಾನೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. 
    ಕೃತಜ್ಞತೆ ಸಲ್ಲಿಕೆ : 
    ಕಾರ್ಖಾನೆಗೆ ಅಧಿಕಾರಿಗಳು ಭೇಟಿ ನೀಡಲು ಕಾರಣಕರ್ತರಾಗಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ, ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘ ಕೃತಜ್ಞತೆ ಸಲ್ಲಿಸಿದೆ. 
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದ ಉಕ್ಕು ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿಗೆ ಸನ್ಮಾನ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್  ಅವರನ್ನು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್  ಅವರನ್ನು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. 
    ಇತ್ತೀಚೆಗೆ ಮೇ.೨೪ರಂದು ದೆಹಲಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಕಾರ್ಖಾನೆಯನ್ನು ಸಂಪೂರ್ಣವಾಗಿ ಹೊಸದಾಗಿ ಮರು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ೧೦ ಸಾವಿರ ಕೋ.ರು ಬಂಡವಾಳ ತೊಡಗಿಸುವುದಾಗಿ ತಿಳಿಸಿದ್ದರು. ಈ ಸಂಬಂಧ ೨ ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ದಪಡಿಸುವುದಾಗಿ ಹಾಗು ವರ್ಷಾಂತ್ಯಕ್ಕೆ ಯೋಜನೆಯ ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕುವುದಾಗಿ ಮಾಹಿತಿ ನೀಡಿದ್ದರು. 
    ಇದಕ್ಕೆ ಪೂರಕವೆಂಬಂತೆ ಉಕ್ಕು ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಕಾರ್ಖಾನೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಕಾರ್ಖಾನೆ ಆಡಳಿತ ಮಂಡಳಿಯಾಗಲಿ, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘಟನೆಗಳಾಗಲಿ ಯಾರು ಸಹ ಅಧಿಕೃತ ಮಾಹಿತಿ ಮಾಧ್ಯಮಗಳಿಗೆ ತಿಳಿಸಿಲ್ಲ. ಆದರೆ ಕಾರ್ಖಾನೆ ಬಳಿ ಈ ಸಂಬಂಧ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಿ ಈ ಇಬ್ಬರು ಅಧಿಕಾರಿಗಳಿಗೆ ಸ್ವಾಗತ ಕೋರಲಾಗಿದೆ. 
ಈ ಮಾಹಿತಿ ತಿಳಿದು ಶಾಸಕರ ಸಹೋದರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಕಾರ್ಖಾನೆಯ ಅತಿಥಿ ಗೃಹದಲ್ಲಿ ಈ ಇಬ್ಬರು ಅಧಿಕಾರಿಗಳನ್ನು ಭೇಟಿ ಮಾಡಿ ಕ್ಷೇತ್ರದ ಜನರ ಪರವಾಗಿ ಸನ್ಮಾನಿಸಿ ಗೌರವಿಸಿದರು. 
    ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ತಾಲೂಕು ಅಧ್ಯಕ್ಷ, ಕಾರ್ಖಾನೆಯ ನಿವೃತ್ತ ನೌಕರ ಬಸವಂತಪ್ಪ, ಮುಖಂಡ ಎಂ.ಎಸ್ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೌರಕಾರ್ಮಿಕರ ಬೇಡಿಕೆಗಳಿಗೆ ನಗರಸಭೆ ಸದಸ್ಯರ ಒಮ್ಮತದ ತೀರ್ಮಾನ

ಎಲ್ಲಾ ಬೇಡಿಕೆಗಳು ಸರ್ಕಾರದ ಮಟ್ಟದಲ್ಲಿ ಈಡೇರಲಿ

ಭದ್ರಾವತಿ ನಗರಸಭೆಯಲ್ಲಿ ಶುಕ್ರವಾರ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ನಡೆಯಿತು. 
    ಭದ್ರಾವತಿ :  ಪೌರ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಕೆಲವು ದಿನಗಳ ಹಿಂದೆ ನಗರಸಭೆ ಮುಂಭಾಗ ನಡೆಸಿದ್ದ ಹೋರಾಟಕ್ಕೆ ಪೂರಕವಾಗುವಂತೆ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಮ್ಮತದ ತೀರ್ಮಾನ ಕೈಗೊಂಡಿದ್ದು, ಪೌರಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿದ್ದಾರೆ. 
    ಸಭೆ ಆರಂಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆ ಅಧ್ಯಕ್ಷ ಚೇತನ್ ಕುಮಾರ್, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಸಂಘದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು. ನಗರಸಭೆ ಮುಂಭಾಗ ಮೇ.೩೦ ರಿಂದ ಜೂ.೧ರವರೆಗೆ  ೩ ದಿನಗಳ ಕಾಲ ಹೋರಾಟ ನಡೆಸಲಾಗಿದ್ದು, ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೂ.೨ ರಿಂದ ಪೌರಕಾರ್ಮಿಕರು ದೈನಂದಿನ ಕೆಲಸಗಳನ್ನು ಪ್ರಾರಂಭಿಸಿರುತ್ತಾರೆ ಎಂದರು. 
    ರಾಜ್ಯ ಸರ್ಕಾರಿ ನೌಕರರಿಗೆ ನೀಡು ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೆ ವಿಸ್ತರಿಸುವುದು. ರಾಜ್ಯದ ನಗರಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ/ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಾತಿಗಳಿಸುವುದು. ನಗರಸಭೆಗಳಲ್ಲಿ ಶೇ.೧೦೦ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಡಿ ನೇಮಕಾತಿ ಮಾಡಿಕೊಳ್ಳುವುದು. ೨೦೨೨ನೇ ಸಾಲಿನ ವಿಶೇಷ ನೇಮಕಾತಿ ಅಡಿ ಆಯ್ಕೆಯಾದ ಪೌರಕಾರ್ಮಿಕರು/ಲೋಡರ್ಸ್‌ಗಳಿಗೆ ಎಸ್.ಎಫ್.ಸಿ ವೇತನ ನಿಧಿಯಿಂದ ವೇತನ ಪಾವತಿಸುವುದು. ನಗರಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರುಗಳನ್ನು ವಿಶೇಷ ನೇಮಕಾತಿ ಅಡಿ ಪರಿಗಣಿಸಿ ನೇಮಕಾತಿಗೊಳಿಸುವುದು. ಪೌರ ಸೇವಾ ನೌಕರರಿಗೆ ಜ್ಯೋತಿ ಸಂಜೀನಿವಿ/ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಿಕೊಡುವುದು ಹಾಗು  ಐ.ಟಿ ಸಿಬ್ಬಂದಿ/ಅಕೌಂಟ್ ಕನ್ಸಲೆಂಟ್/ಕಂಪ್ಯೂಟರ್ ಅಪರೇಟರ್/ವಾಹನ ಚಾಲಕ/ಸ್ಯಾನಿಟರಿ ಸೂಪರ್ ವೈಸರ್ ಹಾಗೂ ಇತರೆ ವೃಂದದ ನೌಕರರನ್ನು ಪೌರ ಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸುವುದು ಇತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು. 
    ಪ್ರತಿಯಾಗಿ ಮಾತನಾಡಿದ ಸದಸ್ಯರಾದ ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಪೌರಸೇವಾ ನೌಕರರ ಬೇಡಿಕೆಗಳಿಗೆ ನಮ್ಮ ಬೆಂಬಲ ಸಹ ಇದೆ. ಚುನಾಯಿತ ಹಾಗು ನಾಮನಿರ್ದೇಶಿತ ಎಲ್ಲಾ ೪೦ ಜನ ಸದಸ್ಯರು ಸಹ ಯಾವುದೇ ವಿರೋಧ ವ್ಯಕ್ತಪಡಿಸುವುದಿಲ್ಲ. ನೌಕರರ ಎಲ್ಲಾ ಬೇಡಿಕೆಗಳು ರಾಜ್ಯಮಟ್ಟದಲ್ಲಿ ಈಡೇರಬೇಕು. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒಮ್ಮತದ ತೀರ್ಮಾನ ಕೈಗೊಂಡರು. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಉಪಸ್ಥಿತರಿದ್ದರು.
    ಸದಸ್ಯರಾದ ಶಶಿಕಲಾ ನಾರಾಯಣಪ್ಪ, ಮಂಜುಳ ಸುಬ್ಬಣ್ಣ, ನಾಗರತ್ನ ಅನಿಲ್‌ಕುಮಾರ್, ಸವಿತ ಉಮೇಶ್, ಬಸವರಾಜ ಬಿ. ಆನೇಕೊಪ್ಪ, ಟಪ್ಪು ಸುಲ್ತಾನ್, ಆರ್. ಮೋಹನ್‌ಕುಮಾರ್, ಎ. ಜಾಜ್, ಐ.ವಿ ಸಂತೋಷ್ ಕುಮಾರ್, ಬಷೀರ್ ಅಹಮದ್, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು,  ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಹಾಗು ತಾಲೂಕು ಶಾಖೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

Thursday, June 5, 2025

ಪ್ರತಿಯೊಬ್ಬರು ಒಂದೊಂದು ಗಿಡ ನೆಡುವ ಮೂಲಕ ಪೋಷಿಸಿ : ಸುತ್ತಮುತ್ತಲಿನ ಪರಿಸರ ಹಸಿರಿನಿಂದ ಕಂಗೊಳಿಸಲಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಕರೆ 

ಭದ್ರಾವತಿ ನಗರಸಭೆ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು. 
    ಭದ್ರಾವತಿ: ಪ್ರಸ್ತುತ ನಾವು ಬದುಕಲು ಶುದ್ಧ ಗಾಳಿ, ನೀರು ಮತ್ತು ಬೆಳಕಿನ ಅವಶ್ಯಕತೆ ಇದ್ದು, ಈ ಹಿನ್ನಲೆಯಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರ ಹಸಿರಿನಿಂದ ಕಂಗೊಳಿಸಬೇಕು. ಇದಕ್ಕೆ ಪೂರಕವಾಗಿ ಪ್ರತಿಯೊಬ್ಬರು ಒಂದೊಂದು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಬೆಳೆಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಕರೆ ನೀಡಿದರು. 
    ಅವರು ಮಂಗಳವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರ ಸಾಕಷ್ಟು ಹಾಳಾಗಿದ್ದು, ಇದರಿಂದಾಗಿ ನಾವುಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ. ಇದನ್ನು ಸರಿಪಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಒಂದೊಂದು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿದರೆ ಪರಿಸರ ಸಾಕಷ್ಟು  ಸುಧಾರಣೆಯಾಗಲಿದೆ. ಈ ನಿಟ್ಟಿನಲ್ಲಿ ನಗರಸಭೆ ಆಡಳಿತ ಸಹ ಹೆಚ್ಚಿನ ಗಮನ ಹರಿಸಿದ್ದು, ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಪರಿಸರ ಸಂರಕ್ಷಿಸುವ ಕಾರ್ಯ ಕೈಗೊಳ್ಳುತ್ತಿದೆ ಎಂದರು. 
    ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ ಮಾತನಾಡಿ, ಪರಿಸರ ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಂಟಿಯಾಗಿ ರೂಪಿಸಿರುವ ಯೋಜನೆಯೊಂದನ್ನು ನಗರಸಭೆ ವತಿಯಿಂದ ಅನುಷ್ಠಾನಗೊಳಿಸಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಶಾಲಾ-ಕಾಲೇಜು, ಸರ್ಕಾರಿ ಕಟ್ಟಡಗಳು, ಉದ್ಯಾನವನಗಳು ಸೇರಿದಂತೆ ಖಾಲಿ ಜಾಗಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಸುಮಾರು ಎರಡು ವರ್ಷಗಳವರೆಗೆ ಪೋಷಿಸಿ ನಿರ್ವಹಣೆ ಮಾಡುವ ಮೂಲಕ ಎಲ್ಲೆಡೆ ಹಸಿರಿನಿಂದ ಕಂಗೊಳಿಸುವಂತೆ ಮಾಡಲಾಗುವುದು. ಇದಕ್ಕೆ ಪೂರಕವಾಗುವಂತೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ತರಬೇತಿ ನೀಡಲಾಗಿದ್ದು, ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಲಾಗುವುದು ಎಂದರು. 
  ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಬಿ.ಟಿ ನಾಗರಾಜ್, ಲತಾ ಚಂದ್ರಶೇಖರ್, ಚನ್ನಪ್ಪ, ಶಶಿಕಲಾ ನಾರಾಯಣಪ್ಪ, ಬಸವರಾಜ್ ಬಿ. ಆನೇಕೊಪ್ಪ, ಅನುಸುಧಾ ಮೋಹನ್ ಪಳನಿ, ಪ್ರಭಾರ ಪೌರಾಯುಕ್ತರಾದ ಎಂ. ಸುನಿತಾ ಕುಮಾರಿ, ಪರಿಸರ ಅಭಿಯಂತರ ಪ್ರಭಾಕರ್ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜನೌಷಧ ಕೇಂದ್ರದಲ್ಲಿ ಎಲ್ಲಾ ಔಷಧಗಳು ಲಭಿಸಲಿ : ಬಡ ವರ್ಗದವರ ಹಿತ ಕಾಪಾಡಿ

ಬಿಜೆಪಿ ಯುವ ಮೋರ್ಚಾ ಆಸ್ಪತ್ರೆ ಮುಂಭಾಗ ಪ್ರತಿಭಟಿಸಿ ಆಗ್ರಹ

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರದಲ್ಲಿ ಎಲ್ಲಾ ಔಷಧಗಳು ಲಭ್ಯವಿರುವಂತೆ ಹಾಗು ಆಸ್ಪತ್ರೆಯಲ್ಲಿ ಎಲ್ಲಾ ಔಷಧಗಳು ಉಚಿತವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಪಕ್ಷದ ತಾಲೂಕಿನ ಭದ್ರಾವತಿ ಹಾಗು ಹೊಳೆಹೊನ್ನೂರು ಮಂಡಲಗಳ ಯುವ ಮೋರ್ಚಾ ವತಿಯಿಂದ ಗುರುವಾರ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಆಗ್ರಹಿಸಲಾಯಿತು. 
    ಭದ್ರಾವತಿ: ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರದಲ್ಲಿ ಎಲ್ಲಾ ಔಷಧಗಳು ಲಭ್ಯವಿರುವಂತೆ ಹಾಗು ಆಸ್ಪತ್ರೆಯಲ್ಲಿ ಎಲ್ಲಾ ಔಷಧಗಳು ಉಚಿತವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಪಕ್ಷದ ತಾಲೂಕಿನ ಭದ್ರಾವತಿ ಹಾಗು ಹೊಳೆಹೊನ್ನೂರು ಮಂಡಲಗಳ ಯುವ ಮೋರ್ಚಾ ವತಿಯಿಂದ ಗುರುವಾರ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಆಗ್ರಹಿಸಲಾಯಿತು. 
    ಬಡ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ತೆರೆದಿದ್ದು, ಬಡವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಅವರು ಪ್ರತಿನಿತ್ಯ ಔಷಧಿಗಾಗಿ ವೆಚ್ಚ ಮಾಡುವ ವೆಚ್ಚವನ್ನು ಸರಿಸುಮಾರು ಶೇ. ೭೦೦ ರಿಂದ ೮೦೦ರಷ್ಟು ಕಡಿಮೆ ಮಾಡುವ ಮೂಲಕ ಅವರನ್ನು ಆರ್ಥಿಕ ಸಂಕಷ್ಟದಿಂದ ಹೊರತರಬಹುದಾಗಿದೆ. ಈ ಯೋಜನೆ ಬಡವರಿಗೆ ವರದಾನವಾಗಿದ್ದು, ಮಾನವೀಯತೆಯ ಯೋಜನೆಯಾಗಿದೆ. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಲಾಯಿತು. 
    ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು ಬರೆದುಕೊಡುವ ಔಷಧಗಳು ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರದಲ್ಲಿ ಲಭ್ಯವಿರುವುದಿಲ್ಲ. ಇದರಿಂದ ಹೊರಗೆ ಖಾಸಗಿ ಔಷಧ ಕೇಂದ್ರಗಳಲ್ಲಿ ಹೆಚ್ಚಿನ ಹಣ ನೀಡಿ ಬಡವರು ಔಷಧ ಖರೀದಿಸುವಂತಾಗಿದೆ. ಇದನ್ನು ತಪ್ಪಿಸಲು ತಕ್ಷಣ ಎಲ್ಲಾ ಔಷಧಗಳು ಜನೌಷಧ ಕೇಂದ್ರದಲ್ಲಿ ಲಭ್ಯವಿರುವಂತೆ ಹಾಗು ಆಸ್ಪತ್ತೆಯಲ್ಲಿ ಎಲ್ಲಾ ಔಷಧಗಳು ಉಚಿತವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. 
    ಒಂದು ವೇಳೆ ಕ್ರಮ ಕೈಗೊಳ್ಳದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳ ಡಾ. ಶಂಕರಪ್ಪ ಅವರಿಗೆ ಮನವಿ ಸಲ್ಲಿಸಿ ಎಚ್ಚರಿಸಲಾಯಿತು. 
    ಪಕ್ಷದ ಮಂಡಲ ಅಧ್ಯಕ್ಷರುಗಳಾದ ಜಿ. ಧರ್ಮಪ್ರಸಾದ್, ಕೆ.ಎಚ್ ತೀರ್ಥಯ್ಯ ಮತ್ತು ಮಲ್ಲೇಶಪ್ಪರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗೌಂಡರ್, ಕಾರ್ಯದರ್ಶಿ ಭರತ್, ಉಪಾಧ್ಯಕ್ಷ ಸುನಿಲ್, ಹೊಳೆಹೊನ್ನೂರು ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಕುಮಾರ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಮೊಸಹಳ್ಳಿ ಅಣ್ಣಪ್ಪ, ವಿವಿಧ ಮೋರ್ಚಾಗಳ ಅಧ್ಯಕ್ಷರಾದ ರಾಜಶೇಖರ್ ಉಪ್ಪಾರ್, ಸರಸ್ವತಿ, ಪ್ರಮುಖರಾದ ಎಂ.ಎಸ್ ಸುರೇಶಪ್ಪ, ಎಸ್.ಪಿ ಸಿದ್ದಪ್ಪ, ಅನ್ನಪೂರ್ಣ, ಉಮಾವತಿ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು, ಇನ್ನಿತರರು ಪಾಲ್ಗೊಂಡಿದ್ದರು.