Saturday, June 14, 2025

ಶಾಸಕ ಸಂಗಮೇಶ್ವರ್ ಸಹೋದರರಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರೀಗಳ ಆಶೀರ್ವಾದಪಡೆದು ಪ್ರಾರ್ಥನೆ

ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಚಿತ್ರದುರ್ಗ ಶ್ರೀ ತರಳಬಾಳು ಹೊಸದುರ್ಗ ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ಆಶೀರ್ವಾದಪಡೆದು ಕ್ಷೇತ್ರದ ಅಭಿವೃದ್ಧಿಗೆ ಪ್ರಾರ್ಥಿಸಲಾಯಿತು. 
    ಭದ್ರಾವತಿ : ತಾಲೂಕಿನ ಆನವೇರಿ ಗ್ರಾಮದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಚಿತ್ರದುರ್ಗ ಶ್ರೀ ತರಳಬಾಳು ಹೊಸದುರ್ಗ ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ಆಶೀರ್ವಾದಪಡೆದು ಕ್ಷೇತ್ರದ ಅಭಿವೃದ್ಧಿಗೆ ಪ್ರಾರ್ಥಿಸಲಾಯಿತು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರರಾದ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಅಧ್ಯಕ್ಷ ಬಿ.ಕೆ ಶಿವಕುಮಾರ್ ಹಾಗು ಮೆಸ್ಲಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಸೇರಿದಂತೆ ಇನ್ನಿತರರು ಸ್ವಾಮೀಜಿಯವರಿಂದ ಆಶೀರ್ವಾದಪಡೆದರು. 
    ಶ್ರೀಗಳು ತಾಲೂಕಿನ ಆನವೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಚ್ ನಟರಾಜ್‌ಗೌಡರವರ ಶಿವಗಣರಾಧನೆ ಹಾಗು ಧರ್ಮ ಸಮ್ಮೇಳನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿದ್ದರು. ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಎಸ್. ರುದ್ರೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

ಸರ್ಕಾರಿ ಶಾಲೆ ಮಕ್ಕಳು ಸಹ ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಿ : ಆಶಾರಾಣಿ ಧರ್ಮೇಂದ್ರ

ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶನಿವಾರ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.     
    ಭದ್ರಾವತಿ : ಸರ್ಕಾರಿ ಶಾಲೆ ಮಕ್ಕಳು ಸಹ ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ಇದಕ್ಕೆ ಪೂರಕವಾಗುವಂತೆ ಶಿಕ್ಷಣದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಮಾಜ ಸೇವಕಿ ಆಶಾರಾಣಿ ಧರ್ಮೇಂದ್ರ  ಹೇಳಿದರು. 
    ಅವರು ಶನಿವಾರ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. 
    ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕು. ಎಲ್ಲರೂ ಹೆಚ್ಚಿನ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು. ಆಗ ಸಮಾಜದಲ್ಲಿ ಗೌರವದಿಂದ, ನೆಮ್ಮದಿಯಿಂದ ಬದಕಲು ಸಾಧ್ಯ. ಸರ್ಕಾರಿ ಶಾಲೆ ಮಕ್ಕಳು ಸಹ ಪ್ರತಿಭಾವಂತರಾಗಿದ್ದು, ಸಮಾಜದಲ್ಲಿ ಹೆಚ್ಚಿನ ಪ್ರೋತ್ಸಾಹ ಲಭಿಸಬೇಕೆಂದರು. 
    ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಎ. ಧಮೇಂದ್ರ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಡಿಮೆ ಇಲ್ಲದಂತೆ ಶಿಕ್ಷಣಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕೆಂಬುದು ನನ್ನ ಆಶಯವಾಗಿದೆ. ಇದಕ್ಕೆ ಪೂರಕವಾಗುವಂತೆ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಉಚಿತ ನೋಟ್ ಪುಸ್ತಕಗಳನ್ನು ಕಳೆದ ೮ ವರ್ಷಗಳಿಂದ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು. 


ಭದ್ರಾವತಿ ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಧಮೇಂದ್ರ-ಆಶಾರಾಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರ, ಬಗರ್ ಹುಕುಂ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ಇನ್ನಿತರರು ಸಮಾಜ ಸೇವಕ ಎ. ಧಮೇಂದ್ರ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. 
    ಅರಳಿಹಳ್ಳಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ದಿವಾಕರ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಶಿಕ್ಷಕ ವರ್ಗದವರು, ಸಿಬ್ಬಂದಿ ವರ್ಗದವರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ವಿವಿಧ ಗ್ರಾಮಗಳ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
    ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಧಮೇಂದ್ರ-ಆಶಾರಾಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 
ಹರೀಶ್, ದೇವರಾಜ, ಭವಾನಿ ಶಂಕರ್(ಕೂಡ್ಲಿಗೆರೆ), ಗೌಸ್‌ಫೀರ್, ಶ್ರೀನಿವಾಸ್, ವಿಜಯ್, ಚಂದ್ರ, ಭವಾನಿ ಶಂಕರ್(ಕುಮರಿ ನಾರಾಯಣಪುರ), ಷಣ್ಮುಖ, ರುದ್ರಮುನಿ, ಸುರೇಶ್, ಯೋಗೇಶ್, ಜ್ಯೋತಿ, ಗೀತಾ, ರೇಣುಕಾ, ರಾಧ, ರೂಪಕಲಾ ಮತ್ತು ಸುಧಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕೋಗಲೂರು ತಿಪ್ಪೇಸ್ವಾಮಿಗೆ `ಭಾರತೀಯ ಶಿಕ್ಷಣ ರತ್ನ ರಾಷ್ಟ್ರ ಪ್ರಶಸ್ತಿ'


ಕೋಗಲೂರು ತಿಪ್ಪೇಸ್ವಾಮಿ 
    ಭದ್ರಾವತಿ: ತಾಲೂಕಿನ ಯರೇಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿಯವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ `ಭಾರತೀಯ ಶಿಕ್ಷಣ ರತ್ನ ರಾಷ್ಟ್ರ ಪ್ರಶಸ್ತಿ' ನೀಡಿ ಗೌರವಿಸುತ್ತಿದೆ. 
    ಕೋಗಲೂರು ತಿಪ್ಪೇಸ್ವಾಮಿಯವರು ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಅಲ್ಲದೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಗಳ ಸಬಲಿಕರಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 
    ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಜೂ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೋಗಲೂರು ತಿಪ್ಪೇಸ್ವಾಮಿಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. 

Friday, June 13, 2025

ಮನೆಯ ಪಕ್ಕದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು

  

 
    ಭದ್ರಾವತಿ : ಮನೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಬಜಾಜ್ ದ್ವಿಚಕ್ರ ವಾಹನ ಕಳವು ಮಾಡಿರುವ ಘಟನೆ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 
    ವೈ. ರಾಕೇಶ್ ಎಂಬುವರು ತಮ್ಮ ಸುಮಾರು ೫೦ ಸಾವಿರ ರು. ಮೌಲ್ಯದ ಬಜಾಜ್ ದ್ವಿಚಕ್ರ ವಾಹನ ಜು.೭ರಂದು ರಾತ್ರಿ ೮.೩೦ರ ಸಮಯದಲ್ಲಿ ಮನೆಯ ಪಕ್ಕದಲ್ಲಿ ನಿಲ್ಲಿಸಿದ್ದು, ಬೆಳಿಗ್ಗೆ ೬ ಗಂಟೆ ಸಮಯದಲ್ಲಿ ನೋಡಿದಾಗ ವಾಹನ ಕಳುವಾಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ವಾಹನ ಪತ್ತೆ ಮಾಡಿಕೊಡುವಂತೆ ದೂರು ನೀಡಿದ್ದಾರೆ. 

ಜೂ.೨೦ರವರೆಗೆ ಆನ್‌ಲೈನ್ ಯೋಗಾಸನ ಶಿಬಿರ


    ಭದ್ರಾವತಿ: ಕರ್ನಾಟಕ ರಾಜ್ಯ ಪ್ರಸೂತಿ ಹಾಗು ಸ್ತ್ರೀ ರೋಗ ತಜ್ಞರ ಸಂಘದ ಪಿಎಸಿ ಮತ್ತು ಪಿವಿಎಡಬ್ಲ್ಯೂ ಕಮಿಟಿ ವತಿಯಿಂದ ಶಿವಮೊಗ್ಗ ಓಬಿಜಿ ಸೊಸೈಟಿ ಸಹಯೋಗದೊಂದಿಗೆ ಜೂ.೧೪ ರಿಂದ ೨೦ರ ವರೆಗೆ ಆನ್‌ಲೈನ್ ಯೋಗಾಸನ ಶಿಬಿರ ಆಯೋಜಿಸಲಾಗಿದೆ. 
    ಪಿಎಸಿ ಮತ್ತು ಪಿವಿಎಡಬ್ಲ್ಯೂ ಕಮಿಟಿ ಅಧ್ಯಕ್ಷರು ಹಾಗು ಯೋಗಾಸನ ಬೋಧಕಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ), ನಯನ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ವೀಣಾ ಎಸ್ ಭಟ್‌ರವರ ನೇತೃತ್ವದಲ್ಲಿ ಪ್ರತಿದಿನ ಬೆಳಿಗ್ಗೆ ೬ ರಿಂದ ೭ ಗಂಟೆವರೆಗೆ ಶಿಬಿರ ನಡೆಯಲಿದೆ. 
    ಓಬಿಜಿ ಸೊಸೈಟಿ ಶಿವಮೊಗ್ಗ ಕಾರ್ಯದರ್ಶಿ ಡಾ. ಸ್ವಾತಿ ಕಿಶೋರ್ ಮತ್ತು ಪಿಎಸಿ ಮತ್ತು ಪಿವಿಎಡಬ್ಲ್ಯೂ ಕಮಿಟಿ ಕಾರ್ಯದರ್ಶಿ ಡಾ. ರಾಜಲಕ್ಷ್ಮಿ ಸೇರಿದಂತೆ ಇನ್ನಿತರರು ಶಿಬಿರದಲ್ಲಿ ಉಪಸ್ಥಿತರಿರುವರು. ಹೆಚ್ಚಿನ ಮಾಹಿತಿ ಹಾಗು ಆನ್‌ಲೈನ್ ಸಂಪರ್ಕದಲ್ಲಿ ಪಾಲ್ಗೊಳ್ಳಲು ಡಾ. ವೀಣಾಭಟ್ ಮೊ: ೯೪೮೦೩೫೩೮೭೮ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ವಿಜೃಂಭಣೆಯಿಂದ ಜರುಗಿದ ಕಾರೇಹಳ್ಳಿ ಜಾತ್ರಾ ಮಹೋತ್ಸವ

ಭದ್ರಾವತಿ ತಾಲೂಕಿನ ಕಾರೇಹಳ್ಳಿಯ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. 
    ಭದ್ರಾವತಿ : ತಾಲೂಕಿನ ಕಾರೇಹಳ್ಳಿಯ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. 
    ಭಕ್ತರು ಹರಕೆ, ಪ್ರಾರ್ಥನೆಗಳನ್ನು ಸಂತರ ಮುಂದೆ ಸಲ್ಲಿಸಲು ಹೂವಿನ ಹಾರ ಹಾಗೂ ಮೊಂಬತ್ತಿಗಳನ್ನು ಹಿಡಿದು ಬೆಳಗ್ಗೆ ೭ ಗಂಟೆಯಿಂದಲೇ ದೇವಾಲಯಕ್ಕೆ ಆಗಮಿಸುತ್ತಿದ್ದರು. 
    ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಧ್ಯಕ್ಷರಾದ ಫ್ರಾನ್ಸಿಸ್ ಸೆರಾವೋ ರವರಿಂದ ಪೂಜಾ ವಿಧಿವಿಧಾನಗಳು ನೆರವೇರಿದವು. ಹಳೇನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರುಗಳಾದ ಫಾದರ್ ಸ್ಟೀವನ್ ಡೇಸಾರವರಿಂದ ಪ್ರಭೋದನೆ, ಶಿವಮೊಗ್ಗ ಕ್ಷೇತ್ರದ ಗುರು ಶ್ರೇಷ್ಠರಾದ ಫಾದರ್ ಸ್ಟ್ಯಾನಿ ಡಿಸೋಜ, ಫಾದರ್ ಸ್ಟೀವನ್ ಅಲ್ಬುಕರ್ಕ್‌ರವರಿಂದ ಆಶೀರ್ವಚನ ನೀಡಲಾಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯ ನೆರವೇರಿತು. 
    ಧರ್ಮಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಅಲ್ ಮೇಡಾ, ನೆರೆಯ ಧರ್ಮಕೇಂದ್ರದ ಗುರುಗಳು, ಸೈಂಟ್ ಚಾರ್ಲ್ಸ್ ಸೈಂಟ್ ಡೊಮಿನಿಕ್ ಧರ್ಮಭಗಿನಿಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

Thursday, June 12, 2025

ಕಾರೇಹಳ್ಳಿ ಜಾತ್ರಾ ಮಹೋತ್ಸವ : ಸಂತ ಅಂತೋಣಿಯವರ ಅಲಂಕೃತ ತೇರಿನ ಮೆರವಣಿಗೆ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಗ್ರಾಮದ ಬೀದಿಗಳಲ್ಲಿ ಅಲಂಕೃತ ತೇರಿನ ಮೆರವಣಿಗೆ ನಡೆಯಿತು.
    ಭದ್ರಾವತಿ : ತಾಲೂಕಿನ ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಗ್ರಾಮದ ಬೀದಿಗಳಲ್ಲಿ ಅಲಂಕೃತ ತೇರಿನ ಮೆರವಣಿಗೆ ನಡೆಯಿತು.
    ಶಿವಮೊಗ್ಗ ಧರ್ಮಕ್ಷೇತ್ರದ ಯುವಜನ ನಿರ್ದೇಶಕರಾದ ಫಾದರ್ ಫ್ರಾಂಕ್ಲಿನ್ ಡಿಸೋಜಾರವರಿಂದ ಪೂಜಾ ವಿಧಿ ವಿಧಾನಗಳು ನೆರವೇರಿದವು. ಹಳೇನಗರ, ನ್ಯೂಟೌನ್, ಕಾಗದನಗರ, ಮಾವಿನಕೆರೆ ಧರ್ಮ ಕೇಂದ್ರಗಳಿಂದ ಭಕ್ತರು ಆಗಮಿಸಿದ್ದರು. 
    ಧರ್ಮಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಅಲ್ಮೇಡ, ಫಾದರ್ ಅನಿಲ್ ರಿಚರ್ಡ್, ಫಾದರ್ ಪಿಯೂಸ್, ಸೈಂಟ್ ಡೊಮಿನಿಕ್ ಧರ್ಮ ಭಗಿನಿಯರು ಉಪಸ್ಥಿತರಿದ್ದರು. ಜೂ.೧೩ರ ಶುಕ್ರವಾರ ಸಂತ ಅಂತೋಣಿಯವರು ಮೃತಪಟ್ಟ ದಿನವಾಗಿದ್ದು, ಅವರ ಸ್ಮರಣೆಗಾಗಿ ವಾರ್ಷಿಕ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ.  ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮಾದ್ಯಕ್ಷರಾದ ಫ್ರಾನ್ಸಿಸ್ ಸೆರಾವೋರವರಿಂದ ಭಕ್ತಿಭಾವದ ವಿಶೇಷ ಪೂಜಾ ವಿಧಿ-ವಿಧಾನಗಳು, ಪ್ರಾರ್ಥನೆಗಳು, ಪ್ರಭೋದನೆಗಳು, ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ.