Wednesday, June 18, 2025

ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಕಾಮಗಾರಿ ಅವೈಜ್ಞಾನಿಕ

ತಕ್ಷಣ ಕಾಮಗಾರಿ ಕೈಬಿಡಲು ಸರ್ಕಾರಕ್ಕೆ ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹ 

ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಬುಧವಾರ ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ರೈತ ಮುಖಂಡ ಕೆ.ಟಿ ಗಂಗಾಧರ್ ಮಾತನಾಡಿದರು. 
    ಭದ್ರಾವತಿ : ತಾಯಿಯ ಎದೆ ಹಾಲು ಕುಡಿಯಬೇಕೆ ವಿನಹಃ ಹಾಲು ಕುಡಿಯುವ ನೆಪದಲ್ಲಿ ಎದೆಯನ್ನೇ ಸೀಳಬಾರದು ಎಂಬಂತೆ ಎರಡು ಗುಡ್ಡಗಳ ನಡುವೆ ಜಲಾಶಯ ಸೀಳಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ಖಂಡನೀಯ. ತಕ್ಷಣ ಈ ಅವೈಜ್ಞಾನಿಕ ಕಾಮಗಾರಿ ಕೈಬಿಡಬೇಕೆಂದು ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹಿಸಿದರು.
    ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಬುಧವಾರ  ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ಮಾತನಾಡಿದರು. ವಿದ್ಯಾವಂತ ಸಮಾಜದಲ್ಲಿ ಇಂತಹ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು. 
    ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರಿಗೆ ವ್ಯವಸಾಯ ಹಾಗೂ ಗದಗ-ಬೆಟಗೇರಿ ಪಟ್ಟಣದವರೆಗೂ ಜನರಿಗೆ ಕುಡಿಯುವ ನೀರಿಗೆ ಆಧಾರವಾಗಿದೆ. ಭದ್ರಾ ಜಲಾಶಯದ ನೀರನ್ನು ನೆಚ್ಚಿಕೊಂಡು ರೈತರು ಭತ್ತ, ಕಬ್ಬು, ಅಡಕೆ, ತೆಂಗು ಮುಂತಾದ ಬೆಳೆಗಳನ್ನು ಬೆಳೆದು ಬದುಕು ಕಟ್ಟಿಕೊಂಡಿರುತ್ತಾರೆ. ಮಧ್ಯ ಕರ್ನಾಟಕದ ಇಂತಹ ಬೃಹತ್ ಜಲಾಶಯದ ಸುರಕ್ಷತೆಯನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ೧೬೬೦ ಹಳ್ಳಿಗಳಿಗೆ ಕುಡಿಯಲು ನೀರನ್ನು ಒದಗಿಸುವ ಬೃಹತ್ ಕಾಮಗಾರಿಯನ್ನು ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ (ಬಫರ್ ಜೋನ್‌ನಲ್ಲಿ) ಕೈಗೊಂಡಿದೆ. ಈ  ಕಾಮಗಾರಿ ಕೈಗೊಂಡಿರುವ ಪ್ರದೇಶವು ಅತೀ ಸೂಕ್ಷ್ಮ ಪ್ರದೇಶವಾಗಿರುತ್ತದೆ, ಈ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳಬಾರದೆಂಬ ನಿಯಮಾವಳಿಗಳಿದ್ದರೂ ಬಹುಗ್ರಾಮ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಕುಡಿಯುವ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡಲು ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ  ಮಾಡುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದರು. 
    ಸರ್ಕಾರವು ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಲು ರೈತರು ಯಾವುದೇ ತಕರಾರು ಮಾಡುತ್ತಿಲ್ಲ. ಆದರೆ ಭದ್ರಾ ಜಲಾಶಯದ ನಿರ್ಬಂಧಿತ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿಯಿಂದ ಜಲಾಶಯ ತುಂಬಿದಾಗ ನೀರಿನ ಒತ್ತಡದಿಂದಾಗಿ ಯಾವುದೇ ರೀತಿಯ ಅಪಾಯಗಳು ಸಂಭವಿಸಬಹುದಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ಮಳೆಬಿದ್ದು ಗುಡ್ಡಗಳು ಕುಸಿಯುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇವೆಲ್ಲವನ್ನೂ ಸರ್ಕಾರ ಮನಗಂಡಿದ್ದರೂ ಜಲಾಶಯದ ಸುರಕ್ಷತೆ ಮತ್ತು ಜನರ ಹಿತಾಸಕ್ತಿಯನ್ನು ಕಡೆಗಣಿಸಿ ಈ ಕಾಮಗಾರಿ ಕೈಗೊಂಡಿರುವುದನ್ನು ರೈತಸಂಘ ಹಾಗೂ ಭದ್ರಾ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಖಂಡಿಸುತ್ತವೆ.  ಸರ್ಕಾರ ಕೂಡಲೇ ನಿರ್ಬಂಧಿತ ಪ್ರದೇಶದಲ್ಲಿ ಜಲಾಶಯಕ್ಕೆ ಆಪತ್ತು ತಂದೊಡ್ಡುವ ಕಾಮಗಾರಿಯನ್ನು ಶಾಶ್ವತವಾಗಿ ಕೈಬಿಡಬೇಕೆಂದು ಆಗ್ರಹಿಸಿದರು. 
    ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಶಿಮುಲ್ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಡಿ. ಆನಂದ್, ಮುಖಂಡರಾದ ಮಂಜಪ್ಪಗೌಡ, ಲವ, ರಾಮಚಂದ್ರರಾವ್ ಸೇರಿದಂತೆ ಇನ್ನಿತರರು  ಮಾತನಾಡಿ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿದರು. 
    ರೈತ ಮುಖಂಡರಾದ ಈರಣ್ಣ, ಹಾಲೇಶಪ್ಪಗೌಡ್ರು, ಡಿ.ವಿ ವೀರೇಶ್, ಓಟೂರುಶಿವಪ್ಪ, ಪುಟ್ಟನಗೌಡ್ರು, ಮಲ್ಲಾಪುರ ರಂಗಪ್ಪ, ಎಂ.ಚಂದ್ರಶೇಖರ್, ತಮ್ಮಯ್ಯ, ಮೋಹನ್ ಕುಮಾರ್, ಕೃಷ್ಣಪ್ಪ, ನರಸಿಂಹಣ್ಣ, ಧರ್ಮೋಜಿರಾವ್, ಮಾಲತೇಶ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು. 

ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಹುಟ್ಟುಹಬ್ಬ ಆಚರಣೆ

ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಭದ್ರಾವತಿ ತಾಲೂಕು ಸಮಿತಿ ಹಾಗು ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ೪೬ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ : ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಹಾಗು ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ೪೬ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್, ಮುಖಂಡರಾದ ಕುಮಾರ್(ಮೇಸ್ಟ್ರು), ನಾಗೇಶ್, ರೂಪ ನಾಗರಾಜ್ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಎಸ್. ಮಣಿಶೇಖರ್‌ರವರ ಕಛೇರಿಗೆ ತೆರಳಿ ಸನ್ಮಾನಿಸಿ ಅಭಿನಂದಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಂಡರು. 

ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ರಕ್ತದಾನ ಶಿಬಿರ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ತಾಲೂಕು ಪಂಚಾಯಿತಿ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಹಾಗು ಕೂಡ್ಲಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿವಿಧ ಸಂಘ-ಸಂಸ್ಥೆಗಳಿಂದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮೆಗ್ಗಾನ್ ಬೋಧನಾ ಮತ್ತು ಆಸ್ಪತ್ರೆ, ರಕ್ತನಿಧಿ ಕೇಂದ್ರ ಸಹಯೋಗದೊಂದಿಗೆ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ಶಿಬಿರದಲ್ಲಿ ಸರ್ಕಾರಿ ಅಧಿಕಾರಿಗಳು, ಮಹಿಳಾ ಸಂಘ-ಸಂಸ್ಥೆಗಳ ಸದಸ್ಯೆಯರು, ಗ್ರಾಮಸ್ಥರು ಸೇರಿದಂತೆ ಸುಮಾರು ೫೪ ಮಂದಿ ರಕ್ತದಾನ ಮಾಡಿದರು. ರಕ್ತದಾನಿಗಳಾದ ಹಸಿರು ಯೋಧ, ಹೆಡ್‌ಕಾನ್‌ಸ್ಟೇಬಲ್ ಹಾಲೇಶಪ್ಪ, ಯುವ ಮುಖಂಡರಾದ ಎಸ್. ಮಹಾದೇವ ಕೂಡ್ಲಿಗೆರೆ,  ಪ್ರವೀಣ್‌ನಾಯ್ಕ, ಮೂರ್ತಿ ಮತ್ತು ವೆಂಕಟೇಶ್ ಸೇರಿದಂತೆ ೫ ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಅಲ್ಲದೆ ಶಿಬಿರದಲ್ಲಿ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ಹುಟ್ಟುಹಬ್ಬ ಆಚರಿಸಿ ಸಿಹಿ ಹಂಚಲಾಯಿತು. 
    ಜಮೀನ್ದಾರ್ ಕೂಡ್ಲಿಗೆರೆ ಹಾಲೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ವರ್ಗದವರು ಹಾಗು ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ೫ ಮಂದಿ ರಕ್ತದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.  

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸಲಾಗುತ್ತಿದೆ.    
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 4000 ಸಸಿಗಳನ್ನು ವಿತರಿಸಲಾಗಿದೆ. 
     ಕಾರ್ಖಾನೆ ವತಿಯಿಂದ ಸಾಮಾಜಿಕ ಕಾರ್ಯ ಯೋಜನೆಯಡಿ ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಡಲು ಪ್ರೋತ್ಸಾಹಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಖಾನೆ ಭದ್ರತಾ ಸಿಬ್ಬಂದಿಗಳು ತಮ್ಮ ಬಿಡುವಿನ ಅವಧಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಕರಿಬೇವು, ಹಲಸು, ಪಪ್ಪಾಯಿ, ನುಗ್ಗೆ ಸೇರಿದಂತೆ ಹಲವು ರೀತಿಯ ಸಸಿಗಳನ್ನು ಬೆಳೆಸುವ ಮೂಲಕ ಸಾರ್ವಜನಿಕರಿಗೆ ಪರಿಸರ ಕುರಿತು ಜಾಗೃತಿ ಮೂಡಿಸಿ ಸಸಿಗಳನ್ನು ನೆಡುವ ಮೂಲಕ ಪೋಷಿಸಿ ಬೆಳೆಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. 
     2024ರ ಸಾಲಿನಲ್ಲಿ ಒಟ್ಟು ಸುಮಾರು 2000 ಸಸಿಗಳನ್ನು ಕಾರ್ಖಾನೆ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಹಾಗು ಸರ್ಕಾರಿ ಕಛೇರಿಗಳು, ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿತರಿಸಲಾಗಿದೆ. 
     ಈ ಬಾರಿ ಪ್ರಸಕ್ತ ಸಾಲಿನಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ ಸುಮಾರು 4000 ಸಾವಿರ ಸಸಿಗಳನ್ನು ಉಚಿತವಾಗಿ ವಿತರಿಸಲಾಗಿದೆ. ಈ ಪೈಕಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸುಮಾರು 750ಕ್ಕೂ ಅಧಿಕ ಸಸಿಗಳನ್ನು ಉಚಿತವಾಗಿ ವಿತರಿಸಲಾಗಿದೆ. 
     ಬುಧವಾರ ಬೆಳಿಗ್ಗೆ ಕಾರ್ಖಾನೆ ಮುಖ್ಯದ್ವಾರದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸುವ ಮೂಲಕ ಪೋಷಿಸಿ ಬೆಳೆಸುವಂತೆ ಮನವಿ ಮಾಡಿದರು. 
 ಪ್ರಸಕ್ತ ಸಾಲಿನಲ್ಲಿ ಗುರಿ ಮೀರಿ ಸಸಿಗಳನ್ನು ವಿತರಣೆ ಮಾಡಲಾಗಿದ್ದು, ಆದರೂ ಸಹ ಸಸಿ ವಿತರಣೆ ಮುಂದುವರೆಯಲಿದೆ. ಸಭೆ, ಸಮಾರಂಭ, ರಾಷ್ಟ್ರೀಯ   ಹಬ್ಬಗಳ ಆಚರಣೆ ಸೇರಿದಂತೆ ಇನ್ನಿತರ ವಿಶೇಷ ದಿನಗಳಂದು ಸಸಿಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. 

Tuesday, June 17, 2025

ಕೆರೆ ಒತ್ತುವರಿಗೆ ತಾಲೂಕು ಆಡಳಿತಕ್ಕೆ ಆದೇಶಿಸಿ : ಜಿಲ್ಲಾಧಿಕಾರಿಗೆ ಮನವಿ

ಭದ್ರಾವತಿ ತಾಲೂಕಿನ ವ್ಯಾಪ್ತಿಯಲ್ಲಿನ ಕೆರೆಗಳನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವ ತಾಲೂಕು ಆಡಳಿತಕ್ಕೆ ಒತ್ತುವರಿ ತೆರವುಗೊಳಿಸಲು ಆದೇಶಿಸಬೇಕೆಂದು ಸಾಮಾಜಿಕ ಹೋರಾಟಗಾರ ತೀರ್ಥೇಶ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ. 
    ಭದ್ರಾವತಿ : ತಾಲೂಕಿನ ವ್ಯಾಪ್ತಿಯಲ್ಲಿನ ಕೆರೆಗಳನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವ ತಾಲೂಕು ಆಡಳಿತಕ್ಕೆ ಒತ್ತುವರಿ ತೆರವುಗೊಳಿಸಲು ಆದೇಶಿಸಬೇಕೆಂದು ಸಾಮಾಜಿಕ ಹೋರಾಟಗಾರ ತೀರ್ಥೇಶ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ. 
    ನಗರ ವ್ಯಾಪ್ತಿಯಲ್ಲಿರುವ ಸೀಗೆಬಾಗಿ ಸರ್ವೆ ನಂ.೫೭ */* ಕಸಬಾ-೧ರ ಸರ್ಕಾರಿ ಕೆರೆ(ಬೆಂಡೆಕಟ್ಟೆ ಕೆರೆ) ಸಂಪೂರ್ಣ ಒತ್ತುವರಿಯಾಗಿರುತ್ತದೆ. ಅಲ್ಲದೆ ಕಸಬಾ-೧ರ ಸರ್ವೆ ನಂ.೨೧೬ರಲ್ಲಿನ ಕೆರೆ ಸಹ ಒತ್ತುವರಿಯಾಗಿರುತ್ತದೆ. ಕೆರೆಗಳನ್ನು ಒತ್ತುವರಿ ಮಾಡಿ ನಿವೇಶನ, ಮನೆ ಹಾಗು ಇನ್ನಿತರ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡಿರುತ್ತಾರೆ. ಆದರೆ ಇಲ್ಲಿಯವರೆಗೂ ಯಾವುದೇ ನೋಟಿಸ್ ನೀಡುವುದು, ಸ್ವಯಂ ದೂರು ದಾಖಲಿಸುವುದು ಮಾಡಿರುವುದಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. 
    ತಕ್ಷಣ ತಾಲೂಕು ಆಡಳಿತಕ್ಕೆ ಕೆರೆಗಳ ಒತ್ತುವರಿ ತೆರವುಗೊಳಿಸಲು ಆದೇಶಿಸಬೇಕು. ಒತ್ತುವರಿ ಮಾಡದೆ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ವಿರುದ್ಧ ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. 

ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಕಾಮಗಾರಿ ಅವೈಜ್ಞಾನಿಕ

ಜೂ.೧೮ರಂದು ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಪ್ರತಿಭಟನೆ, ಧರಣಿ ಸತ್ಯಾಗ್ರಹ 

ಭದ್ರಾ ಜಲಾಶಯ
    ಭದ್ರಾವತಿ : ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಜೂ.೧೮ರ ಬುಧವಾರ ಬೆಳಿಗ್ಗೆ ೧೧ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ರೈತ ಮುಖಂಡ ಕೆ.ಟಿ ಗಂಗಾಧರ್ ನೇತೃತ್ವದಲ್ಲಿ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 
    ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರಿಗೆ ವ್ಯವಸಾಯ ಹಾಗೂ ಗದಗ-ಬೆಟಗೇರಿ ಪಟ್ಟಣದವರೆಗೂ ಜನರಿಗೆ ಕುಡಿಯುವ ನೀರಿಗೆ ಆಧಾರವಾಗಿದೆ. ಭದ್ರಾ ಜಲಾಶಯದ ನೀರನ್ನು ನೆಚ್ಚಿಕೊಂಡು ರೈತರು ಭತ್ತ, ಕಬ್ಬು, ಅಡಕೆ, ತೆಂಗು ಮುಂತಾದ ಬೆಳೆಗಳನ್ನು ಬೆಳೆದು ಬದುಕು ಕಟ್ಟಿಕೊಂಡಿರುತ್ತಾರೆ. ಮಧ್ಯ ಕರ್ನಾಟಕದ ಇಂತಹ ಬೃಹತ್ ಜಲಾಶಯದ ಸುರಕ್ಷತೆಯನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ೧೬೬೦ ಹಳ್ಳಿಗಳಿಗೆ ಕುಡಿಯಲು ನೀರನ್ನು ಒದಗಿಸುವ ಬೃಹತ್ ಕಾಮಗಾರಿಯನ್ನು ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ (ಬಫರ್ ಜೋನ್‌ನಲ್ಲಿ) ಕೈಗೊಂಡಿದೆ. ಈ  ಕಾಮಗಾರಿ ಕೈಗೊಂಡಿರುವ ಪ್ರದೇಶವು ಅತೀ ಸೂಕ್ಷ್ಮ ಪ್ರದೇಶವಾಗಿರುತ್ತದೆ, ಈ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳಬಾರದೆಂಬ ನಿಯಮಾವಳಿಗಳಿದ್ದರೂ ಬಹುಗ್ರಾಮ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಕುಡಿಯುವ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡಲು ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ ಕುಡಿಯುವ ನೀರಿನ ಘಟಕಕ್ಕೆ ನೀರು ಸರಬರಾಜು ಮಾಡಲು ಮಾಡುತ್ತಿರುವ ಕಾಮಗಾರಿಯ ಅವೈಜ್ಞಾನಿಕವಾಗಿರುತ್ತದೆ.
    ಸರ್ಕಾರವು ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಲು ರೈತರು ಯಾವುದೇ ತಕರಾರು ಮಾಡುತ್ತಿಲ್ಲ. ಆದರೇ ಭದ್ರಾ ಜಲಾಶಯದ ನಿರ್ಬಂಧಿತ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿಯಿಂದ ಜಲಾಶಯ ತುಂಬಿದಾಗ ನೀರಿನ ಒತ್ತಡದಿಂದಾಗಿ ಯಾವುದೇ ರೀತಿಯ ಅಪಾಯಗಳು ಸಂಭವಿಸಬಹುದಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ಮಳೆಬಿದ್ದು ಗುಡ್ಡಗಳು ಕುಸಿಯುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇವೆಲ್ಲವನ್ನೂ ಸರ್ಕಾರ ಮನಗಂಡಿದ್ದರೂ ಜಲಾಶಯದ ಸುರಕ್ಷತೆ ಮತ್ತು ಜನರ ಹಿತಾಸಕ್ತಿಯನ್ನು ಕಡೆಗಣಿಸಿ ಈ ಕಾಮಗಾರಿ ಕೈಗೊಂಡಿರುವುದನ್ನು ರೈತಸಂಘ ಹಾಗೂ ಭದ್ರಾ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಖಂಡಿಸುತ್ತವೆ. 
    ಸರ್ಕಾರ ಕೂಡಲೇ ನಿರ್ಬಂಧಿತ ಪ್ರದೇಶದಲ್ಲಿ ಜಲಾಶಯಕ್ಕೆ ಆಪತ್ತು ತಂದೊಡ್ಡುವ ಕಾಮಗಾರಿಯನ್ನು ಶಾಶ್ವತವಾಗಿ ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಭದ್ರಾ ಬಲದಂಡೆ ನಾಲೆಯ ಅಚ್ಚುಕಟ್ಟುದಾರರು. ರೈತರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸಮಸ್ತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಲೋಕಾಯುಕ್ತ ಅಹವಾಲು ಸ್ವೀಕಾರ ಸಭೆಯಲ್ಲಿ ಹಲವಾರು ದೂರುಗಳು ಸಲ್ಲಿಕೆ

ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ವತಿಯಿಂದ ಭದ್ರಾವತಿ ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಹಲವಾರು ದೂರುಗಳು ಸಲ್ಲಿಕೆಯಾದವು. 
    ಭದ್ರಾವತಿ : ಸಂಬಂಧಪಟ್ಟ ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಯಾವುದೇ ಪ್ರಕರಣವಾಗಿರಲಿ ಇತ್ಯರ್ಥಪಡಿಸಿಕೊಡಲಾಗುವುದು. ಎಲ್ಲಾ ದೂರುಗಳನ್ನು ಸ್ವೀಕರಿಸಲಾಗುವುದು. ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೆ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆ ಯಶಸ್ವಿಗೊಳಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಮನವಿ ಮಾಡಿದರು. 
    ಅವರು ಉಪ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ವತಿಯಿಂದ ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯ ನೇತೃತ್ವವಹಿಸಿ ಮಾತನಾಡಿದರು. 
    ಪ್ರಮುಖವಾಗಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜುರವರು ತಮ್ಮ ದೂರುಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಕಳೆದ ಹಲವಾರು ವರ್ಷಗಳಿಂದ ಲೋಕಾಯುಕ್ತ ಅಧಿಕಾರಿಗಳಿಗೆ ಸಭೆಯಲ್ಲಿ ದೂರು ಸಲ್ಲಿಸಲಾಗುತ್ತಿದೆ. ಆದರೆ ಯಾವುದೇ ದೂರುಗಳು ಇತ್ಯರ್ಥಗೊಂಡಿಲ್ಲ. ಕೇವಲ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ಆದರೆ ಯಾವುದೇ ಕ್ರಮ ಅನುಷ್ಠಾನಗೊಳ್ಳುತ್ತಿಲ್ಲ ಎಂದು ದೂರಿದರು. 
ಇದಕ್ಕೆ ಪ್ರತಿಯಾಗಿ ಮಾತನಾಡಿದ ಚಂದ್ರಶೇಖರ್, ಬೇರೆ ಅಧಿಕಾರಿಗಳ ರೀತಿ ನಾನಲ್ಲ. ನನ್ನ ಮೇಲೆ ವಿಶ್ವಾಸವಿಟ್ಟು ದೂರು ಸಲ್ಲಿಸಿ. ಸಮರ್ಪಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.  
    ಸಾಮಾಜಿಕ ಕಾರ್ಯಕರ್ತರಾದ ಶಶಿಕುಮಾರ್ ಗೌಡ ದೂರು ಸಲ್ಲಿಸಿ, ಪ್ರತಿ ವರ್ಷ ಮಳೆಗಾಲದಲ್ಲಿ ಭದ್ರಾ ನದಿ ದಡದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇವರಿಗೆ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡುವಂತೆ ಸೂಚಿಸುವುದು. ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಹಾಗು ವಿದ್ಯುತ್ ತಂತಿಗಳು ಕೆಳಗೆ ಬಿದ್ದು ದುರ್ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸುವುದು. ನಗರಸಭೆ ವ್ಯಾಪ್ತಿಯಲ್ಲಿ ಬೀದಿನಾಯಿಗಳು ಹಾಗು ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ ನಗರಸಭೆ ಆಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದು. ಜನ್ನಾಪುರ ಅಂತರಘಟ್ಟಮ್ಮ ಸಮುದಾಯ ಭವನ ಹಾಗು ಮಲ್ಲೇಶ್ವರ ಸಮುದಾಯ ಭವನಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಮಾಡಿದರೂ ಸಹ ನೀಡಿರುವುದಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಗಳನ್ನು ನೀಡುವಂತೆ ಸೂಚಿಸುವುದು. ಕರ್ನಾಟಕ ನೀರಾವರಿ ನಿಗಮ ನಿಯಮಿತ, ಬಿ.ಆರ್.ಎಲ್.ಸಿ-೩ ಕಛೇರಿ ವತಿಯಿಂದ ಜನ್ನಾಪುರ ಅಂತರಘಟ್ಟಮ್ಮ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿರುವ ಕುರಿತು ಸರ್ಕಾರದ ಮಾನದಂಡಗಳ ಆದೇಶದ ಪ್ರತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದು ಹಾಗು ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ಬಸ್, ಆಟೋ ಸೇರಿದಂತೆ ಶಾಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ನಡೆಸುವಂತೆ ಹಾಗು ವಾಹನ ಚಾಲಕರುಗಳಿಗೆ ಸಂಚಾರಿ ನಿಯಮಗಳನ್ನು ಸಂಚಾರಿ ಪೊಲೀಸ್ ಠಾಣಾಧಿಕಾರಿಗಳಿಂದ ತಿಳಿಸಿಕೊಡುವಂತೆ ಸೂಚಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. 


    ಸಾಮಾಜಿಕ ಕಾರ್ಯಕರ್ತ ತೀರ್ಥೇಶ್ ದೂರು ಸಲ್ಲಿಸಿ, ತಾಲೂಕಿನ ಕಸಬಾ-೧ರ ಸೀಗೆಬಾಗಿ ಗ್ರಾಮದ ಬೆಂಡೆಕಟ್ಟೆ ಕೆರೆ ಒತ್ತುವರಿಯಾಗಿದ್ದು, ಕೆರೆ ಜಾಗದಲ್ಲಿ ನಿವೇಶನಗಳು, ಮನೆ, ಸಾಮಿಲ್ ಹಾಗು ಕಟ್ಟಡಗಳು ನಿರ್ಮಾಣವಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಒತ್ತುವರಿ ತೆರವುಗೊಳಿಸದೆ ನಿರ್ಲಕ್ಷ್ಯತನ ವಹಿಸಿದ್ದಾರೆ. ಅಲ್ಲದೆ ಕೆರೆ ಜಾಗಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಾಲೂಕು ಆಡಳಿತದಿಂದ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಬೇಕು. ಮತ್ತೊಂದು ಪ್ರಕರಣದಲ್ಲಿ ನಗರಸಭೆ ವ್ಯಾಪ್ತಿಯ ಖಲಂದರ್ ನಗರದಲ್ಲಿ ೩ ಎಕರೆ ೧೬ ಗುಂಟೆ ವಿಸ್ತೀರ್ಣದ ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ಹಾಗು ಇನ್ನಿತರ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪವೆಸಗುತ್ತಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. 
    ದಲಿತ ಮುಖಂಡ ಕುಬೇಂದ್ರಪ್ಪ ಸೇರಿದಂತೆ ಇನ್ನಿತರರು ತಮ್ಮ ದೂರುಗಳನ್ನು ಸಲ್ಲಿಸಿ ಇತ್ಯರ್ಥಪಡಿಸುವಂತೆ ಸಭೆಯಲ್ಲಿ ಮನವಿ ಮಾಡಿದರು. 
    ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಗುರಾಜ್ ಎನ್. ಮೈಲಾರಿ ಉಪಸ್ಥಿತರಿದ್ದರು. 
    ಶಿಕ್ಷಣ, ಕಂದಾಯ, ನಗರಸಭೆ, ಲೋಕೋಪಯೋಗಿ, ನೀರಾವರಿ, ಕೃಷಿ, ಅರಣ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಹಾಗು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.