Monday, June 30, 2025

ಫೈಲ್ವಾನ್ ಕೆಂಚಪ್ಪ ನಿಧನ

ಫೈಲ್ವಾನ್ ಕೆಂಚಪ್ಪ 
    ಭದ್ರಾವತಿ : ಹಳೇನಗರದ ಜಟ್‌ಪಟ್ ನಗರದ ನಿವಾಸಿ, ಕಂಚಿ ಗರಡಿ ಮನೆ ಹಿರಿಯ ಕುಸ್ತಿಪಟು, ಫೈಲ್ವಾನ್ ಕೆಂಚಪ್ಪ(೮೭) ಭಾನುವಾರ ನಿಧನ ಹೊಂದಿದರು. 
    ಇಬ್ಬರು ಪತ್ನಿಯರು, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. 
    ಕೆಂಚಪ್ಪ ನಗರದ ಪ್ರಸಿದ್ದ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದು, ಇವರಿಂದ ಹಲವಾರು ಯುವಕರು ಕುಸ್ತಿ ತರಬೇತಿ ಪಡೆದು ಗುರುತಿಸಿಕೊಂಡಿದ್ದಾರೆ. ಕೆಂಚಪ್ಪ ಶಾಸಕ ಬಿ.ಕೆ ಸಂಗಮೇಶ್ವರ್ ಆಪ್ತರಲ್ಲಿ ಒಬ್ಬರಾಗಿದ್ದು, ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಇವರ ಸಹೋದರರಾದ ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್, ಸ್ಥಳೀಯ ಫೈಲ್ವಾನ್‌ಗಳು ಸಂತಾಪ ಸೂಚಿಸಿದ್ದಾರೆ. 

ಎಚ್. ಸಿದ್ದಲಿಂಗಸ್ವಾಮಿಗೆ ಪಿಎಚ್‌ಡಿ ಪದವಿ

ಎಚ್. ಸಿದ್ದಲಿಂಗಸ್ವಾಮಿ 
    ಭದ್ರಾವತಿ: ನಗರದ ಚಮನ್ ಷಾ ವಲಿ ಉರ್ದು ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಎಚ್. ಸಿದ್ದಲಿಂಗಸ್ವಾಮಿ ಅವರು ಶ್ರೀನಿವಾಸವನಮ್, ಕುಪ್ಪಮ್, ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ  ಪದವಿ ಪಡೆದುಕೊಂಡಿದ್ದಾರೆ. 
    ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಘಟನೋತ್ತರ ಪ್ರಾಂಶುಪಾಲ ಡಾ. ಕೆ.ಬಿ ಧನಂಜಯರವರ ಮಾರ್ಗದರ್ಶನಲ್ಲಿ `ಪ್ರಾಬ್ಲಮ್ಸ್ ಅಂಡ್ ಪ್ರಾಸ್ಪೆಕ್ಟಸ್ ಆಫ್ ಸ್ಮಾಲ್ ಇಂಡಸ್ಟ್ರೀಸ್ ಇನ್ ಕರ್ನಾಟಕ ವಿತ್ ಸ್ಪೆಷಲ್ ರೆಫೆರೆನ್ಸ್ ಆಫ್ ಶಿವಮೊಗ್ಗ ಡಿಸ್ಟ್ರಿಕ್ಟ್' ಎಂಬ ವಿಷಯ ಕುರಿತು ಅರ್ಥಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿ ವರದಿ ಮಂಡಿಸಿದ್ದರು. ಸಿದ್ದಲಿಂಗಸ್ವಾಮಿಯವರು ಮೂಲತಃ ಶಿವಮೊಗ್ಗ ಹರಿಗೆ ನಿವಾಸಿಯಾಗಿದ್ದು, ಹನುಮಂತಪ್ಪ-ಗೌರಮ್ಮ ದಂಪತಿ ಪುತ್ರರಾಗಿದ್ದಾರೆ. 

Sunday, June 29, 2025

ಮಾದಕ ವಸ್ತುಗಳಿಗೆ ಯುವ ಸಮೂಹ ಬಲಿ : ಆತಂಕ

ಆರ್‌ಎಎಫ್ ಬೆಟಾಲಿಯನ್‌ನಲ್ಲಿ ಮಾದಕ ವಸ್ತುಗಳ ವಿರೋಧಿ ದಿನ ಆಚರಣೆ 

ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ೯೭ನೇ ಬೆಟಾಲಿಯನ್ ಆವರಣದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಮಾಂಡರ್-೨ ಸಂತೋರವರು ಮಾತನಾಡಿದರು. 
    ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ೯೭ನೇ ಬೆಟಾಲಿಯನ್ ಆವರಣದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಚರಿಸಲಾಯಿತು.
    ಬೆಟಾಲಿಯನ್ ಕಮಾಂಡರ್-೨(ಪಿಪಿಎಂಜಿ) ಸಂತೋರವರು ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿ, ಇತ್ತೀಚೆಗೆ ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿರುವ ಸುದ್ದಿಗಳು ಕೇಳಿ ಬರುತ್ತಿವೆ. ಇದರಿಂದಾಗಿ ದೇಶದ ಭವಿಷ್ಯದ ಪ್ರಜೆಗಳಾದ ಯುವಕರ ಬದುಕು ಹಾಗು ಕುಟುಂಬಗಳು ನಾಶವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. 
    ಯುವ ಸಮೂಹ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದಾಗ ಮಾತ್ರ ದೇಶ ಸುಭಿಕ್ಷೆಯಾಗುತ್ತದೆ. ಈ ದಿಸೆಯಲ್ಲಿ ಯುವ ಸಮೂಹ ಸೇರಿದಂತೆ ದೇಶದ ಭದ್ರತೆಗಾಗಿ ಪ್ರತಿಯೊಬ್ಬ ನಾಗರಿಕರು ಶ್ರಮವಹಿಸಿ ಮಾದಕ ವಸ್ತುಗಳನ್ನು ತೊಲಗಿಸಬೇಕಾಗಿದೆ ಎಂದು ಕರೆ ನೀಡಿದರು.
  ಕಮಾಂಡರ್-೨ ಸಚಿನ್ ಗಾಯಕ್ವಾಡ್, ಉಪ ಕಮಾಂಡರ್ ರಮೇಶ್ ಸಿಂಗ್, ಸಹಾಯಕ ಕಮಾಂಡರ್ ಅನಿಲ್‌ಕುಮಾರ್ ಮುಂತಾದವರು ಉಪಸ್ಥಿತದ್ದರು.

ದ್ವಿಚಕ್ರ ವಾಹನ ದುರಸ್ತಿಗಾರರ ಬದುಕು ಉತ್ತಮಗೊಳ್ಳಲಿ : ಬಿ.ಕೆ ಮೋಹನ್

ಭದ್ರಾವತಿ ಮಹಾತ್ಮಗಾಂಧಿ(ಟಿ.ಕೆ ರಸ್ತೆ)ಯ ಪಾಂಡುರಂಗ ಮಂದಿರದಲ್ಲಿ ಸರ್.ಎಂ ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೩೭ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ : ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಸರ್ಕಾರ ದ್ವಿಚಕ್ರ ವಾಹನ ದುರಸ್ತಿಗಾರರಿಗೂ ಕಲ್ಪಿಸಿಕೊಟ್ಟಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು. 
    ಅವರು ಭಾನುವಾರ ನಗರದ ಮಹಾತ್ಮಗಾಂಧಿ(ಟಿ.ಕೆ ರಸ್ತೆ)ಯ ಪಾಂಡುರಂಗ ಮಂದಿರದಲ್ಲಿ ಸರ್.ಎಂ ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೩೭ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 
    ನಗರದಲ್ಲಿ ದ್ವಿಚಕ್ರ ವಾಹನ ದುರಸ್ತಿಗಾರರು ಬಹಳ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದು, ಇವರಿಗೂ ಉತ್ತಮ ಜೀವನ ನಿರ್ವಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗಿದೆ. ಸರ್ಕಾರ ವಿವಿಧ ಸೌಲಭ್ಯಗಳು ಇವರಿಗೂ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ನೇತೃತ್ವವಹಿಸಿರುವವರು ಗಮನ ಹರಿಸಬೇಕೆಂದರು. 
    ಸರ್ಕಾರದ ವಿವಿಧ ಯೋಜನೆಗಳಿಗೆ ಕಾರ್ಮಿಕ ಇಲಾಖೆ ಮೂಲಕ ಅರ್ಹರು ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ. ಈ ಹಿನ್ನಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಸಂಘಟನೆ ಇನ್ನೂ ಹೆಚ್ಚು ಬಲಗೊಳ್ಳಬೇಕು. ಆಗ ಮಾತ್ರ ನಮ್ಮ ಬೇಡಿಕೆಗಳು ಈಡೇರುತ್ತವೆ ಎಂದರು.  ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್ ಪಾಲ್ಗೊಂಡು ಮಾತನಾಡಿ, ಗ್ಯಾರಂಟಿ ಯೋಜನೆಯಡಿ ಅರ್ಹ ಕಾರ್ಮಿಕರು ಪಡೆದುಕೊಳ್ಳಬಹುದಾದ ಯೋಜನೆಗಳ ಕುರಿತು ಮಾಹಿತಿ ನೀಡಿದರು. 
    ಸಮಾರಂಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಅಖಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದ ಸುಂದರ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಬಾಬು ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ದ್ವಿಚಕ್ರ ವಾಹನ ಬಿಡಿಭಾಗಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿತ್ತು. 

Saturday, June 28, 2025

ಯಶಸ್ಸಿಗೆ ಕನಸು ಕಂಡರೆ ಸಾಲದು ದೃಢ ಸಂಕಲ್ಪ ಮುಖ್ಯ : ಡಿ. ಪ್ರಭಾಕರ್ ಬೀರಯ್ಯ

ಭದ್ರಾವತಿ ದೈವಜ್ಞ ಕಲ್ಯಾಣ ಮಂದಿರದಲ್ಲಿ ಗಾಂಧಿನಗರದ ಸೇಂಟ್ ಜೋಸೆಫ್ ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ, ಶ್ರೀ ಸತ್ಯಸಾಯಿ ಬಾಬಾ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ : ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಶಸ್ಸು ಕಾಣಲು ಕನಸು ಕಂಡರೆ ಸಾಲದು, ಛಲ ಹೊತ್ತು ದೃಢ ಸಂಕಲ್ಪದೊಂದಿಗೆ ಶ್ರಮವಹಿಸಿದಾಗ ಮಾತ್ರ ಕನಸು ನನಸಾಗಿಸಬಹುದೆಂದು ನಗರದ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ, ಶ್ರೀ ಸತ್ಯಸಾಯಿ ಬಾಬಾ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಹೇಳಿದರು.
     ಅವರು ಶನಿವಾರ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಗಾಂಧಿನಗರದ ಸೇಂಟ್ ಜೋಸೆಫ್ ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ಮಹಾತ್ಮಗಾಂಧಿ, ಸಚಿನ್ ತೆಂಡೋಲ್ಕರ್, ವಿಶ್ವನಾಥ್‌ಆನಂದ್, ಸ್ವಾಮಿ ವಿವೇಕಾನಂದ ಸೇರಿದಂತೆ ಇನ್ನೂ ಮುಂತಾದವರು ಛಲ ಮತ್ತು ದೃಢ ಸಂಕಲ್ಪದ ಹಾದಿಯಲ್ಲಿ ಸಾಗಿ ಸಾಕರಾಗಿದ್ದಾರೆ. ಇನ್‌ಫೋಸಿಸ್ ನಾರಾಯಣಮೂರ್ತಿ, ಸುಧಾಮೂರ್ತಿ ಅವರಿಗೆ ಟಾಟಾ ಕೊಡುಗೆ ನೀಡಿದ ನೂರು ರು. ಗಳಿಂದ ಇಂದು ಲಕ್ಷ ಲಕ್ಷ ಕೋಟಿ ರು. ಒಡೆಯರಾಗಿರುವುದು ಅವರ ದೃಢತೆ, ಗುರಿ, ಸಾಧನೆಯಿಂದ ಜಗತ್ತಿಗೆ ಹೆಸರಾಗಿದ್ದಾರೆ. 
    ವಿದ್ಯಾರ್ಥಿಗಳಲ್ಲಿ ಅನೇಕ ಚಿಂತನೆಗಳನ್ನು ಹೊತ್ತ ಚಂಚಲತೆಯ ಮನಸ್ಸನ್ನು ನಿಗ್ರಹಿದರೆ ಮಾತ್ರ ನಿಮ್ಮ ಆಲೋಚನೆಗಳು ಉಪಯೋಗಕ್ಕೆ ಬರುತ್ತವೆ. ಸಮಯ ಪ್ರಜ್ಞೆ, ಸಮಯ ನಿಗದಿಯನ್ನು ಮರೆಯಬಾರದು. ೫ ವರ್ಷದ ಅವಧಿಯಲ್ಲಿ ಪದವಿ ಪಡೆಯಲು ನಿಗದಿಯಂತೆ ಭವಿಷ್ಯದಲ್ಲೂ ಸಂಕಲ್ಪದ ನಿಗದಿ ಪಡಿಸಿಕೊಳ್ಳಬೇಕು. ಆಸೆ, ಆಕಾಂಕ್ಷೆಗಳಿಗೆ ಅಡಿಪಾಯವಿಲ್ಲವಾಗಿದೆ. ಪೋಷಕರು ಮಕ್ಕಳಿಗೆ ಸಂಸ್ಕೃತಿ, ನೀತಿ ಮಾರ್ಗಗಳ ವಿವೇಚನೆ ತೋರಬೆಕು. ಸನ್ನಡತೆಯಲ್ಲಿ ಸಾಗುವಂತೆ ಪ್ರೇರೇಪಿಸಬೇಕೆಂದರು.
    ಜ್ಞಾನ ಜ್ಯೋತಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಸಂಧ್ಯಾಬಾಯಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯಶಸ್ಸು ಸುಮ್ಮನೆ ಬರಲ್ಲ. ಅದನ್ನು ಹುಡುಕಿ ಹೋಗಬೇಕು. ಭಕ್ತಿಯಿಂದ ಗುರಿ ಮುಟ್ಟಬಹುದು. ಕಷ್ಟ ಪಟ್ಟು ಶ್ರದ್ದೆಯಿಂದ ಗುರಿ ಮುಟ್ಟಿದಾಗ ಮಾತ್ರ ಸುಖ ಲಭಿಸುತ್ತದೆ ಎಂದರು. 


ಭದ್ರಾವತಿ ದ್ವಿತೀಯ ಪಿಯು ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ರ್‍ಯಾಂಕ್ ಗಳಿಸಿ ಕೀರ್ತಿ ತಂದ ಹೆಚ್.ವಾಣಿ ಮತ್ತು ಪೋಷಕರನ್ನು ಸನ್ಮಾನಿಸಿ ೫೦ ಸಾವಿರ ನಗದು ಬೆಳ್ಳಿ ನಾಣ್ಯ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.      
    ಕಾಲೇಜಿನ ಪ್ರಾಂಶುಪಾಲರಾದ ಲತಾ ರಾಬರ್ಟ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಕ್ಕಳಲ್ಲಿ ಸಂಸ್ಕಾರ, ವಿವೇಚನೆ, ಶ್ರದ್ದೆ, ನಯ-ವಿನಯ, ಹಿರಿಯರಿಗೆ ಗೌರವಿಸುವ ಅನೇಕ ಉತ್ತಮ ಮೌಲ್ಯಗಳನ್ನು ತಿಳಿಸಿಕೊಡುವ ವಿದ್ಯಾಸಂಸ್ಥೆ ನಮ್ಮದಾಗಿದೆ. ಇಂತಹ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳೇ ಧನ್ಯರು ಎಂದರು. 
    ಜ್ಞಾನ ಜ್ಯೋತಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಉಪಾಧ್ಯಕ್ಷ ವೆಂಕಟರಮಣ ಶೇಟ್, ಟ್ರಸ್ಟ್ ಖಜಾಂಚಿ ರಾಬರ್ಟ್ ಡಿಸೋಜಾ ಮಾತನಾಡಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಕೀರ್ತಿ ತಂದಿರುವ ವಿದ್ಯಾರ್ಥಿನಿ ಎಚ್.ವಾಣಿ ಮತ್ತು ಪೋಷಕರನ್ನು ಸನ್ಮಾನಿಸಿ ೫೦ ಸಾವಿರ ನಗದು, ಬೆಳ್ಳಿ ನಾಣ್ಯ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. 
    ಅತಿಹೆಚ್ಚು ಅಂಕ ಪಡೆದು ಉತ್ತೀರ್ಣರಾದ ೬೮ ವಿದ್ಯಾರ್ಥಿಳಿಗೆ ಮತ್ತು ಅವರ ಪೋಷಕರಿಗೆ ಬೆಳ್ಳಿ ನಾಣ್ಯ ಮತ್ತು ಪ್ರಶಸ್ತಿ ಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಆರಂಭದಲ್ಲಿ ತೆರೇಸಾ ಡೆಲ್ಸಿ ಸ್ವಾಗತ ನೃತ್ಯ ಪ್ರದರ್ಶಿಸಿದರೆ, ಆದಿತಿ ಲೋಕೇಶ್, ಆರ್.ಪಿ.ವರ್ಷ ಪ್ರಾರ್ಥಿಸಿದರು. ಡಿ.ವರ್ಷ ಸ್ವಾಗತಿಸಿ, ವಸಂತ್ ಅತಿಥಿಗಳ ಪರಿಚಯಿಸಿದರು, ಬಿ.ಬಿ ಲಕ್ಷ್ಮಿಶ್ರೀ ವಂದಿಸಿದರೆ, ಆನಂ ನಶ್ರ, ಸುಹಾ ಕಮಲ್ ನಿರೂಪಿಸಿದರು.

ಭದ್ರಾ ಜಲಾಶಯದಲ್ಲಿ ಒಂದೆಡೆ ಅವೈಜ್ಞಾನಿಕ, ಮತ್ತೊಂದೆಡೆ ಕಳಪೆ ಕಾಮಗಾರಿ ಭೀತಿ

ಜಲಾಶಯದಲ್ಲಿ ನೀರಿದ್ದರೂ ಬೆಳೆ ಬೆಳೆಯದಂತಹ ಸ್ಥಿತಿ 

ಭದ್ರಾ ಜಲಾಶಯ 

    * ಅನಂತಕುಮಾರ್ 
    ಭದ್ರಾವತಿ: ತಾಲೂಕಿನ ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರಿಗೆ ವ್ಯವಸಾಯ ಹಾಗೂ ಗದಗ-ಬೆಟಗೇರಿ ಪಟ್ಟಣದವರೆಗೂ ಜನರಿಗೆ ಕುಡಿಯುವ ನೀರಿಗೆ ಆಧಾರವಾಗಿದೆ. ಭದ್ರಾ ಜಲಾಶಯದ ನೀರನ್ನು ನೆಚ್ಚಿಕೊಂಡು ರೈತರು ಭತ್ತ, ಕಬ್ಬು, ಅಡಕೆ, ತೆಂಗು ಮುಂತಾದ ಬೆಳೆಗಳನ್ನು ಬೆಳೆದು ಬದುಕು ಕಟ್ಟಿಕೊಂಡಿರುತ್ತಾರೆ. ಇದೀಗ ಜಲಾಶಯದಲ್ಲಿ ನೀರಿನ ಕೊರತೆ ಇಲ್ಲದಿದ್ದರೂ ಸಹ ಎಡದಂಡೆ ನಾಲೆ ರೈತರು ಬೆಳೆ ಬೆಳೆಯದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಒಂದೆಡೆ ರೈತರು ಆತಂಕಕ್ಕೆ ಒಳಗಾಗಿದ್ದರೆ, ಮತ್ತೊಂದೆಡೆ ಜಲಾಶಯದ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. 
    ಬಲದಂಡೆ ನಾಲೆಯಲ್ಲಿ ಅವೈಜ್ಞಾನಿಕ ಕಾಮಗಾರಿ : 
    ಮಧ್ಯ ಕರ್ನಾಟಕದ ಬೃಹತ್ ಜಲಾಶಯದ ಸುರಕ್ಷತೆಯನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ೧೬೬೦ ಹಳ್ಳಿಗಳಿಗೆ ಕುಡಿಯಲು ನೀರನ್ನು ಒದಗಿಸುವ ಬೃಹತ್ ಕಾಮಗಾರಿಯನ್ನು ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ (ಬಫರ್ ಜೋನ್‌ನಲ್ಲಿ) ಕೈಗೊಂಡಿದೆ. ಈ  ಕಾಮಗಾರಿ ಕೈಗೊಂಡಿರುವ ಪ್ರದೇಶವು ಅತೀ ಸೂಕ್ಷ್ಮ ಪ್ರದೇಶವಾಗಿರುತ್ತದೆ. ಈ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳಬಾರದೆಂಬ ನಿಯಮಾವಳಿಗಳಿದ್ದರೂ ಬಹುಗ್ರಾಮ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಕುಡಿಯುವ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡಲು ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ ನಡೆಸುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿರುತ್ತದೆ.
    ಜಲಾಶಯದ ನಿರ್ಬಂಧಿತ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜಲಾಶಯ ತುಂಬಿದಾಗ ನೀರಿನ ಒತ್ತಡದಿಂದಾಗಿ ಯಾವುದೇ ರೀತಿಯ ಅಪಾಯಗಳು ಸಂಭವಿಸಬಹುದಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ಮಳೆಬಿದ್ದು ಗುಡ್ಡಗಳು ಕುಸಿಯುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇವೆಲ್ಲವನ್ನೂ ಸರ್ಕಾರ ಮನಗಂಡಿದ್ದರೂ ಜಲಾಶಯದ ಸುರಕ್ಷತೆ ಮತ್ತು ಜನರ ಹಿತಾಸಕ್ತಿಯನ್ನು ಕಡೆಗಣಿಸಿ ಈ ಕಾಮಗಾರಿ ಕೈಗೊಂಡಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. 

ಸುರೇಶ್, ರೈತ ಮುಖಂಡರು. 

ಭದ್ರಾ ಜಲಾಶಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಎರಡು ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ ರೈತರ ಹಿತಾಸಕ್ತಿ ಕಾಪಾಡುವಂತೆ ಹಾಗು ಜಲಾಶಯದ ಸುರಕ್ಷತೆಗೆ ಗಮನ ಹರಿಸುವಂತೆ ಜಲಾಶಯದ ಬಳಿ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದೆ. ಈ ಎರಡು ಕಾಮಗಾರಿಗಳಿಂದ ಎದುರಾಗಬಹುದಾದ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು, ಸಚಿವರು, ಸ್ಥಳೀಯ ಜನಪ್ರತಿನಿಧಿಗಳು ಹಾಗು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಹಿಂದೆ ಸಹ ಕಳಪೆ ಕಾಮಗಾರಿ ಸಂಬಂಧ ಸರ್ಕಾರದ ಗಮನಕ್ಕೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಈ ಬಾರಿ ಯಾರ ಗಮನಕ್ಕೂ, ಕಾಮಗಾರಿ ಕುರಿತು ಯಾವ ವಿಚಾರವೂ ತಿಳಿಸದೆ ತರಾತುರಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ತಕ್ಷಣ ಕಾಮಗಾರಿ ಸ್ಥಗಿತಗೊಳಿಸಬೇಕು. ಪ್ರಸ್ತುತ ಕೈಗೊಂಡಿರುವ ಕಾಮಗಾರಿಯಿಂದ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಎಚ್ಚರವಹಿಸಬೇಕು. 
                                                                                                          -ಸುರೇಶ್, ರೈತ ಮುಖಂಡರು.
       ಎಡದಂಡೆ ನಾಲೆಯಲ್ಲಿ ಕಳಪೆ ಕಾಮಗಾರಿ : 
    ಬಲದಂಡೆ ನಾಲೆಯಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಯುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಎಡದಂಡೆ ನಾಲೆಯಲ್ಲಿ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. 
    ಎಡದಂಡೆ ನಾಲೆಯ ಮುಖ್ಯ ಗೇಟ್‌ನಲ್ಲಿ ನೀರಿನ ಸೋರಿಕೆ ತಡೆಯಲು ಕಾಮಗಾರಿ ನಡೆಸಲಾಗುತ್ತಿದ್ದು, ದೊಡ್ಡ ಮಟ್ಟದ ಅಂಡರ್ ವಾಟರ್ ಮತ್ತು ದೊಡ್ಡ ಮಟ್ಟದ ಗೇಟ್ ಅಳವಡಿಸಿರುವ ಕಾಮಗಾರಿಗಳನ್ನು ನಿರ್ವಹಿಸಿರುವ ಪ್ರಮಾಣ ಪತ್ರ ಪಡೆಯದಿರುವ ಉತ್ತರ ಪ್ರದೇಶದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಈ ಕಂಪನಿಗೆ ಕಾಮಗಾರಿ ನಡೆಸಿರುವ ಕುರಿತು ಅನುಭವ ಇಲ್ಲದಿರುವುದು ಆರಂಭದಲ್ಲಿಯೇ ತಿಳಿಯುತ್ತಿದ್ದು, ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಅವಧಿಯಲ್ಲಿ ಕಾಮಗಾರಿ ನಡೆಸಬೇಕಿತ್ತು. ಆದರೆ ಅದನ್ನು ಮಾಡದೆ ಜಲಾಶಯ ಭರ್ತಿಯಾಗುತ್ತಿರುವ ಸಂದರ್ಭದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಈಗಾಗಲೇ ಜಲಾಶಯದ ಮುಖ್ಯಗೇಟ್ ತೆಗೆದು ಹಾಕಲಾಗಿದ್ದು, ಅಂದಾಜಿನ ಪ್ರಕಾರ ಈ ಕಾಮಗಾರಿ ಮುಕ್ತಾಯಗೊಳ್ಳಲು ಇನ್ನೂ ೨-೩ ತಿಂಗಳ ಬೇಕಾಗಿರುತ್ತದೆ. ಆದರೆ ೪೫ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದ ಗುಣಮಟ್ಟದ ಕಾಮಗಾರಿ ನಿರೀಕ್ಷಿಸಲು ಸಾಧ್ಯವೇ ಎಂಬ ಪ್ರಶ್ನೆ ರೈತ ಮುಖಂಡರದ್ದಾಗಿದೆ. 
    ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ: 
    ಎಡದಂತೆ ನಾಲೆಯಲ್ಲಿ ಮುಖ್ಯಗೇಟ್ ಅಳವಡಿಸುವ ಕಾಮಗಾರಿ ಕೈಗೊಂಡಿರುವ ಹಿನ್ನಲೆಯಲ್ಲಿ ೪೫ ದಿನಗಳ ವರೆಗೆ ನಾಲೆಯಲ್ಲಿ ನೀರು ಹರಿಸುವುದಿಲ್ಲ.  ಈ ಹಿನ್ನಲೆಯಲ್ಲಿ ರೈತರು ಯಾವುದೇ ಬೆಳೆ ಬೆಳೆಯದಂತೆ ಅಧಿಕಾರಿಗಳು ಸೂಚಿಸಿದ್ದಾರೆ. 
    ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿ ವರ್ಷ ಜಲಾಶಯದ ನೀರನ್ನು ನಂಬಿಕೊಂಡು ಬದುಕುತ್ತಿರುವ ರೈತರು ಭತ್ತ, ಮುಸುಕಿನ ಜೋಳ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಬಹುಮುಖ್ಯವಾಗಿ ಭತ್ತದ ಬೆಳೆ ಬೆಳೆಯಲೇ ಬೇಕಾಗಿದೆ. ಜಾನುವಾರುಗಳಿಗೆ ಮೇವು ಅಗತ್ಯವಿರುವುದರಿಂದ ಭತ್ತದ ಬೆಳೆ ಅನಿವಾರ್ಯವಾಗಿದೆ. ಬಹುತೇಕ ಕೃಷಿಕರು ಹಾಲು ಮಾರಾಟ ಮಾಡಿ ಬದುಕುತ್ತಿದ್ದಾರೆ. ಬೆಳೆ ಬೆಳೆಯದಿದ್ದರೆ ಸಂಕಷ್ಟ ಎದುರಾಗಲಿದೆ. ಈ ಹಿನ್ನಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾಗಿದೆ. ರೈತರಿಗೆ ಪರ್ಯಾಯ ವ್ಯವಸ್ಥೆ ಕೈಗೊಂಡು ಕಾಮಗಾರಿ ಮುಂದುವರೆಸಬೇಕೆಂಬುದು ರೈತರ ಮುಖಂಡರ ಒತ್ತಾಯವಾಗಿದೆ.  
- ಎಚ್.ಆರ್ ಬಸವರಾಜಪ್ಪ, ರೈತ ಮುಖಂಡರು. 

ಕುಡಿಯುವ ನೀರಿಗಾಗಿ ಕಾಮಗಾರಿ ನಡೆಸಲು ಯಾವುದೇ ಅಭ್ಯಂತರವಿಲ್ಲ. ಆದರೆ ಅವೈಜ್ಞಾನಿಕ ಕಾಮಗಾರಿ ಕೈಬಿಟ್ಟು ನದಿ ಪಾತ್ರದಿಂದಲ್ಲೇ ಜಾಕ್ವೆಲ್ ಮೂಲಕ ನೀರು ಹರಿಸುವ ಕಾಮಗಾರಿ ಕೈಗೊಳ್ಳಬಹುದಾಗಿದೆ. ತಕ್ಷಣ ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸಿ ಮುಂದಿನ ದಿನಗಳಲ್ಲಿ ಬಲದಂಡೆ ನಾಲೆಗೆ ಯಾವುದೇ ರೀತಿ ಅಪಾಯಗಳು ಸಂಭವಿಸದಂತೆ ಎಚ್ಚರವಹಿಸಬೇಕು. ಅಲ್ಲದೆ ಎಡದಂಡೆ ನಾಲೆಯ ಮುಖ್ಯಗೇಟ್ ಕಾಮಗಾರಿ ತಕ್ಷಣ ಮುಕ್ತಾಯಗೊಳಿಸಿ ನಾಲೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ.  
                                                                                  - ಎಚ್.ಆರ್ ಬಸವರಾಜಪ್ಪ, ರೈತ ಮುಖಂಡರು. 

    ದೊಡ್ಡ ಅಪಾಯ ಎದುರಾಗುವ ಸಾಧ್ಯತೆ : 
    ಪ್ರಸ್ತುತ ಜಲಾಶಯದಲ್ಲಿ ಕೈಗೊಳ್ಳಲಾಗುತ್ತಿರುವ ಬಲದಂಡೆ ಅವೈಜ್ಞಾನಿಕ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಿ ಕೈಗೊಂಡಿರುವ ಕಾಮಗಾರಿ ಸ್ಥಳವನ್ನು ಮೊದಲಿನಂತೆ ಭದ್ರಪಡಿಸಬೇಕಾಗಿದೆ. ಒಂದು ವೇಳೆ ವಿಳಂಬದಲ್ಲಿ ಮಳೆ ಅಧಿಕವಾಗಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದಲ್ಲಿ ಬಲದಂಡೆಯೇ ಸಂಪೂರ್ಣ ನಾಶವಾಗುವ ಭೀತಿ ಎದುರಾಗಿದೆ. ಮತ್ತೊಂದೆಡೆ ಎಡದಂಡೆ ಮುಖ್ಯ ಗೇಟ್ ಅಳವಡಿಕೆ ಕಾಮಗಾರಿ ಸಹ ಮೊದಲಿನಂತೆ ಕಾಯ್ದುಕೊಳ್ಳಬೇಕಾಗಿದೆ. ಒಂದು ವೇಳೆ ವಿಳಂಬವಾದಲ್ಲಿ ಹೊಸಪೇಟೆ ಜಲಾಶಯದಲ್ಲಿ ಕಳೆದ ವರ್ಷ ಸಂಭವಿಸಿದ ದುರಂತ ಮರುಕಳುಹಿಸುವ ಸಾಧ್ಯತೆ ಇಲ್ಲಿ ತಳ್ಳಿಹಾಕುವಂತಿಲ್ಲ. ಜಲಾಶಯದಲ್ಲಿನ ಅಪಾರ ಪ್ರಮಾಣದ ನೀರು ಪೋಲಾಗುವ ಭೀತಿ ಎದುರಾಗಿದೆ. 
    ಒಟ್ಟಾರೆ ಭದ್ರಾ ಜಲಾಶಯ ವ್ಯಾಪ್ತಿಯ ರೈತರು ಒಂದಡೆ ಅವೈಜ್ಞಾನಿಕ ಕಾಮಗಾರಿ, ಮತ್ತೊಂದೆಡೆ ಕಳಪೆ ಕಾಮಗಾರಿ ಭೀತಿಯಲ್ಲಿ ನಲುಗಿಹೋಗಿದ್ದಾರೆ. ಸರ್ಕಾರ ರೈತರ ಭೀತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ. 

Friday, June 27, 2025

ತಾಲೂಕು ಕಛೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಶುಕ್ರವಾರ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿದರು. 
    ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಶುಕ್ರವಾರ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. 
    ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕೆಂಪೇಗೌಡರ ಆಡಳಿತ ವ್ಯವಸ್ಥೆ, ಭವಿಷ್ಯದ ಚಿಂತನೆ, ನಾಡಿಗೆ ನೀಡಿರುವ ಕೊಡುಗೆ ಸ್ಮರಿಸಲಾಯಿತು. 
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ರಿಯಾಜ್ ಅಹಮದ್, ಸದಸ್ಯರಾದ ಬಿ.ಕೆ ಮೋಹನ್, ಮಂಜುಳ ಸುಬ್ಬಣ್ಣ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಪರುಸಪ್ಪ ಕುರುಬರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉಪತಹಸೀಲ್ದಾರ್ ಮಂಜಾನಾಯ್ಕ,  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಕಛೇರಿ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.