ಸೋಮವಾರ, ಆಗಸ್ಟ್ 18, 2025

ಹಬ್ಬ ಆಚರಿಸುವುದು ಹಕ್ಕು, ಆದರೆ ಇನ್ನೊಬ್ಬರಿಗೆ ತೊಂದರೆಯಾಗದಿರಲಿ : ಜಿ.ಕೆ ಮಿಥುನ್ ಕುಮಾರ್

ಭದ್ರಾವತಿ ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಸೋಮವಾರ ಗೌರಿ-ಗಣೇಶ, ಈದ್ ಮಿಲಾದ್ ಹಬ್ಬದ ಅಂಗವಾಗಿ ಜಿಲ್ಲಾ ಪೊಲೀಸ್ ಭದ್ರಾವತಿ ಉಪವಿಭಾದ ವತಿಯಿಂದ ಶಾಂತಿಸಭೆ ಏರ್ಪಡಿಸಲಾಗಿತ್ತು. 
    ಭದ್ರಾವತಿ : ಹಬ್ಬಗಳನ್ನು ಆಚರಿಸುವುದು ನಾಗರಿಕರ ಹಕ್ಕು. ನಾಗರಿಕರು ತಮ್ಮ ಕರ್ತವ್ಯಗಳನ್ನು ನಿಭಾಯಿಸುವ ಜವಾಬ್ದಾರಿ ಹೊರಬೇಕಾಗಿದೆ. ಹಬ್ಬಗಳ ಆಚರಣೆಯಿಂದ ಇನ್ನೊಬ್ಬರಿಗೆ ತೊಂದರೆಯಾಗಬಾರದು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದರು. 
    ಅವರು ಸೋಮವಾರ ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗೌರಿ-ಗಣೇಶ, ಈದ್ ಮಿಲಾದ್ ಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ಶಾಂತಿಸಭೆ ನೇತೃತ್ವವಹಿಸಿ ಮಾತನಾಡಿದರು. 
    ಪ್ರತಿಯೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದೆ. ಇದನ್ನು ಪ್ರತಿಯೊಬ್ಬರು ಮೊದಲು ಅರ್ಥಮಾಡಿಕೊಳ್ಳಬೇಕು. ಪ್ರತಿಷ್ಠೆಗಾಗಿ, ತೋರ್ಪಡಿಕೆಗಾಗಿ ಹಬ್ಬಗಳನ್ನು ಆಚರಿಸಬಾರದು ಎಂದರು. 
    ಸಮಾಜದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬದುಕಬೇಕು. ಈ ನಿಟ್ಟಿನಲ್ಲಿ ಇಲಾಖೆ ಎಲ್ಲಾ ರೀತಿಯ ಕಾರ್ಯಕ್ಕೂ ಸಿದ್ದವಿದೆ. ಸಮಾಜದಲ್ಲಿ ಆಶಾಂತಿ ನಿರ್ಮಾಣ ಮಾಡುವ ಕಿಡಿಗೇಡಿಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ, ಅಪರಾಧಿ ಪ್ರಕರಣಗಳ ಹಿನ್ನಲೆಯುಳ್ಳ ಒಟ್ಟು ೮೬ ಮಂದಿ ಗಡಿಪಾರಿಗೆ ಆದೇಶವಾಗಿದ್ದು, ಇನ್ನಷ್ಟು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದರು. 
    ನಗರದ ಸೂಕ್ಷ್ಮ ಹಾಗು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಈಗಾಗಲೇ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಈ ಬಾರಿ ಸರ್ಕಾರ ಡಿಜೆ ಬಳಸದಂತೆ ನಿಷೇಧ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವುದಿಲ್ಲ. ಹಬ್ಬಗಳ ಯಶಸ್ವಿಗೆ ತಾಲೂಕು ಆಡಳಿತ, ನಗರಸಭೆ, ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹೆಚ್ಚಿನ ಸಹಕಾರ ನೀಡಬೇಕೆಂದರು.
    ಸಭೆಯಲ್ಲಿ ಪ್ರಮುಖರಾದ ಅಂಜುಮನ್ ಇಸ್ಲಾಹುಲ್ ಮುಸ್ಲಿಮೀನ್ ತಾಲೂಕು ಅಧ್ಯಕ್ಷ ಅಯೂಬ್ ಖಾನ್, ಕಾಂಗ್ರೆಸ್ ಅಲ್ಪಸಂಖ್ಯಾರ ಘಟಕದ ಮುಖಂಡ ಸಿ.ಎಂ ಖಾದರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ನಗರಸಭೆ ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಮಾಜಿ ಸದಸ್ಯ ಬಾಬಾ ಜಾನ್, ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಚುನಾಯಿತ ಪ್ರತಿನಿಧಿಗಳು ಮಾತನಾಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 
    ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ರತ್ನಪ್ರಭ, ಪೇಪರ್‌ಟೌನ್ ಪೊಲೀಸ್ ಠಾಣೆ ನಿರೀಕ್ಷಕಿ ನಾಗಮ್ಮ ಇನ್ನಿತರರು ಉಪಸ್ಥಿತರಿದ್ದರು. 
    ಪ್ರಮುಖರಾದ ಮುತುರ್ಜಾಖಾನ್, ಲತಾ ಚಂದ್ರಶೇಖರ್, ಮಣಿ ಎಎನ್‌ಎಸ್, ನಾಗೇಶ್, ಬಸವರಾಜ ಬಿ. ಆನೇಕೊಪ್ಪ, ದಿಲ್‌ದಾರ್, ಬಿ. ಮೂರ್ತಿ, ಎಂ.ಎಸ್ ರವಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 
    ನಗರವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಸ್ವಾಗತಿಸಿ, ಗ್ರಾಮಾಂತರ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳ ವಂದಿಸಿದರು.  

ದೇಹದಾರ್ಢ್ಯಪಟು ಸಿರಿಲ್ ಡಿ'ಕಾಸ್ಟ ನಿಧನ

ಸಿರಿಲ್ ಡಿ'ಕಾಸ್ಟ

    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಅಂತರಾಷ್ಟ್ರೀಯ ಮಟ್ಟದ ದೇಹದಾರ್ಢ್ಯಪಟು ಸಿರಿಲ್ ಡಿ'ಕಾಸ್ಟ(೭೭) ಸೋಮವಾರ ನಿಧನ ಹೊಂದಿದರು. 
    ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಸೇರಿದಂತೆ ಒಟ್ಟು ೬ ಜನ ಮಕ್ಕಳು ಹಾಗು ಮೊಮ್ಮಕ್ಕಳು ಇದ್ದಾರೆ. ಸಿರಿಲ್ ಡಿ'ಕಾಸ್ಟ ಅವರು ಪವರ್ ಲಿಫ್ಟಿಂಗ್ ಮತ್ತು ವೆಯಿಟ್ ಲಿಫ್ಟಿಂಗ್ ಎರಡರಲ್ಲೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು.  ರಾಯಲ್ ಹೆಲ್ತ್ ಕ್ಲಬ್ ವ್ಯಾಯಾಮ ಶಾಲೆ ಆರಂಭಿಸುವ ಹಲವಾರು ಕ್ರೀಡಾಪಟುಗಳನ್ನು ಪ್ರೋತ್ಸಾಯಿಸಿ ಗುರುತಿಸಿಕೊಳ್ಳುವಲ್ಲಿ ಕಾರಣಕರ್ತರಾಗಿದ್ದರು. 

ಪತ್ನಿ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ವ್ಯಕ್ತಿಯಿಂದ ಹಲ್ಲೆ ಪ್ರಕರಣ

ಆರೋಪಿಗೆ ೧೦ ವರ್ಷ ಕಾರಾಗೃಹ ಶಿಕ್ಷೆ, ೨೬ ಸಾವಿರ ರು. ದಂಡ 

ಕಿರಣ ಅಲಿಯಾಸ್ ಅಭಿ
    ಭದ್ರಾವತಿ : ಸುಮಾರು ೩ ವರ್ಷಗಳ ಹಿಂದೆ ಕಾಗದ ಕತ್ತರಿಸುವ ಸಣ್ಣ ಕತ್ತರಿಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗೆ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರ ಮೈಲಸ್ವಾಮಿ ಚೆಟ್ಟಿಯಾರ್‌ರವರು ೧೦ ವರ್ಷ ಕಾರಾಗೃಹ ಶಿಕ್ಷೆ ಹಾಗು ೨೬ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 
    ಶಿವಮೊಗ್ಗ ಯಲವಟ್ಟಿ ಗ್ರಾಮದ ನಿವಾಸಿ ಕಿರಣ ಅಲಿಯಾಸ್ ಅಭಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದು, ಇದೆ ಗ್ರಾಮದ ಕುಮಾರನಾಯ್ಕ ಹಲ್ಲೆಗೊಳಗಾಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಸಂಬಂಧ ೨೦೨೨ರಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಕಿರಣನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 
    ಪ್ರಕರಣ ವಿವರ:
    ಕುಮಾರನಾಯ್ಕ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿ ಚಂದ್ರನಾಯ್ಕರವರ ಪುತ್ರಿ ಕಾವ್ಯ ಅಲಿಯಾಸ್ ಗಿರಿಜಬಾಯಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರು ಯಲವಟ್ಟಿ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳು ಸಹ ಇದ್ದಾರೆ. ಕುಮಾರನಾಯ್ಕನ ಪತ್ನಿ ಕಾವ್ಯ ಕಿರಣನ ಜೊತೆ ಸಂಬಂಧ ಬೆಳೆಸಿ ಅವನ ಜೊತೆ ಓಡಿ ಹೋಗಿದ್ದು, ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿತ್ತು. ನಂತರ ಇಬ್ಬರು ಪತ್ತೆಯಾಗುವ ಮೂಲಕ ಪ್ರಕರಣ ಮುಕ್ತಾಯಗೊಂಡಿತ್ತು. 
    ಈ ನಡುವೆ ಹಿರಿಯರು ಮಾತುಕತೆ ನಡೆಸಿ ಕುಮಾರನಾಯ್ಕ ಮತ್ತು ಕಾವ್ಯ ಇಬ್ಬರಿಗೂ ಬುದ್ದಿವಾದ ಹೇಳಿ ಒಟ್ಟಿಗೆ ಜೀವನ ನಡೆಸುವಂತೆ ತಿಳಿಸಿದ್ದರು. ಅದರಂತೆ ಕಾವ್ಯ ತನ್ನ ಮಕ್ಕಳು ಹಾಗು  ಪತಿ ಜೊತೆ ತವರು ಮನೆಗೆ ಬಂದು ವಾಸವಾಗಿದ್ದು, ಈ ನಡುವೆ ಮೇ.೧೫, ೨೦೨೨ರಂದು ಮಧ್ಯ ರಾತ್ರಿ ಕುಮಾರನಾಯ್ಕ ಮನೆಯಲ್ಲಿ ಮಲಗಿದ್ದಾಗ ಕಿರಣ ಹಲ್ಲೆ ನಡೆಸಿ ಪರಾರಿಯಾಗಿದ್ದನು. 
    ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪ ಠಾಣಾ ನಿರೀಕ್ಷಕ ಅರುಣ್‌ಕುಮಾರ್ ತನಿಖಾಧಿಕಾರಿಯಾಗಿ ಹಾಗು ಮುಖ್ಯ ಕಾನ್‌ಸ್ಟೇಬಲ್ ಮೋಹನ್ ಕುಮಾರ್ ಸಹಾಯಕ ತನಿಖಾಧಿಕಾರಿ ನಿಯೋಜನೆಗೊಂಡು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ರೋಷಾರೋಪಣ ಪಟ್ಟಿ ಸಲ್ಲಿಸಿದ್ದರು.  ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು. 

ಬೆರಳಚ್ಚುಗಾರ ಮಂಜುನಾಥ್ ನಿಧನ

ಮಂಜುನಾಥ್ 
    ಭದ್ರಾವತಿ: ನಗರದ ರಂಗಪ್ಪ ವೃತ್ತ, ಜೆಎಂಎಫ್‌ಸಿ ನ್ಯಾಯಾಲಯ ಸಮೀಪದ ಬೆರಳಚ್ಚುಗಾರ(ಟೈಪಿಸ್ಟ್) ಮಂಜುನಾಥ್(೭೩) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. 
    ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗು ಸಹೋದರರು ಇದ್ದಾರೆ. ಹೊಸಮನೆ ಕುವೆಂಪು ನಗರದಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಮಂಜುನಾಥ್‌ರವರು ಹಲವಾರು ವರ್ಷಗಳಿಂದ ಬೆರಳಚ್ಚುಗಾರ ವೃತ್ತಿಯಲ್ಲಿ ತೊಡಗಿಸಿಕೊಂಡು ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ನಗರದ ಬೆರಳಚ್ಚುಗಾರರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಭಾನುವಾರ, ಆಗಸ್ಟ್ 17, 2025

ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು
    ಭದ್ರಾವತಿ: ತಾಲೂಕಿನ ಅರಕೆರೆ ಗ್ರಾಮದ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಗುರುಗಳಾದ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು(೬೯) ಭಾನುವಾರ ಲಿಂಗೈಕ್ಯರಾಗಿದ್ದಾರೆ. 
    ಪತ್ನಿ, ಓರ್ವ ಪುತ್ರ ಇದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಸೋಮವಾರ ವಿರಕ್ತ ಮಠದಲ್ಲಿ ನಡೆಯಲಿದೆ. ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು ಹಿಂದೂ ಧರ್ಮ ಹಾಗು ಸಂಸ್ಕಾರಗಳ ಕುರಿತು ಹೆಚ್ಚಿನ ಪಾಂಡಿತ್ಯ ಹೊಂದಿದ್ದರು. ಹಲವು ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಈ ಕುರಿತು ಜಾಗೃತಿ ಮೂಡಿಸಿದ್ದರು. ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಸ್ವತಃ ತಾವೇ ಮಾಸ್ಕ್‌ಗಳನ್ನು ಸಿದ್ದಪಡಿಸಿ ಉಚಿತವಾಗಿ ವಿತರಿಸಿದ್ದರು. 
    ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ವಂಶಪಾರಂಪರೆ ಮಠವಾಗಿದ್ದು, ಇವರ ತಂದೆಯ ನಿಧನ ನಂತರ ಶ್ರೀ ಮಠದ ಪೀಠಾಧಿಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. 
    ಲಿಂಗೈಕ್ಯರಾಗಿರುವ ಶ್ರೀಗಳಿಗೆ ಸಂತಾಪ: 
    ಲಿಂಗೈಕೈರಾಗಿರುವ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗ್ರಾಮದ ಮುಖಂಡ ಎಚ್.ಎಲ್ ಷಡಾಕ್ಷರಿ, ಅರಕರೆ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ. 

ಸಂತೋಷ್ ಎನ್ ಶೆಟ್ಟಿ ಸಾಹಿತ್ಯದ ಮೊದಲ ೩ ಹಾಡುಗಳು ಬೆಂಗಳೂರಿನಲ್ಲಿ ಬಿಡುಗಡೆ

ಶಾಮಿಯಾನ ಕೆಲಸದಿಂದ ಸಾಹಿತ್ಯದ ಕಡೆ ಪಯಣ 

ಭದ್ರಾವತಿ ನಗರದ ಉಜ್ಜನಿಪುರ ಸಂತೋಷ್ ಶಾಮಿಯಾನ ಮಾಲೀಕ ಸಂತೋಷ್ ಎನ್ ಶೆಟ್ಟಿ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಹಿತ್ಯದ ೩ ಹಾಡುಗಳು(ಆಲ್ಬಮ್ ಸಾಂಗ್)  ಬೆಂಗಳೂರಿನ ಮಾಗಡಿ ರೋಡ್, ಜಿಟಿ ಮಾಲ್‌ನಲ್ಲಿ ಶುಕ್ರವಾರ ಬಿಡುಗಡೆಗೊಂಡಿವೆ. ಈ ಸಂಬಂಧ ಜರುಗಿದ ಕಾರ್ಯಕ್ರಮವನ್ನು ಚಲನಚಿತ್ರ ಸಾಹಿತಿಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು ಹಾಗು ಕುಟುಂಬ ವರ್ಗದವರು ಉದ್ಘಾಟಿದರು. 
    ಭದ್ರಾವತಿ : ಶಾಮಿಯಾನ ಕೆಲಸದಿಂದ ಇದೀಗ ಸಾಹಿತ್ಯದ ಕಡೆಗೆ ಒಲವು ತೋರಿಸಿರುವ ನಗರದ ಉಜ್ಜನಿಪುರ ಸಂತೋಷ್ ಶಾಮಿಯಾನ ಮಾಲೀಕ ಸಂತೋಷ್ ಎನ್ ಶೆಟ್ಟಿ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಹಿತ್ಯದ ೩ ಹಾಡುಗಳು(ಆಲ್ಬಮ್ ಸಾಂಗ್) ಶುಕ್ರವಾರ ಬಿಡುಗಡೆಗೊಂಡಿವೆ. 
    ಬೆಂಗಳೂರಿನ ಮಾಗಡಿ ರೋಡ್, ಜಿಟಿ ಮಾಲ್‌ನಲ್ಲಿ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಪ್ರಪ್ರಥಮ ಬಾರಿಗೆ ಬಿಡುಗಡೆಗೊಂಡಿತ್ತಿರುವ ಹಾಡುಗಳಿಗೆ ಎಲ್ಲರ ಮೆಚ್ಚುಗೆ ಕಂಡು ಬಂದಿತು.  
    ವಸಂತ ಮಾಧವ ಭದ್ರಾವತಿಯವರ ಸಂಗೀತ ಮತ್ತು ಗಾಯನದಲ್ಲಿ ಮೊದಲ ಹಾಡು `ತುತ್ತು ನೀಡುವ ಹೆತ್ತ ತಾಯಿಯು', ಬೆಂಗಳೂರಿನ ಎ.ಟಿ ರವೀಶ್ ಸಂಗೀತದಲ್ಲಿ ಎರಡನೇ ಹಾಡು `ಗಣೇಶ ಡಿಜೆ ಹಾಡು' ಮತ್ತು  ಮೂರನೇ ಹಾಡು `ಪೋಲ್ಸ್ ಪೆಂಡಾಲ್, ಪೈಪ್ ಪೆಂಡಾಲ್' ಸಂತೋಷ್ ಎನ್. ಶೆಟ್ಟಿ ಸಾಹಿತ್ಯ ಹಾಗು ನಿರ್ಮಾಣದಲ್ಲಿ ಬಿಡುಗಡೆಗೊಂಡಿರುವ ಹಾಡುಗಳಾಗಿವೆ. 
ಸಮಾರಂಭದಲ್ಲಿ ಚಿತ್ರರಂಗದ ಹೆಸರಾಂತ ಚಿತ್ರ ಸಾಹಿತಿಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು, ಕುಟುಂಬ ವರ್ಗದವರು, ಹಿತೈಷಿಗಳು ಪಾಲ್ಗೊಂಡು ಸಂಭ್ರಮ ಹಂಚಿಕೊಂಡರು.
    ಕಳೆದ ಸುಮಾರು ಒಂದೂವರೆ ವರ್ಷದಲ್ಲಿ ಸಂತೋಷ್ ಎನ್ ಶೆಟ್ಟಿ ಶಾಮಿಯಾನ ಕೆಲಸದೊಂದಿಗೆ ಸಾಹಿತ್ಯದ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದು, ಈಗಾಗಲೇ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕುರಿತು ಭಕ್ತಿ ಗೀತೆಗಳ ಧ್ವನಿಸುರಳಿ ಸಹ ಬಿಡುಗಡೆಗೊಳಿಸಿದ್ದಾರೆ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗಡೆಯವರು ಧ್ವನಿಸುರಳಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
    ಇದೀಗ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸಿದ್ದು, ಉತ್ತಮ ಅವಕಾಶಗಳನ್ನು ಎದುರು ನೋಡುತ್ತಿದ್ದಾರೆ. ಈಗಾಗಲೇ ಕನ್ನಡ ಚಲನಚಿತ್ರ ರಂಗದ ಪ್ರಸಿದ್ದ ಸಾಹಿತಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆದುಕೊಂಡಿದ್ದು, ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಕನ್ನಡಿಗರ  ಮೆಚ್ಚುಗೆ, ಅಭಿಮಾನ, ಪ್ರೋತ್ಸಾಹ ಎದುರು ನೋಡುತ್ತಿದ್ದಾರೆ. 

ಅಂಬೇಡ್ಕರ್‌ರವರ ವಿಚಾರಧಾರೆ ಎಲ್ಲರೂ ಪರಿಪೂರ್ಣವಾಗಿ ಅರ್ಥಮಾಡಿಕೊಂಡಾಗ ಮಾತ್ರ ಪರಿವರ್ತನೆ ಸಾಧ್ಯ : ಅಹಿಂಸಾ ಚೇತನ್

ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಚಲನಚಿತ್ರ ನಟ ಅಹಿಂಸಾ ಚೇತನ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ: ಈ ದೇಶದ ಜನರು ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಪರಿಪೂರ್ಣವಾಗಿ ಅರ್ಥಮಾಡಿಕೊಳ್ಳುವವರೆಗೂ ದೇಶದಲ್ಲಿ ಪರಿವರ್ತನೆ ತರಲು ಸಾಧ್ಯವಿಲ್ಲ ಎಂದು ಚಲನಚಿತ್ರ ನಟ ಅಹಿಂಸಾ ಚೇತನ್ ಹೇಳಿದರು. 
    ಅವರು ನಗರದ ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. 
    ಡಾ. ಬಿ.ಆರ್ ಅಂಬೇಡ್ಕರ್‌ರವರು ದೇಶದ ಸಂವಿಧಾನ ರಚಿಸುವಾಗ ಬಲ ಮತ್ತು ಎಡ ಪಂಥಿಯರು ಹಾಗು ಮನುವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ನಡುವೆ ಕಾಂಗ್ರೆಸ್ ಪಕ್ಷ ಸಹ ಅಂಬೇಡ್ಕರ್‌ರವರಿಗೆ ಪೂರ್ಣಪ್ರಮಾಣದಲ್ಲಿ ಬೆಂಬಲ ನೀಡಲಿಲ್ಲ. ಈಗಿರುವಾಗ ನಾವು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಹೊಂದುವುದು ಸರಿಯಲ್ಲ. ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಈ ದೇಶದ ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಆಗ ಮಾತ್ರ ಏನಾದರೂ ಪರಿವರ್ತನೆ ತರಲು ಸಾಧ್ಯ ಎಂದರು. 
    ಸಭೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಸುರೇಶ್, ಶಿವಬಸಪ್ಪ, ಸತ್ಯ ಭದ್ರಾವತಿ, ಚಿನ್ನಯ್ಯ, ಡಿ. ರಾಜು, ವಿ. ವಿನೋದ್, ಕೃಷ್ಣನಾಯ್ಕ, ಪುಟ್ಟರಾಜ್, ಆರ್. ಅರುಣ್, ಮಂಜುನಾಥ್, ಯು. ಮಹಾದೇವಪ್ಪ, ಶರವಣ, ಲೋಕೇಶ್, ಸುಕನ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.