ಗುರುವಾರ, ಆಗಸ್ಟ್ 21, 2025

ಆ.೨೪ರಂದು ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆಯ ಅಂತಿಮ ಸ್ಪರ್ಧೆ


    ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಶ್ರೀ ಬಸವೇಶ್ವರ ಧರ್ಮಸಂಸ್ಥೆ ಸಹಕಾರದೊಂದಿಗೆ ಸಂಘದ ೫ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕರ್ನಾಟಕ ಸ್ಟಾರ್ ಸಿಂಗರ್-೨೦೨೫, ಸೀಸನ್-೨ ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆಯ ಅಂತಿಮ ಸ್ಪರ್ಧೆ ಆ.೨೪ರ ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಸಂಜೆ ೪ ಗಂಟೆಗೆ ನಡೆಯಲಿದೆ. 
    ರಾಜ್ಯದ ವಿವಿಧೆಡೆಗಳಿಂದ ಗಾಯಕ, ಗಾಯಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಟಿ.ವಿ ಶೋ ಗಳಲ್ಲಿ ನುಡಿಸಿದ ಖ್ಯಾತಿಯುಳ್ಳ ಸಂಗೀತ ವಾದ್ಯಗಾರರು, ನಿರೂಪಕರು, ತೀರ್ಪುಗಾರರು ಭಾಗವಹಿಸಲಿದ್ದಾರೆ. ಇದೆ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಲಾವಿದರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ, ಹಿರಿಯ ಕಲಾವಿದರಿಗೆ ದಿವಂಗತ ಜಯಶೀಲನ್ ರಾಜ್ಯ ಪ್ರಶಸ್ತಿ ಮತ್ತು ದಿವಂಗತ ಗೀತಾಂಜಲಿ ಶ್ರೀನಿವಾಸ್ ರಾಜ್ಯಪ್ರಶಸ್ತಿ ಪ್ರದಾನ ಮತ್ತು ಸಂಘದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. 
    ಈಗಾಗಲೇ ಆ.೧೬ರಂದು ಸೆಲೆಕ್ಷನ್ ಅಡಿಷನ್ ಮತ್ತು ಆ.೧೭ರಂದು ಸೆಮಿಫೈನಲ್ ಅಡಿಷನ್ ನಗರದ ನ್ಯೂಟೌನ್ ಜೆಟಿಎಸ್ ಶಾಲೆ ಪಕ್ಕದ ಲಯನ್ಸ್ ಕ್ಲಬ್, ಶುಗರ್ ಟೌನ್‌ನಲ್ಲಿ ನಡೆದಿದ್ದು, ಅಂತಿಮ ಸ್ಪರ್ಧೆ ಎಲ್ಲರ ಗಮನ ಸೆಳೆಯುತ್ತಿದೆ. ಮೊದಲ ಬಹುಮಾನ ರು. ೨೫ ಸಾವಿರ ನಗದು, ಅಭಿನಂದನಾ ಪತ್ರ ಮತ್ತು ಟ್ರೋಫಿ, ದ್ವಿತೀಯ ಬಹುಮಾನ ರು. ೧೫ ಸಾವಿರ ನಗದು, ಅಭಿನಂದನಾ ಪತ್ರ ಮತ್ತು ಟ್ರೋಫಿ, ತೃತೀಯ ಬಹುಮಾನ ರು. ೧೦ ಸಾವಿರ ನಗದು, ಅಭಿನಂದನಾ ಪತ್ರ ಮತ್ತು ಟ್ರೋಫಿ ಹಾಗು ಸಮಾಧಾನಕರ ಬಹುಮಾನ ರು. ೨ ಸಾವಿರ ನಗದು ಮತ್ತು ಭಿನಂದನ ಪತ್ರ ನೀಡಲಾಗುವುದು. ಅಂತಿಮ ಸ್ಪರ್ಧೆ ಕಾರ್ಯಕ್ರಮದಲ್ಲಿ ಕಲಾವಿದರು, ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಕೋರಿದ್ದಾರೆ. 

ಬುಧವಾರ, ಆಗಸ್ಟ್ 20, 2025

ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದ ೨ ಹಸುಗಳ ರಕ್ಷಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ಧಾರೂಢ ನಗರದಲ್ಲಿ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದ ಎರಡು ಹಸುಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಿಯರೊಂದಿಗೆ ರಕ್ಷಿಸಿರುವ ಘಟನೆ ನಡೆದಿದೆ.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಸಿದ್ಧಾರೂಢ ನಗರದಲ್ಲಿ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದ ಎರಡು ಹಸುಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಿಯರೊಂದಿಗೆ ರಕ್ಷಿಸಿರುವ ಘಟನೆ ನಡೆದಿದೆ. 
    ಶ್ರೀ ಲಕ್ಷ್ಮಿರಂಗನಾಥಸ್ವಾಮಿ ನಿಲಯದ ಪಕ್ಕದಲ್ಲಿ ನಿರ್ಮಾಣ ಹಂತದ ಪಾಯ ಹಾಕಲು ತೆಗೆಸಿದ್ದ ಮಣ್ಣಿನ ಗುಂಡಿಯೊಳಗೆ ಲಿಂಗಪ್ಪ ಎಂಬುವವರಿಗೆ ಸೇರಿದ ೨ ಹಸುಗಳು ಆಕಸ್ಮಿಕವಾಗಿ ಬಿದ್ದು, ಸಿಲುಕಿಕೊಂಡಿವೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಹೋಸ್ ಹಾಗು ಹಗ್ಗ ಬಳಸಿ ಹಸುಗಳನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.  
    ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ಸಿ.ಎಚ್ ಹುಲಿಯಪ್ಪ, ಮಂಜಪ್ಪ ಮತ್ತು ಬಾಬು ಗೌಡ, ಫೈರ್ ಮ್ಯಾನ್ ಪ್ರಜ್ವಲ್ ಮತ್ತು ವಾಹನ ಚಾಲಕ ಸುರೇಶ್ ಪಾಲ್ಗೊಂಡಿದ್ದರು. 

ಆ.೨೪ರಂದು ಭದ್ರೆಗೆ ಶಾಸಕರಿಂದ ಬಾಗಿನ ಅರ್ಪಣೆ



    ಭದ್ರಾವತಿ : ತಾಲೂಕಿನ ಜೀವ ನದಿ, ಸಾವಿರಾರು ರೈತ ಕುಟುಂಬಗಳ ಆಧಾರಸ್ತಂಭ ಭದ್ರಾ ನದಿ ಈ ಬಾರಿ ಸಹ ತುಂಬಿ ಹರಿಯುತ್ತಿದ್ದು, ಭದ್ರಾ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಪ್ರತಿ ವರ್ಷದಂತೆ ಈ ಬಾರಿ ಸಹ ಆ.೨೪ರ ಭಾನುವಾರ ಗಂಗಾಪೂಜೆಯೊಂದಿಗೆ ಬಾಗಿನ ಅರ್ಪಿಸಲಿದ್ದಾರೆ. 
    ಭದ್ರಾ ಜಲಾಶಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ. ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಹಲವಾರು ಭೂ ಸುಧಾರಣೆ ಕಾಯ್ದೆಗಳನ್ನು ಜಾರಿಗೆ ತಂದ ಧೀಮಂತ ನಾಯಕ ದೇವರಾಜ ಅರಸು

೧೧೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬಣ್ಣನೆ 

ಭದ್ರಾವತಿಯಲ್ಲಿ ಬುಧವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ಬಲಿಜ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೧೦ನೇ ಜನ್ಮದಿನ ಕಾರ್ಯಕ್ರಮ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಬಿ.ಕೆ ಮೋಹನ್, ಪರುಸಪ್ಪ ಕುರುಬರ, ಕೆ.ಎನ್ ಹೇಮಂತ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ : ಬಾಲ್ಯದಲ್ಲಿಯೇ ರೈತರ ಸಂಕಷ್ಟಗಳನ್ನು ಅರಿತುಕೊಂಡಿದ್ದ ಡಿ. ದೇವರಾಜ ಅರಸುರವರು ತಮ್ಮ ಆಡಳಿತ ಅವಧಿಯಲ್ಲಿ ಹಲವಾರು ಭೂ ಸುಧಾರಣೆ ಕಾಯ್ದೆಗಳನ್ನು ಜಾರಿಗೆ ತಂದ ಧೀಮಂತ ನಾಯಕ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬಣ್ಣಿಸಿದರು. 
    ಅವರು ಬುಧವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ಬಲಿಜ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೧೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ತಮ್ಮ ಜೀವನದಲ್ಲಿ ಕೃಷಿ ಪ್ರಮುಖ ಉದ್ಯೋಗವನ್ನಾಗಿಸಿಕೊಂಡಿದ್ದ ದೇವರಾಜ ಅರಸುರವರು ತಾವು ಕಂಡ ಹಾಗು ಅನುಭವಿಸಿದ ನೋವುಗಳು ಭವಿಷ್ಯದಲ್ಲಿ ರೈತರ ಬದುಕಿನಲ್ಲಿ ಹೊಸ ಬದಲಾವಣೆಗಳನ್ನು ತರಲು ಸಾಧ್ಯವಾಯಿತು. ಭೂ ಮಾಲೀಕರ ಕೈಯಿಂದ ಹೂಳುವವನ ಕೈಗೆ ಭೂಮಿ ಹಂಚಿಕೆ ಮಾಡುವ ಭೂ ಸುಧಾರಣೆ, ಜೀತ ಪದ್ದತಿ ನಿರ್ಮೂಲನೆ ಸೇರಿದಂತೆ ಹಲವಾರು ಕ್ರಾಂತಿಕಾರಕ ಕಾಯ್ದೆಗಳು ಜಾರಿಗೆ ತರುವಲ್ಲಿ ಯಶಸ್ವಿಯಾದರು ಎಂದರು. 
    ದೇಶದಲ್ಲಿ ಹಿಂದುಳಿದ ಹಾಗು ದಲಿತರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗು ರಾಜಕೀಯ ಏಳಿಗಾಗಿ ಅಂದು ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು ಜಾರಿಗೆ ತಂದ ೨೦ ಅಂಶಗಳ ಕಾರ್ಯಕ್ರಮಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಿದ ದೇಶದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ದೇವರಾಜ ಅರಸುರವರು ಪಾತ್ರರಾಗಿದ್ದರು. ಇಂದಿರಾಗಾಂಧಿಯವರ ಆಡಳಿತದಿಂದ ಪ್ರೇರೇಪಿತರಾಗಿದ್ದ ಅರಸುರವರು ಹಿಂದುಳಿದ ಹಾಗು ದಲಿತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ಈ ಹಿನ್ನಲೆಯಲ್ಲಿ ಇಂದಿಗೂ ಹಿಂದುಳಿದ ಹಾಗು ದಲಿತರ ಧೀಮಂತ ಶಕ್ತಿಯಾಗಿ ಉಳಿದುಕೊಂಡಿದ್ದಾರೆ ಎಂದರು. 
    ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಮಾತನಾಡಿ, ಮಾನವೀಯ ಮೌಲ್ಯಗಳ ಹರಿಕಾರ ದೇವರಾಜ ಅರಸು. ಜೀತ ಪದ್ದತಿ, ಮಲ ಹೊರುವ ಪದ್ದತಿ ಸೇರಿದಂತೆ ಹಲವಾರು ಅನಿಷ್ಠ ಪದ್ದತಿಗಳನ್ನು ನಿರ್ಮೂಲನೆ ಮಾಡುವ ಮೂಲಕ ಎಲ್ಲರ ಬದುಕಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಏಳಿಗೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ. ಇಂತಹ ಧೀಮಂತ ನಾಯಕ ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯ ಎಂದರು. 
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ಮಣಿ ಎಎನ್‌ಎಸ್, ಹಿರಿಯ ಸದಸ್ಯ ಬಿ.ಕೆ ಮೋಹನ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಸರ್ವಮಂಗಳ ಭೈರಪ್ಪ, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ಸಂಘ-ಸಂಸ್ಥೆಗಳ ಮುಖಂಡರಾದ ಟಿ. ವೆಂಕಟೇಶ್, ಸತ್ಯ ಭದ್ರಾವತಿ, ಚಿನ್ನಯ್ಯ, ವಿ. ವಿನೋದ್, ಈಶ್ವರಪ್ಪ, ಚೌಡಪ್ಪ, ಎಚ್.ಆರ್ ರಂಗನಾಥ್, ಎಸ್. ಉಮಾ, ಸಿ. ಜಯಪ್ಪ, ಪುಟ್ಟರಾಜ್, ಶಿವಬಸಪ್ಪ, ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮಂಗಳವಾರ, ಆಗಸ್ಟ್ 19, 2025

೧೮೬ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ

ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಮಂಗಳವಾರ ೧೮೬ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಬಡವರಿಗೆ, ನಿರ್ಗತಿಕರಿಗೆ ಅನ್ನದಾನ ನೆರವೇರಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. 
    ಭದ್ರಾವತಿ: ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಮಂಗಳವಾರ ೧೮೬ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಬಡವರಿಗೆ, ನಿರ್ಗತಿಕರಿಗೆ ಅನ್ನದಾನ ನೆರವೇರಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.  
    ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಪ್ರತಿ ವರ್ಷ ವಿಶ್ವ ಛಾಯಾಗ್ರಾಹಕರ ದಿನ ಆಚರಿಸಿಕೊಂಡು ಬರಲಾಗುತ್ತಿದೆ. ಆರೋಗ್ಯ ಶಿಬಿರ, ಕ್ರೀಡಾ ಹಾಗು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷವಾಗಿ ನ್ಯೂಟೌನ್ ದಯಾ ಸಾಗರ್ ಟ್ರಸ್ಟ್‌ನಲ್ಲಿ ಬಡವರಿಗೆ, ನಿರ್ಗತಿಕರಿಗೆ ಅನ್ನದಾನ ನೆರವೇರಿಸಲಾಯಿತು.
      ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಚ್. ಶ್ರೀನಿವಾಸ್ ನೇತೃತ್ವ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶೈಲೇಶ್ ಕುಮಾರ್, ಖಜಾಂಚಿ ಜಿ.ಡಿ ಮಂಜುನಾಥ್. ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ .ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. ದಯಾಸಾಗರ್ ಟ್ರಸ್ಟ್ ಅಧ್ಯಕ್ಷ ಆರ್. ಮೋಸಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

೨೫ ವರ್ಷಗಳನ್ನು ಪೂರೈಸಿದ ಮಣಿಪಾಲ ಆರೋಗ್ಯ ಕಾರ್ಡ್ : ನೋಂದಣಿ ಪ್ರಾರಂಭ

ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲ ಆಸ್ಪತ್ರೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮತ್ತು ಪ್ರತಿನಿಧಿ ಅನಿಲ್ ೨೫ನೇ ವರ್ಷದ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿಗೆ ಚಾಲನೆ ನೀಡಿದರು. 
    ಭದ್ರಾವತಿ :  ಮಣಿಪಾಲ್ ಸಂಸ್ಥೆ ಸಂಸ್ಥಾಪಕ ಡಾ. ಟಿ.ಎಂ.ಎ. ಪೈರವರ ದೂರದೃಷ್ಟಿಯ ನಾಯಕತ್ವದಲ್ಲಿ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈರವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ ಇದೀಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. ೨೫ ವರ್ಷಗಳಲ್ಲಿ ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ. ಪ್ರಸ್ತುತ  ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭಗೊಂಡಿದ್ದು, ಇದರ ಸದುಪಯೊಗ ಪಡೆದುಕೊಳ್ಳುವಂತೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮನವಿ ಮಾಡಿದರು. 
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೦೦ನೇ ಇಸವಿಯಲ್ಲಿ, ೩,೨೦೦ ಕುಟುಂಬಗಳು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ವರ್ಷ ೧.೨೫ ಲಕ್ಷ ಕುಟುಂಬಗಳು ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ಈ ಯೋಜನೆಯಡಿ ೬.೭೨ ಲಕ್ಷ ಸದಸ್ಯರನ್ನು ಹೊಂದಲಾಗಿದೆ. ಈ ಯೋಜನೆಯಿಂದ ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವಾಗುತ್ತಿದೆ ಎಂದರು.  
    ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದು, ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ ಧ್ಯೇಯ ವಾಕ್ಯ ಎಂದರು. 
    ಸದಸ್ಯತ್ವ ವಿವರಗಳು: ಮಣಿಪಾಲ್ ಆರೋಗ್ಯ ಕಾರ್ಡ್ ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವ ಒಬ್ಬರಿಗೆ ರು. ೩೫೦, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ. ಅವರ ಸಂಗಾತಿ, ೨೫ ವರ್ಷದೊಳಗಿನ ಮಕ್ಕಳಿಗೆ ರು. ೭೦೦ ಮತ್ತು ಕುಟುಂಬ ಫ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ. ಅವರ ಸಂಗಾತಿ, ೨೫ ವರ್ಷದೊಳಗಿನ ಮಕ್ಕಳು ಮತ್ತು ೪ ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರು. ೯೦೦. ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರು. ೬೦೦, ಕುಟುಂಬಕ್ಕೆ ರು. ೯೫೦ ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರು. ೧,೧೦೦  ಆಗಿರುತ್ತದೆ ಎಂದರು. 
    ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್‌ದಾರರಿಗೆ ರಿಯಾಯಿತಿ ಪ್ರಯೋಜನಗಳು: 
    ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ ಶೇ.೫೦ ರಿಯಾಯಿತಿ (ಓಪಿಡಿ ದಿನಗಳು) ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ ಶೇ.೨೫ ರಿಯಾಯಿತಿ ರೇಡಿಯಾಲಜಿ, ಓಪಿಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ ಶೇ.೨೦ ರಿಯಾಯಿತಿ, ಡಯಾಲಿಸಿಸ್‌ನಲ್ಲಿ ರು. ೧೦೦ ರಿಯಾಯಿತಿ. ಆಸ್ಪತ್ರೆ ಔಷಧಿಗಳ ಮೇಲೆ ಶೇ. ೧೦ರವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್‌ಗಳಲ್ಲಿ ಶೆ.೨೫ ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ). ನೀಡಲಾಗುತ್ತಿದೆ ಎಂದರು. 
    ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿ ಸಹ ರಿಯಾಯಿತಿಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದರು. 
    ತಾಲೂಕಿನಲ್ಲಿ ಅಧಿಕೃತ ಪ್ರತಿನಿಧಿಗಳ ಬಳಿ ಅರ್ಜಿಗಳನ್ನು ಪಡೆಯಬಹುದಾಗಿದ್ದು, ರಾಜೇಶ್ - ೯೪೪೯೮೧೨೫೨೩ (ಕಸ್ತೂರ್ಬಾ ಆಸ್ಪತ್ರೆಮಾಹಿತಿ ಕೇಂದ್ರ, ಭದ್ರಾವತಿ) ವಿಪ  ಸೌಹಾರ್ದ ೮೧೦೫೮೫೯೧೫೭, ಡಿ. ಶಬರಿವಾಸನ್ ೮೯೦೩೫೬೧೬೧೮೮ ಮತ್ತು ಕಾರುಣ್ಯ ಚಾರಿಟೇಬಲ್ ಟ್ರಸ್ -೯೭೩೧೧೫೭೭೬೧ ಸಂಪರ್ಕಿಸಬಹುದಾಗಿದೆ.  
    ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಮೊ: ೯೯೮೦೮೫೪೭೦೦ / ೦೮೨೦೨೯೨೩೭೪೮ ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು. ಪತ್ರಿಕಾಗೋಷ್ಠಿಯಲ್ಲಿ  ಪ್ರತಿನಿಧಿ ಅನಿಲ್ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ : ಬೃಹತ್ ಪ್ರತಿಭಟನಾ ಮೆರವಣಿಗೆ

ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥನ ಪುಣ್ಯ ಸನ್ನಿಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣೆ ನಡೆಸಲಾಯಿತು. 
    ಭದ್ರಾವತಿ: ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥನ ಪುಣ್ಯ ಸನ್ನಿಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣೆ ನಡೆಸಲಾಯಿತು. 
    ನಗರದ ಮಾಧವಚಾರ್ ವೃತ್ತದಲ್ಲಿ ವಿವಿಧ ಹಿಂದೂಪರ ಸಂಘನೆಗಳ ಪ್ರಮುಖರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಲಾಗುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಪಿತೂರಿ ನಿಲ್ಲಬೇಕು. ಒಳಸಂಚು ನಡೆಸುತ್ತಿರುವವರನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ಆಗ್ರಹಿಸಿದರು. 

ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥನ ಪುಣ್ಯ ಸನ್ನಿಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣೆ ನಡೆಸಿ  ಉಪ ತಹಸೀಲ್ದಾರ್ ಮಂಜಾನಾಯ್ಕ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 
    ಬೃಹತ್ ಪ್ರತಿಭಟನೆಯಲ್ಲಿ ಪ್ರಮುಖರಾದ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಜಿ. ಧರ್ಮಪ್ರಸಾದ್, ಕೆ.ಎಚ್ ತೀರ್ಥಯ್ಯ, ಶಾರದ ಅಪ್ಪಾಜಿ, ಗೀತಾ ರಾಜ್‌ಕುಮಾರ್, ಬಿ.ಕೆ ಮೋಹನ್, ಚನ್ನಪ್ಪ, ಆರ್. ಕರುಣಾಮೂರ್ತಿ, ಮಂಗೋಟೆ ರುದ್ರೇಶ್, ಜಯರಾಂ ಗೊಂದಿ, ರಮೇಶ್, ವಿ. ಕದಿರೇಶ್, ಕೆ.ಎನ್ ಶ್ರೀಹರ್ಷ, ಜಿ. ಆನಂದಕುಮಾರ್, ಎಂ. ಮಂಜುನಾಥ್, ತಿಮ್ಮೇಗೌಡ, ಬಿ.ಜಿ ರಾಮಲಿಂಗಯ್ಯ, ಧನುಷ್ ಬೋಸ್ಲೆ, ರಘುರಾವ್, ಹನುಮಂತನಾಯ್ಕ, ಯೋಗೇಶ್  ಗುಜ್ಜರ್, ಶೋಭಾ ಪಾಟೀಲ್, ಸುಲೋಚನಾ, ಕುಸುಮಾ ತೀರ್ಥಯ್ಯ, ಆಶಾ ಪುಟ್ಟಸ್ವಾಮಿ, ಕವಿತಾ ರಾವ್.ಆರ್ ಶೋಭಾ, ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು ಪಾಲ್ಗೊಂಡಿದ್ದರು. 
    ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣೆಗೆ ನಡೆಸಿ ಉಪ ತಹಸೀಲ್ದಾರ್ ಮಂಜಾನಾಯ್ಕ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.