ಶನಿವಾರ, ನವೆಂಬರ್ 1, 2025

ಕರವೇಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ

ಭದ್ರಾವತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷ ಮುರಳಿಯವರ ನೇತೃತ್ವದಲ್ಲಿ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. 
    ಭದ್ರಾವತಿ:  ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷ ಮುರಳಿಯವರ ನೇತೃತ್ವದಲ್ಲಿ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. 
    ನಗರದ ಬೈಪಾಸ್ ರಸ್ತೆ, ಬಾರಂದೂರು ತಿರುವಿನಲ್ಲಿರುವ ಹಳ್ಳಿಮನೆ ಹೋಟೆಲ್ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಕಾರು ಹಾಗು ದ್ವಿಚಕ್ರ ವಾಹನಗಳಲ್ಲಿ ಜಾಥಾ ನಡೆಸಿ ತರೀಕೆರೆ ರಸ್ತೆ ಮೂಲಕ ಗಾಂಧಿ ವೃತ್ತ ತಲುಪಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ನಂತರ ಮಾಧವಚಾರ್ ವೃತ್ತ ಮೂಲಕ ಡಾ. ರಾಜಕುಮಾರ್ ರಸ್ತೆಯಲ್ಲಿ ಸಾಗಿ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕ್ಷೇತ್ರದ ಅನ್ನದಾತ, ಶ್ರೇಷ್ಠ ತಂತ್ರಜ್ಞ ಸರ್.ಎಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ,  ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಾಥಾ ಅಂತ್ಯಗೊಳಿಸಲಾಯಿತು. 
    ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಅನಿಲ್,  ತಾಲೂಕ ಅಧ್ಯಕ್ಷ ಆನಂದ್ ನಾಯ್ಡು, ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ಭಾನುಶ್ರೀ, ತಾಲೂಕು ಮಹಿಳಾ ಅಧ್ಯಕ್ಷೆ ಅನ್ನಪೂರ್ಣ, ಪರಮೇಶ್, ಹರೀಶ್, ಲೋಹಿತ್, ರುಕ್ಮಿಣಿ, ಸುಜಿತ್, ಅಮಿತ್, ಅನಿಲ್, ಲಕ್ಷ್ಮಮ್ಮ, ವೈಭವ್, ನಿಂಗಣ್ಣ ಸೇರಿದಂತೆ ಕರಾವೇ ಕಾರ್ಯಕರ್ತರು, ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು.

ಕಣ್ಮನ ಸೆಳೆದ ಆಟೋ ಚಾಲಕನ ಕನ್ನಡಾಭಿಮಾನ

ಭದ್ರಾವತಿ ಜನ್ನಾಪುರ ನಿವಾಸಿ, ಆಟೋ ಶಂಕರ್ ಎಂದೇ ಗುರುತಿಸಿಕೊಂಡಿರುವ ಚಾಲಕ ಶಂಕರಮೂರ್ತಿಯವರು ಈ ಬಾರಿ ಸಹ ತಮ್ಮ ಆಟೋಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಶಿಷ್ಟವಾಗಿ ಅಲಂಕಾರ ಮಾಡುವ ಮೂಲಕ ಕನ್ನಡಾಭಿಮಾನ ಪ್ರದರ್ಶಿಸಿದ್ದಾರೆ. 
    ಭದ್ರಾವತಿ : ಆಟೋ ಚಾಲಕರೊಬ್ಬರು ಈ ಬಾರಿ ಸಹ ತಮ್ಮ ಆಟೋಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಶಿಷ್ಟವಾಗಿ ಅಲಂಕಾರ ಮಾಡುವ ಮೂಲಕ ಕನ್ನಡಾಭಿಮಾನ ಪ್ರದರ್ಶಿಸಿದ್ದಾರೆ. 
    ಜನ್ನಾಪುರ ನಿವಾಸಿ, ಆಟೋ ಶಂಕರ್ ಎಂದೇ ಗುರುತಿಸಿಕೊಂಡಿರುವ ಚಾಲಕ ಶಂಕರಮೂರ್ತಿಯವರು ಕಳೆದ ವರ್ಷ ಸುಮಾರು ೩ ಲಕ್ಷ ರು. ವೆಚ್ಚದಲ್ಲಿ ಹೊಸ ಆಟೋ ಖರೀದಿಸಿದ್ದರು. ಆಟೋ ನಂಬಿ ಬದುಕು ಸಾಗಿಸುತ್ತಿರುವ ಇವರು ಕನ್ನಡಾಭಿಮಾನಿಯಾಗಿದ್ದು, ಹೊಸ ಆಟೋಗೆ ಕಳೆದ ಬಾರಿ ವಿಶೇಷವಾಗಿ ಅಲಂಕಾರ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. 
    ಈ ಬಾರಿ ಮತ್ತಷ್ಟು ವಿಭಿನ್ನವಾಗಿ ಕರ್ನಾಟಕ ರತ್ನ, ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್ ರಾಜಕುಮಾರ್‌ರವರ ಪ್ರತಿಮೆಯನ್ನು ಆಟೋ ಮೇಲ್ಭಾಗದಲ್ಲಿರಿಸಿ, ಅದರ ಹಿಂಬದಿಯಲ್ಲಿ ಕರ್ನಾಟಕ ಭೂಪಟ ಇರಿಸಲಾಗಿದೆ. ಜೊತೆಗೆ ಬಣ್ಣ ಬಣ್ಣದ ಹೂವುಗಳಿಂದ,  ಕೆಂಪು ಮತ್ತು ಹಳದಿ ನಾಡದ್ವಜದಿಂದ ಅಲಂಕರಿಸಲಾಗಿದೆ. 
    ಅಲ್ಲದೆ ಆಟೋ ಮುಂಭಾಗದಲ್ಲಿ ಬೃಹತ್ ಗಾತ್ರದ ಕೆಂಪು ಮತ್ತು ಹಳದಿ ಬಣ್ಣದ ಮಾಲೆಯನ್ನು ಹಾಕಲಾಗಿದೆ. ಆಟೋ ತುಂಬಾ ಆಕರ್ಷಕವಾಗಿ ಕಂಗೊಳಿಸುತ್ತಿದ್ದು, ಸ್ನೇಹಿತರು, ಬಂಧು-ಬಳಗದವರು, ಪ್ರಯಾಣಿಕರು, ರಸ್ತೆಯಲ್ಲಿ ಸಂಚರಿಸುವವರು ಆಟೋ ಮುಂಭಾಗ ನಿಂತುಕೊಂಡು ತಮ್ಮ ಮೊಬೈಲ್‌ಗಳಲ್ಲಿ ಪೋಟೋ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ. 
    ಆಟೋ ಶಂಕರ್ ಪ್ರತಿಕ್ರಿಯಿಸಿ, ನಾನು ಅಪ್ಪಟ್ಟ ಕನ್ನಡದ ಅಭಿಮಾನಿಯಾಗಿದ್ದು, ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ನಾನೇ ಸ್ವಯಂ ಪ್ರೇರಣೆಯಿಂದ ಆಟೋ ವಿಶೇಷವಾಗಿ ಅಲಂಕರಿಸಿದ್ದೇನೆ. ಈ ಬಾರಿ ನನಗೆ ನನ್ನ ಕಾರ್ಯಕ್ಕೆ ಸ್ನೇಹಿತರೊಬ್ಬರು ಸಹ ಕೈಜೋಡಿಸಿದ್ದು, ಇದರಿಂದಾಗಿ ಈ ಬಾರಿ ಅಲಂಕಾರ ಇನ್ನೂ ಹೆಚ್ಚಿನ ಆಕರ್ಷಣೆಯಿಂದ ಕೂಡಿದೆ ಎಂದರು. 
    ಜನ್ನಾಪುರ ಹಾಗು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ದಿನವಿಡೀ ಈ ಆಟೋ ಸಂಚಾರ ಬಹುತೇಕ ಜನರಲ್ಲಿ ತಮ್ಮಲ್ಲಿನ ಕನ್ನಡದ ಅಸ್ಮಿತೆಯನ್ನು ಪ್ರಶ್ನಿಸಿಕೊಳ್ಳುವಂತೆ ಮಾಡಿದೆ. ಸಾಮಾನ್ಯ ಆಟೋ ಚಾಲಕನ ಕನ್ನಡಾಭಿಮಾನಕ್ಕೆ ಒಂದು ನಮನವಿರಲಿ. 

ನ.೨ರಂದು ವರ್ಷಾವಾಸ ಪ್ರವಚನ ಮಾಲಿಕೆ ಸಮಾರೋಪ ಸಮಾರಂಭ

ಭದ್ರಾವತಿಯಲ್ಲಿ ಆಯೋಜಿಸಲಾಗಿರುವ ವರ್ಷಾವಾಸ ಪ್ರವಚನ ಮಾಲಿಕೆ ಸಮಾರೋಪ ಸಮಾರಂಭ ಕುರಿತು ಪತ್ರಕರ್ತ, ಉಪಾಸಕ ಸುರೇಶ್ ಮಾಹಿತಿ ನೀಡಿದರು. 
    ಭದ್ರಾವತಿ : ಭಾರತೀಯ ಬೌದ್ಧ ಮಹಾಸಭಾ ದಕ್ಷಿಣ(ಬಿಎಸ್‌ಐ) ಪುರುಷ ಮತ್ತು ಮಹಿಳಾ ವಿಭಾಗದ ವತಿಯಿಂದ ವರ್ಷಾವಾಸ ಪ್ರವಚನ ಮಾಲಿಕೆ ಸಮಾರೋಪ ಸಮಾರಂಭ ನ.೨ರಂದು ನಗರದ ಹೊಸನಂಜಾಪುರದಲ್ಲಿರುವ ಬೌದ್ಧ ವಿಹಾರದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಕರ್ತ, ಉಪಾಸಕ ಸುರೇಶ್ ತಿಳಿಸಿದರು. 
    ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬೌದ್ಧ ಧರ್ಮದ ಕಮಲ ರತ್ನ ಭಂತೇಜಿ, ಬಳ್ಳಾರಿ ಮತ್ತು ಧಮ್ಮವೀರ ಭಂತೇಜಿ, ರೈಲ್ವೆ ಎಂಪ್ಲಾಯಿಸ್ ಬುದ್ದ ವಿಹಾರ, ಹುಬ್ಬಳ್ಳಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು. 
    ಉಪಾಸಕ ಸುರೇಶ್ ಅಧ್ಯಕ್ಷತೆ ವಹಿಸಲಿದ್ದು, ಬೆಂಳೂರಿನ ಧಮ್ಮ ಚಿಂತಕ ಶಿವರುದ್ರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಬಿಎಸ್‌ಐ ದಕ್ಷಿಣ ಉಪಾಧ್ಯಕ್ಷ ಮಹೇಂದ್ರ ಮಂಕಳೆ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. 
    ಮಾಲೂರು ಧಮ್ಮ ಚಿಂತಕಿ ಸಿ.ವೈ ರಾಧ, ಟಿನರಸೀಪುರ ಧಮ್ಮಾಚಾರಿ ಕೆ.ಎನ್ ಪ್ರಭುಸ್ವಾಮಿ, ಸಂಬುದ್ಧ ಧರ್ಮಾಂಕುರ ಟ್ರಸ್ಟ್ ಕಾರ್ಯದರ್ಶಿ ಶ್ರೀನಿವಾಸ್, ಡಿಎಸ್‌ಎಸ್ ಮುಖಂಡ ಸತ್ಯ ಭದ್ರಾವತಿ, ಸಿದ್ದಾರ್ಥ ಅಂಧರ ಕೇಂದ್ರ, ಅಧ್ಯಕ್ಷ ಶಿವಬಸಪ್ಪ, ಉಪಾಸಕ ರಾಜಶೇಖರ್, ತಮಿಳು ಆದಿ ದ್ರಾವಿಡ ಹಿತ ರಕ್ಷಣಾ ಸಮಿತಿ ನಿತ್ಯಾನಂದ, ವಿಜಯಪುರ ಡಿಎಸ್‌ಎಸ್ ಮುಖಂಡ ಮರಿಯಪ್ಪ ಹೆಬ್ಬಾಳ, ಮಂಗಳೂರಿನ ಬೌದ್ಧ ಉಪಾಸಕ ರಾಜಶೇಖರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 
    ಬೌದ್ಧ ಉಪಾಸಕ ಮತ್ತು ಉಪಾಸಕಿಯರಿಗೆ ಗೌರವ ಸಮರ್ಪಣೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು. 

ಕವಿ ಆಶಯದಂತೆ ಕನ್ನಡ ನಿತ್ಯೋತ್ಸವವಾಗಲಿ, ನೆಲ-ಜಲ-ಭಾಷೆ ಉಳಿವಿಗಾಗಿ ಹೋರಾಟ ನಿರಂತರವಾಗಿರಲಿ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ 


ಭದ್ರಾವತಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನಾಡ ಧ್ವಜಾರೋರಹಣ ನೆರವೇರಿಸಿದರು. 
    ಭದ್ರಾವತಿ : ಕನ್ನಡ ನಾಡಿನ ನೆಲ-ಜಲ-ಭಾಷೆಯ ಮೇಲಿನ ಪ್ರೀತಿ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಕವಿ ಆಶಯದಂತೆ ಅದು ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ಕನ್ನಡಿಗರಾದ ನಾವುಗಳು ಮುನ್ನಡೆಯಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
    ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 
    ನಮ್ಮ ಆಚರಣೆಗಳು ಕೇವಲ ಮೇಲ್ನೋಟಕ್ಕೆ ಸೀಮಿತವಾಗಬಾರದು. ನೆಲ-ಜಲ-ಭಾಷೆ ಮೇಲಿನ ಪ್ರೀತಿ ನಿರಂತರವಾಗಿರಬೇಕು. ನಮ್ಮ ನಾಡಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುವ ಮೂಲಕ ಆವರ ದಾರಿಯಲ್ಲಿ ನಾವುಗಳು ಸಹ ಸಾಗಬೇಕು. ಆಗ ಮಾತ್ರ ಕನ್ನಡ ನೆಲ-ಜಲ-ಭಾಷೆ ಉಳಿಸಿಕೊಳ್ಳಲು ಸಾಧ್ಯ ಎಂದರು.
    ಎಂಪಿಎಂ ಆರಂಭಕ್ಕೆ ಕೇಂದ್ರ ಸರ್ಕಾರ ಎನ್‌ಓಸಿ ನೀಡಲಿ: 
    ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಹ ಹೆಚ್ಚಿನ ಅನುದಾನ ನೀಡುತ್ತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಕಾರ್ಖಾನೆಗೆ ಸೇರಿದ ಅರಣ್ಯ ಭೂಮಿಗೆ ಎನ್‌ಓಸಿ ನೀಡಬೇಕು. ಒಂದು ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಒಂದು ವೇಳೆ ಕಾರ್ಖಾನೆಗೆ ಎನ್‌ಓಸಿ ಲಭಿಸಿದ್ದಲ್ಲಿ ಕೇವಲ ೩ ತಿಂಗಳಲ್ಲಿ ಕಾರ್ಖಾನೆ ಪುನರ್ ಆರಂಬಿಸಲಾಗುವುದು. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಲಭಿಸಲಿದೆ ಎಂದರು. 
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನಯನ್ನು ಕೇಂದ್ರ ಸರ್ಕಾರ ಇದೀಗ ಅಭಿವೃದ್ಧಿ ಪಡಿಸುವುದಾಗಿ ಹೇಳುತ್ತಿದ್ದು, ಆದರೆ ಇನ್ನೂ ಕಾರ್ಯಗತವಾಗಿಲ್ಲ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣ ಗಮನ ಹರಿಸಬೇಕು. ಕಾರ್ಖಾನೆ ಅಭಿವೃದ್ಧಿಗೊಳ್ಳುವುದನ್ನು ನಾವು ಸಹ ಸ್ವಾಗತಿಸುತ್ತೇವೆ ಎಂದರು. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಎನ್.ಕೆ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ. ತಿಮ್ಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ವಿವಿಧ ಕ್ಷೇತ್ರಗಳ ಸಾಧಕರಾದ ಡಾ. ಕೃಷ್ಣ ಎಸ್. ಭಟ್, ಡಾ. ಡಿ. ನಾಗರಾಜ್ ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಕಾರ್ಯಕ್ರಮಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ಕನಕಮಂಟಪ ಮೈದಾನದವರೆಗೂ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.  

ಶುಕ್ರವಾರ, ಅಕ್ಟೋಬರ್ 31, 2025

ನ.೨ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಮಾಚೇನಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣೆ ಹಾಗು ಅಭಿವೃದ್ಧಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಘಟಕ-೫ರ ಶಾಖಾ ವ್ಯಾಪ್ತಿಯಲ್ಲಿ ನ.೨ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಶಿವರಾಮನಗರ, ವಿಶ್ವೇಶ್ವರಾಯ ನಗರ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಲೀಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ, ಸಿರಿಯೂರು ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ಕಾಗದನಗರ ಕನ್ನಡ ಮಿತ್ರರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ

ಸುಮಾರು ೪ ದಶಕಗಳ ಇತಿಹಾಸ ಹೊಂದಿರುವ ಭದ್ರಾವತಿ ಕಾಗದನಗರದ ಕನ್ನಡ ಮಿತ್ರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆಗಳನ್ನು ನಡೆಸಲಾಗಿದೆ. 
    ಭದ್ರಾವತಿ : ಸುಮಾರು ೪ ದಶಕಗಳ ಇತಿಹಾಸ ಹೊಂದಿರುವ ಕಾಗದನಗರದ ಕನ್ನಡ ಮಿತ್ರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆಗಳನ್ನು ನಡೆಸಲಾಗಿದೆ. 
    ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಒಂದೆಡೆ ಸೇರಿ ಕನ್ನಡ ರಾಜ್ಯೋತ್ಸವ ಆಚರಿಸಲು ಮುಂದಾದ ಹಿನ್ನಲೆಯಲ್ಲಿ ಈ ಸಂಘ ಅಸ್ತಿತ್ವಕ್ಕೆ ಬಂದಿತು. ಈ ಹಿಂದೆ ಸುಮಾರು ೧ ತಿಂಗಳ ಕಾಲ ವಿವಿಧ ಕ್ರೀಡಾ ಸ್ಪರ್ಧೆಗಳು, ನಾಟಕ, ನೃತ್ಯ, ಆರ್ಕೇಸ್ಟ್ರಾ, ಚಲನಚಿತ್ರ ಪ್ರದರ್ಶನ ಸೇರಿದಂತೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಿದ್ದವು. ಒಂದು ರೀತಿಯ ವೈಭವ ಅನಾವರಣಗೊಳ್ಳುತ್ತಿತ್ತು. ಕಾರ್ಖಾನೆ ಅವನತಿ ದಾರಿ ಹಿಡಿದಂತೆ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಬೇರೆಡೆಗೆ ವಲಸೆ ಹೋಗಲು ಆರಂಭಿಸುತ್ತಿದ್ದಂತೆ ಎಲ್ಲವೂ ಕ್ಷೀಣಿಸುತ್ತಾ ಬಂದಿದ್ದು, ಕಳೆದ ಸುಮಾರು ೧ ದಶಕದಿಂದ ಕಾರ್ಮಿಕರು, ಕುಟುಂಬ ವರ್ಗದವರಿಲ್ಲದೆ ಪಾಳು ಬಿದ್ದು, ಬಿಕೋ ಎನ್ನುತ್ತಿರುತ್ತಿರುವ ಸ್ಥಳದಲ್ಲಿ ಅಳಿದುಳಿದಿರುವ ನಿವೃತ್ತ ಕಾರ್ಮಿಕರು, ಕುಟುಂಬ ವರ್ಗದವರು ಹಾಗು ಸಮೀಪದ ನಿವಾಸಿಗಳು ಒಗ್ಗೂಡಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದಾರೆ. ಕಾರ್ಖಾನೆಯ ಪುನಃ ಆರಂಭಗೊಂಡು ವೈಭವದ ದಿನಗಳನ್ನು ಮರಳಿ ನೋಡಲು ಎದುರು ನೋಡುತ್ತಿದ್ದಾರೆ. 
    ಮಯೂರ ಮಂಟಪದ ಮುಂಭಾಗ ನ.೧ರ ಬೆಳಿಗ್ಗೆ ೧೦ ಗಂಟೆಗೆ ಧ್ವಜಾರೋಹಣ ನಡೆಯಲಿದ್ದು,  ಎಂಪಿಂಎಂ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷರಾದ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ತಮಿಳು ಯುವಕರಿಂದ ಉಚಿತ ಬೆಳಗಿನ ಉಪಹಾರ ಸೇವಾ ಕಾರ್ಯ ಶ್ಲಾಘನೀಯ

ಸಂತೆ ಮೈದಾನದಲ್ಲಿ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ 

ಭದ್ರಾವತಿ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಮಿಳು ಯೂತ್ಸ್ ಅಸೋಸಿಯೇಷನ್ ನೂತನ ಕಟ್ಟಡ ಶುಕ್ರವಾರ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ : ತಮಿಳು ಸಮುದಾಯದವರು ಯಾರನ್ನು ಅವಲಂಬಿಸದೆ ತಮ್ಮ ಶ್ರಮದಿಂದ ಸ್ವಂತ ಬಲದ ಮೇಲೆ ಬದುಕು ಕಟ್ಟಿಕೊಳ್ಳುವ ಜನರಾಗಿದ್ದು, ಇಂತಹ ಸಮುದಾಯದವರು ಹಸಿದವರಿಗೆ ಉಚಿತವಾಗಿ ಬೆಳಗಿನ ಉಪಹಾರ ನೀಡುವ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು. 
    ಅವರು ಶುಕ್ರವಾರ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಮಿಳು ಯೂತ್ಸ್ ಅಸೋಸಿಯೇಷನ್ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ತಮಿಳು ಯುವಕರು ಒಗ್ಗೂಡಿಕೊಂಡು ೫೦೦ ದಿನಗಳ ಕಾಲ ನಿರಂತರವಾಗಿ ಸೇವೆ ಮುನ್ನಡೆಸಿಕೊಂಡು ಬಂದಿರುವುದು ಶ್ಲಾಘನೀಯ ಎಂದರು. 
    ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೂ ಸಹ ಕೆಲವರು ಟೀಕೆಗಳನ್ನು ಮಾಡುತ್ತಾರೆ. ಅವುಗಳಿಗೆ ತಲೆಕೆಡಿಸಿಕೊಳ್ಳದೆ ಎಲ್ಲರೂ ಒಗ್ಗಟ್ಟಾಗಿ ತಮ್ಮ ಸೇವೆ ಮುನ್ನಡೆಸಿಕೊಂಡು ಹೋಗಬೇಕು. ಅಲ್ಲದೆ ಎಲ್ಲಾ ರೀತಿಯ ಸಂಕಷ್ಟಗಳಿಗೂ ಸ್ಪಂದಿಸುವ ನಿಟ್ಟಿನಲ್ಲಿ ಯುವಕರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಒಳ್ಳೆಯ ಕೆಲಸಗಳಿಂದ ಭವಿಷ್ಯದಲ್ಲಿ ಒಳ್ಳೆಯ ಸ್ಥಾನ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡಲು ಬದ್ಧನಾಗಿದ್ದೇನೆ. ಸೇವಾ ಕಾರ್ಯಗಳಿಗೆ ನೆರವಾಗುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ೨ ಲಕ್ಷ ರು. ನೆರವು ನೀಡುವುದಾಗಿ ಭರವಸೆ ನೀಡಿದರು. 
    ಹಿರಿಯ ಪತ್ರಕರ್ತ ಕಣ್ಣಪ್ಪ ಮಾತನಾಡಿ, ತಮಿಳರು ಎಂದರೆ ಶ್ರಮ ಜೀವಿಗಳು ಮತ್ತು ನಂಬಿಕೆಗೆ ಅರ್ಹರಾದವರು. ಶ್ರಮದ ಬದುಕಿನಲ್ಲೂ ಸಮಾಜದ ಎಲ್ಲರ ಏಳಿಗೆಗಾಗಿ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮಾದರಿಯಾದವರು. ತಮಿಳು ಯುವಕರು ೫೦೦ ದಿನಗಳ ಕಾಲ ಬೆಳಗಿನ ಉಚಿತ ಉಪಹಾರ ಸೇವಾ ಕಾರ್ಯ ಯಶಸ್ವಿಯಾಗಿನಡೆಸಿರುವುದು ತಮಿಳು ಸಮಾಜಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಪೂರಕವಾಗಿ ಎಲ್ಲಾ ರೀತಿಯ ಸಹಕಾರ ಶಾಸಕರು ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ತಮಿಳು ಸಮಾಜದವರು ಅವರಿಗೆ ಎಂದಿಗೂ ಕೃತಜ್ಞರಾಗಿದ್ದಾರೆ ಎಂದು.   


ಭದ್ರಾವತಿ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಮಿಳು ಯೂತ್ಸ್ ಅಸೋಸಿಯೇಷನ್ ನೂತನ ಕಟ್ಟಡ ಉದ್ಘಾಟನಾ ವೇದಿಕೆ ಕಾರ್ಯಕ್ರಮ ಶುಕ್ರವಾರ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಆಗಮುಡಿ ಮೊದಲಿಯಾರ್ ಸಮಾಜದ ತಾಲೂಕು ಅಧ್ಯಕ್ಷ ಕೆ. ಮಂಜುನಾಥ್, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಬಿಜೆಪಿ ಯುವ ಮುಖಂಡ ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಮಾತನಾಡಿದರು.
ಸಂಘದ ಗೌರವಾಧ್ಯಕ್ಷ, ಯುವ ಮುಖಂಡ ಶಿವಕುಮಾರ್ ಮತ್ತು ಅಧ್ಯಕ್ಷ ಜಯಕುಮಾರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಗರಸಭೆ ಸದಸ್ಯರಾದ ಅನುಸುಧಾ ಮೋಹನ್ ಪಳನಿ, ಬಸವರಾಜ್ ಬಿ. ಆನೇಕೊಪ್ಪ, ಕೆ. ಸುದೀಪ್‌ಕುಮಾರ್, ಟಿಪ್ಪುಸುಲ್ತಾನ್, ಉದ್ಯಮಿ ಎ. ಮಾಧು, ಸುರಕ್ಷಾ ಜೀವನಾ ಸೇವಾ ಟ್ರಸ್ಟ್‌ನ ಜ್ಯೋತಿ ಸೋಮಶೇಖರ್, ಸಂಜೀವಿನ ಹಿರಿಯ ನಾಗರಿಕರ ಆರೈಕೆ ಕೇಂದ್ರದ ಸವಿತಾ, ಸಿದ್ದಾರ್ಥ ಅಂಧರ ಕೇಂದ್ರದ ಶಿಬಬಸಪ್ಪ, ಕಾರ್ಮಿಕ ಮುಖಂಡ ವಿ. ವಿನೋದ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ತಮಿಳು ಯೂತ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಸದಸ್ಯರು ಹಾಗು ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.