ಶುಕ್ರವಾರ, ನವೆಂಬರ್ 14, 2025

ಪೋಷಕರು ಮಕ್ಕಳ ಮೇಲೆ ಸಂಪೂರ್ಣ ಹಿಡಿದ ಹೊಂದಿರಲಿ, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಕೈ ಜೋಡಿಸಲಿ

ಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ 

ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಶುಕ್ರವಾರ ಆಯೋಜಿಸಲಾಗಿದ್ದಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಿರಿಯ ವಿದ್ಯಾರ್ಥಿ, ಚಲನಚಿತ್ರ  ನಿರ್ಮಾಪಕ, ನಿರ್ದೇಶಕ ಎಸ್. ಗೋವಿಂದ ಉದ್ಘಾಟಿಸಿದರು. 
    ಭದ್ರಾವತಿ: ಪೋಷಕರು ಮಕ್ಕಳನ್ನು ಕೇವಲ ಶಾಲೆಗಳಿಗೆ ಕಳುಹಿಸಿದರೆ ಸಾಲದು ಮಕ್ಕಳ ಮೇಲೆ ಸಂಪೂರ್ಣ ಹಿಡಿದ ಹೊಂದಿರಬೇಕು. ಮಕ್ಕಳ ಶಿಕ್ಷಣದ ಜೊತೆಗೆ ಸರ್ಕಾರಿ ಶಾಲೆಗಳ ಬೆಳವಣಿಗೆ ಪೋಷಕರು ಸಹ ಕೈಜೋಡಿಸಬೇಕೆಂದು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶೈಕ್ಷಣಿಕ ಸಲಹೆಗಾರರು, ಹಿರಿಯ ಪತ್ರಕರ್ತರಾದ ಕಣ್ಣಪ್ಪ ಮನವಿ ಮಾಡಿದರು. 
    ಶುಕ್ರವಾರ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿದ್ದ ಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಉನ್ನತ ಸೌಲಭ್ಯಗಳು ಇಲ್ಲದೆ ಇರುವ ಸಂದರ್ಭದಲ್ಲಿ ಶಾಲೆಗಳನ್ನು ನಿರ್ಮಿಸಲು ನಮ್ಮ ಪೂರ್ವಿಕರ ಶ್ರಮ ಹೆಚ್ಚಿನದ್ದಾಗಿದೆ. ಇಂತಹ ಶಾಲೆಗಳು ಇದೀಗ ಕಣ್ಮರೆಯಾಗುತ್ತಿವೆ. ಅದರಲ್ಲೂ ಸರ್ಕಾರಿ ಶಾಲೆ ಉಳಿಸಿಕೊಳ್ಳುವುದು ಬಹಳ ಕಷ್ಟದ ಕೆಲಸವಾಗಿದೆ. ಹಿರಿಯ ವಿದ್ಯಾರ್ಥಿಗಳು ವಿದ್ಯೆ ಕಲಿತ ಸ್ಥಳದ ಕಟ್ಟಡ ಪ್ರಸ್ತುತ ಶಿಥಿಲಗೊಂಡಿದೆ. ತರಗತಿಗಳನ್ನು ಹೊಸ ಕಟ್ಟಡಕ್ಕೆ ವರ್ಗಾಹಿಸಲಾಗಿದೆ. ಆದರೆ ಈ ಕಟ್ಟಡ ಉಳಿಯಬೇಕು. ಭವಿಷ್ಯದಲ್ಲಿ ಈ ರೀತಿಯ ಕಟ್ಟಡ ನಿರ್ಮಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ದಾನಿಗಳು, ಹಳೇಯ ವಿದ್ಯಾರ್ಥಿಗಳು ಕಟ್ಟಡ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದರು.  
    ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹುಟ್ಟುಹಬ್ಬ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳನ್ನು ಪ್ರತಿಯೊಬ್ಬರು ಪ್ರೀತಿಸಬೇಕು. ಅವರನ್ನು ಭವಿಷ್ಯದ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರು, ಪೋಷಕರು ಹಾಗು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. 


ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಶುಕ್ರವಾರ ಆಯೋಜಿಸಲಾಗಿದ್ದಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಲಹೆಗಾರರು, ಹಿರಿಯ ಪತ್ರಕರ್ತರಾದ ಕಣ್ಣಪ್ಪರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಹಳೇಯ ವಿದ್ಯಾರ್ಥಿಗಳಾದ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಎಸ್. ಗೋವಿಂದ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಿ. ರಮಾಕಾಂತ್, ವಿಐಎಸ್‌ಎಲ್ ನಿವೃತ್ತ ನೌಕರ ಸುರೇಶ್ ವರ್ಮಾ, ಮೋಹನ್ ಸೇರಿದಂತೆ ಇನ್ನಿತರು ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸರ ಬೇಡ. ಈ ಶಾಲೆಯಲ್ಲಿ ಓದಿರುವ ಬಹಳಷ್ಟು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳು ಮಿತಿ ಮೀರಿ ಮೊಬೈಲ್ ಬಳಕೆಯಿಂದ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿಲ್ಲ. ಅಲ್ಲದೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನಿಯ ಸಂಗತಿಯಾಗಿದೆ. ಇವುಗಳಿಂದ ದೂರವಿದ್ದು, ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ವಿದ್ಯೆ, ಜ್ಞಾನ, ಉತ್ತಮ ಸಂಸ್ಕಾರಕ್ಕೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಪೋಷಕರ ಪಾತ್ರ ಹೆಚ್ಚಿನದ್ದಾಗಿದೆ ಎಂದರು. 
    ವೇದಿಕೆಯಲ್ಲಿ ನಿವೃತ್ತ ಶಿಕ್ಷಕ ಕಾಂತಪ್ಪ, ಹಳೇಯ ವಿದ್ಯಾರ್ಥಿಗಳಾದ ಹಳೇನಗರ ಕುಂಬಾರರ ಬೀದಿ ನಿವಾಸಿ ಬಸವರಾಜ್, ಮುನಿರಾಜ್, ಎನ್. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಮಿಳು ಸಂಘಮ್ ಮಾಜಿ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಗುರುವಾರ, ನವೆಂಬರ್ 13, 2025

ಓಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು


    ಭದ್ರಾವತಿ : ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ಗಸ್ತು ಕರ್ತವ್ಯದಲ್ಲಿದ್ದ ನ್ಯೂಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಗುಳ್ಯಪ್ಪರವರು ಖಚಿತ ಮಾಹಿತಿ ಮೇರೆಗೆ ನ.೧೧ರ ಸಂಜೆ ೭.೪೫ರ ಸಮಯದಲ್ಲಿ ದಾಳಿ ನಡೆಸಿ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಜನ್ನಾಪುರ ಲಿಂಗಾಯಿತರ ಬೀದಿ ನಿವಾಸಿಯಾಗಿರುವ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. 

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಭವಿಷ್ಯ ರೂಪಿಸಿಕೊಳ್ಳಿ : ತಮಟೆ ಜಗದೀಶ್

ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨ ಯೋಜನಾ ಕಛೇರಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ  ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಭವಿಷ್ಯ ರೂಪಿಸಿಕೊಳ್ಳಬೇಕು. ಆಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದು ಜನಪದ ಕಲಾವಿದ ತಮಟೆ ಜಗದೀಶ್ ಹೇಳಿದರು. 
    ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨ ಯೋಜನಾ ಕಛೇರಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. 
    ಜಾಗೃತಿ ಗೀತೆಗಳ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ, ದುಶ್ಚಟಗಳಿಗೆ ಬಲಿಯಾಗದೆ ಸಮಾಜದಲ್ಲಿ ಬದುಕುವ ರೀತಿ, ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. .
    ಶಾಲೆಯ ಮುಖ್ಯೋಪಾಧ್ಯಾಯ ಶೀವ್ಯಾನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಾಗತಿಬೆಳಗಲು ವಲಯದ ಮೇಲ್ವಿಚಾರಕಿ ಎಸ್. ದೀಪಿಕಾ, ಸೇವಾಪ್ರತಿನಿಧಿ ರಾಧಾ ಮತ್ತು ಒಕ್ಕೂಟದ ಪದಾಧಿಕಾರಿ ಪವಿತ್ರ, ಶಾಲಾ ಶಿಕ್ಷಕವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  

ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳಲ್ಲಿ ಬಹುಮಾನ

ಭದ್ರಾವತಿ ಹಳೇನಗರದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 
    ಭದ್ರಾವತಿ: ಹಳೇನಗರದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 
    ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಾದ ಅರ್ಫಾನ್ ತಹೀಮ್ ೧೦೦, ೨೦೦ ಮತ್ತು ೧೧೦ ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ, ನವನೀತ್ ನಡಿಗೆಯಲ್ಲಿ ಪ್ರಥಮ ಸ್ಥಾನ ಮತ್ತು ಖುಷಿ ದ್ವಿತೀಯ ಸ್ಥಾನ ಹಾಗು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮಿನಿ ಓಲಂಪಿಕ್ಸ್‌ನಲ್ಲಿ ವಿ. ವಿಕ್ರಮ್ ಸಿಂಧೆ ಭಾರ ಎತ್ತುವ ಸ್ಪರ್ಧೆಯ ೪೦ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. 
    ಉತ್ತಮ ಸಾಧನೆಯೊಂದಿಗೆ ಪ್ರಶಸ್ತಿಗಳನ್ನು ಪಡೆದು ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ತಾಲೂಕು ಕುರುಬರ ಸಂಘ, ಕನಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.   

ಯಶಸ್ವಿ ೬೧ನೇ ರಕ್ತದಾನ ಶಿಬಿರ : ೩೫ ಯೂನಿಟ್ ರಕ್ತ ಸಂಗ್ರಹ

ಭದ್ರಾವತಿಯಲ್ಲಿ ಹಳೇನಗರ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವತಿಯಿಂದ ಶಿವಮೊಗ್ಗ ಆಶಾಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ೬೧ನೇ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು. 
    ಭದ್ರಾವತಿ: ಕೆಲವು ವರ್ಷಗಳಿಂದ ಜಿಲ್ಲೆಯಾದ್ಯಂತ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ರಕ್ತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ, ರಕ್ತದಾನಿ ಹಾಲೇಶಪ್ಪ ನೇತೃತ್ವದಲ್ಲಿ ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. 
    ಹಳೇನಗರ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವತಿಯಿಂದ ಶಿವಮೊಗ್ಗ ಆಶಾಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ೬೧ನೇ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು. 
    ಹಳೇನಗರ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾಗು ಸ್ಥಳೀಯ ನಿವಾಸಿಗಳು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಒಟ್ಟು ೩೫ ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಶಿಬಿರ ಯಶಸ್ವಿಗೊಳ್ಳಲು ಸಹಕರಿಸಿದ ಪ್ರತಿಯೊಬ್ಬರಿಗೂ ಹಾಲೇಶಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ. 

ಬುಧವಾರ, ನವೆಂಬರ್ 12, 2025

ಅವ್ಯವಹಾರಕ್ಕೆ ಬೇಸತ್ತು ಗ್ರಾ.ಪಂ. ಸದಸ್ಯನಿಂದಲೇ ಹಗಲು-ರಾತ್ರಿ ಧರಣಿ ಸತ್ಯಾಗ್ರಹ..!



ಭದ್ರಾವತಿ ತಾಲೂಕಿನ ಅತಿದೊಡ್ಡ ಪಂಚಾಯಿತಿ ಸಿಂಗನಮನೆ ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಸದಸ್ಯ ಮಂಜುನಾಥ್ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮಂಗಳವಾರದಿಂದ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದು, ಆದರೆ ಇದುವರೆಗೂ ಯಾರು ಸಹ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಲು ಮುಂದಾಗಿಲ್ಲ. 
    ಭದ್ರಾವತಿ : ತಾಲೂಕಿನ ಅತಿದೊಡ್ಡ ಪಂಚಾಯಿತಿ ಸಿಂಗನಮನೆ ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಸದಸ್ಯ ಮಂಜುನಾಥ್ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮಂಗಳವಾರದಿಂದ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದು, ಆದರೆ ಇದುವರೆಗೂ ಯಾರು ಸಹ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಲು ಮುಂದಾಗಿಲ್ಲ. 
    ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಾಗ ಹಾಗು ಬಡಾವಣೆಗಳಲ್ಲಿ ಸಿಎ ನಿವೇಶಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಬೀದಿ ದೀಪಗಳ ಖರೀದಿಯಲ್ಲಿ ಹಾಗು ಕುಡಿಯುವ ನೀರಿನ ಕೊಳವೆಗಳ ದುರಸ್ತಿ ಕಾರ್ಯದಲ್ಲಿ ಅಕ್ರಮವೆಸಗಲಾಗಿದೆ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಾಗು ೧೫ನೇ ಹಣಕಾಸು ವಾರ್ಷಿಕ ಲೆಕ್ಕ ಪರಿಶೋಧನೆಯಲ್ಲಿ ಅಕ್ರಮವೆಸಗಿದ್ದಾರೆಂದು  ಆರೋಪಿಸಿದ್ದಾರೆ.


    ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಗ್ರಾಮದಲ್ಲಿ ಕೆಲವು ದಿನಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ. ಪಂಚಾಯಿತಿ ಅಧ್ಯಕ್ಷೆ ಮಂಜುಳಾರವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ವಾರ್ಡ್ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಿಗೆ ಸರಿಯಾಗಿ ಬಿಲ್ ಪಾವತಿಸಿಲ್ಲ. ಅಲ್ಲದೆ ಹೊಸದಾಗಿ ಯಾವುದೇ ಕಾಮಗಾರಿಗಳನ್ನು ಹಾಗು ಕಾರ್ಯಕ್ರಮಗಳನ್ನು ನಡೆಸುತ್ತಿಲ್ಲ ಎಂದು ದೂರಿದ್ದಾರೆ. 
    ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗದಕಾರಣ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಮಂಜುನಾಥ್ ಅಳಲು ತೋರ್ಪಡಿಸಿಕೊಂಡಿದ್ದಾರೆ.  

ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ವಿಜೃಂಭಣೆಯಿಂದ ಜರುಗಿದ ಆಶ್ಲೇಷ ಬಲಿ ಪೂಜೆ

ಪ್ರತಿ ವರ್ಷದಂತೆ ಈ ವರ್ಷ ಸಹ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಬುಧವಾರ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ: ಪ್ರತಿ ವರ್ಷದಂತೆ ಈ ವರ್ಷ ಸಹ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಬುಧವಾರ ವಿಜೃಂಭಣೆಯಿಂದ ಜರುಗಿತು.
    ಬೆಳಗ್ಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ, ನಂತರ ಹೋಮ ಸೇರಿದಂತೆ ಇನ್ನಿತರ ಆಚರಣೆಗಳು ಜರುಗಿದವು. ಮಧ್ಯಾಹ್ನ ೧೨ ಗಂಟೆಗೆ ಆಶ್ಲೇಷ ಬಲಿ ಪೂಜೆ ನಡೆಯಿತು. ಪಂಡಿತರಾದ ಗೋಪಾಲಕೃಷ್ಣ ಆಚಾರ್ ಮತ್ತು ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದ ತಂಡ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿತು. 
     ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಮುರುಳಿಧರ್ ತಂತ್ರಿ, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಕೆ. ರಮಾಕಾಂತ, ನಿರಂಜನಾಚಾರ್ಯ ಹಾಗೂ ಪ್ರಧಾನ ಅರ್ಚಕ ಮಾಧುರಾವ್, ಸಮೀರಾಚಾರ್, ಸುಧೀಂದ್ರ ಮತ್ತು ಜಯತೀರ್ಥ ಸೇರಿದಂತೆ ಸಿದ್ದಾರೂಢನಗರ, ಕನಕನಗರ, ಹಳೇನಗರ, ಭೂತನಗುಡಿ, ಹೊಸಮನೆ, ಜನ್ನಾಪುರ, ನ್ಯೂಟೌನ್, ಹುತ್ತಾಕಾಲೋನಿ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು.