Thursday, May 14, 2020

ಕ್ವಾರಂಟೈನ್ ತೆರೆಯಲು ಗ್ರಾಮಸ್ಥರೊಂದಿಗೆ ಶಾಂತಿ ಸಭೆ

ನೂತನ ದಂಡಾಧಿಕಾರಿ ಪ್ರಯತ್ನ ಯಶಸ್ವಿ 

ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಮತ್ತು ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ತೆರೆಯಲು ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸುತ್ತಿರುವ ನೂತನ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಶಿವಕುಮಾರ್. 
ಭದ್ರಾವತಿ, ಮೇ. ೧೪: ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಗ್ರಾಮಸ್ಥರ ಸಹಕಾರ ಪಡೆದು ಕ್ವಾರಂಟೈನ್ ತೆರೆಯುವಲ್ಲಿ ನೂತನ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ.
ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕ್ವಾರಂಟೈನ್ ತೆರೆಯಲು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ತಾಲೂಕಿನ ಹಂಚಿನ ಸಿದ್ದಾಪುರ ಮತ್ತು ದೇವರನರಸೀಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ತೆರೆಯಲು ಅಲ್ಲಿನ ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸಿ ಕೊರೋನಾ ವೈರಸ್ ನಿರ್ಮೂಲನೆಗೆ ಕೈಗೊಂಡಿರುವ ಕ್ರಮ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಸಹಕರಿಸುವಂತೆ ಶಿವಕುಮಾರ್ ಮನವಿ ಮಾಡಿದರು.
ತಹಸೀಲ್ದಾರ್ ಮಾತಿಗೆ ಗ್ರಾಮಸ್ಥರು ಬೆಂಬಲ ವ್ಯಕ್ತಪಡಿಸಿದ್ದು, ಕಳೆದ ೩ ದಿನಗಳಿಂದ ಕ್ವಾರಂಟೈನ್ ಕಾರ್ಯಾಚರಣೆಯಲ್ಲಿದ್ದು, ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬಂದವರಿಗೆ ನಿಗಾದಲ್ಲಿರಿಸಲಾಗುತ್ತಿದೆ. ತುರ್ತು ಸಂದರ್ಭಕ್ಕೆ ಅಗತ್ಯ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್, ಗ್ರಾಮದ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

ಅಧಿಕ ಮೊತ್ತದ ವಿದ್ಯುತ್ ಬಿಲ್ : ಮೆಸ್ಕಾಂ ಅಧಿಕಾರಿಗಳೊಂದಿಗೆ ಮಾಜಿ ಶಾಸಕ ಅಪ್ಪಾಜಿ ಮಾತುಕತೆ

ಗ್ರಾಹಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಲು ಮನವಿ 

ಭದ್ರಾವತಿಯಲ್ಲಿ ಗುರುವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೆಸ್ಕಾಂ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಭದ್ರಾವತಿ, ಮೇ. ೧೪: ಗ್ರಾಹಕರ ವಿದ್ಯುತ್ ಬಳಕೆಗೆ ಸಂಬಂಧಿಸಿದಂತೆ ಮೆಸ್ಕಾಂ ವತಿಯಿಂದ ನೀಡಲಾಗಿರುವ ಬಿಲ್‌ಗಳು ಅವೈಜ್ಞಾನಿಕವಾಗಿದ್ದು, ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ಅಧಿಕ ಮೊತ್ತದ ಬಿಲ್ ಪಾವತಿಸುವುದು ಅಸಾಧ್ಯವಾಗಿದೆ. ಈ ಸಂಬಂಧ ಪರಿಶೀಲಿಸಿ ಗ್ರಾಹಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮನವಿ ಮಾಡಿದರು.
ಗುರುವಾರ ಮೆಸ್ಕಾಂ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿದ ಪರಿಣಾಮ ಉದ್ಯೋಗವಿಲ್ಲದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ವಿದ್ಯುತ್ ಬಳಕೆ ಬಿಲ್‌ಗಳನ್ನು ನೀಡಲಾಗಿದ್ದು, ಅವೈಜ್ಞಾನಿಕವಾಗಿ ಅಧಿಕ ಮೊತ್ತ ವಿಧಿಸಲಾಗಿದೆ. ಯೂನಿಟ್‌ಗೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಿಧಿಸಿರುವುದು ಸರಿಯಲ್ಲ.  ಇದರಿಂದಾಗಿ ಬಿಲ್ ಪಾವತಿಸುವುದು ಗ್ರಾಹಕರಿಗೆ ಕಷ್ಟವಾಗಿದೆ. ಯಾವುದೇ ರೀತಿ ಹೊರೆಯಾಗದಂತೆ ಬಿಲ್ ಪಾವತಿಸಲು ಅನುಕೂಲ ಕಲ್ಪಿಸಿಕೊಡಬೇಕೆಂದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯಪಾಲಕ ಇಂಜಿನಿಯರ್ ಮೋಹನ್‌ಕುಮಾರ್, ಇಲಾಖೆಯ ಮಾರ್ಗಸೂಚಿಯಂತೆ ಬಿಲ್ ನೀಡಲಾಗಿದೆ. ಗ್ರಾಹಕರಿಗೆ ಯಾವುದೇ ರೀತಿ ಅನುಮಾನ ಕಂಡು ಬಂದಲ್ಲಿ ಕಛೇರಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಗ್ರಾಹಕರಿಗೆ ಉಂಟಾಗಿರುವ ಗೊಂದಲ ಬಗೆಹರಿಸುವುದಾಗಿ ಭರವಸೆ ನೀಡಿದರು.
ಮೆಸ್ಕಾಂ ಅಧಿಕಾರಿ ರಾಮಚಂದ್ರ, ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಎನ್ ಬಾಲಕೃಷ್ಣ, ನರಸಿಂಹಚಾರ್, ಡಿ.ಟಿ ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮೇ.15ರಂದು ವಿದ್ಯುತ್ ವ್ಯತ್ಯಯ

ಭದ್ರಾವತಿ, ಮೇ. ೧೪: ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಹೊಸಮನೆ ರಸ್ತೆ ಅಗಲೀಕರಣ ಕಾರ್ಯ ಕೈಗೊಂಡಿರುವ ಕಾರಣ ರಸ್ತೆಯ ಇಕ್ಕೆಲಗಳಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ.15ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೊಸಮನೆ ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಕುವೆಂಪು ನಗರ, ಹನುಮಂತ ನಗರ, ತ್ಯಾಗರಾಜ ನಗರ, ವಿಜಯ ನಗರ, ಅಶ್ವತ್ಥ ನಗರ, ಕಬಳಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ : ಕನ್ನಡ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ

ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ಗುರುವಾರ ಕನ್ನಡ ವಿಷಯ ಕುರಿತು ಪೋನ್ ಇನ್ ಕಾರ್ಯಕ್ರಮ ನಡೆಯಿತು. 
ಭದ್ರಾವತಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಸಿದ್ದತೆಗಾಗಿ ವಿಷಯವಾರು ಕ್ಲಸ್ಟಾಂಶಗಳ ಬಗ್ಗೆ ಇರುವ ಸಂದೇಹಗಳು ಮತ್ತು ಗೊಂದಲಗಳನ್ನು ಪರಿಹರಿಸಲು ಹಮ್ಮಿಕೊಳ್ಳಲಾಗಿರುವ ಪೋನ್ ಇನ್ ಕಾರ್ಯಕ್ರಮದಲ್ಲಿ ಗುರುವಾರ ಕನ್ನಡ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.
ಶಿಕ್ಷಕರಾದ ಡಾ. ಬಿ.ಎ ತಂಬೂಳಿ, ಕೆ. ಬಸವರಾಜ ಮತ್ತು ಅರಳೇಹಳ್ಳಿ  ಅಣ್ಣಪ್ಪ ವಿದ್ಯಾರ್ಥಿಗಳ  ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೆ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸುವಂತೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ವಿಷಯವಾರು ನಿರೀಕ್ಷಕರಾದ ಎಂ. ಸತೀಶ್, ಶಿವನೆಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ಮಕ್ಕಳು ಕನ್ನಡ ವಿಷಯದಲ್ಲಿನ ಸಂದೇಹ ಮತ್ತು ಗೊಂದಲಗಳನ್ನು ಪರಿಹರಿಸಿಕೊಂಡರು. ಮೇ.೨೦ರ ವರೆಗೆ ಕಾರ್ಯಕ್ರಮ ನಡೆಯಲಿದೆ. 

Wednesday, May 13, 2020

ಬಿ.ಕೆ ಸಂಗಮೇಶ್ವರ್ ಜಲಸಂಪನ್ಮೂಲ ಖಾತೆ ಸಚಿವರ ಭೇಟಿ : ಮಾತುಕತೆ

ಭದ್ರಾ ಮೇಲ್ದಂಡೆ ಕಾಮಗಾರಿ ಪರಿಶೀಲನೆಗೆ ಮಂಗಳವಾರ ಭದ್ರಾವತಿಗೆ ಆಗಮಿಸಿದ್ದ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಲ. ಜಾರಕಿಹೊಳಿ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು. 
ಭದ್ರಾವತಿ: ಭದ್ರಾ ಮೇಲ್ದಂಡೆ ಕಾಮಗಾರಿ ಪರಿಶೀಲನೆಗೆ ಮಂಗಳವಾರ ಆಗಮಿಸಿದ್ದ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಲ. ಜಾರಕಿಹೊಳಿ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು.
ರಮೇಶ್ ಲ. ಜಾರಕಿಹೊಳಿ ಅವರು ಜಲಸಂಪನ್ಮೂಲ ಖಾತೆ ಸಚಿವರಾದ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರನ್ನು ವೈಯಕ್ತಿಕವಾಗಿ ಅಭಿನಂದಿಸಲಾಯಿತು. ತಾಲೂಕಿನ ಅಭಿವೃದ್ಧಿ ವಿಚಾರಗಳ ಹೊರತಾಗಿ ಖಾಸಗಿ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಪತ್ರಿಕೆಗೆ ತಿಳಿಸಿದರು. 

ಸವಿತಾ ಸಮಾಜದ ಸಹಕಾರ ಸಂಘದಲ್ಲಿ ಕಳ್ಳತನಕ್ಕೆ ಯತ್ನ

ಭದ್ರಾವತಿ ಹಳೇನಗರದ ಪತ್ರಿಕಾ ಭವನ ಬಳಿ ಇರುವ ಸವಿತಾ ಸಮಾಜದ ಸಹಕಾರ ಸಂಘದ 
ಕಟ್ಟಡದ ಗೋಡೆ ಕಿಂಡಿ ಮಾಡಿ ಕಳ್ಳತನಕ್ಕೆ ಯತ್ನಿಸಿರುವುದು. 
ಭದ್ರಾವತಿ, ಮೇ. ೧೩: ಹಳೇನಗರದ ಪತ್ರಿಕಾ ಭವನ ಬಳಿ ಇರುವ ಸವಿತಾ ಸಮಾಜದ ಸಹಕಾರ ಸಂಘದ ಕಟ್ಟಡದ ಗೋಡೆ ಕಿಂಡಿ ಮಾಡಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ಸಹಕಾರ ಸಂಘದಲ್ಲಿ ಏನಾದರೂ ಬೆಲೆ ಬಾಳುವ ಸ್ವತ್ತುಗಳು ಸಿಗಬಹುದೆಂಬ ನಿರೀಕ್ಷೆಯೊಂದಿಗೆ ಗೋಡೆ ಕಿಂಡಿ ಮಾಡಲಾಗಿದೆ. ಆದರೆ ಕಛೇರಿಯಲ್ಲಿರುವ ಸ್ವತ್ತುಗಳನ್ನು ಕಳವು ಮಾಡಿಲ್ಲ ಎನ್ನಲಾಗಿದೆ. ಈ ಸಂಬಂಧ ಹಳೇನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿವಿಧ ರಾಜ್ಯಗಳಿಂದ ಆಗಮಿಸಿರುವ ೩೪ ಮಂದಿಗೆ ಕ್ವಾರಂಟೈನ್

ಭದ್ರಾವತಿ ದೇವರನರಸೀಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ. 
ಭದ್ರಾವತಿ, ಮೇ. ೧೩: ಕೊನೆಗೂ ಜಿಲ್ಲಾಡಳಿತ ತಾಲೂಕಿನಲ್ಲಿ ೨ ಕ್ವಾರಂಟೈನ್‌ಗಳನ್ನು ತೆರೆಯುವಲ್ಲಿ ಯಶಸ್ವಿಯಾಗಿದ್ದು, ಹೊರ ರಾಜ್ಯಗಳಿಂದ ಬಂದ ಸುಮಾರು ೩೪ ಮಂದಿಯನ್ನು ಪ್ರತ್ಯೇಕವಾಗಿರಿಸಲಾಗಿದೆ.
ಕಳೆದ ೩-೪ ದಿನಗಳ ಹಿಂದೆ ಜಿಲ್ಲಾಡಳಿತ ನಗರಸಭೆ ವ್ಯಾಪ್ತಿಯ ಉಂಬ್ಳೆಬೈಲು ರಸ್ತೆಯಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕ್ವಾರಂಟೈನ್ ತೆರೆಯಲು ನಿರ್ಧರಿಸಿತ್ತು. ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬೇರೆಡೆ ತೆರೆಯುವುದಾಗಿ ಭರವಸೆ ನೀಡಿತ್ತು.
ಮಂಗಳವಾರ ಗ್ರಾಮೀಣ ಭಾಗದ ದೇವರ ನರಸೀಪುರ ಮತ್ತು ಹಂಚಿನ ಸಿದ್ದಾಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ತೆರೆಯಲಾಗಿದೆ. ಕ್ವಾರಂಟೈನ್‌ನಲ್ಲಿರುವವರಿಗೆ ಊಟದ ವ್ಯವಸ್ಥೆ ಸೇರಿದಂತೆ ಅವಶ್ಯಕ ಸೌಲಭ್ಯ ಕಲ್ಪಿಸುವುದು ವಸತಿ ಶಾಲೆ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ. ಒಟ್ಟಾರೆ ನಿರ್ವಹಣೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ವಹಿಸಲಾಗಿದೆ. ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಹ ತಮಗೆ ವಹಿಸಿರುವ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್ ತಿಳಿಸಿದ್ದಾರೆ.
ಪ್ರಸ್ತುತ ದೇವರ ನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಮಿಳು, ಚನ್ನೈ ನಗರಗಳಿಂದ ಆಗಮಿಸಿರುವ ೧೫ ಮಂದಿಯನ್ನು ಹಾಗು ಹಂಚಿನ ಸಿದ್ದಾಪುರದ ವಸತಿ ಶಾಲೆಯಲ್ಲಿ ಗೋವಾ, ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಂದ ನಗರಕ್ಕೆ ಬಂದಿರುವ ೨೭ ಮಂದಿಯನ್ನು ಒಟ್ಟು ೩೪ ಮಂದಿಯನ್ನು ನಿಗಾದಲ್ಲಿರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್ ತಿಳಿಸಿದ್ದಾರೆ.
ಸಮುದಾಯಕ್ಕೆ ಹರಡದಂತೆ ಎಚ್ಚರ ವಹಿಸಲು ಕ್ವಾರಂಟೈನ್:
ಮೂಲತಃ ತಾಲೂಕಿನ ನಿವಾಸಿಗಳಾಗಿದ್ದು, ವಿವಿಧ ಕಾರಣಗಳಿಂದ ಲಾಕ್‌ಡೌನ್ ಘೋಷಣೆಯಾಗುವ ಮೊದಲು ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದವರು ಪುನಃ ತಮ್ಮ ತಮ್ಮ ಸ್ವಂತ ಊರುಗಳಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅವರನ್ನು ಪ್ರತ್ಯೇಕವಾಗಿರಿಸಿ ಆರೋಗ್ಯ ತಪಾಸಣೆ ನಡೆಸುವ ಮೂಲಕ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡದಂತೆ ಎಚ್ಚರವಹಿಸಲು ಕ್ವಾರಂಟೈನ್‌ಗಳನ್ನು ತೆರೆಯಲಾಗಿದೆ.
ಬೇರೆ ಬೇರೆ ರಾಜ್ಯಗಳಿಂದ ಬಂದವರು ನೇರವಾಗಿ ತಮ್ಮ ತಮ್ಮ ಮನೆಗಳಿಗೆ ತೆರಳುವುದರಿಂದ ಒಂದು ವೇಳೆ ಕೊರೋನಾ ವೈರಸ್ ಬಾಧಿತರಿಂದ ಕುಟುಂಬಕ್ಕೆ, ಸಮುದಾಯಕ್ಕೆ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಸ್ಥಳೀಯರು ಇದನ್ನು ತಪ್ಪಗಿ ಭಾವಿಸುವ ಮೂಲಕ ಕ್ವಾರಂಟೈನ್‌ಗಳನ್ನು ತೆರೆಯಲು ಆಕ್ಷೇಪಿಸುತ್ತಿರುವುದು ಆತಂಕದ ಬೆಳೆವಣಿಗೆಯಾಗಿದೆ ಎಂದು ಕೊರೋನಾ ವೈರಸ್ ನಿರ್ಮೂಲನೆಗಾಗಿ  ಹಗಲಿರುಳು ಹೋರಾಟ ನಡೆಸುತ್ತಿರುವವರು ವಿಷಾದ ವ್ಯಕ್ತಪಡಿಸಿದ್ದಾರೆ.