Sunday, May 24, 2020

ಶಾಲಾ ಮಕ್ಕಳ ಮನೆಗಳಿಗೆ ಆಹಾರ ಪದಾರ್ಥ ತಲುಪಿಸುವ ವ್ಯವಸ್ಥೆ ಕೈಗೊಳ್ಳಿ

ಶಾಲಾ ಮಕ್ಕಳಿಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಆರಂಭವಾಗುವ ತನಕ ಆಹಾರ ಪದಾರ್ಥಗಳನ್ನು ಅವರ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಭದ್ರಾವತಿಯಲ್ಲಿ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 
ಭದ್ರಾವತಿ, ಮೇ. ೨೪: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಹಾಲಿನ ಪೌಡರ್ ಮತ್ತು ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಸೌಲಭ್ಯಗಳು ಸ್ಥಗಿತಗೊಂಡಿರುವ ಕಾರಣ ಕಳೆದ ೨-೩ ತಿಂಗಳಿನಿಂದ ಆಹಾರ ಪದಾರ್ಥಗಳು ಹಾಳಾಗುತ್ತಿವೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಆರಂಭವಾಗುವ ತನಕ ಆಹಾರ ಪದಾರ್ಥಗಳನ್ನು ಅವರ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. 
ಸರ್ಕಾರ ಕೈಗೊಂಡಿರುವ ಯೋಜನೆ ಶಾಲಾ ಮಕ್ಕಳಿಗೆ ಸದ್ಬಳಕೆಯಾಗಬೇಕು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಗಮನ ಹರಿಸಬೇಕು. ಪ್ರಸ್ತುತ ದೇಶಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಲಾಕ್‌ಡೌನ್ ಜಾರಿ ಹಿನ್ನಲೆಯಲ್ಲಿ ಉದ್ಯೋಗವಿಲ್ಲದೆ ಶ್ರೀ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜೀವನ ಸಾಗಿಸುವುವೇ ಕಷ್ಟಕರವಾಗಿದೆ.
ಈ ನಡುವೆ ಖಾಸಗಿ ಶಾಲೆಗಳು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ.  ಶಾಲೆಗಳಲ್ಲಿ ದಾಖಲಾತಿ ಪ್ರಾರಂಭಿಸುವ ಮೊದಲೇ ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಸಂದೇಶ ಕಳುಹಿಸುತ್ತಿದ್ದು, ಮುಂಗಡ ಶುಲ್ಕ ಪಾವತಿಸುವಂತೆ ಒತ್ತಾಯಿಸಲಾಗುತ್ತಿದೆ. ಇದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕೈಗೊಳ್ಳಬೇಕು. ಪೋಷಕರ ಆತಂಕ ದೂರ ಮಾಡಿ ಮುಖಂಡ ಹಣ ಪಾವತಿಸಲು ಕಾಲಾವಕಾಶ ಕಲ್ಪಿಸಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಟಿ.ಎಚ್.ಓ ತಂಡದಿಂದ ಕ್ವಾರಂಟೈನ್ ಪರಿಶೀಲನೆ

ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ನೇತೃತ್ವದ ತಂಡ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಕ್ವಾರಂಟೈನ್ ಪರಿಶೀಲನೆ ನಡೆಸಿತು. 
ಭದ್ರಾವತಿ, ಮೇ. ೨೪: ತಾಲೂಕು ಆರೋಗ್ಯಾಧಿಕಾರಿ ನೇತೃತ್ವದ ತಂಡ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಕ್ವಾರಂಟೈನ್ ಪರಿಶೀಲನೆ ನಡೆಸಿತು.
ಮಹಾರಾಷ್ಟ್ರದಿಂದ ಬಂದಿರುವ ೧೮ಜನರನ್ನು ಕ್ವಾರಂಟೈನ್ ಮಾಡಿರುವ ಹಿನ್ನಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಕೊನೆಯ ಹಂತದಲ್ಲಿ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಈ ಹಿನ್ನಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕ್ವಾರಂಟೈನ್ ಸಿಬ್ಬಂದಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಯಿತು. ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮೀನಾಕ್ಷಮ್ಮ ನಿಧನ

ಮೀನಾಕ್ಷಮ್ಮ 
ಭದ್ರಾವತಿ, ಮೇ. ೨೪: ನಗರದ ಕಡದಕಟ್ಟೆ ನಿವಾಸಿ ದಿವಂಗತ ಕಲ್ಯಾಣಪ್ಪರವರ ಪತ್ನಿ ಮೀನಾಕ್ಷಮ್ಮ(೯೦)ರವರು ಭಾನುವಾರ ಸಂಜೆ ನಿಧನರಾದರು.
ಮೃತರು ೫ ಗಂಡು ಹಾಗೂ ೪ ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಬಿಟ್ಟಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 

Saturday, May 23, 2020

ರಂಜಾನ್ : ಶಾಂತಿ ಸಭೆ

ರಂಜಾನ್ ಹಬ್ಬದ ಹಿನ್ನಲೆಯಲ್ಲಿ ನಗರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಲು ಶನಿವಾರ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. 
ಭದ್ರಾವತಿ, ಮೇ. ೨೩: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ನಗರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಲು ಶನಿವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ಈ ಬಾರಿ ದೇಶಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ  ಮುಸ್ಲಿಂ ಸಮುದಾಯದ ಪ್ರತಿಯೊಬ್ಬರು ರಂಜಾನ್ ಹಬ್ಬವನ್ನು ಮನೆಯಲ್ಲಿಯೇ ಇದ್ದು ಸರಳವಾಗಿ ಆಚರಿಸುವ ಮೂಲಕ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಲಾಯಿತು.
ಹಳೇನಗರ ಪೊಲೀಸ್ ಠಾಣಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಯಿತು. ಮುಸ್ಲಿಂ ಸಮುದಾಯದ ಪ್ರಮುಖರಾದ ಸಿ.ಎಂ ಖಾದರ್, ಜಹೀರ್‌ಜಾನ್, ಜೆಬಿಟಿ ಬಾಬು, ಹಫೀಜ್ ಉರ್ ರಹಮಾನ್, ಮುರ್ತುಜಾ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಎಪಿಎಂಸಿ : ಮೇ.೨೪ರಂದು ವ್ಯಾಪಾರ, ವಹಿವಾಟು ಸ್ಥಗಿತ

ಭದ್ರಾವತಿ, ಮೇ. ೨೩: ಸರ್ಕಾರದ ಮಾರ್ಗಸೂಚಿಗಳ ಅನ್ವಯ ಮೇ.೩೧ರ ವರೆಗೆ ಲಾಕ್‌ಡೌನ್ ಜಾರಿಯಲ್ಲಿದ್ದು, ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಯಾವುದೇ ವ್ಯಾಪಾರ, ವಹಿವಾಟು ಇರುವುದಿಲ್ಲ.
ಕೋವಿಡ್-೧೯ ಸೋಂಕು ಹರಡದಂತೆ ತಡೆಗಟ್ಟುವ ಉದ್ದೇಶದಿಂದ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ರೈತರು, ಸಾರ್ವಜನಿಕರು ಸಹಕರಿಸುವಂತೆ ಸಮಿತಿ ಕಾರ್ಯದರ್ಶಿ ಕೋರಿದ್ದಾರೆ.

ಏಕಾಏಕಿ ಕ್ವಾರಂಟೈನ್ ನಿರ್ಮಾಣ ಸ್ಥಳೀಯರ ವಿರೋಧ : ಪ್ರತಿಭಟನೆ

ಮಹಾರಾಷ್ಟ್ರದಿಂದ ಬಂದ ೧೮ ಜನ : ಕೊರೋನಾ ವೈರಸ್ ಭೀತಿ 

ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ  ಏಕಾಏಕಿ ಕ್ವಾರಂಟೈನ್ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಭದ್ರಾವತಿ, ಮೇ. ೨೩: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ  ಏಕಾಏಕಿ ಕ್ವಾರಂಟೈನ್ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಸ್ಥಳೀಯರ ಗಮನಕ್ಕೆ ಬಾರದಂತೆ ಕ್ವಾರಂಟೈನ್ ನಿರ್ಮಾಣ ಮಾಡುವ ಮೂಲಕ ಮಹಾರಾಷ್ಟ್ರದಿಂದ ಬಂದಿರುವ ೧೮ ಜನರನ್ನು ನಿಗಾದಲ್ಲಿರಿಸಲು ಕರೆ ತರಲಾಯಿತು. ಈ ವಿಚಾರ ತಿಳಿದ ಗ್ರಾಮಸ್ಥರು ಕ್ಯಾರಂಟೈನ್ ಮುಂಭಾಗ ದಿಢೀರನೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ನಗರಸಭೆ ಪೌರಾಯುಕ್ತ ಮನೋಹರ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು. 

Friday, May 22, 2020

ಶುಲ್ಕ ವಸೂಲಾತಿ : ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಭದ್ರಾವತಿ ನಗರದಲ್ಲಿ ಕೆಲವು ಖಾಸಗಿ ಶಾಲೆಗಳು ಸರ್ಕಾರದ ಆದೇಶದ ವಿರುದ್ಧ ಶುಲ್ಕ ವಸೂಲಾತಿ ಮಾಡುತ್ತಿವೆ. ತಕ್ಷಣ ಈ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್‌ಗೆ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಮೇ. ೨೨: ನಗರದಲ್ಲಿ ಕೆಲವು ಖಾಸಗಿ ಶಾಲೆಗಳು ಸರ್ಕಾರದ ಆದೇಶದ ವಿರುದ್ಧ ಶುಲ್ಕ ವಸೂಲಾತಿ ಮಾಡುತ್ತಿವೆ. ತಕ್ಷಣ ಈ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್‌ಗೆ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮವಾಗಿ ಯಾವುದೇ ವಯಿವಾಟು, ಉದ್ಯೋಗವಿಲ್ಲದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದು, ಆರ್ಥಿಕ ಸಮಸ್ಯೆ ಎದುರಾಗಿದೆ. ಇದನ್ನು ಮನಗಂಡಿರುವ ಸರ್ಕಾರ ಖಾಸಗಿ ಶಾಲೆಗಳಲ್ಲಿ ಶುಲ್ಕ ವಸೂಲಾತಿ ಮಾಡಬಾರದೆಂದು ಆದೇಶಿಸಿದೆ. ಆದರೂ ಸಹ ಸರ್ಕಾರದ ಆದೇಶ ಗಾಳಿಗೆ ತೂರಿ ಪೋಷಕರ ಮೊಬೈಲ್‌ಗೆ ಎಸ್‌ಎಂಎಸ್ ಕಳುಹಿಸುವುದರ ಮೂಲಕ ವಸೂಲಾತಿಗೆ ಮುಂದಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಈ ಹಿನ್ನಲೆಯಲ್ಲಿ ತಕ್ಷಣ ಶಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿಗೊಳಿಸಿ ಸಭೆ ನಡೆಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ:
ಮನವಿ ಸ್ವೀಕರಿಸಿದ ತಹಸೀಲ್ದಾರ್ ಶಿವಕುಮಾರ್ ಮಾತನಾಡಿ, ತಕ್ಷಣ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಉಪಾಧ್ಯಕ್ಷ ಮುಳ್ಕೆರೆ ಲೋಕೇಶ್, ಸಹ ಕಾರ್ಯದರ್ಶಿಗಳಾದ ಆರ್. ಪರಮೇಶ್ ನಾಯ್ಕ, ಬಿ.ಎಸ್ ಪ್ರದೀಪ್ ಕುಮಾರ್, ಖಜಾಂಚಿ ಪರಮೇಶ್ವರಾಚಾರ್, ಜೋಸೆಫ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.