Wednesday, July 1, 2020

ಎಂಪಿಎಂ ಪುನಶ್ಚೇತನ ಖಚಿತ : ಜಗದೀಶ್ ಶೆಟ್ಟರ್

ಭದ್ರಾವತಿ ಎಂಪಿಎಂ ಕಾರ್ಖಾನೆಗೆ ಬುಧವಾರ ಭೇಟಿ ನೀಡಿದ ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು. 
ಭದ್ರಾವತಿ, ಜು. ೧: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕಾರ್ಖಾನೆಯನ್ನು ಆರಂಭಿಸಲು ಹಲವು ದಿಕ್ಕಿನಲ್ಲಿ ಚರ್ಚಿಸಲಾಗುತ್ತಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. 
ಅವರು ಬುಧವಾರ ಕಾರ್ಖಾನೆಗೆ ಭೇಟಿ ನೀಡಿ ಎಂಪಿಎಂ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ ಎಂಬ ಸಂದೇಶವನ್ನು ಈಗಾಗಲೇ ಮುಖ್ಯಮಂತ್ರಿಗಳು ನೀಡಿದ್ದಾರೆ. ದೇಶ ಹಾಗೂ ರಾಜ್ಯಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ಬೃಹತ್ ಕೈಗಾರಿಕೆಯೊಂದು ಪ್ರಸ್ತುತ ಸ್ಥಗಿತಗೊಂಡಿರುವುದು ನೋವಿನ ವಿಚಾರವಾಗಿದೆ. ಈ ಕಾರ್ಖಾನೆಯನ್ನು ಹೇಗಾದರೂ ಮಾಡಿ ಪುನಶ್ಚೇತನಗೊಳಿಸುವ ಮೂಲಕ ಇಲ್ಲಿನ ನಿರುದ್ಯೋಗಿಗಳಿಗೆ, ಯುವಕರಿಗೆ ಉದ್ಯೋಗ ಕಲ್ಪಿಸಿಕೊಡಬೇಕಾಗಿದೆ ಎಂದರು. 
ಸಚಿವರಾಗಿ ಅಧಿಕಾರ ವಹಿಸಗೊಂಡ ನಂತರ ಆರಂಭದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಬೇಕಾಗಿತ್ತು. ಆದರೆ ಕೊರೋನಾ ಹಿನ್ನಲೆಯಲ್ಲಿ ಬರಲು ಸಾಧ್ಯವಾಗಲಿಲ್ಲ. ಬೆಂಗಳೂರಿನಲ್ಲಿ ಈಗಾಗಲೇ ಹಲವಾರು ಬಾರಿ ಸಭೆಗಳನ್ನು ನಡೆಸಿ ಕಾರ್ಖಾನೆಯ ಸ್ಥಿತಿಗತಿಗಳನ್ನು ಅರಿತುಕೊಳ್ಳಲಾಗಿದೆ. ಮುಖ್ಯಮಂತ್ರಿಗಳು ಖುದ್ದಾಗಿ ಹೆಚ್ಚಿನ ಆಸಕ್ತಿ ವಹಿಸಿ ಕಾರ್ಖಾನೆಗೆ ಈ ಹಿಂದೆ ಅರಣ್ಯ ಇಲಾಖೆಯಿಂದ ಪಡೆಯಲಾಗಿದ್ದ ಅರಣ್ಯ ಭೂಮಿಯನ್ನು ಪುನಃ ಕಾರ್ಖಾನೆಗೆ ಉಳಿಸಿಕೊಂಡಿದ್ದಾರೆ. ಇದು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಮೊದಲ ಪ್ರಯತ್ನವಾಗಿದೆ. ಈಗಾಗಲೇ ಕಾರ್ಖಾನೆಗೆ ಹಲವು ಖಾಸಗಿ ಕಂಪನಿಗಳು ಭೇಟಿ ಪರಿಶೀಲನೆ ನಡೆಸಿವೆ. ಸರ್ಕಾರ ಸಹ ಮಾತುಕತೆ ನಡೆಸಿದೆ. ಮುಂದಿನ ದಿನಗಳಲ್ಲಿ ಕಾರ್ಖಾನೆಯನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ವಹಿಸುವುದು ಅಥವಾ ಗುತ್ತಿಗೆ ಆಧಾರದಲ್ಲಿ ನೀಡುವುದು ಸೇರಿದಂತೆ ಇನ್ನಿತರ ವಿಚಾರಗಳ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 
ಆರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಪ್ರಸ್ತುತ ಕಾರ್ಖಾನೆ ವಿವಿಧ ಬ್ಯಾಂಕ್‌ಗಳಲ್ಲಿ ಹೊಂದಿರುವ ಸಾಲ, ಕಚ್ಛಾ ಸಾಮಗ್ರಿಗಳು, ಕಾರ್ಮಿಕರ ಸ್ಥಿತಿಗಳು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. 
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಹೇಗಾದರೂ ಮಾಡಿ ಕಾರ್ಖಾನೆಯನ್ನು ಪುನಃ ಆರಂಭಿಸಿ ಕ್ಷೇತ್ರದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. 
ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ ಶೆಟ್ಟಣ್ಣನವರ್, ಮುಖಂಡರಾದ ಜಿ. ಧರ್ಮಪ್ರಸಾದ್, ಟಿ. ಚಂದ್ರೇಗೌಡ ಸೇರಿದಂತೆ ಇನ್ನಿತರರು ಮಾತನಾಡಿದರು. 
ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಜಿಲ್ಲಾಧಿಕಾರಿ ಶಿವಕುಮಾರ್, ಕರ್ನಾಟಕ ರಾಜ್ಯ ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Tuesday, June 30, 2020

ಉಪ ಕುಲಸಚಿವೆ ಡಿ.ವಿ ಗಾಯತ್ರಿ ಅಮಾನತು

ಅಮಾನತು ಆದೇಶ ಪತ್ರ 
ಭದ್ರಾವತಿ, ಜೂ. ೩೦: ಕುವೆಂಪು ವಿಶ್ವ ವಿದ್ಯಾಲಯ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವೆ ಡಿ.ವಿ ಗಾಯತ್ರಿಯವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ನೀಡಿ ಸರ್ಕಾರಿ ಉದ್ಯೋಗ ಪಡೆದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಸೇವೆಯಿಂದ ಅಮಾನುಗೊಳಿಸಿ ಆದೇಶಿಸಲಾಗಿದೆ. 
ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೇಮಕವಾದಂತಹ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದು, ಈ ಸಂಬಂಧ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ  ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಇದರನ್ವಯ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್  ದಾಖಲಾಗಿದೆ. ವಿಶ್ವವಿದ್ಯಾಲಯದ ನಿಯಮಾನುಸಾರ ಇಲಾಖಾ ವಿಚಾರಣೆ ಕಾಯ್ದಿರಿಸಿ ಕುಲಪತಿಗಳ ಆದೇಶದ ಮೇರೆಗೆ ಅಮಾನುಗೊಳಿಸಲಾಗಿದೆ ಎಂದು ಕುಲಸಚಿವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. 
  ಕಳೆದ ೩ ದಿನಗಳ ಹಿಂದೆ ಈ ಸಂಬಂಧ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿತ್ತು.

ದನದ ದೊಡ್ಡಿ ಜಾಗ ಖಾಸಗಿಯವರಿಗೆ ನೀಡದಿರಿ : ಬಿ.ಎನ್ ರಾಜು

ಕೋಟ್ಯಾಂತರ ರು. ಮೌಲ್ಯದ ಜಾಗ ಸದ್ಬಳಕೆಯಾಗಲಿ 

ಭದ್ರಾವತಿ ನಗರಸಭೆಗೆ ಸೇರಿದ ನಗರದ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿರುವ ದನದೊಡ್ಡಿ ಜಾಗವನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡದಿರುವಂತೆ ಮಾನಗ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. 
ಭದ್ರಾವತಿ, ಜೂ. ೩೦: ನಗರದ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿರುವ ನಗರಸಭೆಗೆ ಸೇರಿದ ದನದ ದೊಡ್ಡಿ ಜಾಗವನ್ನು ಯಾವುದೇ ಕಾನಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಆಗ್ರಹಿಸಿದೆ. 
ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಈ ಹಿಂದೆ ದನದ ದೊಡ್ಡಿಯಾಗಿದ್ದ ಜಾಗ ಅನೇಕ ವರ್ಷಗಳಿಂದಲೂ ವಿವಾದದಿಂದ ಕೂಡಿದೆ. ನಗರಸಭೆ ಖಾತೆ ನಂ. ೧೭೪/೧೭೪ರಲ್ಲಿ ಜಾಗದ ಅಳತೆ ೨೫*೮೦ ಅಡಿಗಳಾಗಿದ್ದು, ಈ ಜಾಗವನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ರವರು ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದವರಿಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಂಜೂರಾತಿಗಾಗಿ ನಗರಸಭೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು. 
ಶಾಸಕರು ಸ್ವಜಾತಿಯ ಪ್ರೀತಿಯಿಂದ ಪ್ರಸ್ತಾವನೆ ಸಲ್ಲಿಸಿರುವ ಕ್ರಮವನ್ನು ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಕೋಟ್ಯಾಂತರ ರು. ಬೆಲೆ ಬಾಳುವ ಜಾಗವನ್ನು ನಗರಸಭೆಗೆ ಆದಾಯ ಬರುವ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಅಥವಾ ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡ ನಿರ್ಮಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಆಗ್ರಹಿಸಿದರು. 
ಜಾಗವನ್ನು ಖಾಸಗಿಯವರಿಗೆ ನೀಡುವ ಸಂಬಂಧ ಮೇ.೨೯ರಂದು ತಿಂಗಳೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಮಿತಿಯು ಈ ಸಂಬಂಧ ತಕರಾರು ಸಲ್ಲಿಸಲಿದೆ. ಅಲ್ಲದೆ ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಉಗ್ರ ಹೋರಾಟ ನಡೆಸಲಿದೆ ಎಂದರು. 
ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷ ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಮ್ ಖಾನ್, ಬ್ರಹ್ಮಲಿಂಗಯ್ಯ, ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಮನವಿ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೩೦: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಮತ್ತು ಗೌರವ ಧನ ಎರಡೂ ಸೇರಿ ಮಾಸಿಕ ೧೨ ಸಾವಿರ ರು. ನೀಡುವುದು. ಆಗಾಗ ಎಲ್ಲಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಿ ಕೊರೋನಾ ವೈರಸ್ ಪ್ರಕರಣ ಕಂಡು ಬಂದಲ್ಲಿ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡುವುದು. ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವ ಧನ ನೀಡುವುದು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈಗಾಗಲೇ ಈ ಸಂಬಂಧ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೂ ಸಹ ಯಾವುದೇ ಬೇಡಿಕೆ ಈಡೇರಿಲ್ಲ. ಈ ಹಿನ್ನಲೆಯಲ್ಲಿ ೭ ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿವಿಧ ರೀತಿಯ ಪ್ರತಿಭಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಒಂದು ವೇಳೆ ಸಮಸ್ಯೆ ಪರಿಹರಿಸದಿದ್ದಲ್ಲಿ ಜು.೧೦ರಿಂದ ರಾಜ್ಯಾದ್ಯಂತ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಲಾಗಿದೆ.
ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ಆಶಾ, ಆರ್. ವಾಸಂತಿ, ಎನ್. ಭಾಗ್ಯ, ಎಚ್. ನೇತ್ರಾವತಿ, ಎನ್. ಕಮಲ, ಪಿ. ಶೃತಿ, ಎನ್. ಸೀಮಾ, ಎಸ್. ಗೀತಾಂಜಲಿ, ಹೇಮಾವತಿ, ಆರ್. ಮಂಜುಳ, ಸುಮಿತ್ರ ಬಾಯಿ, ಫಜಲುನ್ನಿಸಾ, ಎಸ್. ಮಮತ, ವಿ. ಅನಿತಾ, ಬಿ. ದೀಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉಕ್ಕಿನ ನಗರದಲ್ಲಿ ಕೊರೋನಾ ವೈರಸ್ ಸ್ಪೋಟ

೬ ವರ್ಷದ ಬಾಲಕ ಸೇರಿ ೭ ಮಂದಿಯಲ್ಲಿ ವೈರಸ್ ಪತ್ತೆ 

ಭದ್ರಾವತಿ ನಗರಸಭೆ ವ್ಯಾಪ್ತಿಯ ಗಾಂಧಿನಗರ ಹಾಗೂ ಹೊಸಮನೆ ಸುಭಾಷ್ ನಗರದಲ್ಲಿ ಒಟ್ಟು ೭ ಮಂದಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮುನ್ನಚ್ಚರಿಕೆ ಕ್ರಮವಾಗಿ ವೈರಸ್ ಕಾಣಿಸಿಕೊಂಡಿರುವ ಸ್ಥಳದ ಸುತ್ತಮುತ್ತ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್ ಮಾಡಲಾಗಿದೆ. 
ಭದ್ರಾವತಿ, ಜೂ. ೩೦: ಉಕ್ಕಿನ ನಗರದಲ್ಲಿ ದಿನ ದಿಂದ ದಿನಕ್ಕೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಂಗಳವಾರ ಒಂದೇ ದಿನ ೭ ಪ್ರಕರಣಗಳು ಧೃಢಪಟ್ಟಿವೆ. ಇದರಿಂದಾಗಿ ನಾಗರೀಕರು ಆತಂಕಕ್ಕೆ ಒಳಗಾಗುವಂತಾಗಿದೆ. 
ಗಾಂಧಿನಗರದ ಮೊದಲಿಯಾರ್ ಸಮುದಾಯ ಭವನ ಸಮೀಪದ ಒಂದೇ ಮನೆಯ ೬ ವರ್ಷದ ಬಾಲಕ ಸೇರಿದಂತೆ ೫ ಮಂದಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ.  ೫೬ ವರ್ಷದ ವ್ಯಕ್ತಿ, ೪೪ ವರ್ಷದ ಆತನ ಹೆಂಡತಿ, ೨೬ ವರ್ಷದ ಪುತ್ರಿ, ೬ ವರ್ಷದ ಮೊಮ್ಮಗ  ಹಾಗೂ ೪೩ ವರ್ಷದ ನಾದಿನಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ. ಇತ್ತೀಚಿಗೆ ಜೂ.೧೯ರಂದು ಈ ಮನೆಯ ಮಹಿಳೆಯೊಬ್ಬರು ಮಗನಿಗೆ ಹೆಣ್ಣು ನೋಡಲು ಖಾಸಗಿ ವಾಹನದಲ್ಲಿ ಸುಮಾರು ೧೦ ಮಂದಿಯೊಂದಿಗೆ ತುಮಕೂರಿಗೆ ತೆರಳಿ, ಪುನಃ ಜೂ.೨೧ರಂದು ಹಿಂದಿರುಗಿದ್ದರು. 
ಕೆಲವು ದಿನಗಳ ಹಿಂದೆ ಹಳೇನಗರದ ಉಪ್ಪಾರ ಬೀದಿಯಲ್ಲಿ ವಾಸವಿರುವ ಚಾಲಕನಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿತ್ತು. ಇದೀಗ ಒಬ್ಬ ಮಹಿಳೆಯಿಂದ ಮನೆಯ ೪ ಮಂದಿಗೆ ವೈರಸ್ ಹರಡಿದೆ ಎನ್ನಲಾಗಿದೆ. ವಾಹನದಲ್ಲಿ ತೆರಳಿದ್ದ ೧೦ ಜನರನ್ನು ಸಹ ನಿಗಾದಲ್ಲಿ ಇರಿಸಲಾಗಿತ್ತು. ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಮಗನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ. 
ಹೊಸಮನೆ ಸುಭಾಷ್‌ನಗರದಲ್ಲಿ ೨ ಪ್ರಕರಣಗಳು ಪತ್ತೆಯಾಗಿದ್ದು, ಸೊಸೆಯ ಹೆರಿಗೆ ಹಿನ್ನಲೆಯಲ್ಲಿ ತಮಿಳುನಾಡಿಗೆ ತೆರಳಿದ್ದ ೫೬ ವರ್ಷದ ವ್ಯಕ್ತಿ ಹಾಗೂ ಆತನ ೪೮ ವರ್ಷದ ಹೆಂಡತಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. 

೩ ಕಡೆ ಸೀಲ್ ಡೌನ್: 
ಕೊರೋನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ತೆರಳಿ ಸ್ಥಳ ಪರಿಶೀಲನೆ ನಡೆಸುವ ಜೊತೆಗೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದೊಂದಿಗೆ ಸ್ಯಾನಿಟೈಸರ್ ಕೈಗೊಂಡರು. ಉಳಿದಂತೆ ಮುನ್ನಚ್ಚರಿಕೆ ಕ್ರಮವಾಗಿ ಕೊರೋನಾ ವೈರಸ್ ಕಾಣಿಸಿಕೊಂಡಿರುವ ಗಾಂಧಿನಗರದ ಮೊದಲಿಯಾರ್ ಸಮುದಾಯ ಭವನ ಸಮೀಪದ ಮನೆಯ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್  ಮಾಡಲಾಗಿದೆ. 
ಅಲ್ಲದೆ ಈ ಮನೆಯೊಂದಿಗೆ ಸಂಪರ್ಕದಲ್ಲಿದ್ದ ಮಹಿಳೆಯೊಬ್ಬರು ವಾಸಿಸುತ್ತಿದ್ದ ಹೊಸಮನೆ ಭೋವಿ ಕಾಲೋನಿ ಎಡಭಾಗದ ೭ನೇ ತಿರುವಿನ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್ ಮಾಡಲಾಗಿದೆ. 
ಹೊಸಮನೆ ಸುಭಾಷ್‌ನಗರದ ೨ನೇ ತಿರುವಿನಲ್ಲಿ ವಾಸಿಸುತ್ತಿದ್ದ ದಂಪತಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಈ ಮನೆಯ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್ ಮಾಡಲಾಗಿದೆ. ಒಟ್ಟು ನಗರದಲ್ಲಿ ೩ ಭಾಗದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ನಗರದ ನಾಗರೀಕರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. 

Monday, June 29, 2020

ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳ ಸೇವೆಗೆ ಪ್ರಶಂಸೆ, ಅಭಿನಂದನೆ

ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಅಭಿನಂದಿಲಾಯಿತು. 
ಭದ್ರಾವತಿ, ಜೂ. ೨೯: ಕೊರೋನಾ ವೈರಸ್ ಪರಿಣಾಮ ಪ್ರಸ್ತುತ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯಲ್ಲೂ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಸೋಮವಾರ ಪ್ರಶಂಸೆ ವ್ಯಕ್ತಪಡಿಸಲಾಯಿತು. 
ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ, ಇತ್ತೀಚೆಗೆ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಲು ಕಾರಣಕರ್ತರಾದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರನ್ನು ಅಭಿನಂದಿಸಲಾಯಿತು. 
ಹಿರಿಯ ವೈದ್ಯ ಡಾ. ರವೀಂದ್ರನಾಥ ಕೋಠಿ, ತಮಿಳು ಸಮಾಜದ ಅಧ್ಯಕ್ಷ ಸುರೇಶ್‌ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ನೀಲೇಶ್‌ರಾಜ್, ರವೀಂದ್ರಕುಮಾರ್, ಆರೋಗ್ಯ ರಕ್ಷಾ ಸಮಿತಿಯ ಸುಂದರ್ ಬಾಬು, ಕೆ.ಎನ್ ನಾಗೇಶ್ ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಶಾಲಾ ಮಕ್ಕಳಿಗೆ ನೀಡಬೇಕಾದ ಅಕ್ಕಿ, ಬೇಳೆ ವಿತರಣೆಯಲ್ಲಿ ವಂಚನೆ

ಎಎಪಿ ವತಿಯಿಂದ ಆಕ್ರೋಶ : ತಪ್ಪತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ 

 ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಷರ ದಾಸೋಹ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಬದಲು ವಿತರಿಸಲಾಗುತ್ತಿರುವ ಅಕ್ಕಿ, ಬೇಳೆ ವಿತರಣೆಯಲ್ಲಿ ವಂಚನೆ ನಡೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ವತಿಯಿಂದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್‌ಗೆ ಮನವಿ ಸಲ್ಲಿಸಲಾಯಿತು. 

ಭದ್ರಾವತಿ, ಜೂ. ೨೯: ಕಳೆದ ಸುಮಾರು ೪ ತಿಂಗಳಿನಿಂದ ವಿಶ್ವದೆಲ್ಲೆಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವ ಜೊತೆಗೆ ಲಾಕ್‌ಡೌನ್ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಸಂಕಷ್ಟಕ್ಕೆ ಒಳಗಾಗದವರ ನೆರವಿಗೆ ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳು ಮುಂದಾಗುತ್ತಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಬಡ ಮಕ್ಕಳಿಗೆ ತಲುಪಬೇಕಾದ ಆಹಾರ ದಿನಸಿ ಸಾಮಗ್ರಿಗಳನ್ನು ಸಮರ್ಪಕವಾಗಿ ವಿತರಿಸದೆ ವಂಚಿಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. 
ಅವರು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಪಕ್ಷದ ಮುಖಂಡರೊಂದಿಗೆ ತೆರಳಿ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾದಿಕಾರಿ ಎ.ಜಿ ರಾಜಶೇಖರ್‌ಗೆ ಮನವಿ ಸಲ್ಲಿಸಿದರು. 
ಸರ್ಕಾರ ಶಾಲಾ ಮಕ್ಕಳಿಗೆ ಅಕ್ಷರ ದಾಸೋಹ ಯೋಜನೆಯಡಿ ಮಧ್ಯಾಹ್ನ ಬಿಸಿಯೂಟ ನೀಡುತ್ತಿದ್ದು, ಕೊರೋನಾ ವೈರಸ್ ಪರಿಣಾಮ ಲಾಕ್‌ಡೌನ್ ಜಾರಿಗೆ ಬಂದ ಹಿನ್ನಲೆಯಲ್ಲಿ ಶಾಲೆಗಳಿಗೆ ರಜಾ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಮಕ್ಕಳಿಗೆ ಊಟದ ಬದಲು ಪ್ರತಿ ತಿಂಗಳು ೨ ಕೆ.ಜಿ ಅಕ್ಕಿ ಹಾಗೂ ಬೇಳೆ ವಿತರಿಸಲಾಗುತ್ತಿದೆ. ಆಯಾ ಶಾಲೆಗಳು ಎಲ್ಲಾ ಮಕ್ಕಳಿಗೂ ವಿತರಿಸಲಾಗಿದೆ ಎಂದು ಸುಳ್ಳು ವರದಿಯನ್ನು ಮೇಲಾಧಿಕಾರಿಗಳಿಗೆ ನೀಡುತ್ತಿವೆ. ಆದರೆ ಶೇ.೪೦ರಷ್ಟು ಮಕ್ಕಳಿಗಳಿಗೆ ತಲುಪುತ್ತಿಲ್ಲ. ಈ ಸಂಬಂಧ ಪೋಷಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ತಕ್ಷಣ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 
ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಮುಳ್ಕೆರೆ ಲೋಕೇಶ್ ಹಾಗೂ  ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಾಂತ ದಿನೇಶ್ ಸೇರಿದಂತೆ ಮಹಿಳಾ ಪ್ರಮುಖರು ಉಪಸ್ಥಿತರಿದ್ದರು.