Monday, August 3, 2020

ಪುನಃ ೨೯ ಸೋಂಕು ಪತ್ತೆ : ಉಕ್ಕಿನ ನಗರದಲ್ಲಿ ಹೆಚ್ಚಿದ ಆತಂಕ

ಭದ್ರಾವತಿ, ಆ. ೩: ತಾಲೂಕಿನಲ್ಲಿ ಕೊರೋನಾ ಸೋಂಕು ಪುನಃ ಹೆಚ್ಚಳವಾಗಿದ್ದು, ಸೋಮವಾರ ೨೯ ಪ್ರಕರಣಗಳು ಪತ್ತೆಯಾಗಿವೆ. 
ಭಾನುವಾರ ಒಂದೇ ಒಂದು ಪ್ರಕರಣ ಪತ್ತೆಯಾಗಿತ್ತು. ಇದೀಗ ನಗರಸಭೆ ವ್ಯಾಪ್ತಿಯಲ್ಲಿ ೧೯ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ೧೦ ಪ್ರಕರಣಗಳು ಪತ್ತೆಯಾಗಿವೆ.
ನಗರಸಭೆ ವ್ಯಾಪ್ತಿಯ ಗಣೇಶ್ ಕಾಲೋನಿಯ ಒಂದೇ ಕುಟುಂಬದ ೪೦ ಹಾಗೂ ೬೬ ವರ್ಷದ ಇಬ್ಬರು ಪುರುಷರು ಮತ್ತು ೬೦ ವರ್ಷದ ಮಹಿಳೆ ಸೇರಿ ೩ ಮಂದಿಗೆ, ಗಾಂಧಿನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರಿಗೆ, ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯೊಬ್ಬರಿಗೆ ಹಾಗೂ ಹೊಸಮನೆ ಶಿವಾಜಿ ಸರ್ಕಲ್ ಬಳಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ, ಸಿದ್ಧರೂಢ ನಗರದಲ್ಲಿ ಒಬ್ಬ ವ್ಯಕ್ತಿಗೆ, ಶಂಕರ ಮಠ ಬಳಿ ವ್ಯಕ್ತಿಯೊಬ್ಬರಿಗೆ,  ಬಿ.ಎಚ್ ರಸ್ತೆ ೭ನೇ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರಿಗೆ, ಹೊಸಮನೆ ಭಾಗದಲ್ಲಿ ಸೇಂಟ್ ಮೇರಿಸ್ ಶಾಲೆ ಬಳಿ ೭೪ ವರ್ಷದ ವೃದ್ಧನಿಗೆ, ಹೊಸಮನೆ ಚಾನಲ್ ಬಳಿ ಯುವಕನೊಬ್ಬನಿಗೆ ಹಾಗೂ ವಿಜಯನಗರದಲ್ಲಿ ೨೬ ವರ್ಷದ ಯುವಕನಿಗೆ, ಹುತ್ತಾಕಾಲೋನಿ ಒಕ್ಕಲಿಗರ ಸಮುದಾಯ ಭವನದ ಬಳಿ ೩೩ ವರ್ಷದ ವ್ಯಕ್ತಿಗೆ, ವೇಲೂರು ಶೆಡ್‌ನಲ್ಲಿ ೫೫ ವರ್ಷದ ಮಹಿಳೆ ಹಾಗೂ ೨೩ ವರ್ಷದ ಯುವತಿಗೆ, ವಿಶ್ವೇಶ್ವರಾಯ ನಗರದಲ್ಲಿ ೨೯ ವರ್ಷದ ಪುರುಷನಿಗೆ, ಎಂಎಂ ಕಾಂಪೌಂಡ್‌ನಲ್ಲಿ ೪೨ ವರ್ಷದ ವ್ಯಕ್ತಿಗೆ ಹಾಗೂ ಕಬಳಿಕಟ್ಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಹಾಗೂ ಹಳೇನಗರದ ಬ್ರಾಹ್ಮಣರ ಬೀದಿಯಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ.   
ಉಳಿದಂತೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಅರಳಿಹಳ್ಳಿ ಗ್ರಾಮದಲ್ಲಿ ೬೬ ವರ್ಷದ ವ್ಯಕ್ತಿಗೆ, ಆನವೇರಿ ಶ್ರೀನಿವಾಸಪುರದಲ್ಲಿ ೩೦ ವರ್ಷದ ಪುರುಷನಿಗೆ, ಆಗರದಹಳ್ಳಿಯಲ್ಲಿ ೨೩, ೨೪ ಮತ್ತು ೪೭ ವರ್ಷದ ೩ ಮಂದಿ ಪುರುಷರಿಗೆ, ಬಂಡಿಗುಡ್ಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಮತ್ತು ದೇವರನರಸೀಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ. 
ಬ್ಯಾಂಕ್ ಸಿಬ್ಬಂದಿಗೆ ಸೋಂಕು : ೨ ದಿನ ಬಂದ್ 
ನಗರದ ಬಿ.ಎಚ್ ರಸ್ತೆ ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಹಿನ್ನಲೆಯಲ್ಲಿ ೨ ದಿನ ಮಂಗಳವಾರ ಮತ್ತು ಬುಧವಾರ ಬ್ಯಾಂಕ್ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದೆ. ಮುನ್ನಚ್ಚರಿಕೆ ಕ್ರಮವಾಗಿ ಬ್ಯಾಂಕ್‌ನಲ್ಲಿ ಸ್ಯಾನಿಟೈಜರ್ ಕೈಗೊಳ್ಳಲಾಗಿದೆ.   
ಸೋಂಕಿತ ತಿರುಗಾಟ : ಸ್ಥಳೀಯರಲ್ಲಿ ಆತಂಕ 
ಹೊಸಮನೆ ವ್ಯಾಪ್ತಿಯ ೪ನೇ ಕ್ರಾಸ್‌ನಲ್ಲಿ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎಲ್ಲಿಬೇಕೆಂದರಲ್ಲಿ ತಿರುಗಾಡುತ್ತಿದ್ದಾನೆಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿಯಿಂದ ಸಮುದಾಯಕ್ಕೆ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 
    ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ನಗರಸಭೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.


ಪತ್ರಕರ್ತರಿಂದ ಸಮಾಜದಲ್ಲಿ ಎಚ್ಚರಿಸುವ ಕಾರ್ಯ ಶ್ಲಾಘನೀಯ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಳೇನಗರದ ಪತ್ರಿಕಾಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಭದ್ರಾವತಿ, ಆ. ೩: ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವವರ ಶ್ರಮ ಅಪಾರವಾಗಿದ್ದು, ಪತ್ರಕರ್ತರು ಸಮಾಜದಲ್ಲಿ ಎಲ್ಲರನ್ನು ಎಚ್ಚರಿಸುವಂತಹ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ಸೋಮವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಳೇನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಪತ್ರಕರ್ತರು ಸಮಾಜದಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳಲು ಸಹಕಾರಿಯಾಗಿದ್ದಾರೆ ಎಂದರು. 
ಪತ್ರಕರ್ತರ ಸಂಘಟನೆಯ ಫಲವಾಗಿ ನಗರದಲ್ಲಿ ಸುಸಜ್ಜಿತವಾದ ಪತ್ರಿಕಾಭವನ ನಿರ್ಮಾಣಗೊಂಡಿದ್ದು, ಇದನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಮೂಲಕ ಸಮಾಜಕ್ಕೆ ಇದರ ಸೇವೆ ಇನ್ನಷ್ಟು ಲಭಿಸುವಂತಾಗುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು. 
ಕರ್ನಾಟಕ ರಾಜ್ಯ ಕಾರ್ಯನಿರತಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಮಾತನಾಡಿ, ಪತ್ರಕರ್ತರ ಕಾರ್ಯ ವೈಖರಿ ಹಾಗೂ ಪತ್ರಕರ್ತರ ಮಹತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆ ವಿವರಿಸುವ ಜೊತೆಗೆ ಪ್ರಸ್ತುತ ಸಂಘಟನೆ ಎದುರಿಸುವ ಸವಾಲುಗಳನ್ನು ಮನವರಿಕೆ ಮಾಡಿದರು. 
ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಮಾತನಾಡಿ,  ಪತ್ರಿಕಾ ಭವನ ನಿರ್ಮಾಣ ಹಾಗೂ ಎದುರಾಗಿರುವ ಸಮಸ್ಯೆಗಳನ್ನು ವಿವರಿಸಿ ಸದಸ್ಯರು ಇನ್ನೂ ಹೆಚ್ಚಿನ ಸಹಕಾರ ನೀಡುವ ಜೊತೆಗೆ ಕಾಮಗಾರಿ ಪೂರ್ಣಗೊಳ್ಳಲು ಶಾಸಕರು ನೆರವಾಗಬೇಕೆಂದು ಮನವಿ ಮಾಡಿದರು. 
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಹಾಗೂ ಎನ್. ರವಿಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಸಿದ್ದರು. 
ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿದರು. ಸಹಕಾರ್ಯದರ್ಶಿ ಫಿಲೋಮಿನಾ ನಿರೂಪಿಸಿದರು. ಖಜಾಂಚಿ ಅನಂತಕುಮಾರ್ ವಂದಿಸಿದರು. 
ಹಿರಿಯ ಪತ್ರಕರ್ತರಾದ ಗಣೇಶ್‌ರಾವ್ ಸಿಂಧ್ಯಾ, ಶಿವಶಂಕರ್, ಟಿ.ಎಸ್ ಆನಂದಕುಮಾರ್, ನಾರಾಯಣ, ರವೀಂದ್ರನಾಥ್(ಬ್ರದರ್), ಸುದರ್ಶನ್, ಶೈಲೇಶ್ ಕೋಠಿ, ಮೋಹನ್‌ಕುಮಾರ್, ವ್ಯವಸ್ಥಾಪಕ ಸುಬ್ರಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, August 2, 2020

ಭಾನುವಾರ ಒಂದು ಸೋಂಕು, ಒಂದು ಸಾವು


ಭದ್ರಾವತಿ, ಆ. ೧: ನಗರಸಭೆ ವ್ಯಾಪ್ತಿಯಲ್ಲಿ ಭಾನುವಾರ ಒಂದೇ ಒಂದು ಕೊರೊನಾ ಸೋಂಕು ಪತ್ತೆಯಾಗಿದ್ದು, ಅಲ್ಲದೆ ಓರ್ವ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. 
ಜಟ್‌ಪಟ್ ನಗರದ ೩೧ ವರ್ಷದ ಯುವಕನಿಗೆ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ನಿಗದಿತ ಕೋವಿಡ್ ೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಸುಮಾರು ಒಂದು ವಾರದಿಂದ ೫ಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. 
ನಗರಸಭೆ ಪೌರಾಯುಕ್ತ ಮನೋಹರ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಸೋಂಕು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ೧೦೦ ಹಾಗು ೨೦೦ ಮೀಟರ್ ವ್ಯಾಪ್ತಿಯನ್ನು ಕಂಟೈನ್ಮೆಂಟ್ ವಲಯವನ್ನಾಗಿಸಿದ್ದು, ಸೀಲ್‌ಡೌನ್‌ಗೊಳಿಸಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. 
ಓರ್ವ ಸಾವು: 
ಕೆಲವು ದಿನಗಳ ಹಿಂದೆ ಸೋಂಕಿಗೆ ಒಳಗಾಗಿದ್ದ ನಗರದ ಬಿ.ಎಚ್ ರಸ್ತೆ ಸ್ವೀಟ್ ಅಂಗಡಿಯೊಂದರ ಸುಮಾರು ೪೩ ವರ್ಷದ ಮಾಲೀಕ ಮೃತಪಟ್ಟಿದ್ದಾರೆ. 

ಆ.೩ರಂದು ಪತ್ರಿಕಾ ದಿನಾಚರಣೆ

ಭದ್ರಾವತಿ, ಆ. ೨: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆ.೩ರಂದು ಪತ್ರಿಕಾ ದಿನಾಚರಣೆ ಹಳೇನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಗಿದೆ. 

ತಾಯಿಯ ಎದೆ ಹಾಲು ಮಗುವಿನ ಬುದ್ದಿಮತ್ತೆ, ಭಾವನಾತ್ಮಕ ದೃಢತೆ ಹೆಚ್ಚಿಸುತ್ತದೆ : ಡಾ. ವೀಣಾ ಭಟ್

ಭದ್ರಾವತಿಯಲ್ಲಿ ಮಹಿಳಾ ಆರೋಗ್ಯ ವೇದಿಕೆ, ನಯನ ಆಸ್ಪತ್ರೆ ಹಾಗು ಐಎಂಎ ತಾಲೂಕು ಶಾಖೆ ಮತ್ತು ಇನ್ನಿತರ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ತರೀಕೆರೆ ರಸ್ತೆಯ ನಯನ ಸಭಾಂಗಣದಲ್ಲಿ "ವಿಶ್ವಸ್ತನ್ಯಪಾನ ಸಪ್ತಾಹ" ಹಮ್ಮಿಕೊಳ್ಳಲಾಗಿತ್ತು. 
ಭದ್ರಾವತಿ, ಆ. ೨: ತಾಯಿಯ ಎದೆ ಹಾಲು ಮಗುವನ್ನು ಶ್ವಾಸಕೋಶ, ಜೀರ್ಣಾಂಗ ಹಾಗು ಚರ್ಮದ ಸೋಂಕು ಸೇರಿದಂತೆ ಹಲವು ಸೋಂಕುಗಳಿಂದ ರಕ್ಷಿಸುವ ಜೊತೆಗೆ ಅಲರ್ಜಿ, ಅಸ್ತಮ ಸಂಭವವನ್ನು ಕಡಿಮೆಮಾಡುತ್ತದೆ. ಮಗುವಿನ ಬುದ್ದಿಮತ್ತೆಯನ್ನು ಹಾಗು ಭಾವನಾತ್ಮಕ ದೃಢತೆಯನ್ನು ಹೆಚ್ಚಿಸುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘ(ಐಎಂಎ) ತಾಲೂಕು ಅಧ್ಯಕ್ಷೆ, ಸ್ತ್ರೀ ರೋಗ ತಜ್ಞೆ ಡಾ. ವೀಣಾ ಭಟ್ ತಿಳಿಸಿದರು. 
  ಅವರು ಮಹಿಳಾ ಆರೋಗ್ಯ ವೇದಿಕೆ, ನಯನ ಆಸ್ಪತ್ರೆ ಹಾಗು ಐಎಂಎ ತಾಲೂಕು ಶಾಖೆ ಮತ್ತು ಇನ್ನಿತರ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ತರೀಕೆರೆ ರಸ್ತೆಯ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ "ವಿಶ್ವಸ್ತನ್ಯಪಾನ ಸಪ್ತಾಹ" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
ತಾಯಿಗೆ ಸ್ತನ್ಯಪಾನ ನಿಸರ್ಗದ ವರದಾನವಾಗಿದ್ದು, ಎದೆ ಹಾಲು ಮಗುವಿಗೆ ಅತ್ಯಂತ ರುಚಿಕರವಾದ, ಪರಿಶುದ್ಧವಾದ, ಯಾವುದೇ ಖರ್ಚಿಲ್ಲದ, ಸದಾ ಸಿದ್ಧವಾದ, ಯಾವ ಸಾಂದ್ರತೆಗೆ ಬೇಕೋ ಅದೇ ಸಾಂದ್ರತೆಯಲ್ಲಿರುವ ಲಭ್ಯವಿರುವ ಅತ್ಯುತ್ಕೃಷ್ಟವಾದ ಆಹಾರವಾಗಿದೆ ಎಂದರು. 
ಸ್ತನ್ಯಪಾನ ಮಕ್ಕಳಲ್ಲಿ ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಮಧುಮೇಹ, ಕ್ಯಾನ್ಸರ್, ಬೊಜ್ಜು ಇತ್ಯಾದಿಗಳಿಂದ ಮಗುವನ್ನು ರಕ್ಷಿಸುತ್ತದೆ. ಅಲ್ಲದೆ ತಾಯಂದಿರಲ್ಲೂ ರಕ್ತಸ್ರಾವ ಕಡಿಮೆಮಾಡಿ, ರಕ್ತಹೀನತೆ ತಡೆಗಟ್ಟಿ, ಮೂಳೆಗಳನ್ನು ಗಟ್ಟಿಯಾಗಿಸಿ, ಅನವಶ್ಯಕ ಬೊಜ್ಜನ್ನು ಕರಗಿಸುತ್ತದೆ. ಸ್ತನ, ಅಂಡಾಶಯ, ಗರ್ಭಕೋಶದ ಕ್ಯಾನ್ಸರ್‌ಗಳ ಸಂಭವ ಕಡಿಮೆ ಮಾಡುತ್ತದೆ. ತಾಯಿ ಮಗುವಿನ ಬಾಂಧವ್ಯವನ್ನು ಹೆಚ್ಚಿಸುತ್ತದೆ ಎಂದರು. 
ತಾಯಂದಿರು ಗರ್ಭಧಾರಣೆಯ ಅವಧಿಯಲ್ಲಿ ಸ್ತನ್ಯಪಾನ ಮಾಡಿಸಲು ದೈಹಿಕ ಹಾಗೂ ಮಾನಸಿಕವಾಗಿ ಸಿದ್ಧರಾಗಬೇಕು. ಆರಂಭದ ೧೦೦೦ ದಿನಗಳ ಹೂಡಿಕೆ ಮಗುವಿನ ಇಡೀ ಭವಿಷ್ಯವನ್ನೇ ನಿರ್ಣಯಿಸುತ್ತದೆ. ಆದರೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂದಿಗೂ ತಾಯಂದಿರು ಮಗುವಿಗೆ ನಿರಂತರ ಸ್ತನ್ಯಪಾನ ಮಾಡಿಸಲು ಹಲವಾರು ಅಡ್ಡಿಆತಂಕಗಳಿವೆ. ಈ ಬಗ್ಗೆ  ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಸ್ತನ್ಯಪಾನ ಒಕ್ಕೂಟ, ಯುನಿಸೆಫ್ ಸೇರಿದಂತೆ ಎಲ್ಲಾ ಜಾಗತಿಕ ಸಂಸ್ಥೆಗಳು ೧೯೯೨ ರಿಂದ ಆ. ೧ ರಿಂದ ೭ರವರೆಗೆ ಪ್ರತಿವರ್ಷ ವಿಶ್ವಸ್ತನ್ಯಪಾನ ಸಪ್ತಾಹ ಆಚರಿಸಿಕೊಂಡು ಬರುತ್ತಿವೆ ಎಂದರು. 
ಮಹಿಳಾ ಆರೋಗ್ಯ ವೇದಿಕೆ ಕಾರ್ಯದರ್ಶಿ ಡಾ. ಆಶಾಧರ್ಮಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ವಿನುತ ಸತೀಶ್ ವಂದಿಸಿದರು. ಕಾರ್ಯಕ್ರಮದಲ್ಲಿ ಎದೆಹಾಲಿನ ಮಹತ್ವ ಸಾರುವ ಕರಪತ್ರಗಳನ್ನು ತಾಯಂದಿರಿಗೆ ವಿತರಿಸಲಾಯಿತು. 

೬ರಂದು ಸರ್.ಎಂ.ವಿ ಪ್ರತಿಮೆ ಲೋಕಾರ್ಪಣೆ

ಭದ್ರಾವತಿ, ಆ. ೨: ನಗರದ ರೈಲ್ವೆ ನಿಲ್ದಾಣದ ಬಳಿ ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ನಿಲ್ದಾಣದ ದ್ವಾರಬಾಗಿಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ನಗರದ ಅನ್ನದಾತ, ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯನವರ ಪ್ರತಿಮೆ ಆ.೬ರಂದು ಬೆಳಿಗ್ಗೆ ೧೦ ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. 
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್ ಕೋರಿದ್ದಾರೆ.
ಅನ್ನಸಂತರ್ಪಣೆ: 
ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಸ್ನೇಹ ಜೀವಿ ಬಳಗದ ಸ್ನೇಹ ಜೀವಿ ಉಮೇಶ್ ಪೊಲೀಸ್ ಅವರಿಂದ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. 

Saturday, August 1, 2020

ಕೊರೋನಾ ಸೋಂಕು : ಒಂದೇ ದಿನ ೩೦ ಪ್ರಕರಣ ಪತ್ತೆ

ಭದ್ರಾವತಿ, ಆ. ೧: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಸ್ಪೋಟಗೊಳ್ಳುತ್ತಿದ್ದು, ಶನಿವಾರ ಮತ್ತಷ್ಟು ಸ್ಪೋಟಗೊಂಡಿದೆ. ಒಂದೇ ದಿನ ೩೦ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. 
ಶುಕ್ರವಾರ ೧೮ ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ೩೦ಕ್ಕೆ ಏರಿಕೆಯಾಗಿದ್ದು, ಇದುವರೆಗೂ ಇಷ್ಟೊಂದು ಪ್ರಕರಣ ಪತ್ತೆಯಾಗಿರಲಿಲ್ಲ. ಈ ನಡುವೆ ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈಗಾಗಲೇ ಬಹುತೇಕ ಪ್ರದೇಶಗಳು ಸೀಲ್‌ಡೌನ್ ಆಗಿವೆ. ಇದರಿಂದಾಗಿ ನಿವಾಸಿಗಳು ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದೆ. 
ಅಲ್ಲದೆ ಗ್ರಾಮೀಣ ಭಾಗದಲ್ಲೂ ಸೋಂಕು ಹೆಚ್ಚಾಗುತ್ತಿದ್ದು, ಗ್ರಾಮಸ್ಥರು ಸಹ ಆತಂಕಕ್ಕೆ ಒಳಗಾಗಿದ್ದಾರೆ. ತಾಲೂಕು ಆಡಳಿತ, ನಗರಸಭೆ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸೋಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ. ಆದರೂ ಸಹ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.