Friday, August 7, 2020

ಭದ್ರಾವತಿಯಲ್ಲಿ ೧೨ ಸೋಂಕು ಪತ್ತೆ : ಕೊರೋನಾ ತಪಾಸಣೆ ನಡೆಸುವಲ್ಲಿ ನಿರ್ಲಕ್ಷ್ಯತನ

ಸಿಂಗನಮನೆ ಗ್ರಾ.ಪಂ. ಸದಸ್ಯ ಡಿ.ಟಿ ಶಶಿಕುಮಾರ್ ಆರೋಪ 

ಭದ್ರಾವತಿ ಸಿಂಗನಮನೆ ಗ್ರಾಮ ಪಂಚಾಯಿತಿ ಸದಸ್ಯ ಡಿ.ಟಿ ಶಶಿಕುಮಾರ್ 

ಭದ್ರಾವತಿ, ಆ. ೭: ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರತಿ ದಿನ ಏರಿಕೆಯಾಗುತ್ತಿದ್ದು, ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶುಕ್ರವಾರ ತಾಲೂಕಿನಾದ್ಯಂತ ಒಟ್ಟು ೧೨ ಪ್ರಕರಣಗಳು ಪತ್ತೆಯಾಗಿವೆ. 

ಗಾಂಧಿನಗರದಲ್ಲಿ ೫೧ ವರ್ಷದ ಮಹಿಳೆ, ಎರೆಹಳ್ಳಿಯಲ್ಲಿ ೫೮ ವರ್ಷದ ವ್ಯಕ್ತಿ, ಹೊಳೆಹೊನ್ನೂರಿನಲ್ಲಿ ೪೦ ವರ್ಷದ ಪುರುಷ, ಮೂಡಲವಿಠಲಪುರದಲ್ಲಿ ೨೦ ವರ್ಷದ ಯುವಕ, ಅರಕೆರೆಯಲ್ಲಿ ೫೬ ವರ್ಷದ ವ್ಯಕ್ತಿ, ಜೇಡಿಕಟ್ಟೆಯಲ್ಲಿ ೪೫ ವರ್ಷದ ವ್ಯಕ್ತಿ, ಬಿ.ಎಚ್ ರಸ್ತೆಯಲ್ಲಿ ೨೫ ವರ್ಷದ ಪುರುಷ, ಇಂದ್ರನಗರದಲ್ಲಿ ೨೩ ವರ್ಷದ ಮಹಿಳೆ ಹಾಗು ಬಸಲಿಕಟ್ಟೆಯಲ್ಲಿ ೫೨ ವರ್ಷದ ವ್ಯಕ್ತಿ ಸೇರಿದಂತೆ ಒಟ್ಟು ೧೨ ಮಂದಿ ಸೋಂಕಿಗೆ ಒಳಗಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್ ೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಗರಸಭೆ ಪೌರಾಯುಕ್ತ ಮನೋಹರ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್‌ರಾಜ್ ನೇತೃತ್ವದ ತಂಡ ಸೋಂಕು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ೧೦೦ ಹಾಗು ೨೦೦ ಮೀಟರ್ ವ್ಯಾಪ್ತಿಯನ್ನು ಕಂಟೈನ್ಮೆಂಟ್ ವಲಯವನ್ನಾಗಿಸಿದ್ದು, ಸೀಲ್‌ಡೌನ್‌ಗೊಳಿಸಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. 

ಕೊರೋನಾ ಸೋಂಕು ತಪಾಸಣೆ ನಿರ್ಲಕ್ಷ್ಯತನ: 

ತಾಲೂಕಿನಲ್ಲಿ ಕೊರೋನಾ ಸೋಂಕು ತಪಾಸಣೆ ನಡೆಸುವಲ್ಲಿ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯತನ ವಹಿಸಿದ್ದು, ಇದರಿಂದಾಗಿ ಸೋಂಕು ಗ್ರಾಮೀಣ ಭಾಗದಲ್ಲೂ ವ್ಯಾಪಕವಾಗಿ ಹರಡುತ್ತಿದೆ ಎಂದು ಸಿಂಗನಮನೆ ಗ್ರಾಮ ಪಂಚಾಯಿತಿ ಸದಸ್ಯ ಡಿ.ಟಿ ಶಶಿಕುಮಾರ್ ಆರೋಪಿಸಿದ್ದಾರೆ. 

ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವ್ಯಕ್ತಿಯೊಬ್ಬರು ಕೆಲವು ದಿನಗಳ ಹಿಂದೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕು ತಪಾಸಣೆಗೆ ತೆರಳಿದ್ದು, ಆದರೆ ಆಸ್ಪತ್ರೆಯಲ್ಲಿ ತಪಾಸಣೆ ನಡೆಸದೆ ನಿರ್ಲಕ್ಷ್ಯತನದಿಂದ ನಡೆದುಕೊಂಡು ವಾಪಾಸು ಕಳುಹಿಸಿದ್ದಾರೆ. ಈ ವ್ಯಕ್ತಿ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕು ತಪಾಸಣೆ ಮಾಡಿಸಿದ್ದು, ೩ ದಿನಗಳ ನಂತರ ಸೋಂಕು ದೃಢಪಟ್ಟಿರುವ ವರದಿ ಬಂದಿದೆ. ಇದರಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 

ಆಸ್ಪತ್ರೆಗೆ ತಪಾಸಣೆಗೆ ಬಂದರೂ ಸಹ ತಪಾಸಣೆ ನಡೆಸದೆ ಕಳುಹಿಸಿರುವ ಕ್ರಮ ಖಂಡನೀಯ.  ತಾಲೂಕು ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎಲ್ಲಾ ಗ್ರಾಮಪಂಚಾಯಿತಿಗಳು ಎಚ್ಚೆತ್ತುಕೊಂಡು ಮುನ್ನಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸೋಂಕು ನಿವಾರಣೆ ಔಷಧ ಸಿಂಪಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿ ರುದ್ರಾಭಿಷೇಕ

ಭದ್ರಾವತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಗ್ರಾಮದೇವತೆ ಶ್ರೀ ಹಳದಮ್ಮ ದೇವಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. 

ಭದ್ರಾವತಿ, ಆ. ೭: ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಶುಕ್ರವಾರ ಹಳೇನಗರದ ಗ್ರಾಮದೇವತೆ ಶ್ರೀ ಹಳದಮ್ಮ ದೇವಿಗೆ ತಾಲೂಕು ಕನಕ ಯುವ ಪಡೆ ವತಿಯಿಂದ ರುದ್ರಾಭಿಷೇಕ ನೆರವೇರಿಸಲಾಯಿತು. 

ಕನಕ ಯುವಪಡೆ ಅಧ್ಯಕ್ಷ ಜೆ. ಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಯುವ  ಕಾಂಗ್ರೆಸ್ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಲೋಕೇಶ್, ನವೀನ್, ರಾಜೇಶ್, ಕೇಶವ, ಗೋಪಾಲಕೃಷ್ಣ, ಮಧು, ಶರತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಗ್ರಾ.ಪಂ. ಡಿಇಓ ಮೃತ ಕುಟುಂಬಕ್ಕೆ ಸಹಾಯಾಸ್ತ : ೧.೫೦ ಲಕ್ಷ ರು. ಬಾಂಡ್ ವಿತರಣೆ

ಭದ್ರಾವತಿ ತಾಲೂಕಿನ ಅನವೇರಿ ಗ್ರಾಮ ಪಂಚಾಯಿತಿ ಡಿಇಓ ಪ್ರದೀಪ್‌ರವರು ನಿಧನ ಹೊಂದಿದ್ದು, ಸಂಕಷ್ಟದಲ್ಲಿರುವ ಮೃತರ ಕುಟುಂಬಕ್ಕೆ  ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಾಯಾಸ್ತ ನೀಡುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. 

ಭದ್ರಾವತಿ, ಆ. ೭: ಅನವೇರಿ ಗ್ರಾಮ ಪಂಚಾಯಿತಿ ಡಿಇಓ ಪ್ರದೀಪ್‌ರವರು ನಿಧನ ಹೊಂದಿದ್ದು, ಸಂಕಷ್ಟದಲ್ಲಿರುವ ಮೃತರ ಕುಟುಂಬಕ್ಕೆ  ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಾಯಾಸ್ತ ನೀಡುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. 

   ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮೃತರ ಪುತ್ರಿ ಮತ್ತು ಪತ್ನಿ ಹೆಸರಿನಲ್ಲಿ ಜಂಟಿಯಾಗಿ ೧,೫೦,೦೦೦ ರು. ಮೌಲ್ಯದ ಸಹಾಯಾಸ್ತದ  ಬಾಂಡ್ ವಿತರಣೆ ಮಾಡಲಾಯಿತು. 

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿ.ಎ.ಓ ಪುರಾಣಿಕ್, ಸಹಾಯಕ ನಿರ್ದೇಶಕ ಸಂತೋಷ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕಿನ ವಿವಿಧೆಡೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ನೇತೃತ್ವ ತಂಡ ಪರಿಶೀಲನೆ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಳಿ ಇರುವ ಹೊಸ ಸೇತುವೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ನೇತೃತ್ವ ತಂಡ ಪರಿಶೀಲನೆ ನಡೆಸಿತು. 

ಭದ್ರಾವತಿ, ಆ. ೭: ತಾಲೂಕಿನ ವಿವಿಧೆಡೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಮಣಿವಣ್ಣನ್ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. 

ಮಳೆಗಾಲದಲ್ಲಿ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ನಗರದ ಹೃದಯ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಳಿ ಇರುವ ಹೊಸ ಸೇತುವೆ ಸಂಪೂರ್ಣವಾಗಿ ಮುಳುಗಡೆಗೊಳ್ಳುತ್ತಿದ್ದು, ಅಲ್ಲದೆ ಪ್ರತಿ ಬಾರಿ ಸೇತುವೆ ಹಾನಿಗೊಳಗಾಗುತ್ತಿದೆ. ಈ ಹಿನ್ನಲೆಯಲ್ಲಿ ಮಣಿವಣ್ಣನ್ ತಂಡ ಸೇತುವೆ ಪರಿಶೀಲನೆ ನಡೆಸಿತು. 

ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಹಾಗೂ ಪೌರಾಯುಕ್ತ ಮನೋಹರ್ ಸೇತುವೆಯಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ವಿವರಿಸಿದರು. 

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ಭದ್ರಾವತಿ ತಾಲೂಕಿನ ಬಿಆರ್‌ಪಿಯಲ್ಲಿರುವ ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ, ಕಂದಾಯಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾ ಜಲಾಶಯಕ್ಕೆ ಜಿಲ್ಲಾಧಿಕಾರಿ ತಂಡ ಭೇಟಿ: 

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ತಾಲೂಕಿನ ಬಿಆರ್‌ಪಿಯಲ್ಲಿರುವ ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಲಾಶಯದ ಅಧಿಕಾರಿಗಳು ಪ್ರಸ್ತುತ ಜಲಾಶಯದಲ್ಲಿ ಭರ್ತಿಯಾಗಿರುವ ನೀರಿನ ಪ್ರಮಾಣ, ಒಳ ಹಾಗೂ ಹೊರ ಹರಿವು ಮತ್ತು ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳ ಮಾಹಿತಿಗಳನ್ನು ನೀಡಿದರು. 

ತಾಲೂಕಿನಾದ್ಯಂತ ಮಳೆ : ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಲು ಶಾಸಕ ಸಂಗಮೇಶ್ವರ್ ಸೂಚನೆ

 

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 

ಭದ್ರಾವತಿ, ಆ. ೭: ತಾಲೂಕಿನಾದ್ಯಂತ ಮಳೆ ಹೆಚ್ಚಾಗಿದ್ದು, ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. 

ಅವರು ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆಗಳಿಗೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗು ನಗರಸಭೆ ಆಡಳಿತ ತಕ್ಷಣ ಸ್ಪಂದಿಸಬೇಕೆಂದರು. 

ಪ್ರವಾಹ, ರಸ್ತೆಗಳಿಗೆ ಮರಗಳು ಬಿದ್ದು ಸಂಚಾರಕ್ಕೆ ತೊಂದರೆ ಕಂಡು ಬಂದಲ್ಲಿ, ವಿದ್ಯುತ್ ಅಡಚಣೆ ಉಂಟಾದಲ್ಲಿ ಮೆಸ್ಕಾಂ, ಅರಣ್ಯ ಹಾಗು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ತಕ್ಷಣ ಸ್ಪಂದಿಸಬೇಕು. ಅಗ್ನಿಶಾಮಕ ಇಲಾಖೆ ಸಹ ದಿನದ ೨೪ ಗಂಟೆ ಸೇವೆಗೆ ಲಭ್ಯವಿರಬೇಕು. ಒಟ್ಟಾರೆ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಎಚ್ಚರವಹಿಸಬೇಕೆಂದರು. 

೧೦೦ ಹಾಸಿಗೆಯುಳ್ಳ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-೧೯ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳುತ್ತಿಲ್ಲ.  ಆಸ್ಪತ್ರೆಗೆ ಬರುವ ಇತರೆ ರೋಗಿಗಳಿಗೆ ಸರಿಯಾಗಿ ತಪಾಸಣೆ ನಡೆಸುತ್ತಿಲ್ಲ. ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುತ್ತಿಲ್ಲ. ಇತ್ಯಾದಿ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ ಎಂದು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ವಿರುದ್ಧ ಶಾಸಕರು ಅಸಮಧಾನ ವ್ಯಕ್ತಪಡಿಸಿದರು. 

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಾಲೂಕು ಪಂಚಾಯಿತಿ ಆಡಳಿತ ನೋಡಿಕೊಳ್ಳಬೇಕು. ರೈತರಿಗೆ ಮಳೆಯಿಂದ ಎದುರಾಗುವ ಸಮಸ್ಯೆಗಳಿಗೆ ಕೃಷಿ ಇಲಾಖೆ ಪೂರಕವಾಗಿ ಸ್ಪಂದಿಸಬೇಕೆಂದರು. 

ಪೌರಾಯುಕ್ತ ಮನೋಹರ್ ಮಾತನಾಡಿ, ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ಸ್ವಲ್ಪ ಸಮಸ್ಯೆಯಾಗಲಿದೆ. ಉಳಿದಂತೆ ಸಂಭವಿಸಬಹುದಾದ ಘಟನೆಗಳಿಗೆ ಸ್ಪಂದಿಸಲು ಈಗಾಗಲೇ ಅಧಿಕಾರಿಗಳ ತಂಡ ರಚಿಸಲಾಗಿದೆ. ಅಲ್ಲದೆ ಸಾರ್ವಜನಿಕರ ಕುಂದುಕೊರತೆಗಳಿಗೆ ಸಹಾಯವಾಣಿ ಸಹ ನೀಡಲಾಗಿದೆ ಎಂದರು. 

ಕೃಷಿ ಅಧಿಕಾರಿ ಶಶಿಧರ್ ಮಾತನಾಡಿ, ಪ್ರಸ್ತುತ ತಾಲೂಕಿನಲ್ಲಿ ಭತ್ತ ನಾಟಿ ಕಾರ್ಯ ಪೂರ್ಣಗೊಂಡಿದೆ. ಕಳೆದ ೨-೩ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದರು. 

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಮಂಜುನಾಥ್, ಪೊಲೀಸ್ ಉಪಾಧೀಕ್ಷಕ ಸುಧಾಕರನಾಯ್ಕ ಮತ್ತು ವಲಯ ಅರಣ್ಯಾಧಿಕಾರಿ ಮಂಜುನಾಥ್ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.  ಉಪ ವಲಯ ಅರಣ್ಯಾಧಿಕಾರಿ ದಿನೇಶ್‌ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

Thursday, August 6, 2020

ಕವನ ಸ್ಪರ್ಧೆಯಲ್ಲಿ ಎಚ್.ಆರ್ ಶ್ರೀಧರೇಶ್ ಭಾರದ್ವಾಜ್‌ಗೆ ಪ್ರಥಮ ಸ್ಥಾನ

ಭದ್ರಾವತಿ, ಆ. ೬: ಚಿತ್ರದುರ್ಗ ಹಿರಿಯೂರು ತಾಲೂಕಿನ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಕೇಂದ್ರ ಘಟಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಅಂತರ್ಜಾಲ ಕವನ ಸ್ಪರ್ಧೆಯಲ್ಲಿ ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಧ್ಯಾಪಕ ಎಚ್.ಆರ್. ಶ್ರೀಧರೇಶ್ ಭಾರದ್ವಾಜ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 
ಶ್ರಾವಣ ಮಾಸದ ತುಂತುರು ಹನಿಗಳ ಸಂಗಮ ಎಂಬ ವಿಷಯದಡಿ ಪುರುಷರ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವನ ಸ್ಪರ್ಧೆಯಲ್ಲಿ ಭಾರದ್ವಾಜ್‌ರವರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 
ಉಳಿದಂತೆ ಶ್ರಾವಣ ಸಿರಿ ಎಂಬ ವಿಷಯದಡಿ ಮಹಿಳಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವನ ಸ್ಪರ್ಧೆಯಲ್ಲಿ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಎಚ್.ಆರ್ ಸುಧಾ ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ. 

ಶಿಲಾನ್ಯಾಸದಂದು ರಾಮ ಮಂದಿರ ಭಕ್ತರ ಆರಾಧನೆಗೆ ಮುಕ್ತ

ಕಬಳಿಕೆ ಯತ್ನ ತಪ್ಪಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ 

ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಹುಣಸೇಕಟ್ಟೆ ಗ್ರಾಮದ ಬಿ.ಕೆ ಸಂಗಮೇಶ್ವರ್ ಬಡಾವಣೆಯ ಸರ್ವೆ ನಂ.೮ ಮತ್ತು ೧೪ರಲ್ಲಿ ಪಾಳುಬಿದ್ದಿದ್ದ ಶ್ರೀ ರಾಮ ಮಂದಿರಕ್ಕೆ ಸುಣ್ಣಬಣ್ಣ ಬಳಿದು ಬಾಳೆದಿಂಡು, ಮಾವಿನ ಎಲೆ ಹಸಿರು ತೋರಣಗಳಿಂದ ಶೃಂಗಾರಗೊಳಿಸುತ್ತಿರುವುದು. 
ಭದ್ರಾವತಿ: ಸುಮಾರು ೭ ದಶಕಗಳ ಇತಿಹಾಸವಿದ್ದು, ಪಾಳುಬಿದ್ದಿದ್ದ ಶ್ರೀ ರಾಮಮಂದಿರವೊಂದು ಆಯೋಧ್ಯೆ ರಾಮಮಂದಿರ ಶಿಲಾನ್ಯಾಸದಂದು ಪುನಃ ಭಕ್ತರ ಆರಾಧನೆಗೆ ಮುಕ್ತಗೊಂಡಿರುವ ಘಟನೆ ನಡೆದಿದೆ.  
ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಹುಣಸೇಕಟ್ಟೆ ಗ್ರಾಮದ ಬಿ.ಕೆ ಸಂಗಮೇಶ್ವರ್ ಬಡಾವಣೆಯ ಸರ್ವೆ ನಂ.೮ ಮತ್ತು ೧೪ರಲ್ಲಿ ಶ್ರೀ ರಾಮ ಮಂದಿರವಿದ್ದು, ಹಲವಾರು ವರ್ಷಗಳಿಂದ ಈ ಮಂದಿರ ಪಾಳು ಬಿದ್ದಿತ್ತು. ಈ ನಡುವೆ ಮಂದಿರದ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಳ್ಳಲು ಯತ್ನಿಸುತ್ತಿದ್ದರು. ಈ ವಿಚಾರವನ್ನು ಸ್ಥಳೀಯ ಮುಖಂಡರು, ಗ್ರಾಮಸ್ಥರು ಶಾಸಕ ಬಿ.ಕೆ ಸಂಗಮೇಶ್ವರ್ ಗಮನಕ್ಕೆ ತಂದಿದ್ದರು. 
ಶಾಸಕರು ಒತ್ತುವರಿ ಯತ್ನವನ್ನು ತಡೆದು ಜಾಗವನ್ನು ರಾಮಮಂದಿರದ ಅಧೀನದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ರಾಮಮಂದಿರಕ್ಕೆ ಸುಣ್ಣಬಣ್ಣ ಬಳಿದು ಆಯೋಧ್ಯೆ ಶ್ರೀ ರಾಮ ಮಂದಿರ ಶಿಲಾನ್ಯಾಸದಂದು ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ಭಕ್ತರ ಆರಾಧನೆಗೆ ಮುಕ್ತಗೊಳಿಸಲಾಯಿತು. 
ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಹುಣಸೇಕಟ್ಟೆ ಗ್ರಾಮದ ಬಿ.ಕೆ ಸಂಗಮೇಶ್ವರ್ ಬಡಾವಣೆಯ ಸರ್ವೆ ನಂ.೮ ಮತ್ತು ೧೪ರಲ್ಲಿ ಪಾಳುಬಿದ್ದಿದ್ದ ಶ್ರೀ ರಾಮ ಮಂದಿರದಲ್ಲಿ ಆಯೋಧ್ಯೆ ರಾಮಮಂದಿರ ಶಿಲಾನ್ಯಾಸದಂದು ವಿಶೇಷ ಪೂಜೆ ಸಲ್ಲಿಸಿ ಭಕ್ತರ ಆರಾಧನೆಗೆ ಮುಕ್ತಗೊಳಿಸಲಾಯಿತು. 
ಅಲ್ಲದೆ ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು. 
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ನಂಬಿಯಾರ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಸೇರಿದಂತೆ ಇನ್ನಿತರ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.