Thursday, August 13, 2020

ಬಿಜೆಪಿ ಯುವ ಮೋರ್ಚಾ ನೂತನ ಪದಾಧಿಕಾರಿಗಳು


ಭದ್ರಾವತಿ, ಆ. ೧೩: ತಾಲೂಕು ಬಿಜೆಪಿ ಮಂಡಲ ಯುವ ಮೋರ್ಚಾ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
    ಅಧ್ಯಕ್ಷರಾಗಿ ಎಂ. ವಿಜಯ್‌ರಾಜ್, ಉಪಾಧ್ಯಕ್ಷರಾಗಿ ಎಸ್. ಕಿರಣ್‌ಕುಮಾರ್, ಯೋಗೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಕುಲ್ ರೇವಣಕರ್, ಕಾರ್ಯದರ್ಶಿಯಾಗಿ ದೇವರಾಜ್ ಅರಳಿಹಳ್ಳಿ, ಸಚಿನ್ ರೇಣಕರ್, ಖಜಾಂಚಿಯಾಗಿ ವಿಜಯ್ ಮತ್ತು ಸದಸ್ಯರಾಗಿ ಹೇಮಂತ್, ಲಕ್ಷ್ಮಣ್, ಗೋಪಿನಾಥ್, ಜೆ. ಕೃಷ್ಣ, ಆರ್. ಅನಂತು, ಆಕಾಶ್ ಜಿ. ಜಾಧವ್, ಕೆ. ಪುನೀತ್, ಆದರ್ಶ್ ಮತ್ತು ಹೃಷಿಕೇಶ್ ಅವರನ್ನು ನೇಮಕ ಮಾಡಲಾಗಿದೆ.


ಗಲಭೆ ಪೂರ್ವ ನಿಯೋಜಿತ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಆ. ೧೧ರಂದು ನಡೆದಿರುವ ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಭದ್ರಾವತಿಯಲ್ಲಿ ಬಜರಂಗದಳ ವತಿಯಿಂದ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
       ಭದ್ರಾವತಿ, ಆ. ೧೩: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಆ. ೧೧ರಂದು ನಡೆದಿರುವ ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಬಜರಂಗದಳ ವತಿಯಿಂದ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
     ಏಕಾಏಕಿ ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಚ್ಚಿ ಕಂಡ ಕಂಡ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸುವ ಜೊತೆಗೆ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವುದು ಖಂಡನೀಯವಾಗಿದೆ. ಇದೊಂದು ಪೂರ್ವ ನಿಯೋಜಿತ ಗಲಭೆಯಾಗಿದ್ದು, ಸಾರ್ವಜನಿಕರಲ್ಲಿ ಭಯಭೀತಿ ಉಂಟುಮಾಡಿರುವ ಗಲಭೆಕೋರರನ್ನು ತಕ್ಷಣ ಬಂಧಿಸಬೇಕು. ಅಲ್ಲದೆ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಸ್‌ಡಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಲಾಯಿತು.
     ತಾಲೂಕು ಸಂಯೋಜಕ ವಡಿವೇಲು ನೇತೃತ್ವ ವಹಿಸಿದ್ದರು. ನಗರ ಸಹ ಸಂಯೋಜಕ ಎಂ. ರಮೇಶ್, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್, ಎಂಪಿಎಂ ಸೇರಿದಂತೆ ವಿವಿದೆಡೆ ಸ್ವಾತಂತ್ರ್ಯ ದಿನಾಚರಣೆ

ಟಿ.ಜಿ ಬಸವರಾಜಯ್ಯ

ಹಿರಿಯ ಕಾರ್ಮಿಕ ಟಿ.ಜಿ ಬಸವರಾಜಯ್ಯನವರಿಗೆ ಆಹ್ವಾನ

ಭದ್ರಾವತಿ, ಆ. ೧೩: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ವತಿಯಿಂದ ಈ ಬಾರಿ ಕಾರ್ಖಾನೆಯ ಮುಖ್ಯ ದ್ವಾರದಲ್ಲಿ ಹಮ್ಮಿಕೊಳ್ಳಲಾಗಿರುವ ೭೪ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಿರಿಯ ಕಾರ್ಮಿಕ ಟಿ.ಜಿ ಬಸವರಾಜಯ್ಯ ಅವರಿಗೆ ಧ್ವಜಾರೋಹಣ ನೆರವೇರಿಸಲು ಆಹ್ವಾನಿಸಲಾಗಿದೆ.
        ಪ್ರಸ್ತುತ ಕಾರ್ಖಾನೆಯಲ್ಲಿ ನಿವೃತ್ತಿ ಪಡೆಯದೆ ಉಳಿದು ಕೊಂಡಿರುವ ಖಾಯಂ ಕಾರ್ಮಿಕರ ಪೈಕಿ ಬಸವರಾಜಯ್ಯ ಹಿರಿಯರಾಗಿದ್ದು, ಪ್ರಸ್ತುತ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ ಸರಳವಾಗಿ ೯ ಗಂಟೆಗೆ ನಡೆಯಲಿದ್ದು, ಧ್ವಜಾರೋಹಣ ನೆರವೇರಿಸಲು ಆಹ್ವಾನಿಸಿರುವುದಕ್ಕೆ ಎಂಪಿಎಂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
       ವಿಐಎಸ್‌ಎಲ್ ವತಿಯಿಂದ ಸ್ವಾತಂತ್ರ್ಯೋತ್ಸವ :
   ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆ.೧೫ರಂದು ಬೆಳಿಗ್ಗೆ ೮.೩೦ಕ್ಕೆ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆಎಲ್‌ಎಸ್ ರಾವ್ ಧ್ವಜಾರೋಹಣ ನೆರವೇರಿಸಲಿದ್ದು, ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುದಿಲ್ಲ. ಸರಳವಾಗಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕ ಸಂಪರ್ಕ ಇಲಾಖೆ ಮುಖ್ಯ ವ್ಯವಸ್ಥಾಪಕ ಎಲ್ ಪ್ರವೀಣ್‌ಕುಮಾರ್ ಕೋರಿದ್ದಾರೆ.
      ತಾಲೂಕು ಆಡಳಿತದಿಂದ ೭೪ನೇ ಸ್ವಾತಂತ್ರ್ಯೋತ್ಸವ :
ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಧ್ವಜಾರೋಹಣ ನೆರವೇರಿಸುವರು.
     ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಉಪಾಧ್ಯಕ್ಷೆ ನೇತ್ರಾಬಾಯಿ, ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಎಸ್. ರಮೇಶ್, ಜಿ.ಪಂ. ಸದಸ್ಯರಾದ ಜೆ.ಪಿ. ಯೋಗೇಶ್, ಎಸ್. ಮಣಿಶೇಖರ್, ಡಿ.ಆರ್ ರೇಖಾಉಮೇಶ್, ವೀರಭದ್ರಪ್ಪ ಪೂಜಾರಿ, ಎಪಿಎಂಸಿ ಅಧ್ಯಕ್ಷ ಐ.ಈ ಲವೇಶ್‌ಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕ, ಉಪ ಅರಣ್ಯ ಸಂರಕ್ಷನಾಧಿಕಾರಿ ಕೆ.ಎಂ. ಗಮನಗಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವಿರುದ್ಧ ತಾ.ಪಂ. ಸದಸ್ಯರ ಆಕ್ರೋಶ

ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಗುರುವಾರ ನಡೆಯಿತು. 

ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸದೆ ಚಿಕಿತ್ಸೆ ನೀಡಿ

ಭದ್ರಾವತಿ, ಆ. ೧೩: ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವಿರುದ್ಧ ತಾಲೂಕು ಪಂಚಾಯಿತಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು. 
ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಮಾತನಾಡಿದ ಹಿರಿಯ ಸದಸ್ಯ ಧರ್ಮೇಗೌಡ ೧೦೦ ಹಾಸಿಗೆಯುಳ್ಳ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಆದರೂ ಸಹ ಬಡವರಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ. ಸೂಕ್ತ ವೈದ್ಯರಿಲ್ಲ, ಮತ್ತೊಂದಿಲ್ಲ ಎಂಬ ಕಾರಣ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದರು. 
ಸದಸ್ಯ ಮಂಜುನಾಥ್ ಮಾತನಾಡಿ, ಆಸ್ಪತ್ರೆಗೆ ಕೋಟ್ಯಾಂತರ ರು. ವೆಚ್ಚದಲ್ಲಿ ಸೌಲಭ್ಯಗಳನ್ನು ಕಲ್ಪಿಸಿರುವುದು ವ್ಯರ್ಥವಾಗಿದೆ. ಆಸ್ಪತ್ರೆಗೆ ಬರುವ ಬಡವರ ಗೋಳು ಕೇಳದಂತಾಗಿದೆ. ವಿನಾಕಾರಣ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಗೆ ಹೋಗುವ ಬದಲು ನಗರದಲ್ಲಿಯೇ ಯಾವುದಾದರೂ ಖಾಸಗಿ ಆಸ್ಪತ್ರೆಯಲ್ಲಿ ಸಾಲಸೋಲ ಮಾಡಿ ಚಿಕಿತ್ಸೆ ಪಡೆದುಕೊಳ್ಳುವ ಮನಸ್ಥಿತಿಗೆ ಬಡವರ್ಗದವರು ಬಂದು ಬಿಟ್ಟಿದ್ದಾರೆ. ಆಸ್ಪತ್ರೆ ಸಾಲ ತೀರಿಸಲಾಗದ ಎಷ್ಟೋ ಕುಟುಂಬ ಬೀದಿಗೆ ಬಿದ್ದಿವೆ. ಇವೆಲ್ಲವನ್ನು ಗಮನಿಸಿದಾಗ ಸರ್ಕಾರಿ ಆಸ್ಪತ್ರೆಯವರು ನಗರದ ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾಗಿರುವ ಅನುಮಾನ ಕಂಡು ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಅಸ್ಪತ್ರೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಸಭೆಯಲ್ಲಿ ವಿವರಿಸಿದರು. ಆದರೆ ಸದಸ್ಯರು ಪುನಃ ಅಸಮಾಧಾನ ವ್ಯಕ್ತಪಡಿಸಿದರು. 
ಇದಕ್ಕೂ ಮೊದಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇಲಾಖೆಯಿಂದ ಕೈಗೊಂಡಿರುವ ಕಾರ್ಯಗಳನ್ನು ವಿವರಿಸಿದರು. ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು, ಈ ಹಿನ್ನಲೆಯಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. 
ಉಪಾಧ್ಯಕ್ಷೆ ನೇತ್ರಾಬಾಯಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್ ಉಪಸ್ಥಿತರಿದ್ದರು.  ಸದಸ್ಯರಾದ ಆಶಾ ಶ್ರೀಧರ್, ತುಂಗಮ್ಮ ಜಯಪ್ಪ, ಗೀತಾ ಜಗದೀಶ್, ಕೆ.ವಿ ರುದ್ರಪ್ಪ, ಅಣ್ಣಾಮಲೈ, ಉಷಾಕಿರಣ, ನಾಗರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಎಸಿಬಿ ಬಲೆಗೆ ನಗರಸಭೆ ಸಿಬ್ಬಂದಿ

ಭದ್ರಾವತಿ, ಆ. ೧೩: ನಗರಸಭೆ ಕಂದಾಯ ಇಲಾಖೆ ಸಿಬ್ಬಂದಿಯೊಬ್ಬರು ಗುರುವಾರ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. 
ಕಂದಾಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್ ಎಂಬುವರು ಬಲೆಗೆ ಬಿದ್ದಿದ್ದಾರೆ. ಡಿವೈಎಸ್ಪಿ ಲೋಕೇಶ್, ತನಿಖಾ ಠಾಣಾಧಿಕಾರಿಗಳಾದ ವೀರೇಂದ್ರ, ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ವಸಂತ್, ನಾಗರಾಜ್, ರಘು, ಸುರೇಂದ್ರ, ಯೋಗೇಶ್ ಮತ್ತು ಶ್ರೀನಿವಾಸ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. 
ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ನಿವಾಸಿ ಸುಲ್ತಾನ್ ಷರೀಫ್ ಎಂಬುವವರಿಂದ ೫ ಸಾವಿರ ರು. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.



Wednesday, August 12, 2020

ಇವರು ತರಕಾರಿ ಆಭರಣ ಸುಂದರಿಯರು..!

ಭದ್ರಾವತಿ ಕಸಾಪ ವಿನೂತನ ಪ್ರಯತ್ನ ಯಶಸ್ಸು


ಭದ್ರಾವತಿ, ಆ. ೧೨: ಒಂದೆಡೆ ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಮತ್ತೊಂಡೆ ಎಲ್ಲರೂ ಒಂದೆಡೆ ಸೇರುವಂತಿಲ್ಲ. ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಚಿತ್ರಮಂದಿರಗಳಲ್ಲಿ ಕುಳಿತು ಸಂಭ್ರಮಿಸುವಂತಿಲ್ಲ. ಮನೆಯೊಳಗೆ ಇರಬೇಕಾದ ಪರಿಸ್ಥಿತಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಂತರ್ಜಾಲದ ಮೂಲಕ ಮನೆಯಲ್ಲಿರುವವರನ್ನು ಸಹ ಕ್ರಿಯಾಶೀಲರನ್ನಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಮೊದಲ ಪ್ರಯತ್ನವೆಂಬಂತೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ಮನೆಗಳಲ್ಲಿಯೇ ತರಕಾರಿ ಬಳಸಿ ಆಭರಣ ತಯಾರಿಸಿ ಧರಿಸುವ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆ ಇದೀಗ ವ್ಯಾಪಕವಾಗಿ ಗಮನ ಸೆಳೆಯುತ್ತಿದೆ.


      ಪ್ರತಿ ದಿನ ಅಡುಗೆ ತಯಾರಿಕೆಗೆ ಬಳಸುವ ತರಕಾರಿ ಬಳಸಿ ಆಭರಣ ತಯಾರಿಸುವ ವಿನೂತನ ಪ್ರಯತ್ನಕ್ಕೆ ನಗರದ ಬಹಳಷ್ಟು ಮಹಿಳೆಯರು ಮುಂದಾಗಿ ಯಶಸ್ವಿಯಾಗಿದ್ದಾರೆ. ಕ್ಯಾರೇಟ್, ಬೆಂಡೆಕಾಯಿ, ಹೀರೆಕಾಯಿ, ಸೋತೆಕಾಯಿ, ಮೂಲಂಗಿ, ಬೀನ್ಸ್, ಕಡಲೆಕಾಳು, ಬಟಾಣಿ, ಆಗಲಕಾಯಿ, ಹಸಿಮೆಣಸಿನಕಾಯಿ, ಕರಿಬೇವು ಇತ್ಯಾದಿ ಬಳಸಿ ಬಗೆ ಬಗೆಯ ಆಭರಣಗಳನ್ನು ತಯಾರಿಸಿದ್ದಾರೆ.


      ಈ ಸ್ಪರ್ಧೆಯಲ್ಲಿ ರೇಷ್ಮಾ ಭಾನು ಜಾವಿದ್ ಪಾಷ ಪ್ರಥಮ ಸ್ಥಾನ, ಅನ್ನಪೂರ್ಣಮ್ಮ ಶಂಕರಮೂರ್ತಿ ಹಾಗೂ ಲೋಹಿತಾ ನಂಜಪ್ಪ ದ್ವಿತೀಯ ಸ್ಥಾನ ಮತ್ತು ತ್ರಿವೇಣಿ ಪುಟ್ಟು ಮತ್ತು ನಂದಿನಿ ಬಾಬು ತೃತೀಯ ಸ್ಥಾನವನ್ನು ಪಡೆದಿದ್ದು, ಉಳಿದಂತೆ ಸುಜಾತಾ ಗೋಪಿನಾಥ್, ಕವಿತಾ ಸುರೇಶ್, ಧನಲಕ್ಷ್ಮಿ .ಕೆ ಮತ್ತು ಮಲ್ಲಿಕಾಂಬ ಅವರಿಗೆ ಸಮಾಧಾನಕರ ಬಹುಮಾನ ಲಭಿಸಿದೆ.
        ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದು, ಆ.೧೫ರಂದು ಸಂಜೆ ೪ ಗಂಟೆಗೆ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಬಹುಮಾನಗಳನ್ನು ವಿತರಿಸಲಿದೆ.


ವಿದ್ಯೆ ಜೊತೆಗೆ ಉತ್ತಮ ಸಂಸ್ಕಾರ ಅಗತ್ಯ : ಮಧುಕರ್ ಕಾನಿಟ್ಕರ್


ಭದ್ರಾವತಿ ತರುಣಭಾರತಿ ವಿದ್ಯಾಕೇಂದ್ರದಲ್ಲಿ ಬುಧವಾರ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಆ. ೧೨: ಮಕ್ಕಳು ವಿದ್ಯೆ ಜೊತೆಗೆ ತ್ಯಾಗಮಯಿ ಗುಣ ಬೆಳೆಸಿಕೊಳ್ಳಬೇಕೆಂದು ತರುಣ ಭಾರತಿ ವಿದ್ಯಾಕೇಂದ್ರದ ಹಿರಿಯ ಮಾರ್ಗದರ್ಶಕರಾದ ಮಧುಕರ್ ಕಾನಿಟ್ಕರ್ ಹೇಳಿದರು.
     ಅವರು ಬುಧವಾರ ಕೇಶವಪುರ ಬಡಾವಣೆಯಲ್ಲಿರುವ ತರುಣಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಹಿಂದೆ ಪೋಷಕರು ಮಕ್ಕಳಿಗೆ ತಮ್ಮ ಇಡೀ ಬದುಕನ್ನು ತ್ಯಾಗ ಮಾಡಿ ವಿದ್ಯೆ, ಸಂಸ್ಕಾರ ಸೇರಿ ಎಲ್ಲವನ್ನು ನೀಡುತ್ತಿದ್ದರು. ಪ್ರಸ್ತುತ ದಿನಗಳಲ್ಲಿ ಎಲ್ಲವೂ ಬದಲಾಗಿದೆ.  ಸಮಾಜದಲ್ಲಿ ಸ್ವಾರ್ಥ ಮನೋಭಾವ ಹೆಚ್ಚಾಗುತ್ತಿದೆ. ಮಕ್ಕಳು ಕೇವಲ ವಿದ್ಯೆ ಕಲಿಯುತ್ತಿದ್ದು, ಮಾನವೀಯ ಗುಣಗಳಿಂದ ದೂರ ಉಳಿಯುತ್ತಿದ್ದಾರೆಂದು ವಿಷಾದ ವ್ಯಕ್ತಪಡಿಸಿದರು.
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಪೋಷಕರು ಗಮನ ಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಚಿಂತಿಸುವಂತಾಗಬೇಕೆಂದರು.
      ವೇದಿಕೆಯಲ್ಲಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ. ಎಂ.ಎಚ್ ವಿದ್ಯಾಶಂಕರ್, ನ್ಯೂಟೌನ್ ಸತ್ಯಸಾಯಿ ಬಾಬಾ ಸಮಗ್ರ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮೃತ್ಯುಂಜಯ ಕಾನಿಟ್ಕರ್, ರಾಚಂದ್ರ, ಚಿರಾಗ್, ಮಾಲತಿ ಕಾನಿಟ್ಕರ್, ಮಾರುತಿಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
  ಪೂರ್ಣಿಮಾ ಪ್ರಾರ್ಥಿಸಿದರು. ಸವಿತಾ ಸ್ವಾಗತಿಸಿದರು. ರಾಧಿಕ ನಿರೂಪಿಸಿದರು. ವಿದ್ಯಾ ಕೇಂದ್ರದ ಸಹಕಾರ್ಯದರ್ಶಿ ರಮೇಶ್ ವಂದಿಸಿದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾಕೇಂದ್ರ ಶೇ.೯೩ರಷ್ಟು ಉತ್ತಮ ಫಲಿತಾಂಶ ಪಡೆದುಕೊಂಡಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಪುಸ್ತಕ ನೀಡಿ ಅಭಿನಂದಿಸಲಾಯಿತು.