Thursday, November 19, 2020

ಸರ್ಕಾರಿ ಉರ್ದು ಶಾಲೆ ಮೂಲ ಸೌಕರ್ಯಕ್ಕೆ ೧೦ ಲಕ್ಷ ರು. ಅನುದಾನ

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನ ಸಮೀಪದಲ್ಲಿರುವ ಸರ್ಕಾರಿ ಉರ್ದು ಶಾಲೆಗೆ ಶೌಚಾಲಯ ಸೇರಿದಮತೆ ಮೂಲ ಸೌಕರ್ಯ ಕಲ್ಪಿಸಿಕೊಡುವಂತೆ ಎಎಪಿ ಪಕ್ಷದ ಮುಖಂಡರು ಒತ್ತಾಯಿಸಿದ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ನಗರಸಭೆ ಪೌರಾಯುಕ್ತ ಮನೋಹರ್.
ಭದ್ರಾವತಿ, ನ. ೧೯: ಹಳೇನಗರದ ಕನಕಮಂಟಪ ಮೈದಾನ ಸಮೀಪದಲ್ಲಿರುವ ಸರ್ಕಾರಿ ಉರ್ದು ಶಾಲೆಗೆ ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿಕೊಡುವಂತೆ ಆಮ್ ಆದ್ಮಿ ಪಾರ್ಟಿ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಒತ್ತಾಯಿಸಲಾಯಿತು.
    ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ಮನೋಹರ್ ಪರಿಶೀಲನೆ ನಡೆಸಿ ಶಾಸಕರಿಗೆ ಶಾಲೆಯ ವಾಸ್ತವಾಂಶ ಮನವರಿಕೆ ಮಾಡಿಕೊಟ್ಟಿದ್ದು, ತಕ್ಷಣ ಶಾಸಕರು ೧೦ ಲಕ್ಷ ರು. ಶೌಚಾಲಯ ನಿರ್ಮಾಣ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳುವಂತೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.
    ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಮುಖಂಡ ಅಬ್ದುಲ್ ಖದೀರ್, ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.





ಬಾಲ್ಯ ವಿವಾಹ : ಬಾಲಕಿಯನ್ನು ರಕ್ಷಿಸಿದ ಅಧಿಕಾರಿಗಳು


ಭದ್ರಾವತಿ, ನ. ೧೯:  ಬಾಲ್ಯ ವಿವಾಹ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಬಾಲಕಿಯನ್ನು ರಕ್ಷಿಸಿರುವ ಘಟನೆ ಗುರುವಾರ ನಡೆದಿದೆ.
     ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್‌ನಲ್ಲಿ ನಗರದ ಅನ್ವರ್ ಕಾಲೋನಿ ಬಾಲಕಿಯೊಂದಿಗೆ ಆಸಿಫ್ ಅಲಿ ಎಂಬ ೨೧ ವರ್ಷದ ಯುವಕನ ವಿವಾಹ ನಡೆಯುತ್ತಿತ್ತು. ಆದರೆ, ಬಾಲಕಿಗೆ ಇನ್ನೂ ೧೮ ವರ್ಷ ಪೂರ್ಣಗೊಳ್ಳದೆ ಅಪ್ರಾಪ್ತಳಾಗಿದ್ದಾಳೆ ಎಂಬ ಖಚಿತ ಮಾಹಿತಿ ಆಧರಿಸಿದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸುವ ಜೊತೆಗೆ ವಿವಾಹ ನಡೆಸಲು ಮುಂದಾಗಿದ್ದ ವಧು ಹಾಗೂ ವರನ ಪೋಷಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬಾಲಕಿಯನ್ನು ವಶಕ್ಕೆ ಪಡೆದು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಮುಂದೆ ಹಾಜರುಪಡಿಸಿ ಬಾಲಮಂದಿರಕ್ಕೆ ಕಳುಹಿಸಲಾಗಿದೆ.
     ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರದ ಶೃತಿ, ಶಿಶು ಅಭಿವೃದ್ಧಿ ಯೋಜನಾ ವಲಯ ಮೇಲ್ವಿಚಾರಕಿ ಯಶೋಧಾ, ರಮೇಶ್ ಹಾಗು ನ್ಯೂಟೌನ್ ಪೊಲೀಸರು ಪಾಲ್ಗೊಂಡಿದ್ದರು..

ನ.೨೨ರಂದು ವಿದ್ಯುತ್ ವ್ಯತ್ಯಯ

ಭದ್ರಾವತಿ, ನ. ೧೯: ಮೆಸ್ಕಾಂ ನಗರ ಉಪವಿಭಾಗ ಘಟಕ-೫ರ ಮಾಚೇನಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಐಪಿಡಿಎಸ್ ಹಾಗು ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.೨೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಮಾಚೇನಹಳ್ಳಿ, ಕೈಗಾರಿಕಾ ಪ್ರದೇಶ, ಡೈರಿ ವೃತ್ತ, ಜೇಡಿಕಟ್ಟೆ, ವಿಶ್ವೇಶ್ವರಯ್ಯನಗರ, ಶಿವರಾಮನಗರ, ಬಿ.ಎಚ್ ರಸ್ತೆ, ಕ.ರಾ.ಮೀ.ಪೋ. ವಸತಿ ಗೃಹಗಳು, ಜಯಂತಿ ಗ್ರಾಮ, ರಾಮಮೂರ್ತಿ ಮಿನರಲ್ಸ್, ಬಾಳೇನಹಳ್ಳಿ, ಗೌಡ್ರಕೊಪ್ಪ, ವೀರಭದ್ರ ಕಾಲೋನಿ, ಹೊನ್ನವಿಲೆ, ಶೆಟ್ಟಿಹಳ್ಳಿ, ಮಾಚೇನಹಳ್ಳಿ, ಮಲ್ನಾಡ್ ಆಸ್ಪತ್ರೆ, ಅರೇಕೊಪ್ಪ, ಬಿದರೆ, ನಿದಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ಆಚಾರಿ ಕ್ಯಾಂಪ್, ರೆಡ್ಡಿ ಕ್ಯಾಂಪ್, ಹೆರೆಕಟ್ಟೆ ಹಾಗು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.


Saturday, November 14, 2020

ನ.೧೬ರಿಂದ ಪುನಃ ಸೈನಿಕ ತರಬೇತಿ ಆರಂಭ

ಭದ್ರಾವತಿ, ನ. ೧೪: ಭಾರತೀಯ ಸೈನ್ಯಕ್ಕೆ ಸೇರಲು ಇಚ್ಛಿಸುವ ಯುವಕರಿಗೆ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಉಚಿತ ತರಬೇತಿ ನೀಡಲಾಗುತ್ತಿದ್ದು, ಲಾಕ್‌ಡೌನ್ ಹಿನ್ನಲೆಯಲ್ಲಿ ಸುಮಾರು ೬ ತಿಂಗಳ ಹಿಂದೆ ಸ್ಥಗಿತಗೊಂಡಿದ್ದ ತರಬೇತಿ ಇದೀಗ ನ.೧೬ರಿಂದ ಪುನಃ ಆರಂಭಗೊಳ್ಳಲಿದೆ.
    ಭಾರತೀಯ ಸೈನ್ಯಕ್ಕೆ ಸೇರಲು ಸೈನಿಕ ಇಲಾಖೆ ಆಹ್ವಾನಿಸಿದ ಸಂದರ್ಭದಲ್ಲಿ ಸುಮಾರು ೩ ರಿಂದ ೬ ತಿಂಗಳವರೆಗೆ ಪ್ರತಿ ಬಾರಿ ತರಬೇತಿ ನೀಡಲಾಗುತ್ತಿದೆ. ಈ ಬಾರಿ ಜನವರಿ ಆರಂಭದಲ್ಲಿ ಪ್ರಾರಂಭಿಸಲಾಗಿದ್ದ ತರಬೇತಿ ಕೋವಿಡ್-೧೯ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದ ಪರಿಣಾಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
    ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಪುನಃ ತರಬೇತಿ ಆರಂಭಗೊಳ್ಳಲಿದ್ದು, ತಾಲೂಕಿನ ಯುವಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಅಶೋಕ್ ಕೋರಿದ್ದಾರೆ. ತರಬೇತಿ ಸಂದರ್ಭದಲ್ಲಿ ಉಪಹಾರದ ವ್ಯವಸ್ಥೆಯನ್ನು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಕೈಗೊಂಡಿದ್ದಾರೆ.

ವಿಶ್ವೇಶ್ವರಯ್ಯ ಖಾಸಗಿ ಬಸ್ ಏಜೆಂಟರ್, ಕಾರ್ಮಿಕರ ಸಂಘದ ನೂತನ ಕಛೇರಿ ಉದ್ಘಾಟನೆ

ಭದ್ರಾವತಿಯಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವೇಶ್ವರಯ್ಯ ಖಾಸಗಿ ಬಸ್ ಏಜೆಂಟರ್ ಮತ್ತು ಕಾರ್ಮಿಕರ ಸಂಘದ ನೂತನ ಕಛೇರಿಯನ್ನು ಸಮಾಜ ಸೇವೆಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಉದ್ಘಾಟಿಸಿದರು.
ಭದ್ರಾವತಿ, ನ. ೧೪: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವೇಶ್ವರಯ್ಯ ಖಾಸಗಿ ಬಸ್ ಏಜೆಂಟರ್ ಮತ್ತು ಕಾರ್ಮಿಕರ ಸಂಘದ ನೂತನ ಕಛೇರಿಯನ್ನು ಸಮಾಜ ಸೇವೆಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಉದ್ಘಾಟಿಸಿದರು.
     ಕಛೇರಿ ನಿರ್ಮಾಣಕ್ಕೆ ಹೆಚ್ಚಿನ ನೆರವು ನೀಡುವ ಮೂಲಕ ಸಹಕರಿಸಿದ ಉಮೇಶ್‌ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಂಘದ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
     ಪೌರಾಯುಕ್ತ ಮನೋಹರ್, ಸಂಘದ ಅಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ಧರ್ಮರಾಜ್, ಸತೀಶ್‌ಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಚನ್ನೇಶ್, ವಿಜಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುಪ್ರೀಂಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ಪಟಾಕಿ ಮಾರಾಟ : ಸೂಕ್ತ ಕ್ರಮಕ್ಕೆ ಆಗ್ರಹಿಸಿ ಶಶಿಕುಮಾರ್ ಎಸ್ ಗೌಡ ಏಕಾಂಗಿ ಹೋರಾಟ

ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಭದ್ರಾವತಿ ಪಟಾಕಿ ಮಾರಾಟ ಮಾಡಲಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಏಕಾಂಗಿಯಾಗಿ ಶನಿವಾರ ನಗರಸಭೆ ಮುಂಭಾಗ ಹೋರಾಟ ನಡೆಸಿ ಮನವಿ ಸಲ್ಲಿಸಿದರು.
ಭದ್ರಾವತಿ, ನ. ೧೪: ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಗರದಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಏಕಾಂಗಿಯಾಗಿ ಶನಿವಾರ ನಗರಸಭೆ ಮುಂಭಾಗ ಹೋರಾಟ ನಡೆಸಿದರು.
     ಈ ಬಾರಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಿದ್ದು, ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಹಳೇನಗರದ ಕನಕಮಂಟಪ ಮೈದಾನ, ನ್ಯೂಟೌನ್ ಚರ್ಚ್ ಮೈದಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ವ್ಯಾಪಾರಸ್ಥರು ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಮಳಿಗೆಗಳ ನಡುವೆ ಮಾರ್ಗಸೂಚಿಯಂತೆ ಅಂತರ ನಿಗದಿಪಡಿಸಿಲ್ಲ. ಸ್ಯಾನಿಟೈಜರ್, ಮಾಸ್ಕ್ ಬಳಕೆ ಸಹ ಕಂಡು ಬರುತ್ತಿಲ್ಲ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಮತ್ತು ನಗರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಕಂದಾಯಾಧಿಕಾರಿ ಪ್ರಶಾಂತ್ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
     ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಶಾಲೆ ಉಳಿವಿಗಾಗಿ ಗೋಕಾಕ್ ಮಾದರಿ ಚಳುವಳಿ ಅನಿವಾರ್ಯ : ಬಿ.ಕೆ ಮೋಹನ್

ಭದ್ರಾವತಿ ಅಂಡರ್‌ಬ್ರಿಡ್ಜ್ ಬಳಿ ನೆಹರು ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ನ. ೧೪: ಪ್ರಸ್ತುತ ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚಲ್ಪಡುತ್ತಿದ್ದು, ಕನ್ನಡ ಶಾಲೆಗಳ ಉಳಿವಿಗಾಗಿ ಈ ಹಿಂದೆ ವರನಟ  ಡಾ. ರಾಜ್‌ಕುಮಾರ್ ನೇತೃತ್ವದಲ್ಲಿ ನಡೆಸಿದ ಗೋಕಾಕ್ ಚಳುವಳಿ ಮಾದರಿಯಂತೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
   ಅವರು ಶನಿವಾರ ಅಂಡರ್‌ಬ್ರಿಡ್ಜ್ ಬಳಿ ನೆಹರು ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ದಲ್ಲಿ ಕರ್ನಾಟಕ ರಾಜ್ಯ ವಿಭಿನ್ನವಾಗಿದ್ದು, ಎಲ್ಲಾ ಭಾಷೆಯ, ಎಲ್ಲಾ ಧರ್ಮದ ಜನರು ಇಲ್ಲಿ ನೆಲೆನಿಂತಿದ್ದಾರೆ. ಎಲ್ಲರನ್ನು ಪೋಷಿಸಿ ಸಲಹುವ ಶಕ್ತಿ ಈ ನಾಡು ಹೊಂದಿದ್ದು, ಇಂತಹ ನಾಡಿನ ನೆಲ, ಜಲ, ಭಾಷೆ ಮೇಲಿನ ಅಭಿಮಾನ ಹೆಚ್ಚಾಗಬೇಕೆಂದರು.
ಪ್ರಸ್ತುತ ಕೊರೊನಾ ಪರಿಣಾಮದಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದು, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ಆಟೋ ಚಾಲಕರು ಕನ್ನಡ ನಾಡಿನ ಮೇಲೆ ಅಭಿಮಾನ ಹೊಂದುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಸಂಘದ ಅಧ್ಯಕ್ಷ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕನ್ನಡ ಧ್ವಜದೊಂದಿಗೆ ಆಟೋ ಚಾಲಕರು ನಗರದ ವಿವಿಧೆಡೆ ಸಂಚರಿಸಿದರು.