Friday, December 11, 2020

ಒಕ್ಕಲಿಗರ ನಿರ್ದೇಶಕರ ಚುನಾವಣೆಗೆ ಎಂ.ಪಿ ಅಭ್ಯರ್ಥಿ ಶಶಿಕುಮಾರ್ ಎಸ್. ಗೌಡ ಸ್ಪರ್ಧೆ

ಭದ್ರಾವತಿ ಒಕ್ಕಲಿಗರ ನಿರ್ದೇಶಕರ ಚುನಾವಣೆಗೆ ೩ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಶಶಿಕುಮಾರ್ ಎಸ್. ಗೌಡ ಸ್ಪರ್ಧಿಸಿದ್ದು, ಚುನಾವಣಾಧಿಕಾರಿಗಲಿಗೆ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಡಿ. ೧೧: ಹಲವಾರು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ತಮಗೆ ಒಕ್ಕಲಿಗ ಸಮಾಜದೊಂದಿಗೆ ಇನ್ನೂ ಹೆಚ್ಚಿನ ಬಾಂಧವ್ಯ ಹೊಂದಲು ಈ ಬಾರಿ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಶಶಿಕುಮಾರ್ ಎಸ್ ಗೌಡ ತಿಳಿಸಿದರು.
     ಅವರು ಒಕ್ಕಲಿಗರ ಸಮಾಜದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಈ ಹಿಂದೆ ಲೋಕಸಭಾ ಚುನಾವಣೆಗೆ ೩ ಬಾರಿ ಸ್ಪರ್ಧಿಸಿದ್ದು, ೧ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಎಲ್ಲಾ ರೀತಿಯ ಹೋರಾಟಗಳಲ್ಲೂ ಭಾಗಿಯಾಗಿದ್ದು, ಎಲ್ಲಾ ಸಮುದಾಯಗಳ ನಡುವೆ ಗುರಿತಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಹೋರಾಟ ನಡೆಸಲು ನಿರ್ದೇಶಕ ಸ್ಥಾನ ಸಹಕಾರಿಯಾಗಲಿದೆ ಎಂಬ ನಿರೀಕ್ಷೆಯೊಂದಿಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಪ್ರಸ್ತುತ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇನೆ ಎಂದರು. ಕರ್ನಾಟಕ ರಕ್ಷಣಾ ವೇದಿಕೆಯ ಸಂದೇಶ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾನವ ಹಕ್ಕುಗಳು ಬಹಳ ಶ್ರೇಷ್ಠತೆ, ಶಕ್ತಿಯುತ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದ ಪದ್ಮನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಶಾಸಕ ವೈ.ಎಸ್.ವಿ ದತ್ತಾ ಉದ್ಘಾಟಿಸಿದರು.
ಭದ್ರಾವತಿ, ಡಿ. ೧೧: ಮಾನವ ಹಕ್ಕುಗಳು ಬಹಳ ಶ್ರೇಷ್ಠತೆ ಹಾಗು ಶಕ್ತಿಯುತವಾಗಿದ್ದು, ಇವುಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿದರು.
    ಅವರು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದ ಪದ್ಮನಿಲಯ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
   ಮಾನವ  ಸಮುದಾಯದ ನಡುವೆ ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಾನವ ಹಕ್ಕುಗಳು ಹೆಚ್ಚು ಶಕ್ತಿಯುತವಾಗಿದ್ದು, ಪ್ರತಿಯೊಬ್ಬರ ಬದುಕಿಗೂ ಬೆಲೆ ತಂದು ಕೊಡುತ್ತವೆ ಎಂದರು.
   ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮಾನವೀಯ ಮೌಲ್ಯಗಳ ಪರವಾಗಿ ಧ್ವನಿ ಎತ್ತಿದ ಜನಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದರು. ಇವರ ಸ್ಮರಣಾರ್ಥ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಇವರ ಹೆಸರನ್ನು ನಾಮಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಹೋರಾಟ ಆರಂಭಿಸಲಾಗಿದೆ. ಇದರ ಜವಾಬ್ದಾರಿ ತಮಗೆ ವಹಿಸಲಾಗಿದೆ. ಯಾವುದೇ ಕಾರಣಕ್ಕೂ ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಅಪ್ಪಾಜಿ ಹೆಸರು ನಾಮಕರಣ ಮಾಡುವಂತೆ ವಿಧಾನಸೌಧದ ಮಟ್ಟದಲ್ಲಿ ಸಹ ಹೋರಾಟ ನಡೆಸಲು ಸಿದ್ದವಿರುವುದಾಗಿ ಭರವಸೆ ನೀಡಿದರು.
   ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಹಿರಿಯ ಕಾರ್ಮಿಕ ಹೋರಾಟಗಾರ ಡಿ.ಸಿ ಮಾಯಣ್ಣ ಅಧ್ಯಕ್ಷತೆ ವಹಿಸಿದ್ದರು.
    ಸರೋಜಮ್ಮ ಬಿ. ಶಂಕರಪ್ಪ ಮತ್ತು ನಿತಿಲ್ ಎಂ. ಶ್ರೀನಿವಾಸನ್, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ನಗರಸಭೆ ಸದಸ್ಯರಾದ ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಬದರಿನಾರಾಯಣ, ಲಕ್ಷ್ಮೀದೇವಿ,ವಿಶಾಲಾಕ್ಷಿ, ಮಾಜಿ ಸದಸ್ಯ ಕೆ. ಕರಿಯಪ್ಪ,  ಜನಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾರದಮ್ಮ, ಕರಾವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಕಲಾವಿದ ಆಂಜನೇಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
     ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಅಧ್ಯಕ್ಷತೆ ವಹಿಸಿದ್ದರು. ಅನ್ನಪೂರ್ಣ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಮನವಿ

ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಜನಸೈನ್ಯ ಖಂಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಗ್ರೇಡ್ -೨ ರಂಗಮ್ಮ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಭದ್ರಾವತಿ, ಡಿ. ೧೧: ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಜನಸೈನ್ಯ ಖಂಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ತಹಸೀಲ್ದಾರ್ ಗ್ರೇಡ್ -೨ ರಂಗಮ್ಮ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
    ಶಿವಮೊಗ್ಗ ಜಿಲ್ಲೆ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಹಾಗು ರಾಜಕೀಯವಾಗಿ ಮುಂಚೂಣಿಯಲ್ಲಿದ್ದು, ಈ ಜಿಲ್ಲೆಯಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗು ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು.
     ಜಿಲ್ಲಾಧ್ಯಕ್ಷೆ ಕೆ ಮಂಜುನಾಥ್, ತಾಲೂಕು ಅಧ್ಯಕ್ಷ ವಿ. ಲೋಕೇಶ್, ಉಪಾಧ್ಯಕ್ಷ ಎಲ್.ಸಿ ಮುಥುನ್, ಜಿಲ್ಲಾ ಪ್ರಧಾನ ಕಾರ್ಯದಶಿ ಎಂ. ಅನಂತರಾಮ್, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ಚಿರಾಗ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಚಂದ್ರಶೇಖರ್, ಎಲ್ ಶ್ರೀನಿವಾಸ್, ಪಿ. ಪರಮೇಶ್ ಸೇರಿದಂತೆ  ಇನ್ನಿತರರಿದ್ದರು ಉಪಸ್ಥಿತರಿದ್ದರು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗಳ ಪರ ವಕಾಲತ್ತು ವಹಿಸದಿರಿ

ವಕೀಲರ ಸಂಘಕ್ಕೆ ಕರ್ನಾಟಕ ಜನಪರ ವೇದಿಕೆ ಮನವಿ

ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಯಾರು ಸಹ ವಕಾಲತ್ತು ವಹಿಸಬಾರದೆಂದು ಆಗ್ರಹಿಸಿ ತಾಲೂಕು ವಕೀಲರ ಸಂಘಕ್ಕೆ ಭದ್ರಾವತಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೧೧: ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಯಾರು ಸಹ ವಕಾಲತ್ತು ವಹಿಸಬಾರದೆಂದು ಆಗ್ರಹಿಸಿ ತಾಲೂಕು ವಕೀಲರ ಸಂಘಕ್ಕೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ಆಸ್ಪತ್ರೆಯ ಗುತ್ತಿಗೆ ಕಾರ್ಮಿಕ ಹಾಗು ಆತನ ಸ್ನೇಹಿತರು ಸೇರಿ ನಡೆಸಿರುವ ಅತ್ಯಾಚಾರ ಘಟನೆಯನ್ನು ಜನಪರ ವೇದಿಕೆ ಖಂಡಿಸುತ್ತದೆ. ಈ ಘಟನೆ ಪ್ರಜ್ಞಾವಂತ ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ರೀತಿಯ ಘಟನೆಗಳು ಪುನಃ ಮರುಕಳುಹಿಸಬಾರದು. ಬಾಲಕಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ನ್ಯಾಯವಾದಿಗಳು ಮುಂದಾಗಬೇಕು. ಆರೋಪಿಗಳ ಪರವಾಗಿ ಯಾರು ಸಹ ವಕಾಲತ್ತು ವಹಿಸಬಾರದೆಂದು ಮನವಿ ಮಾಡಲಾಯಿತು.
    ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಮನವಿ ಸ್ವೀಕರಿಸಿದರು. ಜನಪರ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಸ್ ಭೈರಪ್ಪ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾರ್ಯಾಧ್ಯಕ್ಷ ಸುದೀಪ್‌ಕುಮಾರ್, ಮುಖಂಡರಾದ ಮುಕುಂದಪ್ಪ, ಡಿ. ನರಸಿಂಹಮೂರ್ತಿ, ಪ್ರಾನ್ಸಿಸ್, ಅಬಿದ್, ಕಾಂತರಾಜ್, ಜೋಸೆಫ್, ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೧೮ ಅಡಿ ಉದ್ದದ ಬಾಳೆ ಎಲೆಯಲ್ಲಿ ಕುಟುಂಬ ಸದಸ್ಯರ ಬಾಡೂಟ...!

ಭದ್ರಾವತಿ ತಾಲ್ಲೂಕಿನ ಕಲ್ಪನಹಳ್ಳಿ ಗ್ರಾಮದಲ್ಲಿ ಬಾಬುನಾಯ್ಕ ನಂಜಿಬಾಯಿ ಕುಟುಂಬಸ್ಥರ ಮದುವೆ ಸಮಾರಂಭದಲ್ಲಿ ಬೃಹತ್ ಆಕಾರದ ಬಾಳೆ ಎಲೆಯಲ್ಲಿ ಕುಟುಂಬ ಸದಸ್ಯರು ಒಂದೇ ಎಲೆಯಲ್ಲಿ ಊಟ ಮಾಡುತ್ತಿರುವ ಪೋಟೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
   ಭದ್ರಾವತಿ, ಡಿ. ೧೧: ತಾಲ್ಲೂಕಿನ ಕಲ್ಪನಹಳ್ಳಿ ಗ್ರಾಮದಲ್ಲಿ ಬಾಬುನಾಯ್ಕ ನಂಜಿಬಾಯಿ ಕುಟುಂಬಸ್ಥರ ಮದುವೆ ಸಮಾರಂಭದಲ್ಲಿ ಬೃಹತ್ ಆಕಾರದ ಬಾಳೆ ಎಲೆಯಲ್ಲಿ ಕುಟುಂಬ ಸದಸ್ಯರು ಒಂದೇ ಎಲೆಯಲ್ಲಿ ಊಟ ಮಾಡುತ್ತಿರುವ ಪೋಟೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.  
    ಈ ಊರಿನಲ್ಲಿರುವ ಅತ್ಯಂತ ದೊಡ್ಡ ಕುಟುಂಬ ಇದಾಗಿದೆ. ೧೮ ಅಡಿ ಉದ್ದದ  ಬಾಳೆ ಎಲೆಯಲ್ಲಿ ಕುಟುಂಬದ ಕೆಲ ಸದಸ್ಯರು ಬಾಡೂಟದ ಸವಿದರು. ಈ ಕುಟುಂಬದ ಸದಸ್ಯರು ಯಾವಾಗಲೂ ಒಂದಲ್ಲ ಒಂದು ರೀತಿಯಲ್ಲಿ ವಿಭಿನ್ನ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡುತ್ತಲೆ ಇರುತ್ತಾರೆ.

Thursday, December 10, 2020

ಅಂಧರ ಕೇಂದ್ರದಲ್ಲಿ ಕರಾವೇ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಹುಟ್ಟುಹಬ್ಬ

ಭದ್ರಾವತಿ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಅಂಧ ವಿಕಲಚೇತನರೊಂದಿಗೆ ಆಚರಿಸಿಕೊಂಡರು.
ಭದ್ರಾವತಿ, ಡಿ. ೧೦: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಅಂಧ ವಿಕಲಚೇತನರೊಂದಿಗೆ ಆಚರಿಸಿಕೊಂಡರು.
   ನ್ಯೂಟೌನ್ ಸಿದ್ಧಾರ್ಥ ಅಂಧರ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರಾವೇ ಪ್ರಮುಖರಾದ ಅನಿತಾ, ಶಾರದ, ಮಹೇಶ್ವರಿ, ಪದ್ಮಮ್ಮ, ಸುಮಿತ್ರಾ, ಹೇಮಾ, ಸೌಮ್ಯ, ಶಾರದಕುಮಾರಿ, ರೂಪಾ ನಾರಾಯಣ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಅಂಧ ವಿಕಲಚೇತನರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಳೆದ ಕೆಲವು ವರ್ಷಗಳಿಂದ ಜ್ಯೋತಿಯವರು ತಮ್ಮ ಹುಟ್ಟುಹಬ್ಬವನ್ನು ಅಂಧರ ಕೇಂದ್ರದಲ್ಲಿ ಆಚರಿಸಿಕೊಳ್ಳುವ ಮೂಲಕ ಅಂಧರೊಂದಿಗೆ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆ : ಬಿಜೆಪಿಯಿಂದ ವಿವಿಧೆಡೆ ಗೋ ಪೂಜೆ

ಭದ್ರಾವತಿ ತಾಲೂಕಿನ ವಿವಿಧ ದೇವಾಲಯಗಳ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಗುರುವಾರ ಗೋ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ಡಿ. ೧೦: ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡಿಸುವಲ್ಲಿ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿವಿಧ ದೇವಾಲಯಗಳ ಆವರಣದಲ್ಲಿ ಗೋ ಪೂಜೆ ನೆರವೇರಿಸಲಾಯಿತು.
    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನ, ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನ ಹಾಗು ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ಭದ್ರೇಶ್ವರ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಗೋ ಪೂಜೆ ನೆರವೇರಿಸಲಾಯಿತು.
   ಪಕ್ಷದ ಪ್ರಮುಖರಾದ ಚನ್ನೇಶ್, ಅನ್ನಪೂರ್ಣ ಸಾವಂತ್, ಕಲ್ಪನಾ, ಮಂಜುಳ, ಸುಲೋಚನ ಪ್ರಕಾಶ್, ಕೆ.ಆರ್ ಸತೀಶ್, ನಾರಾಯಣ ದೊಡ್ಮನೆ, ಸುಬ್ರಮಣಿ, ರಾಜಶೇಖರ್ ಉಪ್ಪಾರ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ರಾಮಮೂರ್ತಿ, ಬಜರಂಗದಳ ಜಿಲ್ಲಾ ಸಂಚಾಲಕ ಸುನಿಲ್‌ಕುಮಾರ್, ತಾಲೂಕು ಸಂಚಾಲಕ ವಡಿವೇಲು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಹೊಸಮನೆ ಹಿಂದೂ ಮಹಾಸಭಾ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂಡಾ ಸದಸ್ಯ ವಿ. ಕದಿರೇಶ್, ಎಂ. ಮಂಜುನಾಥ್, ಯುವ ಮೋರ್ಚಾ ಅಧ್ಯಕ್ಷ ವಿಜಯ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕಿನ ೨೨ ಗ್ರಾ.ಪಂ ವ್ಯಾಪ್ತಿಯಲ್ಲಿ ವಿಶೇಷವಾಗಿ ಪೂಜೆ ನೆರವೇರಿಸಲಾಯಿತು.