Wednesday, January 27, 2021

ಹಗಲಿರುಳು ಹೋರಾಟ ನಡೆಸುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸದಿರುವುದು ಖಂಡನೀಯ : ಬಿ.ಎನ್ ರಾಜು

ಜ.೨೮ರಂದು ನಗರಕ್ಕೆ ಆಗಮಿಸಲಿರುವ ಸಂಸದರು ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲಿ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಬುಧವಾರ ಪತ್ರಿಕಾಗೋಷ್ಠಿ ನಡೆಸಲಾಯಿತು
ಭದ್ರಾವತಿ, ಜ. ೨೭: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.೧೧ರಿಂದ ತಾಲೂಕು ಕಛೇರಿ ಮುಂಭಾಗ ಹಗಲಿರುಳು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸಹ ಮುಖ್ಯಮಂತ್ರಿಗಳಾಗಲಿ, ಸಂಸದರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಸ್ಪಂದಿಸದಿರುವುದು ಖಂಡನೀಯ. ತಕ್ಷಣ ಧರಣಿ ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಎಚ್ಚರಿಸಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದೇಶಕ್ಕೆ ಆಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ಎಷ್ಟೋ ಮುಖ್ಯವೋ,  ಪ್ರಪಂಚದಲ್ಲಿ ಮನುಕುಲಕ್ಕೆ ಮಾನವೀಯತೆಯ ಸಮಾನತೆ ಸಂದೇಶ ಸಾರಿದ ಭೀಮ ಮಂದಿರಗಳು ಸಹ ಅಷ್ಟೇ ಮುಖ್ಯವಾಗಿವೆ. ಭೀಮ ಎಂದರೆ ಡಾ. ಭೀಮರಾವ್ ಅಂಬೇಡ್ಕರ್, ಭೀಮ ಮಂದಿರ ಎಂದರೆ ಶಾಲಾ-ಕಾಲೇಜುಗಳು, ಗ್ರಂಥಾಲಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಭವನಗಳು, ವಿಶ್ವವಿದ್ಯಾನಿಲಯಗಳಾಗಿವೆ ಎಂದರು.
ದಲಿತ ಚಳುವಳಿ ಹುಟ್ಟಿದ ಈ ಕ್ಷೇತ್ರದಲ್ಲಿ ಕಳೆದ ಸುಮಾರು ೨೫ ವರ್ಷಗಳಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಕೊನೆಗೂ ಹೋರಾಟಕ್ಕೆ ಒಂದು ಹಂತದಲ್ಲಿ ಫಲ ಲಭಿಸಿದ ಪರಿಣಾಮ ೨೦೧೭ರಲ್ಲಿ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಆದರೆ ಕಾಮಗಾರಿ ಪೂರ್ಣಗೊಳ್ಳದೆ ಪ್ರಸ್ತುತ ಸ್ಥಗಿತಗೊಂಡಿದೆ. ಇದನ್ನು ಖಂಡಿಸಿ ಸಮಿತಿವತಿಯಿಂದ ಹೋರಾಟ ನಡೆಸಲಾಗುತ್ತಿದೆ. ತಕ್ಷಣ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ೫.೫೦ ಕೋ. ರು. ಬಿಡುಗಡೆಗೊಳಿಸಿ ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ಮುಕ್ತಾಯಗೊಳಿಸಬೇಕು. ಅಲ್ಲದೆ ನೂತನ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಉದ್ಘಾಟಿಸಬೇಕೆಂದು ಆಗ್ರಹಿಸಿದರು.
ತಾಲೂಕಿನ ನವಲೆ ಬಸಾಪುರ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಾಗು ಸ್ಮಶಾಣ ಭೂಮಿ ಇಲ್ಲದಿರುವುದನ್ನು ಸಮಿತಿ ಖಂಡಿಸುತ್ತದೆ. ಅಲ್ಲದೆ ತಾಲೂಕಿನ ಹೊಳೆಹೊನ್ನೂರು ಕಲ್ಲಾಪುರದ ರಂಗಾಪುರ ಗ್ರಾಮದ ಸರ್ವೆ ನಂ.೧ರಲ್ಲಿ ೭೪ ಎಕರೆ ೧೬ ಗುಂಟೆ ಜಮೀನಿದ್ದು, ಹಲವಾರು ವರ್ಷಗಳಿಂದ ೨೪ ಕುಟುಂಬದ ರೈತರು ಸಾಗುವಳಿ ಮಾಡುತ್ತಿದ್ದು, ಇವರನ್ನು ಅಕ್ರಮವಾಗಿ ಬಂಧಿಸಿ ಜೈಲಿಗೆ ಕಳುಹಿಸುವ ಜೊತೆಗೆ ಶ್ರೀಮಂತರಿಗೆ ಜಮೀನು ಮಂಜೂರು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಉಳಿದಿರುವ ೪೪ ಎಕರೆ ಜಮೀನಿನಲ್ಲಿ ೨೪ ಕುಟುಂಬದ ರೈತರಿಗೆ ಜಮೀನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಗಲಿರುಳು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸಹ ಸಂಸದರು ಸ್ಪಂದಿಸದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಧರಣಿ ಸತ್ಯಾಗ್ರಹ ನಡೆಯುತ್ತಿರುವ ಸ್ಥಳದ ಸಮೀಪದಲ್ಲೇ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನ ಉದ್ಘಾಟನೆಗೆ ಜ.೨೮ರ ಗುರುವಾರ ಬೆಳಿಗ್ಗೆ ಸಂಸದರು ಆಗಮಿಸಲಿದ್ದಾರೆಂಬ ವಿಚಾರ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸಂಸದರು ಅಂಬೇಡ್ಕರ್ ಭವನ ಕಾಮಗಾರಿಯನ್ನು ವೀಕ್ಷಿಸಿ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಲು ಮುಂದಾಗಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಸಮಿತಿ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದು ಖಚಿತ ಎಂದರು.
ಸಮಿತಿ ಪ್ರಮುಖರಾದ ಆರ್. ಬಸವರಾಜ್, ಐ.ಎಲ್ ಅರುಣ್‌ಕುಮಾರ್, ಎಂ.ವಿ ಚಂದ್ರಶೇಖರ್, ಸುಬ್ಬೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನವೀಕರಣಗೊಂಡ ಪಿಎಲ್‌ಡಿ ಬ್ಯಾಂಕ್ ಕಟ್ಟಡ, ನೂತನ ಮಳಿಗೆ ಉದ್ಘಾಟನೆ

ಭದ್ರಾವತಿ ಸಿ.ಎನ್ ರಸ್ತೆಯಲ್ಲಿರುವ ನವೀಕರಣಗೊಂಡ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಟ್ಟಡ ಮತ್ತು ನೂತನ ಮಳಿಗೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಭದ್ರಾವತಿ, ಜ. ೨೭: ನಗರದ ಸಿ.ಎನ್ ರಸ್ತೆಯಲ್ಲಿರುವ ನವೀಕರಣಗೊಂಡ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಟ್ಟಡ ಮತ್ತು ನೂತನ ಮಳಿಗೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಬ್ಯಾಂಕಿನ ಅಧ್ಯಕ್ಷ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಲೋಕೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಕುಮಾರ್, ಬ್ಯಾಂಕಿನ ಉಪಾಧ್ಯಕ್ಷೆ ಎ.ಬಿ ಆಶಾ, ನಿರ್ದೇಶಕರಾದ ಜಿ.ಎಂ ಚನ್ನಬಸಪ್ಪ, ವಿರೂಪಾಕ್ಷಪ್ಪ, ಕೆ. ಮಂಜಪ್ಪ, ಗೋಪಾಲಪ್ಪ ಮತ್ತು ಟಿ.ಎಸ್ ರಂಗಸ್ವಾಮಿ, ಬ್ಯಾಂಕಿನ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜ.೨೮ ನೂತನ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನ ಉದ್ಘಾಟನೆ

ಭದ್ರಾವತಿ, ಜ. ೨೭: ಹಳೇನಗರದ ವೀರಶೈವ ಸೇವಾ ಸಮಿತಿ ವತಿಯಿಂದ ಜ.೨೮ರ ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ನೀರಾವರಿ ನಿಗಮದ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನದ ಉದ್ಘಾಟನೆ ನಡೆಯಲಿದೆ.
   ಬಳ್ಳಾರಿ ಜಿಲ್ಲೆಯ ಉಜ್ಜಯನಿ ಪೀಠದ ಶ್ರೀ ೧೦೦೮ ಜಗದ್ಗುರು ಸಿದ್ದಲಿಂಗರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು, ತರೀಕೆರೆ ಹಿರೇಮಠದ ಶ್ರೀ ಜಗದೀಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಹಿರೇಮಠದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ಮತ್ತು ಹಾರ‍್ನಹಳ್ಳಿ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು.
    ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕರಾದ ಬಿ.ಕೆ ಸಂಗಮೇಶ್ವರ್, ಎಸ್. ರುದ್ರೇಗೌಡ, ನಗರಸಭೆ ಪೌರಾಯುಕ್ತ ಮನೋಹರ್,  ಸೂಡಾ ಅಧ್ಯಕ್ಷ ಎಸ್.ಎಸ್  ಜ್ಯೋತಿಪ್ರಕಾಶ್, ಗಿರೀಶ್‌ಪಟೇಲ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಬಿ.ಎಸ್ ನಾಗರಾಜ್, ಎಸ್. ಅಡವೀಶಯ್ಯ, ಆರ್.ಎಸ್ ಶೋಭಾ, ಕೆ.ಸಿ ವೀರಭದ್ರಪ್ಪ, ಪಿ.ಎಸ್ ಅವಿನಾಶ್, ಬಿ.ಕೆ ಜಗನ್ನಾಥ, ಎಸ್.ಎಸ್ ಜಗದೀಶ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
   ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.

ಆಂಗ್ಲ ಭಾಷೆ ಕೇವಲ ವ್ಯವಹಾರಿಕ ಭಾಷೆಯಾಗಲಿ, ಕನ್ನಡ ಬದುಕಿನ ಭಾಷೆಯಾಗಲಿ

ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿ. ಮೇಘ ಉದ್ಘಾಟನಾ ನುಡಿ

ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಈಶ್ವರಮ್ಮ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಬಿ. ಮೇಘ ಉದ್ಘಾಟಿಸಿದರು.
    ಭದ್ರಾವತಿ, ಜ. ೨೭: ಆಂಗ್ಲ ಭಾಷೆಯನ್ನು ಕೇವಲ ವ್ಯವಹಾರಿಕ ಭಾಷೆಯಾಗಿ ಬಳಸಿ ಮಾತೃ ಭಾಷೆ ಕನ್ನಡಕ್ಕೆ ಹೆಚ್ಚಿನ ಮಾನ್ಯತೆ ನೀಡುವ ಜೊತೆಗೆ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕೆಂದು ನಗರದ ನ್ಯೂಟೌನ್ ಈಶ್ವರಮ್ಮ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಬಿ. ಮೇಘ ತಿಳಿಸಿದರು.
ಅವರು ಬುಧವಾರ  ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
     ಕನ್ನಡ ಭಾಷೆಗೆ ತನ್ನದೇ ಆದ ಭವ್ಯ ಪರಂಪರೆ, ವಿಶಿಷ್ಟತೆ ಇದ್ದು, ನಾಡಿನಲ್ಲಿ ಅನೇಕ ಸಾಹಿತಿಗಳು, ಕವಿಗಳು, ಕಾದಂಬರಿಕಾರರು ಸೇರಿದಂತೆ ಅನೇಕ ಮಹನಿಯರು ಕನ್ನಡ ಭಾಷೆ ಮೆರಗನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳು ಮಾತೃ ಭಾಷೆ ಕನ್ನಡಕ್ಕೆ  ಹೆಚ್ಚಿನ ಒತ್ತು ನೀಡಿ ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚಾಗಿ ಬಳಸಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು.
    ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ನಮ್ಮ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲು ಅಥವಾ ಇನ್ನೊಬ್ಬರಿಂದ ಪ್ರಶಂಸೆಗೆ ಒಳಗಾಗಬೇಕೆಂಬ ಉದ್ದೇಶದಿಂದ ಆರಂಭಿಸಿಲ್ಲ ಬದಲಾಗಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭಿಸಲಾಗಿದೆ. ನಮ್ಮ ಪ್ರಯತ್ನ ಯಶಸ್ವಿಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳು ಗುರುತಿಸಿಕೊಂಡಿದ್ದಾರೆ ಎಂದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥಸ್ವಾಮೀಜಿ ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿದ್ದರು. ಎಸ್‌ಎವಿ ಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಭುವನಶ್ರೀ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
    ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ  ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಪ್ರಾಂಶುಪಾಲೆ ಡಾ. ಹರಿಣಾಕ್ಷಿ ಸ್ವಾಗತಿಸಿದರು.

Tuesday, January 26, 2021

ವಿಐಎಸ್‌ಎಲ್, ಗೃಹ ರಕ್ಷಕದಳ ಸೇರಿದಂತೆ ವಿವಿಧೆಡೆ ಗಣರಾಜ್ಯೋತ್ಸವ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.

ಭದ್ರಾವತಿ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ವರ್ಷದ ಗಣ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಭದ್ರಾವತಿ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.

ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.

   ಭದ್ರಾವತಿ, ಜ. ೨೬: ನಗರದ ವಿವಿಧೆಡೆ ಸರ್ಕಾರಿ ಕಛೇರಿಗಳು, ಶಾಲಾ-ಕಾಲೇಜು, ವಿವಿಧ ಸಂಘ-ಸಂಸ್ಥೆಗಳಲ್ಲಿ ೭೨ನೇ ವರ್ಷದ ಗಣ ರಾಜ್ಯೋತ್ಸವ ಆಚರಿಸಲಾಯಿತು.
     ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗಣರಾಜ್ಯೋತ್ಸವ:
   ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.
     ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಖಾನೆಯಲ್ಲಿ ಹಲವಾರು ಗುಣಾತ್ಮಕ ಕ್ರಮಗಳ ಮೂಲಕ ವೆಚ್ಚ ಕಡಿಮೆ ಮಾಡಿ ಉತ್ಪಾದನೆಯಲ್ಲಿ ಗಣನೀಯವಾಗಿ ಸುಧಾರಣೆ ಕಂಡು ಕೊಳ್ಳಲಾಗಿದೆ. ಇದರ ಪರಿಣಾಮ ೨೦೨೦ರ ಸಾಲಿನಲ್ಲಿ ೮೪ ಲಕ್ಷ ರು. ಲಾಭ ಗಳಿಸಿದೆ. ಮುಂದಿನ ಇನ್ನೂ ಹೆಚ್ಚಿನ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಮೂಲಕ ಗತವೈಭವ ಮರಳಿ ಪಡೆಯಲು ಪ್ರಯತ್ನಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
   ಕಾರ್ಯಕ್ರಮದಲ್ಲಿ ೨೦೨೦ರಲ್ಲಿ ಕಾರ್ಖಾನೆಯಲ್ಲಿ ಶ್ರೇಷ್ಠ ಸಾಧನೆ ಮಾಡಿರುವವರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು. ಅಧಿಕಾರಿಗಳ ಹಾಗು ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ನಿರೂಪಿಸಿದರು.
     ಗೃಹ ರಕ್ಷಕದಳದಿಂದ ಗಣ ರಾಜ್ಯೋತ್ಸವ :
    ನಗರದ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ೭೨ನೇ ವರ್ಷದ ಗಣ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಪೌರಾಯುಕ್ತ ಮನೋಹರ್, ಘಟಕಾಧಿಕಾರಿ ಜಗದೀಶ್, ಹಿರಿಯ ವೈದ್ಯಾಧಿಕಾರಿ ಡಾ. ರವೀಂದ್ರನಾಥ ಕೋಠಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
      ಪೇಪರ್‌ಟೌನ್ ಆಂಗ್ಲ ಶಾಲೆ ಗಣ ರಾಜ್ಯೋತ್ಸವ:
     ಕಾಗದನಗರದ ಪೇಪರ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣ ರಾಜ್ಯೋತ್ಸವದಲ್ಲಿ ಎಂಪಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ದತ್ತಾತ್ರೇಯ ಭಾರದ್ವಾಜ್ ಧ್ವಜಾರೋಹಣ ನೆರವೇರಿಸಿದರು.
   ಶಾಲೆಯ ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಆಯೋಗ ಆಯೋಜಿಸಿದ್ದ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
      ಟ್ರ್ಯಾಕ್ಟರ್ ರ್‍ಯಾಲಿಗೆ ಬೆಂಬಲ:
    ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.
ಟ್ರ್ಯಾಕ್ಟರ್ ರ್‍ಯಾಲಿ ಮಧ್ಯಾಹ್ನ ೧೨.೩೦ಕ್ಕೆ ಆರಂಭಗೊಂಡು ನಗರದ ಸಿ.ಎನ್ ರಸ್ತೆ, ಬಿ.ಎಚ್ ರಸ್ತೆ ಮೂಲಕ ಶಿವಮೊಗ್ಗ ತಲುಪಿತು. ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ಪ್ರಮುಖರಾದ ರಾಮಚಂದ್ರರಾವ್, ಮೋಹನ್, ಶರತ್ಚಂದ್ರ, ವೀರೇಶ್, ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸುಮಾರು ೪೦ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದವು.
     ಕೇರಳ ಸಮಾಜಂ ವತಿದಿಂದ ಗಣರಾಜ್ಯೋತ್ಸವ :
     ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ನಗರದ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.
ಸಮಾಜಂ ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್, ಉಪಾಧ್ಯಕ್ಷರಾದ ವಿ.ಕೆ ಮೊಹಿನ್, ಖಜಾಂಚಿ ಎ. ಚಂದ್ರಶೇಖರ್, ಮಹಿಳಾ ವಿಭಾಗಂ ಕಾರ್ಯದರ್ಶಿ ಎಸ್.ಎಚ್. ಕಲ್ಯಾಣಿ ಶಶಿಧರನ್, ಸಹಕಾರ್ಯದರ್ಶಿ ರೇಖಾಚಂದ್ರನ್ ಮತ್ತು ಸದಸ್ಯರಾದ ಎಸ್. ಕುಮಾರ್, ಶಶಿಕಲಾ ಸುರೇಶ್, ಶೈಲಜಾ ಸುರೇಶ್, ಪ್ರೇಮ ವೇಲಾಯುದನ್, ಕೆ.ಎಸ್ ಯಶೋಧ, ಶಾಂತಮ್ಮ ಅನಿತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಜ.೨೮ರಂದು ತೈಪೂಸಂ ಜಾತ್ರೋತ್ಸವ

ಭದ್ರಾವತಿ, ಜ. ೨೬:  ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಜ.೨೮ರಂದು ತೈಪೂಸಂ ಜಾತ್ರೋತ್ಸವ ನಡೆಯಲಿದೆ.
     ಕೊರೋನಾ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವ ಸರಳವಾಗಿ ನಡೆಯುತ್ತಿದ್ದು, ಭಕ್ತಾದಿಗಳು ಸಹಕರಿಸುವಂತೆ ಆಡಳಿತ ಮಂಡಳಿ ಕೋರಿದೆ.

ಜಗತ್ತಿನಲ್ಲಿಯೇ ನಮ್ಮದ್ದು ವಿಶಿಷ್ಟವಾದ ಶ್ರೇಷ್ಠ ಸಂವಿಧಾನ : ಜಿ. ಸಂತೋಷ್‌ಕುಮಾರ್

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.  
    ಭದ್ರಾವತಿ, ಜ. ೨೬: ಭಾರತೀಯ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದ ಸಂವಿಧಾನವಾಗಿದ್ದು, ವಿಶಿಷ್ಟತೆಯಿಂದ ಕೂಡಿದೆ ಎಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಹೇಳಿದರು.
    ಅವರು ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಸಂದರ್ಭದಲ್ಲಿ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು ಸರ್ದಾರ್ ವಲ್ಲಭಬಾಯಿ ಪಟೇಲ್‌ರವರ ಪರಿಶ್ರಮದಿಂದಾಗಿ ಒಗ್ಗೂಡಿಸಲಾಯಿತು. ಆ ನಂತರ ಸಂವಿಧಾನ ರಚನೆ ಮೂಲಕ ದೇಶದಲ್ಲಿ ಏಕತೆ, ಸಮಾನತೆ ಪರಿಕಲ್ಪನೆಯನ್ನು ಕಂಡುಕೊಳ್ಳುವ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಲಾಯಿತು. ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿಶ್ರಮ ಹೆಚ್ಚಿನದ್ದಾಗಿದೆ. ನಮ್ಮದು ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ಪ್ರತಿಯೊಬ್ಬರು ಈ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಅರಿತು ಮುನ್ನಡೆಬೇಕೆಂದರು.
    ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಅಹಿಂಸೆ, ತ್ಯಾಗ, ಬಲಿದಾನಗಳ ಮೂಲಕ ಮಹಾತ್ಮಗಾಂಧಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ನಂತರ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸರ್ವರನ್ನು ಸಮಾನತೆಯಿಂದ ಕಾಣುವ ವಿಶಿಷ್ಟವಾದ ಸಂವಿಧಾನವನ್ನು ರಚನೆ ಮಾಡಿದ ಪರಿಣಾಮ ವಿಶಿಷ್ಟವಾದ ಪ್ರಜಾಪ್ರಭುತ್ವ ವ್ಯವಸ್ಥೆ ರೂಪುಗೊಂಡು ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಈ ಹಿನ್ನಲೆಯಲ್ಲಿ ನಾವೆಲ್ಲರೂ ಇಂದು ನೆಮ್ಮದಿಯಾಗಿ ಬದುಕಲು ಸಾಧ್ಯವಾಗಿದೆ ಎಂದರು.
    ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಸದಸ್ಯರಾದ ಕೆ.ವಿ ರುದ್ರಪ್ಪ, ಆರ್. ತಿಪ್ಪೇಶ್‌ರಾವ್, ಎ.ಎನ್ ಉಷಾಕಿರಣ, ಯಶೋದಮ್ಮ, ಆಶಾ ಶ್ರೀಧರ್, ನಗರಸಭೆ ಪೌರಾಯುಕ್ತ ಮನೋಹರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಪ್ರೌಢಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಮುಖಂಡರಾದ ಲೋಕೇಶ್, ಅಣ್ಣೋಜಿರಾವ್, ಮಂಜುಳರಾಮಚಂದ್ರ, ರಾಘವೇಂದ್ರ ಸರಾಟೆ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸುಮಂತಿ ಕಾರಂತ್ ತಂಡದವರು ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.