Tuesday, February 9, 2021

ಸಮಾಜ ಸೇವಕ ರೋಸಯ್ಯ ನೆನಪಿನಲ್ಲಿ ನಿರಾಶ್ರಿತರಿಗೆ ಕ್ಷೌರ

ಮಾನವೀಯ ನೆಲೆಗಟ್ಟಿನಲ್ಲಿ ಸ್ಪಂದಿಸಿದ ವಿವಿಧ ಸಂಘಟನೆಗಳು

ಭದ್ರಾವತಿ ನ್ಯೂಟೌನ್ ತಮಿಳು ಸರ್ಕಾರಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಮಂಗಳವಾರ ಸಮಾಜ ಸೇವಕ ರೋಸಯ್ಯನವರ ಸ್ಮರಣಾರ್ಥ ನಿರಾಶ್ರಿತರಿಗೆ ಉಚಿತ ಕ್ಷೌರ ಕೈಗೊಳ್ಳವ ಮೂಲಕ ಸೇವಾ ಕಾರ್ಯ ನಡೆಸಲಾಯಿತು.
    ಭದ್ರಾವತಿ, ಫೆ. ೯: ನಿರಾಶ್ರಿತರನ್ನು ಸಮಾಜದಲ್ಲಿ ಕಾಣುವ ರೀತಿ ಎಲ್ಲರಿಗೂ ತಿಳಿದಿದೆ. ಬಹಳಷ್ಟು ಮಂದಿ ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲದಂತೆ ನಡೆದುಕೊಳ್ಳುತ್ತಾರೆ. ಅಪರೂಪಕ್ಕೆ ಕೆಲವರು ಮಾನವೀಯ ನೆಲೆಗಟ್ಟಿನಲ್ಲಿ ಅವರ ಬೆಂಬಲಕ್ಕೆ ನಿಲ್ಲುತ್ತಾರೆ. ಇಂತಹ ವ್ಯಕ್ತಿಗಳಲ್ಲಿ ದಿವಂಗತ ರೋಸಯ್ಯ ಸಹ ಒಬ್ಬರಾಗಿದ್ದರು. ಇವರ ನಿಧನದ ನಂತರ ಇವರ ಪುತ್ರ ಆರ್. ಮೋಸಸ್ ತಂದೆಯ ಸೇವಾ ಕಾರ್ಯವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ.
    ರೋಸಯ್ಯನವರು ತಾವು ದುಡಿದ ಸ್ವಲ್ಪ ಭಾಗವನ್ನು ನಿರಾಶ್ರಿತರ ಸೇವೆಗಾಗಿ ಮೀಸಲಿಟ್ಟಿದ್ದರು. ಪ್ರತಿದಿನ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಕೈಗೊಳ್ಳುತ್ತಿದ್ದರು. ಇದೀಗ ಅವರ ಸೇವಾ ಕಾರ್ಯದೊಂದಿಗೆ ಅವರ ನೆನಪು ಶಾಶ್ವತವಾಗಿ ಉಳಿದುಕೊಂಡಿದೆ. ಮೋಸಸ್‌ರವರು ತಂದೆ ಕೈಗೊಳ್ಳುತ್ತಿದ್ದ ಸೇವಾ ಕಾರ್ಯಕ್ಕೆ ಇದೀಗ ಮತ್ತೊಂದು ಸೇವೆಯನ್ನು ಸೇರ್ಪಡೆಮಾಡಿದ್ದಾರೆ. ನಿರಾಶ್ರಿತರಿಗೆ ಉಚಿತ ಕ್ಷೌರ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ವೈಯಕ್ತಿಕ ಶುಚಿತ್ವದ ಬಗ್ಗೆ ಕಾಳಜಿವಹಿಸಿದ್ದಾರೆ. ಇವರ ಕಾರ್ಯಕ್ಕೆ ಪೊಲೀಸ್ ಉಮೇಶ್ ನೇತೃತ್ವದ ಸ್ನೇಹ ಜೀವಿ ಬಳಗ ಹಾಗು ನಗರದ ಸವಿತ ಸಮಾಜ ಸಹ ಕೈಜೋಡಿಸಿದೆ.
     ಮಂಗಳವಾರ ನ್ಯೂಟೌನ್ ತಮಿಳು ಸರ್ಕಾರಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ರೋಸಯ್ಯನವರ ಸ್ಮರಣಾರ್ಥ ನಿರಾಶ್ರಿತರಿಗೆ ಉಚಿತ ಕ್ಷೌರ ಕೈಗೊಳ್ಳವ ಮೂಲಕ ಸೇವಾ ಕಾರ್ಯ ನಡೆಸಲಾಯಿತು.
ಈ ಕಾರ್ಯಕ್ಕೆ ಕ್ರೈಸ್ತ ಧರ್ಮಗುರುಗಳು, ಪೊಲೀಸ್ ಉಮೇಶ್, ಸತೀಶ್‌ಗೌಡ, ಸವಿತ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ದಯಾಸಾಗರ್ ಟ್ರಸ್ಟ್‌ನ ಪ್ರಮುಖರು ಸೇರಿದಂತೆ ಇನ್ನಿತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



೪ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧ ಆಯ್ಕೆ

ಶಾಸಕ ಬಿ.ಕೆ ಸಂಗಮೇಶ್ವರ್, ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರಿಗೆ ಅಧಿಕಾರ

ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಅಯ್ಕೆಯಾದ ನೂತನ ಅಧ್ಯಕ್ಷರು, ಉಪಾಧ್ಯಕ್ಷರೊಂದಿಗೆ ಕಾಂಗ್ರೆಸ್ ಹಾಗು ಜೆಡಿಎಸ್ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

   ಭದ್ರಾವತಿ, ಫೆ. ೯: ತಾಲೂಕಿನ ೪ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಚುನಾವಣೆ ನಡೆದಿದ್ದು, ಬಹುತೇಕ ಕಡೆ  ಅವಿರೋಧ ಆಯ್ಕೆ ನಡೆಯಿತು.
    ಹಿರಿಯೂರು ಗ್ರಾಮ ಪಂಚಾಯಿತಿ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಿ.ಜಿ ಗಂಗಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರು ಈ ಪಂಚಾಯಿತಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಏಕೈಕ ಸದಸ್ಯೆಯಾಗಿದ್ದಾರೆ. ಉಳಿದಂತೆ ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಒಬ್ಬರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಪವಿತ್ರ ಜಿ. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ೨ನೇ ಬಾರಿಗೆ ಪಂಚಾಯಿತಿಗೆ ಆಯ್ಕೆಯಾಗಿರುವ ಇವರು ಮೊದಲ ಅವಧಿಯಲ್ಲಿಯೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
   ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಹಿಂದುಳಿದ 'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಮಂಜುಳ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿ. ಆನಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
   ಅರಳಿಕೊಪ್ಪ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಉತ್ತರೇಶ್ .ಎಸ್ ಹಾಗು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಅತ್ತಿಗುಂದ ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಹಾಗು ಹಿಂದುಳಿದ 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಮೊಹ್ಸಿನಾ ಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾರಿ ಕರ್ತವ್ಯ ನಿರ್ವಹಿಸಿದರು. ಕಾಂಗ್ರೆಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನೀರಾವರಿ ನಿಗಮದ ಕೆರೆಗಳನ್ನು ನಗರಸಭೆಗೆ ಹಸ್ತಾಂತರಿಸಿ : ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಹಿನ್ನಲೆಯಲ್ಲಿ ನಗರಸಭೆಗೆ ಕೆರೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೩ ಬಿ.ಆರ್.ಎಲ್.ಬಿ.ಸಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಬಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಫೆ. ೯: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಹಿನ್ನಲೆಯಲ್ಲಿ ನಗರಸಭೆಗೆ ಕೆರೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೩ ಬಿ.ಆರ್.ಎಲ್.ಬಿ.ಸಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಬಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
   ಕಳೆದ ಸುಮಾರು ೨೫ ವರ್ಷಗಳಿಂದ ನಗರಸಭೆ ವ್ಯಾಪ್ತಿಯಲ್ಲಿರುವ ಯಾವುದೇ ಕೆರೆಯ ಬೌಂಡರಿ ನಿಗದಿಪಡಿಸಿಲ್ಲ. ಜೊತೆಗೆ ಅಭಿವೃದ್ದಿ ಸಹ ಕೈಗೊಂಡಿಲ್ಲ. ದಕ್ಷ ಅಧಿಕಾರಿಯಾಗಿರುವ ಮನೋಹರ್ ನಗರಸಭೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ರೈತರಿಗೆ, ದನಗಾಹಿಗಳಿಗೆ ಹಾಗು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೦ ಕೆರೆಗಳನ್ನು ಗುರುತಿಸಿದ್ದು, ತಾಲೂಕು ಆಡಳಿತದಿಂದ ಬೌಂಡರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದ್ದು,  ಇದೀಗ ಕೆರೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.
    ಈಗಾಗಲೇ ತಾಲೂಕು ಆಡಳಿತದ ಅಧೀನದಲ್ಲಿರುವ ಸುಮಾರು ೧೭ ಕೆರೆಗಳನ್ನು, ಜಿಲ್ಲಾ ಪಂಚಾಯಿತಿ ಅಧೀನದಲ್ಲಿರುವ ಸುಮಾರು ೧೫ ಕೆರೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ನಗರಸಭೆ ಆಡಳಿತಕ್ಕೆ ಹಸ್ತಾಂತರಿಸಲಾಗಿದೆ.  ಕರ್ನಾಟಕ ನೀರಾವರಿ ನಿಗಮದಲ್ಲಿ ಕೆರೆಗಳ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಲಭ್ಯವಿರುವುದಿಲ್ಲ. ಈ ಹಿನ್ನಲೆಯಲ್ಲಿ ನಿಗಮಕ್ಕೆ ಸೇರಿದ ಕೆರೆಗಳನ್ನು ನಗರಸಭೆಗೆ ಹಸ್ತಾಂತರಿಸುವಂತೆ ಮನವಿಯಲ್ಲಿ ಕೋರಲಾಗಿದೆ.
   ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮುಖಂಡರಾದ ವಿಶ್ವೇಶ್ವರರಾವ್ ಗಾಯಕ್ವಾಡ್, ಗಿರಿನಾಯ್ದು, ಎನ್. ರಾಮಕೃಷ್ಣ, ಮುರುಗನ್, ಪ್ರಸನ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, February 8, 2021

೩ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡೇರಿ ಆಧ್ಯಕ್ಷ, ಉಪಾಧ್ಯಕ್ಷ ೨ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ

ಭದ್ರಾವತಿ ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದ ಹಿನ್ನಲೆಯಲ್ಲಿ ಸೋಮವಾರ ಪಂಚಾಯಿತಿ ಮುಂಭಾಗ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
    ಭದ್ರಾವತಿ, ಫೆ. ೮: ತಾಲೂಕಿನ ೩ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಿತು.
      ತಡಸ ಗ್ರಾಮ ಪಂಚಾಯಿತಿ 'ಎ'ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ನಾಜೀಮಾ ಬಿ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸೈಯದ್ ಇಬ್ರಾಹಿಂ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
     ದೊಡ್ಡೇರಿ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆಗ ಷರೀಫ್, ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪಿ. ಹೇಮಾವತಿ ಆಯ್ಕೆಯಾಗಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಕಾಂಗ್ರೆಸ್ ಪಕ್ಷದ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
      ಬಿಳಿಕಿ ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪಾಪಿ ಬಾಯಿ, ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಹೇಮಣ್ಣ .ಆರ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ:
    ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದ ಹಿನ್ನಲೆಯಲ್ಲಿ ಪಂಚಾಯಿತಿ ಮುಂಭಾಗ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
   ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್, ಪುತ್ರ ಬಿ.ಎಸ್ ಬಸವೇಶ್ ಹಾಗು ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, February 7, 2021

ಸುರಗಿತೋಪು ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

     ಭದ್ರಾವತಿ, ಫೆ. ೮: ಸುರಗಿತೋಪಿನ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಮುನೇಶ್ವರ ಸ್ವಾಮಿಯ ೫೧ನೇ ವರ್ಷದ ೨ ದಿನಗಳ ಜಾತ್ರಾ ಮಹೋತ್ಸವ ಸೋಮವಾರ ಆರಂಭಗೊಂಡಿತು.
     ಬೆಳಿಗ್ಗೆ ನಾಗರಕಟ್ಟೆಯಿಂದ ದೇವಸ್ಥಾನಕ್ಕೆ ಗಂಗೆ ತರುವ ಕಾರ್ಯಕ್ರಮ ಜರುಗಿತು. ಅಮ್ಮನವರಿಗೆ ಅಭಿಷೇಕ, ವಿಶೇಷ ಪೂಜೆ ಹಾಗು ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕ ಮುರಳಿಧರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.
    ಫೆ.೯ರಂದು ಬೆಳಿಗ್ಗೆ ಪೊಲೀಸ್ ಉಮೇಶ್‌ರವರಿಂದ ಆ ದಿನದ ಪೂಜೆಗೆ ಚಾಲನೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಎಂ. ಪ್ರಭಾಕರ್, ಜಿ. ಧರ್ಮಪ್ರಸಾದ್, ಎನ್. ಗೋಕುಲ್ ಕೃಷ್ಣನ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಮಧ್ಯಾಹ್ನ ೧ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉತ್ಸವ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ನಗರಸಭೆ ಪೌರಾಯುಕ್ತ ಮನೋಹರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
 

ಭದ್ರಾವತಿ ಸುರಗಿತೋಪಿನ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಮುನೇಶ್ವರ ಸ್ವಾಮಿಯ ೫೧ನೇ ವರ್ಷದ ೨ ದಿನಗಳ ಜಾತ್ರಾ ಮಹೋತ್ಸವ ಸೋಮವಾರ ಆರಂಭಗೊಂಡಿತು.

ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ : ನಗರ ಸಂಕೀರ್ತನಾ ಯಾತ್ರೆ

೭ ವರ್ಷದ ಬಾಲಕಿ ಜನ್ಮದಿನ ಅಂಗವಾಗಿ ನಿಧಿ ಸಮರ್ಪಣೆ

ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾನುವಾರ ಭದ್ರಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ ನಡೆಯಿತು.
     ಭದ್ರಾವತಿ, ಫೆ. ೭: ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾನುವಾರ ನಗರ ಸಂಕೀರ್ತನಾ ಯಾತ್ರೆ ನಡೆಯಿತು.
     ಹೊಸಮನೆ ವೃತ್ತದಿಂದ ಸಂಜೆ ೪ ಗಂಟೆಗೆ ಆರಂಭಗೊಂಡ ಯಾತ್ರೆ ರಂಗಪ್ಪ ವೃತ್ತ, ಸಿ.ಎನ್ ರಸ್ತೆ, ಮಾಧವಚಾರ್ ವೃತ್ತ, ಬಿ.ಎಚ್ ರಸ್ತೆ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ಸಾಗಿತು.  
   ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಪ್ರಮುಖರಾದ ಹಾ. ರಾಮಪ್ಪ, ಬಿ.ಕೆ ಶ್ರೀನಾಥ್, ಮಂಗೋಟೆ ರುದ್ರೇಶ್, ಸುಬ್ರಮಣಿ, ನರಸಿಂಹಚಾರ್, ಚಂದ್ರಪ್ಪ, ಚನ್ನೇಶ್, ಗಣೇಶ್‌ರಾವ್, ಜಿ. ಆನಂದಕುಮಾರ್, ಎಂ. ಮಂಜುನಾಥ್, ಬಾರಂದೂರು ಪ್ರಸನ್ನ, ಅನ್ನಪೂರ್ಣ ಸಾವಂತ್, ಶೋಭಾ ಸೇರಿದಂತೆ ನೂರಾರು ಮಂದಿ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕರ್ತರು ಪಾಲ್ಗೊಂಡಿದ್ದರು.


೭ ವರ್ಷದ ಬಾಲಕಿ ಸೃಷ್ಠಿ ಕಳೆದ ೨ ವರ್ಷಗಳಿಂದ ಸಂಗ್ರಹಿಸಿದ್ದ ಕಾಣಿಕೆ ಹುಂಡಿ ಹಣ ೮೨೮ ರು. ಗಳನ್ನು ತನ್ನ ಜನ್ಮದಿನದ ಅಂಗವಾಗಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಮರ್ಪಿಸುವ ಮೂಲಕ ಗಮನ ಸೆಳೆದಿದ್ದಾಳೆ.
      ೭ ವರ್ಷದ ಬಾಲಕಿ ಜನ್ಮದಿನ ಅಂಗವಾಗಿ ನಿಧಿ ಸಮರ್ಪಣೆ :
    ಹುತ್ತಾಕಾಲೋನಿ ನಿವಾಸಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಧುಸೂದನ್ ಹಾಗು ಶೃತಿ ದಂಪತಿ ಪುತ್ರಿ, ೭ ವರ್ಷದ ಬಾಲಕಿ ಸೃಷ್ಠಿ ಕಳೆದ ೨ ವರ್ಷಗಳಿಂದ ಸಂಗ್ರಹಿಸಿದ್ದ ಕಾಣಿಕೆ ಹುಂಡಿ ಹಣ ೮೨೮ ರು. ಗಳನ್ನು ತನ್ನ ಜನ್ಮದಿನದ ಅಂಗವಾಗಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಮರ್ಪಿಸುವ ಮೂಲಕ ಗಮನ ಸೆಳೆದಿದ್ದಾಳೆ.
ಅಭಿಯಾನದ ಕಾರ್ಯಕರ್ತರಾದ ಸುಬ್ರಮಣ್ಯ, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟೆನ್ನಿಸ್ ಬಾಲ್ ಸೆಮಿ ಸರ್ಕಲ್ ಕ್ರಿಕೆಟ್ ಟೂರ್ನಿಮೆಂಟ್ : ಡಿಆರ್‌ಸಿಸಿ ತಂಡಕ್ಕೆ ಮೊದಲ ಬಹುಮಾನ

ಕರ್ನಾಟಕ ಜನ ಸೈನ್ಯ ವತಿಯಿಂದ ಭದ್ರಾವತಿ ಹೊಸಸಿದ್ದಾಪುರ ಶ್ರೀ ಚೌಡೇಶ್ವರಿ ದೇವಸ್ಥಾನ ಸಮೀಪದ ಅಶ್ವಥ್ ಕಟ್ಟೆ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಮೊದಲ ವರ್ಷದ ಟೆನ್ನಿಸ್ ಬಾಲ್ ಸೆಮಿ ಸರ್ಕಲ್ ಕ್ರಿಕೆಟ್ ಟೂರ್ನಿಮೆಂಟ್‌ನಲ್ಲಿ ಮೊದಲ ಬಹುಮಾನ ಪಡೆದ ಡಿಆರ್‌ಸಿಸಿ ತಂಡಕ್ಕೆ ಟ್ರೋಫಿ ವಿತರಿಸಲಾಯಿತು.
    ಭದ್ರಾವತಿ, ಫೆ. ೭: ಕರ್ನಾಟಕ ಜನ ಸೈನ್ಯ ವತಿಯಿಂದ ಹೊಸಸಿದ್ದಾಪುರ ಶ್ರೀ ಚೌಡೇಶ್ವರಿ ದೇವಸ್ಥಾನ ಸಮೀಪದ ಅಶ್ವಥ್ ಕಟ್ಟೆ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಮೊದಲ ವರ್ಷದ ಟೆನ್ನಿಸ್ ಬಾಲ್ ಸೆಮಿ ಸರ್ಕಲ್ ಕ್ರಿಕೆಟ್ ಟೂರ್ನಿಮೆಂಟ್ ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು.
    ಪಂದ್ಯಾವಳಿಯಲ್ಲಿ ಡಿಆರ್‌ಸಿಸಿ ತಂಡ ಮೊದಲ ಬಹುಮಾನ ಹಾಗು ಅಭಿಮನ್ಯ ಬಾಯ್ಸ್ ತಂಡ ೨ನೇ ಬಹುಮಾನ ಪಡೆದುಕೊಂಡವು. ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಕರ್ನಾಟಕ ಜನ ಸೈನ್ಯ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ, ವಿಶಿಷ್ಟವಾದ ಅಪರೂಪದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸ್ಥಳೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಪಂದ್ಯಾವಳಿಗಳು ಇನ್ನೂ ಹೆಚ್ಚಾಗಿ ನಡೆಯುವಂತಾಗಲಿ ಎಂದರು.
    ಪಂದ್ಯಾವಳಿಯಲ್ಲಿ ಸುಮಾರು ೧೪ ತಂಡಗಳು ಭಾಗವಹಿಸಿದ್ದವು. ಶನಿವಾರ ಪಂದ್ಯಾವಳಿಗೆ ನಗರಸಭೆ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು.
   ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನ ಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಗೌರವಾಧ್ಯಕ್ಷ ಅನಿಲ್(ಬಾಬು), ಸಮಾಜ ಸೇವಕ ಅಶೋಕ್ ಕುಮಾರ್, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತದ್ದರು.